ಅಥವಾ

ಒಟ್ಟು 23 ಕಡೆಗಳಲ್ಲಿ , 13 ವಚನಕಾರರು , 23 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹತ್ತು ಮತ್ತರ ಭೂಮಿ, ಬತ್ತದ ಹಯನು, ನಂದಾದೀವಿಗೆಯ ನಡೆಸಿಹೆವೆಂಬವರ ಮುಖವ ನೋಡಲಾಗದು, ಅವರ ನುಡಿಯ ಕೇಳಲಾಗದು. ಅಂಡಜ, ಸ್ವೇದಜ, ಉದ್ಭಿಜ, ಜರಾಯುಜವೆಂಬ ಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೊ ಒಡೆಯರಿಗೆ ಉಂಡಲಿಗೆಯ ಮುರಿದಿಕ್ಕಿದಂತೆ ಎನ್ನಿಂದಲೆ ಆುತ್ತು, ಎನ್ನಿಂದಲೆ ಹೋುತ್ತು ಎಂಬವನ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಕೂಡಲಸಂಗಮದೇವ 225
--------------
ಬಸವಣ್ಣ
ನವಮಾಸಕ್ಕೆ ಶ್ರೋತ್ರಾದಿಗಳೈದು, ಶಬ್ದಾದಿಗಳೈದು, ಮಂಡಲಮೂರು, ಗುಣಮೂರು, ವ್ಯಾದ್ಥಿಮೂರು, ಈಷಣಮೂರು, ನಾಡಿಹತ್ತು, ವಾಯುಹದಿನಾಲ್ಕು, ಕ್ಲೇಷಂಗಳೈದು, ಧಾತುಗಳೇಳು, ಮದವೆಂಟು, ಸುಖದುಃಖಂಗಳೆರಡು, ಎಪ್ಪತ್ತೆರಡುಸಾವಿರ ನಾಡಿಗಳು, ಎಂಬತ್ತೆಂಟುಕೋಟಿ ರೋಮದ್ವಾರಂಗಳು, ಎಂಬತ್ನಾಲ್ಕುನೂರುಸಾವಿರ ಸಂದುಗಳು, ಇಪ್ಪತ್ತೊಂದುಸಾವಿರದಾರುನೂರು ಶ್ವಾಸಂಗಳು, ಮೂವತ್ತೆರಡು ಲಕ್ಷಣಂಗಳು, ಐವತ್ತಾರಕ್ಷರಂಗಳು, ಅರುವತ್ನಾಲ್ಕು ಕಲೆ, ಜ್ಞಾನಂಗಳು ಕೂಡಿ ಸುಜ್ಞಾನಸಂಪನ್ನನಾಗಿ ಪೂರ್ವಜನ್ಮದಲ್ಲಿ ಎಂಬತ್ನಾಲ್ಕುನೂರುಸಾವಿರ ಜನ್ಮದಲ್ಲಿ ಬಂದ ಜನ್ಮವ ವಿವೇಕಿಸುತ್ತಿಹುದು ನೋಡಾ. ಅದೆಂತೆಂದಡೆ: ಮಾನವಜನ್ಮ ಒಂಬತ್ತುಸಾವಿರ ಜನ್ಮ. ಉರುವ ಜೀವಜನ್ಮ ಹನ್ನೊಂದುಸಾವಿರಜನ್ಮ. ಜಲಚರ ಜೀವಜನ್ಮದಲ್ಲಿ ಎಂಬತ್ನಾಲ್ಕುನೂರುಸಾವಿರಜನ್ಮದಲ್ಲಿ ಹತ್ತುಸಾವಿರ ಜನ್ಮ. ಹಾರುವ ಪಕ್ಷಿಗಳ ಜೀವಜನ್ಮದಲ್ಲಿ ಹತ್ತುಸಾವಿರಜನ್ಮ. ಚತುಷ್ಪಾದಜೀವರಾಶಿಗಳ ಜನ್ಮದಲ್ಲಿ ಹತ್ತುಸಾವಿರಜನ್ಮ. ದೈತ್ಯ ಜೀವಜನ್ಮದಲ್ಲಿ ಹದಿನಾರುಸಾವಿರಜನ್ಮ. ಸ್ಥಾವರಂಗಳ ಜನ್ಮದಲ್ಲಿ ಹದಿನೆಂಟುಸಾವಿರಜನ್ಮ. ಇಂತು ಎಂಬತ್ನಾಲ್ಕುನೂರುಜನ್ಮ ಅಂಡಜ ಸ್ವೇದಜ ಉದ್ಬಿಜ ಜರಾಯುಜವೆಂಬ ನಾಲ್ಕು ಯೋನಿಯಲ್ಲಿ ಜನಿಸಿದನು. ಇನ್ನು ಹುಟ್ಟಿದಾಕ್ಷಣದಲ್ಲಿಯೆ ಮರಣ, ಮರಣದಾಕ್ಷಣದಲ್ಲಿಯೇ ಜನನವೆಂದರಿದು ಸ್ಮರಿಸುತ್ತಿಹುದು ನೋಡಾ. ಇದಕ್ಕೆ ಈಶ್ವರ ಉವಾಚ : ``ಮಾಸೇಕಂ ನವಮೇ ಪ್ರಾಪ್ತೇ ಗರ್ಭೇತ ತತ್‍ಸ್ಮರತಿ ಸ್ವಯಂ | ಮೃತಸ್ಯಾಹಂ ಪುನರ್ಜಾತಃ ಜಾತಸ್ಯಾಹಂ ಮೃತಃ ಪುನಃ | ನಾನಾಯೋನಿಸಹಸ್ರೇಷು ಮಯಾ ದೃಷ್ಟಮನೇಕಶಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನು ಆ ಆತ್ಮನು ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಂ ಪಂಚಭೂತಾಂಶಿಕಮಂ ಕೂಡಿಕೊಂಡು ದೇಹವಾಗಿ ಬೆಳೆದು, ಆಧ್ಯಾತ್ಮಿಕ, ಆದ್ಥಿದೈವಿಕ, ಆದ್ಥಿಭೌತಿಕವೆಂಬ ತಾಪತ್ರಯಂಗಳಿಂದ ನೊಂದು ಬೆಂದು ಪುಣ್ಯಪಾಪ ವಶದಿಂದ ಜೀವನಾಗಿ, ಅಂಡಜ, ಸ್ವೇದಜ, ಉದ್ಬಿಜ, ಜರಾಯುಜವೆಂಬ ಚೌರಾಶಿಲಕ್ಷ ಜೀವಜಂತುಗಳ ಯೋನಿಯಲ್ಲಿ ಬಂದು, ಹುಟ್ಟದ ಯೋನಿಯಿಲ್ಲ, ಮೆಟ್ಟದ ಭೂಮಿಯಿಲ್ಲ, ಉಣ್ಣದ ಆಹಾರವಿಲ್ಲ, ಕಾಣದ ಸುಖದುಃಖವಿಲ್ಲ. ಇದಕ್ಕೆ ಈಶ್ವರ ಉವಾಚ : ``ನಾನಾಯೋನಿಸಹಸ್ರಾಣಿ ಗತ್ವಾ ಚೈವಂತು ಮಾಯಯಾ | ಆಹಾರಂ ವಿವಿಧಂ ಭುಕ್ತ್ವಾ ಪೀತ್ವಾ ಚ ವಿವಿಧಸ್ತನಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಂಸಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇಂದು ನಾಳೆ ಮುಕ್ತಿಯ ಪಡೆವೆನೆಂಬ ಶಿಷ್ಯಂಗೆ ಮುಂದಳ ಮುಕ್ತಿಯ ತೋರಿಹೆನೆಂಬ ಗುರುಗಳ ನೋಡಿರೆ ! ಹೋಮ, ನೇಮ, ಜಪ, ತಪಗಳ ಮಾಡಿ ತಾನುಂಡು ಫಲವುಂಟೆಂದ ಗುರು ಹುಸಿದು ಸತ್ತ, ಶಿಷ್ಯ ಹಸಿದು ಸತ್ತ. ಹಿಂದಣ ಕಥೆಯ ಹೇಳುವಾತ ಹೆಡ್ಡ, ಮುಂದಣ ಕಥೆಯ ಹೇಳುವಾತ ಮೂಢ, ಇಂದಿನ ಘನವ ಹೇಳುವಾತನೆ ಹಿರಿಯನಯ್ಯಾ. ತಾ ಹುಟ್ಟಿದಂದೆ ಯುಗಜುಗಂಗಳು ಹುಟ್ಟಿದವು, ತಾನಳಿದಲ್ಲೆ ಯುಗಜುಗಂಗಳಳಿದವು. ತನ್ನ ನೇತ್ರಕ್ಕಿಂಪಾದುದೆ ಸುವರ್ಣಸುವಸ್ತು, ತನ್ನ ಶ್ರೋತಕ್ಕೆ ಸೊಂಪಾದುದೆ ವೇದಶಾಸ್ತ್ರ, ಪುರಾಣ. ತನ್ನ ಘ್ರಾಣಕ್ಕಿಂಪಾದುದೆ ಪರಿಮಳ, ತನ್ನ ಜಿಹ್ವೆಗಿಂಪಾದುದೆ ರುಚಿ, ತನ್ನ ಮನ ಮುಳುಗಿದುದೆ ಲಿಂಗ. ತನ್ನ ನೆತ್ತಿಯಲ್ಲಿ ಸತ್ಯರ್ಲೋಕ, ಪಾದದಲ್ಲಿ ಪಾತಾಳಲೋಕ, ನಡುವೆ ಹನ್ನೆರಡು ಲೋಕ. ಅಂಡಜ ಪಿಂಡಜ ಉದ್ಭಿಜ ಜರಾಯುಜವೆಂಬ ಎಂಬತ್ತು ನಾಲ್ಕುಲಕ್ಷ ಜೀವರಾಶಿಗಳು. ತನ್ನಲ್ಲಿ ಕಾಯವು, ತನ್ನಲ್ಲಿ ಜೀವವು, ತನ್ನಲ್ಲಿ ಪುಣ್ಯವು, ತನ್ನಲ್ಲಿ ಪಾಪವು, ತನ್ನಲ್ಲಿ ಶಬ್ದವು, ತನ್ನಲ್ಲಿ ನಿಶ್ಯಬ್ದವು. ಒಂದು ಒಡಲೆಂಬ ಊರಲ್ಲಿ ಒಂಬತ್ತು ಶಿವಾಲಯವು ಆ ಶಿವಾಲಯದ ಶಿಖರದ ಮೇಲೆ ಶಿವಲಿಂಗದೇವರು ಪೂರ್ವಭಾಗದಲ್ಲಿ ಚಂದ್ರಾದಿತ್ಯರು, ಪಶ್ಚಿಮ ಭಾಗದಲ್ಲಿ ಪರಶಿವನು ಉತ್ತರ ಭಾಗದಲ್ಲಿ ಮಹೇಶ್ವರನು, ದಕ್ಷಿಣ ಭಾಗದಲ್ಲಿ ರುದ್ರನು ಇಂತೀ ಪಂಚೈವರ ಮನದ ಕೊನೆಯ ಕೀಲಿನ ಸಂಚವನರಿದು ತುರ್ಯಾವಸ್ಥೆಯಲ್ಲಿ ನಿಲಿಸಿ ಒಡಲುವಿಡಿದು ಕಾಂಬುದೆ ಉಪಮೆ. ಈ ಘಟದೇವತೆಯ ಸಟೆಯೆಂದು ಬಿಸುಟು ಮುಂದೆ ತಾ ದಿಟವಪ್ಪುದಿನ್ನೆಲ್ಲಿಯದೊ ? ಪೃಥ್ವಿಯಳಿದಂದೆ ಭೋಗಾದಿ ಭೋಗಂಗಳಳಿದವು. ಅಪ್ಪುವಳಿದಂದೆ ಮಾಯಾಮೋಹಾದಿಗಳಳಿದವು. ತೇಜವಳಿದಂದೆ ಹಸಿವು ತೃಷೆಗಳಳಿದವು. ವಾಯುವಳಿದಂದೆ ನಡೆನುಡಿ ಚೈತನ್ಯಂಗಳಳಿದವು. ಆಕಾಶವಳಿದಂದೆ ಅವು ಅಲ್ಲಿಯೆ ಲೀಯವಾಯಿತ್ತು. ಇದು ಕಾರಣ ಉರಿಕೊಂಡ ಕರ್ಪುರದ ಕರಿ ಕಂಡವರುಂಟೆ ? ಅಪ್ಪುವುಂಡ ಉಪ್ಪಿನ ಹರಳ ಮರಳಿ ಹೊರೆಯ ಕಟ್ಟಿ ಹೊತ್ತವರುಂಟೆ ? ವಾಯುಕೊಂಡ ಜ್ಯೋತಿಯ ಬೆಳಗ ಕಂಡವರುಂಟೆ ? ಹರಿ ಬ್ರಹ್ಮಾದಿಗಳ್ಗೆಯು ಕಾಣಬಾರದಾಗಿ. ಮಣ್ಣಿನ ಸಾರಾಯದಿಂದ ಮರನುತ್ಪತ್ಯ. ಮರದ ಸಾರಾಯದಿಂದ ಎಲೆಯುತ್ಪತ್ಯ ಎಲೆಯ ಸಾರಾಯದಿಂದ ಹೂವ ಉತ್ಪತ್ಯ ಹೂವ ಸಾರಾಯದಿಂದ ಕಾಯಿ ಉತ್ಪತ್ಯ ಕಾಯ ಸಾರಾಯದಿಂದ ಹಣ್ಣು ಉತ್ಪತ್ಯ ಹಣ್ಣಿನ ಸಾರಾಯದಿಂದ ರುಚಿ ಉತ್ಪತ್ಯ ರುಚಿಯಿಂದತ್ತ ಇಲ್ಲವೆಂಬ ತತ್ವ. ಮಣ್ಣು ಮರನು ಅಳಿದ ಬಳಿಕ ಬೇರೆ ರುಚಿಯಿಪ್ಪಠಾವುಂಟೆ ? ದೇಹವಳಿದ ಬಳಿಕ ಪ್ರಾಣವಿಪ್ಪುದಕ್ಕೆ ಠಾವುಂಟೆ ? ಇಲ್ಲವಾಗಿ; ಇದು ಕಾರಣ, ಗುಹೇಶ್ವರನೆಂಬ ಲಿಂಗವ ಒಡಲು ವಿಡಿದು ಕಂಡೆ ಕಾಣಾ. ಸಿದ್ಧರಾಮಯ್ಯ.
