ಅಥವಾ

ಒಟ್ಟು 56 ಕಡೆಗಳಲ್ಲಿ , 25 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಯಲೆ ಅಂಗವಾಗಿ, ನಿರ್ವಯಲೆ ಲಿಂಗವಾಗಿ, ಭಾವಕೆ ಸಂಬಂಧವಾಯಿತ್ತು ನೋಡಾ. ಬಯಲಿಂದ ಅಂಗವಿಲ್ಲದೆ, ನಿರ್ವಯಲೆಂಬ ಲಿಂಗವು ನಿಶ್ಶಬ್ದವಾಗಿ, ಭಾವಕ್ಕೆ ಬೆರಗಾಯಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ನಿರಂಜನಾತೀತಷಟ್‍ಸ್ಥಲಬ್ರಹ್ಮ ಅಂಗವಾಗಿ ಆ ನಿರಂಜನಾತೀತ ಷಟ್‍ಸ್ಥಲಬ್ರಹ್ಮವನೊಡಗೂಡಿದ ಮಹಾಶರಣಂಗೆ ನಮೋ ನಮೋ ಎಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ. || 661 ||
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿಷ್ಕಳಂಕಾತ್ಮನು ನಿಜಪ್ರಕೃತಿವಶದಿಂ ಮನ ನೆನಹು ಭಾವದೆ ತ್ರಿವಿಧಸ್ವರೂಪವಾಯಿತ್ತು. ಆ ಮನವೊಗ್ದಿದುದೆ ನೆನಹಿಗೆ ಬಂದಿತ್ತು. ಅದೇ ಭಾವದಲ್ಲಿ ತೋರಿತ್ತು ; ಅದೇ ಪ್ರಾಣವಾಯಿತ್ತು ; ಅದೇ ಚೈತನ್ಯಸ್ವರೂಪಮಾಗಿ ತನುವನೆಳದಾಡಿತ್ತು. ಅದಕ್ಕೆ ವಾಯುವೇ ಅಂಗವಾಗಿ ಕರ್ಮಾದ್ಥೀನಮೆನಿಸಿ, ತಾನೆಂಬಹಂಕಾರದಿಂ ತನ್ನ ತಾ ಮರೆತು ತೊಳಲಿಬಳಲುತ್ತಿರಲು, ಅನೇಕಜನ್ಮ ಸಂಚಿತಕರ್ಮ ಸಮೆದು, ಗುರುಕರುಣ ನೆಲೆಗೊಂಡಲ್ಲಿ ಗಗನಾಂಗಿಯಾಗಿ, ಆ ಮನಕ್ಕೆ ತಾನೇ ಆಧಾರಮಾಗಿ, ತಾನೇ ಪರಮನಾಗಿ, ತಾನೇ ಪ್ರಸನ್ನಮಾಗಿರ್ದ ಮಹಾಜಾÕನಶಕ್ತಿಯಂ ಕಂಡದರೊಳಗೆ ಕೂಡಿ, ಸಾಧಕಕ್ಕೊಳಗಾದ ಮನವೇ ಘನವಾಯಿತ್ತು. ಆ ಘನವೇ ಲಿಂಗವಾಯಿತ್ತು, ಆ ಲಿಂಗವೇ ಪ್ರಾಣವಾಯಿತ್ತು, ಆ ಪ್ರಾಣವೇ ಪರಮಾತ್ಮಸ್ವರೂಪಮಾಗಿ ತತ್ತ್ವಮಸಿಪದದಿಂದತ್ತತ್ತ ಹಮ್ಮನಳಿದು ಸುಮ್ಮನೆಯಾದುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯ ಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಶ್ರೀಮತ್ಸಜ್ಜನ ಶುದ್ಧಶಿವಾಚಾರರಾಗಿ ಅಷ್ಟಾವರಣವೆ ಅಂಗವಾಗಿ, ಪಂಚಾಚಾರವೆ ಪ್ರಾಣವಾಗಿ, ಬಸವೇಶ್ವರದೇವರ ಸಾಂಪ್ರದಾಯಕರೆಂದು ನುಡಿದು ನಡೆದರೆ ಭಕ್ತರೆಂಬೆ, ಪುರಾತನರೆಂಬೆ. ಅಂತಪ್ಪ ಭಕ್ತಂಗೆ ಈ ಮೂಜಗವೆಲ್ಲ ಸರಿಯಲ್ಲವೆಂಬೆ. ಆ ಭಕ್ತಂಗೆ ಶಿವನ ಗದ್ದುಗೆಯೆ ಕೈಲಾಸವಾಗಿಪ್ಪುದು ನೋಡಾ. ಈ ಶಿವಾಚಾರದ ಪಥವನರಿಯದೆ ಇರುಳು ಹಗಲು ಅನಂತ ಸೂತಕಪಾತಕಂಗಳೊಳಗೆ ಮುಳುಗಾಡಿ ಮತಿಗೆಟ್ಟು ಪಂಚಾಂಗವ ಬೊಗಳುವ ಭ್ರಷ್ಟ ಮಾದಿಗರ ಮಾತು ಅಂತಿರಲಿ. ಪಂಚಾಂಗ ಕೇಳಿದ ದಕ್ಷಬ್ರಹ್ಮನ ತಲೆಯೇಕೆ ಹೋಯಿತು ? ಪಂಚಾಂಗ ಕೇಳಿದ ಪಂಚಪಾಂಡವರು ದೇಶಭ್ರಷ್ಟರಾದರೇಕೆ ? ಪಂಚಾಂಗ ಕೇಳಿದ ಶ್ರೀರಾಮನ ಹೆಂಡತಿ ರಾವಣಗೆ ಸೆರೆಯಾದಳೇಕೆ ? ಪಂಚಾಂಗ ಕೇಳಿದ ಇಂದ್ರನ ಶರೀರವೆಲ್ಲ ಯೋನಿಮಂಡಲವೇಕಾಯಿತು ? ಪಂಚಾಂಗ ಕೇಳಿದ ದ್ವಾರಾವತಿ ಪಟ್ಟಣದ ನಾರಾಯಣನ ಹೆಂಡಿರು ಹೊಲೆಮಾದಿಗರನ್ನು ಕೂಡಿದರೇಕೆ ? ಪಂಚಾಂಗ ಕೇಳಿದ ಸರಸ್ವತಿಯ ಮೂಗು ಹೋಯಿತೇಕೆ ? ಪಂಚಾಂಗ ಕೇಳಿದ ಕಾಮ ಸುಟ್ಟು ಭಸ್ಮವಾದನೇಕೆ ? ಪಂಚಾಂಗ ಕೇಳಿದ ಬ್ರಹ್ಮ ವಿಷ್ಣು ಇಂದ್ರ ಮೊದಲಾದ ಮೂವತ್ತುಮೂರುಕೋಟಿ ದೇವರ್ಕಳು ತಾರಕಾಸುರನಿಂದ ಬಾಧೆಯಾಗಿ ಕಂಗೆಟ್ಟು ಶಿವನ ಮೊರೆಯ ಹೊಕ್ಕರೇಕೆ ? ಕುರುಡ ಕುಂಟ ಹಲ್ಲುಮುರುಕ ಗುರುತಲ್ಪಕನ ಬಲವ ಕೇಳಲಾಗದು. ಶುಭದಿನ ಶುಭಲಗ್ನ ಶುಭವೇಳೆ ಶುಭಮುಹೂರ್ತ ವ್ಯತಿಪಾತ ದಗ್ಧವಾರವೆಂದು ಸಂಕಲ್ಪಿಸಿ ಬೊಗಳುವರ ಮಾತ ಕೇಳಲಾಗದು. ಗುರುವಿನಾಜ್ಞೆಯ ಮೀರಿ, ಸತ್ತರೆ ಹೊಲೆ, ಹಡೆದರೆ ಹೊಲೆ, ಮುಟ್ಟಾದರೆ ಹೊಲೆ ಎಂದು ಸಂಕಲ್ಪಿಸಿಕೊಂಬುವಿರಿ. ನಿಮ್ಮ ಮನೆ ಹೊಲೆಯಾದರೆ ನಿಮ್ಮ ಗುರುಕೊಟ್ಟ ಲಿಂಗವೇನಾಯಿತು ? ವಿಭೂತಿ ಏನಾಯಿತು ? ರುದ್ರಾಕ್ಷಿ ಏನಾಯಿತು ? ಮಂತ್ರವೇನಾಯಿತು ? ಪಾದೋದಕ ಪ್ರಸಾದವೇನಾಯಿತು ? ನಿಮ್ಮ ಶಿವಾಚಾರವೇನಾಯಿತು ? ನೀವೇನಾದಿರಿ ಹೇಳಿರಣ್ಣಾ ? ಅರಿಯದಿದ್ದರೆ ಕೇಳಿರಣ್ಣಾ. ನಿಮ್ಮ ಲಿಂಗ ಪೀತಲಿಂಗ; ನೀವು ಭೂತಪ್ರಾಣಿಗಳು. ನಿಮ್ಮ ಮನೆಯೊಳಗಾದ ಪದಾರ್ಥವೆಲ್ಲ ಹೆಂಡಕಂಡ ಅಶುದ್ಧ ಕಿಲ್ಬಿಷವೆನಿಸಿತ್ತು. ಇದ ಕಂಡು ನಾಚದೆ, ಮತ್ತೆ ಮತ್ತೆ ಶುಭಲಗ್ನವ ಕೇಳಿ, ಮದುವೆಯಾದ ಅನಂತ ಜನರ ಹೆಂಡಿರು ಮುಂಡೆಯರಾಗಿ ಹೋದ ದೃಷ್ಟವ ಕಂಡು ಪಂಚಾಂಗವ ಕೇಳಿದವರಿಗೆ ನಾಯಿ ಮಲವ ಹಂದಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣಾ ನಿಸ್ಸಂಗ ನಿರಾಳ ನಿಜಲಿಂಗಪ್ರಭುವೆ.
--------------
ನಿರಾಲಂಬ ಪ್ರಭುದೇವ
ಅರ್ಚಿಸಿ ಪೂಜಿಸುವುದಕ್ಕೆ ಅಂಗವಾಗಿ, ಮನ ನೆನೆವುದಕ್ಕೆ ಘನತರವಾಗಿ, ಪೂಜಿಸುವುದಕ್ಕೆ ಪುಣ್ಯಮೂರ್ತಿಯಾಗಿ, ಭಾವ ನೆನೆವುದಕ್ಕೆ ಭವಗೇಡಿಯಾಗಿ, ಉಭಯದಂಗವ ತಾಳಿ ನಿಂದ ಕಾಲಾಂತಕ ಬ್ಥೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಅಂಗವರಿತು ನಿಂದವಂಗೆ ಜಗದ ಹಂಗಿನಲ್ಲಿ ಸಿಕ್ಕಿ ಜಂಗುಳಿಗಳ ಕೂಡದೆ ಲಿಂಗವೇ ಅಂಗವಾಗಿ ನಿಂದುದು ಕಪಿಲಸಿದ್ಧಮಲ್ಲಿಕಾರ್ಜುನಂಗವು ತಾನಾದುದ
--------------
ಸಿದ್ಧರಾಮೇಶ್ವರ
ನಿಷ್ಠೆ ಘಟಿಸಿ ಕ್ರಿಯವಗ್ರಹಿಸಿ ಭಾವಭರಿತವಾಗಿ ಜ್ಞಾನವೆ ಅಂಗವಾಗಿ ಕ್ರಿಯೆ ಪ್ರಾಣವಾಗಿ, ಮತ್ತೆ ಜ್ಞಾನವೆ ಪ್ರಾಣವಾಗಿ ಕ್ರಿಯೆ ಅಂಗವಾಗಿ ಅಂಗಮನಕ್ರಿಭಾವ ಈ ಚತುರ್ವಿಧವೊಂದಾಗಿ, ಮತ್ತೆ ನಿಷ್ಠೆಘಟಿಸಿ ಕ್ರಿಜ್ಞಾನ ಎರಡ ವಿೂರಿನಿಂದ ಭಕ್ತವಿರಕ್ತನ ತೂರ್ಯದ ಕ್ರಿಯೆ ವೇಧಿಸಿ ನಿಂದವನ ನಿಲವು ಎಂತುಟೆಂದರೆ: ಕ್ರಿಯೆಂದರೆ ಇಷ್ಟಲಿಂಗ, ಅಂಗವೆಂದರೆ ಪ್ರಾಣಲಿಂಗ. ಆ ಪ್ರಾಣಲಿಂಗವ ಇಷ್ಟಲಿಂಗದಲ್ಲಡಗಿಸಿಕೊಂಡು ನಿಂದುದು ಎರಡಾಗಿ ಭಕ್ತನೆಂದು ಮಾಹೇಶ್ವರನೆಂದು ನಿಷ್ಠೆಯಲ್ಲಿ ನೆರೆನಿಂದಿರಲು ಮತ್ತಾ ನಿಷ್ಠೆಪಸರಿಸಿ ಆ ಭಕ್ತಮಾಹೇಶ್ವರರು ತಮ್ಮ ಮುನ್ನಿನ ನಿಷ್ಠೆಯ ಬಳಿಗೆ ಬಂದು ಎನ್ನಕ್ರಿ ನಿಮ್ಮಲ್ಲಿಯೇ ಅಡಗಿತ್ತು ಆ ಮುಕ್ತತ್ವದ ಕ್ರಿಯೊಳಗೊಂಡು ದೃಷ್ಟವ ಕಂಡು ಬರ....ಕೇಳಲಾಗಿ, ಎನ್ನ ಇಷ್ಟವಾಸರಿಸಿತ್ತೆಂದು ಹೇಳಲು ಸುಮ್ಮನೆ ಅವನ ಕೂಡೆ ಪ್ರಸಂಗಿಸಲಾಗದು. ಅದೇನು ಕಾರಣವೆಂದರೆ: ಮೊಟ್ಟ ಮೊದಲಲ್ಲಿ ಮೂರು ಭಿನ್ನವ ಕೇಳುವದು ಆ ಮೂರು ಭಿನ್ನಯೆಂತಾದವಯ್ಯಯೆಂದರೆ, ಅದರೊಳಗೈದು ಭಿನ್ನ ಉಂಟು. ಇಂತೀ ಎಂಟರೊಳಗೆ ನಾಲ್ಕು ಲಿಂಗದ ನೆಲೆ ಸಿಕ್ಕಿದರೆ ಅವೆಲ್ಲರಲ್ಲಿ ಬಂಧಿಸೂದು. ಅದಲ್ಲದೆ ನಿಂದರೆ ಮುಂದಣ ನಾಲ್ಕು ಅವನ ಭಾವವ ತೊರೆದು ನೋಡೂದು. ನೋಡಿ ನಿಶ್ಚಯವಾದ ಮತ್ತೆ ಕೂಡೆಯಿಟ್ಟುಕೊಂಡಿರ್ಪ ಸಮಯದಲ್ಲಿ, ಮೂಲಾಗ್ನಿಯ ಜ್ವಾಲೆಯಿಂದ ಮೇಲುವಾಯ್ದು ಒತ್ತಿಲಿರ್ದ ತನ್ನ ತೆತ್ತಿಗರ ನಿಲ್ಲದಂತೆ ನೀಕರಿಸುತ್ತಿರಲು, ಸಲಹಲಾರದ ತಾಯಿ ಶಿಶುವ ಬೈದು ಕೊಲುವಂತೆ ತಮ್ಮ ತ್ಯಾಗದ ಮೈಮರೆದಿರ್ದಾತನ ಎಚ್ಚರ ಮಾಡಿ, ನೀ ಮುನ್ನಲಿಂತಹವನೆಂದೆ ನುಡಿದು ಹೋಗುವ ನಿಷ್ಠೆ ಭಂಡರ ಗುಹೇಶ್ವರ ಸಾಕ್ಷಿಯಾಗಿ ಅಲ್ಲಯ್ಯನೊಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಉಂಬೆಡೆಯಲ್ಲಿ ಭರಿತಾರ್ಪಣವೆಂದು ಮಿಕ್ಕಾದ ವಿಷಯೇಂದ್ರಿಯಂಗಳಲ್ಲಿ ಭರಿತಾರ್ಪಣದ ಸಂದನಳಿದು ಅರ್ಪಿಸಬಲ್ಲಡೆ, ಆ ಗುಣ ಉಭಯಭರಿತಾರ್ಪಣಭೇದ. ಇದನರಿಯದೆ ಲಿಂಗಕ್ಕೆ ಸಂದಲ್ಲದೆ, ತಾನೊಂದು ದ್ರವ್ಯವ ಮುಟ್ಟೆನೆಂಬ ಸಂದೇಹದ ಸಂಕಲ್ಪವಲ್ಲದೆ, ಭರಿತಾರ್ಪಣಾಂಗಿಯ ಲಿಂಗಾಂಗಿಯ ಮುಟ್ಟಲ್ಲ. ಭರಿತಾರ್ಪಣವಾವುದೆಂದಡೆ : ತಾ ಕಂಡುದ ಮುಟ್ಟದೆ, ತಾ ಮುಟ್ಟಿದುದನರ್ಪಿಸದೆ, ತಾ ಕಾಣದುದ ಮುನ್ನವೆ, ತಾ ಕಂಡುದ ಮುಟ್ಟದ ಮುನ್ನವೆ ಅರ್ಪಿತವಾದುದ ದೃಷ್ಟಾಂತವನರಿದು, ಭರಿತಾರ್ಪಣವೆಂಬ ಪರಿಪೂರ್ಣತ್ವವಂ ಕಂಡು, ಅಂಗಸಹಿತವಾಗಿ ಮುಟ್ಟದೆ, ಮನಸಹಿತವಾಗಿ ನೆನೆಯದೆ, ಇಂದ್ರಿಯಂಗಳು ಸಹಿತವಾಗಿ ಒಂದನೂ ಅನುಭವಿಸದೆ ಲಿಂಗವೆ ಅಂಗವಾಗಿ, ಅಂಗವೆ ಲಿಂಗವಾಗಿ ಅಂದಂದಿಗೆ ಕಾಯ ಹಿಂಗಬೇಕೆಂಬುದನರಿದಾಗವೆ ಭರಿತಾರ್ಪಣ, ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗದ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಪೃಥ್ವಿ ಅಂಶವನಳಿದು ಚಿತ್ತ್ಪøಥ್ವಿಯಂಗವಾಗಿ ಭೃತ್ಯಾಚಾರ ನೆಲೆಸಿದುದೇ ಆಚಾರಲಿಂಗಸಂಬಂಧ. ಅಪ್ಪುವಿನಂಶವನಳಿದು ಚಿದಪ್ಪುವೇ ಅಂಗವಾಗಿ ಗಣಾಚಾರ ನೆಲೆಸಿದುದೇ ಗುರುಲಿಂಗಸಂಬಂಧ. ಅಗ್ನಿಯಂಶವನಳಿದು ಚಿದಗ್ನಿಯೇ ಅಂಗವಾಗಿ ಶಿವಾಚಾರ ನೆಲೆಸಿದುದೇ ಶಿವಲಿಂಗಸಂಬಂಧ. ವಾಯುವಿನಂಶವನಳಿದು ಚಿದ್ವಾಯುವೇ ಅಂಗವಾಗಿ ಸದಾಚಾರ ನೆಲೆಸಿದುದೇ ಜಂಗಮಲಿಂಗಸಂಬಂಧ. ಆಕಾಶದಂಶವನಳಿದು ಚಿದಾಕಾಶವೇ ಅಂಗವಾಗಿ ಲಿಂಗಾಚಾರ ನೆಲೆಸಿದುದೇ ಪ್ರಸಾದಲಿಂಗಸಂಬಂಧ. ಇಂತು ಪಂಚಾಚಾರ ಪಂಚತತ್ವವಳಿದುಳಿದು ನೆಲೆಸಿ ಪಂಚಲಿಂಗಸಂಬಂಧವಾದಲ್ಲಿ ಆತ್ಮನಂಶವನಳಿದುಳಿದು ಸರ್ವಾಚಾರಸಂಪತ್ತು ನೆಲೆಸಿ ಮಹಾಲಿಂಗಗುರುನಿರಂಜನ ಚನ್ನಬಸವಲಿಂಗ ಸಂಬಂಧವಾಯಿತ್ತು ಮಾಹೇಶ್ವರಂಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾದಾತ ಬಸವಣ್ಣ. ಎನ್ನ ಸೂಕ್ಷ್ಮತನುವಿಂಗೆ ಪ್ರಾಣಲಿಂಗವಾದಾತ ಬಸವಣ್ಣ. ಎನ್ನ ಕಾರಣತನುವಿಂಗೆ ಭಾವಲಿಂಗವಾದಾತ ಬಸವಣ್ಣ. ಎನ್ನ ದೃಕ್ಕಿಂಗೆ ಇಷ್ಟಲಿಂಗವಾದಾತ ಬಸವಣ್ಣ. ಎನ್ನ ಮನಕ್ಕೆ ಪ್ರಾಣಲಿಂಗವಾದಾತ ಬಸವಣ್ಣ. ಎನ್ನ ಭಾವಕ್ಕೆ ತೃಪ್ತಿಲಿಂಗವಾದಾತ ಬಸವಣ್ಣ. ಎನ್ನ ನಾಸಿಕಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಜಿಹ್ವೆಗೆ ಗುರುಲಿಂಗವಾದಾತ ಬಸವಣ್ಣ. ಎನ್ನ ನೇತ್ರಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ತ್ವಕ್ಕಿಂಗೆ ಜಂಗುರುಲಿಂಗವಾದಾತ ಬಸವಣ್ಣ. ಎನ್ನ ಶ್ರೋತ್ರಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಹೃದಯಕ್ಕೆ ಮಹಾಲಿಂಗವಾದಾತ ಬಸವಣ್ಣ. ಎನ್ನ ಸುಚಿತ್ತವೆಂಬ ಹಸ್ತಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಸುಬುದ್ಧಿಯೆಂಬ ಹಸ್ತಕ್ಕೆ ಗುರುಲಿಂಗವಾದಾತ ಬಸವಣ್ಣ. ಎನ್ನ ನಿರಹಂಕಾರವೆಂಬ ಹಸ್ತಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ಸುಮನವೆಂಬ ಹಸ್ತಕ್ಕೆ ಜಂಗಮಲಿಂಗವಾದಾತ ಬಸವಣ್ಣ. ಎನ್ನ ಸುಜ್ಞಾನವೆಂಬ ಹಸ್ತಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಸದ್ಭಾವವೆಂಬ ಹಸ್ತಕ್ಕೆ ಮಹಾಲಿಂಗವಾದಾತ ಬಸವಣ್ಣ. ಎನ್ನ ಆಧಾರಚಕ್ರದಲ್ಲಿ ಆಚಾರಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಸ್ವಾದಿಷ್ಠಾನಚಕ್ರದಲ್ಲಿ ಗುರುಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಮಣಿಪೂರಕಚಕ್ರದಲ್ಲಿ ಶಿವಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಅನಾಹತಚಕ್ರದಲ್ಲಿ ಜಂಗಮಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ವಿಶುದ್ಧಿ ಚಕ್ರದಲ್ಲಿ ಪ್ರಸಾದಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಆಜ್ಞಾಚಕ್ರದಲ್ಲಿ ಮಹಾಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಬ್ರಹ್ಮರಂಧ್ರದಲ್ಲಿ ನಿಃಕಲಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಶಿಖಾಚಕ್ರದಲ್ಲಿ ಶೂನ್ಯಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಪಶ್ಚಿಮಚಕ್ರದಲ್ಲಿ ನಿರಂಜನಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ವದನಕ್ಕೆ ಓಂಕಾರವಾದಾತ ಬಸವಣ್ಣ. ಎನ್ನ ಬಲದ ಭುಜಕ್ಕೆ ನಕಾರವಾದಾತ ಬಸವಣ್ಣ. ಎನ್ನ ಎಡದ ಭುಜಕ್ಕೆ ಮಕಾರವಾದಾತ ಬಸವಣ್ಣ. ಎನ್ನ ಒಡಲಿಂಗೆ ಶಿಕಾರವಾದಾತ ಬಸವಣ್ಣ. ಎನ್ನ ಬಲದ ಪಾದಕ್ಕೆ ವಕಾರವಾದಾತ ಬಸವಣ್ಣ. ಎನ್ನ ಎಡದ ಪಾದಕ್ಕೆ ಯಕಾರವಾದಾತ ಬಸವಣ್ಣ. ಎನ್ನಾ ಆಪಾದಮಸ್ತಕ ಪರಿಯಂತರ ಮಂತ್ರರೂಪಕಸಂಬಂಧವಾದಾತ ಬಸವಣ್ಣ. ಎನ್ನ ನಾದಕ್ಕೆ ಆಕಾರವಾದಾತ ಬಸವಣ್ಣ. ಎನ್ನ ಬಿಂದುವಿಂಗೆ ಉಕಾರವಾದಾತ ಬಸವಣ್ಣ. ಎನ್ನ ಕಳೆಗೆ ಮಕಾರವಾದಾತ ಬಸವಣ್ಣ. ಎನ್ನ ರುದ್ಥಿರಕ್ಕೆ ನಕಾರವಾದಾತ ಬಸವಣ್ಣ. ಎನ್ನ ಮಾಂಸಕ್ಕೆ ಮಕಾರವಾದಾತ ಬಸವಣ್ಣ. ಎನ್ನ ಮೇಧಸ್ಸಿಂಗೆ ಶಿಕಾರವಾದಾತ ಬಸವಣ್ಣ. ಎನ್ನ ಅಸ್ಥಿಗೆ ವಕಾರವಾದಾತ ಬಸವಣ್ಣ. ಎನ್ನ ಮಜ್ಜೆಗೆ ಯಕಾರವಾದಾತ ಬಸವಣ್ಣ. ಎನ್ನ ಸರ್ವಾಂಗಕ್ಕೆ ಓಂಕಾರವಾದಾತ ಬಸವಣ್ಣ. ಇಂತು ಬಸವಣ್ಣನೆ ಪರಿಪೂರ್ಣನಾಗಿ, ಬಸವಣ್ಣನೆ ಪ್ರಾಣವಾಗಿ, ಬಸವಣ್ಣನೆ ಅಂಗವಾಗಿ, ಬಸವಣ್ಣನೆ ಲಿಂಗವಾದ ಕಾರಣ, ನಾನು ಬಸವಣ್ಣಾ ಬಸವಣ್ಣಾ ಬಸವಣ್ಣಾ ಎಂದು ಬಯಲಾದೆನು ಕಾಣಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ತತ್ವ ಅಂಗವಾಗಿ, ಪರತತ್ವ ಪ್ರಾಣವಾಗಿ, ಉಭಯದಲ್ಲಿ ನಿಂದ ನಿಜ ಹೊರಗಾಯಿತ್ತು, ಮನಸಂದ ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಬ್ರಹ್ಮಂಗೆ ಇಚ್ಫಾಶಕ್ತಿಯಾಗಿದ್ದಲ್ಲಿ, ವಿಷ್ಣುವಿಂಗೆ ಕ್ರಿಯಾಶಕ್ತಿಯಾಗಿದ್ದಲ್ಲಿ, ರುದ್ರಂಗೆ ಜ್ಞಾನಶಕ್ತಿಯಾಗಿದ್ದಲ್ಲಿ, ಇಂತಿವರು ದಂಪತಿ ಸಹಜವಾಗಿ ಯುಗಜುಗಂಗಳ ಜೋಗೈಸುತ್ತಿದ್ದರು. ಬ್ರಹ್ಮಂಗೆ ಸರಸ್ವತಿಯೆಂದಾರು ! ವಿಷ್ಣುವಿಗೆ ಲಕ್ಷ್ಮೀದೇವಿಯೆಂದಾರು ! ರುದ್ರಂಗೆ ಉಮಾದೇವಿಯೆಂದಾರು ! ಬ್ರಹ್ಮ ಅಂಗವಾಗಿ, ವಿಷ್ಣು ಪ್ರಾಣವಾಗಿ, ರುದ್ರ ಉಭಯಜ್ಞಾನವಾಗಿ, ಅಂದು ತಾಳಿದ ಸಾಕಾರದ ಗುಡಿಯ ಐಕ್ಯನಾದ ಕಾರಣ, ಗುಮ್ಮಟನೆಂಬ ನಾಮವ ತಾಳಿ, ಅಗಮ್ಯೇಶ್ವರಲಿಂಗ ಗುಹೇಶ್ವರನಾದ.
