ಮರನುರಿದು ಬೆಂದು ಕರಿಯಾದ ಮತ್ತೆ
ಉರಿಗೊಡಲಾದುದ ಕಂಡು,
ಆತ್ಮ ಪರಿಭವಕ್ಕೆ ಬಪ್ಪುದಕ್ಕೆ ಇದೆ ದೃಷ್ಟ.
ಕರಿ ಭಸ್ಮವಾದ ಮತ್ತೆ ಉರಿಗೊಡಲಿಲ್ಲ,
ಅರಿಕೆ ನಿಂದಲ್ಲಿ ಆತ್ಮ ಪರಿಭವಕ್ಕೆ ಬರಲಿಲ್ಲ,
ಉರಿಯೊಳಗೊಡಗೂಡಿದ ತಿಲಸಾರ ತುಪ್ಪ ಮರಳಿ ಅಳೆತಕ್ಕುಂಟೆ ?
ವಸ್ತುವಿನಲ್ಲಿ ಕರಿಗೊಂಡ ಚಿತ್ತ, ತ್ರಿವಿಧಮಲಕ್ಕೆ ಹೊರಳಿ ಮರಳುವದೆ ?
ಈ ಗುಣ ನಡೆ ನುಡಿ ಸಿದ್ಧಾಂತವಾದವನ ಇರವು,
ಗಾರುಡೇಶ್ವರಲಿಂಗವ ಕೂಡಿದವನ ಕೂಟ.