ಅಥವಾ

ಒಟ್ಟು 50 ಕಡೆಗಳಲ್ಲಿ , 35 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ಮತ್ರ್ಯಲೋಕವ ಪಾವನವ ಮಾಡುವೆನೆಂದು ಸುಳಿವ ವಿರಕ್ತ ಜಂಗಮದಿರವು ಹೇಗಿರಬೇಕೆಂದಡೆ: ಕಲ್ಲಿನ ಮೇಲೆ ಹೊಯ್ದ ನೀರಿನಂತಿರಬೇಕು. ಪಥವಿಲ್ಲದ ಪಯಣವ ಹೋಗಿ ಗತಿಗೆಟ್ಟವನಂತಿರಬೇಕು. ಶ್ರುತಿಯಡಗಿದ ನಾದದ ಪರಿಯಂತಿರಬೇಕು. ಹುರಿದ ಬೀಜದ ಒಳಗಿನಂತಿರಬೇಕು. ಅದಾವಂಗೂ ಅಸಾಧ್ಯ ನೋಡಾ, ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಮೊದಲಿಂದತ್ತಲರಿಯದೆ, ಕಡೆಯಿಂದ ಮೇಲೆ ಕಾಣದೆ, ಚದುರಿನ ಹದನ ಸದನ ಸಂಭ್ರಮಕ್ಕೆ ಒದಗಿ ಬಿದ್ದೊರಲಿದರು ಅಜ ವಿಷ್ಣು ಇಂದ್ರಾದಿ ಸಕಲ ಸಂದೋಹ. ಉಳಿದ ಉಚ್ಛಿಷ್ಟ ಬಚ್ಚಲದೊಳು ಬಿದ್ದ ಪ್ರಾಣಿಗಳಂತಿರಲಿ, ಮತ್ತೆ ಕೋಟಲೆಯ ಕಳೆದು ರಾಟಣವ ಹರಿದು, ನಿಜಬೇಟವರಿದು ನಿರ್ಮಲವನರ್ಪಿಸಿ, ನಿರಾವಯವ ಕೊಂಡಾಡುವ ನಿಜಪ್ರಸಾದಿಗಲ್ಲದೆ ಅಸಾಧ್ಯ ಕಾಣಾ ಗುರುನಿರಂಜನ ಚನ್ನಬಸವಲಿಂಗ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪ್ರಸಾದ ಸೋಂಕಿದ ತನುವೆಲ್ಲ ಲಿಂಗಮಯ, ರೋಮರೋಮವೆಲ್ಲ ಲಿಂಗ. ಆ ಭಕ್ತಂಗೆ ಆಧಾರಸ್ಥಾನವೆ ನಿಜಸ್ಥಾನ. ಆಧಾರಚಕ್ರದಲ್ಲಿ ನಾಲ್ಕೆಸಳಿನ ತಾವರೆ ಕಮಲದ ಮಧ್ಯದಲ್ಲಿ ಬಾಲಾರ್ಕಕೋಟಿ ಸೂರ್ಯಪ್ರಕಾಶನುಳ್ಳುದು ಆಚಾರಲಿಂಗ. ಆ ಭಕ್ತನ ಗುಹ್ಯದಲ್ಲಿ ಗುರುಲಿಂಗ, ಆ ಭಕ್ತನ ಮಣಿಪೂರಕದಲ್ಲಿ ಶಿವಲಿಂಗ. ಆ ಭಕ್ತನ ಅನಾಹತದಲ್ಲಿ ಜಂಗಮಲಿಂಗವಿಹುದು. ಆ ಭಕ್ತನ ವಿಶುದ್ಧಿಚಕ್ರದಲ್ಲಿ ಪ್ರಸಾದಲಿಂಗವಿಹುದು. ಆ ಭಕ್ತನ ಭ್ರೂಮಧ್ಯದಲ್ಲಿ ಮಹಾಲಿಂಗವಿಹುದು. ಆ ಭಕ್ತನ ಆಧಾರದಲ್ಲಿ ನಕಾರ ಪ್ರಣಮದ ಜನನವು. ಆಣವಮಲ, ಮಾಯಾಮಲ, ಕಾರ್ಮಿಕಮಲ ಅನಂತಕೋಟಿಗಳಿಗೆ ನಕಾರವೇ ಮೂಲ. ಇನ್ನೂರು ಹದಿನಾರು ಭುವನಂಗಳು ಆ ಭಕ್ತನ ಗುದದಲ್ಲಿ ಬಿದ್ದಿದ್ದವಷ್ಟು ಹದಿನೆಂಟುಧಾನ್ಯಕ್ಕೆ ಶಾಕಪತ್ರ ಕಂದಮೂಲ ಫಲಾದಿಗಳಿಗೆ ಭೂಮಿ ಎಂದುದಾಗಿ. ಉಂಬುವದು ಅಗ್ನಿ, ಉಡುವದು ಪೃಥ್ವಿ ಎಂದುದಾಗಿ. ಈ ಜಗವೆಲ್ಲ ಮಲವನೆ ಭುಂಜಿಸಿ ಮಲವನೆ ವಿಸರ್ಜನೆಯಂ ಮಾಡುವರು. ಇದು ಕಾರಣ ಇದ ಕೊಂಬುವದು ಪ್ರಸಾದವಲ್ಲ. ಕೊಟ್ಟಾತ ಗುರುವಲ್ಲ, ಕೊಂಡಾತ ಸದ್ಭಕ್ತನಲ್ಲ. ಈ ಪ್ರಸಾದವ ಕೊಳ್ಳಬಲ್ಲರು ನಮ್ಮ ಶರಣರು. ಪ್ರಸಾದವೆಂತೆಂದಡೆ : ಅವರ್ಣ, ಆದಿ, ಅವ್ಯಕ್ತ. ಆ ನಾಮವು, ಭರ್ಗೋದೇವಾದಿ ಪಂಚಮೂರ್ತಿಗಳಿಗೆ ಆಶ್ರಯವಾಯಿತು. ಕರಣಚತುಷ್ಟಯಂಗಳಿಗೆ ನಿಲುಕದು. ಪ್ರಾಣಾದಿ ವಾಯುಗಳಿಗೆ, ಶ್ರೋತ್ರಾದಿ ಜ್ಞಾನೇಂದ್ರಿಯಂಗಳಿಗೆ ಅಗಮ್ಯ. ವಾಕ್ಕಾದಿ ಕರ್ಮೇಂದ್ರಿಯಗಳಿಗೆ ತೋರದು. ನಿಜಾನಂದ ನಿತ್ಯಪರಿಪೂರ್ಣ ಪ್ರಸಾದವು ಚೆನ್ನಯ್ಯಪ್ರಿಯ ನಿರ್ಮಾಯ ಪ್ರಭುವೆ, ನಿಮ್ಮ ಶರಣರಿಗಲ್ಲದೆ ಉಳಿದ ಜಡಜೀವಿಗಳಿಗೆ ಅಸಾಧ್ಯ.
--------------
ಚೆನ್ನಯ್ಯ
`ಬಸವ' ಎಂಬ ಮೂರಕ್ಷರ ಹೃದಯಕಮಲದಲ್ಲಿ ನೆಲೆಗೊಂಡಡೆ, ಅಭೇದ್ಯ ಭೇದ್ಯವಾಯಿತ್ತು, ಅಸಾಧ್ಯ ಸಾಧ್ಯವಾಯಿತ್ತು. ಇಂತು ಬಸವಣ್ಣನಿಂದ ಲೋಕ¯õ್ಞಕಿಕದ ಕುಭಾಷೆಯ ಕಳೆದು, ಲೋಕಾಚರಣೆಯನತಿಗಳೆದು ಭಕ್ತಿಭರವಪ್ಪುದು, ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ಕಾರುಣ್ಯದಿಂದ
--------------
ಚನ್ನಬಸವಣ್ಣ
ಕಾಮನ ಕಣ್ಣ ಮುಳ್ಳ ಕಳೆದು ಭೂಮಿಯ ತೈಲದ ಸೀಮೆಯ ಕೆಡಿಸಿ ಹೋಮವನುರುಹಿ ದಕ್ಷನ ತಲೆಯನರಿದು ನಿಸ್ಸೀಮನಾದ ಮಹಿಮನ ನಿಲವನರಿಯಬಹುದೆ ? ಅರಿವಿಂಗೆ ಅಸಾಧ್ಯ ಉಪಮೆಗೆ ಕಡೆಮುಟ್ಟದು ! ಗುಹೇಶ್ವರನ ಕರುಣಪ್ರಸಾದಿ ಮರುಳಶಂಕರದೇವರೆಂತಪ್ಪನೆಂಬುದ ತಿಳಿದು ನೋಡಾ ಸಂಗನಬಸವಣ.
--------------
ಅಲ್ಲಮಪ್ರಭುದೇವರು
ಗುರುಪ್ರಸಾದಿ ಆ ಪ್ರಸಾದವ ಲಿಂಗಕ್ಕೆ ಅರ್ಪಿಸಲಾಗದು, ಲಿಂಗಪ್ರಸಾದಿ ಆ ಪ್ರಸಾದವ ಜಂಗಮಪ್ರಸಾದದಲ್ಲಿ ಕೂಡಲಾಗದು. ಇಂತೀ ತ್ರಿವಿಧಪ್ರಸಾದವ ತಾ ಸ್ವೀಕರಿಸುವಲ್ಲಿ ತನ್ನ ದೃಷ್ಟದ ಇಷ್ಟಕ್ಕೆ ಅರ್ಪಿಸದೆ ಮುಟ್ಟಲಾಗದು. ಇಂತೀ ಭಾವ ಅಮೃತದಲ್ಲಿ ವಿಷ ಬೆರೆದಂತೆ: ಅಮೃತವ ಚೆಲ್ಲಬಾರದು, ವಿಷವ ಮುಟ್ಟಬಾರದು. ಗೋವು ಮಾಣಿಕವ ನುಂಗಿದಂತೆ: ಗೋವ ಕೊಲ್ಲಬಾರದು, ಮಾಣಿಕವ ಬಿಡಬಾರದು. ಗೋವು ಸಾಯದೆ ಮಾಣಿಕ ಕೆಡದೆ ಬಹ ಹಾದಿಯ ಬಲ್ಲಡೆ ಆತ ತ್ರಿವಿಧ ಪ್ರಸಾದಿಯೆಂಬೆ. ಆ ಗುಣ ಏಲೇಶ್ವರಲಿಂಗಕ್ಕೂ ಅಸಾಧ್ಯ ನೋಡಾ!
--------------
ಏಲೇಶ್ವರ ಕೇತಯ್ಯ
ಶರಣೆಂದು ಪಾದವ ಹಿಡಿದಿಹೆನೆಂದಡೆ ಚರಣದ ನಿಲವು ಕಾಣಬಾರದು, ಕುರುಹುವಿಡಿದೆಹೆನೆಂದಡೆ ಕೈಗೆ ಸಿಲುಕದು, ಬೆರಸಿ ಹೊಕ್ಕೆಹೆನೆಂದಡೆ ಮುನ್ನವೆ ಅಸಾಧ್ಯ. ಅಕಟಕಟಾ, ಅಹಂಕಾರದಲ್ಲಿ ಕೆಟ್ಟೆನಲ್ಲಾ, ಗುರುವೆ, ಎನ್ನ ಪರಮಗುರುವೆ ಬಾರಯ್ಯಾ, ಅರಿಯದ ತರಳನ ಅವಗುಣವ ನೋಡುವರೆ ಕೂಡಲಸಂಗಮದೇವಾ
--------------
ಬಸವಣ್ಣ
ನಿರಾಕಾರ ಪರವಸ್ತು ತನ್ನ ಲೀಲಾವಿನೋದದಿಂದ ಎರಡು ಮುಖದಿಂದ ಎರಡು ಸೃಷ್ಟಿಯ ಮಾಡಿದರು. ಒಂದು ಊಧ್ರ್ವಸೃಷ್ಟಿ, ಒಂದು ಅಧೋಸೃಷ್ಟಿ. ಅಧೋಸೃಷ್ಟಿ ಯಾವುದೆಂದಡೆ : ಅಂಡಜ ಪಿಂಡಜ ಜರಾಯುಜ ಉದ್ಭಿಜ ಇವು ನಾಲ್ಕು ಕೂಡಿ ಎಂಬತ್ತುನಾಲ್ಕು ಜೀವರಾಶಿಯ ಮಾಡಿದರು. ಸ್ವರ್ಗ ನರಕ ಇಹ ಪರ ಪುಣ್ಯ ಪಾಪ ಧರ್ಮ ಕರ್ಮ ಸತ್ಯ ಅಸತ್ಯ ಜ್ಞಾನ ಅಜ್ಞಾನ ಹೆಣ್ಣು ಗಂಡು ಹಿರಿದು ಕಿರಿದು ಉತ್ಪತ್ತಿ-ಸ್ಥಿತಿ-ಲಯಕ್ಕೆ ಅದ್ಥಿಕಾರಿಗಳಾದ ಬ್ರಹ್ಮ-ವಿಷ್ಣು-ರುದ್ರರು ಮಾಡಿಟ್ಟರು. ಇನ್ನು ಊಧ್ರ್ವಸೃಷ್ಟಿ ಹೇಗೆಂದಡೆ : ಅಸಂಖ್ಯಾತ ಮಹಾಪ್ರಮಥಗಣಂಗಳು, ಇವರಿಗೆ ಸ್ವರ್ಗ-ನರಕವಿಲ್ಲ, ಇಹ-ಪರವಿಲ್ಲ, ಪುಣ್ಯ-ಪಾಪವಿಲ್ಲ, ಧರ್ಮ-ಕರ್ಮವಿಲ್ಲ, ಹುಸಿ-ಖರೆಯಿಲ್ಲ, ಜ್ಞಾನ-ಅಜ್ಞಾನವಿಲ್ಲ, ಹೆಣ್ಣು-ಗಂಡುವಿಲ್ಲ, ಹಿರಿದು-ಕಿರಿದುವಿಲ್ಲ, ಉತ್ಪತ್ತಿ-ಸ್ಥಿತಿ-ಲಯವಿಲ್ಲ, ಅವರಿಗೆ ಬ್ರಹ್ಮ-ವಿಷ್ಣು ರುದ್ರರು ಇಲ್ಲ. ಅವರಿಗೆ ಮತ್ತಂ, ಆ ನಿರಾಕಾರ ಪರವಸ್ತು ತಾನೆ ಗುರು-ಲಿಂಗ-ಜಂಗಮವಾಗಿ ಗುರುವಿನಲ್ಲಿ ಉತ್ಪತ್ತಿ, ಲಿಂಗದಲ್ಲಿ ಸ್ಥಿತಿ, ಜಂಗಮದಲ್ಲಿ ನಿಜೈಕ್ಯರು. ಮತ್ತೆ ಪರಶಿವಮೂರ್ತಿ ತನ್ನ ವಿನೋದಕ್ಕೆ ಆಟವ ಆಡಬೇಕಾಗಿ ಮಹದಾಕಾಶವ ಮಂಟಪವ ಮಾಡಿ, ಆಕಾಶವ ಪರದೆಯ ಕಟ್ಟಿ, ಅಸಂಖ್ಯಾತ ಪ್ರಮಥಗಣಂಗಳಿಗೆ ಮೂರ್ತವ ಮಾಡಿಸಿ ಎಂಬತ್ತುನಾಲ್ಕುಲಕ್ಷ ಜೀವರಾಶಿಗಳನೆ ಸೂತ್ರವ ಮಾಡಿ ತಮ್ಮ ಕೈಯಲ್ಲಿ ಪಿಡಿದು, ಚಿತ್ರವಿಚಿತ್ರದಾಟವ ಆಡಿಸುತ್ತಿಹುದಕ್ಕೆ ಲೆಕ್ಕವಿಲ್ಲ, ಹೇಳುವುದಕ್ಕೆ ಅಸಾಧ್ಯ. ಆ ಪ್ರಮಥಗಣಂಗಳು ನೋಡಿ, ಆ ಬೊಂಬೆಗಳೇನು ಆಡಿಹವು ? ಸೂತ್ರಿಕನು ಆಡಿಸಿದ ಹಾಂಗೆ ಆಡ್ಯಾವು. ಆ ಗೊಂಬೆಗೆ ಸೂತ್ರವಲ್ಲದೆ ಶಿವನಿಲ್ಲ. ಆ ಗೊಂಬೆಯೊಳಗೆ ಶಿವನಿದ್ದರೆ, ಆಡಿಸುವುದು ಹ್ಯಾಂಗೆ ? ಇವೆಲ್ಲವು ಅನಿತ್ಯವೆಂದು ತಿಳಿದು ಪ್ರಮಥಗಣಂಗಳು ತಮ್ಮ ಲಿಂಗದಲ್ಲಿ ನಿಜ ಮೋಕ್ಷಿಗಳಾಗಿ ಶಾಂಭವಪುರಕ್ಕೆ ಹೋದ ಭೇದವ ಎನ್ನೊಳರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅರ್ಪಿತದ ಮಹಿಮೆಯ ಅನುವ, ಪ್ರಸಾದದ ಮಹಿಮೆಯ ಆವಂಗಾವಂಗರಿಯಬಾರದು. ವಿಷ್ಣ್ವಾದಿ ದೇವ ದಾನವ ಮಾನವ, ಋಷಿಜನಂಗಳಿಗೆಯೂ ಅರಿಯಬಾರದು. ಕಿಂಚಿತ್ತರಿದಡೆಯೂ ಅರ್ಪಿಸಬಾರದು. ಕಿಂಚಿತ್ ಅರ್ಪಿಸಿದಡೆಯೂ ಪ್ರಸಾದವ ಹಡೆಯಬಾರದು. ಕಿಂಚಿತ್ ಪ್ರಸಾದವ ಹಡೆದಡೆಯೂ, ಪ್ರಸಾದವ ಭೋಗಿಸಿ ಪರಿಣಾಮದಿಂ ಮುಕ್ತರಾಗಿರಲರಿಯರು. ಶಿವ ಶಿವಾ ! ಗುರು ಲಿಂಗ ಜಂಗಮಕ್ಕೆ ತನು ಮನ ಧನವನರ್ಪಿಸಲರಿಯರು. ಗುರು ಲಿಂಗ ಜಂಗಮವನೇಕೀಭವಿಸಿ ಮಹಾಲಿಂಗವನು ನೇತ್ರದಲ್ಲಿ ಧರಿಸಿ, ನೇತ್ರಲಿಂಗಕ್ಕೆ ನೇತ್ರದ ಕೈಯಲೂ ರೂಪವನರ್ಪಿಸಲರಿಯರು. ಆ ಮಹಾಲಿಂಗವನು ಶ್ರೋತ್ರದಲ್ಲಿ ಧರಿಸಿ ಶ್ರೋತ್ರಲಿಂಗಕ್ಕೆ ಶ್ರೋತ್ರದ ಕೈಯಲೂ ಮಹಾಶಬ್ದವನರ್ಪಿಸಲರಿಯರು. ಆ ಮಹಾಲಿಂಗವನು ಘ್ರಾಣದಲ್ಲಿ ಧರಿಸಿ ಘ್ರಾಣಲಿಂಗಕ್ಕೆ ಘ್ರಾಣದ ಕೈಯಲೂ ಸುಗಂಧವನರ್ಪಿಸಲರಿಯರು. ಆ ಮಹಾಲಿಂಗವನು ಜಿಹ್ವೆಯಲ್ಲಿ ಧರಿಸಿ ಜಿಹ್ವೆಯಲಿಂಗಕ್ಕೆ ಜಿಹ್ವೆಯ ಕೈಯಲೂ ಮಹಾರಸವನರ್ಪಿಸಲರಿಯರು. [ಆ ಮಹಾಲಿಂಗವನು ತ್ವಕ್ಕಿನಲ್ಲಿ ಧರಿಸಿ ತ್ವಕ್‍ಲಿಂಗಕ್ಕೆ ಘ್ರಾಣದ ಕೈಯಲ್ಲಿ ಮಹಾಸ್ಪರ್ಶವನರ್ಪಿಸಲರಿಯರು] ಆ ಮಹಾಲಿಂಗವನು ಭಾವದಲ್ಲಿ ಧರಿಸಿ ಭಾವಲಿಂಗಕ್ಕೆ ಭಾವದ ಕೈಯಲೂ ಸರ್ವಸುಖಪರಿಣಾಮ ಮೊದಲಾದ ಭಾವಾಭಾವ ನಿಷ್ಕಲವಸ್ತುವನರ್ಪಿಸಲರಿಯರು. ಆ ಮಹಾಲಿಂಗವನು ಮನದಲ್ಲಿ ಧರಿಸಿ ಮನೋಮಯಲಿಂಗಕ್ಕೆ ಮನದ ಕೈಯಲೂ ಸಕಲ ನಿಷ್ಕಲಾದಿ ರೂಪವನರ್ಪಿಸಲರಿಯರು. ಆ ಮಹಾಲಿಂಗವನು ವಾಕ್ಕಿನಲ್ಲಿ ಧರಿಸಿ ವಾಕ್‍ಲಿಂಗಕ್ಕೆ ವಾಕ್ಕಿನ ಕೈಯಲ್ಲೂ ಪಡಿಪದಾರ್ಥ ಮೊದಲಾದ ಸಕಲದ್ರವ್ಯಂಗಳ ರುಚಿ ಮೊದಲಾದ ಸುಖವನರ್ಪಿಸಲರಿಯರು. ಆ ಮಹಾಲಿಂಗವನು ಇಂತು ಮನೋವಾಕ್ಕಾಯವೆಂಬ ತ್ರಿವಿಧದಲ್ಲಿ ಏಕಾದಶ ಅರ್ಪಿತ ಸ್ಥಾನವನರಿದು ಅರ್ಪಿತವಾದ ಏಕಾದಶ ಪ್ರಸಾದವನರಿಯರು. ಮಹಾರ್ಪಿತವನು ಮಹಾಪ್ರಸಾದವನು ಎಂತೂ ಅರಿಯರು. ಪರಂಜ್ಯೋತಿಃ ಪರಂ ತತ್ತ್ವಂ ಪರಾತ್ಪರತರಂ ತಥಾ ಪರವಸ್ತು ಪ್ರಸಾದಃ ಸ್ಯಾದಪ್ರಮಾಣಂ ಪ್ರಸಾದಕಃ ಎಂಬುದನರಿಯರು. ಪೂಜಕಾ ಬಹವಸ್ಪಂತಿ ಭಕ್ತಾಶ್ಯತಸಹಸ್ರಶಃ ಮಹಾಪ್ರಸಾದಪಾತ್ರಂ ತು ದ್ವಿತ್ರಾ ವಾ ನೈವ ಪಂಚಷಃ ಪ್ರಸಾದಂ ಗಿರಿಜಾದೇವಿ ಸಿದ್ಧಕಿನ್ನರಗುಹ್ಯಕಾಃ ವಿಷ್ಣುಪ್ರಮುಖದೇವಾಶ್ಚ ನ ಜಾನಂತಿ ಶಿವಂಕರಂ ಎಂಬ ಪ್ರಸಾದ ಎಲ್ಲರಿಗೆಯೂ ಅಸಾಧ್ಯ. ಅರ್ಪಿತ ಮುನ್ನವೇ ಅಸಾಧ್ಯ. ಅರ್ಪಿತವೂ ಪ್ರಸಾದವೂ ಚನ್ನಬಸವಣ್ಣಂಗಾಯಿತ್ತು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಆದಿ ಲಿಂಗಂ ಭೋ, ಅನಾದಿ ಶರಣಂ ಭೋ! ಪೂರ್ವ ಲಿಂಗಂ ಭೋ, ಅಪೂರ್ವ ಶರಣಂ ಭೋ! ಕೂಡಲಚೆನ್ನಸಂಗನಲ್ಲಿ ಸಾಧ್ಯ ಲಿಂಗಂ ಭೋ, ಅಸಾಧ್ಯ ಶರಣಂ ಭೋ!
