ಅಥವಾ

ಒಟ್ಟು 116 ಕಡೆಗಳಲ್ಲಿ , 37 ವಚನಕಾರರು , 80 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ಆಧಾರ ಧಾರಣವೆಂತೆಂದಡೆ : ಪುಣ್ಯ-ಪಾಪ ಸ್ವರ್ಗ-ನರಕಾದಿಗಳಿಗೆ ಹೇತುಭೂತವಾಗಿಹ ಅನ್ನ ಪಾನಾದಿಗಳಂ ಬಿಟ್ಟು-ಸಿದ್ಧಾಸನದಲ್ಲಿ ಕುಳ್ಳಿರ್ದು, ಮೂಲಬಂಧ ಒಡ್ಡ್ಯಾಣಬಂಧ ಜಾಳಾಂದರಬಂಧಮಂ ಮಾಡಿ ಜಾಗ್ರ ಸ್ವಪ್ನ ಸುಷುಪ್ತಿ ತಲೆದೋರದೆ ಶಬ್ದ ಸ್ಪರ್ಶ ರೂಪ ರಸ ಗಂಧವೆಂಬ ಪಚೇಂದ್ರಿಯಂಗಳಲ್ಲಿ ಮನ ಪವನಮಂ ಸೂಸಲೀಯದೆ, ಏಕಾಗ್ರಚಿತ್ತನಾಗಿ ಮೂಲವಾಯುವಂ ಪಿಡಿದು ಆಕುಂಚನಂ ಮಾಡಿ, ಮೂಲಾಗ್ನಿಯನೆಬ್ಬಿಸಿ, ಆಧಾರಚಕ್ರ ಚತುರ್ದಳಪದ್ಮವ ಪೊಕ್ಕು ಸಾದ್ಥಿಸಿ, ಅಲ್ಲಿಹ ಮಂತ್ರ-ಪದ-ವರ್ಣ-ಭುವನ-ತತ್ವ-ಕಲೆಗಳಂ ಕಂಡು, ಅಲ್ಲಿ ಪಚ್ಚೆವರ್ಣವಾಗಿಹ ಜ್ಯೋತಿರ್ಮಯಲಿಂಗಮಂ ಬೆರಸಿ ಅಗ್ನಿಯಂ ಪಟುಮಾಡಿ, ಮನಮಂ ಏಕೀಕರಿಸಿ, ಅಲ್ಲಿಂದ ಮೇಲೆ ಸ್ವಾದ್ಥಿಷ್ಠಾನಚಕ್ರದ ಷಡುದಳಪದ್ಮವ ಪೊಕ್ಕನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭಕ್ತಿಯಾಚಾರದ ಪಥವಿಡಿದು ನಲಿನಲಿದುಲಿದಡೂ ಲಿಂಗಸಾಹಿತ್ಯವಿಲ್ಲ. ಮನವೆ ಲಿಂಗದಲ್ಲಿ ನೆಲೆಗೊಳಿಸುವೆನೆಂದು ಧ್ಯಾನಮೌನದಲ್ಲಿ ನಿಂತಡೂ ಲಿಂಗಸಾಹಿತ್ಯವಿಲ್ಲ. ಸರ್ವಪ್ರಪಂಚುಗಳು ವಾಯುವಿಂದ ತೋರುತ್ತಿರಲು ಆ ಪ್ರಪಂಚನಳಿದು ಲಿಂಗವನೊಡೆವೆರಸುವೆನೆಂದು ಶ್ವಾಸ ನಿಃಶ್ವಾಸಂಗಳ ಪಿಡಿದು ನಿಲಿಸಿದರೂ ಲಿಂಗಸಾಹಿತ್ಯವಿಲ್ಲ. ಸದ್ಭಕ್ತಿವೆತ್ತು ಭಾವಪ್ರಸಂಗದಿಂ ಕಂಗಳಂ ಕಳೆದು ಜಿಹ್ವೆಯಂ ಕೊಯಿದು ಶಿರವನರಿದು, ಹಸ್ತವನುತ್ತರಿಸಿತ್ತಡೂ ಲಿಂಗಸಾಹಿತ್ಯವಿಲ್ಲ. ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾಧಿ ಎಂಬ ಅಷ್ಟಾಂಗಯೋಗ ಘಟ್ಟಿಗೊಂಡು, ಪ್ರಾಣ ಮನ ಪವನ ಹುರಿಗೂಡಿ, ಆಧಾರ ಸ್ವಾಧಿಷ್ಠಾನ ಮಣಿಪೂರಕ ಅನಾಹತ ವಿಶುದ್ಧಿ ಆಜ್ಞೇಯವೆಂಬ ಷಡಾಧಾರದ ಬಳಿವಿಡಿದು, ನೆತ್ತಿಯಿಂದುತ್ತರಕ್ಕೆ ಉಚ್ಚಳಿಸಿ ಹಾಯಿದು, ನಡುನೆತ್ತಿ ತೂತಾದಡೂ ಲಿಂಗಸಾಹಿತ್ಯವಿಲ್ಲ. ಸತ್ಯ, ಸಮತೆ, ಸಮಾಧಾನ, ಸದ್ಭಾವ, ಸವಿರಕ್ತಿಯಿಂದತ್ಯಾನಂದ ತೋರುತ್ತಿರಲು ಅದು ನೆಲೆಗೊಂಡು ನಿಲ್ಲದಾಗಿ ಹೇಳದೆ ಬಂದು ಕೇಳದೆ ಹೋಯಿತ್ತು. ಸೌರಾಷ್ಟ್ರ ಸೋಮೇಶ್ವರನ ನಿಜವನರಿಯದೆ ಅನುಭವವ ಮಾಡಿ ಫಲವೇನಯ್ಯಾ ?
