ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ
ಪಂಚಭೌತಿಕದ ಜಗದುತ್ಪತ್ಯವೆಂಬುದು ಹುಸಿಮಾತು.
ನಾನೆಂಬುದೆ ಐದು, ಆ ಐದರಿಂದ ಒದಗಿದ ಜಗ,
ಲಯವಾದ ಮತ್ತೆ ಜಗವಿಲ್ಲವಾಗಿ.
ತನ್ನ ಗುಣವೆ ಪೃಥ್ವಿ, ತನ್ನ ಗುಣವೆ ಅಪ್ಪು,
ತನ್ನ ಗುಣವೆ ವಾಯು, ತನ್ನ ಗುಣವೆ ಆಕಾಶ,
ತನ್ನಿಂದನ್ಯವಪ್ಪುದೊಂದಿಲ್ಲವಾಗಿ.
ಅದಕ್ಕೆ ದೃಷ್ಟ: ಮರ್ಕಟ ದರ್ಪಣಸ್ಥಾನವೆಂದರಿವುದು.
ಆ ಉಚಿತ ಬೀಜಕ್ಕುಚಿತವಪ್ಪುದೆ ಅದಕ್ಕೆ ದೃಷ್ಟ.
ಪರುಷದ ಗಿರಿಯಲ್ಲಿ ಕಬ್ಬುನದ ಮೊರಡಿಯುಂಟೆ ?
ಕ್ಷೀರ ಜಲಧಿಯಲ್ಲಿ ಕ್ಷಾರಜಲ ಸ್ಥಾಪ್ಯವುಂಟೆ ?
ಕಲ್ಪದ್ರುಮದಗ್ರದಲ್ಲಿ ದತ್ತೂರದ ಫಲವುಂಟೆ ?
ನೆರೆ ಸತ್ಯನಲ್ಲಿ [ಹಾ]ರುವ ಮ[ನದವನು]ಂಟೆ ?
ಇಂತಿವನರಿದು ನಿಃಶಬ್ದನಾದ ಮಹಾತ್ಮಂಗೆ
ಗುರುವೆಂದರರು, ಲಿಂಗವೆಂದರು, ಜಂಗಮವೆಂದರು.
ಸ್ಥಾವರವೊಂದಾದಡೆ, ಶಾಖೆಯ ಲಕ್ಷ್ಯದ ತೆರನಂತೆ.
ಅದಕ್ಕೆ ಪರಿಯಾಯ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣೈಕ್ಯ.
ಇಂತೀ ಷಟ್ಸ್ಥಲದ ಎಲ್ಲಾ ಬೆಳಗಿನ ಕಳೆಯನೊಳಕೊಂಡಿಪ್ಪ ಮಹಾತ್ಮನಂ
ಶಿವಭೌತಿಕವೆಂದರಿಯದೆ, ಬೀಗವ ತೆಗೆದಲ್ಲಿಯೆ ಕಂಡಿತ್ತು,
[ಆಭ]ರಣದ ಇರವು, ನಿಃಕಳಂಕ ಮಲ್ಲಿಕಾರ್ಜುನಾ.