ಸರ್ವಾಚಾರಸಂಪತ್ತನರಿದಲ್ಲದೆ
ನಿರವಯಲಪದವ ಕಾಣಬಾರದು ನೋಡಾ ಆರಿಗೆಯು.
ಸರ್ವಾಚಾರಸಂಪತ್ತು ಎಂತೆನಲು,
ಷಡ್ಭೂತಂಗಳಲ್ಲಿ ಷಡ್ವಿಧ ಮಂತ್ರಂಗಳ ನೆಲೆಗೊಳಿಸಿ,
ಆ ಷಡ್ವಿಧ ಮಂತ್ರಂಗಳನೆ ಷಡ್ವಿಧಚಕ್ರಂಗಳೆಂದು ತಿಳಿದು,
ಆ ಷಡ್ವಿಧ ಚಕ್ರಂಗಳಿಗೆ ಷಡ್ವಿಧ ಅದ್ಥಿದೈವಂಗಳನೆ
ಷಡ್ವಿಧ ಅಂಗವೆಂದಾಧಾರಗೊಳಿಸಿ,
ಆ ಷಡ್ವಿಧ ಅಂಗಕ್ಕೆ ಷಡ್ವಿಧ ಕರಣಂಗಳನೆ
ಷಡ್ವಿಧ ಹಸ್ತಂಗಳೆಂದು ಅರಿದಳವಡಿಸಿಕೊಂಡು,
ಆ ಷಡ್ವಿಧ ಹಸ್ತಂಗಳಿಗೆ ಷಡ್ವಿಧ ಲಿಂಗಂಗಳನಳವಡಿಸಿಕೊಂಡು,
ಆ ಷಡ್ವಿಧ ಲಿಂಗಕ್ಕೆ ಷಡ್ವಿಧೇಂದ್ರಿಯಂಗಳನೆ
ಷಡ್ವಿಧ ಪದಾರ್ಥಂಗಳೆಂದರಿದು,
ಆ ಷಡ್ವಿಧ ಪದಾರ್ಥಂಗಳನು ಷಡ್ವಿಧ ಭಕ್ತಿಯಿಂದೆ
ಷಡ್ವಿಧ ಲಿಂಗಮುಖಂಗಳಿಗೆ ಸಮರ್ಪಿಸಲು,
ಒಳಹೊರಗೆಲ್ಲ ಆ ಷಡ್ವಿಧ ಲಿಂಗದ ಬೆಳಗು ತುಂಬಿ
ತೊಳಗಿ ಬೆಳಗುತಿರ್ಪುದು ನೋಡಾ.
ಎಡೆದೆರಹಿಲ್ಲದೆ ಆ ಷಡ್ವಿಧ ಲಿಂಗದ ಬೆಳಗಿನೊಳಗೆ
ತನ್ನ ಷಡ್ವಿಧಾಂಗದ ಕಳೆಗಳನೆಲ್ಲವನಡಗಿಸಿ,
ತಾನೆಂಬ ಕುರುಹುದೋರದಿರ್ದಡೆ ಅದೇ ಸರ್ವಾಚಾರಸಂಪತ್ತು ನೋಡಾ.
ಇಂತಪ್ಪ ಸರ್ವಾಚಾರಸಂಪತ್ತು
ನಿಮ್ಮ ಪೂರ್ಣ ಒಲುಮೆಯ ಶರಣರಿಗಲ್ಲದೆ
ಉಳಿದವರಿಗಳವಡದಯ್ಯಾ ಅಖಂಡೇಶ್ವರಾ ?