ಏರಿಯಕೆಳಗೆ ಬಿದ್ದ ನೀರು ಪೂರ್ವದ ತಟಾಕಕ್ಕೆ ಏರಬಲ್ಲುದೆ ?
ವ್ರತಾಚಾರವ ಮೀರಿ ಕೆಟ್ಟ ಅನಾಚಾರಿ ಸದ್ಭಕ್ತರ ಕೂಡಬಲ್ಲನೆ ?
ದೇವಾಲಯದಲ್ಲಿ ಸತ್ತಡೆ ಸಂಪ್ರೋಕ್ಷಣವಲ್ಲದೆ
ದೇವರು ಸತ್ತಲ್ಲಿ ಉಂಟೆ ಸಂಪ್ರೋಕ್ಷಣ ?
ಅಂಗದಲ್ಲಿ ಮರವೆಗೆ ಹಿಂಗುವ ಠಾವಲ್ಲದೆ,
ಮನವರಿದು ತಾಕು ಸೋಂಕಿಗೆ ಹೆದರದೆ ಕೂಡಿದ
ದುರ್ಗಣಕ್ಕುಂಟೆ ಪ್ರಾಯಶ್ಚಿತ್ತ ?
ಇಂತಿವ ಕಂಡಲ್ಲಿ ಗುರುವಾದಡೂ ಬಿಡಬೇಕು,
ಲಿಂಗವಾದಡೂ ಬಿಡಬೇಕು, ಜಂಗಮವಾದಡೂ ಬಿಡಬೇಕು ;
ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ಬಿಡಬೇಕು.