ಜಗತ್ಪ್ರಪಂಚ ಮಾಡಿ, ಆ ಜಗದಲ್ಲಿ ಜೀವರೂಪಿಂದ ಬಳಿಸಂದನೆಂದು ಹೇಳುವ ಶ್ರುತಿಯಂತಿರಲಿ, ಜೀವನೆ ಶಿವನಾದಡೆ ಶೋಕ ಮೋಹ ಋಣ ರೋಗ ಪುಣ್ಯ ಪಾಪ ಕಾಲ ಕಲ್ಪಿತ ಪ್ರಳಯ ಪ್ರಕೃತಿ ಸಂಸಾರಪಾಶಬದ್ಧವುಂಟೆ? ಇವೆಲ್ಲವೂ ಜೀವಂಗಲ್ಲದೆ ಶಿವಂಗಿಲ್ಲವಾಗಿ ತ್ರಿಗುಣರಹಿತ ಸೌರಾಷ್ಟ್ರ ಸೋಮೇಶ್ವರನು.
ಮರೆದೊರಗಿ, ಕನಸ ಕಂಡು ಹೇಳುವಲ್ಲಿ ಸತ್ತ ಹೆಣ ಎದ್ದಿತ್ತು. ತನ್ನ ಋಣ ನಿಧಾನ ಎದ್ದು ಕರೆಯಿತ್ತು. ಹೆಪ್ಪಿಟ್ಟ ಹಾಲು ಗಟ್ಟಿತುಪ್ಪಾಗಿ ಸಿಹಿಯಾಯಿತ್ತು. ಇದಕ್ಕೆ ತಪ್ಪ ಸಾಧಿಸಲೇಕೆ ಚೆನ್ನಮಲ್ಲಿಕಾರ್ಜುನದೇವರ ದೇವನಣ್ಣಗಳಿರಾ ?