ಅಥವಾ

ಒಟ್ಟು 189 ಕಡೆಗಳಲ್ಲಿ , 27 ವಚನಕಾರರು , 141 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಟುಲಕ್ಷದ ಮೇಲೆ ಐನೂರು ದೇವರಿಗೆ ಮಾಡಿದ ಬೋನವ ಒಬ್ಬ ಜಂಗಮನಾರೋಗಣೆಯ ಮಾಡುವನಲ್ಲದೆ, ಹದಿನಾರು ಲಕ್ಷದ ಮೇಲೆ ಐನೂರು ದೇವರು ಕೂಡಿಕೊಂಡು ಒಬ್ಬ ಜಂಗಮಕ್ಕೆ ಮಾಡಿದ ಬೋನವನಾರೋಗಿಸಲರಿಯವು. ಅಂತಪ್ಪ ದೇವರಿಗಿಂತಲೂ ಜಂಗಮವೆ ಘನ. ಕೃತಯುಗದಲ್ಲಿ ಸುವರ್ಣದ ಲಿಂಗಾವಾದಲ್ಲಿ ನಿನ್ನ ಹೆಸರೇನು ? ತ್ರೇತಾಯುಗದಲ್ಲಿ ಬೆಳ್ಳಿಯ ಲಿಂಗವಾದಲ್ಲಿ ನಿನ್ನ ತಾಯಿ-ತಂದೆ ಯಾರು ? ದ್ವಾಪರದಲ್ಲಿ ತಾಮ್ರದಲಿಂಗವಾದಲ್ಲಿ ಹದಿನೆಂಟು ಜಾತಿಯ ಕೈಯ ಕಿಲುಬು ಹೋಯಿತ್ತು. ಕಲಿಯುಗದಲ್ಲಿ ಕಲ್ಲ ದೇವರಾದರೆ ಇಕ್ಕಿದೋಗರವನುಣ್ಣದೇಕೊ ? ಹಿಂದೊಮ್ಮೆ ನಾಲ್ಕುಯುಗದಲ್ಲಿ ಅಳಿದು ಹೋದುದನರಿಯಾ ? ಇನ್ನೇಕೆ ದೇವತನಕ್ಕೆ ಬೆರತಹೆ ? ``ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಫಲಂ ಭವೇತ್ _ಇದು ಕಾರಣ ಕೂಡಲಚೆನ್ನಸಂಗಯ್ಯಾ, ತಪ್ಪದೆ ನಾಲ್ಕುಯುಗದಲ್ಲಿ ಜಂಗಮವೆ ಪ್ರಾಣಲಿಂಗವಾದ ಕಾರಣ ಸ್ಥಾವರವೆ ಜಂಗಮಪ್ರಸಾದಕ್ಕೆ ಯೋಗ್ಯವಾಯಿತ್ತು.
--------------
ಚನ್ನಬಸವಣ್ಣ
ಇಂತಪ್ಪ ತ್ರಿವಿಧಾಚರಣೆಯಲ್ಲಿ ಬ್ಥಿನ್ನಜ್ಞಾನಿಗಳಾಗಿ ಬ್ಥಿನ್ನ ಕ್ರಿಯಗಳಾಚರಿಸಿ, ಬ್ಥಿನ್ನಭಾವ ಮುಂದುಗೊಂಡು ವ್ರತವನಾಚರಿಸುವ ಅಜ್ಞಾನಿಗಳಾದ ಜೀವಾತ್ಮರಿಗೆ ಶಿವನು ಒಲಿ ಒಲಿ ಎಂದರೆ ಎಂತೊಲಿಯುವನಯ್ಯ ? ಮತ್ತೆಂತೆಂದೊಡೆ : ಸುಜ್ಞಾನೋದಯವಾಗಿ ಸಕಲಪ್ರಪಂಚ ನಿವೃತ್ತಿಯ ಮಾಡಿ, ಶ್ರೀಗುರುಕಾರುಣ್ಯವ ಪಡೆದು, ಲಿಂಗಾಂಗಸಮರಸವಾಗಿ ಸರ್ವಾಂಗಲಿಂಗಮಯ ತಾನೆಂದು ತಿಳಿದುನೋಡಿ, ಅಂತಪ್ಪ ಘನಮಹಾಲಿಂಗ ಇಷ್ಟಬ್ರಹ್ಮವನು ತನುವಿನಲ್ಲಿ ಸ್ವಾಯತವ ಮಾಡಿ, ಆ ತನುಪ್ರಕೃತಿಯನಳಿದು ಆ ಇಷ್ಟಲಿಂಗದ ಸತ್ಕ್ರಿಯವನಾಚರಿಸುವುದೇ ದಿನಚರಿ ವಾರ ಸೋಮವಾರವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮದ ಚಿತ್ಕಲಾಸ್ವರೂಪವಾದ ನಿಷ್ಕಲಪ್ರಾಣಲಿಂಗವನು ಮನದಲ್ಲಿ ಸ್ವಾಯತವಮಾಡಿ, ಆ ಮನೋಪ್ರಕೃತಿಯನಳಿದು ಆ ನಿಷ್ಕಲ ಪ್ರಾಣಲಿಂಗದ ಸುಜ್ಞಾನಕ್ರಿಯಗಳನಾಚರಿಸುವುದೇ ದ್ವಾದಶಮಾಸದೊಳಗೆ ಶ್ರೇಷ್ಠವಾದ ಶ್ರಾವಣಮಾಸದವ್ರತವೆಂಬೆ. ಅಂತಪ್ಪ ಇಷ್ಟಬ್ರಹ್ಮಾನಂದಸ್ವರೂಪವಾದ ನಿರಂಜನಭಾವಲಿಂಗವನು - ಧನವೆಂದಡೆ ಆತ್ಮ. ಅಂತಪ್ಪ ಆತ್ಮನಲ್ಲಿ ಸ್ವಾಯತವ ಮಾಡಿ, ಆ ಆತ್ಮಪ್ರಕೃತಿಯನಳಿದು, ಆ ನಿರಂಜನ ಭಾವಲಿಂಗದ ಮಹಾಜ್ಞಾನಾಚರಣೆಯನಾಚರಿಸುವುದೇ ದ್ವಾದಶಮಾಸ, ದ್ವಾದಶ ಚತುರ್ದಶಿ, ದ್ವಾದಶ ಅಮವಾಸಿಯೊಳಗೆ ಮಾಘಮಾಸದ ಚತುರ್ದಶಿ ಶಿವರಾತ್ರಿಅಮವಾಸೆಯ ವ್ರತವೆಂಬೆ. ಇಂತೀ ತ್ರಿವಿಧಲಿಂಗ ಮೊದಲಾದ ಚಿದ್ಘನಲಿಂಗವು ತನ್ನ ಸರ್ವಾಂಗದಲ್ಲಿ ಸ್ವಾಯತವುಂಟೆಂದು ಶ್ರೀಗುರುಮುಖದಿಂ ತಿಳಿಯದೆ ಲಿಂಗವಿರಹಿತರಾಗಿ, ಬಾಹ್ಯದ ಕ್ರಿಯೆಗಳ ಪಿಡಿದು ವ್ರತವನಾಚರಿಸುವುದೆಲ್ಲ ಮಾಯಾವಿಲಾಸ ಭವದ ಬಟ್ಟೆ ಎಂದು ತಿಳಿಯದೆ ಭವಭಾರಿಗಳಾಗಿ, ಭವಕ್ಕೆ ಭಾಜನವಾಗಿ ಕೆಟ್ಟು ಮನು ಮುನಿ ದೇವ ದಾನವರು ಮಾನವರು ಮೊದಲಾದ ಸಕಲ ಲೋಕಾದಿಲೋಕಂಗಳು ತಮ್ಮ ನಿಲುವು ತಾವಾರೆಂಬುದನ್ನರಿಯದೆ ಇದಿರಿಟ್ಟು ಕೆಟ್ಟುಪೋದರು ನೋಡೆಂದ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞಾ, ಬ್ರಹ್ಮರಂಧ್ರ, ಶಿಖಾ, ಪಶ್ಚಿಮವೆಂಬ ನವಚಕ್ರಸ್ಥಾನವ ಗುದ ಗುಹ್ಯ ನಾಬ್ಥಿ ಹೃದಯ ಕಂಠ ಉತ್ತಮಾಂಗ ಅಳ್ಳನೆತ್ತಿ ನಡುನೆತ್ತಿ ಹಿಂಭಾಗದ ಕಳ್ಳಕುಣಿಕೆಯೆಂದು ಪೇಳುವಿರಿ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗ ಇರ್ಪುದೇ? ಇಲ್ಲ. ಮತ್ತಂ, ಬಲ್ಲಾದರೆ ಪೇಳಿರಿ, ಇಲ್ಲವಾದರೆ ನಮ್ಮ ಶಿವಗಣಂಗಳ ಕೇಳಿರಿ. ಅದೆಂತೆಂದಡೆ : ಆಧಾರಚಕ್ರವೆಂಬುದೇ ಘ್ರಾಣ. ಸ್ವಾದ್ಥಿಷ್ಠಾನಚಕ್ರವೆಂಬುದೇ ಜಿಹ್ವೆಸ್ಥಾನ. ಮಣಿಪೂರಕಚಕ್ರವೆಂಬುದೇ ನೇತ್ರಸ್ಥಾನ. ಅನಾಹತಚಕ್ರವೆಂಬುದೇ ತ್ವಕ್ಕಿನಸ್ಥಾನ. ವಿಶುದ್ಧಿಚಕ್ರವೆಂಬುದೇ ಕರ್ಣಸ್ಥಾನ. ಆಜ್ಞಾಚಕ್ರವೆಂಬುದೇ ಹೃದಯಸ್ಥಾನ. ಬ್ರಹ್ಮಸ್ಥಾನವೆಂಬುದೇ ಕರಸ್ಥಲ. ಶಿಖಾಸ್ಥಾನವೆಂಬುದೇ ಮನಸ್ಥಲ. ಪಶ್ಚಿಮಸ್ಥಾನವೆಂಬುದೇ ಪ್ರಾಣಸ್ಥಲ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗವು ಸಂಬಂಧವಾಗಿರುವುದಲ್ಲದೆ ಅಂತಪ್ಪ ಜಡದೇಹಿ ನವಸ್ಥಾನದ ಮಾಂಸರಕ್ತದಲ್ಲಿ ಪರಶಿವಲಿಂಗವು ಇರ್ಪುದೆ? ಇಲ್ಲ. ಅದೇನು ಕಾರಣವೆಂದಡೆ : ಘ್ರಾಣದಲ್ಲಿ ಆಚಾರಲಿಂಗಸ್ವಾಯತವಿಲ್ಲದೆ ಗಂಧ ದುರ್ಗಂಧ ಮೊದಲಾದ ಆವ ಗಂಧದ ವಾಸನೆಯು ತಿಳಿಯದು. ಜಿಹ್ವೆಯಲ್ಲಿ ಗುರುಲಿಂಗಸ್ವಾಯತವಿಲ್ಲದೆ ಸವಿ ಕಹಿ ಮೊದಲಾದ ಆವ ರುಚಿಸ್ವಾದವು ತಿಳಿಯದು. ನೇತ್ರದಲ್ಲಿ ಶಿವಲಿಂಗಸ್ವಾಯತವಿಲ್ಲದೆ ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ ಮೊದಲಾದ ಷಡ್ವರ್ಗದ ರೂಪು ಲಕ್ಷಣ ತಿಳಿಯದು. ತ್ವಕ್ಕಿನಲ್ಲಿ ಜಂಗಮಲಿಂಗಸ್ವಾಯತವಿಲ್ಲದೆ ಮೃದು ಕಠಿಣ ಮೊದಲಾದ ಆವ ಸುಖವು ತಿಳಿಯದು. ಶ್ರೋತ್ರದಲ್ಲಿ ಪ್ರಸಾದಲಿಂಗಸ್ವಾಯತವಿಲ್ಲದೆ ಸುಸ್ವರ ಅಪಸ್ವರ ಮೊದಲಾದ ಆವ ಸ್ವರಲಕ್ಷಣವು ತಿಳಿಯದು. ಹೃದಯದಲ್ಲಿ ಮಹಾಲಿಂಗಸ್ವಾಯತವಿಲ್ಲದೆ ಷಡಿಂದ್ರಿಸುಖತೃಪ್ತಿ ಮೊದಲಾದ ಸಕಲೇಂದ್ರಿಯ ಸುಖತೃಪ್ತಿ ಸಂತೋಷವು ತಿಳಿಯದು. ಕರಸ್ಥಲದಲ್ಲಿ ನಿರಾಕಾರವಾದ ನಿಷ್ಕಲಲಿಂಗವೆಂಬ ಇಷ್ಟಲಿಂಗ ಸ್ವಾಯತವಿಲ್ಲದೆ ಷಡ್ವಿಧಾಂಗದಲ್ಲಿ ಷಡ್ವಿಧಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಮನದಲ್ಲಿ ಶೂನ್ಯಲಿಂಗವೆಂಬ ಪ್ರಾಣಲಿಂಗಸ್ವಾಯತವಿಲ್ಲದೆ ಸರ್ವೇಂದ್ರಿಯಲ್ಲಿ ಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಪ್ರಾಣವೆಂಬಾತ್ಮನಲ್ಲಿ ಭಾವಲಿಂಗಸ್ವಾಯತವಿಲ್ಲದೆ ಸರ್ವಾಂಗಲಿಂಗಮಯ ಪರವಸ್ತುಸ್ವರೂಪ ತಾನೆಂದು ತಿಳಿಯದು. ಇಂತಪ್ಪ ವಿಚಾರವನು ತಿಳಿಯಬಲ್ಲಾತನೇ ಅನಾದಿಶರಣನು. ಅಂತಪ್ಪ ಪರಶಿವಲಿಂಗದ ಸ್ವಾಯತಸಂಬಂಧವಾದ ಭೇದವ ತಿಳಿಯದೆ ಅಂಗಭಾವ ಮುಂದುಗೊಂಡು ಇರ್ಪಾತನೇ ಭವಭಾರಿಕನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪೃಥಿವ್ಯಪ್ತೇಜೋವಾಯ್ವಾಕಾಶಂಗಳಲ್ಲಿ ಪೃಥಿವ್ಯಪ್ತೇಜಸ್ಸುಗಳು ಸಾಕರಾಗಳೂ ವಾಯ್ವಾಕಾಶಂಗಳು ನಿರಾಕಾರಗಳೂ ಆಗಿ, ಸ್ಥೂಲ ಸೂಕ್ಷ್ಮಕಾರಣಂಗಳಾಗಿಹವು. ಪೃಥ್ವಿಯಲ್ಲೈದು ಗುಣಗಳೂ ಜಲದಲ್ಲಿ ನಾಲ್ಕು ಗುಣಗಳೂ ಅಗ್ನಿಯಲ್ಲಿ ಮೂರು ಗುಣಗಳೂ ವಾಯುವಿನಲ್ಲಿರಡು ಗುಣಗಳೂ ಇರ್ಪವು. ಆಕಾಶದಲ್ಲೊಂದು ಗುಣವಿರ್ಪುದು. ಆತ್ಮನು ನಿರ್ಗುಣಮಾಗಿ ಸಕಲಗುಣಂಗಳಿಗೂ ತಾನು ಕಾರಣಮಾಗಿಹನು. ಅದೆಂತೆಂದೊಡೆ : ನಿರ್ಗುಣಮಾದ ಬಿಂದುಪದಾರ್ಥವು ಸಗುಣರೂಪಮಾದ ಮನುಷ್ಯರಿಗೆ ತಾನು ಕಾರಣಮಾಗಿರ್ಪಂದದಿ ಆತ್ಮನಿಹನು. ಪಂಚವರ್ಣಂಗಳು ಸತ್ವರಜಸ್ತಮೋಗುಣಂಗಳು. ನಾದ ಬಿಂದು ಕಲೆಗಳು ಬಾಲ್ಯ ಯೌವನ ಕೌಮಾರ ವಾರ್ಧಕ್ಯಂಗಳು. ಇವೆಲ್ಲವೂ ಪ್ರಪಂಚಕ್ಕೆ ಗುಣಂಗಳಲ್ಲದೆ ಆತ್ಮನ ಗುಣವಲ್ಲ. ಅಂತಪ್ಪ ಆತ್ಮನೇ ಶಿವನು, ಆಕಾಶವೇ ವಿಷ್ಣು, ವಾಯುವೇ ಬ್ರಹ್ಮನು. ಸಾಕಾರದಲ್ಲಿ ಅಗ್ನಿಯೇ ರುದ್ರನು, ಜಲವೇ ವಿಷ್ಣು. ಪೃಥ್ವಿಯೇ ಬ್ರಹ್ಮನು. ಇವು ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ, ಎಲ್ಲವೂ ಆತ್ಮನಲ್ಲಿ ಲಯವನೈದುತ್ತಿಹವು. ಅಂತಪ್ಪ ಆತ್ಮಸ್ವರೂಪಮೆತೆಂದೊಡೆ : ದೃಷ್ಟಿಗೋಚರಮಲ್ಲ, ಒಂದು ವಸ್ತುವಿನಲ್ಲಿ ಸಾಮ್ಯಗೋಚರಮಲ್ಲ. ಅದೆಂತೆಂದೊಡೆ : ವಾಯ್ವಾಕಾಶಾತ್ಮಸ್ವರೂಪಿಗಳಾದ ತ್ರಿಮೂರ್ತಿಗಳು. ವಾಯುರೂಪಮಾದ ಬ್ರಹ್ಮನೇ ಲಕ್ಷ್ಮಿಯು, ಆಕಾಶರೂಪಮಾದ ವಿಷ್ಣುವೇ ಮಹಾದೇವಿಯು, ಆv್ಮÀರೂಪಮಾದ ಶಿವನೇ ಶಾರದೆಯು. ವಾಯುರೂಪಮಾದ ಬ್ರಹ್ಮನು ಆತ್ಮರೂಪಮಾದ ಶಾರದೆಯನ್ನು ಕೂಡಿಹನು. ಆಕಾಶರೂಪಮಾದ ವಿಷ್ಣುವು ವಾಯುರೂಪಮಾದ ಲಕ್ಷ್ಮಿಯಂ ಕೂಡಿಹನು. ಆತ್ಮÀರೂಪಮಾದ ಶಿವನು ಆಕಾಶರೂಪಮಾದ ಮಹಾದೇವಿಯಂ ಕೂಡಿಹನು. ಆತ್ಮನೇ ವಿವೇಕವೆಂದು ತಿಳಿವುದು, ವಿವೇಕವೇ ಸತ್ಯಜ್ಞಾನಾಂದಸ್ವರೂಪು, ವಿವೇಕದಿಂದ ಸಕಲಪ್ರಪಂಚವೆಲ್ಲಾ ಮಿಥ್ಯೆಯಾಗಿಹುದು. ಅಂತಪ್ಪ ಸಕಲಪ್ರಪಂಚಮೆಲ್ಲವೂ ಮಿಥ್ಯವೆಂದು ತಿಳಿದು ಆ ಪ್ರಪಂಚದಲ್ಲಿ ಹೊಂದಿರ್ಪ ವಿವೇಕವೇ ಮುಕ್ತಿಯು, ಆಮುಕ್ತಿಯೇ ಶಿವನು. ಅಂತಪ್ಪ ವಿವೇಕದಲ್ಲಿನಾಹಂಭಾವವಡಗಿ, ಅಂತಪ್ಪ ವಿವೇಕವೇ ಮಹಾಲಿಂಗವು, ಅಂತಪ್ಪ ವಿವೇಕಮಿರ್ದಲ್ಲಿ ಪಾಪಗಳು ಹೊಂದದೇ ಇಹವು. ಅದುಕಾರಣ, ತಾನು ತಾನಾಗಿರ್ಪ ನಿಜಾನಂದಸುಖದೊಳೋಲಾಡುತಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಅಯ್ಯಾ, ಗುರುಶಿಷ್ಯರಿಬ್ಬರು ಪುಣ್ಯಪಾಪ, ಇಹಪರಂಗಳಿಗೆ ಒಳಗಾದ ವಿಚಾರವೆಂತೆಂದಡೆ ಸತ್ಯಸದಾಚಾರಸಂಪತ್ತೆಂಬ ಶಿವಭಕ್ತರ ಹೃದಯದಲ್ಲಿ ಜನಿತನಾಗಿ ಸತ್ಯನಡೆ ನಡೆಯದೆ, ಲೋಕದ ಜಡಜೀವಿಯಂತೆ ಪಂಚಮಹಾಪಾತಕಂಗಳಲ್ಲಿ ವರ್ತಿಸುವುದ ಕಂಡು ಅದ ಪರಿಹರಿಸದೆ, ದ್ರವ್ಯದಭಿಲಾಷೆಯಿಂದ ತ್ರಿವಿಧದೀಕ್ಷೆಯ ಮಾಡುವನೊಬ್ಬ ಗುರು ಹುಟ್ಟಂಧಕನೆಂಬೆನಯ್ಯಾ. ಅಂತಪ್ಪ ಪರಮಪಾತಕಂಗೆ ಜಪವ ಹೇಳಿ, ಪಾದೋದಕದಲ್ಲೇಕಭಾಜನವ ಮಾಡಿ, ಪ್ರಸಾದವ ಕೊಟ್ಟು, ಷಟ್‍ಸ್ಥಲವ ಹೇಳುವನೊಬ್ಬ ಜಂಗಮ ಕೆಟ್ಟಗಣ್ಣವನೆಂಬೆನಯ್ಯಾ. ಇಂತೀ ಅಧಮ ಗುರುಶಿಷ್ಯಜಂಗಮಕ್ಕೆ ಭವಬಂಧನ ತಪ್ಪದು ನೋಡಾ, ಶಂಭುಕೇಶ್ವರದೇವಾ, ನೀನೊಲಿಯದೆ ಕೆಟ್ಟಿತ್ತೀ ಜಗವೆಲ್ಲ.
