ಅಥವಾ

ಒಟ್ಟು 205 ಕಡೆಗಳಲ್ಲಿ , 62 ವಚನಕಾರರು , 170 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ, ತುಂಬಿದ ಘಟ, ಅರಿದು ಕೊಂಡ ಆತ್ಮ ಇವ ಹಿಡಿದಡೆ ಭಂಗ. ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು ಆಸೆಯ ನುರಿಚಿ ಹಾಕಿ ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
--------------
ಕರುಳ ಕೇತಯ್ಯ
ಕೊಡುವವ ಮಾನವನೆಂದು ಒಡಲಾಸೆಯ ತೋರದಿರು, ಕೊಡುವವ ಮಾನವನಲ್ಲ. ಕೊಡುವವ ಕೊಂಬುವವ ಮಾನವರ ನಡುವಿಪ್ಪ ಮಹಾತ್ಮ ಸಂಜೀವಂಗೆ ಒಡಲಾಸೆ ತೋರಿ ಬೇಡಿಕೊ. ಜೀವನ ಬುದ್ಧಿಯಿಂದ ನರನನಾಸೆಗೈಯದಿರು. ಆಸೆಗೈದರೆ ಕಾವವರಲ್ಲ , ಕೊಲ್ಲುವವರೂ ಅಲ್ಲ , ಕೊಡುವವರೂ ಅಲ್ಲ , ಬಿಡುವವರೂ ಅಲ್ಲ . ನಾಯ ಬಾಲವ ನಂಬಿ ಹೊಳೆಯ ಹಾದವರುಂಟೇ ? ವೈಷಭನ ಬಾಲವ ಪಿಡಿದರೆ ನದಿಯ ತಡಿಯ ಸೇರುವರಲ್ಲದೆ. ನಂಬು ನಂಬು ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲನೆಂಬ ಮಹಾಭಾಗ್ಯವ ನಂಬಿದರೆ ನಿನಗೆ ಬಡತನವೆ ಆತ್ಮ ?
--------------
ಹೇಮಗಲ್ಲ ಹಂಪ
ವಾರಿ ತೆಂಗಿನ ಮರದಲ್ಲಿ ಏರಿತ್ತೊ ? ಅಲ್ಲಾ, ಬೇರೊಂದು ಮಂತ್ರದಲ್ಲಿ ತುಂಬಿತ್ತೊ ? ಅಲ್ಲಾ ವೃಕ್ಷದ ಸಹಜ ಬೀಜವೊ ? ನೀರು ಬಲಿದು ಅದರೊಳಗೆ ಅರತು, ಆ ಸಾರವೆ ಕಾಯಾದಲ್ಲಿ, ಆ ಕಾಯ ತುಷಾರ ಹಿಂಗಿ, ನೆರೆ ಬಲಿತು, ಹಣ್ಣು ಎಣೆಯಾದಲ್ಲಿ, ನೀರೆಲ್ಲಿ ಅಡಗಿತ್ತು? ಹಿಪ್ಪೆ, ಕವಚವೆಲ್ಲಿದ್ದಿತ್ತು ? ಇಂತೀ ಕಾಯ ಆತ್ಮ ಮೇಲೆಂದರಿವೆಂಬ ಕುರುಹೆಲ್ಲಿದ್ದಿತ್ತು ?, ಎಂಬುದನರಿವುದಕ್ಕೆ ಪುರಾಣವ ಪೋಷಿಸಿಕೊಳ್ಳಿ, ಶಾಸ್ತ್ರವ ಸಂದಣಿಸಿಕೊಳ್ಳಿ, ವೇದದ ಆದ್ಯಂತವ ಸಾದ್ಥಿಸಿಕೊಳ್ಳಿ, ಶ್ರುತದಲ್ಲಿ ಕೇಳಿ ದೃಷ್ಟದಲ್ಲಿ ಕಂಡುಕೊಳ್ಳಿ, ಇಂತೀ ಚಿದಾತ್ಮನು ಬಂಧಮೋಕ್ಷಕರ್ಮಂಗಳಲ್ಲಿ ದ್ವಂದಿತನೋ ? ಆ ಅಂಗಭಾವ ವಿರಹಿತನೋ ? ಈ ಉಭಯದ ಸಂದೇಹವುಳ್ಳನ್ನಕ್ಕ ಕರ್ಮವ ಮಾಡುವಂಗೆ, ನಿರ್ಮಲವೊಂದುಂಟೆಂದು ಅರಿವಂಗೆ, ಇಂತೀ ಭೇದಂಗಳನರಿತು, ನಿರವಯದ ಸಮ್ಮಾನದ ಸುಖಿಯಾದೆನೆಂಬವಂಗೆ, ಅದು ಬ್ಥಿನ್ನರೂಪೋ, ಅಬ್ಥಿನ್ನರೂಪೋ ? ಆ ನಿಜದ ನೆಲೆಯ ನೀವೇ ಬಲ್ಲಿರಿ. ಕಾಮಧೂಮ ಧೂಳೇಶ್ವರನಲ್ಲಿ ಕಾಳಿಕೆ ಹಿಂಗಿದ ಕಣ್ಣಿನವಂಗಲ್ಲದೆ ಕಾಣಬಾರದು.
--------------
ಮಾದಾರ ಧೂಳಯ್ಯ
ಹಿರಿದುಂಟೆಂಬ ನುಡಿ ಚೋದ್ಯವಪ್ಪುದು ಶರಣಂಗೆ. ಅದೇನು ಕಾರಣವೆಂದೊಡೆ, ತನ್ನಿಂದ ತೋರಿದ ಪೃಥ್ವಿ ಅಪ್ಪು ಅಗ್ನಿ ವಾಯು ಆಕಾಶ ಆತ್ಮ ಸೂರ್ಯ ಚಂದ್ರ ತನ್ನಿಂದೆ ತೋರಿದ ಸಕಲಾರಂಭ. ಇದು ಕಾರಣ, ತಾನೊಂದರಿಂದ ತೋರಿದವನಲ್ಲ. ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ಶರಣ ಕಾರಣನಹುದು ಕಾರ್ಯನಲ್ಲ.
--------------
ದೇಶಿಕೇಂದ್ರ ಸಂಗನಬಸವಯ್ಯ
ಸರ್ವ ಇಂದ್ರಿಯಗಳ ಒಂದು ಮುಖವ ಮಾಡಿ ಸರ್ವ ಮೋಹಂಗಳಲ್ಲಿ ನಿರ್ಮೋಹಿತನಾಗಿ, ಅಂಗದಿಚ್ಫೆಯ ಮರೆದು ವ್ರತವೆಂಬ ಆಚಾರಲಿಂಗವ ಧರಿಸಬೇಕಲ್ಲದೆ ತನುವಿಗೆ ಬಂದಂತೆ ಮುಟ್ಟಿ, ಮನಕ್ಕೆ ಬಂದಂತೆ ಹರಿದು, ನಾನಿಲ್ಲಿ ಒಬ್ಬ ಶೀಲವಂತನಿದ್ದೇನೆ ಎಂದು ಕಲಹಟ್ಟಿಯಂತೆ ಕೂಗುತ್ತ ಕೊರಚುತ್ತ ಅಲ್ಲಿ ಬೊಬ್ಬಿಡುತ್ತ ಶೂಲವನೇರುವ ಕಳ್ಳನಂತೆ ಬಾಹ್ಯದಲ್ಲಿ ಬಾಯಾಲುವ, ಮನದಲ್ಲಿ ಸತ್ತೆಹೆನೆಂಬ ಸಂದೇಹದವನಂತೆ ಸಾಯದೆ, ಹೊರಗಣ ಕ್ರೀ ಶುದ್ಭವಾಗಿ, ಒಳಗಳ ಆತ್ಮ ಶುದ್ಧವಾಗಿ, ಉಭಯ ಶುದ್ಧವಾಗಿಪ್ಪುದು ಪಂಚಾಚಾರ ನಿರುತ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಸರ್ವಾಂಗಭರಿತನು
--------------
ಅಕ್ಕಮ್ಮ
ಆತ್ಮ ತೇಜಕ್ಕೆ ಬೀಗಿ ಬೆರೆದು, ಶಾಸ್ತ್ರದ ಸಂತೋಷಕ್ಕೆ ಸಾಧ್ಯವಾದಿಹಿತೆಂದು, ವಚನದ ರಚನೆಗೆ ರಚಿಸಿದೆನೆಂದು, ತರ್ಕಕ್ಕೆ ಹೊತ್ತು ಹೋರುವನ್ನಕ್ಕರ ಗುರುವೆಂತಾದಿರೊ? ಘಟದ ಮಧ್ಯದಲ್ಲಿ ಪೂಜಿಸಿಕೊಂಬವನಾರೆಂದು ಅರಿಯದೆ, ಫಲವ ಹೊತ್ತಿರ್ಪ ಮರನಂತೆ, ಕ್ಷೀರವ ಹೊತ್ತಿರ್ಪ ಕೆಚ್ಚಲಂತೆ, ನಿನ್ನ ನೀನೆ ತಿಳಿದು ನೋಡಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಮಾತಿನಲ್ಲಿ ಬಲ್ಲೋತ್ತರವಂತರೆಲ್ಲರೂ ಆತನನರಿದುದಿಲ್ಲ ಆತ ಏತರೊಳಗೂ ಸಿಕ್ಕದ ಅಜಾತ ಶಂಭು. ಆತನ ನೀತಿಯನರಿವುದಕ್ಕೆ ಅಸುರ ಕರ್ಮವ ಬಿಟ್ಟು ವೇಷದಿಂದಾದ ಘಾತಕತನವನೊಲ್ಲದೆ ಭಕ್ತಿಯೆಂಬ ಆಶೆ ಕುರಿತು ಪೋಷಣವ ಹೊರೆಯದೆ ನಿಜ ತತ್ವದ ಆಶೆಯೇ ಸಾಕಾರವಾಗಿ ಅರಿದ ಆತ್ಮ ಕರಿಗೊಂಡಲ್ಲಿ ಹರಿಪ್ರಿಯ ಅಘೋರನಾಶನ ರಾಮನಾಥಾ.
--------------
ಗುಪ್ತ ಮಂಚಣ್ಣ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಂಗದಲ್ಲಿ ಲೀಯವಾಗಿ ತೋರುವುದೆಲ್ಲ ರೂಪೋ, ವಿರೂಪೋ ? ಎಂಬುದ ತಾನರಿತಲ್ಲಿ, ಅಂಗ ಅರಿಯಿತ್ತೋ, ಆತ್ಮ ಅರಿಯಿತ್ತೋ ? ಇಂತೀ ಉಭಯದ ಸಂದಣಿಯಲ್ಲಿ ಗೊಂದಳಗೊಳಲಾರದೆ, ಆರಾರೆಂದಂತೆ ಆರೈಕೆಯಲ್ಲಿದ್ದು ; ತಾನು ತಾನಾದವಂಗೆ ಮತ್ತೇನೂ ಎನಲಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಬರಡು ಕರೆವಾಗ ಈಯಿತ್ತೆ? ಆ ಕೊರಡು ಚಿಗುರುವಲ್ಲಿ ಹುಟ್ಟಿತ್ತೆ? ಆಗ ತೃಣ ನುಡಿವಲ್ಲಿ ಆತ್ಮ ಜೀವಿಸಿತ್ತೆ? ಆಗ ಕಾಷ್ಠವೇಷವೆದ್ದು ನಡೆವಲ್ಲಿ ಅರಿವು ಕರಿಗೊಂಡಿತ್ತೆ? ಇಂತಿವು ವಿಶ್ವಾಸದ ಹಾಹೆ. ಗುರುಚರದಲ್ಲಿ ಗುಣ, ಶಿವಲಿಂಗ ರೂಪಿನಲ್ಲಿ ಸಲಕ್ಷಣವನರಸಿದಲ್ಲಿಯೆ ಹೋಯಿತ್ತು ಭಕ್ತಿ. ಈ ಗುಣ ತಪ್ಪದೆಂದು ಸಾರಿತ್ತು ಡಂಗುರ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 61 ||
--------------
ದಾಸೋಹದ ಸಂಗಣ್ಣ
ಆತ್ಮ ತೇಜದಲ್ಲಿ ಪೂಜಿಸಿಕೊಂಬ ಹಿರಿಯರುಗಳೆಲ್ಲರೂ ಕೆಟ್ಟ ಕೇಡ ನೋಡಾ. ಅಂದಳ ಸತ್ತಿಗೆ ಕರಿ ತುರಗಂಗಳಿಂದ, ನಾನಾ ಭೂಷಣ ಸುಗಂಧ ಸುಖದಿಂದ ಮೆಚ್ಚಿ ಪೂಜಿಸಿಕೊಂಬ ಹಿರಿಯರೆಲ್ಲರೂ ಬೋಧನೆಯ ಹೇಳಿ ಬೋದ್ಥಿಸಿಕೊಂಡುಂಬ ಹಿರಿಯರುಗಳೆಲ್ಲರೂ ಹಿರಿಯರಲ್ಲದೆ ಕಿರಿಯರಾದವರಾರೂ ಇಲ್ಲ. ಇದುಕಾರಣ, ಅಂಧಕನ ಕೈಯ ಅಂಧಕ ಹಿಡಿದಂತೆ. ಹೆಣನ ಕಂಡಂಜುವಂಗೆ ರಣದ ಸುದ್ದಿಯೇಕೆ? ತನುಸುಖವ ಮೆಚ್ಚಿದ, ಗುರು ಮುಟ್ಟಿದ ಭಕ್ತಂಗೆ ನಿಶ್ಚಯ ಹೇಳಲಾಗಿ, ಅವನಿಗಿನ್ನೆತ್ತಣ ಮುಕ್ತಿಯೊ, ನಿಃಕಳಂಕ ಮಲ್ಲಿಕಾರ್ಜುನಾ?
