ಅಥವಾ

ಒಟ್ಟು 20 ಕಡೆಗಳಲ್ಲಿ , 11 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತನುವೆಂಬ ದೇವಸ್ಥಾನದೊಳಗೆ ಮಸ್ತಕಾಗ್ರವೆಂಬ ಸೆಜ್ಜಾಗೃಹದಲ್ಲಿ ಪ್ರಾಣಲಿಂಗಸ್ವಯಂಬ ಪ್ರತಿಷ್ಠೆಯಾಗಿರಲು, ಗುರುವೆಂಬ ಆರ್ಚಕನು ಮಂತ್ರವೆಂಬ ಆಗಮಿಕನು ಸಹ ಲಿಂಗವೆಂಬ ಉಚ್ಚಾಯ ವಿಗ್ರಹವನು ಕರಸ್ಥಲವೆಂಬ ರಥದಲ್ಲಿ ಮೂರ್ತಿಗೊಳಿಸಿ_ ಆ ಕರಸ್ಥಲವೆಂಬ ರಥಕ್ಕೆ ಜ್ಞಾನಕ್ರಿಯೆ ಎರಡು ಪಾದದ್ವಯ ಎರಡು ಕೂಡಿ ನಾಲ್ಕು ಗಾಲಿಗಳಂ ಹೂಡಿ, ಪಂಚೇಂದ್ರಿಯಗಳೆಂಬ ಪತಾಕೆಗಳಂ ಧರಿಸಿ ಏಕೋಭಾವವೆಂಬ ಕಳಸವನಿಟ್ಟು, ದಶವಾಯುಗಳೆಂಬ ಪಾಶವಂ ಬಂಧಿಸಿ ಷಡಂಗಗಳೆಂಬ ಮೊಳೆಗಳಂ ಬಲಿದು, ಸಪ್ತಧಾತುವೆಂಬ ಝಲ್ಲಿ ಪಟ್ಟೆಯನಲಂಕರಿಸಿ ಅಷ್ಟಮದ ಸಪ್ತವ್ಯಸನಂಗಳೆಂಬ ಆನೆ ಕುದುರೆಗಳು ಸಹ ಮಹಾನಾದವೆಂಬ ಭೇರಿ ವಾದ್ಯಂಗಳಿಂ ಷೋಡಶವಿಕಾರಂಗಳೆಂಬ ನರ್ತಕೀಮೇಳದಾರತಿಯಿಂ ಅಂತಃಕರಣ ಚತುಷ್ಟಯಗಳೆಂಬ ಚಾಮರಧಾರಕರಿಂ ಮನವೆಂಬ ಹೊರಜೆಯಿಂ ಕರಣಂಗಳೆಂಬ ಕಾಲಾಳ್ಗಳಿಂ_ಪಿಡಿಸಿ,_ ಸುಬುದ್ಧಿಯೆಂಬ ಭೂಮಿಯಲ್ಲಿ ಆನಂದವೆಂಬರಸು ರಥಮಂ ನಡೆಸಿ ನೆನಹು ನಿಷ್ಪತ್ತಿಯೆಂಬ ಸ್ಥಾನದಲ್ಲಿ ನಿಲಿಸಿ_ ಇಷ್ಟಲಿಂಗವೆಂಬ ಉಚ್ಚಾಯ ವಿಗ್ರಹವನ್ನು ಹೃದಯಕಮಲವೆಂಬ ಅಂತರಾಳದಲ್ಲಿ ಮೂರ್ತಿಗೊಳಿಸಿ ಆನಂದವೆಂಬ ಅರಸು ನಿರಾಳವೆಂಬ ಅಪರಿಮಿತ ಪಟ್ಟಣವ ಪ್ರವೇಶವಾದನು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಲ್ಲಿ ಪಂಚಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯದಲ್ಲಿ ಚತುರ್ಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಶ್ರೋತ್ರ ನೇತ್ರ ಘ್ರಾಣ ತ್ವಕ್ಕು ಜಿಹ್ವೆ ವಾಕ್ಕು ಪಾಣಿ ಪಾದ ಪಾಯು ಗುಹ್ಯಗಳೆಂಬ ದಶೇಂದ್ರಿಯಂಗಳಲ್ಲಿ ದಶಮುಖಲಿಂಗವ ಪ್ರತಿಷ್ಠೆಯ ಮಾಡಿ ಅಂತರಂಗ ಬಹಿರಂಗವ ಹತವ ಮಾಡಿದನಯ್ಯಾ ಕೂಡಲಚೆನ್ನಸಂಗಮದೇವಾ ಎನ್ನ ಶ್ರೀಗುರು ಬಸವಣ್ಣನು
--------------
ಚನ್ನಬಸವಣ್ಣ
ಭಕ್ತನೆಂಬ ಭೂಮಿಯಲ್ಲಿ ಗುರೂಪದೇಶವೆಂಬ ನೇಗಲಿಯಂ ಪಿಡಿದು, ಅಂತಃಕರಣ ಚತುಷ್ಟಯವೆಂಬ ಸೆಳೆಗೋಲಂ ಪಿಡಿದು, ಉತ್ತರ ಕ್ರಿಯೆಯೆಂಬ ಹಂಸನೇರಿ, ದುಷ್ಕರ್ಮದ ಕಾಟದ ಕುಲವಂ ಕಡಿದು, ಅರಿವೆಂಬ ರವಿಕಿರಣದಲ್ಲಿ ಒಣಗಿಸಿ, ಜ್ಞಾನವೆಂಬ ಬೆಂಕಿಯಲ್ಲಿ ಸುಟ್ಟುರುಹಿ, ಆ ಹೊಲನ ಹಸನವ ಮಾಡಿ, ಅದಕ್ಕೆ ಬಿತ್ತುವ ಭೇದವೆಂತೆಂದಡೆ: ಈಡಾ ಪಿಂಗಳ ಸುಷುಮ್ನವೆಂಬ ನಾಳವಂ ಜೋಡಿಸಿ, ತ್ರಿಕೂಟಸ್ಥಾನವೆಂಬ ಬಟ್ಟಲಂ ಬಲಿದು, ಕುಂಡಲಿಯೆಂಬ ಹಗ್ಗವಂ ಬಿಗಿದು, ಹಂಸನೆಂಬ ಎರಡೆತ್ತನ್ನೇ ಹೂಡಿ, ಶಾಂತಿ ನಿರ್ಮಲವೆಂಬ ಮಳೆಗಾಲದ ಮೇಘಮಂ ಸುರಿದು, ಆ ಬೀಜ ಪಸರಿಸಿ, ಪ್ರಜ್ವಲಿಸಿ ಫಲಕ್ಕೆ ಬಂದು ನಿಂತಿರಲು, ಅದಕ್ಕೆ ಒತ್ತುವ ಕಸ ಆವಾವೆಂದಡೆ : ಅಷ್ಟಮದದ ಹಲವಂ ಕಿತ್ತು, ಸಪ್ತವ್ಯಸನದ ಸೆದೆಯಂ ಕಳೆದು, ಮನೋರಥವೆಂಬ ಮಂಚಿಗೆಯನ್ನೇರಿ, ಬಾಲಚಂದ್ರನೆಂಬ ಕವಣಿಯಂ ಪಿಡಿದು, ಪ್ರಪಂಚವೆಂಬ ಹಕ್ಕಿಯಂ ಹೊಡೆದು, ಆ ಭತ್ತ ಬಲಿದು ನಿಂದಿರಲು, ಅದನ್ನು ಕೊಯ್ಯುವ ಭೇದವೆಂತೆಂದಡೆ : ಇಷ್ಟವೆಂಬ ಕುಡುಗೋಲಿಗೆ, ಪ್ರಾಣವೆಂಬ ಹಿಡಿಯ ಜೋಡಿಸಿ, ಭವಭವವೆಂಬ ಹಸ್ತದಿಂದ ಪಿಡಿದು, ಜನನದ ನಿಲವಂ ಕೊಯ್ದು, ಮರಣದ ಸಿವಡಂ ಕಟ್ಟಿ, ಸುಜ್ಞಾನಪಥವೆಂಬ ಬಂಡಿಯ ಹೇರಿ, ಮುಕ್ತಿ ಕೋಟಾರಕ್ಕೆ ತಂದು, ಉನ್ನತವೆಂಬ ತೆನೆಯಂ ತರಿದು, ಷಡುವರ್ಣವೆಂಬ ಬೇಗಾರರಂ ಕಳೆದು, ಅಂಗಜನೆಂಬ ಕಾಮನಂ ಕಣ್ಕಟ್ಟಿ, ಮಂಗಲನೆಂಬ ಕಣದಲ್ಲಿ ಯಮರಾಜನಿಗೆ ಕೋರ ಹಾಕದೆ, ಚಿತ್ರಗುಪ್ತರ ಸಂಪುಟಕ್ಕೆ ಬರಿಸದೆ, ಈ ಶಂಕರನೆಂಬ ಸವಿಧಾನ್ಯವನುಂಡು, ಸುಖಿಯಾಗಿರುತಿರ್ಪ ಒಕ್ಕಲಮಗನ ಎನಗೊಮ್ಮೆ ತೋರು ತೋರಯ್ಯಾ, ಅಮರಗುಂಡದ ಮಲ್ಲಿಕಾರ್ಜುನ ಪ್ರಭುವೆ.
--------------
ಪುರದ ನಾಗಣ್ಣ
ತನ್ನ ತಾನರಿದ ಶಿವಯೋಗಿಯ ಪರಿಯೆಂತೆಂದಡೆ: ದೇಹಿ ತಾನಲ್ಲ, ಜಾತಿಜಾತಕಂಗಳು ತಾನಲ್ಲ, ಪ್ರಾಣ ತಾನಲ್ಲ, ದಶವಾಯುಗಳು ತಾನಲ್ಲ, ಇಂದ್ರಿಯಂಗಳು ತಾನಲ್ಲ, ಗುಣತ್ರಯಂಗಳು ತಾನಲ್ಲ ಅಂತಃಕರಣ ಚತುಷ್ಟಯಂಗಳು ತಾನಲ್ಲವೆಂದರಿದು ವಿವರಿಸಿ ಕಳೆದು, ತನ್ನ ನಿಜಸ್ವರೂಪ ತಾನೇ ನೋಡಿ ಕಂಡು; ಜೀವಾತ್ಮ ಅಂತರಾತ್ಮ ಪರಮಾತ್ಮ ಮತ್ತಂ ಭೂತಾತ್ಮ ಶುದ್ಧಾತ್ಮ ನಿರ್ಮಲಾತ್ಮ ಸತ್ಯಾತ್ಮ ಮಹಾತ್ಮವೆಂಬ ಅಷ್ಟ ಆತ್ಮೇಶ್ವರರು ಏಕಾರ್ಥವೆಂದರಿದು, ಅಲ್ಲಿಯೆ ತಲ್ಲೀಯವಾಗಿಹುದೀಗ ಯೋಗ ಕಾಣಾ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಆನಂದಿಸಿ ಕಣ್ಣ ಮುಚ್ಚಿ ಆಹಾ ಎಂಬುದು ಆವೇಶಭಕ್ತಿ. ತಲೆದೂಗಿ ಝಂಪಿಸಿ ಅಂತಃಕರಣ ಕದಡಿ ಆನಂದಿಸುವುದು ಭಾವಭಕ್ತಿ. ಬಿಂಬಿಸುವುದಕ್ಕೆ ಪ್ರತಿರೂಪಿಲ್ಲದೆ ಆನಂದ ಅಶ್ರುಗಳು ನಿಂದು, ಮುತ್ತಿನೊಳಗಣ ಅಪ್ಪುವಿನಂತೆ ಹೆಪ್ಪಳಿಯದೆ ನಿಂದುದು ಜ್ಞಾನಭಕ್ತಿ. ಇಂತೀ ತುರೀಯಾತುರೀಯವು ಏಕಚಿತ್ತವೆಂಬುದು ನಿಹಿತವಾದಲ್ಲಿ, ಸ್ಥಲಲೇಪ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ.