--------------
ಸತ್ಯಕ್ಕ
ಭವಿಯಾಚಾರವ ಬಿಡದೆ ಭಯಾಗರವ ಹೊಗದೆ, ಶಿವಾಚಾರದಲ್ಲಿ ನಡೆವ ನಾಯಿಗಳು ಬರಿದೆ ನಾವು ಶಿವಾಚಾರಿಗಳೆಂದರೆ ನಮ್ಮ ಶಿವಾಚಾರಿ ಶರಣ ಬಸವಣ್ಣ ಮೆಚ್ಚ ನೋಡಯ್ಯ. ಶಿವಾಚಾರದ ಮಾರ್ಗವನು, ಶಿವಾಚಾರದ ಮರ್ಮವನು, ಶಿವಾಚಾರದ ವಿಸ್ತಾರವನು ನಮ್ಮ ಶರಣ ಬಸವಣ್ಣ ಬಲ್ಲನಲ್ಲದೆ ಉದರವ ಹೊರವ ವೇಷಧಾರಿಗಳೆತ್ತಬಲ್ಲರಯ್ಯ ? ಅಂತಪ್ಪ ಶಿವಾಚಾರದ ವಿಸ್ತಾರ ಸಕೀಲ ಹೇಳಿಹೆ ಕೇಳಿರಣ್ಣ. ಅದೆಂತೆಂದೊಡೆ v ಲಿಂಗಾಚಾರವೆಂದು, ಸದಾಚಾರವೆಂದು, ಶಿವಾಚಾರವೆಂದು, ಭೃತ್ಯಾಚಾರವೆಂದು, ಗಣಾಚಾರವೆಂದು ಶಿವಾಚಾರವು ಐದುತೆರನಾಗಿಪ್ಪುದು ನೋಡಯ್ಯಾ. ಶ್ರೀ ಗುರು ಕರುಣಿಸಿಕೊಟ್ಟ ಲಿಂಗವನಲ್ಲದೆ ಅನ್ಯದೈವಂಗಳಿಗೆರಗದಿಹುದೇ ಲಿಂಗಾಚಾರ ನೋಡಯ್ಯ. ತಾ ಮಾಡುವ ಸತ್ಯ ಕಾಯಕದಿಂದ ಬಂದ ಅರ್ಥಾದಿಗಳಿಂದ ತನ್ನ ಕುಟುಂಬ ರಕ್ಷಣೆಗೊಂಬ ತೆರದಿ ಗುರುಲಿಂಗಜಂಗಮ ದಾಸೋಹಿಯಾಗಿಪ್ಪುದೇ ಸದಾಚಾರ ನೋಡಯ್ಯ. ಶಿವಭಕ್ತರಾದ ಲಿಂಗಾಂಗಿಗಳಲ್ಲಿ ಪೂರ್ವದ ಜಾತಿಸೂತಕಾದಿಗಳನ್ನು ವಿಚಾರಿಸದೆ ಅವರ ಮನೆಯಲ್ಲಿ ತಾ ಹೊಕ್ಕು ಒಕ್ಕು ಮಿಕ್ಕ ಪ್ರಸಾದವ ಕೊಂಬುದೇ ಶಿವಾಚಾರ ನೋಡಯ್ಯ. ಲಿಂಗಾಂಗಿಗಳಾದ ಶಿವಭಕ್ತರೇ ಮರ್ತ್ಯದಲ್ಲಿ ಮಿಗಿಲಹರೆಂದು ತಾನು ಅವರ ಭೃತ್ಯನೆಂದರಿದು ಅಂತಪ್ಪ ನಿಜಲಿಂಗಾಂಗಿಗಳ ಚಮ್ಮಾವುಗೆಯ ಕಾಯ್ದಿಪ್ಪುದೇ ಭೃತ್ಯಾಚಾರ ನೋಡಯ್ಯ. ಗುರುಲಿಂಗಜಂಗಮ ಪಾದೋದಕ ಪ್ರಸಾದ ರುದ್ರಾಕ್ಷಿ ಮಂತ್ರಗಳೆಂಬಷ್ಟಾವರಣಂಗಳು ತನ್ನ ಪ್ರಾಣಸ್ವರೂಪವಾಗಿ ಅವುಗಳ ನಿಂದೆಯನ್ನು ಕೇಳಿ ಸೈರಿಸದೆ ಶಿಕ್ಷಿಸುವೆನೆಂಬ ನಿಷ್ಠೆಗೊಂಡುದೇ ಗಣಾಚಾರ ನೋಡಯ್ಯ. ಇದಕ್ಕೆ ಸಾಕ್ಷಿ - ಪರಮರಹಸ್ಯೇ- 'ಲಿಂಗಾಚಾರಸ್ಸದಾಚಾರಶ್ಶಿವಾಚಾರಸ್ತಥವಚ ಭೃತ್ಯಾಚಾರೋ ಗಣಾಚಾರಃ ಪಂಚಾಚಾರಃ ಪ್ರಕೀರ್ತಿತಃ || ಗುರೂಣಾ ದತ್ತಲಿಂಗಂಚ ನಾಸ್ತಿ ದೈವಂ ಮಹೀತಲೇ' ಇತಿ ಭಾವಾನುಸಂಧಾನೋ ಲಿಂಗಾಚಾರಸ್ಸಮುಚ್ಯತೇ || ಧರ್ಮಾರ್ಜಿತವಿತ್ತೇನ ತೃಪ್ತಿಶ್ಚ ಕ್ರಿಯತೇ ಸದಾ ಗುರುಜಂಗಮಲಿಂಗಾನಾಂ ಸದಾಚಾರಃ ಪ್ರಕೀರ್ತಿತಃ || ಅವಿಚಾರೇಷು ಭಕ್ತೇಷು ಜಾತಿಧರ್ಮಾದಿ ಸೂತಕಾನ್ ೀ ತದ್ಗøಹೇಷ್ವನ್ನಪಾನಾದಿ ಭೋಜನಂ ಕ್ರಿಯತೇ ಸದಾ || ತಚ್ಫಿವಾಚಾರಮಿತ್ಯಾಹುರ್ವೀರಶೈವಪರಾಯಣಾ ಶಿವಭಕ್ತಜನಾ ಸರ್ವೇ ವರಿಷ್ಠಾಃ ಪೃಥಿವೀತಲೇ || ತೇಷಾಂ ಭೃತ್ಯೋಹಮಿತ್ಯೇತದ್ಭೃತ್ಯಾಚಾರಸ್ಸ ಉಚ್ಯತೇ ೀ ಗುರುಲಿಂಗ ಜಂಗಮಶ್ಚೈವ ಪಾದತೀರ್ಥಃ ಪ್ರಸಾದತಃ ೀ ಇತಿ ಪಂಚಸ್ವರೂಪೋ[s]ಯಹಂ ಗಣಾಚಾರಃ ಪ್ರಕೀರ್ತಿತಃ ||ú ಎಂದುದಾಗಿ, ಇಂತಪ್ಪ ಶಿವಾಚಾರದ ಆಚಾರವನರಿಯದೆ ನಾ ಶಿವಭಕ್ತ ನಾ ಶಿವಭಕ್ತೆ ನಾ ಶಿವಾಚಾರಿ ಎಂದು ಕೊಂಬ ಶೀಲವಂತರ ನೋಡಿ ಎನ್ನ ಮನ ನಾಚಿ ನಿಮ್ಮಡಿಮುಖವಾಯಿತ್ತಯ್ಯ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಯ್ಯ.