--------------
ಅಲ್ಲಮಪ್ರಭುದೇವರು
ನಿರಾಕಾರ ಪರವಸ್ತು ತನ್ನ ಲೀಲಾವಿನೋದದಿಂದ ಎರಡು ಮುಖದಿಂದ ಎರಡು ಸೃಷ್ಟಿಯ ಮಾಡಿದರು. ಒಂದು ಊಧ್ರ್ವಸೃಷ್ಟಿ, ಒಂದು ಅಧೋಸೃಷ್ಟಿ. ಅಧೋಸೃಷ್ಟಿ ಯಾವುದೆಂದಡೆ : ಅಂಡಜ ಪಿಂಡಜ ಜರಾಯುಜ ಉದ್ಭಿಜ ಇವು ನಾಲ್ಕು ಕೂಡಿ ಎಂಬತ್ತುನಾಲ್ಕು ಜೀವರಾಶಿಯ ಮಾಡಿದರು. ಸ್ವರ್ಗ ನರಕ ಇಹ ಪರ ಪುಣ್ಯ ಪಾಪ ಧರ್ಮ ಕರ್ಮ ಸತ್ಯ ಅಸತ್ಯ ಜ್ಞಾನ ಅಜ್ಞಾನ ಹೆಣ್ಣು ಗಂಡು ಹಿರಿದು ಕಿರಿದು ಉತ್ಪತ್ತಿ-ಸ್ಥಿತಿ-ಲಯಕ್ಕೆ ಅದ್ಥಿಕಾರಿಗಳಾದ ಬ್ರಹ್ಮ-ವಿಷ್ಣು-ರುದ್ರರು ಮಾಡಿಟ್ಟರು. ಇನ್ನು ಊಧ್ರ್ವಸೃಷ್ಟಿ ಹೇಗೆಂದಡೆ : ಅಸಂಖ್ಯಾತ ಮಹಾಪ್ರಮಥಗಣಂಗಳು, ಇವರಿಗೆ ಸ್ವರ್ಗ-ನರಕವಿಲ್ಲ, ಇಹ-ಪರವಿಲ್ಲ, ಪುಣ್ಯ-ಪಾಪವಿಲ್ಲ, ಧರ್ಮ-ಕರ್ಮವಿಲ್ಲ, ಹುಸಿ-ಖರೆಯಿಲ್ಲ, ಜ್ಞಾನ-ಅಜ್ಞಾನವಿಲ್ಲ, ಹೆಣ್ಣು-ಗಂಡುವಿಲ್ಲ, ಹಿರಿದು-ಕಿರಿದುವಿಲ್ಲ, ಉತ್ಪತ್ತಿ-ಸ್ಥಿತಿ-ಲಯವಿಲ್ಲ, ಅವರಿಗೆ ಬ್ರಹ್ಮ-ವಿಷ್ಣು ರುದ್ರರು ಇಲ್ಲ. ಅವರಿಗೆ ಮತ್ತಂ, ಆ ನಿರಾಕಾರ ಪರವಸ್ತು ತಾನೆ ಗುರು-ಲಿಂಗ-ಜಂಗಮವಾಗಿ ಗುರುವಿನಲ್ಲಿ ಉತ್ಪತ್ತಿ, ಲಿಂಗದಲ್ಲಿ ಸ್ಥಿತಿ, ಜಂಗಮದಲ್ಲಿ ನಿಜೈಕ್ಯರು. ಮತ್ತೆ ಪರಶಿವಮೂರ್ತಿ ತನ್ನ ವಿನೋದಕ್ಕೆ ಆಟವ ಆಡಬೇಕಾಗಿ ಮಹದಾಕಾಶವ ಮಂಟಪವ ಮಾಡಿ, ಆಕಾಶವ ಪರದೆಯ ಕಟ್ಟಿ, ಅಸಂಖ್ಯಾತ ಪ್ರಮಥಗಣಂಗಳಿಗೆ ಮೂರ್ತವ ಮಾಡಿಸಿ ಎಂಬತ್ತುನಾಲ್ಕುಲಕ್ಷ ಜೀವರಾಶಿಗಳನೆ ಸೂತ್ರವ ಮಾಡಿ ತಮ್ಮ ಕೈಯಲ್ಲಿ ಪಿಡಿದು, ಚಿತ್ರವಿಚಿತ್ರದಾಟವ ಆಡಿಸುತ್ತಿಹುದಕ್ಕೆ ಲೆಕ್ಕವಿಲ್ಲ, ಹೇಳುವುದಕ್ಕೆ ಅಸಾಧ್ಯ. ಆ ಪ್ರಮಥಗಣಂಗಳು ನೋಡಿ, ಆ ಬೊಂಬೆಗಳೇನು ಆಡಿಹವು ? ಸೂತ್ರಿಕನು ಆಡಿಸಿದ ಹಾಂಗೆ ಆಡ್ಯಾವು. ಆ ಗೊಂಬೆಗೆ ಸೂತ್ರವಲ್ಲದೆ ಶಿವನಿಲ್ಲ. ಆ ಗೊಂಬೆಯೊಳಗೆ ಶಿವನಿದ್ದರೆ, ಆಡಿಸುವುದು ಹ್ಯಾಂಗೆ ? ಇವೆಲ್ಲವು ಅನಿತ್ಯವೆಂದು ತಿಳಿದು ಪ್ರಮಥಗಣಂಗಳು ತಮ್ಮ ಲಿಂಗದಲ್ಲಿ ನಿಜ ಮೋಕ್ಷಿಗಳಾಗಿ ಶಾಂಭವಪುರಕ್ಕೆ ಹೋದ ಭೇದವ ಎನ್ನೊಳರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಗಂಡನೆಂಜಲಿಗೆ ಹೇಸುವಳು ಮಿಂಡನ ತಂಬುಲವ ತಿಂಬುವ ತೆರನಂತೆ, ಗುರುವಿನುಪದೇಶವ ಕೊಂಡು, ಅನೀತಿ ದೇವರುಗಳ ಎಡೆಯ ತಿನ್ನುವಂತಹ ಮಾದಿಗರು ನೀವು ಕೇಳಿರೊ. ಅಂಡಜ ಉತ್ಪತ್ತಿ ಎಲ್ಲ ದೇವರಿಂದಾಯಿತ್ತು. ಮೈಲಾರ, ಬೀರ, ಭೈರವ, ಧೂಳ, ಕೇತನೆಂಬ ಕಿರಿ ದೈವಕ್ಕೆರಗಿ, ಭಕ್ತರೆನಿಸಿಕೊಂಬುವ ಚಂಡಿನಾಯಿಗಳ ಕಂಡು ಮನ ಹೇಸಿತ್ತೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಆತ್ಮನಲ್ಲಿ ಪ್ರಣವಪಂಚಾಕ್ಷರಿಯ ನಿರವಿಸಿ, ಸದ್ಗುರುವೆ ಎನ್ನ ಶಿವಾತ್ಮನ ಮಾಡಿದಿರಾಗಿ, ಆತ್ಮಶುದ್ಧಿಯಾಯಿತ್ತೆನಗೆ. ಪಂಚಭೂತಂಗಳಲಿ ಪಂಚಬ್ರಹ್ಮನನಿರಿಸಿದಿರಾಗಿ, ಭೂತಶುದ್ಧಿಯಾಯಿತ್ತೆನಗೆ. ಅಂಡಜ ಜರಾಯುಜಾದಿ ಎಂಬತ್ತುನಾಲ್ಕುಲಕ್ಷ ಯೋನಿಯಲ್ಲಿ ಬಹ ಜೀವನ ಅಯೋನಿಜನ ಮಾಡಿದಿರಾಗಿ ಜೀವಶುದ್ಧಿಯಾಯಿತ್ತೆನಗೆ. ಅಂಗಾಶ್ರಯವ ಕಳೆದು ಲಿಂಗಾಶ್ರಯವ ಮಾಡಿದಿರಾಗಿ ಮನಶ್ಶುದ್ಧಿಯಾಯಿತ್ತೆನಗೆ. ಪಶುವೆಂಬ ಅಜ್ಞಾನದ್ರವ್ಯವ ಕಳೆದು ಪರಮಸುಜ್ಞಾನದ್ರವ್ಯವ ಮಾಡಿದಿರಾಗಿ ದ್ರವ್ಯಶುದ್ಧಿಯಾಯಿತ್ತೆನಗೆ. ಇಂತು ಸರ್ವಶುದ್ಧನಂ ಮಾಡಿ ಪೂರ್ವಾಶ್ರಯವ ಕಳೆದಿರಾಗಿ ಕೂಡಲಚೆನ್ನಸಂಗಾ, ನಿಮ್ಮುವ `ನ ಗುರೋರಧಿಕಂ ನ ಗುರೋರಧಿಕಂ ನ ಗುರೋರಧಿಕಂ : ಎನುತಿರ್ದೆನು.
--------------
ಚನ್ನಬಸವಣ್ಣ
ಅಂಡಜ ಒಡೆಯದರಿಂದ ಮುನ್ನ, ದ್ವೀಪಾದ್ವೀಪವಿಲ್ಲದ ಮುನ್ನ, ಅನಲಪವನರಿಲ್ಲದ ಮುನ್ನ, ರವಿಚಂದ್ರರಿಲ್ಲದ ಮುನ್ನ, ಗುಹೇಶ್ವರಲಿಂಗವಲ್ಲಿಂದ ಮುನ್ನ.
--------------
ಅಲ್ಲಮಪ್ರಭುದೇವರು
ಅನಂತ ವರುಷದವರ ಹಿರಿಯರೆಂಬೆನೆ ? ಎನ್ನೆನು_ ಅವರು ಭೂಭಾರಕರಾಗಿ. ಏಳು ವರುಷದ ಹಿರಿಯ ಚೀಲಾಳ; ಹನ್ನೆರಡು ವರುಷದ ಹಿರಿಯಳು ಮಹಾದೇವಿಯಕ್ಕ. ಅಂಡಜ ಪಿಂಡಜ ಮೀನಜರೆಂಬವರೆಲ್ಲಾ ಅಂದಂದಿನ ಬಾಲಕರು. ನಿಮಗೆ ಬುದ್ಧಿಯ ಹೇಳುವಡೆ ಎನಗೆ ಬುದ್ಧಿಯಿಲ್ಲ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದಿಂತು ಲಿಂಗಸ್ಥಲವಾರಕ್ಕಂ ವಿವರ: ಆಚಾರಲಿಂಗಸ್ಥಲ ತ್ರಿವಿಧ:ಸದಾಚಾರ, ನಿಯತಾಚಾರ, ಗಣಾಚಾರ ಇದಕ್ಕೆ ವಿವರ: ಎಲ್ಲ ಜನವಹುದೆಂಬುದೆ ಸದಾಚಾರ. ಹಿಡಿದ ವ್ರತನಿಯಮವ ಬಿಡದಿಹುದೆ ನಿಯತಾಚಾರ. ಶಿವನಿಂದೆಯ ಕೇಳದಿಹುದೆ ಗಣಾಚಾರ. ಗುರುಲಿಂಗಸ್ಥಲ ತ್ರಿವಿಧ:ದೀಕ್ಷೆ, ಶಿಕ್ಷೆ, ಸ್ವಾನುಭಾವ. ಇದಕ್ಕೆ ವಿವರ : ದೀಕ್ಷೆಯೆಂದಡೆ ಗುರು, ಶಿಕ್ಷೆಯೆಂದಡೆ ಜಂಗಮ, ಸ್ವಾನುಭಾವವೆಂದಡೆ ತನ್ನಿಂದ ತಾನರಿವುದು. ಶಿವಲಿಂಗಸ್ಥಲ ತ್ರಿವಿಧ:ಇಷ್ಟಲಿಂಗ, ಪ್ರಾಣಲಿಂಗ, ತೃಪ್ತಿಲಿಂಗ ಇದಕ್ಕೆ ವಿವರ : ಶ್ರೀಗುರು ಕರಸ್ಥಲದಲ್ಲಿ ಅನುಗ್ರಹವ ಮಾಡಿಕೊಟ್ಟುದೀಗ ಇಷ್ಟಲಿಂಗ, ತನುಗುಣ ನಾಸ್ತಿಯಾದುದೇ ಪ್ರಾಣಲಿಂಗ, ಜಾಗ್ರಸ್ವಪ್ನಸುಷುಪ್ತಿಯಲ್ಲಿ ಲಿಂಗವಲ್ಲದೆ ಪೆರತೊಂದನರಿಯದಿಪ್ಪುದೆ ತೃಪ್ತಿಲಿಂಗ. ಜಂಗಮಲಿಂಗಸ್ಥಲ ತ್ರಿವಿಧ :ಸ್ವಯ, ಚರ, ಪರ, ಇದಕ್ಕೆ ವಿವರ : ಸ್ವಯವೆಂದಡೆ ತಾನು. ಚರವೆಂದಡೆ ಲಾಂಛನ ಮುಂತಾಗಿ ಚರಿಸುವುದು. ಪರವೆಂದಡೆ ಅರಿವು ಮುಂತಾಗಿ ಚರಿಸುವುದು. ಪ್ರಸಾದಲಿಂಗಸ್ಥಲ ತ್ರಿವಿಧ :ಶುದ್ಧ, ಸಿದ್ಧ, ಪ್ರಸಿದ್ಧ ಇದಕ್ಕೆ ವಿವರ : ಶುದ್ಧವೆಂದಡೆ ಗುರುಮುಖದಿಂದ ಮಲತ್ರಯವ ಕಳೆದುಳಿದ ಶೇಷ, ಸಿದ್ಧವೆಂದಡೆ ಲಿಂಗಮುಖದಿಂದ ಕರಣಮಥನಂಗಳ ಕಳೆದುಳಿದ ಶೇಷ. ಪ್ರಸಿದ್ಧವೆಂದಡೆ ಜಂಗಮಮುಖದಿಂದ ಸರ್ವಚೈತನ್ಯಾತ್ಮಕ ತಾನೆಯಾಗಿ ಖಂಡಿತವಳಿದುಳಿದ ಶೇಷ. ಮಹಾಲಿಂಗಸ್ಥಲ ತ್ರಿವಿಧ:ಪಿಂಡಜ, ಅಂಡಜ, ಬಿಂದುಜ. ಇದಕ್ಕೆ ವಿವರ : ಪಿಂಡಜವೆಂದಡೆ ಘಟಾಕಾಶ. ಅಂಡಜವೆಂದಡೆ ಬ್ರಹ್ಮಾಂಡ. ಬಿಂದುಜವೆಂದಡೆ ಮಹಾಕಾಶ. ಇಂತು ಲಿಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಇನ್ನು ಅಂಗಸ್ಥಲವಾವುವೆಂದಡೆ: ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯ. ಇನ್ನು ಅಂಗಸ್ಥಲವಾರಕ್ಕೆ ವಿವರ : ಭಕ್ತಸ್ಥಲ ತ್ರಿವಿಧ :ಗುರುಭಕ್ತ, ಲಿಂಗಭಕ್ತ, ಜಂಗಮಭಕ್ತ. ತನುಕ್ರೀಯಿಂದ ತನುಮನಧನವನರ್ಪಿಸುವನಾಗಿ ಗುರುಭಕ್ತ. ಮನಕ್ರೀಯಿಂದ ಮನತನುಧನವನರ್ಪಿಸುವನಾಗಿ ಲಿಂಗಭಕ್ತ. ಧನಕ್ರೀಯಿಂದ ಧನಮನತನುವನರ್ಪಿಸುವನಾಗಿ ಜಂಗಮಭಕ್ತ. ಮಾಹೇಶ್ವರಸ್ಥಲ ತ್ರಿವಿಧ:ಇಹಲೋಕವೀರ, ಪರಲೋಕವೀರ, ಲಿಂಗವೀರ. ಅದಕ್ಕೆ ವಿವರ : ಮತ್ರ್ಯಲೋಕದ ಮಹಾಗಣಂಗಳು ಮೆಚ್ಚುವಂತೆ, ಷಡ್ದರ್ಶನಂಗಳ ನಿರಸನವ ಮಾಡಿ, ತನ್ನ ಸಮಯಕ್ಕೆ ಪ್ರಾಣವ ವೆಚ್ಚಿಸುವನಾಗಿ ಇಹಲೋಕವೀರ. ದೇವಲೋಕದ ದೇವಗಣಂಗಳು ಮೆಚ್ಚುವಂತೆ, ಸರ್ವಸಂಗಪರಿತ್ಯಾಗವ ಮಾಡಿ ಚತುರ್ವಿಧಪದಂಗಳ ಧರ್ಮಾರ್ಥಕಾಮಮೋಕ್ಷಂಗಳ ಬಿಟ್ಟಿಹನಾಗಿ ಪರಲೋಕವೀರ. ಅಂಗಲಿಂಗಸಂಗದಿಂದ ಸರ್ವಕರಣಂಗಳು ಸನ್ನಹಿತವಾಗಿಪ್ಪನಾಗಿ ಲಿಂಗವೀರ. ಪ್ರಸಾದಿಸ್ಥಲ ತ್ರಿವಿಧ :ಅರ್ಪಿತಪ್ರಸಾದಿ, ಅವಧಾನಪ್ರಸಾದಿ, ಪರಿಣಾಮಪ್ರಸಾದಿ ಅದಕ್ಕೆ ವಿವರ : ಕಾಯದ ಕೈಯಲ್ಲಿ ಸಕಲಪದಾರ್ಥಂಗಳು ಇಷ್ಟಲಿಂಗಕ್ಕೆ ಕೊಟ್ಟು ಕೊಂಬನಾಗಿ ಅರ್ಪಿತಪ್ರಸಾದಿ. ಪಂಚೇಂದ್ರಿಯಂಗಳಲ್ಲಿ ಪಂಚಲಿಂಗಪ್ರತಿಷೆ*ಯ ಮಾಡಿ, ಅಲ್ಲಲ್ಲಿ ಬಂದ ಸುಖವನಲ್ಲಲ್ಲಿ ಮನದ ಕೈಯಲ್ಲಿ ಕೊಟ್ಟು ಕೊಂಬನಾಗಿ ಅವಧಾನಪ್ರಸಾದಿ. ಅಂಗಾಶ್ರಯವಳಿದು ಲಿಂಗಾಶ್ರಯವುಳಿದು, ಭಾವಭರಿತನಾಗಿಪ್ಪನಾಗಿ ಪರಿಣಾಮಪ್ರಸಾದಿ. ಪ್ರಾಣಲಿಂಗಿಸ್ಥಲ ತ್ರಿವಿಧ :ಆಚಾರಪ್ರಾಣಿ, ಲಿಂಗಪ್ರಾಣ, ಜಂಗಮಪ್ರಾಣಿ. ಅದಕ್ಕೆ ವಿವರ : ಮನೋವಾಕ್ಕಾಯದಲ್ಲಿ ಆಚಾರವ ಅವಗ್ರಹಿಸಿಹನಾಗಿ ಆಚಾರಪ್ರಾಣಿ. ಬಾಹ್ಯೋಪಚಾರಂಗಳ ಮರೆದು ಲಿಂಗಕ್ಕೆ ತನ್ನ ಪ್ರಾಣವನೆ ಪೂಜೆಯ ಮಾಡುವನಾಗಿ ಲಿಂಗಪ್ರಾಣಿ. ಬಾಹ್ಯಭಕ್ತಿಯ ಮರೆದು ಜಂಗಮಕ್ಕೆ ತನ್ನ ತನುಮನಪ್ರಾಣಂಗಳ ನಿವೇದಿಸುವನಾಗಿ ಜಂಗಮಪ್ರಾಣಿ ಶರಣಸ್ಥಲ ತ್ರಿವಿಧ:ಇಷ್ಟಲಿಂಗಾರ್ಚಕ, ಪ್ರಾಣಲಿಂಗಾರ್ಚಕ, ತೃಪ್ತಿಲಿಂಗಾರ್ಚಕ ಅದಕ್ಕೆ ವಿವರ : ಅನಿಷ್ಟ ನಷ್ಟವಾಯಿತ್ತಾಗಿ ಇಷ್ಟಲಿಂಗಾರ್ಚಕ. ಸ್ವಯಪರವನರಿಯನಾಗಿ ಪ್ರಾಣಲಿಂಗಾರ್ಚಕ. ಇಹಪರವನರಿಯನಾಗಿ ತೃಪ್ತಿಲಿಂಗಾರ್ಚಕ. ಐಕ್ಯಸ್ಥಲ ತ್ರಿವಿಧ :ಕಾಯಲಿಂಗೈಕ್ಯ, ಜೀವಲಿಂಗೈಕ್ಯ, ಭಾವಲಿಂಗೈಕ್ಯ. ಅದಕ್ಕೆ ವಿವರ : ಕ್ರಿಯೆಯರತುದೆ ಕಾಯಲಿಂಗೈಕ್ಯ. ಅನುಭಾವವರತುದೆ ಜೀವಲಿಂಗೈಕ್ಯ. ಅರಿವು ಸಿನೆ ಬಂಜೆಯಾದುದೆ ಭಾವಲಿಂಗೈಕ್ಯ. ಇಂತೀ ಅಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಉಭಯಸ್ಥಲ ಮೂವತ್ತಾರರೊಳಗಾದ ಸರ್ವಾಚಾರಸಂಪತ್ತನು ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನೆ ಬಲ್ಲ.
--------------
ಚನ್ನಬಸವಣ್ಣ
ಅಂಡಜ ಮುಗ್ಧೆಯ ಮಕ್ಕಳಿರಾ, ಕೆಂಡದ ಮಳೆ ಕರೆವಲ್ಲಿ ನಿಮ್ಮ ಹಿಂಡಿರು ಹಳುಹೊಕ್ಕು ಹೋದಿರಲ್ಲಾ! ಜುಗಮವೆಂಬುದಕ್ಕೆ ನಾಚಿರಿ. ನಿಮ್ಮ ಕಂಗಳ ಹಿಂಡಿರ ತಿಂಬಳೆಂಬುದನರಿಯಿರಿ. ಅವಳು ಒಮ್ಮೆ ತಿಂಬಳು ಒಮ್ಮೆ ಕರುಣಿಸಿ ಬಿಡುವಳು. ಅವಳು ತಿಂದು ತಿಂದು ಉಗುಳುವ ಬಾಯೊಳಗಣದೆಲ್ಲಾಜಂಗಮವೆ? ಲೋಕವೆಲ್ಲಾ ಅವಳು. ಅವಳು ವಿರಹಿತವಾದ ಜಂಗಮವಾರೈ ಬಸವಣ್ಣ? ಅವಳು ವಿರಹಿತವಾದ ಭಕ್ತರಾರೈ ಬಸವಣ್ಣ? ಅವಳ ಮಕ್ಕಳು ನಿನ್ನ ಕಯ್ಯಲ್ಲಿ ಆರಾಧಿಸಿಕೊಂಬ ಜಂಗಮ ಕಾಣೈ ಬಸವಣ್ಣಾ! ಅವಳು ವಿರಹಿತವಾದ ಚಿಕ್ಕಯ್ಯಪ್ರಿಯ ಸಿದ್ಧಲಿಂಗನಲ್ಲದಿಲ್ಲ,ನಿಲ್ಲು ಮಾಣು.
--------------
ಘಟ್ಟಿವಾಳಯ್ಯ
ಭೂಮಿಗೆ ಕೆಸರುಗಲ್ಲನಿಕ್ಕಿ, ಮೇರುವ ಸ್ಥಳಗೊಳಿಸಿ, ಅಂಡಜ ಉತ್ಪತ್ಯವಾದ ಬಳಿಕ ಹಿರಿಯರನಾರುವ ಕಾಣೆ. ನರೆತೆರೆಗಳು ತೋರಿದವರು ಹಿರಿಯರೆಂಬೆನೆ ಎನ್ನೆನು. ಮತಿಗೆಟ್ಟು ಒಂದನಾಡಹೋಗಿ ಒಂಬತ್ತನಾಡುತ್ತಿದ್ದರೆ ಹಿರಿಯರೆಂಬೆನೆ ಎನ್ನೆನು. ಕೂಡಲಚೆನ್ನಸಂಗಮದೇವರಲ್ಲಿ ಹಿರಿಯತನದ ತೆರನ ಚೀಲಾಳ ಬಲ್ಲ.
--------------
ಚನ್ನಬಸವಣ್ಣ
ಹುಟ್ಟಿದ ಮಾನ್ಯರೆಲ್ಲ ದಶವಾಯು ಪಂಚಭೂತ ಸಪ್ತಧಾತು ಅರಿಷಡ್ವರ್ಗ ಅಷ್ಟಮದಂಗಳನೆಲ್ಲ ಸುಟ್ಟು ಸೂರೆಮಾಡಿ ನಿನ್ನೊಳು ಬೆರೆದರೆ, ಅಂಡಜ ಶ್ವೇದಜ ಉದ್ಬಿಜ ಜರಾಯುಜವೆಂಬ ನಾಲ್ಕು ತೆರದ ಯೋನಿಯಲ್ಲಿ ಹುಟ್ಟಿ, ಚೌರಾಸಿಲಕ್ಷ ಜೀವರಾಸಿಯಾಗಿ ಪಾಪಕರ್ಮವ ಗಳಿಸಿ ಯಮಂಗೆ ಗುರಿಯಾಗುವರಾರು ? ಅದು ಕಾರಣ, ಮೋಡದಮರೆಯ ಸೂರ್ಯನಂತೆ, ಸ್ಫಟಿಕದ ಘಟದೊಳಗಣ ಜ್ಯೋತಿಯಂತೆ, ಸರ್ವರ ಆತ್ಮದೊಳು ಮರೆಗೊಂಡುಯಿಪ್ಪ ತನುಗುಣ ಮನಗುಣ ಅಹಂಕಾರ ಮಾಯಾಮದದ ತಮಂಧದ ಕತ್ತಲೆಯ ಮರೆಮಾಡಿ ಕಾಣಗೊಡದೆಯಿಪ್ಪ ಮರೆಗೊಂಡ ಭೇದವ ಶಿವಶರಣರು ಬಲ್ಲರುಳಿದ ನರಗುರಿಗಳಿಗಸಾಧ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಮೈ ಶೀತೋಷ್ಣವ ಮರೆದು, ಘ್ರಾಣ ಗಂಧವ ಮರೆದು, ನಯನ ನೋಟವ ಮರೆದು, ಕಿವಿ ಶಬ್ದವ ಮರೆದು, ನಾಲಗೆ ರುಚಿಯ ಮರೆದು, ಅಂಡಜ ಜರಾಯುಜನೆನಿಸದೆ- ಕೂಡಲಚೆನ್ನಸಂಗಯ್ಯನ ಉಪನಯನವಾದ ಶರಣನು.
--------------
ಚನ್ನಬಸವಣ್ಣ
ಇನ್ನಷ್ಟು ... -->