--------------
ಮೋಳಿಗೆ ಮಾರಯ್ಯ
ಅಪರಸ್ಥಾನದಲ್ಲಿ ಆನಂದಬ್ರಹ್ಮವ ಭೇದ್ಥಿಸುವ ಪರಿಯೆಂತೋ? ಪೂರ್ವದಕ್ಷಿಣವೆಂಬ ದಿಕ್ಕುಗಳಲ್ಲಿ ಸಮನಿಸುವ ಆತ್ಮ ಅಂತರ್ಯಾತ್ಮ ಭೂತಾತ್ಮ ಸರ್ವಾತ್ಮ ಪರಮಾತ್ಮವೆಂಬ ಆತ್ಮ ಪಂಚಕಗಳೆಂಬವನು ಹಿಂದು ಮುಂದರಿಯದೆ, ಮುಂದು ಹಿಂದೆಂದರಿಯದೆ ಸಂಯೋಗದಲಿಕ್ಕಿ ಪ್ರಯೋಗಿಸಿಹೆನೆಂಬ ಯೋಗಿ ಕೇಳಾ; ಪೂರ್ವವಾವುದು? ದಕ್ಷಿಣವಾವುದು? ಪೂರ್ವದಲ್ಲಿ ದಿವಾಕರರು ಹನ್ನೆರಡರ ಆನಂದ ಪ್ರಭೆಯಲ್ಲಿ ಭವಿಸಲ್ಪಟ್ಟ ನಯನದ ಕಿರಣದ ಕೊನೆಯ ಮೊನೆಯ ಮೇಲೆ ದಿವ್ಯಾಂಗಯೋಗ ಸಮನಿಸುವ ಪರಿಯೆಂತು ಹೇಳಾ? ದಕ್ಷಿಣದಲ್ಲಿ ದಿಗ್ವಳಯ ಹದಿನಾಲ್ಕರ ವ್ಯಾಪ್ತಿಯ ಸಂಚರಿಸದೆ ಸಮನಿಸುವ ಕೋಹಂ ತತ್ವಾರ್ಥದಿಂದತ್ತ ನಾಹಂ ಪರಮಾರ್ಥದಿಂದತ್ತ ಸೋಹಂ ಸದ್ಭಕ್ತಿಯ ಮುಟ್ಟಿದ ದಾಸೋಹ ನಿನ್ನಲ್ಲಿ ಸಂಯೋಗವ ಎಂತು ಮಾಡುವೆ ಹೇಳಾ? ಯೋಗಿ ನೀನು ಯೋಗಕ್ಕೆ ಹರಿವಾವುದು? ಯೋಗಕ್ಕೆ ನೆಲೆ ಯಾವುದು? ಮತ್ತೆ ಪೆರತನರಿಯದೆ ಶಾಶ್ವತವು ನೀನೆ ನೀನೆ ಎಂದೆನ್ನು, ಸಕಲನಿಷ್ಕಲದೊಳಗೆ ನೀನೆ ನೀನೆಯೆನ್ನಾ ತಾತ್ಪರ್ಯವರ್ಮ ಕಳೆಗಳೊಳಗೆ ನೀನೆ ನೀನೆಯೆಂದೆನ್ನಾ. ಓಂ ಗ್ರಾಂ ಘ್ರೀಂ ಘ್ರೂಂ ಎಂಬಕ್ಷರ ಚತುಷ್ಟಯದ ಮೇಲೆ ಶುದ್ಧ ಸಂಯೋಗವೆಂಬ ಗದ್ದುಗೆಯಿಕ್ಕಿ ಅಕ್ಷರದ್ವಯದ ಆನಂದರಾಜ ಕುಳ್ಳಿದ್ದೆ ೈದಾನೆ ಜಪಿಸುತ. ಆ ಜಪವು ನಿತ್ಯ, ಅದು ಮುಕ್ತಿ, ಅದು ಸತ್ಯ. ಅದು ಪದಕ್ಕೆ ಫಲಕ್ಕೆ ಭವಕ್ಕೆ ದೂರ, ವರ್ಣಾಶ್ರಯವ ಮೀರಿತ್ತು ತತ್ವ ಪ್ರಾಪಂಚಿಕವ ಜರಿಯಿತ್ತು. ಮಂತ್ರಂಗಳ ಕೈಯಿಂದ ವಂದಿಸಿಕೊಂಡಿತ್ತು. ಮೂರರಲ್ಲಿ ಭವಿಸಿತ್ತು, ಆರರಲ್ಲಿ ಫಲವಾಯಿತ್ತು. ಮೂವತ್ತಾರರಲ್ಲಿ ಹಣಿತಿತ್ತು ಯೋಗಿಗಳ ನಡೆಸಿತ್ತು ತತ್ವಮಸಿ ಸಂಗಮವಾಯಿತ್ತು. ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆಂಬ ನಿತ್ಯದಲ್ಲಿ ನಿತ್ಯವಾಯಿತ್ತು.
--------------
ಸಿದ್ಧರಾಮೇಶ್ವರ
ಸಮ್ಮುಖ ಸಾಕಾರ ಹುಸಿಯೆಂಬುದ ತನುವಿಡಿದು ಕಂಡು, ತನು ಹುಸಿಯೆಂಬುದ ಮನದಲ್ಲಿ ಕಂಡು, ಮನ ಹುಸಿಯೆಂಬುದ ವಿವೇಕವಿಡಿದುಕಂಡು, ವಿವೇಕದ ಮುಂದೆ ಅವಿವೇಕವೆಂಬುದ ಆತ್ಮಜ್ಞಾನದಿಂದ ಕಂಡು, ಆತ್ಮ ಪರಮಾತ್ಮವೆಂಬ ಉಭಯ ಭಾವ ಭ್ರಾಂತಿಯೆಂದು ಕಂಡು, ಕಂಡಮಂಡಲ ಕಾರಣಮೂರ್ತಿ ತಾನೆಂದು ಮರೆದಿರುವ ಮಹಾಂತ ಕಾಣಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶ್ಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ : ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ-ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂದ್ಥಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಠಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗವೈಶ್ವರ್ಯನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂದ್ಥಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅನೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವಮಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಬ್ಥಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದ್ಯವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದ್ವೈತಾದ್ವೈತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತನಾಗಿ ಷಟ್‍ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ ಇಂತೀ ಭಾವನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡದು, ಸದ್ಭಕ್ತಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿರುವ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವೆಂತೆಂದಡೆ : ಶ್ರೀಮದನೇಕಲೋಕ-ವಿಸ್ತಾರಕ ಕಾರಣರೂಪ, ಸತ್ತಿಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿಸ್ವರೂಪ, ಪರತರ ಪರಬ್ರಹ್ಮಾನುಭಾವ ಸಾರ್ವಭೌಮ, ಷಟ್ಸ್ಥಲಸ್ಥಾಪನಾಚಾರ್ಯ, ಪಂಚಾಚಾರ ಪ್ರಮಥನಾಯಕ ಸರ್ವಾಚಾರ ನಿಷ್ಠಾಗರಿಷ್ಠ, ಲಿಂಗಲೋಲುಪ್ತ, ಲಿಂಗಭೋಗೋಪಭೋಗಿ, ಜಂಗಮಾನುಭಾವ, ಸದ್ಭಕ್ತ ಹೃನ್ಮಂದಿರವಾಸ, ನಿತ್ಯ ಕಲ್ಯಾಣೋತ್ಸಹಪೂರ್ಣಾವತರ್ಯ, ಲಿಂಗಲೀಲಾನಂದ, ಏಕವಿಂಶತಿಯುಗಸ್ಥಾಪನಾಚಾರ್ಯವರ್ಯ, ಮಂಜುಳಾಂತರಂಗ, ಮನುಮುನಿವಂದ್ಯ, ಪ್ರದಾಯಕ ತ್ರೈದಶಪರ್ವತಾದ್ಥೀಶ್ವರ, ಮದನಮರ್ದನ, ಮಾಯಾಕೋಲಾಹಲ, ಅಷ್ಟಾವರಣ ಸ್ವರೂಪ, ತ್ರಿವಿಧಾನುಗ್ರಹ ಪ್ರತಿಪಾದಕ, ತ್ರಿವಿಧ ಪಾದೋದಕ ಪ್ರಸಾದಲೋಲುಪ್ತ, ತ್ರಿವಿಧಾಚಾರಸನ್ಮೋಹಿ, ತ್ರಿಗುಣಾನಂದಭರಿತ, ತ್ರಿಮಲದೂರ, ನಿರ್ಮಲ-ನಿಃಕಳಂಕ-ನಿಃಶೂನ್ಯ-ನಿರಂಜನ, ಅನುಮಿಷಾರಾಧ್ಯ, ತ್ರಿವಿಧ ಲಿಂಗಾನುಭಾವ ಅಖಿಳಾಂಡ ಪ್ರತಿಷ್ಠಾಪ್ರದಾಯಕ, ಸದ್ಧರ್ಮಸ್ವರೂಪ, ಸತ್ಕ್ರಿಯಾ ಸಮ್ಯಜ್ಞಾನ ಸದಾಭರಿತ, ನಿತ್ಯ ತೃಪ್ತಾನಂದಮಂತ್ರಸ್ವರೂಪ, ಅನಂತಸೂರ್ಯಚಂದ್ರಾಗ್ನಿಪ್ರಕಾಶ, ಅಜ್ಞಾನ ತಿಮಿರಾಂಧಸ್ಯ, ಕಾರಣಾವತಾರ ಸರ್ವಜ್ಞ ಪ್ರದಾಯಕ, ಕಾಮಧೇನು-ಕಲ್ಪವೃಕ್ಷ, ಚಿಂತಾಮಣಿಗೆ ಮಾತೃಸ್ವರೂಪ, ವಾಚಾತೀತ-ವರ್ಣಾತೀತ-ಭಾವಾತೀತ-ಜ್ಞಾನಾತೀತ, ಚಿತ್ಕಲಾಸ್ವರೂಪ, ಅಯೋನಿಸಂಭವ, ಅಜಡಸ್ವರೂಪ, ಬತ್ತೀಶಕಳಾಮೂರ್ತಿ, ಜರೆಮರಣ ಸಂಸ್ಕøತಿದೂರ, ವರವೀರಶೈವಮತ ಸ್ಥಾಪನಾಚಾರ್ಯ, ನಿಜ ಶಿವಯೋಗಭರಿತಾನಂದಮೂರ್ತಿ, ಗುರುಮಾರ್ಗಾಚಾರ ಪ್ರತಿಷ್ಠಾಪ್ರದಾಯಕ, ಅನಾಚಾರ ಸಂಹಾರ, ಮಹಿಮಾಸ್ವರೂಪ, ಸದ್ಭಕ್ತಜಿಹ್ವಾಗ್ರ ಹೃನ್ಮಂದಿರಾವಾಸ. ಏಕವಿಂಶತಿ ದೀಕ್ಷಾಬೋಧಸ್ವರೂಪ, ಷಡ್ಗುಣೈಶ್ವರ್ಯ ಸಂಪತ್ಕರವನುಳ್ಳ ಮುಕ್ತಿಪ್ರದಾಯಕ, ಮೂಲಮಂತ್ರಮೂರ್ತಿ ಲೋಕಪಾವನಾರ್ಥ ಕೂಡಲಸಂಗಮೇಶ್ವರನ ಚಿದ್ಗರ್ಭೋದಯ ಬಸವದಂಡನಾಥ ಪ್ರಮಥಗಣಂಗಳ ಭಕ್ತಿಹಿತಾರ್ಥವಾಗಿ, ಅವತರಿಸಿದಂಥ ವಿರಾಣ್ಮೂರ್ತಿ! ಅನಾದಿಗಣೇಶ್ವರ, ಅನಾದಿಗಣೇಶ್ವರನ ಶಿಷ್ಯರು ಆದಿಗಣೇಶ್ವರ, ಆದಿಗಣೇಶ್ವರನ ಶಿಷ್ಯರು ನಿರ್ಮಾಯವೆಂಬ ಗಣೇಶ್ವರ, ನಿರ್ಮಾಯನೆಂಬ ಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ, ನಿರಂಜನನೆಂಬ ಗಣೇಶ್ವರನ ಶಿಷ್ಯರು ಜ್ಞಾನಾನಂದನೆಂಬ ಗಣೇಶ್ವರ, ಜ್ಞಾನಾನಂದನೆಂಬ ಗಣೇಶ್ವರನ ಶಿಷ್ಯರು ಆತ್ಮ ಗಣೇಶ್ವರ, ಆತ್ಮಗಣೇಶ್ವರನ ಶಿಷ್ಯರು ಆಧ್ಯಾತ್ಮ ಗಣೇಶ್ವರ, ಆಧ್ಯಾತ್ಮಗಣೇಶ್ವರನ ಶಿಷ್ಯರು ರುದ್ರನೆಂಬ ಗಣೇಶ್ವರ, ರುದ್ರನೆಂಬ ಗಣೇಶ್ವರನ ಶಿಷ್ಯರು ಬಸವಪ್ರಭುದೇವರು, ಬಸವಪ್ರಭುದೇವರ ಶಿಷ್ಯರು ಆದಿಲಿಂಗದೇವರು, ಆದಿಲಿಂಗದೇವರ ಶಿಷ್ಯರು ಚೆನ್ನವೀರೇಶ್ವರದೇವರು, ಚೆನ್ನವೀರೇಶ್ವರದೇವರ ಶಿಷ್ಯರು ಹರದನಹಳ್ಳಿ ಗೋಸಲದೇವರು, ಹರದನಹಳ್ಳಿ ಗೋಸಲದೇವರ ಶಿಷ್ಯರು ಶಂಕರದೇವರು, ಶಂಕರದೇವರ ಶಿಷ್ಯರು ದಿವ್ಯಲಿಂಗದೇವರು, ದಿವ್ಯಲಿಂಗದೇವರ ಶಿಷ್ಯರು ಚೆನ್ನಬಸವೇಶ್ವರದೇವರು, ಚೆನ್ನಬಸವೇಶ್ವರದೇವರ ಶಿಷ್ಯರು ತೋಂಟದ ಸಿದ್ಧೇಶ್ವರಸ್ವಾಮಿಗಳು, ತೋಂಟದ ಶಿದ್ಧೇಶ್ವರಸ್ವಾಮಿಗಳ ಸಿಷ್ಯರು ಮರುಳಸಿದ್ಧೇಶ್ವರಸ್ವಾಮಿಗಳು, ಮರುಳಸಿದ್ಧೇಶ್ವರಸ್ವಾಮಿಗಳ ಶಿಷ್ಯರು ರೇವಣಸಿದ್ಧೇಶ್ವರಸ್ವಾಮಿಗಳು, ರೇವಣಸಿದ್ಧೇಶ್ವರಸ್ವಾಮಿಗಳ ಶಿಷ್ಯರು ಶಿವಲಿಂಗೇಶ್ವರಸ್ವಾಮಿಗಳು, ಶಿವಲಿಂಗೇಶ್ವರಸ್ವಾಮಿಗಳ ಶಿಷ್ಯರು ನಿರಂಜನೇಶ್ವರಸ್ವಾಮಿಗಳು, ನಿರಂರನೇಶ್ವರಸ್ವಾಮಿಗಳ ಶಿಷ್ಯರು ಮರಿಬಸವಲಿಂಗೇಶ್ವರಸ್ವಾಮಿಗಳು, ಮರಿಬಸವಲಿಂಗೇಶ್ವರಸ್ವಾಮಿಗಳ ಶಿಷ್ಯರು ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳು, ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳ ಶಿಷ್ಯರು ಚೆನ್ನಮಲ್ಲೇಶ್ವರಸ್ವಾಮಿಗಳು ಚೆನ್ನಮಲ್ಲೇಶ್ವರಸ್ವಾಮಿಗಳ ಶಿಷ್ಯರು ಚೆನ್ನಂಜೇಶ್ವರಸ್ವಾಮಿಗಳು, ಚೆನ್ನಂಜೇಶ್ವರಸ್ವಾಮಿಗಳ ಶಿಷ್ಯರು ಗುರುಶಾಂತೇಶ್ವರಸ್ವಾಮಿಗಳು, ಗುರುಶಾಂತೇಶ್ವರಸ್ವಾಮಿಗಳ ಶಿಷ್ಯರು ಶಾಂತಮಲ್ಲಸ್ವಾಮಿಗಳು ಶಾಂತಮಲ್ಲಸ್ವಾಮಿಗಳ ಕರ-ಮನ-ಭಾವದಲ್ಲುದಯವಾದ ಗುರುಸಿದ್ಧಲಿಂಗ ನಾನಯ್ಯ. ಆ ಗುರುಸಿದ್ಧಲಿಂಗನ ಕರ-ಮನ-ಸುಭಾವದಲ್ಲಿ ಶರಣಗಣಂಗಳ ಶುದ್ಧಸಿದ್ಧಪ್ರಸಿದ್ಧ ಪ್ರಸಾದವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರ-ಮಂತ್ರ-ಧ್ಯಾನ- ಜಪ-ಸ್ತೋತ್ರ-ಮನೋರ್ಲಯ-ನಿರಂಜನ ಪೂಜೆಯ ಕೈಕೊಂಡು ಪ್ರಮಥಗಣಂಗಳ ಸ್ವಾನುಭಾವಸೂತ್ರವನೊಳಕೊಂಡು ಒಳಗು ಬೆಳಗನೆ ನುಂಗಿ ಬೆಳಗು ಒಳಗನೆ ನುಂಗಿ, ಛಳಿ ಮೋಹಕದ ಮಂಜು ನುಂಗಿದಂತೆ ಹಲವು ದೀಪವ ಬಯಲ ಗಾಳಿ ನುಂಗಿದ ತೆರದಿ ಕಳೆಯಳಿದ ಕೂಡಲಚೆನ್ನಸಂಗಯ್ಯನು. ಇಂತು ಚಿಕ್ಕದಂಡನಾಥ ಚೆನ್ನಬಸವೇಶ್ವರಸ್ವಾಮಿಗಳ ಪ್ರಸನ್ನಪ್ರಸಾದಕ್ಕೆ ಒಪ್ಪಿಗೆಯಾಗಿ ಈ ವಚನಾನುಭಾವಶಾಸ್ತ್ರವ ಕೈಕೊಂಡು ಸದ್ಭಕ್ತಶರಣಗಣಂಗಳಿಗೆ ಬೋದ್ಥಿಸಿ ಸಂಪೂರ್ಣವಮಾಡುವುದಕ್ಕೆ ಕರ್ತುಗಳಾಗಿ ಒಪ್ಪುತಿರ್ಪಿರಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಪೃಥ್ವಿಯ ವಂಶಿಕದಲ್ಲಿ ಆತ್ಮನು ಬಂದಿರಲಿಕ್ಕಾಗಿ ಗುಣಗಂಬ್ಥೀರದಲ್ಲಿ ಇದ್ದಿತೆಂಬರು. ಅಪ್ಪುವಿನಂಶಿಕದಲ್ಲಿ ಆತ್ಮನು ಬಂದಿರಲಿಕ್ಕಾಗಿ ಸರ್ವಸಾರಮಯವಾಗಿದ್ದಿತ್ತೆಂಬರು. ತೇಜದಂಶಿಕದಲ್ಲಿ ಆತ್ಮ ಬಂದಿರಲಿಕ್ಕಾಗಿ ಸರ್ವದೀಪ್ತವಾಗಿದ್ದಿತ್ತೆಂಬರು. ವಾಯುವಿನಂಶಿಕದಲ್ಲಿ ಆತ್ಮನು ಬಂದಿರಲಿಕ್ಕಾಗಿ ಸರ್ವಸಂಚಲಮಯವಾಗಿದ್ದಿತ್ತೆಂಬರು. ಆಕಾಶದಂಶದಲ್ಲಿ ಆತ್ಮನು ಬಂದಿರಲಿಕ್ಕಾಗಿ ಇಂತೀ ಐದು ಭೇದದಲ್ಲಿ ದಶವಾಯುವ ಕಲ್ಪಿಸಿಕೊಂಡು, ಹೆಸರ ರೂಹಿಟ್ಟು ಅಸುನಾಥನ ಒಡಗೂಡಬೇಕೆಂಬಲ್ಲಿ ಇದು ಸಂದಿಲ್ಲದ ಸಂಶಯ. ನಾನಾರು ಇದೇನೆಂಬುದು ಏಕೀಕರಿಸಿದಲ್ಲಿ ಸರ್ವೇಂದ್ರಿಯ ನಾಶನ, ಸದ್ಯೋಜಾತಲಿಂಗವನರಿವುದು ವಿನಾಶನ.
--------------
ಅವಸರದ ರೇಕಣ್ಣ
ಇನ್ನಷ್ಟು ... -->