ಕಾಯದ ಸಂಗದಿಂದ ಆತ್ಮನು ಭವಕ್ಕೆ ಬಪ್ಪುದೊ ?
ಆತ್ಮನ ಸಂಗದಿಂದ ಕಾಯ ಲಯಕ್ಕೊಳಗಪ್ಪುದೊ ?
ಕಾಯ ಜೀವದಿಂದಳಿವೊ ? ಜೀವ ಕಾಯದಿಂದಳಿವೋ ?
ಅಲ್ಲ, ಉಭಯವೂ ಏಕಸ್ಥದಿಂದ ಪ್ರಳಯವೋ ?
ಎಂಬುದ ಅಂತಸ್ಥದಿಂದ ತಿಳಿದು,
ಕಾಯಕ್ಕೂ ಜೀವಕ್ಕೂ ಭೇದವುಂಟೆಂದಡೆ,
ಒಂದ ಬಿಟ್ಟೊಂದು ಇರದು.
ಇಲ್ಲಾ ಎಂದೆಡೆ ಆತ್ಮ ವಾಯುಸ್ವರೂಪ, ಘಟ ಸಾಕಾರಸ್ವರೂಪ,
ಗುಣ-ಗಂಧ, ಕುಸುಮ-ಗಂಧ, ತಿಲ-ಸಾರದ ಸಂಗದಂತೆ.
ಇಂತೀ ಉಭಯಭಾವದ ಭೇದವನರಿದ ಪರಮ[ಸುಖ]
ಗಾರುಡೇಶ್ವರಲಿಂಗವನರಿದವಂಗಲ್ಲದೆ ಸಾಧ್ಯವಲ್ಲ.