--------------
ಮನುಮುನಿ ಗುಮ್ಮಟದೇವ
ಕುಲ ಎಷ್ಟು ಎಂದಡೆ, ಎರಡು ಕುಲ. ಅವಾವೆಂದಡೆ : ಭವಿ ಒಂದು ಕುಲ, ಭಕ್ತ ಒಂದು ಕುಲ. ಅಷ್ಟಾವರಣವೇ ಅಂಗವಾಗಿ, ಪಂಚಾಚಾರವೇ ಪ್ರಾಣವಾಗಿಪ್ಪ ಭಕ್ತರ ಕುಲವನರಸಿದಡೆ ಬಾರದ ಭವಂಗಳಲ್ಲಿ ಬಪ್ಪುದು ತಪ್ಪುದು. ನೀರಿಂದಾದ ಮುತ್ತು ಮರಳಿ ಉದಕವಪ್ಪುದೆ ? ಆಕಾಶಕ್ಕೆ ಹೋದ ಹೊಗೆ ಹಿಂದಕ್ಕೆ ಬಪ್ಪುದೆ ? ಮಣ್ಣಿಂದಾದ ಮಡಕೆ ಮತ್ತೆ ಮಣ್ಣಪ್ಪುದೆ ? ಮತ್ತೆ ವಾಮನಮುನಿ ಹಿರಿಯ ಭಕ್ತರ ಮನೆಯ ಬಿನ್ನಹವ ಕೈಕೊಂಡು ಕುಲಕಂಜಿ ಉಣಲೊಲ್ಲದೆ ಹೋದ ನಿಮಿತ್ತದಿಂದ, ಹಾವಿನಹಾಳ ಕಲ್ಲಯ್ಯಗಳ ಮನೆಯ ಶ್ವಾನನಾಗಿ ಹುಟ್ಟಲಿಲ್ಲವೆ ? ಅದು ಕಾರಣ, ಶಿವಭಕ್ತರ ಒಕ್ಕುಮಿಕ್ಕ ಪ್ರಸಾದವ ಕೊಳಬೇಕು ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ರುಚಿಯಲ್ಲಿ ಸಂಹಾರ, ಸ್ಪರುಶನದಲ್ಲಿ ಸೃಷ್ಟಿ, ರೂಪಿನಲ್ಲಿ ಸ್ಥಿತಿ, ಇಂತು ಸಂಹಾರಕ್ಕೆ ನಾದವೇ ಮೂಲವು, ಸೃಷ್ಟಿಗೆ ಬಿಂದುವೇ ಮೂಲವು, ಸ್ಥಿತಿಗೆ ಕಳೆಯೇ ಮೂಲವು. ಸೃಷ್ಟಿಗೆ ಪೃಥ್ವಿಯೇ ಆಧಾರಮಾಯಿತ್ತು ; ಸ್ಥಿತಿಗೆ ಆತ್ಮನೇ ಆಧಾರಮಾಯಿತ್ತು. ಸೃಷ್ಟಿಮೂಲಮಪ್ಪ ಸ್ಪರುಶನದಲ್ಲಿ ಆನಂದವೂ ಸಂಹಾರಮೂಲಮಪ್ಪ ರುಚಿಯಲ್ಲಿ ಜ್ಞಾನವೂ ಸ್ಥಿತಿಮೂಲಮಪ್ಪ ರೂಪಿನಲ್ಲಿ ನಿಜವೂ ನೆಲೆಗೊಂಡು, ಸೃಷ್ಟಿಯೆ ಸ್ಥಿತಿಹೇತುವಾಗಿ, ಸ್ಥಿತಿಯೇ ಸಂಹಾರಹೇತುವಾಗಿ, ಸಂಹಾರವೇ ಸೃಷ್ಟಿಹೇತುವಾಗಿ, ರುಚಿಗೆ ಅಗ್ನಿಯೂ, ಸ್ಪರುಶನಕ್ಕೆ ಜಲವೂ, ರೂಪಿಗೆ ಪೃಥ್ವಿಯೂ ಕಾರಣಮಾಗಿ, ಇಂತು ಅವಸ್ತ್ರಮಾಗಿ ತಿರುಗುತ್ತಿರ್ಪ ಪರಶಿವನಾಜ್ಞಾಚಕ್ರವನ್ನು ಗುರುಮುಖದಿಂದ ವಿಚಾರಿಸಿ ತಿಳಿದ ಮಹಾಪುರುಷನು ಈ ಚಕ್ರಕ್ಕೆ ತಗಲಿರ್ಪ ಮನವೆಂಬ ಕೀಲನ್ನು ಗುರುವಿತ್ತ ಲಿಂಗವೆಂಬ ಪರಶುವಿನಿಂ ಭಾವವೆಂಬ ಹಸ್ತದಲ್ಲಿ ಪಿಡಿದು ಖಂಡಿಸಲು, ಆ ಚಕ್ರದ ಚಲನೆ ನಿಂದಿತ್ತು. ಸ್ಪರ್ಶನದಲ್ಲಿರ್ಪ ಆನಂದರಸಮಂಗದಲ್ಲಿ ಕೂಡಿ, ಸಂಹಾರಾಗ್ನಿಯಂ ನಂದಿಸಿತ್ತು. ಆ ಸಂಹಾರದೊಳಗಿರ್ಪ ಜ್ಞಾನಾಗ್ನಿಯು ಲಿಂಗದೊಳಗೆ ಬೆರದು, ಸೃಷ್ಟಿಸ್ಥಿತಿರೂಪಮಾದ ಪೃಥ್ವಿ ಅಪ್ಪುಗಳಂ ಸಂಹರಿಸಿತ್ತು. ಸ್ಥಿತಿಯಲ್ಲಿರ್ಪ ನಿಜಲಿಂಗದಲ್ಲಿ ನಿಜಮಾಯಿತ್ತು. ಇಂತು ಆ ಚಕ್ರವಳಿಯೆ, ಆತ್ಮಭ್ರಮೆಯಳಿದು, ಆತ್ಮವೇ ಲಿಂಗಮಾಗಿ, ಆಕಾಶವೇ ಅಂಗವಾಗಿ, ವಾಯುವೇ ಆ ಎರಡರ ಸಂಗದಲ್ಲಿ ಬೆರದು ಭೇದದೋರದಿರ್ಪುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪ್ರಸಾದವೆಂದು ನುಡಿವಿರಿ, ಪ್ರಸಾದದ ಭೇದವ ಬಲ್ಲವರಾರು, ಈ ಪ್ರಸಾದದ ಭೇದವ ತಿಳಿದವರಾರು. ಪ್ರಸಾದವೆಂಬ ಮೂರಕ್ಷರದ ಭೇದವ ಬಲ್ಲವರಾರು. ಆಕಾರ ನಿರಾಕಾರ ಸಾಕಾರ ಈ ಮೂರು ಪ್ರಕಾರವಾಯಿತ್ತು. ಈ 'ಪ್ರ'ಕಾರದ ಭೇದವ ಬಲ್ಲವರಾರು. ಸಕಲ ನಿಃಕಲ ನಿರಂಜನನಾದ ಭೇದವ ಬಲ್ಲರೆ 'ಸಾ'ಕಾರದ ಭೇದವ ಬಲ್ಲವರೆ, 'ದ'ಕಾರದ ಭೇದವನರಿದವರೆ, ಆದಿ ಆಧಾರ ಅನಾದಿ ಈ ತ್ರಿವಿಧವ ಬಲ್ಲವರು. ಇಂತೀ ಪ್ರಸಾದವೆಂಬ ಸದ್ಭಾವದ ನಿರ್ಣಯವನರಿಯದೆ ಪ್ರಸಾದವ ಕೊಟ್ಟಾತನು ಕೊಂಡಾತನು ಇವರಿಬ್ಬರ ಭೇದವೆಂತೆಂದರೆ: ಹುಟ್ಟುಗುರಡನ ಕೈಯ ತೊಟ್ಟಿಗುರುಡ ಹಿಡದಂತಾಯಿತು. ಈ ಭೇದವೆಂತೆಂದರೆ :ಇಷ್ಟ ಪ್ರಾಣ ಭಾವ 'ಪ್ರ'ಕಾರವಾಯಿತು. 'ಸಾ'ಕಾರವೆ ಜಂಗಮಲಿಂಗ ಪ್ರಸಾದಲಿಂಗ ಸೋಂಕಿ ನವಪೀಠಗಳಾಗಿ ನವಲಿಂಗ ಸೋಂಕಿ ನವಪೀಠ ಪ್ರಸಾದವಾಯಿತು. ನವಪ್ರಸಾದ ನವಪ್ರಣಮವೆ ನವಬೀಜವಾಯಿತು. ನವಹಸ್ತಗಳ ನೆಲೆಗೊಳಿಸಿ ಶಿವಲಿಂಗಧಾರಣಮಂ ಮಾಡಿ ನವಲಿಂಗಮುಖವನರಿದು ನವನೈವೇದ್ಯವಂ ಮಾಡಿ ನವಮುಖಕ್ಕಿತ್ತ ನವಪ್ರಸಾದಿಯಾದ ಶರಣನು ನವಚಕ್ರಗಳೆಲ್ಲ ನವಜಪ ಪ್ರಸಾದವೆ ತಾನೆ ಆಗಿ ನವರತ್ನಪ್ರಭೆ ಏಕರವಿರಶ್ಮಿಯಾದಂತೆ, ನವಕೋಟಿ ಸೋಮಸೂರ್ಯರ ಪ್ರಭೆ ಒಂದಾಗಿ ದಿವ್ಯಜ್ಯೋತಿರ್ಲಿಂಗ ತಾನಾದ ಶರಣನು. ಅರಿವೆ ಶಿವಲಿಂಗ, ಸತ್ತುಚಿತ್ತಾನಂದ ನಿತ್ಯಪರಿಪೂರ್ಣ ತಾನೆ ಆಯಿತು. ನವ ಅಸ್ಥಿಗಳಡಗಿ ನವಲಿಂಗ ಒಂದೆ ಅಂಗವಾಗಿ ಬೆಳಗುತಿಹ ಶರಣಂಗೆ ಇಹಲೋಕವೇನು, ಪರಾತ್ಪರಲೋಕವೇನು ? ಸಗುಣವೇನು ನಿರ್ಗುಣವೇನು ? ನಿರಂಜನವೇನು, ನಿಷ್ಕಳವೇನು, ನಿರ್ಮಾಯವೇನು ? ಆತಂಗೆ ಭಕ್ಷವಿಲ್ಲ ಅಭ್ಯಕ್ಷವಿಲ್ಲ ಅರ್ಪಿತವಿಲ್ಲ ಅನರ್ಪಿತವಿಲ್ಲ. ಆತ ರುಚಿಸಿದ್ದೆಲ್ಲ ಪ್ರಸಾದ, ಅತ ಸೋಂಕಿದ್ದೇ ಪಾವನ. ಆತ ಮೆಟ್ಟಿದ ಭೂಮಿಯೆಲ್ಲ ಪುಣ್ಯಕ್ಷೇತ್ರಂಗಳಾದವು. ಆತ ಜಲಮಲವ ಬಿಟ್ಟು ಬಂದ, ಸಂಚಮನವ ಮಾಡಿದ ಸ್ಥಾನಾದಿಗಳೆಲ್ಲ ಪುಣ್ಯತೀರ್ಥಂಗಳಾದವು. ಇಂತೀ ನಿಮ್ಮ ಶರಣನ ಸರ್ವಾಂಗವೆಲ್ಲ ಶಿವಮಂದಿರವು ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಇನ್ನಷ್ಟು ... -->