ಪರುಷಮೃಗ ಬಂದು ನಿಂದಲ್ಲಿ, ಜನ್ನ ಜಯವಾಗದೆ ಧರ್ಮಂಗೆ ?
ಲಿಂಗಜಂಗಮಭಕ್ತಿ ಪ್ರಜ್ವಲಿಸದೆ ಸಿರಿಯಾಳಂಗೆ ?
ಪ್ರಸಾದವ ಬಿಬ್ಬಿಬಾಚಯ್ಯ ಮೆರವುತ ಬಪ್ಪಲ್ಲಿ,
ಅರಿಯದೆ ನಿಂದಿಸಿದಡೆ, ಹರಿದು ಹತ್ತದೆ
ಉರಿಯ ನಾಲಗೆ ಗ್ರಾಮವ?
ಹರಸಿತ್ತ ನಿರೂಪವಿಡಿ ಮಾರ್ಗದಲ್ಲಿ
ಮಾರಾರಿಯ ಶರಣರು ಬಂದು ನಿಂದಲ್ಲಿ
ಅರ್ಧಗೃಹಂಗಳುಳಿಯವೆ ?
ಸದ್ಯೋಜಾತನ ಶರಣರ ಧರೆಯನುರಿಯ ನಾಲಗೆಯ ನೀಡಿ,
ಕಲ್ಯಾಣವನಾಳುವ ಬಿಜ್ಜಳನ ಮುಟ್ಟಿನಿಂದಡೆ,
ಹೋ ಹೋ! ಇದ್ದಂತೆ ಬರಬೇಕೆಂದಡೆ,
ಕೋಪಾಟೋಪವಂ ಬಿಟ್ಟು ಕಳದು, ಸಾಮಾನ್ಯವಾಗದೆ ?
ಶಿವನೊಲಿದ ಸಿದ್ಧರಿಗೆ ಅಂಗದ ಮೇಲೆ ಲಿಂಗವವಿಲ್ಲದವನು
ಅಂಗಳವನು ಮೆಟ್ಟಲಾಗದೆಂದಡೆ,
ಉರಿಯ ಜ್ವಾಲೆಯ ಬಿಟ್ಟಡೆ,
ಪರಿಹರಿಸದೆ ಕುಂಚಿಗೆಯ ತುದಿಯಲ್ಲಿ?
ಪರಮನೊಲಿದ ಶರಣರು ಸ್ವತಂತ್ರಮಹಿಮರು.
ಅದಂತೆಂದಡೆ:
ಅವರೆಂದಂತೆ ಅಹುದೆಂದಡೆ, ಅಂಗದ ಮೇಲೆ ಲಿಂಗಪ್ರತಿಷ್ಠೆಯಾಗದೆ,
ಶಿವಯೋಗಿ ಸಿದ್ಧರಾಮಯ್ಯಂಗೆ
ಸಕಲಧೂರ್ತದುರಿತಂಗಳು ಬಿಟ್ಟೋಡುತ್ತಿದ್ದವು,
ಸಕಳೇಶ್ವರದೇವಾ, ನಿಮ್ಮ ಶರಣನ ದೇವತ್ವಕ್ಕಂಜಿ.