--------------
ಆದಯ್ಯ
ಲಲಾಟದೊಳಗಣ ಅಸ್ಥಿಯ ಬೆಳ್ಪು ವಿಭೂತಿ. ಚರ್ಮದೊಳಗಣ ಕೆಂಪು ಕಿಸುಕಾಶಾಂಬರ. ವ್ಯಾಕುಳವಿಲ್ಲದುದೆ ಲಾಕುಳ, ಮಹಾದೇವರ ನೆನೆವುದೆ ಆಧಾರ. ನಿರ್ಮೋಹತ್ವಂ ಚ ಕೌಪೀನಂ ನಿಸ್ಸಂಗತ್ವಂ ಚ ಮೇಖಳಂ | ಶಾಂತಿ ಯಜ್ಞೋಪವೀತಂ ಚ ಆಭರಣಂ ದಯಾಪರಂ | ಪಂಚೇಂದ್ರಿಯ ವೀಣಾದಂಡಂ ಪಂಚಮುದ್ರಾಃ ಪ್ರಕೀರ್ತಿತಂ | ಮಹಾಲಿಂಗ ಧ್ಯಾನಾಧಾರಂ ಶಿವಯೋಗಿ ಚ ಲಕ್ಷಣಂ | [ಎಂಬುದಾಗಿ], ತುರುಬಿನ ತಪಸಿಯ ಪೆರರೆತ್ತ ಬಲ್ಲರು ? ಸಕಳೇಶ್ವರದೇವಾ, ನೀನೆ ಬಲ್ಲೆ.
--------------
ಸಕಳೇಶ ಮಾದರಸ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಆಧಾರ ಸ್ವಾಧಿಷ್ಠಾನ ಮಣಿಪೂರಕ ವಿಶುದ್ಧಿ ಆಜ್ಞೇಯವ ನುಡಿದಡೇನು ಆದಿ ಅನಾದಿಯ ಸುದ್ದಿಯ ಕೇಳಿದಡೇನು ಹೇಳಿದಡೇನು ತನ್ನಲ್ಲಿದ್ದುದ ತಾನರಿಯದನ್ನಕ್ಕರ. ಉನ್ಮನಿಯ ರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.
--------------
ಅಕ್ಕಮಹಾದೇವಿ
ಬಚ್ಚಬರಿಯ ಬಯಲೊಳಗೊಂದು ಅಚ್ಚ ಅಂಕುರ ಹುಟ್ಟಿ ಅಣುಚಕ್ರವೆನಿಸಿತ್ತು. ಆ ಅಣುಚಕ್ರದಿಂದಾಯಿತ್ತು ಪಶ್ಚಿಮಚಕ್ರ. ಆ ಪಶ್ಚಿಮಚಕ್ರದಿಂದಾಯಿತ್ತು ಶಿಖಾಚಕ್ರ. ಆ ಶಿಖಾಚಕ್ರದಿಂದಾಯಿತ್ತು ಬ್ರಹ್ಮಚಕ್ರ. ಆ ಬ್ರಹ್ಮಚಕ್ರದಿಂದಾಯಿತ್ತು ಆಜ್ಞಾಚಕ್ರ. ಆ ಆಜ್ಞಾಚಕ್ರದಿಂದಾಯಿತ್ತು ವಿಶುದ್ಧಿಚಕ್ರ. ಆ ವಿಶುದ್ಧಿಚಕ್ರದಿಂದಾಯಿತ್ತು ಅನಾಹತಚಕ್ರ. ಆ ಅನಾಹತಚಕ್ರದಿಂದಾಯಿತ್ತು ಮಣಿಪೂರಕಚಕ್ರ. ಆ ಮಣಿಪೂರಕಚಕ್ರದಿಂದಾಯಿತ್ತು ಸ್ವಾದ್ಥಿಷ್ಠಾನಚಕ್ರ. ಆ ಸ್ವಾದ್ಥಿಷ್ಠಾನಚಕ್ರದಿಂದಾಯಿತ್ತು ಆಧಾರಚಕ್ರ. ಆ ಆಧಾರಚಕ್ರಕ್ಕೆ ಚತುರ್ದಳ. ಆ ಚತುರ್ದಳದಲ್ಲಿ ಚತುರಕ್ಷರಂಗಳು. ಆ ಚತುರಕ್ಷರಂಗಳ ಮಧ್ಯ ಬೀಜಾಕ್ಷರವೇ ನಕಾರಪ್ರಣವ. ಆ ನಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಆಚಾರಲಿಂಗ. ಅದರಿಂದ ಮೇಲೆ ಸ್ವಾದ್ಥಿಷ್ಠಾನಚಕ್ರವಿರ್ಪುದು. ಆ ಚಕ್ರಕ್ಕೆ ಷಡುದಳ. ಆ ಷಡುದಳಂಗಳಲ್ಲಿ ಷಡಕ್ಷರಂಗಳು. ಆ ಷಡಕ್ಷರಂಗಳ ಮಧ್ಯ ಬೀಜಾಕ್ಷರವೇ ಮಕಾರಪ್ರಣವ. ಆ ಮಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಗುರುಲಿಂಗ. ಅದರಿಂದ ಮೇಲೆ ಮಣಿಪೂರಕಚಕ್ರವಿರ್ಪುದು. ಆ ಚಕ್ರಕ್ಕೆ ದಶದಳ. ಆ ದಶದಳಂಗಳಲ್ಲಿ ದಶಾಕ್ಷರಂಗಳು. ಆ ದಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ಶಿಕಾರಪ್ರಣವ. ಆ ಶಿಕಾರ ಪ್ರಣವ ಪೀಠದ ಮೇಲೆ ಬೆಳಗುತಿರ್ಪುದು ಶಿವಲಿಂಗ. ಅದರಿಂದ ಮೇಲೆ ಅನಾಹತಚಕ್ರವಿರ್ಪುದು. ಆ ಚಕ್ರಕ್ಕೆ ದ್ವಾದಶದಳ. ಆ ದ್ವಾದಶದಳಂಗಳಲ್ಲಿ ದ್ವಾದಶಾಕ್ಷರಂಗಳು. ಆ ದ್ವಾದಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ವಕಾರಪ್ರಣವ. ಆ ವಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಜಂಗಮಲಿಂಗ. ಅದರಿಂದ ಮೇಲೆ ವಿಶುದ್ಧಿಚಕ್ರವಿರ್ಪುದು. ಆ ಚಕ್ರಕ್ಕೆ ಷೋಡಶದಳ. ಆ ಷೋಡಶದಳಂಗಳಲ್ಲಿ ಷೋಡಶಾಕ್ಷರಂಗಳು. ಆ ಷೋಡಶಾಕ್ಷರಂಗಳ ಮಧ್ಯ ಬೀಜಾಕ್ಷರವೇ ಯಕಾರಪ್ರಣವ. ಆ ಯಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಪ್ರಸಾದಲಿಂಗ. ಅದರಿಂದ ಮೇಲೆ ಆಜ್ಞಾಚಕ್ರವಿರ್ಪುದು. ಆ ಚಕ್ರಕ್ಕೆ ದ್ವಿದಳ. ಆ ದ್ವಿದಳಂಗಳಲ್ಲಿ ದ್ವಯಾಕ್ಷರಂಗಳು. ಆ ದ್ವಯಾಕ್ಷರಂಗಳ ಮಧ್ಯ ಬೀಜಾಕ್ಷರವೇ ಒಂಕಾರಪ್ರಣವ. ಆ ಓಂಕಾರಪ್ರಣವಪೀಠದ ಮೇಲೆ ಬೆಳಗುತಿರ್ಪುದು ಮಹಾಲಿಂಗ. ಅದರಿಂದ ಮೇಲೆ ಬ್ರಹ್ಮಚಕ್ರವಿರ್ಪುದು. ಆ ಚಕ್ರಕ್ಕೆ ಸಹಸ್ರದಳ. ಆ ಸಹಸ್ರದಳಂಗಳಲ್ಲಿ ಸಹಸ್ರಾಕ್ಷರಂಗಳು. ಆ ಸಹಸ್ರಾಕ್ಷರಂಗಳ ಮಧ್ಯ ಬೀಜಾಕ್ಷರವೇ ನಿಷ್ಕಲಪ್ರಣವ. ಆ ನಿಷ್ಕಲಪ್ರಣವಪೀಠದ ಮೇಲೆ ಬೆಳಗುತಿರ್ಪುದು ನಿಷ್ಕಲಲಿಂಗ. ಅದರಿಂದ ಮೇಲೆ ಶಿಖಾಚಕ್ರವಿರ್ಪುದು. ಆ ಚಕ್ರಕ್ಕೆ ತ್ರಿದಳ. ಆ ತ್ರಿದಳಂಗಳಲ್ಲಿ ತ್ರಯಾಕ್ಷರಂಗಳು. ಆ ತ್ರಯಾಕ್ಷರಂಗಳ ಮಧ್ಯ ಬೀಜಾಕ್ಷರವೇ ಶೂನ್ಯಪ್ರಣವ. ಆ ಶೂನ್ಯಪ್ರಣವಪೀಠದ ಮೇಲೆ ಬೆಳಗುತಿರ್ಪುದು ಶೂನ್ಯಲಿಂಗ. ಅದರಿಂದ ಮೇಲೆ ಪಶ್ಚಿಮಚಕ್ರವಿರ್ಪುದು. ಆ ಚಕ್ರಕ್ಕೆ ಏಕದಳ. ಆ ಏಕದಳದಲ್ಲಿ ಸರ್ವರಂಜನೆಯನೊಳಕೊಂಡು ವಾಚಾತೀತವೆನಿಸುವ ನಿರಂಜನಪ್ರಣವ. ಆ ನಿರಂಜನ ಪ್ರಣವಪೀಠದ ಮೇಲೆ ಬೆಳಗುತಿರ್ಪುದು ನಿರಂಜನಲಿಂಗ. ಇಂತೀ ತರುವಾಯದಿಂದೆ ಆಧಾರ ಸ್ವಾದ್ಥಿಷ್ಠಾನದಲ್ಲಿ ಲಯ, ಆ ಸ್ವಾದ್ಥಿಷ್ಠಾನ ಮಣಿಪೂರಕದಲ್ಲಿ ಲಯ. ಆ ಮಣಿಪೂರಕ ಅನಾಹತದಲ್ಲಿ ಲಯ. ಆ ಅನಾಹತ ವಿಶುದ್ಧಿಯಲ್ಲಿ ಲಯ. ಆ ವಿಶುದ್ಧಿ ಆಜ್ಞೆಯಲ್ಲಿ ಲಯ. ಆ ಆಜ್ಞೆ ಬ್ರಹ್ಮಚಕ್ರದಲ್ಲಿ ಲಯ. ಆ ಬ್ರಹ್ಮಚಕ್ರ ಶಿಖಾಚಕ್ರದಲ್ಲಿ ಲಯ. ಆ ಶಿಖಾಚಕ್ರ ಪಶ್ಚಿಮಚಕ್ರದಲ್ಲಿ ಲಯ. ಆ ಪಶ್ಚಿಮಚಕ್ರ ಅಣುಚಕ್ರದಲ್ಲಿ ಲಯ. ಆ ಅಣುಚಕ್ರ ನಿರವಯಲಲ್ಲಿ ಲಯ. ಆ ನಿರವಯಲು ನಿಜವ ಕೂಡಿ ಸಹಜವಾದಲ್ಲಿ ಅಖಂಡೇಶ್ವರನೆಂಬ ಶಬ್ದ ಮುಗ್ಧವಾಯಿತ್ತು.
--------------
ಷಣ್ಮುಖಸ್ವಾಮಿ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪಂಚವರ್ಣದಬಿಂದು ಪ್ರಪಂಚವನಳಿದುಳಿದಿರಲು, ಸಂಚರಿಸುವಡೆ ಆವೆಡೆಯೂ ಇಲ್ಲ. ನಿಂದ ಚಿತ್ತಿನ ಪ್ರಭೆ ಅಂಗವನು ನೆರೆ ನುಂಗೆ, ಹಿಂದು ಮುಂದು ಎಡಬಲನೆಂಬುದಿಲ್ಲ ! ಅಡಿಯಾಕಾಶವೆಂಬುದಿಲ್ಲ ಕೆಳಗೆ ನಿಲಲು, ಆಧಾರ ಮೊದಲಿಂಗಿಲ್ಲ ಕಡೆಗೆ ಸಾರುವೆನೆನಲು ಊಧ್ರ್ವವಿಲ್ಲ. ನಡುವೆ ನಾನಿದ್ದಿಹೆನೆಂದಡೆ, ತನ್ನೊಡಲೊಳಗೆ ಒಡೆದು ಮೂಡಿತ್ತು ತನ್ನಂತೆ ಬಯಲು ! ಈ ಬೆಡಗು ಬಿನ್ನಾಣವ ಬಡವರರಿವರೆ ? ಇದನರಿದು ನುಡಿದು ತೋರಿದನು ಗುಹೇಶ್ವರನ ಶರಣ ಚನ್ನಬಸವಣ್ಣನು.