--------------
ಅಕ್ಕಮಹಾದೇವಿ
ಆರಾರು ಸಕಲಸನ್ನಿಹಿತರರಿತಕ್ಕಗೋಚರ ಪರಶಿವಲಿಂಗವನು, ಆರೈದು ಅಂಗಪ್ರಾಣಾತ್ಮ ಸಂಗಸಮರಸಾನಂದ ಶರಣಂಗೆ ಒಂದೂ ಆಶ್ಚರ್ಯ ತೋರದು, ಅದೇನು ಕಾರಣವೆಂದೊಡೆ, ತಾನೆ ಹರಿ ವಿದ್ಥಿ ಸುರಾದಿ ಮನುಮುನಿ ಸಕಲಕ್ಕೂ ಆಶ್ಚರ್ಯವಾದ ಕಾರಣ. ಅಂತಪ್ಪ ಶರಣನೇ ಶಿವನಲ್ಲದೆ ಬೇರಿಲ್ಲ ಕಾಣಾ. ಅದಲ್ಲದೆ ಮತ್ತೆ ಗಿರಿಗೋಪುರ ಗಂವರ ಶರದ್ಥಿತಾಣ ಸ್ಥಾವರಕ್ಷೇತ್ರ ನರಕುಶಲ ಕುಟಿಲ ಭೂತಾದಿ ಕಿಂಚಿತಕ್ಕಾಶ್ಚರ್ಯವೆಂಬ ಬಾಲಮರುಳ ಅಜ್ಞಾನಿಗಳಿಗೆ ಲಿಂಗಶರಣರೆಂಬ ನಾಮ ಬಹು ಭಾರ ಕಾಣಾ ಗುರುನಿರಂಜನ ಚನ್ನಬಸವಲಿಂಗಕ್ಕೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ತನುವೆಂಬ ಮಹಾಪರ್ವತದಲ್ಲಿ ಒಸರುತ್ತಿಪ್ಪ ನಿರುರ್sುರಿಗಳಿಂದ ಆ ಘನವನೊಡಗೂಡುವಿರ ಹೇಳಿರೆ? ಸ್ಥೂಲಸಮುದ್ರ ಅರವತ್ತುನಾಲ್ಕು ಕೋಟಿಯು ಮೂವತ್ತೆರಡು ಲಕ್ಷವು ಮೂವತ್ತೆರಡು ಸಾವಿರದ ಪರಿಪೂರ್ಣವಾಗಿಪ್ಪುದಾಗಿ ಅವು ತಮ್ಮ ತಮ್ಮ ಘನತೆಗೆ ತಾವೆ ಘನವೆಂದು ಮೊರವುತೈದಾವೆ. ಅವು ನೀವು ಸಿಡಿದುಬೀಳುವ ತುಂತುರುಮಾತ್ರಕ್ಕೆ ಸಮವಪ್ಪುದೆ? ಅಂತಪ್ಪ ಸಮುದ್ರಂಗಳು ಸವಾಲಕ್ಷಕೂಡಿ ನೀನೆಯ್ದುವ ಮಹಾಸಮುದ್ರದ ಒಂದು ಬಿಂದುವಿಗೆ ಸರಿಯೆ? ಅಯ್ಯಾ ನೀವೆಂಬ ಮಹಾಸುಧಾಸಮುದ್ರಕ್ಕೆ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಯ್ಯಾ, ನಾವು ಗುರು ಲಿಂಗ ಜಂಗಮದ ಪಾದೋದಕ ಪ್ರಸಾದಸಂಬಂದ್ಥಿಗಳೆಂದು ನುಡಿದುಕೊಂಬ ಪಾತಕರ ಮುಖವ ನೋಡಲಾಗದು. ಅದೇಕೆಂದಡೆ, ಪಾದೋದಕವ ಕೊಂಡ ಬಳಿಕ, ಜನನದ ಬೇರ ಕಿತ್ತೊರಸಬೇಕು. ಪ್ರಸಾದವ ಕೊಂಡ ಬಳಿಕ, ಪ್ರಳಯವ ಗೆಲಿಯಬೇಕು. ಇಂತಪ್ಪ ಚಿದ್ರಸ ಪಾದೋದಕ ಚಿತ್‍ಪ್ರಕಾಶ ಪ್ರಸಾದ. ತನ್ನ ಚಿನ್ಮನಸ್ವರೂಪವಾದ ಹೃದಯಮಂದಿರ ಮಧ್ಯದಲ್ಲಿ ನೆಲಸಿರುವ ಸಕೀಲಸಂಬಂಧವ ಚಿದ್ಘನ ಗುರುವಿನ ಮುಖದಿಂದ ಸಂಬಂದ್ಥಿಸಿಕೊಳಲರಿಯದೆ, ಅರ್ಥದಾಸೆಗಾಗಿ ಬಡ್ಡಿಯ ತೆಗೆದುಕೊಂಡು, ಬಡವರ ಬಂಧನಕಿಕ್ಕಿ, ತುಡುಗುವ್ಯಾಪಾರವ ಮಾಡಿ, ಸದಾಚಾರದಿಂದ ಆಚರಿಸಲರಿಯದೆ, ತನುಮನಧನದಲ್ಲಿ ವಂಚನೆಯಿಲ್ಲದ ಭಕ್ತಿಯನರಿಯದೆ, ತೀರ್ಥಪ್ರಸಾದದಲ್ಲಿ ನಂಬುಗೆ ವಿಶ್ವಾಸವಿಲ್ಲದೆ ಕಂಡವರ ಕೈಯೊಡ್ಡಿ ಇಕ್ಕಿಸಿಕೊಂಡು ವಿಶ್ವಾಸವಿಲ್ಲದವಂಗೆ ಅಷ್ಟಾವರಣವೆಂತು ಸಿದ್ಧಿಯಹುದೋ? ಅದೇನು ಕಾರಣವೆಂದಡೆ : ಸಕಲ ವೇದಾಗಮ ಪುರಾಣ ಸಪ್ತಕೋಟಿ ಮಹಾಮಂತ್ರ ಉಪಮಂತ್ರ ಕೋಟ್ಯಾನುಕೋಟಿಗೆ ಮಾತೃಸ್ಥಾನವಾದ ಪಂಚಾಕ್ಷರಿಯ ಮಂತ್ರ ಸಟೆಯಾಯಿತ್ತು. ಅನಂತಕೋಟಿ ಬ್ರಹ್ಮಾಂಡಗಳನೊಳಗೊಂಡಂಥ ಗುರುಕೊಟ್ಟ ಇಷ್ಟಲಿಂಗ ಸಟೆಯಾಯಿತ್ತು. ದೇಗುಲದೊಳಗಣ ಕಲ್ಲು ಕಂಚು ಕಟ್ಟಿಗೆ ಬೆಳ್ಳಿ ತಾಮ್ರ ಬಂಗಾರದ ದೇವರ ಪೂಜಿಸುವ ಪೂಜಾರಿಗಳ ಮಾತು ದಿಟವಾಗಿತ್ತು. ಆದಿ ಅನಾದಿಯಿಂದತ್ತತ್ತಲಾಗಿ ಮೀರಿ ತೋರುವ ಮಾಯಾಕೋಳಾಹಳ ನಿರಂಜನಜಂಗಮದ ಪಾದೋದಕ ಪ್ರಸಾದ ಸಟೆಯಾಯಿತ್ತು. ಕ್ಷೇತ್ರಾದಿಗಳ ತೀರ್ಥಪ್ರಸಾದ ದಿಟವಾಯಿತ್ತು. ಅಂತಪ್ಪ ಅಗಮ್ಯ ಅಗೋಚರವಾದ ಅಷ್ಟಾವರಣ ಇಂಥವರಿಗೆಂತು ಸಾಧ್ಯವಹುದು? ಆಗದೆಂದಾತ ನಮ್ಮ ಶರಣ ಕಲಿದೇವರದೇವ
--------------
ಮಡಿವಾಳ ಮಾಚಿದೇವ
ಅಂಗದಂತೆ ಲಿಂಗವಾಗಿರ್ದ ದೇಹ, ಲಿಂಗದಂತೆ ಅಂಗವಾಗಿರ್ದ ದೇಹ, ಈ ಕಾಯದ್ವಯಂಗಳಿಗೆ ಅಂಗಕಳಾ ಲಿಂಗಕಳಾ ಪ್ರಭಾವ ಒಂದಾಗಿ, ತನುವಿನ ಕೈಮುಟ್ಟಿ ಪ್ರಾಣಲಿಂಗ ಜಂಗಮದಾಸೋಹ ಮಾಡುತ್ತಿರಲು, ಆ ಜಂಗಮದ ಸ್ಥೂಲಪ್ರಾಸಾದವೆ ಬಸವಣ್ಣನ ಸಾಕಾರ. ಅಂತಪ್ಪ ಸಾಕಾರವನರಿವುತ್ತಿದ್ದರಿವು ಸೌರಾಷ್ಟ್ರ ಸೋಮೇಶ್ವರಲಿಂಗ ತಾನಾಗಿ ನೆನೆವುತ್ತ ನೆನೆವುತ್ತ ನೆನೆಯದಂತಿರ್ದೆನಯ್ಯಾ
--------------
ಆದಯ್ಯ
ಆವಾವಸ್ಥಾನದಲ್ಲಿಯು ಉಗ್ರಮೂರ್ತಿ ನಯನ ಕರುಣದಿಂದ ಶಿವಲೀಲಾನಂದವಾಗಿ ಇರುವ ಶರಣರು ಲೌಕಿಕದ ಜಡರು ಮಂಕು ಮರುಳರು ಕಳ್ಳರು ಸುಳ್ಳರು ಆಹಾರಗಳ್ಳರು ಇತ್ಯಾದಿಕರು ಅರಿಯಬಲ್ಲರೆ ? ಅಂತಪ್ಪ ಮಹಿಮರ ಶಿವಲಿಂಗನಿಷಾ*ಪರರ ಏಕದಾರ್ಚನೆಯರ ಮಹಿಮೆಯೆ ನೋಡಲ್ಕೆ ಯರಳು ಇದ್ದಲ್ಲಿಗೆ ಸಕ್ಕರೆಯು ಬಂದ ಪರಿಯಾಯಿತ್ತು ಕಾಣಾ ಕುವರ ಚೆನ್ನಬಸವೇಶ್ವರಾ.
