ಅಥವಾ

ಒಟ್ಟು 59 ಕಡೆಗಳಲ್ಲಿ , 19 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮದಲ್ಲಿಮುಳುಗಿ ನುಡಿವರು ಶರಣಂಗೆ ಕಾಮಿಯೆಂದು, ಕ್ರೋಧದಲ್ಲಿಮುಳುಗಿ ನುಡಿವರು ಶರಣಂಗೆ ಕ್ರೋದ್ಥಿಯೆಂದು, ಲೋಭದಲ್ಲಿಮುಳುಗಿ ನುಡಿವರು ಶರಣಂಗೆ ಲೋಬ್ಥಿಯೆಂದು, ಮೋಹದಲ್ಲಿಮುಳುಗಿ ನುಡಿವರು ಶರಣಂಗೆ ಮೋಹಿಯೆಂದು, ಮದದಲ್ಲಿಮುಳುಗಿ ನುಡಿವರು ಶರಣಂಗೆ ಮದಭರಿತನೆಂದು, ಮತ್ಸರದಲ್ಲಿಮುಳುಗಿ ನುಡಿವರು ಶರಣಂಗೆ ಮತ್ಸರಭರಿತನೆಂದು, ಅರಿಷಡ್ವರ್ಗದಲ್ಲಿರ್ದು ಒಂದೊಂದು ನುಡಿದರೆ ಸಂದೇಹವಿಲ್ಲ ಶರಣಂಗೆ. ನಿಂದೆಯನಾಡುವ ನರನಿಗೆ ಸೂಕರಜನ್ಮವು ಇದು ಸತ್ಯ ಗುರುನಿರಂಜನ ಚನ್ನಬಸವಲಿಂಗದ ವಚನ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಂಡಜ ಇಪ್ಪತ್ತೊಂದು ಲಕ್ಷ, ಪಿಂಡಜ ಇಪ್ಪತ್ತೊಂದು ಲಕ್ಷ, ಉದ್ಬಿಜ ಇಪ್ಪತ್ತೊಂದು ಲಕ್ಷ, ಜರಾಯುಜ ಇಪ್ಪತ್ತೊಂದು ಲಕ್ಷ, ಇಂತು ಎಂಬತ್ತುನಾಲ್ಕುಲಕ್ಷ ಜೀವರಾಶಿಗಳೊಳಗೆ ಒಂದೊಂದು ಜನ್ಮದೊಳಗೆ ಸಹಸ್ರ ಸಹಸ್ರವೇಳೆ ಹುಟ್ಟಿಬಂದ ಅನೇಕ ದುಃಖವಂತಿರಲಿ. ಮುಂದೆ ಮನುಷ್ಯದೇಹವಿಡಿದು ಬಂದ ದುಃಖಮಂ ಪೇಳ್ವೆನದೆಂತೆನೆ : ತಂದೆಯ ವಿಕಾರದದೆಸೆಯಿಂದೆ ಬಂದು ಬಿಂದುರೂಪಾಗಿ, ತಾಯಿಯ ಬಸುರಲ್ಲಿ ನಿಂದು ಒಂಬತ್ತುತಿಂಗಳ ಪರಿಯಂತರ ಅವಯವಂಗಳು ಬಲಿದು ಪಿಂಡವರ್ಧನವಾಗಿ, ಕದ್ದ ಕಳ್ಳನ ಹೆಡಗೈಯಕಟ್ಟಿ ಸೆರೆಮನೆಯಲ್ಲಿ ಕುಳ್ಳಿರಿಸುವಂತೆ, ಗರ್ಭವೆಂಬ ಸೆರೆಮನೆಯಲ್ಲಿ ಶಿಶುವು ಮುಚ್ಚಿದ ಕಣ್ಣು, ಮುಗಿದ ಬಾಯಾಗಿ, ಕುಕ್ಕುಟಾಸನದಲ್ಲಿ ಕುಳ್ಳಿರ್ದು, ಕಡಿವ ಜಂತುಜಂಗುಳಿಯ ಬಾಧೆ, ಸುಡುವ ಜಠರಾಗ್ನಿಯ ಬಾಧೆ, ಎಡದಲ್ಲಿ ಮೂತ್ರದ ತಡಿಕೆಯ ಬಾಧೆ, ಬಲದಲ್ಲಿ ಅಮೇಧ್ಯದ ಹಡಿಕೆಯ ಬಾಧೆ, ಇಂತಿವು ಮೊದಲಾದನಂತಕೋಟಿ ಬಾಧೆಗಳಿಂದೆ ದಿನದಿನಕ್ಕೆ ದುಃಖಮಂಬಡುತಿರ್ದು, ಆ ಮೇಲೆ ಜಾತಿಸ್ಮರತ್ವ ಉದಯವಾಗಿ, ತನ್ನ ಹಿಂದಣ ಧರ್ಮಕರ್ಮಂಗಳ ಪುಣ್ಯಪಾಪಂಗಳ ಅರಹು ಮರಹುಗಳನಾರೈದು ನೋಡಿ, ಹಿಂದರಿಯದ ಪಾಪದ ದೆಸೆಯಿಂದೆ ಈ ಗರ್ಭನರಕಕ್ಕೆ ಬಂದೆ, ಇನ್ನು ಮುಂದೆ ತೆರನೇನೆಂದು ತನ್ನೊಳಗೆ ತಾನೆ ಚಿಂತಿಸಿ ಸರ್ವರಿಗೆ ಪರಮೇಶ್ವರನೇ ಕರ್ತನು, ಸರ್ವರ ಭವಪಾಶಂಗಳ ಛೇದಿಸುವಾತನು ಪರಮೇಶ್ವರನೆಂದರಿದು, ಮನದಲ್ಲಿ ನಿಶ್ಚೈಸಿಕೊಂಡು ಆ ಪರಮೇಶ್ವರಂಗೆ ಶಿವಧೋ ಶಿವಧೋ ಎಂದು ಮೊರೆಯಿಡುತ್ತ ಶಿವಧ್ಯಾನಮಂ ಮಾಳ್ಪ ಸಮಯದಲ್ಲಿ ಕೋಟಿಸಿಡಿಲು ಹೊಯ್ದಂತೆ ವಿಷ್ಣುಪ್ರಸೂತಿಯೆಂಬ ಗಾಳಿ ಬೀಸಲು, ಅದಕಂಡು ಥರಥರನೆ ನಡುಗಿ ಧ್ಯಾನಪಲ್ಲಟವಾಗಿ ದಿಗ್‍ಭ್ರಮಣೆಗೊಂಡು ಊಧ್ರ್ವಮುಖವಾಗಿ ಕುಳಿತಿರ್ದ ಶಿಶುವು ಗಿರ್ರನೆ ತಿರುಗಿ ತಲೆಕೆಳಗಾಗಿ ಕರ್ತಾರನ ಕಂಬೆಚ್ಚಿನಲ್ಲಿ ಚಿನ್ನದ ಸಲಾಕೆ ತೆಗವಂತೆ, ಬಚ್ಚಲಹುಳುವಿನಂದದಿ ಯೋನಿಯೆಂಬ ಸೂಕ್ಷ್ಮದ್ವಾರದಿಂದೆ ಪೊರಮಟ್ಟು ಹುಟ್ಟಿದಲ್ಲಿ ಕೋಟಿಬಾಧೆಗಳಿಂದ ನೊಂದು ಹವ್ವನೆ ಹಾರಿ ಕಡುದುಃಖಮಂಬಟ್ಟು ಪಿಂದಣ ಜಾತಿಸ್ಮರತ್ವ ಕೆಟ್ಟು, ಮತಿ ಮಸುಳಿಸಿ, ತನ್ನ ಮಲಮೂತ್ರಂಗಳಲ್ಲಿ ತಾ ಹೊರಳಾಡಿ ಬಾಲಲೀಲೆಯ ಸುಖದುಃಖಂಗಳನನುಭವಿಸಿ, ಆ ಬಾಲಲೀಲೆಯು ಹಿಂದುಳಿದ ಮೇಲೆ ಯೌವನದ ವಯಸ್ಸೊದಗಿದಲ್ಲಿ, ಕಾಮದಲ್ಲಿ ಕರಗಿ ಕ್ರೋಧದಲ್ಲಿ ಕೊರಗಿ ಮದಮತ್ಸರಂಗಳಲ್ಲಿ ಮುಂದುಗೆಟ್ಟು ನಾನಾ ವ್ಯಾಪಾರವನಂಗೀಕರಿಸಿ ಬಂದ ಯೋನಿಯೆಂದರಿಯದೆ, ಉಂಡ ಮೊಲೆಯೆಂದರಿಯದೆ, ಕಾಮವಿಕಾರ ತಲೆಗೇರಿ ವಿಷಯಾತುರನಾಗಿ, ಈಳಿಗಾರನ ದೆಸೆಯಿಂದ ಈಚಲಮರ ನಿಸ್ಸಾರವಾದಂತೆ, ಸ್ತ್ರೀಯರ ಸಂಗದಿಂದೆ ದೇಹದೊಳಗಣ ಊರ್ಧ್ವಬಿಂದು ಜಾರಿ ಜಾರಿ ಇಳಿದು ಸೋರಿ ಸೋರಿ ಹೋಗಿ ದೇಹವು ನಿಸ್ಸಾರವಾಗಿ, ಯೌವನದ ಬಲಗೆಟ್ಟು ಮುಪ್ಪಾವರಿಸಿ ಅಚೇತನಗೊಂಡು ಸರ್ವಾಂಗವೆಲ್ಲ ನೆರೆತೆರೆಗಳಿಂದ ಮುಸುಕಲ್ಪಟ್ಟಾತನಾಗಿ, ಆದ್ಥಿ ವ್ಯಾದ್ಥಿ ವಿಪತ್ತು ರೋಗ ರುಜೆಗಳಿಂದೆ ಬಹು ದುಃಖಬಟ್ಟು, ಎದೆ ಗೂಡುಗಟ್ಟಿ, ಬೆನ್ನು ಬಾಗಿ, ಕಣ್ಣು ಒಳನಟ್ಟು, ಶರೀರ ಎಳತಾಟಗೊಂಡು, ಕಾಲಮೇಲೆ ಕೈಯನೂರಿ ಕೋಲವಿಡಿದು ಏಳುತ್ತ, ನಾನಾ ತೆರದ ದುಃಖಧಾವತಿಯಿಂದೆ ಆತ್ಮ ಕೆಟ್ಟು ನಷ್ಟವಾಗಿ ಹೋಯಿತ್ತು ನೋಡಾ. ಇದ ಕಂಡು ನಾನಂಜಿ ಮರಳಿ ಜನ್ಮಕ್ಕೆ ಬರಲಾರದೆ ನಿಮ್ಮ ಮೊರೆಹೊಕ್ಕೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ನಿರಾಮಯವೆಂಬ ಭಕ್ತನ ಅಂಗದಲ್ಲಿ ಝೇಂಕಾರವೆಂಬ ಜಂಗಮವು ಜಂಗಿಟ್ಟು ನಡೆಯಲೊಡನೆ ನಿರಂಜನವಾಯಿತ್ತು. ಆ ನಿರಂಜನದೊಡನೆ ನಿರಾಕಾರವಾಯಿತ್ತು. ಆ ನಿರಕಾರದೊಡನೆ ಆಕಾರಲಿಂಗವಾಗಿ, ಮಂತ್ರಘೋಷವ ಘೋಷಿಸುತಿರ್ಪುದು ನೋಡಾ. ಆ ಲಿಂಗದ ಬೆಳಗಿನೊಳಗೆ ನಾದಪ್ರಭೆ, ಬಿಂದುಪ್ರಭೆ, ಕಳಾಪ್ರಭೆ ಇಂತೀ ತ್ರಿವಿಧಪ್ರಭೆಗಳು ಒಂದೊಂದು ಎರಡೆರಡಾಗಿ ಆರುತೆರನಾಯಿತ್ತು ನೋಡಾ. ನಾದಪ್ರಭೆಯು ಭಕ್ತ-ಮಹೇಶ್ವರ, ಬಿಂದು ಪ್ರಭೆಯು ಪ್ರಸಾದಿ-ಪ್ರಾಣಲಿಂಗಿ, ಕಳಾಪ್ರಭೆಯು ಶರಣ-ಐಕ್ಯ. ಇಂತೀ ಷಡ್ವಿಧಮೂರ್ತಿಗಳಿಗೆ ಷಡ್ವಿಧಲಿಂಗವು. ಅವು ಆವಾವುಯೆಂದೊಡೆ: ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಿಲಿಂಗ ಮಹಾಲಿಂಗ. ಈ ಷಡ್ವಿಧಲಿಂಗಕು ಷಡ್ವಿಧ ಶಕ್ತಿಯರು ಅವು ಆವಾವುಯೆಂದೊಡೆ: ಕ್ರಿಯಾಶಕ್ತಿ, ಜ್ಞಾನಶಕ್ತಿ, ಇಚ್ಫಾಶಕ್ತಿ, ಆದಿಶಕ್ತಿ, ಪರಾಶಕ್ತಿ, ಚಿತ್‍ಶಕ್ತಿ. ಇಂತೀ ಶಕ್ತಿಯರಿಗೂ ಷಡ್ವಿಧಭಕ್ತಿ. ಅವು ಆವಾವುಯೆಂದೊಡೆ: ಸದ್ಭಕ್ತಿ, ನೈಷ್ಠಿಭಕ್ತಿ, ಸಾವಧಾನಭಕ್ತಿ, ಅನುಭಾವಭಕ್ತಿ, ಸಮರತಿಭಕ್ತಿ, ಸಮರಸಭಕ್ತಿ. ಈ ಷಡ್ವಿಧ ಭಕ್ತಿಗೂ ಷಡ್ವಿಧಹಸ್ತ. ಅವು ಆವಾವುಯೆಂದೊಡೆ: ಸುಚಿತ್ತಹಸ್ತ, ಸುಬುದ್ಧಿಹಸ್ತ, ನಿರಹಂಕಾರಹಸ್ತ, ಸುಮನಹಸ್ತ, ಸುಜ್ಞಾನಹಸ್ತ, ನಿರ್ಭಾವಹಸ್ತ, ಈ ಷಡ್ವಿಧಹಸ್ತಗಳಿಗೂ ಷಡ್ವಿಧ ಕಲೆಗಳು. ಅವು ಆವಾವುಯೆಂದೊಡೆ: ನಿವೃತ್ತಿಕಲೆ, ಪ್ರತಿಷ್ಠಕಲೆ, ವಿದ್ಯಾಕಲೆ, ಶಾಂತಿಕಲೆ, ಶಾಂತ್ಯತೀತಕಲೆ, ಶಾಂತ್ಯತೀತೋತ್ತರ ಕಲೆ. ಈ ಷಡ್ವಿಧಕಲೆಗಳಿಗೂ ಷಡ್ವಿಧಪರಂಗಳು. ಅವು ಆವಾವುಯೆಂದೊಡೆ: ಶುದ್ಧಜ್ಞಾನವೇ ಪರ, ಬದ್ಧಜ್ಞಾನವೇ ಪರ, ನಿರ್ಮಲಜ್ಞಾನವೇ ಪರ, ಮನೋಜ್ಞಾನವೇ ಪರ, ಸುಜ್ಞಾನವೇ ಪರ, ಪರಮಜ್ಞಾನವೇ ಪರ. ಈ ಷಡ್ವಿಧಪರಗಳಿಂದತ್ತತ್ತ ಮಹಾಜ್ಞಾನದ ಬೆಳಗು, ಸ್ವಯಜ್ಞಾನದ ತಂಪು, ನಿರಂಜನದ ಸುಖ. ಆ ನಿರಂಜನದ ಸುಖದೊಳಗೆ ಸುಳಿದಾಡುವ ಝೇಂಕಾರವೆಂಬ ಜಂಗಮವ ನಿರಾಮಯವೆಂಬ ಭಕ್ತನೇ ಬಲ್ಲ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಂಧಕಾರವಾಗಿಹ ಕತ್ತಲೆಯೊಳು ಮಹಾಮೇರುವಿಹುದು ನೋಡಾ. ಆ ಮಹಾಮೇರುವ ಉದಯಾಸ್ತಮಯವಾಗಿಹ ಚಂದ್ರಸೂರ್ಯರು ತಿರುಗುವರು. ಆ ಚಂದ್ರಸೂರ್ಯರ ದೆಸೆಯಿಂದ ಇರುಳು ಹಗಲೆಂಬ ವೃಕ್ಷ ಹುಟ್ಟಿ, ಆ ವೃಕ್ಷಕ್ಕೆ ಅರವತ್ತು ಶಾಖೆಗಳಾದವು ನೋಡಾ. ಒಂದೊಂದು ಶಾಖೆಗಳಲ್ಲಿ ಮುನ್ನೂರರವತ್ತು ಮುನ್ನೂರರವತ್ತು ಗೂಬೆಗಳು ಕುಳಿತು ಕೂಗುತ್ತಿಹವು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಏನೇನೂ ಇಲ್ಲದಲ್ಲಿ ಒಬ್ಬ ಪುರುಷ ನಿಂದಿರುವುದ ಕಂಡೆನಯ್ಯ. ಆ ಪುರುಷಂಗೆ ಒಬ್ಬ ಸತಿಯಳು ಹುಟ್ಟಿದಳು ನೋಡಾ. ಆ ಸತಿಯಳ ಅಂಗದಲ್ಲಿ ಮೂವರು ಮಕ್ಕಳು ಇರುವುದ ಕಂಡೆನಯ್ಯ. ಆ ಮಕ್ಕಳು ಒಂದೊಂದು ಎರಡೆರಡಾಗಿ, ಆರು ಕೇರಿಗಳಲ್ಲಿ ಸುಳಿದಾಡುತಿರ್ಪರು ನೋಡಾ. ಆ ಕೇರಿಗಳನಳಿದು, ಮೂರು ಮಕ್ಕಳ ಬಿಟ್ಟು ಆ ಸತಿಯಳ ಅಂಗವ ಕೂಡಿ, ಆ ಪುರುಷನಾಚರಿಸುತಿರ್ಪನು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕಾಮಧೇನುವೆಂದಡೆ ಇಹುದಕ್ಕೆ ನೆಲೆ ಬೇಕು, ಕಲ್ಪತರುವೆಂದಡೆ ಹುಟ್ಟೂದಕ್ಕೆ ಭೂಮಿ ಬೇಕು, ಚಿಂತಾಮಣಿಯೆಂದಡೆ ತಾನೊಂದ ಚಿಂತಿಸಿ ಬೇಡಿಯಲ್ಲದೆ ಕೊಡದೊಂದುವ. ಇವಕ್ಕೆಲ್ಲಕ್ಕೂ ಒಂದೊಂದು ನಿಂದ ನೆಲೆ ವಾಸವಾಯಿತ್ತು. ಮನದರಿವಿಂಗೆ, ಕೈಯ ಕುರುಹಿಂಗೆ, ವಿಚಾರದಿಂದ ಒಳಹೊಕ್ಕು ನಿಂದು ನೋಡಲಾಗಿ, ಹಿಂದಳ ಕತ್ತಲೆಯ ಮುಂದಳ ಬೆಳಗಿನ ಉಭಯದ ಸಂದ್ಥಿಯಲ್ಲಿ ಸಲೆ ಸಂದು ತೋರುತ್ತದೆ, ನಿಜದ ಬೆಳಗು ತೋರುತ್ತದೆ, ಸದಾಶಿವಮೂರ್ತಿಲಿಂಗದಲ್ಲಿ.
--------------
ಅರಿವಿನ ಮಾರಿತಂದೆ
ಒಂದೊಂದು ಮಠದಲ್ಲಿ ತುಂಬಿ ಒಂಬತ್ತರಾಳಾಪ ಸಂಭ್ರಮ ಮೊರೆವುತದೆ ಅಯ್ಯಾ. ಆನತದ ಮೀರಿಪ್ಪ ಮೇಣು ಆದಿಯ ಆಧಾರದಿಂದತ್ತ ತುಂಬಿದಾ ಕೊಡದಲಿ ಒಂದು ಬಿಂದು ಭವಿಸಲು ಸಂದುದಖಿಳ ಬ್ರಹ್ಮಾಂಡವು. ಎನ್ನ ತಂದೆ, ಕಪಿಲಸಿದ್ಧಮಲ್ಲಿಕಾರ್ಜುನಯ್ಯ ನಿಮ್ಮ ಭಕ್ತಿಯಾದಂದ ವಾರುದ್ಥಿಯ ಪರಿಯಾಯ.
