ಕುಲ ಎಷ್ಟು ಎಂದಡೆ, ಎರಡು ಕುಲ.
ಅವಾವೆಂದಡೆ : ಭವಿ ಒಂದು ಕುಲ, ಭಕ್ತ ಒಂದು ಕುಲ.
ಅಷ್ಟಾವರಣವೇ ಅಂಗವಾಗಿ,
ಪಂಚಾಚಾರವೇ ಪ್ರಾಣವಾಗಿಪ್ಪ
ಭಕ್ತರ ಕುಲವನರಸಿದಡೆ
ಬಾರದ ಭವಂಗಳಲ್ಲಿ ಬಪ್ಪುದು ತಪ್ಪುದು.
ನೀರಿಂದಾದ ಮುತ್ತು ಮರಳಿ ಉದಕವಪ್ಪುದೆ ?
ಆಕಾಶಕ್ಕೆ ಹೋದ ಹೊಗೆ ಹಿಂದಕ್ಕೆ ಬಪ್ಪುದೆ ?
ಮಣ್ಣಿಂದಾದ ಮಡಕೆ ಮತ್ತೆ ಮಣ್ಣಪ್ಪುದೆ ?
ಮತ್ತೆ ವಾಮನಮುನಿ ಹಿರಿಯ ಭಕ್ತರ ಮನೆಯ
ಬಿನ್ನಹವ ಕೈಕೊಂಡು
ಕುಲಕಂಜಿ ಉಣಲೊಲ್ಲದೆ ಹೋದ ನಿಮಿತ್ತದಿಂದ,
ಹಾವಿನಹಾಳ ಕಲ್ಲಯ್ಯಗಳ ಮನೆಯ
ಶ್ವಾನನಾಗಿ ಹುಟ್ಟಲಿಲ್ಲವೆ ?
ಅದು ಕಾರಣ, ಶಿವಭಕ್ತರ ಒಕ್ಕುಮಿಕ್ಕ
ಪ್ರಸಾದವ ಕೊಳಬೇಕು ಎಂದಾತ
ನಮ್ಮ ಶಾಂತಕೂಡಲಸಂಗಮದೇವ.