ಅಥವಾ

ಒಟ್ಟು 259 ಕಡೆಗಳಲ್ಲಿ , 62 ವಚನಕಾರರು , 204 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ವ್ರತ ನೇಮವ ಹಿಡಿದಡೂ ಆ ವ್ರತ ನೇಮದ ಭಾವಶುದ್ಧವಾಗಿರಬೇಕು. ಅಸಿ ಕೃಷಿ ಯಾಚಕ ವಾಣಿಜ್ಯತ್ವದಿಂದ ಬಂದ ದ್ರವ್ಯಂಗಳಲ್ಲಿ ಬಾಹ್ಯದ ಬಳಕೆ ಅಂತರಂಗದ ನಿರಿಗೆ ಉಭಯ ಶುದ್ಧವಾಗಿಪ್ಪ ಭಕ್ತನಂಗವೆ ಏಲೇಶ್ವರಲಿಂಗದಂಗ.
--------------
ಏಲೇಶ್ವರ ಕೇತಯ್ಯ
ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ, ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ. ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ. ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ. ಅದೆಂತೆಂದಡೆ, ಶಿವಧರ್ಮೇ- ``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ | ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ | ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||'' ಎಂದುದಾಗಿ, ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆ ನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮೆಲ್ಲಮೆಲ್ಲನೆ ಭಕ್ತ, ಮೆಲ್ಲಮೆಲ್ಲನೆ ಮಾಹೇಶ್ವರ, ಮೆಲ್ಲಮೆಲ್ಲನೆ ಪ್ರಸಾದಿ, ಮೆಲ್ಲಮೆಲ್ಲನೆ ಪ್ರಾಣಲಿಂಗಿ, ಮೆಲ್ಲಮೆಲ್ಲನೆ ಶರಣ, ಮೆಲ್ಲಮೆಲ್ಲನೆ ಐಕ್ಯರಾದೆವೆಂಬರು_ ನಿಮ್ಮ ಶರಣರು ತಾವೇನು ಮರುಜವಣಿಯ ಕೊಂಡರೆ ? ಅಮೃತಸೇವನೆಯ ಮಾಡಿದರೆ ? ಆವ ಸ್ಥಲದಲ್ಲಿ ನಿಂದರೂ ಆ ಸ್ಥಲದಲ್ಲಿ ಷಡುಸ್ಥಲ ಅಳವಡದಿದ್ದರೆ, ಆ ಭಕ್ತಿಯ ಬಾಯಲ್ಲಿ ಹುಡಿಯ ಹೊಯ್ದು ಹೋಗುವೆನೆಂದ ಕೂಡಲಚೆನ್ನಸಂಗಮದೇವರ
--------------
ಚನ್ನಬಸವಣ್ಣ
ಶಾಂಭವಲೋಕದ ಕುಂಬ್ಥಿನಿಯುದರದ ಮೇಲೆ ಅಂಗನೆ ಅರುದಿಂಗಳ ಹಡೆದಳು ನೋಡಾ. ಅರುದಿಂಗಳ ಅದಾರನೂ ಅರಿಯದೆ ನಿರ್ವಯಲನೆ ಅರಿವುತ್ತರಿವುತ್ತ ಬೆರಗಾಗಲು ಕುಂಬ್ಥಿನಿಯುದರದಂಗನೆ ಸತ್ತುದ ಕಂಡು ಇಹಲೋಕ ಪರಲೋಕ ಆವ ಲೋಕವ ಹೊಗದೆ ಲೋಕಶ್ರೇಷ್ಠವಲ್ಲವೆಂದು ದೇಹವಿಲ್ಲದ ದೇವನ ಉದರವ ಬಗೆದು ಹೊಕ್ಕು ಅಗಣಿತನಪ್ರಮಾಣನಾದ ಲಿಂಗೈಕ್ಯಂಗೆ ನಮೋ ನಮೋಯೆಂದು ಬದುಕಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಜಾತಿವಿಡಿದು ಜಂಗಮವ ಮಾಡಬೇಕೆಂಬ ಪಾತಕರು ನೀವು ಕೇಳಿರೊ: ಜಾತಿ ಘನವೊ ಗುರುದೀಕ್ಷೆ ಘನವೊ ? ಜಾತಿ ಘನವಾದ ಬಳಿಕ, ಆ ಜಾತಿಯೆ ಗುರುವಾಗಿರಬೇಕಲ್ಲದೆ ಗುರುದೀಕ್ಷೆ ಪಡೆದು, ಗುರುಕರಜಾತರಾಗಿ ಜಾತಕವ ಕಳೆದು ಪುನರ್ಜಾತರಾದೆವೆಂಬುದ ಏತಕ್ಕೆ ಬೊಗಳುವಿರೊ ? ಜಾತಿವಿಡಿದು ಕಳೆಯಿತ್ತೆ ಜಾತಿತಮವು ? ಅಜಾತಂಗೆ ಆವುದು ಕುಲಳ ಆವ ಕುಲವಾದಡೇನು ದೇವನೊಲಿದಾತನೆ ಕುಲಜ. ಅದೆಂತೆಂದಡೆ; ದೀಯತೇ ಜಾÕನಸಂಬಂಧಃ ಕ್ಷೀಯತೇ ಚ ಮಲತ್ರಯಂ ದೀಯತೇ ಕ್ಷೀಯತೇ ಯೇನ ಸಾ ದೀಕ್ಷೇತಿ ನಿಗದ್ಯತೇ ಎಂಬುದನರಿದು, ಜಾತಿ ನಾಲ್ಕುವಿಡಿದು ಬಂದ ಜಂಗಮವೇ ಶ್ರೇಷ್ಠವೆಂದು ಅವನೊಡಗೂಡಿಕೊಂಡು ನಡೆದು ಜಾತಿ ಎಂಜಲುಗಳ್ಳರಾಗಿ ಉಳಿದ ಜಂಗಮವ ಕುಲವನೆತ್ತಿ ನುಡಿದು, ಅವನ ಅತಿಗಳೆದು ಕುಲವೆಂಬ ಸರ್ಪಕಚ್ಚಿ, ಎಂಜಲೆಂಬ ಅಮೇಧ್ಯವ ಭುಂಜಿಸಿ ಹಂದಿ-ನಾಯಂತೆ ಒಡಲ ಹೊರೆವ ದರುಶನಜಂಗುಳಿಗಳು ಜಂಗಮಪಥಕ್ಕೆ ಸಲ್ಲರಾಗಿ. ಅವರಿಗೆ ಗುರುವಿಲ್ಲ ಗುರುಪ್ರಸಾದವಿಲ್ಲ, ಲಿಂಗವಿಲ್ಲ ಲಿಂಗಪ್ರಸಾದವಿಲ್ಲ, ಜಂಗಮವಿಲ್ಲ ಜಂಗಮಪ್ರಸಾದವಿಲ್ಲ. ಇಂತೀ ತ್ರಿವಿಧಪ್ರಸಾದಕ್ಕೆ ಹೊರಗಾದ ನರಜೀವಿಗ? ಸ್ವಯ-ಚರ-ಪರವೆಂದಾರಾಧಿಸಿ ಪ್ರಸಾದವ ಕೊಳಸಲ್ಲದು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಶ್ರೀಗುರುವಿನಿಂದದ್ಥಿಕರು ಆವ ಲೋಕದೊಳಗಿಲ್ಲವಯ್ಯಾ. ಶ್ರೀಗುರುವಿನಂತೆ ಪರೋಪಕಾರಿಗಳ ಮತ್ತಾರನೂ ಕಾಣೆನಯ್ಯಾ. ಅದೆಂತೆಂದೊಡೆ : ಎನ್ನ ಕಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕಿವಿಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ನಾಸಿಕ ನಾಲಗೆಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕರಚರಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ತನುಮನಪ್ರಾಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಸಕಲಕರಣೇಂದ್ರಿಯಂಗಳ ಭಕ್ತರ ಮಾಡಿದನಯ್ಯ ಶ್ರೀಗುರು ಪರಮಶಿವಲಿಂಗಕ್ಕೆ. ಇಂತಿವು ಮೊದಲಾಗಿ ಎನ್ನ ಸರ್ವ ಅವಯವಂಗಳನೆಲ್ಲ ಸದ್ಭಕ್ತರ ಮಾಡಿ ಲಿಂಗಾರ್ಪಿತಕ್ಕೆ ಅನುಗೊಳಿಸಿದ ಶ್ರೀಗುರುವಿನ ಮಹಾಘನ ನಿಲವಿಂಗೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ರಸ ಉಂಬಲ್ಲಿ, ಗಂಧ ವಾಸಿಸುವಲ್ಲಿ, ರೂಪು ನಿರೀಕ್ಷಣೆಯಲ್ಲಿ, ಶಬ್ದ ಗೋಚರದಲ್ಲಿ, ಸ್ಪರ್ಶ ತ್ವಕ್ಕಿನಲ್ಲಿ, ಪಂಚಪುಟ ಭೇದಂಗಳಲ್ಲಿ, ಅಷ್ಟಗುಣ ಮದಂಗಳ ಪಟ್ಟಣದ, ಷೋಡಶದ ರೂಡ್ಥಿಯ ಷಡ್ಚಕ್ರದ ಆಧಾರದ, ಪಂಚವಿಂಶತಿಯ ನಿಳೆಯದ ಸಂಚಾರದ, ನವಕವಾಟದ, ತ್ರಿಶಕ್ತಿ ಸಂಪದದ, ತ್ರಿಗುಣಾತ್ಮನ ತ್ರಿಗುಣ ಓಹರಿಯಲ್ಲಿ ಬಳಸಿಪ್ಪ ಬಂಧದಲ್ಲಿ ಮಗ್ನವಾಗದೆ, ಜಾಗ್ರ [ಸ್ವಪ್ನ] ಸುಷುಪ್ತಿ ತ್ರಿವಿಧ ಘಟಪಟಲ ತತ್ವನಿರಸನ ನಿರ್ವಿಕಾರನಾಗಿ, ಇಂತಿವರಲ್ಲಿ ಅವಘಾನವಾಗಿ ಮುಳುಗದೆ, ನೀರನಿರಿದ ಕೈದಿನಂತೆ ಕಲೆದೋರದೆ, ಆವ ಸುಖಂಗಳಲ್ಲಿ ಅಬ್ಥಿನ್ನವಾಗಿ, ಜಲದೊಳಗಣ ಶಿಲೆ, ಶಿಲೆಯೊಳಗಣ ವಹ್ನಿ ಸುಳುಹುದೋರದ ತೆರ, ಮಥನಕ್ಕೆ ಕಂಡು, ಕಾಣದಡಗಿಪ್ಪ ತೆರ, ಲಿಂಗಾಂಗಿಯ ಇರವು. ಇದು ಸಿದ್ಧವಾಗಬೇಕು, ಶರೀರದ ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವನರಿವುದಕ್ಕೆ. ಇದೇ ಅಂಜನಸಿದ್ಧಿ.
--------------
ಮನುಮುನಿ ಗುಮ್ಮಟದೇವ
ಕಾಮುಕಗೆ ದುರ್ಜನಗೆ ಕಪಟಿಗೆ ಹೇಮಚೋರಗೆ ಕಾರುಕ ಸಮ್ಮಗಾರಗೆ ಆವ ಭಾವದ ವ್ರತವ ಮಾಡಲಿಕ್ಕೆ, ಅವ ಭಾವಿಸಿ ನಡೆಯಬಲ್ಲನೆ? ಕಾಗೆಗೆ ರಸಾನ್ನ ಮುಂದಿರಲಿಕೆ, ಹರಿವ ಕೀಟಕಂಗೆ ಸರಿವುದಲ್ಲದೆ ಮತ್ತೆ ಅದು ಸವಿಯಸಾರವ ಬಲ್ಲುದೆ? ಇಂತೀ ಇವು ತಮ್ಮ ಜಾತಿಯ ಲಕ್ಷಣವ ಕೊಂದಡೂ ಬಿಡವಾಗಿ, ವ್ರತಾಚಾರವ ಸಂಬಂದ್ಥಿಸುವಲ್ಲಿ ಶರಣರೆಲ್ಲರ ಕೂಡಿ, ಈ ಗುಣ ಅಹುದು ಅಲ್ಲ ಎಂದು ಹೇಳಿ, ಜಾತಿವರ್ಗದ ಗುಣವ ನೀಕರಿಸಿ ಬಿಡಿಸಿ, ಸುಜಾತಿಯ ಅರಸಿನ ಪಟ್ಟವಂ ಕಟ್ಟಿ ಶರಣರೆಲ್ಲರು ನಿಹಿತಾಚಾರದಲ್ಲಿ ಸಹಭೋಜನವಂ ಮಾಡಿ ಇಂತೀ ಗುಣನಿಹಿತವ್ರತ ಅಜಾತನ ಒಲುಮೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ನಿಹಿತದ ಶೀಲದ ನೇಮ.