--------------
ಸಿದ್ಧರಾಮೇಶ್ವರ
ಎಲ್ಲಿ ನೋಡಿದರೆನ್ನಯ ಮನವಿಪ್ಪುದು. ಜಗದಗಲದಲ್ಲಿ ನೋಡಿದರೆನ್ನ ಮನವಿಪ್ಪುದು. ಸಪ್ತಸಾಗರದಿಂದತ್ತತ್ತವೆನ್ನಯ ಮನವಿರುತ ಚರಿಸುತಿಪ್ಪುದು. ಸಾಕ್ಷಿ ಗ್ರಂಥ : ``ಮಕಾರಂ ಮರುತರೂಪಯೋ ನಕಾರಂ ನಾಹಂ ಕೋಹಂ | (?) ಅಕ್ಷರದ್ವಯ ಮನೋ ನಾಮ ಸರ್ವದಾ ಸಮಾಶ್ರೀತಂ ||'' ಎಂದುದಾಗಿ, ಮನವೆಂಬ ವಾಯು ಹರಿದು ಗಳಿಗೆ ಗಳಿಗೆಗೆ ಒಂದೊಂದು ನೆನೆನೆನೆದು ಹಂಬಲಿಸಿ ಹತವಾಗುತಿದೆ. ಮನದ ಗಂಧೆಯ ತುರುಸಿದರೆ ಸುಖವಾಗುತಿದೆ. ಸುಖದಿಂದ ದುಃಖ, ದುಃಖದಿಂದ ಪ್ರಳಯಕ್ಕಿಕ್ಕಿ ಕೊಲ್ಲುತಿದೆ ಮನ. ಮನವೆಂಬ ಮಾಯದ ಬಲೆಯಲೆನ್ನ ಕೆಡವದೆ ಉಳುಹಿಕೊಳ್ಳಯ್ಯ ನಿರ್ಮಳ ನಿರ್ಮಳಾತ್ಮಕ ಜಗದಾರಾಧ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಕರಿಯು ಸ್ಪರ್ಶನೇಂದ್ರಿಯದಿಂದ ಬಂಧನವಡೆದಳಿಯಿತ್ತು. ಪತಂಗನು ರೂಪೇಂದ್ರಿಯದಿಂದ ಬಂಧನವಡೆದಳಿಯಿತ್ತು. ಭೃಂಗನು ಗಂಧೇಂದ್ರಿಯದಿಂದ ಬಂಧನವಡೆದಳಿಯಿತ್ತು. ಕುರಂಗನು ಶಬ್ದೇಂದ್ರಿಯದಿಂದ ಬಂಧನವಡೆದಳಿಯಿತ್ತು. ಮತ್ಸ್ಯವು ರಸನೇಂದ್ರಿಯದಿಂದ ಬಂಧನವಡೆದಳಿಯಿತ್ತು._ ಇಂತೀ; ಒಂದೊಂದು ಇಂದ್ರಿಯೋದ್ರೇಕದಿಂದ ಒಂದೊಂದು ಪ್ರಾಣಿಯು ಪ್ರಳಯವಾಯಿತ್ತು. ಪಂಚೇಂದ್ರಿಯಂಗಳ, ಒಂದು ಘಟದಲ್ಲಿ ತಾಳಿಹ ಮನುಷ್ಯ ಪ್ರಾಣಿಗಳಿಗೆ, ಮರವೆ ಎಡೆಗೊಂಡು ದೇಹಮೋಹಭ್ರಾಂತು ಮುಸುಕಿ ಮಾಯೆಯ ಬಾಯ ತುತ್ತಹುದು ಚೋದ್ಯವೇನು ಹೇಳಾ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಘ್ರಾಣೇಂದ್ರಿಯವಿಷಯದಿಂದೆ ಭ್ರಮರ ಕೆಡುವುದು ಸಂಪಿಗೆಯ ಪುಷ್ಪದಲ್ಲಿ. ರಸನೇಂದ್ರಿಯವಿಷಯದಿಂದೆ ಮತ್ಸ್ಯಕೆಡುವುದು ಜಾಲಗಾರನ ಬಲೆಯಲ್ಲಿ. ನಯನೇಂದ್ರಿಯವಿಷಯದಿಂದೆ ಪತಂಗ ಕೆಡುವುದು ದೀಪದ ಜ್ವಾಲೆಯಲ್ಲಿ ತ್ವಗೀಂದ್ರಯವಿಷಯದಿಂದ ಗಜ ಕೆಡುವುದು ರಾಜನ ಕೃತಕದಲ್ಲಿ. ಶ್ರವಣೇಂದ್ರಿಯವಿಷಯದಿಂದೆ ಎರಳೆ ಕೆಡುವುದು ಬೇಟೆಗಾರನ ಸರಳಿನಲ್ಲಿ. ಇಂತೀ ಪ್ರಾಣಿಗಳು ಒಂದೊಂದು ವಿಷಯದಿಂದೆ ಬಂಧನಕ್ಕೊಳಗಾದವು. ಇಂತಪ್ಪ ಪಂಚೇಂದ್ರಿಯವಿಷಯವ್ಯಾಪಾರದಲ್ಲಿ ಲಂಪಟರಾದ ಮನುಜರು ಕೆಟ್ಟ ಕೇಡನೇನೆಂಬೆನಯ್ಯ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಡಂಭಕರೊಂದು ಲಿಂಗವ ಕೊಂಡು ಮಂಡಲದೊಳಗಾಡುವರಯ್ಯಾ. ಒಡೆಯನ ಪೂಜೆಯ ಮಾಡುವರಯ್ಯಾ. ಹೊತ್ತಾರೆದ್ದು ಕ್ಷೇತ್ರ ಮನೆಕೆಲಸವ ಮುಂದಿಟ್ಟು, ಒಂದೊಂದು ಕುರುಹ ಮುಂದಿಟ್ಟು ಸಂದ್ಥಿಸಿ ಮಾಡಿಕೊಂಬ ಬಂಧಮೋಹಿಗಳ ಪೂಜೆ ಎಂದೆಂದು ನಿಮ್ಮ ಕಾಣಲರಿಯದು. ಮತ್ತೆಂತೆಂದೊಡೆ, ಹಿಂದುಮುಂದಿನ ಸಂದೇಹವಳಿದು ಆನಂದಮುಖನಾಗಿ, ಆಯಾಯ ಕಾಲಕ್ಕೆ ಪೂಜಾರ್ಪಣವ ಪರಿಣಾಮಿಸಿ ನಿರಂತರಸಾವಧಾನಿಯಾದರೆ ಆತ ನಿಜವೆಂಬೆ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನು ಆದಿಮೂಲ ಅನಾದಿಮೂಲಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತೀತ ಮೂಲಸ್ವಾಮಿಗತ್ತತ್ತವಾಗಿಹ ಆ ಅಖಂಡ ಮೂಲಸ್ವಾಮಿಯ ರೂಪು, ಲಾವಣ್ಯ, ಸೌಂದರ್ಯ, ಅಂಗ-ಪ್ರತ್ಯಂಗಸ್ವರೂಪ ಸ್ವಭಾವಗಳೆಂತೆಂದಡೆ : ಸಹಜ ನಿರಾಲಂಬವಾಗಿಹ, ಮಹಾಘನಕ್ಕೆ ಘನವಹ, ಮಹಾಘನವಾಗಿಹ ಪ್ರಣವವೆ ಅಖಂಡಮೂಲಸ್ವಾಮಿಯ ಶಿರಸ್ಸು ನೋಡಾ. ದಿವ್ಯಾನಂದಪ್ರಣವ ದಿವ್ಯಜ್ಞಾನ ಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಚಕ್ಷು. ನಿರಾಕಾರಪ್ರಣವ, ನಿರಾಳಪ್ರಣವವೆ ಆ ಅಖಂಡ ಮೂಲಸ್ವಾಮಿಯ ಪುರ್ಬು. ಅಚಲಾತೀತ ಪ್ರಣವವೆ ಆ ಅಖಂಡ ಮೂಲಸ್ವಾಮಿಯ ಹಣೆ ನೋಡಾ. ಸಹಜ ನಿರಾಲಂಬಪ್ರಣವವೆ ಆ ಅಖಂಡ ಮೂಲಸ್ವಾಮಿಯ ನಾಸಿಕ. ನಿರಾಲಂಬಾತೀತ ಪ್ರಣವವೆ ಆ ಅಖಂಡ ಮೂಲಸ್ವಾಮಿಯ ಉಶ್ವಾಸ-ನಿಶ್ವಾಸಂಗಳು ನೋಡಾ. ನಿರಾಮಯಪ್ರಣವ ನಿರಾಮಯಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಕರ್ಣ. ನಿರ್ವಯಲಪ್ರಣವ ನಿರ್ವಯಲಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಗಲ್ಲ ನೋಡಾ. ಅಮಲಪ್ರಣವ ಅಮಲಾನಂದಪ್ರಣವ ಅಮಲಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಗಡ್ಡ ಮೀಸೆ ಕೋರೆದಾಡೆ ನೋಡಾ. ನಾದ ಬಿಂದು ಕಲಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ತಾಳೋಷ*ಸಂಪುಟ ನೋಡಾ. ಸಹಜಪ್ರಣವ, ಸಹಜಾನಂದಪ್ರಣವ, ಸಹಜಜ್ಯೋತಿಪ್ರಣವ, ಅನಂತಪ್ರಣವ, ಆನಂದಪ್ರಣವ, ಆನಂದಜ್ಯೋತಿಪ್ರಣವ, ಅಖಂಡಪ್ರಣವ, ಅಖಂಡ ಜ್ಯೋತಿಪ್ರಣವ, ಅಖಂಡಾನಂದ ಮಹಾಜ್ಯೋತಿಪ್ರಣವ, ಚಿತ್ಪ್ರಣವ, ಚಿದಾನಂದಜ್ಯೋತಿಪ್ರಣವ, ಚಿದ್ವ್ಯೋಮಪ್ರಣವ, ನಿತ್ಯನಿಜಾನಂದಪ್ರಣವ, ಸಚ್ಚಿದಾನಂದಪ್ರಣವ, ನಿತ್ಯನಿರಾಕಾರಪ್ರಣವ, ಸಕಲ ನಿಃಕಲಾತೀತಪ್ರಣವವೆಂಬ ಷೋಡಶಪ್ರಣವಂಗಳೆ ಆ ಅಖಂಡ ಮಹಾಮೂಲಸ್ವಾಮಿಯ ಷೋಡಶದಂತಂಗಳು ನೋಡಾ. ಆ ಒಂದೊಂದು ದಂತಂಗಳ ಕಾಂತಿಯೆ ಅನಂತಕೋಟಿ ಸಿಡಿಲೊಡೆದ ಬಯಲಪ್ರಕಾಶವಾಗಿಹುದು ನೋಡಾ. ಕುಳವಿಲ್ಲದ ನಿರಾಕುಳಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಕೊರಳು. ಅಪ್ರಮಾಣ ಅಗೋಚರಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಭುಜಂಗಳು ನೋಡಾ. ಪರಮಪ್ರಣವ, ಪರಮಾನಂದಪ್ರಣವ, ಶಿವಪ್ರಣವ, ಶಿವಜ್ಯೋತಿಪ್ರಣವ,ಅಚಲಪ್ರಣವ, ಅಚಲಾನಂದಪ್ರಣವಂಗಳೆ ಆ ಅಖಂಡ ಮಹಾಮೂಲಸ್ವಾಮಿಯ ಹಸ್ತಾಂಗುಲಿ ನಖಂಗಳು ನೋಡಾ. ಪರಬ್ರಹ್ಮಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಎದೆ. ನಿರಂಜನ ಜ್ಯೋತಿಪ್ರಣವ ನಿರಂಜನಾನಂದವೆಂಬಪ್ರಣವವೆ ಆ ಅಖಂಡ ಮೂಲಸ್ವಾಮಿಯ ಸಣ್ಣ ಕುಚಗಳು