ಇಷ್ಟಲಿಂಗಕ್ಕೆ ದೃಷ್ಟಪದಾರ್ಥಂಗಳ ಅರ್ಪಿಸುವಲ್ಲಿ
ಕಟ್ಟಳೆವುಂಟು, ತನ್ನ ಘಟದ ಲಕ್ಷಣವುಂಟು.
ಇಂತೀ ಉಭಯವ ಪ್ರಮಾಣಿಸಿಕೊಂಡು
ಅರ್ಪಣದಿಂದ ಅರ್ಪಿಸುವಲ್ಲಿ ತೃಪ್ತಿಯ ಅಭಿಲಾಷೆಯಿಂದ
ಸತ್ಯ ಸದೈವರ ಸಹಪಙ್ಞ್ತಯಲ್ಲಿ
ಕ್ಷುತ್ತಿನ ಅಪೇಕ್ಷಕ್ಕಾಗಿ ಮತ್ತೆ ಪುನರಪಿಯಾಗಿ
ಇಕ್ಕು ತಾಯೆಂದಡೆ, ಅದು ತನ್ನ ಕ್ಷುತ್ತಿನ ಭೇದವೊ ?
ಭರಿತಾರ್ಪಣದ ಯುಕ್ತಿಯ ಭಿತ್ತಿಯೊ?
ಭರಿತಾರ್ಪಣವೆಂಬಲ್ಲಿ ಲಿಂಗಕ್ಕೆ ಕೊಟ್ಟಲ್ಲದೆ ಮುಟ್ಟೆನೆಂಬ ಕಟ್ಟೊ ?
ಅಲ್ಲಾ, ಸಾಧಕಾಂಗಿಗಳ ಸಂಗದ ಗುಣದಿಂದ ಬಂದ ಮುಟ್ಟೊ ?
ಇಂತಿವ ತಿಳಿದು, ಮನವಚನಕಾಯ ಕರಣೇಂದ್ರಿಯಂಗಳು
ಮುಂತಾದ ಭೇದಂಗಳಲ್ಲಿ ಒಮ್ಮೆಗೊಮ್ಮೆ ತುತ್ತನಿಡುವಲ್ಲಿ,
ಸವಿಯಾದ ರಸಾನ್ನಗಳ ಚಪ್ಪಿರಿವಲ್ಲಿ,
ಅಲ್ಲಿಗಲ್ಲಿಗೆ ಉಭಯವಳಿದ ಭರಿತಾರ್ಪಣದ ತೆರನ ಕಂಡು,
ಈ ಗುಣ ಜಿಹ್ವೇಂದ್ರಿಯದ ಭರಿತಾರ್ಪಣ.
ಇಂತೀ ಭರಿತಾರ್ಪಣವನಂಗೀಕರಿಸಿದ
ಸರ್ವವ್ಯವಧಾನಿಯ ಎಚ್ಚರಿಕೆಯ ಮುಟ್ಟು,
ಮುಂದೆ ಗುಹ್ಯೇಂದ್ರಿಯಕ್ಕೆ ಸಿಕ್ಕು.
ಇಂತೀ ವಿಷಯ ವ್ಯಸನಾದಿಗಳಲ್ಲಿ
ಭರಿತಾರ್ಪಣದಿಂದ ಕೂಡುವ ಪರಿಯಿನ್ನೆಂತೊ ?
ಇಂದ್ರಿಯ ಬಿಡುವನ್ನಕ್ಕ ಪುನರಪಿಯಾಗಿ ಅಂಗೀಕರಿಸಿಯಲ್ಲದೆ
ಚಲನೆಯ ಗುಣ ಹೆರೆಹಿಂಗದು.
ಅಲ್ಲಿಯ ಭರಿತಾರ್ಪಣದ ಪರಿಯ ಬಲ್ಲವನಾದಡೆ
ಸರ್ವ ಎಲ್ಲಾ ಗುಣದಲ್ಲಿ ಭರಿತಾರ್ಪಣ,
ಲಿಂಗಾಂಗ ಪರಿಪೂರ್ಣನೆಂಬೆ.
ಇಂತೀ ಗುಣವನರಿಯದೆ ಕಂಡಕಂಡವರ ಕಂಡು ಕೈಕೊಂಡು
ಈ ವ್ರತವನಂಗೀಕರಿಸಿದನಾದಡೆ
ಗುರುವಿಂಗೆ ದೂರ, ಲಿಂಗ ಅವಂಗಿಲ್ಲ, ಚರಪ್ರಸಾದ ಸಲ್ಲ.
ಇಂತಿವನರಿಯದೆ, ಗೆಲ್ಲಸೋಲಕ್ಕೆ ಹೋರಿಹೆನೆಂದಡೆ
ಚೆನ್ನಬಸವಣ್ಣನ ಕೋರಡಿಯ ಕೊಡುವೆ.
ಸಂಗನಬಸವಣ್ಣನ ಮೆಚ್ಚಿಸುವೆ.
ಪ್ರಭು ನಿಜಗುಣದೇವರ ತಲೆದೂಗಿಸುವೆ.
ಇದಕ್ಕೆ ಹಾಕಿದೆ ಮುಂಡಿಗೆ, ವರ್ಮದ ತಲೆಸುತ್ತು,
ಎನ್ನೊಡೆಯ ಚೆನ್ನ ಚೆನ್ನಕೂಡಲ ರಾಮೇಶ್ವರಲಿಂಗ ಸಾಕ್ಷಿಯಾಗಿ.