--------------
ಅಕ್ಕಮ್ಮ
ಅಯ್ಯ, ಒಂದು ಜೀವಾತ್ಮನೆ ನಾಲ್ಕು ತೆರನಾಗಿರ್ಪುದಯ್ಯ. ಅದೆಂತೆಂದಡೆ : ಒಂದು ಜೀವನೆ ಅಂಡಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಪಿಂಡಜಪ್ರಾಣಿಯಾಗಿರ್ಪುದಯ್ಯ. ಮಿಗಿಲೊಂದು ಜೀವನೆ ಉದ್ಬಿಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಜರಾಯುಜಪ್ರಾಣಿಯಾಗಿರ್ಪುದಯ್ಯ. ಈ ಚತುರ್ವಿಧ ಜೀವನೊಳಗೆ ಏಳುಲಕ್ಷ ಮಲಜೀವನಯ್ಯ, ಏಳುಲಕ್ಷ ಜಡಜೀವನಯ್ಯ, ಏಳುಲಕ್ಷ ಕುಜೀವನಯ್ಯ, ಏಳುಲಕ್ಷ ದುರ್ಜೀವನಯ್ಯ, ಏಳುಲಕ್ಷ ಕಪಟಜೀವನಯ್ಯ, ಏಳುಲಕ್ಷ ಸಂಚಲಜೀವನಯ್ಯ, ಏಳುಲಕ್ಷ ವಂಚಕಜೀವನಯ್ಯ, ಏಳುಲಕ್ಷ ನಿರ್ಮಲಜೀವನಯ್ಯ, ಏಳುಲಕ್ಷ ಅಜಡಜೀವನಯ್ಯ, ಏಳುಲಕ್ಷ ಸುಜೀವನಯ್ಯ, ಏಳುಲಕ್ಷ ಸಂಜೀವನಯ್ಯ, ಏಳುಲಕ್ಷ ಪರಮಜೀವನಯ್ಯ. ಈ ತೆರನಾಗಿ ಎಂಬತ್ತುನಾಲ್ಕುಲಕ್ಷ ಜೀವಪ್ರಾಣಿಗಳೆಲ್ಲ ಶಿವನ ಪೂರ್ವಭಾಗದ ಪ್ರವೃತ್ತಿಮಾರ್ಗದ ಕರ್ಮೇಂದ್ರಿಯ, ಜ್ಞಾನೇಂದ್ರಿಯವೆಂಬ ದ್ವಾದಶೇಂದ್ರಿಯಂಗಳಲ್ಲಿ ಜೀವಿಸುತಿರ್ಪವಯ್ಯ. ಆ ದ್ವಾದಶ ಜೀವನ ವರ್ತನಾಭೇದದಿಂದ ಒಂದು ಜೀವನೆ ಹನ್ನೆರಡು ತೆರನಾಗಿರ್ಪುದಯ್ಯ. ಅದರ ಗುಣಭೇದವೆಂತೆಂದಡೆ : ಉಚ್ಫಿಷ್ಟವ ತಿಂದು ಬದುಕುವ ಜೀವನೆ ಮಲಜೀವನೆನಿಸುವುದಯ್ಯ. ಮಾಂಸಭಕ್ಷಣೆಯಿಂದ ಬದುಕುವ ಜೀವನೆ ಜಡಜೀವನೆನಿಸುವುದಯ್ಯ. ಚಾಡಿ ಕ್ಷುದ್ರತನದಿಂದ ಒಡಲ ಹೊರವ ಜೀವನೆ ದುರ್ಜೀವನೆನಿಸುವುದಯ್ಯ. ಕಡಿದು, ಹೊಡದು, ಬಡಿದು, ಬಂದ್ಥಿಸಿ ಒಡಲ ಹೊರವ ಜೀವನೆ ಕಪಟಜೀವನೆನಿಸುವುದಯ್ಯ. ಗಾರುಡಿಗವಿದ್ಯದಿಂದ ಒಡಲಹೊರವಜೀವನೆ ಸಂಚಲಜೀವನೆನಿಸುವುದಯ್ಯ. ದೇಶಕ್ಕೊಂದು ಭಾಷೆ, ದೇಶಕ್ಕೊಂದು ವೇಷವ ಧರಿಸಿ, ಅಜಾತತನದಿಂದ ಒಡಲ ಹೊರವ ಜೀವನೆ ವಂಚಕಜೀವನೆನಿಸುವುದಯ್ಯ. ಷಟ್ಕøಷಿ ವ್ಯಾಪಾರದೊಳಗೆ ಆವುದಾದರೂ ಒಂದು ವ್ಯವಹಾರವ ಮಾಡಿ, ಸತ್ಯದಿಂದ ಬಾಳುವವನೆ ನಿರ್ಮಲಜೀವನೆನಿಸುವುದಯ್ಯ. ಆವ ಮತವಾದರೇನು ? ಆವ ಜಾತಿಯಾದರೇನು ? ಮಲಮಾಯಾ ಸಂಸಾರಬಂಧಮಂ ತ್ಯಜಿಸಿದ ಅಷ್ಟಾಂಗಯೋಗಾಭ್ಯಾಸಿಯೆ ಅಜಡಜೀವನೆನಿಸುವುದಯ್ಯ. ಅಷ್ಟಾಂಗಯೋಗವ ತ್ಯಜಿಸಿ ಶ್ರೀಗುರುಪರಮಾರಾಧ್ಯನ ಉಪಾವಸ್ತೆಯಂ ಮಾಡುವವನೆ ಸುಜೀವನೆನಿಸುವುದಯ್ಯ. ಮಹಾಚಿದ್ಘನ ಗುರುದೇವನ ಪ್ರತ್ಯಕ್ಷವಮಾಡಿಕೊಂಡು ಘನಗುರುಭಕ್ತಿಯಲ್ಲಿ ನಿಷ್ಠೆಯುಳ್ಳಾತನೆ ಸಜ್ಜೀವನೆನಿಸುವುದಯ್ಯ. ಶ್ರೀಮದ್ಘನ ಗುರುವ ಮೆಚ್ಚಿಸಿ ಇಷ್ಟ-ಪ್ರಾಣ-ಭಾವಲಿಂಗವ ಪಡದಾತನೆ ಪರಾತ್ಪರಮಜೀವನೆನಿಸುವುದಯ್ಯ. ಇಂತೀ ಜೀವನ ಬುದ್ಧಿಯ ಗುರುಕಟಾಕ್ಷದಿಂದ ನಿವೃತ್ತಿಯಮಾಡಿ, ತ್ರಿವಿಧಾಂಗವೆಲ್ಲ ದೀಕ್ಷಾತ್ರಯಂಗಳಿಂದ ಶುದ್ಧಪ್ರಸಾದವಾಗಿ, ಭಾವತ್ರಯಂಗಳೆಲ್ಲ ಮೋಕ್ಷತ್ರಯಂಗಳಿಂದ ಪ್ರಸಿದ್ಧಪ್ರಸಾದವಾಗಿ, ಸತ್ಯವಾಣಿ, ಸತ್ಯಪ್ರಾಣಿ, ಸತ್ಯಮಾಣಿ, ಉಳಿದವಯವಂಗಳೆಲ್ಲ ಸತ್ಯವನೆ ಹಾಸಿ, ಸತ್ಯವನೆ ಹೊದ್ದು,
--------------
ಗುರುಸಿದ್ಧದೇವರು
`ಶಂಕರ ಶಂಕರ' ಎಂದು ಸಹಜವರಿಯದೆ ನುಡಿವ ಶ್ವಾನನ ಮಾತ ಕೇಳಲಾಗದು, ಶಂಕರವಾವುದೆಂದರಿಯರಾಗಿ. ಲಿಂಗ ಶಂಕರವೊ ? ಜಂಗಮ ಶಂಕರವೊ ? ಪ್ರಸಾದ ಶಂಕರವೊ ? ತ್ರಿವಿಧದಲ್ಲಿ ಹೊರಗಿಲ್ಲ. ಆವ ಶಂಕರದಲ್ಲಿ ಆವುದು ಚೇಗೆ ? ಬಲ್ಲಡೆ ಹೇಳಿರಿ. ಬರುಮಾತಿನ ಬಳಕೆಯ ಬಳಸಿ ಹಿರಿಯರಾದೆವೆಂಬ ಮೂಕೊರೆಯರನೇನೆಂಬೆ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಅಹಂಕಾರವರತು ಗುರುವಾಗಿ, ಜಗವರತು ಲಿಂಗವಾಗಿ, ತ್ರಿವಿಧವರತು ಜಂಗಮವಾಗಿ, ಸಕಲೇಂದ್ರಿಯದ ಲಂಪಟವರತು ಭಕ್ತನಾಗಿ ಸಂಸಾರವೆಂಬ ಗಡಬಡೆಯಲ್ಲಿ ಸಿಲುಕದೆ, ಆವ ಸ್ಥಲದಲ್ಲಿ ನಿಂದು ನೋಡಿದಡೂ ಭಾವಶುದ್ಧವಾಗಿ ಗುರುವಿಂಗೆ ಗುರುವಾಗಿ, ಲಿಂಗಕ್ಕೆ ಲಿಂಗವಾಗಿ ಜಂಗಮಕ್ಕೆ ಜಂಗಮವಾಗಿ ಭಕ್ತರ ಯುಕ್ತಿಯ ಮಾರಿಕೊಂಡಿಪ್ಪ ಸದ್ಭಕ್ತ ಕಾಲಾಂತಕ ಬ್ಥೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಈರೇಳು ಲೋಕವನೊಳಕೊಂಡ ಮಹಾಘನಲಿಂಗವು ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಬ ಪರಿಯ ನೋಡಾ. ಅಗಮ್ಯ ಅಗೋಚರ ಅಪ್ರಮಾಣ ಲಿಂಗಸಂಗದಲ್ಲಿ ಇರಬಲ್ಲಾತನೇ ಭಕ್ತನು. ಹೀಗಲ್ಲದೆ ಕೇಡಿಲ್ಲದೆ ಲಿಂಗಕ್ಕೆ ಕೇಡ ಕಟ್ಟಿ ಹೋದೀತೋ ಇದ್ದೀತೋ ಅಳಿದೀತೋ ಹೇಗೋ ಎಂತೋ ಎಂದು ಚಿಂತಿಸಿ ನುಡಿವರು ಬ್ಥಿನ್ನವಿಜ್ಞಾನಿಗಳು. ಆ ಲಿಂಗದೊಳಗೆ ಅಖಿಳಾಂಡಕೋಟಿ ಬ್ರಹ್ಮಾಂಡಗಳಡಗಿದವು. ಸಾಕ್ಷಿ : 'ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ||' ಎಂದುದಾಗಿ, ಇಂತಪ್ಪ ಘನಲಿಂಗವ ಶ್ರೀಗುರು ಭಕ್ತಂಗೆ ಕರ-ಮನ-ಭಾವಕ್ಕೆ ಪ್ರತ್ಯಕ್ಷವಾಗಿ ಮಾಡಿಕೊಟ್ಟ ಬಳಿಕ ಎಂದಿಗೂ ಅಗಲಬೇಡಿಯೆಂದು ಗಣಸಾಕ್ಷಿಯಾಗಿ ಮಾಡಿಕೊಟ್ಟ ಬಳಿಕ ಅಗಲಲುಂಟೆ ? ಅಗಲಿದಡೆ ಲಿಂಗವು ಗುರುತಲ್ಪಕವೆ ಸರಿ. ಆವ ಶಾಸ್ತ್ರ ಆವ ಆಗಮ ಆವ ವಚನ ಹೇಳಿಲ್ಲವಾಗಿ, ಮತ್ತಂ, ಸಂಪಿಗೆಯ ಪುಷ್ಪದ ಪರಿಮಳ ಬೇರೆ ಆಗಲುಂಟೆ ? ಇಂತಪ್ಪ ಮಹಾಘನಲಿಂಗವು ಹೇಗಿಪ್ಪುದೆಂದಡೆ : ಅವರವರ ಮನ ಭಾವ ಹೇಗಿಪ್ಪುದೊ ಹಾಗಿಪ್ಪುದು. ಇದಕ್ಕೆ ದೃಷ್ಟಾಂತ : ಉದಕ ಒಂದೇ, ಹಲವು ವೃಕ್ಷದ ಹಣ್ಣು ಮಧುರ ಒಗರು ಖಾರ ಹುಳಿ ಕಹಿ ಸವಿ. ಉದಕ ಒಂದೇ, ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ. ಈ ಆರು ವರ್ಣಂಗಳಲ್ಲಿ ಬೆರೆದುದು ಅಭ್ರಕ ಒಂದೇ! ಈ ಅಭ್ರಕ ಹೇಗೊ ಹಾಗೆ ಮನ, ಹಾಗೆ ಮಹಾಲಿಂಗ. ಹೀಗೆಂದರಿದಾತ ನಮ್ಮ ಶಾಂತಕೂಡಲಸಂಗಮದೇವ ಬಲ್ಲನಲ್ಲದೆ ಬ್ಥಿನ್ನಜ್ಞಾನಿಗಳು ಎತ್ತ ಬಲ್ಲರು ನೋಡಾ!