--------------
ಅಲ್ಲಮಪ್ರಭುದೇವರು
ಆಧಾರ ಸ್ವಾದ್ಥಿಷ್ಠಾನ ಮಣಿಪೂರಕಸ್ಥಾನವರಿಯರು. ಅಷ್ಟದಳ ಕಮಲದಲ್ಲಿ ಸೂಕ್ಮ ನಾಳವೈದುವದೆ? ಇನ್ನೇನನರಿವರಾರೊ? ಬೇರೆ ಮತ್ತೆ ಅರಿಯಲುಂಟೆ ಹೇಳಾ? ಸಹಸ್ರದಳಕಮಲದ ಬ್ರಹ್ಮರಂಧ್ರದಲ್ಲಿಪ್ಪ ಅಮೃತಸ್ವರವನರಿದು, ಹಿಡಿದುಕೊಂಬುದು, ಅರಿದು!_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಮತ್ತಮೆರಡನೆಯ ಮೂಲಪ್ರಸಾದಮೆಂತೆನೆ- ಯಗ್ನಿಮಂಡಲ ಸ್ಥಿತಿಮಾರ್ಗದೊಳಗಣ ಮೊದಲ ಸಾತ್ವಿಕವರ್ಗದಲ್ಲಿ ಪ್ರದಕ್ಷಿಣೆಯಂ ಪೂರ್ವಾದಿ ದಳನ್ಯಸ್ತ ಲಿಪಿಗಳಾರನೆಯಕ್ಕರಮಂ ಚಂದ್ರಮಂಡಲದ ಸ್ಥಿತಿಮಾರ್ಗದೆರಡನೆಯ ರಾಜಸರ್ವನ್ಯಸ್ತ ಸ್ವರಾಕ್ಷರಂಗಳ ಪದಿಮೂರನೆಯದರ ಕಡೆಯಕ್ಕರಮುಮಂ ಪಂಚಮಮಾದ ಸಾಂತದಲ್ಲಿ ಬೆರಸಿ ಹ್ರೌವೆನಿಸಿತ್ತಾ ಹ್ರೌಗೆ ಆಧಾರ ಶಕ್ತಿ ಕಾರ್ಯ ಪರ ಬಿಂದುಗಳೆಂದೈವೆಸರಾದುದು. ಸಕಾರಮಾ ಬಿಂದುವೆ ಶೂನ್ಯಮದೆ ಸೊನ್ನೆಯು. ಆ ಸೊನ್ನೆಯನೊಂದಿ ಹ್ರೌಮೆನಲೊಡಂ ಮತ್ತೊಂದು ತೆರದಿನಾಧಾರಾಧೇಯ ಶಿವಶಕ್ತಿ ಕಾರ್ಯಕಾರಣ ಪರಾಪರ ನಾದಬಿಂದುಗಳೆಂದು ಜೋಡು ಜೋಡುವೆಸರಪ್ಪುದರಿಂದೆಯುಂ ಶಕ್ತಿಯೆನೆ ಬಿಂದು, ಬಿಂದುವೆನೆ ಸೊನ್ನೆಯು. ಸೊನ್ನೆವೆರೆದು ಹ್ರೌವೆಂಬಕ್ಕರವೆ ಹ್ರೌಮೆಂದು ಶಿವಮಂತ್ರವಾಯಿತ್ತದೆ ಮೂಲಪ್ರಸಾದವೆಂದು ನಿರವಿಸಿದೆಯಯ್ಯಾ, ಪರಾತ್ಪರ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮಂತ್ರ ಭಿನ್ನವಾಯಿತ್ತೆಂದು ಕಂಥೆಯ ಬಿಡುವರೆ ಅರಿವುಳ್ಳವರು ? ಅದು ದ್ವೇಷವಲ್ಲದೆ ಅರಿವಿಂಗೆ ಸಂಬಂಧವಲ್ಲ. ಮಂತ್ರಮಧ್ಯೇ ಭವೇಲ್ಲಿಂಗಂ ಲಿಂಗಮಧ್ಯೇ ಭವೇನ್ಮಂತ್ರಂ ಮಂತ್ರಲಿಂಗದ್ವಯೋರೈಕ್ಯಂ ಇಷ್ಟಲಿಂಗಂತು ಶಾಂಕರಿ || ' ಎಂದುದಾಗಿ, ಆ ಮಂತ್ರ ಸರ್ವರ ಆಧಾರ, ಸರ್ವರ ಆತ್ಮಬೀಜವೆಂದರಿಯದೆ ಕೇಸರಿಯ ಕನಸ ಕಂಡ ವಾರಣದಂತೆ, ಈ ಭಾಷೆಹೀನರಿಗೇಕೆ ಶಂಭುಜಕ್ಕೇಶ್ವರನು ?
--------------
ಸತ್ಯಕ್ಕ
ಬ್ರಹ್ಮಮೂರ್ತಿಗೂ ಶಿಲೆ ಒಂದೆ, ವಿಷ್ಣು ಮೂರ್ತಿಗೂ ಶಿಲೆ ಒಂದೆ, ರುದ್ರಮೂರ್ತಿಗೂ ಶಿಲೆ ಒಂದೆ, ರೂಪಿನ ಅವತಾರ ಬ್ಥಿನ್ನವಾಯಿತ್ತು, ಸ್ಥೂಲ ಸೂಕ್ಷ್ಮ ಕಾರಣದಂತೆ, ಕುಂಭ ಜಲ ಬಿಂಬದಂತೆ, ಇನ್ನಾರನಹುದೆಂಬೆ, ಇನ್ನಾರನಲ್ಲಾ ಎಂಬೆ ? ಬ್ರಹ್ಮ ಕಾಲು, ವಿಷ್ಣು ಕೈ, ರುದ್ರ ಕಣ್ಣು, ಈಶ್ವರ ತಲೆ, ಸದಾಶಿವ ಪ್ರಾಣವಾದಲ್ಲಿ ಇವು ಸಮಯ. ಈ ಪಂಚಕೋಶಕ್ಕೆ ಆಧಾರ ಪರಮಜ್ಞಾನ. ಅದ ಭೇದಿಸಲರಿಯದೆ ವಾದವ ಮಾಡಿದರೆಲ್ಲರು. ನಾದ ಬಿಂದು ಕಳೆ ಅತೀತನರಿ, ಅಲೇಖನಾದ ಶೂನ್ಯ ಕಲ್ಲಿನೊಳಗಾದವನ.
