ಆಸೆಯುಳ್ಳನ್ನಕ್ಕ ರೋಷ ಬಿಡದು;
ಕಾಮವುಳ್ಳನ್ನಕ್ಕ ಕಳವಳ ಬಿಡದು;
ಕಾಯಗುಣವುಳ್ಳನ್ನಕ್ಕ ಜೀವನ ಬುದ್ಧಿ ಬಿಡದು;
ಭಾವವುಳ್ಳನ್ನಕ್ಕ ಬಯಕೆ ಸವೆಯದು;
ನಡೆಯುಳ್ಳನ್ನಕ್ಕ ನುಡಿಗೆಡದು.
ಇವೆಲ್ಲವು ಮುಂದಾಗಿದ್ದು ಹಿಂದನರಿದೆನೆಂಬ
ಸಂದೇಹಿಗಳಿರಾ, ನೀವು ಕೇಳಿರೋ.
ನಮ್ಮ ಶರಣರು ಹಿಂದ ಹೇಗೆ ಅರಿದರೆಂದಡೆ;
ಆಸೆಯನಳಿದರು, ರೋಷವ ಹಿಂಗಿದರು,
ಕಾಮನ ಸುಟ್ಟರು, ಕಳವಳವ ಹಿಂಗಿದರು,
ಕಾಯಗುಣವಳಿದರು, ಜೀವನ ಬುದ್ಧಿಯ ಹಿಂಗಿದರು,
ಭಾವವ ಬಯಲುಮಾಡಿದರು, ಬಯಕೆಯ ಸವೆದರು.
ಹಿಂದನರಿದು ಮುಂದೆ ಲಿಂಗವೆ ಗೂಡಾದ ಶರಣರ ಈ ಸಂದೇಹಿಗಳೆತ್ತ ಬಲ್ಲರು,
ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?