--------------
ಮೋಳಿಗೆ ಮಾರಯ್ಯ
ಸಕಲಮೂರ್ತಿಯಾಗಿ ಇಷ್ಟಲಿಂಗವಾಯಿತ್ತು. ನಿಷ್ಕಲಮೂರ್ತಿಯಾಗಿ ಪ್ರಾಣಲಿಂಗವಾಯಿತ್ತು. ಕೇವಲ ನಿರವಯಮೂರ್ತಿಯಾಗಿ ಭಾವಲಿಂಗವಾಯಿತ್ತು. ಸಕಲಮೂರ್ತಿಗೆ ಕ್ರಿಯೆ, ನಿಷ್ಕಲಮೂರ್ತಿಗೆ ಜ್ಞಾನ, ಕೇವಲ ನಿರವಯಮೂರ್ತಿಗೆ ಆನಂದ, ಸ್ಥೂಲವೇ ಕಾಯ, ಸೂಕ್ಷ್ಮವೇ ಪ್ರಾಣ, ಕಾರಣವೇ ವಸ್ತು. ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ ಹೃದಯವೆಂಬವು ಸೂಕ್ಷ್ಮದ ಷಡ್ವಿಧಲಿಂಗವು. ಇವಕ್ಕೆ `ಓಂ ನಮಃಶಿವಾಯ' ಎಂಬುದೇ ತೃಪ್ತಿ. ಸಂತೋಷವೇ ಕಾರಣ, ಮಹಾಕಾರಣವೇ ಪರಿಣಾಮ. ತೂರ್ಯಾತೀತವಾಗಿ ಸರ್ವಕೇಳಿಕೆಯಂ ಕೇಳಿ ನಿಜಾನಂದವಾಗಿಹುದು. ವಿರಾಟವೇ ಸುನಾದವಾಗಿ ಹೊರಬಿದ್ದು ನುಡಿದು ಭೇರಿನಾದದಂತೆ ಆಕಾಶಧ್ವನಿಯಂತೆ ತನಗೆ ತಾನೇ ಕೇಳುವುದು. ಹಿರಣ್ಯಗರ್ಭಬಿಂದುವಿನ ಮನೆಯಲ್ಲಿ ಗಾಳಿಪಟಕ್ಕೆ ಬೇರಬಿರಿಕೆಯ ಕಟ್ಟಿ ನುಡಿಸುವ ತೆರದಂತೆ ತೇಜವಾಗಿ ಶಂಖದ ಧ್ವನಿಯಂತೆ ತೋರುತಿರ್ಪ ಸುನಾದಕ್ಕೆ ಎರಡಂಗುಲದ ಮೇಲೆ ತೇಜವಿಹುದು. ಅದು ತುಂಬಿದ ಹುಣ್ಣಿಮೆಯ ಬೆಳದಿಂಗಳಂತೆ, ಚಂದ್ರಜ್ಯೋತಿಯ ಪ್ರಭೆಯಂತೆ, ಹೂಬಿಸಿಲಿನಂತೆ ತೋರುತಿರ್ಪುದು. ಕಳೆಯ ಮನೆಯಲ್ಲಿ ಎರಡಂಗುಲ ಪ್ರಮಾಣ. ಮೂಲಪ್ರಕೃತಿ ಮೂಗಿನಮೇಲೆ ಭ್ರೂಮಧ್ಯ ಪ್ರಣವದಲ್ಲಿ ಓಂಕಾರಧ್ವನಿಯ ಝೇಂಕಾರದಂತೆ, ಘಂಟೆಯ ಬಾರಿಸಿದಂತೆ, ತಟತಟನೆ ಹಾರಿ ಅದು ಭ್ರೂಮಧ್ಯಸ್ಥಾನದಲ್ಲಿ ತೋರುವುದು. ನಾದವೇ ಶಬ್ದ, ನಿಃಶಬ್ದವೇ ಬಿಂದುಮಯ. ನಾದದೊಳಗಿರ್ದ ನಾದವೇ ಓಂಕಾರ. ಚಿಜ್ಜ್ಯೋತಿಯ ಪ್ರಕಾಶ ಭ್ರೂಮಧ್ಯದ ಪಣೆಯ ಮೇಲೆ ಎರಡಂಗುಲದಲ್ಲಿ ಕಾಣಿಸುತ್ತಿಹುದು. ಅದು ಮನದಿಂದೆ ಕಂಡಿತೋ ಕಣ್ಣಿನಿಂದ ಕಂಡಿತೋ ಎಂದಡೆ, ನೆನಹು ಎಂಬ ಅಂತಃಕರಣ ಓಂ ನಮಃಶಿವಾಯ ಎಂಬ ಪ್ರಣವಜ್ಯೋತಿಯ ತೋರಿತ್ತು. ಚಿತ್ತದ ತೋರಿಕೆ ಅರವತ್ತಾರುಕೋಟಿ ಪ್ರಣವಜ್ಯೋತಿಯ ಕಿರಣದಲ್ಲಿ ತೇರಿನ ಬದಿಯ ಬಿರಿಸಿನೋಪಾದಿಯ ನೆನಹು ಮಾತ್ರಕ್ಕೆ ತೋರುತ್ತಿಹುದು. ಹೊರದೃಷ್ಟಿಯ ಒಳಗಿಟ್ಟು, ಒಳದೃಷ್ಟಿಯ ಹೊರಗಿಟ್ಟು ಪರಿಪೂರ್ಣವಾಗಲು, ಒಳಹೊರಗೆ ನೋಡುವ ಶಿವಶರಣರ ಮನ ಭಾವಕ್ಕೆ ಆನಂದವೇ ತೋರುತ್ತಿಹುದು. ದಿನಕರನ ಕಾಂತಿ, ಮಧ್ಯಾಹ್ನದ ಬಿಸಿಲು, ಅಂತರಂಗದ ಛಾಯೆಯಂತೆ, ನಿರ್ಮಲವಾದ ದರ್ಪಣದ ಪ್ರತಿಬಿಂಬದಂತೆ, ತನ್ನ ರೂಪಂಗಳ ತಾನೆ ನೋಡಿದಾತನು ಜೀವನ್ಮುಕ್ತನು. ಆತ ಭವದಬಳ್ಳಿಯ ಹರಿದು