--------------
ಗಣದಾಸಿ ವೀರಣ್ಣ
ಆವ ಜಾತಿಯಾದಡೂ ಆಗಲಿ; ಪುರಾತನ ಚಾರಿತ್ರದಲ್ಲಿ ನಡೆದು, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನಮಂ ಕೊಟ್ಟು, ಅಹಂಕಾರವಳಿದಿಹಂತಹ ಮಹಾತ್ಮರ ಬಾಯ ತಂಬುಲವ ಮೆಲುವೆ, ಬೀಳುಡಿಗೆಯ ಹೊದಿವೆ. ಅವರ ಪಾದರಕ್ಷೆಗಳೆರಡನೂ, ಮಂಡೆಯ ಮೇಲೆ ಹೊತ್ತುಕೊಂಡು ಬದುಕುವೆನಯ್ಯಾ. ಆ ಗಣಂಗಳ ದಾಸನ ದಾಸ ನಾನು, ಜನ್ಮ ಜನ್ಮದಲ್ಲಿ ಆಗುವೆ ಕಾಣಾ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಧೂಳುಪಾವಡವಾದಲ್ಲಿ ಆವ ನೀರನು ಹಾಯಬಹುದು. ಕಂಠಪಾವಡದಲ್ಲಿ ಉರದಿಂದ ಮೀರಿ ಹಾಯಲಾಗದು. ಸರ್ವಾಂಗಪಾವಡದಲ್ಲಿ ಹೊಳೆ ತಟಾಕ ಮಿಕ್ಕಾದ ಬಹುಜಲಂಗಳ ಮೆಟ್ಟಲಾಗದು. ಅದೆಂತೆಂದಡೆ ಆ ಲಿಂಗವೆಲ್ಲವು ವ್ರತಾಚಾರ ಲಿಂಗವಾದ ಕಾರಣ. ತಮ್ಮ ಲಿಂಗದ ಮಜ್ಜನದ ಅಗ್ಗಣಿಯಲ್ಲದೆ ತಮ್ಮಂಗವ ಮುಟ್ಟಲಾಗದು. ಇಂತೀ ಇವು ತಾವು ಕೊಂಡ ವ್ರತದಂಗದ ಭೇದವಲ್ಲದೆ ನಾನೊಂದು ನುಡಿದುದಿಲ್ಲ. ಇದಕ್ಕೆ ನಿಮ್ಮ ಭಾವವೆ ಸಾಕ್ಷಿ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ವ್ರತದಂಗದ ಭೇದ.
--------------
ಅಕ್ಕಮ್ಮ
ಜ್ಞಾನದಿಂದಾದಡಾಗಲಿ ಅಜ್ಞಾನದಿಂದಾದಡಾಗಲಿ, ಬ್ಥೀತಿಯಿಂದಾದಡಾಗಲಿ ನಿಬ್ರ್ಥೀತಿಯಿಂದಾದಡಾಗಲಿ, ಸದ್ಭಾವದಿಂದಾದಡಾಗಲಿ ದುರ್ಭಾವದಿಂದಾದಡಾಗಲಿ, ಆವ ಪರಿಯಿಂದಾದಡಾಗಲಿ ಪರಮಶಿವಲಿಂಗದರ್ಶನಮಾತ್ರದಿಂದ ಜಾತಿಸ್ಮರತ್ವ ಮಹದೈಶ್ವರ್ಯ ಪರಮಾಯುಷ್ಯ ಶುದ್ಧವಿದ್ಯಂಗಳು ಸಮ್ಯಕ್‍ಜ್ಞಾನ ಸಕಲಸಂಪತ್ತುಗಳು ದೊರೆಕೊಂಬುವು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->