--------------
ಮಾದಾರ ಚೆನ್ನಯ್ಯ
ಗುರು ಲಿಂಗ ಜಂಗಮ ಪಾದೋದಕ ಪ್ರಸಾದವನರಿಯದ ಪಾತಕರ ಮುಖವ ನೋಡಲಾಗದಯ್ಯ. ಅಂತಪ್ಪ ಪಾತಕರ ಮಾತ ಕೇಳಲಾಗದು, ಹೇಳಲಾಗದು. ಅದೇನು ಕಾರಣವೆಂದರೆ; ಗುರುವಿಡಿದು ಕಾಯ ಪಾವನವಾಯಿತ್ತಯ್ಯ. ಲಿಂಗವಿಡಿದು ಜೀವ ಪಾವನವಾಯಿತ್ತಯ್ಯ. ಜಂಗಮವಿಡಿದು ಪ್ರಾಣ ಪಾವನವಾಯಿತ್ತಯ್ಯ. ಪಾದೋದಕ ಪ್ರಸಾದವಿಡಿದು ನಿರ್ವಿಕಲ್ಪ ನಿತ್ಯಾತ್ಮಕನಾದ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅದ್ವೈತವನೋದಿ ಎರಡಳಿದೆವೆಂಬ ಅಣ್ಣಗಳು ನೀವು ಕೇಳಿರೆ. ಅದ್ವೈತಿಯಾದಡೆ ತನುವಿಕಾರ, ಮನದ ಸಂಚಲ, ಭಾವದ ಭ್ರಾಂತು, ಅರಿವಿನ ಮರಹು, ಇಂತೀ ಚತುರ್ವಿಧಂಗಳಲ್ಲಿ ವಿಧಿನಿಷೇಧಂಗಳಳಿದು, ಚಿದ್ಬ್ರಹ್ಮದೊಳವಿರಳಾತ್ಮಕವಾದುದು ಅದ್ವೈತ. ಅಂತಪ್ಪ ವಿಧಿನಿಷೇಧಂಗಳು ಹಿಂಗದೆ, ಲಿಂಗವನರಿಯದೆ, ವಾಗದ್ವೈತದಿಂದ ನುಡಿದು ಅದ್ವೈತಿ ಎನಿಸಿಕೊಂಬುದೆ ದ್ವೈತ. ಇಂತಪ್ಪ ದ್ವೈತಾದ್ವೈತಂಗಳಿಗೆ ಸಿಲುಕದ, ಹರಿಹರಬ್ರರ್ಹದಿಗಳನರಿಯದ ವೇದಶಾಸ್ತ್ರ ಆಗದು ಪುರಾಣ ಇತಿಹಾಸ ರಹಸ್ಯಛಂದಸ್ಸು ಅಲಂಕಾರ ನಿಘಂಟು ಶಬ್ದತರ್ಕಂಗಳೆಂಬ ಕುತರ್ಕಂಗಳಿಗೆ ನಿಲುಕದ ನಿತ್ಯನಿಜೈಕ್ಯ ನಿರುಪಮಸುಖಿಯಾಗಿ, ತಾನಿದಿರೆಂಬ ಭಿನ್ನಭಾವವಿಲ್ಲದ ಸ್ವಯಾದ್ವೈತಿ ತಾನೆ ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ಶುದ್ಧಪದ್ಮಾಸನದಲ್ಲಿ ಕುಳ್ಳಿರ್ದು ಊಧ್ರ್ವಲೋಚನನಾಗಿ, ಉಲಿವ ಕರಣಂಗಳನೆಲ್ಲ ಉನ್ಮನಿಯ ಸ್ಥಾನದಲ್ಲಡಗಿಸಿ, ಮನವನೊಮ್ಮನವ ಮಾಡಿ ಅನಾಹತಕರ್ಣದಲ್ಲಿ ಲಾಲಿಸಲು, ಸಹಸ್ರದಳಕಮಲಮಧ್ಯದಲ್ಲಿ ಉದ್ಘೋಷಿಸುತ್ತಿರ್ಪುದು ಸುನಾದಬ್ರಹ್ಮವು. ಅಂತಪ್ಪ ಸುನಾದಬ್ರಹ್ಮದಲ್ಲಿ ಮನವಡಗಿ ಮೈಯ್ಮರೆದಿರ್ಪಾತನೆ ಘನಲಿಂಗಯೋಗಿಯಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಘ್ರಾಣಜಿಹ್ವಾತ್ವಕ್ಫ್ರೋತ್ರಮಾನಸಾದಿ ವಿಷಯೇಂದ್ರಿಗಳಲ್ಲಿ ಪೃಥ್ವಿವ್ಯಪ್ತೇಜೋವಾಯ್ವಾಕಾಶಾತ್ಮಾದಿ ಷಡ್ಭೂತಂಗಳು ವಿಪರೀತಸಂಬಂಧಂಗಳಾಗಿ ತೋರುತ್ತಿರ್ಪವೆಂತೆಂದೊಡೆ: ಮನಸ್ಸಿನ ವಿಷಯದಲ್ಲಿ ಪೃಥ್ವಿಯು ಸೃಷ್ಟಿಕಾರಣಮಾಗಿಹುದು. ಶ್ರೋತ್ರವಿಷಯದಲ್ಲಿ ಜಲವು ಸಂರಕ್ಷಣಕಾರಣಮಾಗಿ ಶುಚಿಯಾಗಿಹುದು. ತ್ವಗ್ವಿಷಯದಲ್ಲಗ್ನಿಯು ಸಂಹಾರಕಾರಣಮಾಗಿಹುದು. ನೇತ್ರವಿಷಯದಲ್ಲಿ ವಾಯುವು ಚಂಚಲಕಾರಣಮಾಗಿಹುದು. ಜಿಹ್ವಾವಿಷಯದಲ್ಲಾಕಾಶವು ಶಬ್ದಕಾರಣಮಾಗಿಹುದು. ನಾಸಿಕ ವಿಷಯದಲ್ಲಾತ್ಮನು ಚೈತನ್ಯಕಾರಣಮಾಗಿಹನು. ವಾಯುವಿನೊಳಗೆ ಬೆರೆದ ಆತ್ಮನೇ ಜೀವನು ; ಆತ್ಮನೊಳಗೆ ಬೆರೆದ ವಾಯುವೆ ಮನಸ್ಸು. ಪಂಚಭೂತರೂಪಮಾದ ಶರೀರಕ್ಕೆ ಜೀವನು ಕರ್ತನಾದಂದದಿ ಪಂಚಭೂತಗುಣಗ್ರಾಹಿಗಳಾದ ಇಂದ್ರಿಯಂಗಳಿಗೆ ಮನಸ್ಸೇ ಕರ್ತೃವಾಗಿ, ಆ ಇಂದ್ರಿಯಂಗಳು ಹೋದಲ್ಲಿಗೆ ಶರೀರವು ಹೋಗುವಂದದಿ, ಆ ಮನಸ್ಸೇ ಜೀವನಾಗಿ, ಆ ಮನಸ್ಸು ಹೋದಲ್ಲಿಗೆ ಜೀವನು ಹೋಗುತ್ತಿಹನು. ಅಂತಪ್ಪ ನಿಜಸ್ವರೂಪಮಾದ ಪರಮಾತ್ಮನಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇನ್ನಷ್ಟು ... -->