--------------
ಚನ್ನಬಸವಣ್ಣ
ಆದಿ ಅನಾದಿಯಿಲ್ಲದಂದು, ನಾದ ಬಿಂದು ಕಳೆ ಮೊಳೆದೋರದಂದು, ಶ್ರುತಿ ಸ್ಮøತಿಗಳು ತಲೆದೋರದಂದು, ಚತುರ್ದಶಭುವನಂಗಳ ರಚನೆ ರಚಿಸದಂದು, ಲಯಭೋಗಾದಿ ಕರಣಂಗಳಲ್ಲಿಯ ತತ್ವಪ್ರಭಾವ ಮೂರ್ತಿಗಳೆಂಬ ಅರಿವು ಕುರುಹಿಗೆ ಬಾರದಂದು, ತಿಥಿ, ವಾರ, ನಕ್ಷತ್ರ, ಯೋಗ, ಕರಣಂಗಳೆಂಬ ಪಂಚಾಂಗ ಲಗ್ನವಿಲ್ಲದಂದು, ಅನುಪಮ ಅಸಾಧ್ಯ ಅಭೇದ್ಯ ಸೌರಾಷ್ಟ್ರ ಸೋಮೇಶ್ವರಾ ನಿಮ್ಮ ನಿಜವನಾರು ಬಲ್ಲರಯ್ಯಾ.
--------------
ಆದಯ್ಯ
ಹದ್ದ ನುಂಗಿದ ಕಾಗೆ ಬದ್ಧ ಭವಿ ನೋಡಾ. ಎದ್ದು ಹಾರಲು ಸಿದ್ಧರ ಗಾರುಡವೆಲ್ಲ ಬಿದ್ದೋಡಿವು ನೋಡಾ. ಬ್ರಹ್ಮಚರಿಯವೆಲ್ಲ ಭ್ರಮೆಗೊಂಡಿತ್ತು ನೋಡಾ. ತ್ರೆ ೈಜಗವೆಲ್ಲಾ ಮೂರ್ಛೆಗತರಾದರು ನೋಡಾ. ವೀರರು ದ್ಥೀರರು ವ್ರತಿಗಳು ಸಾಮಥ್ರ್ಯರೆಲ್ಲ ಮತಿಗೆಟ್ಟು ಮರುಳಾದರು ನೋಡಾ. ಸತಿ ಸುತರ ಕೂಟವನೊಲ್ಲೆನೆಂಬ ವಿರಕ್ತರೆಲ್ಲ ವಿಕಾರಗೊಂಡರು ನೋಡಾ. ಶಿವನಿರ್ಮಿತದಿಂದಾದ ಮಾಯವ ಪರಿಹರಿಸಿಹೆನೆಂದಡೆ, ಅಜ ಹರಿ ರುದ್ರಾದಿಗಳಿಗೆ ಅಸಾಧ್ಯ ನೋಡಾ. ಈ ಮಾಯಾ ಪ್ರಪಂಚ ಕಳೆವಡೆ ಪರಶಿವಜ್ಞಾನ ಮುಖದಿಂದ ಅಲ್ಲದೆ ಪರಿಹರವಾಗದು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಗಜ ಗಮನ, ಅಹಿತ ಶರಸಂಧಾನ, ಮಯೂರನ ಶಯನ, ಮಾರ್ಜಾಲನ ಧ್ಯಾನ, ಕಂಠೀರವನ ಲಾಗು, ಬಕಮೂರ್ತಿಯ ಅನುಸಂಧಾನ, ಅಳಿಯ ಗಂಧ ಭುಂಜನೆ, ಮಧು ಮಕ್ಷಿಕದ ಘೃತಗೊಡ ವಾಸ, ಮೂಷಕದ ದ್ವಾರಭೇದ, ಮರೆವಾಸವೈದುವ ಸಂಚ, ಚೋರನ ಕಾಹು, ಪರಿಚಾರಕನ ವೇಳೆ, ಸಾಹಿತ್ಯನ ಉಪಮೆ, ಸಂಗೀತರ ಸಂಚು, ತಾಳಧಾರಿಯ ಕಳವು, ವಾದ್ಯಭೇದಕನ ಮುಟ್ಟು, ಘ್ರಾಣನ ಹರಿತ, ಭಾವಜ್ಞನ ಚಿತ್ತ . ಇಂತೀ ನಾನಾ ಗಣಂಗಳ ಲಕ್ಷಾಲಕ್ಷಿತವ ತಿಳಿದು, ಶ್ರುತ ದೃಷ್ಟ ಅನುಮಾನ ಮುಂತಾದ ನಾನಾ ಭೇದಂಗಳಲ್ಲಿ ವಿಚಾರಿಸಿ ಕಂಡು, ನಾನಾರೆಂಬುದದೇನೆಂದು ತಿಳಿದು, ತನಗೂ ಇದಿರಿಂಗೂ ಪಡಿಪುಚ್ಚವಿಲ್ಲದೆ, ಸಿಂಧುವಿನೊಳಗಾದ ಸಂಭ್ರಮಂಗಳ ಸಂಚಾರದ ಅಂಗವೆಲ್ಲ ಹೋಗಿ ನಿರಂಗವಾದಂತೆ. ಅಂಗವಾತ್ಮನ ಸಂಗ, ಈ ಅಂಗವೆಂದು ತಿಳಿದು, ಆವ ಸ್ಥಲವನಂಗೀಕರಿಸಿದಲ್ಲಿಯೂ ಪರಿಪೂರ್ಣವಾಗಿ ಏನ ಹಿಡಿದಲ್ಲಿಯೂ ತಲೆವಿಡಿಯಿಲ್ಲದೆ ಏನ ಬಿಟ್ಟಲ್ಲಿಯೂ ಕುಳವಿಡಿಯಿಲ್ಲದೆ ಕರ್ಪುರ ಮಹಾಗಿರಿಯ ಸುಟ್ಟಡೆ ಒಕ್ಕುಡಿತೆ ಬೂದಿ ಇಲ್ಲದಂತೆ, ಚಿತ್ತನಿಶ್ಚಯವಾದ ಸದ್ಭಕ್ತ ಪರಮ ವಿರಕ್ತನ ಇರವು ಇದು. ಎನ್ನೊಡೆಯ ಚೆನ್ನಬಸವಣ್ಣನ ಹರವರಿಯ ತೆರನಿದು. ಸಾಧ್ಯ ಮೂವರಿಗಾಯಿತ್ತು , ಅಸಾಧ್ಯವಸಂಗತ. ನಿಃಕಳಂಕ ಕೂಡಲಚೆನ್ನ ಸಂಗಮದೇವರೆಂದರಿದವಂಗೆ ಅಸಾಧ್ಯ ಸಾಧ್ಯವಾಯಿತ್ತು ?
--------------
ಹಡಪದ ರೇಚಣ್ಣ
ನಾದ, ಬಿಂದು, ಕಳಾ ಭೇದವ ತಿಳಿದಲ್ಲದೆ ಆರಕ್ಷರವಾದ ತೆರನನರಿಯಬಾರದು. ಆರಕ್ಷರಕ್ಕೆ ಮೂಲಪ್ರಣವವ ತಿಳಿದಲ್ಲದೆ ನಾದ ತಲೆದೋರದು. ನಾದ ಬೆಳಗಿನ ಕಳೆಯ ನೋಡಿ ಕಂಡಲ್ಲದೆ ರಾಜ ಶಿವಯೋಗಿಯಾಗಬಾರದು. ರಾಜ ಶಿವಯೋಗವೆಂಬುದು ಆದಿಯಲ್ಲಿ ಶಿವಬೀಜವಾದ ಮಹಾಮಹಿಮನಿಗೆ ಸಾಧ್ಯವಪ್ಪುದಲ್ಲದೆ ತ್ರೆ ೈಜಗದಲಾರಿಗೂ ಅಸಾಧ್ಯ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->