ನಿತ್ಯಾನಂದ ನಿರ್ಮಳ ನಿರಾವರಣ ನಿಜ ಚಿನ್ಮಯನಾಗಿಹನು. ಇನ್ನು `ಓಂ ನಮಃಶಿವಾಯ' ಎಂಬ ಊಧ್ರ್ವಪ್ರಣವ. ಅಳ್ಳನೆತ್ತಿಯ ಸ್ಥಾನದಲ್ಲಿ ಅರುಹಿನ ಮನೆಯುಂಟು. ಅದಕ್ಕೆ ತಟಿಮಂತ್ರ. ಅಂತರಂಗದ ಬಾಯಲ್ಲಿ ಎಡಬಲವು ಎರಡು ಕರ್ಣದ್ವಾರಂಗಳಲ್ಲಿ ನುಡಿಯ ಕೇಳಿದಡೆ ಸುನಾದವಾಯಿತ್ತು. ಅದು ದಶನಾದಂಗಳಿಂದೆ ಶರಧಿ ನಿರ್ಝರ ಮೇಘ ಮುರಜ ಭೇರಿ ಕಹಳೆ ಘಂಟೆ ಶಂಖ ವೀಣೆ ಭ್ರಮರನಾದಂಗಳೆಂಬ ದಶನಾದಂಗಳನು ಗುರುಮುಖದಿಂದರಿತು ಹಗಲಿರುಳು ಆ ದಶನಾದಂಗಳೊಳಗಾದ ಸುನಾದವನು ಎಡೆದೆರಹಿಲ್ಲದೆ ಲಾಲಿಸಿ ಕೇಳುವುದು ಶಿವಯೋಗೀಶ್ವರರು. ಅದು ಪ್ರಸಾದಲಿಂಗಸ್ಥಲ, ವಿಶುದ್ಧಿಯ ಮನೆ ; ಶರಣಸ್ಥಲ. ಆ ಸ್ಥಲದಲ್ಲಿ ನಾದವ ಕೇಳಿದವರಿಗೆ ಜಾಗ್ರ ಸ್ವಪ್ನ ಸುಷುಪ್ತಿಗಳೆಂಬ ಮೂರವಸ್ಥೆಗಳು, ತನುತ್ರಯಂಗಳು ತೂರ್ಯದಲ್ಲಿ ಹರಿದುಹೋಗುವವು. ಸುನಾದದಲ್ಲಿ ಮನಸ್ಸಿಟ್ಟಡೆ ಓಂ ನಮಃಶಿವಾಯ ಎಂಬ ಪ್ರಣವನಾದವ ಕೇಳಿದವರಿಗೆ ಸ್ವಪ್ನವು ಎಂದಿಗೂ ತೋರದು. ಇರುಹೆ ಸುಳಿದಡೆ ಎಚ್ಚರಿಕೆ, ದಿಗಿಲುಭುಗಿಲೆಂದಡೆ ನೀನಾರೆಲಾ ಎಂದು ಮಾತನಾಡಿಸಿಬಿಡುವನು. ಆ ಪ್ರಣವಘೋಷ ಸತ್ತೆನೆಂಬಂತೆ ದಿವಸ ಹನ್ನೆರಡು ತಾಸಿನೊಳಗೆ ತನುವ ಬಿಡುವ ಸಮಯದಲ್ಲಿ, ಆ ಘೋಷ ನಿರ್ಘೋಷವಾಗಿ ನಾದ ನುಡಿಯದು. ಅದು ಲಕ್ಷವಿಟ್ಟು ನೋಡಿದಡೆ ತೋರುವುದು. ಅಂಗುಲ ಪ್ರಮಾಣವಾಗಿ ವಸ್ತುವು ಅಂಗುಷ್ಟಕ್ಕೆ ಬರುವುದು. ವೃಕ್ಷವನೇರಿದ ಸರ್ಪನಂತೆ ಬ್ರಹ್ಮರಂಧ್ರದ ಕೊನೆಗೇರುವುದು. ಹೆದ್ದುಂಬಿಯ ಕೊಳವಿಯೋಪಾದಿಯಲ್ಲಿ ವಸ್ತುವು ಅಳ್ಳಿನೆತ್ತಿಯ ಸ್ಥಾನದಲ್ಲಿ ಏರಿ ಹೋಗುವುದು. ಈ ಮನೆಯ ಶಿವಶರಣ ಬಲ್ಲ. ಇದು ಹನ್ನೆರಡು ತಾಸು ಪುರಸತ್ತಿಗೆಯ ಹೇಳಿದ ಅರುಹು. ಇಂತಪ್ಪ ವಸ್ತುವಿನ ನಿಲುಕಡೆಯ ಬಲ್ಲ ಶರಣನು. ತನ್ನವಸಾನಕಾಲದ ಎಚ್ಚರಿಕೆಯನರಿದು, ಗೋವು ಮಲಗುವಷ್ಟು ಧರಣಿಯ ಸಾರಣಿಯ ಮಾಡುವುದು. ಗೋಮಯ ಗೋಮೂತ್ರ ಗೋಕ್ಷೀರ ಗೋದಧಿ ಗೋಘೃತ ಗೋರೋಚನ ಎಂಬ ಷಡುಸಮ್ಮಾರ್ಜನೆಯ ಮಾಡುವುದು. ಶಿವಜಂಗಮದ ಧೂಳಪಾದಾರ್ಚನೆಯ ಉದಕಮಂ ನೀಡಿ ಸಮ್ಮಾರ್ಜನೆಯ ಮಾಡುವುದು. ರಂಗವಲ್ಲಿಯ ತುಂಬುವುದು, ಭಸ್ಮವ ತಳೆವುದು. ಪಾದೋದಕ ಪ್ರಸಾದಮಂ ಸಲಿಸಿ, ಶಿವಗಣಂಗಳಿಗೆ ವಂದನೆಯ ಮಾಡಿ, ಆ ಸಮ್ಮಾರ್ಜನೆಯ ಮಾಡಿದ ಗದ್ಗುಗೆಯ ಮೇಲೆ ಮುಹೂರ್ತವ ಮಾಡಿ, `ಓಂ ನಮಃಶಿವಾಯ' ಎಂಬ ಪ್ರಣವಸ್ಮರಣೆಯ ಮಾಡುವುದು. ಹಸ್ತದಲ್ಲಿ ಇಷ್ಟಲಿಂಗವ ಹಿಡಿದುಕೊಂಡು ಇರವಂತಿಗೆ ಸೇವಂತಿಗೆ ಮೊಲ್ಲೆ ಮಲ್ಲಿಗೆ ಜಾಜಿ ಕರವೀರ ಸುರಹೊನ್ನೆ ಸಂಪಿಗೆ ಮರುಗ ಪಚ್ಚೆ ದವನ ಬಿಲ್ವಪತ್ರೆ ಮೊದಲಾದ ಸಮಸ್ತ ಪುಷ್ಪ ಪತ್ರೆಗಳ ಧರಿಸಿ, ಆ ಶಿವಲಿಂಗವನು ಮನವೊಲಿದು ಕಂಗಳ ತುಂಬಿ ನೋಡುತ್ತ, ದೇವಭಕ್ತರು ಬಂದಡೆ ಶರಣಾರ್ಥಿ ಎಂದು, ಮಜ್ಜನವ ನೀಡಿಸಿ, ವಿಭೂತಿಯ ಧರಿಸಿ, ಪುಷ್ಪಪತ್ರೆಗಳ ಧರಿಸಿ ಎಂದು ಅವರ ಪಾದವಿಡಿದು, ಶರಣಾರ್ಥಿ ಸ್ವಾಮಿಗಳಿಗೆ ಎಂದು ಹೇಳಿ, ಶಿವಾರ್ಪಣವ ಮಾಡಿ ಎಂದು ಬಿನ್ನಹವ ಮಾಡುವುದು. ಮದುವೆ ಮಾಂಗಲ್ಯ ಅರ್ತಿ ಉತ್ಸಾಹ ಶಿಶುವಿನ ಹೆಸರಿಡುವ ಹಾಗೆ ಹರುಷ ಪರುಷ ಧೈರ್ಯವೇ ಭೂಷಣವಾಗಿ ನಿರೋಧಂಗಳ ಮಾಡದೆ ``ಓಂ ನಮಃಶಿವಾಯ' ಎಂಬ ಮಂತ್ರ ಭೋರ್ಗರೆಯೆ ನಿರ್ಮಲ ನೈಷಿ*ಕದಿಂದೆ ಶಿವಜಂಗಮದ ಪಾದವನು ಮಸ್ತಕದ ಮೇಲೆ ಇಡಿಸುವುದು. ಹಿತವಂತರಾದವರು ವೀರಶೈವ ಪರಮವಚನಂಗಳಂ ಕೇಳಿಸುವುದು. ಎಡಬಲದಲ್ಲಿರ್ದ ಸಕಲ ಭಕ್ತರು ಮಹೇಶ್ವರರು `ಓಂ ನಮಃಶಿವಾಯ' ಎಂಬ ಶಿವಮಂತ್ರವನ್ನು ಆ ಶರಣನ ಕರ್ಣಂಗಳಲ್ಲಿ ಉಚ್ಚರಿಸುವುದು. ಈ ಹಡಗದ ಹಗ್ಗವ ಮತ್ತೊಂದು ಹಡಗಕ್ಕೆ ಹಾಕಿ ಬಿಗಿದಡೆ, ಹಡಗಕ್ಕೆ ಹಡಗ ಕೂಡಿ, ಸಮುದ್ರದ ತೆರೆಯೋಪಾದಿಯಲ್ಲಿ ಹಡಗವ ಬಿಟ್ಟು ಪ್ರತಿಹಡಗದೊಳಗೆ ಮೂರ್ತವ ಮಾಡಿದಂತೆ, ಮಂತ್ರಮಂತ್ರವು ಸಂಬಂಧವಾಗಿ, ಉರಿ ಕರ್ಪುರ ಕೊಂಡಂತಾಯಿತ್ತು ಶರಣನ ದೇಹಪ್ರಾಣವು. ಇದು ಗುಹ್ಯಕ್ಕೆ ಗುಹ್ಯ, ಗೋಪ್ಯಕ್ಕೆ ಗೋಪ್ಯ, ರಹಸ್ಯಕ್ಕೆ ಅತಿ ರಹಸ್ಯ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಭೂತವೈದರಿಂದ ಸ್ಥೂಲ ತನು. ಮನ ಬುದ್ಧಿ ಚಿತ್ತ ಅಹಂಕಾರದಿಂದ ಸೂಕ್ಷ್ಮತನು. ಭಾವಜ್ಞಾನದಿಂದ ಕಾರಣತನು._ಈ ತ್ರಿವಿಧವು ಚೈತನ್ಯವಿಡಿದ ಕಾರಣ, ಭೂತ ಅಂತಃಕರಣ ಭಾವ ಜ್ಞಾನಕ್ಕೆ ಸ್ವತಂತ್ರತೆಯಿಲ್ಲ. ಆ ಚೈತನ್ಯಕ್ಕೆ ಶರೀರಭಾವವಿಲ್ಲದಿರ್ದಡೆ ತೋರಿಕೆ ಇಲ್ಲವಾಗಿ ಆ ಚೈತನ್ಯವೆ ತನ್ನ ಲೀಲೆಯಿಂದ ಶರಣನೆನಿಸಿತ್ತು. ಆ ಶರಣನ ಪಂಚಭೌತಿಕ ತನುವ ಇಷ್ಟಲಿಂಗ ಇಂಬುಗೊಂಡಿಹ ಕಾರಣ, ಕಾಯ ಪಂಚಬ್ರಹ್ಮಮಯವಾಯಿತ್ತು. ಅಂತಃಕರಣ[ವ] ಅಂತಃಪ್ರೇರಕ ಪ್ರಾಣಚೈತನ್ಯಲಿಂಗವೊಳಕೊಂಡ ಕಾರಣ ಶರಣನ ಕರಣಂಗಳೆ ಲಿಂಗಕಿರಣಂಗಳಾದವು. ಭಾವ ಜ್ಞಾನವೆಡೆಗೊಂಡು [ಲಿಂಗ] ತೃಪ್ತಿಸ್ವರೂಪದಿಂದ ಆನಂದಮಯವಪ್ಪ ಕಾರಣ, ಶರಣ ಸಚ್ಚಿನ್ಮಯನಾದ_ಇದು ಕಾರಣ, ಗುಹೇಶ್ವರಾ ನಿಮ್ಮ ಶರಣರ ದೃಷ್ಟಲಿಂಗವೆಂಬೆ !
--------------
ಅಲ್ಲಮಪ್ರಭುದೇವರು
ಅಷ್ಟಾಷಷಿ*ತೀರ್ಥಂಗಳ ಮೀಯಲ್ಕೆ ಆತ ಹಿರಿಯನೇ ? ಅಲ್ಲ, ಆತನ ಅಂತಃಕರಣ ಶುದ್ಧವಿಲ್ಲಾಗಿ. ಸಂಧ್ಯಾ ಸಮಾಧಿ ಜಪ ತಪ ಮಂತ್ರರೂಢನಾಗಿರಲಿಕೆ ಆತ ಹಿರಿಯನೇ ? ಅಲ್ಲ, ಆತನ ಮನ ಶುದ್ಧವಿಲ್ಲಾಗಿ. ವಚನಾರಂಭದಲ್ಲಿ ನುಡಿಗಲಿತಲ್ಲಿ ಆತನನುಭವಿಯೆ ? [ಅಲ್ಲ] ಆತ ಇದಿರ ಬೋಧಿಸುವ ಭುಂಜಕನಾಗಿ. ಕೋಪವೇ ರಾಶಿ, ಕುಟಿಲವೇ ಲಚ್ಚಣ, ಸಟೆಯೇ ಕೊಳಗ, ಮಾಯವೇ ಅಳತೆ, ಅರಿಷಡ್ವರ್ಗ ಪಂಚೇಂದ್ರಿಯವಿಡಿದಾಡುವನ್ನಕ್ಕ ಭಕ್ತನೇ ? ಭಕ್ತನಲ್ಲ. ಭಕ್ತನ ನಡೆ ಪಾವನ, ನುಡಿಯೇ ತೀರ್ಥ, ಒಡಲೇ ಕ್ಷೇತ್ರ. ನಿಮ್ಮ ಶರಣರ ಅಂಗಳವೇ ವಾರಣಾಸಿ, ಕೇವಲ ದಾಸೋಹವೇ ಕರ್ತವ್ಯ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಕ್ಷತ್ರಿಯ ಮಂತ್ರಿ ಜಗಕ್ಕೆ ರಾಜಾಂಗವೆ ? ಸಪ್ತಾಂಗ ಸನ್ನಾಹವೆಂಬುದು ಸಂಭ್ರಮ ಸಹಿತ ಉನ್ಮದನ ಮೋಹಿನಿಗಳೆಲ್ಲಾ ಅನುದಪ್ಪಿ ಹೋದರಾಗಿ ಅಂತಃಕರಣ ಘನವೇದಿಸಿ ಶಬ್ದನಿಷ್ಪತ್ತಿಗಳಿಗಲ್ಲದೆ ಸಹಭೋಜನವಳವಡದು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭಕ್ತಿಯೆಂಬ ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಂ ಪಿಡಿದು, ಅಂತಃಕರಣ ಚತುಷ್ಟಯವೆಂಬ ಪಶುವಂ ಕಟ್ಟಿ ಓಂಕಾರನಾದವೆಂಬ ಸೆಳೆಕೋಲಂ ಪಿಡಿದು ಉತ್ತರ ಕ್ರೀಯೆಂಬ ಸಾಲನೆತ್ತಿ ದುಃಕರ್ಮವೆಂಬ ಕಂಟಕದ ಗುಲ್ಮವಂ ಕಡಿದು ಅರುಹೆಂಬ ರವಿಯ ಕಿರಣದಿಂದ ಒಣಗಿಸಿ ಅವಂ ಕೂಡಲೊಟ್ಟಿ, ಜ್ಞಾನಾಗ್ನಿಯೆಂಬ ಅಗ್ನಿಯಿಂದ ಸುಟ್ಟುರುಹಿ ಆ ಹೊಲನಂ ಹಸಮಾಡಿ, ಬಿತ್ತುವ ಪರಿ ಇನ್ನಾವುದಯ್ಯಾ ಎಂದಡೆ: ನಾದ. ಬಿಂದು, ಕಳೆ, ಮಳೆಗಾಲದ ಹದಬೆದೆಯನರಿದು ಸ್ಥೂಲವೆಂಬ ದಿಂಡಿಗೆ ತ್ರಿದೇವರೆಂಬ ತಾಳ ನಟ್ಟು ಇಡಾಪಿಂಗಳ ಸುಷುಮ್ನಾನಾಳವೆಂಬ ಕೋವಿಗಳ ಜೋಡಿಸಿ, ಮೇಲೆ ತ್ರಿಕೂಟಸ್ಥಾನವೆಂಬ ಬಟ್ಟಲಂ ಬಲಿದು, ಕುಂಡಲೀಸರ್ಪನೆಂಬ ಹಗ್ಗವ ಸೇದಿ ಕಟ್ಟಿ, ಹಂಸನೆಂಬ ಎತ್ತಂ ಹೂಡಿ, ಪ್ರಣವನೆಂಬ ಬೀಜವ ಪಶ್ಚಿಮ ಮುಖಕ್ಕೆ ಬಿತ್ತಿ, ಸರ್ವಶಾಂತಿ ನಿರ್ಮಲವೆಂಬ ಮೇಘ ಸುರಿಯಲ್ಕೆ ನೀಲಬ್ರಹ್ಮವೆಂಬ ಸಸಿ ಹುಟ್ಟಿತ್ತ. ಆ ಸಸಿಯ ಮುಟ್ಟುವ ಸಪ್ತವರ್ಣದ ಸದೆಯ ಕಳೆದು ಅಷ್ಟವರ್ಣದ ಅಲಬಂ ಕಿತ್ತು, ದಶವಾಯುವೆಂಬ ಕಸಮಂ ತೆಗೆದು, ಆ ಸಸಿ ಪಸರಿಸಿ ಪ್ರಜ್ವಲಿಸಿ ಫಲಕ್ಕೆ ಬರಲಾಗಿ ಚತುರ್ವಿಧವೆಂಬ ಮಂಚಿಗೆಯಂ ಮೆಟ್ಟಿ ಬಾಲಚಂದ್ರನೆಂಬ ಕವಣೆಯಂ ಪಿಡಿದು ಪ್ರಪಂಚುವೆಂಬ ಹಕ್ಕಿಯಂ ಸೋವಿ ಆ ಬತ್ತ ಬಲಿದು ನಿಂದಿರಲು, ಕೊಯ್ದುಂಬ ಪರಿ ಇನ್ನಾವುದಯ್ಯಾ ಎಂದಡೆ: ಇಷ್ಟವೆಂಬ ಕುಡುಗೋಲಿಗೆ ಪ್ರಣವವೆಂಬ ಹಿಡಿಯಂ ತೊಡಿಸಿ, ಭಾವವೆಂಬ ಹಸ್ತದಿಂ ಪಿಡಿದು, ಜನನದ ನಿಲವಂ ಕೊಯ್ದು, ಮರಣದ ಸಿವುಡ ಕಟ್ಟಿ, ಆಕಾಶವೆಂಬ ಬಣವೆಯನೊಟ್ಟಿ ಉನ್ಮನಿಯೆಂಬ ತೆನೆಯನ್ನರಿದು, ಮನೋರಥವೆಂಬ ಬಂಡಿಯಲ್ಲಿ ಹೇರಿ, ಮುಕ್ತಿಯೆಂಬ ಕೋಟಾರಕ್ಕೆ ತಂದು, ಅಷ್ಟಾಂಗಯೋಗವೆಂಬ ಜೀವಧನದಿಂದೊಕ್ಕಿ, ತಾಪತ್ರಯದ ಮೆಟ್ಟನೇರಿ, ಪಾಪದ ಹೊಟ್ಟ ತೂರಿ, ಪುಣ್ಯದ ಬೀಜಮಂ [ತ]ಳೆದು ಷಡುವರ್ಗ ಷಡೂರ್ಮೆಯೆಂಬ ಬೇಗಾರಮಂ ಕಳೆದು ಅಂಗಜಾಲನ ಕಣ್ಣ[ಮು]ಚ್ಚಿ, ಚಿತ್ರಗುಪ್ತರೆಂಬ ಕರಣಿಕರ ಸಂಪುಟಕೆ ಬರಿಸದೆ ಯಮರಾಜನೆಂಬರಸಿಗೆ ಕೋರನಿಕ್ಕದೆ ಸುಖ ಶಂಕರೋತಿ ಶಂಕರೋತಿ ಎಂಬ ಸಯಿದಾನವನುಂಡು ಸುಖಿಯಾಗಿಪ್ಪ ಒಕ್ಕಲಮಗನ ತೋರಿ ಬದುಕಿಸಯ್ಯಾ, ಕಾಮಭೀಮ ಜೀವಧನದೊಡೆಯ ಪ್ರಭುವೆ ನಿಮ್ಮ ಧರ್ಮ, ನಿಮ್ಮ ಧರ್ಮ..
--------------
ಒಕ್ಕಲಿಗ ಮುದ್ದಣ್ಣ
ಮನ ಆವ ವಸ್ತುವನಾದಡೂ ನೆನೆದಡೆ ಬುದ್ಧಿ ನಿಶ್ಚೈಸುವುದು, ಚಿತ್ತ ವಾಕ್ಯಕ್ಕೆ ತಂದು, ಮಾಡಬೇಕೆಂಬುದು, ಅಹಂಕಾರ ಕಾಯದ ಕೈಯಿಂದ ಮಾಡಿಸುವುದು. ಇಂತೀ ಅಂತಃಕರಣ ಚತುಷ್ಟಯಂಗಳ ಅಂತುವನರಿತು ಸಮವೇದಿಸಲು ಕೂಡಲಚೆನ್ನಸಂಗಯ್ಯನಲ್ಲಿ ಲಿಂಗೈಕ್ಯನೆನಿಸುವನು.
--------------
ಚನ್ನಬಸವಣ್ಣ
ಎನ್ನ ಪ್ರಾಣ ಮನ ಬುದ್ಧಿ ಚಿತ್ತಂಗಳು ನಿಮ್ಮ ತೊತ್ತಿರಯ್ಯಾ. ಸತ್ವ ರಜ ತಮಂಗಳು ನಿಮ್ಮ ಭೃತ್ಯರಯ್ಯಾ. ಅಂತಃಕರಣ ಚತುಷ್ಟಯಂಗಳು ನಿಮ್ಮ ಮಂತ್ರಿಗಳಯ್ಯಾ. ಪಂಚೇಂದ್ರಿಯಂಗಳು ನಿಮ್ಮ ಪಡಿಹಾರರಯ್ಯಾ. ಅರಿಷಡ್ವರ್ಗಂಗಳು ನಿಮ್ಮ ಲೆಂಕರಯ್ಯಾ. ಸಪ್ತಧಾತುಗಳು ನಿಮ್ಮ ಬಾಣಸಿಗರಯ್ಯಾ. ಅಷ್ಟಮದಂಗಳು ನಿಮ್ಮ ಭಂಡಾರಿಗಳಯ್ಯಾ. ನವರಸಂಗಳು ನಿಮ್ಮ ಭಂಡಾರಿಗಳಯ್ಯಾ. ದಶವಾಯಗಳು ನಿಮ್ಮ ಛತ್ರ ಚಾಮರ ಸೀಗುರಿಗಳಯ್ಯಾ. ಷೋಡಶಕಳೆಗಳು ನಿಮ್ಮ ರಾಣಿವಾಸವಯ್ಯಾ. ಶಂಭು ಸೋಮನಾಥಲಿಂಗ, ನಿಮಗೆನ್ನ ಕಾಯ ಮುಂತಾಗಿ ಬಾಹತ್ತರ ಡಿಂಗರಿಗರಯ್ಯಾ!