--------------
ವಚನಭಂಡಾರಿ ಶಾಂತರಸ
ಭಕ್ತರಾಗಿದ್ದವರು ಭಕ್ತರ ವಿರಕ್ತರ ಮಿಥ್ಯದಿಂದ ನುಡಿವುದು ಸತ್ಯವಲ್ಲ. ಮಿಥ್ಯವನಳಿದು ಸತ್ಯವ ಕುರಿತು ಭಕ್ತ ಜಂಗಮಕ್ಕೆ ತತ್ತ್ವದ ಬಟ್ಟೆಯ ಹೇಳಿದಲ್ಲಿ ನಿತ್ಯ ಅನಿತ್ಯವ ತಿಳಿಯಬೇಕು. ಇದು ಸುಚಿತ್ತದ ಭಾವ. ತನ್ನ ವಂಶ ಕೆಟ್ಟಡೆ ತನಗಲ್ಲದೆ ಅನ್ಯರಿಗಿಲ್ಲ. ಇದು ಕಾರಣದಲ್ಲಿ ತನ್ನಂಗದ ಗಾಯದ ನೋವು ತನಗೆ ಅನ್ಯ ಬ್ಥಿನ್ನವಿಲ್ಲದೆ ತೋರುವವೊಲು ಇದು ನನ್ನಿಯ ನುಡಿದೆ ನೈಸಲ್ಲದೆ ಸಮರಸದ ಸನ್ನರ್ಧನಲ್ಲ. ನೀವಾಡಿಸುವ ಯಂತ್ರದ ತಂತ್ರವಲ್ಲದೆ ಸ್ವತಂತ್ರಿಯಲ್ಲ. ಎನಗೆ ಇದಿರನಾಡೆ ನಾ ಮಾಡುವ ಭಕ್ತಿ ಸತ್ಯ ಸುಚಿತ್ತದ ನಿತ್ಯವಲ್ಲ. ಮೊತ್ತದ ಕರಣಂಗಳ ನಡುವೆ ಸಿಕ್ಕಿ ಮತ್ತನಾಗಿ ಬಿದ್ದವಂಗೆ ವಸ್ತುವಿನ ಬಟ್ಟೆಯ ತೋರಿ ಮುಕ್ತಿಪಥದಲ್ಲಿ ನಿಲುವ ನಿಚ್ಚಣಿಕೆಯನಿಕ್ಕಿ ತೋರಿದ ಭಕ್ತ ದೇಹಿಕ ನಿಜಪದ ತತ್ವ ಸ್ವರೂಪ. ಸಕಲ ಜೀವದ ಆಧಾರ, ಸಕಲಮಯ ಅಖಿಳ ಬ್ರಹ್ಮಾಂಡ ಕರಂಡ ತಮರಿಪು ಕೋದಂಡ, ಶಕ್ತಿಮಯ ಚಂಡಿಕಾ ಕಿರಣದಶ ಉದಕಭರಿತ, ಭಕ್ತಿಭಂಡಾರಿ ಬಸವೇಶ್ವರನ ನಿಜತತ್ವದ್ವಯ ಪಾದಂಗಳಿಗೆ ಮಂಡಿತಮಯನಾಗೆರಗಿದೆ ಸಂದೇಹವೆಂಬ ಕರಂಡವ ಬಂದ ಪ್ರಮಥರ ಸತಿ ಸಂದ ಪ್ರಮಥರ ಡಿಂಗರಿಗ ಗುಪ್ತಮಂಚನ ನಿತ್ಯನೇಮ ಸಂದಿತ್ತು. ವೀರದಾಸನ ದಾಸೋಹ ಸೋಹಂ ಎನುತಿದ್ದಿತ್ತು. ನಾರಾಯಣ ನಯನ ಪೂಜಿತಪದಾಂಬುಜ ವಿಮಲ ಕಮಲ ಸುಲಲಿತ ರಾಮೇಶ್ವರಲಿಂಗ ಎನ್ನೊಳಗಾದಾ.
--------------
ಗುಪ್ತ ಮಂಚಣ್ಣ
ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞಾ, ಬ್ರಹ್ಮರಂಧ್ರ, ಶಿಖಾ, ಪಶ್ಚಿಮವೆಂಬ ನವಚಕ್ರಸ್ಥಾನವ ಗುದ ಗುಹ್ಯ ನಾಬ್ಥಿ ಹೃದಯ ಕಂಠ ಉತ್ತಮಾಂಗ ಅಳ್ಳನೆತ್ತಿ ನಡುನೆತ್ತಿ ಹಿಂಭಾಗದ ಕಳ್ಳಕುಣಿಕೆಯೆಂದು ಪೇಳುವಿರಿ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗ ಇರ್ಪುದೇ? ಇಲ್ಲ. ಮತ್ತಂ, ಬಲ್ಲಾದರೆ ಪೇಳಿರಿ, ಇಲ್ಲವಾದರೆ ನಮ್ಮ ಶಿವಗಣಂಗಳ ಕೇಳಿರಿ. ಅದೆಂತೆಂದಡೆ : ಆಧಾರಚಕ್ರವೆಂಬುದೇ ಘ್ರಾಣ. ಸ್ವಾದ್ಥಿಷ್ಠಾನಚಕ್ರವೆಂಬುದೇ ಜಿಹ್ವೆಸ್ಥಾನ. ಮಣಿಪೂರಕಚಕ್ರವೆಂಬುದೇ ನೇತ್ರಸ್ಥಾನ. ಅನಾಹತಚಕ್ರವೆಂಬುದೇ ತ್ವಕ್ಕಿನಸ್ಥಾನ. ವಿಶುದ್ಧಿಚಕ್ರವೆಂಬುದೇ ಕರ್ಣಸ್ಥಾನ. ಆಜ್ಞಾಚಕ್ರವೆಂಬುದೇ ಹೃದಯಸ್ಥಾನ. ಬ್ರಹ್ಮಸ್ಥಾನವೆಂಬುದೇ ಕರಸ್ಥಲ. ಶಿಖಾಸ್ಥಾನವೆಂಬುದೇ ಮನಸ್ಥಲ. ಪಶ್ಚಿಮಸ್ಥಾನವೆಂಬುದೇ ಪ್ರಾಣಸ್ಥಲ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗವು ಸಂಬಂಧವಾಗಿರುವುದಲ್ಲದೆ ಅಂತಪ್ಪ ಜಡದೇಹಿ ನವಸ್ಥಾನದ ಮಾಂಸರಕ್ತದಲ್ಲಿ ಪರಶಿವಲಿಂಗವು ಇರ್ಪುದೆ? ಇಲ್ಲ. ಅದೇನು ಕಾರಣವೆಂದಡೆ : ಘ್ರಾಣದಲ್ಲಿ ಆಚಾರಲಿಂಗಸ್ವಾಯತವಿಲ್ಲದೆ ಗಂಧ ದುರ್ಗಂಧ ಮೊದಲಾದ ಆವ ಗಂಧದ ವಾಸನೆಯು ತಿಳಿಯದು. ಜಿಹ್ವೆಯಲ್ಲಿ ಗುರುಲಿಂಗಸ್ವಾಯತವಿಲ್ಲದೆ ಸವಿ ಕಹಿ ಮೊದಲಾದ ಆವ ರುಚಿಸ್ವಾದವು ತಿಳಿಯದು. ನೇತ್ರದಲ್ಲಿ ಶಿವಲಿಂಗಸ್ವಾಯತವಿಲ್ಲದೆ ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ ಮೊದಲಾದ ಷಡ್ವರ್ಗದ ರೂಪು ಲಕ್ಷಣ ತಿಳಿಯದು. ತ್ವಕ್ಕಿನಲ್ಲಿ ಜಂಗಮಲಿಂಗಸ್ವಾಯತವಿಲ್ಲದೆ ಮೃದು ಕಠಿಣ ಮೊದಲಾದ ಆವ ಸುಖವು ತಿಳಿಯದು. ಶ್ರೋತ್ರದಲ್ಲಿ ಪ್ರಸಾದಲಿಂಗಸ್ವಾಯತವಿಲ್ಲದೆ ಸುಸ್ವರ ಅಪಸ್ವರ ಮೊದಲಾದ ಆವ ಸ್ವರಲಕ್ಷಣವು ತಿಳಿಯದು. ಹೃದಯದಲ್ಲಿ ಮಹಾಲಿಂಗಸ್ವಾಯತವಿಲ್ಲದೆ ಷಡಿಂದ್ರಿಸುಖತೃಪ್ತಿ ಮೊದಲಾದ ಸಕಲೇಂದ್ರಿಯ ಸುಖತೃಪ್ತಿ ಸಂತೋಷವು ತಿಳಿಯದು. ಕರಸ್ಥಲದಲ್ಲಿ ನಿರಾಕಾರವಾದ ನಿಷ್ಕಲಲಿಂಗವೆಂಬ ಇಷ್ಟಲಿಂಗ ಸ್ವಾಯತವಿಲ್ಲದೆ ಷಡ್ವಿಧಾಂಗದಲ್ಲಿ ಷಡ್ವಿಧಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಮನದಲ್ಲಿ ಶೂನ್ಯಲಿಂಗವೆಂಬ ಪ್ರಾಣಲಿಂಗಸ್ವಾಯತವಿಲ್ಲದೆ ಸರ್ವೇಂದ್ರಿಯಲ್ಲಿ ಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಪ್ರಾಣವೆಂಬಾತ್ಮನಲ್ಲಿ ಭಾವಲಿಂಗಸ್ವಾಯತವಿಲ್ಲದೆ ಸರ್ವಾಂಗಲಿಂಗಮಯ ಪರವಸ್ತುಸ್ವರೂಪ ತಾನೆಂದು ತಿಳಿಯದು. ಇಂತಪ್ಪ ವಿಚಾರವನು ತಿಳಿಯಬಲ್ಲಾತನೇ ಅನಾದಿಶರಣನು. ಅಂತಪ್ಪ ಪರಶಿವಲಿಂಗದ ಸ್ವಾಯತಸಂಬಂಧವಾದ ಭೇದವ ತಿಳಿಯದೆ ಅಂಗಭಾವ ಮುಂದುಗೊಂಡು ಇರ್ಪಾತನೇ ಭವಭಾರಿಕನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನು ಆ ಆದಿ ಉಕಾರ ಪ್ರಣವ, ಆದಿ ಮಕಾರ ಪ್ರಣವ, ಆದಿ ಅಕಾರಪ್ರಣವ- ಈ ಮೂರು ಪ್ರಣವಂಗಳು ಸಂಯುಕ್ತವಾಗಿ, ಅಖಂಡ ಮಹಾಜ್ಯೋತಿರ್ಮಯವಾಗಿಹ ಪರಮೋಂಕಾರ ಉತ್ಪತ್ಯವಾಯಿತ್ತು. ಅದೆಂತೆಂದೊಡೆ : ಆ ಆದಿ ಉಕಾರಪ್ರಣವ, ಆದಿ ಮಕಾರಪ್ರಣವ, ಆದಿ ಅಕಾರಪ್ರಣವ-ಈ ಮೂರು ಬೀಜಾಕ್ಷರ. ಆದಿ ಉಕಾರಪ್ರಣವವೇ ಆದಿ ಬಿಂದುಪ್ರಣವ. ಆದಿ ಮಕಾರಪ್ರಣವವೇ ಆದಿ ಕಲಾಪ್ರಣವ. ಆದಿ ಅಕಾರಪ್ರಣವವೇ ಆದಿ ನಾದಪ್ರಣವ. ಆದಿ ಉಕಾರಪ್ರಣವವೇ ಸ್ವಯಂಭುಲಿಂಗ. ಆದಿ ಮಕಾರಪ್ರಣವವೇ ಶಿವತತ್ವ. ಆದಿ ಅಕಾರಪ್ರಣವವೇ ಗುರುತತ್ವ. ಇದಕ್ಕೆ ಈಶ್ವರ ಉವಾಚ : ``ಅಕಾರಂ ಗುರುತತ್ವಂ ಚ ಉಕಾರಂ ಲಿಂಗತತ್ವಕಂ | ಮಕಾರಂ ಶಿವತತ್ವಂ ಚ ಇತಿ ಭೇದೋ ವರಾನನೇ || '' ಇಂತೆಂದುದಾಗಿ, ಆ ಆದಿ ಉಕಾರಪ್ರಣವಕ್ಕೆ ಆದಿ ಬಿಂದುಪ್ರಣವವೇ ಆಧಾರ. ಆದಿ ಮಕಾರಪ್ರಣವಕ್ಕೆ ಆದಿ ಕಲಾಪ್ರಣವವೇ ಆಧಾರ. ಆದಿ ಅಕಾರಪ್ರಣವಕ್ಕೆ ಆದಿ ನಾದಪ್ರಣವವೇ ಆಧಾರ. ಆ ಆದಿ ಬಿಂದುಪ್ರಣವ, ಆದಿ ಕಲಾಪ್ರಣವ, ಆದಿ ನಾದಪ್ರಣವಕ್ಕೆ ಆ ಆದಿ ಪ್ರಕೃತಿಪ್ರಣವಕ್ಕೆ ಆ ಆದಿ ಪ್ರಾಣಮಾತ್ರೆಪ್ರಣವವೆ ಆಧಾರ. ಆ ಪ್ರಾಣಮಾತ್ರೆಪ್ರಣವಕ್ಕೆ ಅಖಂಡ ಮಹಾಜ್ಯೋತಿರ್ಮಯ ಲಿಂಗವೇ ಆಧಾರ. ಉ ಎಂಬ ಆದಿಬಿಂದುಪ್ರಣವವು, ಮ ಎಂಬ ಆದಿಕಲಾಪ್ರಣವವು [ಅಎಂಬ ಆದಿ ನಾದಪ್ರಣವವು] ಸಂಯುಕ್ತವಾಗಿ ಅಖಂಡ ಮಹಾಜ್ಯೋತಿರ್ಮಯವಾಗಿಹ ಪರಮೋಂಕಾರವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->