ಶ್ರೀಗುರು ತನ್ನ ಲಿಂಗವನೆ ಅಂಗದ ಮೇಲೆ ಬಿಜಯಂಗೆಯ್ಸಿದನಾಗಿ,
ಆ ಲಿಂಗಕ್ಕೆ ನಾನು ಅಷ್ಟವಿಧಾರ್ಚನೆ, ಷೋಡಶೋಪಚಾರಗಳ ಮಾಡಿ,
ಚತುರ್ವಿಧಫಲಪದಪುರುಷಾರ್ಥವ ಪಡೆದು,
ಆ ಪರಿಭವಕ್ಕೆ ಬರಲೊಲ್ಲದೆ,
ನಾನು ನಿಷ್ಕಳವೆಂಬ ಹೊಲದಲ್ಲಿ ಒಂದು ನಿಧಾನವ ಕಂಡೆ.
ಆ ನಿಧಾನದ ಹೆಸರಾವುದೆಂದಡೆ;
ತ್ರೈಲಿಂಗದ ಆದಿಮೂಲಾಂಕುರವೊಂದಾದ ಚರಲಿಂಗವೆಂದು.
ಆ ಚರಲಿಂಗದ ಪಾದಾಂಬುವ ತಂದೆನ್ನ
ಇಷ್ಟಲಿಂಗದ ಚತುರ್ವಿಧಫಲಪದಪುರುಷಾರ್ಥವೆಂಬ ಕರಂಗಳಂ ತೊಳೆವೆ.
ಅದೆಂತೆಂದೆಡೆ;
ಸಾಲೋಕ್ಯಂ ಚ ತು ಸಾಮೀಪ್ಯಂ ಸಾರೂಪ್ಯಂ ಚ ಸಾಯುಜ್ಯತಾ
ತದುಪೇಕ್ಷಕಭಕ್ತಶ್ಚ gõ್ಞರವಂ ನರಕಂ ವ್ರಜೇತ್ ಎಂದುದಾಗಿ,
ಆ ಚರಲಿಂಗದ ಪ್ರಸಾದವ ತಂದೆನ್ನ ಇಷ್ಟಲಿಂಗದ ಜೀವಕಳೆಯ ಮಾಡುವೆ
ಅದೆಂತೆಂದೆಡೆ;
ಸ್ವಯಂಪ್ರಕಾಶರೂಪಶ್ಚ ಜಂಗಮೋ ಹಿ ನಿಗದ್ಯತೇ
ಮತ್ತಂ,
ಜಂಗಮಸ್ಯ ಪದೋದಂ ಚ ಯುಕ್ತಂ ಲಿಂಗಾಭಿಷೇಚನೇ
ತತ್ಪ್ರಸಾದೋ ಮಹಾದೇವ ನೈವೇದ್ಯಂ ಮಂಗಲಂ ಪರಂ ಎಂದುದಾಗಿ,
ಆ ಲಿಂಗವೆ ಅಂಗ, ಅಂಗವೆ ಲಿಂಗ,
ಆ ಲಿಂಗವೆ ಪ್ರಾಣ, ಆ ಪ್ರಾಣ ಲಿಂಗವಾದುದು.
ಇದು ಚತುರ್ವಿಧಫಲಪದಪುರುಷಾರ್ಥವ ಮೀರಿದ ಘನವು.
ಕೂಡಲಸಂಗಮದೇವಯ್ಯಾ.
ಈ ದ್ವಯದ ಪರಿಯ ನಿಮ್ಮ ಶರಣರನೆ ಬಲ್ಲ.