--------------
ಜೋದರ ಮಾಯಣ್ಣ
ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬಿವು ಪಂಚ ಮಹಾಭೂತಂಗಳು. ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂಬಿವು ಪಂಚಪ್ರಾಣವಾಯುಗಳು. ವಾಕ್ಕು ಪಾಣಿ ಪಾದ ಪಾಯು ಗುಹ್ಯವೆಂಬಿವು ಪಂಚಕರ್ಮೇಂದ್ರಿಯಂಗಳು. ಶೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬಿವು ಪಂಚಜ್ಞಾನೇಂದ್ರಿಯಂಗಳು. ಮನ ಬುದ್ಧಿ ಚಿತ್ತ ಅಹಂಕಾರವೆಂಬಿವು ಅಂತಃಕರಣ ಚತುಷ್ಟಯಂಗಳು. ಇಂತು ಇಪ್ಪತ್ತು ನಾಲ್ಕು ತತ್ವಂಗಳು ಕೂಡಿ ದೇಹವಾಯಿತ್ತು. ಭೂತೈಶ್ಚ ಪಂಚಭಿಃ ಪ್ರಾಣೈಶ್ಚ ಚತುರ್ದಶಭಿರಿಂದ್ರಿಯೈಃ| ಚತುರ್ವಿಂಶತಿದೇಹಾನಿ ಸಾಂಖ್ಯಶಾಸ್ತ್ರವಿದೋ ವಿದುಃ|| ಎಂದುದಾಗಿ, ಇಂತೀ ಇಪ್ಪತ್ತನಾಲ್ಕು ತತ್ತ್ವಂಗಳು ಕೂಡಿ ಚೇಷ್ಟಿಸುವಾತನೇ ಜೀವಾತ್ಮನು. ಅದೆಂತೆಂದಡೆ: ಮನಶ್ಚತುರ್ವಿಂಶಕಂ ಚ ಜ್ಞಾತೃತ್ವಂ ಪಂಚವಿಂಶಕಂ| ಆತ್ಮಾ ಷಡ್ವಿಂಶಕಶ್ಚೈವ ಪರಾತ್ಮಾ ಸಪ್ತವಿಂಶಕಃ|| ಚತುರ್ವಿಧಂತು ಮಾಯಾಂಶಂ ನಿರ್ಗುಣಃ ಪರಮೇಶ್ವರಃ| ಪಂಚವಿಂಶತಿ ತತ್ತ್ವಾನಿ ಮಾಯಾಕರ್ಮ ಗುಣಾಯತೇ ವಿಷಯಾ ಇತಿ ಕಥ್ಯಂತೇ ಪಾಶಜೀವ ನಿಬಂಧನಾತ್ ಇಂತೆಂದುದಾಗಿ ಇಂತೀ ಪಂಚವಿಂಶತಿ ತತ್ತ್ವಂಗಳುತ್ಪತ್ತಿಯು ನಿಮ್ಮ ನೆನಹುಮಾತ್ರದಿಂದಾದವಾಗಿ ಇವರ ಗುಣಧರ್ಮಕರ್ಮಂಗಳು ನಿಮಗಿಲ್ಲ ನೋಡಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಅನಾದಿಕುಳುಸನ್ಮತವಾದ ಏಕಾದಶಪ್ರಸಾದವ ಕುಳವ ತಿಳಿವಡೆ; ಪ್ರಥಮದಲ್ಲಿ ಗುರುಪ್ರಸಾದ, ದ್ವಿತೀಯದಲ್ಲಿ ಲಿಂಗಪ್ರಸಾದ, ತೃತೀಯದಲ್ಲಿ ಜಂಗಮಪ್ರಸಾದ, ಚತುರ್ಥದಲ್ಲಿ ಪ್ರಸಾದಿಪ್ರಸಾದ ಪಂಚಮದಲ್ಲಿ ಅಪ್ಯಾಯನ ಪ್ರಸಾದ, ಷಷ*ಮದಲ್ಲಿ ಸಮಯಪ್ರಸಾದ, ಸಪ್ತಮದಲ್ಲಿ ಪಂಚೇಂದ್ರಿಯವಿರಹಿತ ಪ್ರಸಾದ ಅಷ್ಟಮದಲ್ಲಿ ಅಂತಃಕರಣ ಚತುಷ್ಟಯವಿರಹಿತಪ್ರಸಾದ, ನವಮದಲ್ಲಿ ಸದ್ಭಾವಪ್ರಸಾದ, ದಶಮದಲ್ಲಿ ಸಮತಾಪ್ರಸಾದ, ಏಕಾದಶದಲ್ಲಿ ಜ್ಞಾನಪ್ರಸಾದ._ ಇಂತೀ ಏಕಾದಶ ಪ್ರಸಾದಸ್ಥಲವನತಿಗಳೆದ ಕೂಡಲಚೆನ್ನಸಂಗಯ್ಯನಲ್ಲಿ ಐಕ್ಯಪ್ರಸಾದಿಗೆ ನಮೋ ನಮೋ ಎಂದೆನು.
--------------
ಚನ್ನಬಸವಣ್ಣ
ಇನ್ನಷ್ಟು ... -->