ನೋಡಾ. ನಿರುಪಮಪ್ರಣವ, ನಿರುಪಮಾತೀತಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ದಕ್ಷಿಣ ವಾಮ ಪಾಶ್ರ್ವಂಗಳು. ಅನಿರ್ವಾಚ್ಯಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಬೆನ್ನು. ಮಹದಾನಂದಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಬೆನ್ನಿನೆಲುವು ನೋಡಾ. ಪಂಚಸಂಜ್ಞೆಯನುಳ್ಳ ಅಖಂಡಗೋಳಕಾರಪ್ರಣವವೆ ಆ ಅಖಂಡ ಮಹಾಮೂಲಸ್ವಾಮಿಯ ಗರ್ಭ ನೋಡಾ. ಆ ಗರ್ಭ ಅನಂತಕೋಟಿ ಮಹಾಸೂರ್ಯಚಂದ್ರಾಗ್ನಿ ಪ್ರಕಾಶವಾಗಿಹುದು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಪ್ರಣವಂಗಳು, ಅನೇಕಕೋಟಿ ತತ್ವಂಗಳು, ಅನೇಕಕೋಟಿ ಅಕ್ಷರಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿಪತಿಗಳು, ಅನೇಕಕೋಟಿ ಅನಾದಿಪಶುಗಳು, ಅನೇಕಕೋಟಿ ಅನಾದಿಪಾಶಂಗಳೆಂಬ ಅನಾದಿಸಿದ್ಧಾಂತ ಜ್ಞಾನತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಆದಿಪತಿಗಳು, ಅನೇಕಕೋಟಿ ಆದಿಪಶುಗಳು, ಅನೇಕಕೋಟಿ ಆದಿಪಾಶಂಗಳೆಂಬ ಆದಿಸಿದ್ಧಾಂತ ಜ್ಞಾನತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಪತಿಗಳು, ಅನೇಕಕೋಟಿ ಪಶುಗಳು, ಅನೇಕಕೋಟಿ ಪಾಶಂಗಳೆಂಬ ಸಿದ್ಧಾಂತ ಜ್ಞಾನತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿ ತತ್‍ಪದ, ಅನೇಕಕೋಟಿ ಅನಾದಿ ತ್ವಂಪದ, ಅನೇಕಕೋಟಿ ಅನಾದಿ ಅಸಿಪದಂಗಳೆಂಬ ಅನಾದಿ ವೇದಾಂತಪದತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಆದಿ ತತ್‍ಪದ, ಅನೇಕಕೋಟಿ ಆದಿ ತ್ವಂಪದ, ಅನೇಕಕೋಟಿ ಆದಿ ಅಸಿಪದಂಗಳೆಂಬ ಆದಿ ವೇದಾಂತಪದತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ತ್ವಂಪದಂಗಳು, ಅನೇಕಕೋಟಿ ತತ್ಪದಂಗಳು, ಅನೇಕಕೋಟಿ ಅಸಿಪದಂಗಳೆಂಬ ವೇದಾಂತ ಪದತ್ರಯಂಗಳಡಗಿಹವು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿ ಸದಾಶಿವರು, ಅನೇಕಕೋಟಿ ಅನಾದಿ ಈಶ್ವರರು, ಅನೇಕಕೋಟಿ ಅನಾದಿ ಮಾಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಅನಾದಿಸದಾಶಿವರು, ಅನೇಕಕೋಟಿ ಅನಾದಿ ಈಶ್ವರರು, ಅನೇಕಕೋಟಿ ಅನಾದಿ ಮಾಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಸದಾಶಿವರು, ಅನೇಕಕೋಟಿ ಈಶ್ವರರು, ಅನೇಕಕೋಟಿ ಮಾಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮರು, ಅನೇಕಕೋಟಿ ಆದಿಬ್ರಹ್ಮರು, ಅನೇಕಕೋಟಿ ನಾರಾಯಣರು, ಅನೇಕಕೋಟಿ ಆದಿನಾರಾಯಣರು, ಅನೇಕಕೋಟಿ ರುದ್ರರು, ಅನೇಕಕೋಟಿ ಆದಿರುದ್ರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಋಷಿಗಳು, ಅನೇಕಕೋಟಿ ಆದಿಋಷಿಗಳು, ಅನೇಕಕೋಟಿ ಭಾನು, ಅನೇಕಕೋಟಿ ಆದಿಭಾನು, ಅನೇಕಕೋಟಿ ಚಂದ್ರರು, ಅನೇಕಕೋಟಿ ಆದಿಚಂದ್ರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಇಂದ್ರರು, ಅನೇಕಕೋಟಿ ಆದಿಮಹೇಂದ್ರರು, ಅನೇಕಕೋಟಿ ದೇವರ್ಕಳು, ಅನೇಕಕೋಟಿ ಆದಿದೇವರ್ಕಳಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮಾಂಡಂಗಳು, ಅನೇಕಕೋಟಿ ಮಹಾಬ್ರಹ್ಮಾಂಡಂಗಳು, ಅನೇಕಕೋಟಿ ಆದಿಮಹಾಬ್ರಹ್ಮಾಂಡಂಗಳು ಅಡಗಿಹವು ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ನಡುವೇ ವ್ಯೋಮಾತೀತಪ್ರಣವವು. ಆ ಅಖಂಡ ಮಹಾಮೂಲಸ್ವಾಮಿಯ ಕಟಿಸ್ಥಾನವೇ ಚಿತ್ಕಲಾತೀತಪ್ರಣವ. ಆ ಅಖಂಡ ಮಹಾಮೂಲಸ್ವಾಮಿಯ ಪಚ್ಚಳವೇ ಅನಾದಿಪ್ರಣವ ಆದಿಪ್ರಣವ ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಉಪಸ್ಥವೇ ಅನೇಕಕೋಟಿ ಬ್ರಹ್ಮ-ವಿಷ್ಣು-ರುದ್ರ-ಈಶ್ವರ-ಸದಾಶಿವ ಮೊದಲಾದ ಅನೇಕಕೋಟಿ ದೇವರ್ಕಳಿಗೂ ಜನನಸ್ಥಲವಾಗಿಹ ನಿರ್ವಾಣಪ್ರಣವ ನೋಡಾ. ಕಲಾನಂದಪ್ರಣವ ಬ್ರಹ್ಮಾನಂದಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಒಳದೊಡೆ ನೋಡಾ. ಚಿಜ್ಜ್ಯೋತಿಪ್ರಣವ, ಪರಂಜ್ಯೋತಿಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಒಳಪಾದ ಕಂಭಂಗಳು ನೋಡಾ. ನಿಶ್ಶಬ್ದಪ್ರಣವ, ನಿಶ್ಶಬ್ದಾನಂದಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಹರಡು ನೋಡಾ. ಓಂಕಾರಪ್ರಣವ ಮಹದೋಂಕಾರಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಪಾದಂಗಳು ನೋಡಾ. ಆ ಓಂಕಾರ ಪ್ರಣವದ ತಾರಕಸ್ವರೂಪ ದಂಡಕಸ್ವರೂಪ ಕುಂಡಲಾಕಾರ ಅರ್ಧಚಂದ್ರಕ ದರ್ಪಣಾಕಾರ ಜ್ಯೋತಿಸ್ವರೂಪವೆಂಬ ಪ್ರಣವದತ್ತತ್ತ ಸ್ಥಾನಂಗಳೇ ಆ ಅಖಂಡ ಮಹಾಮೂಲಸ್ವಾಮಿಯ ಪದಾಂಗುಲಿಗಳು ನೋಡಾ. ಆ ಓಂಕಾರಪ್ರಣವದ ಮಹದೋಂಕಾರಪ್ರಣವದ ಮಹಾಪ್ರಕಾಶವೇ ಆ ಅಖಂಡ ಮಹಾಮೂಲಸ್ವಾಮಿಯ ಪಾದಾಂಗುಷಾ*ಂಗುಲಿಗಳು ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಸರವೇ ಪರಾತೀತಪ್ರಣವ ನೋಡಾ. ಆ ಅಖಂಡ ಮಹಾಮೂಲಸ್ವಾಮಿಯ ಮಾತೇ ಮಹಾಜ್ಯೋತಿ ಪ್ರಣವಕತ್ತತ್ತವಾಗಿಹ ಅತಿಮಹಾಜ್ಯೋತಿಪ್ರಣವ ನೋಡಾ. ಶೂನ್ಯ-ನಿಃಶೂನ್ಯ ಆ ಮಹಾಶೂನ್ಯಕತ್ತತ್ತವಾದ ಮಹದಾನಂದಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ವಪೆ ನೋಡಾ. ಆ ಅಖಂಡ ಮಹಾಮೂಲಸ್ವಾಮಿಯಲ್ಲಿ ಅನಂತಕೋಟಿ ನಿರಾಳಸ್ವಯಂಭುಲಿಂಗ ಅಡಗಿಹವಾಗಿ ಆ ನಿರಾಳಸ್ವಯಂಭುಲಿಂಗಂಗಳೇ ಸ್ಥಾನದಲ್ಲಿ ಧರಿಸಿಹ ಭೂಷಣಂಗಳು ನೋಡಾ. ಜ್ಞಾನಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ತುರುಬು ನೋಡಾ. ಆನಂತಕೋಟಿ ಪ್ರಣವಂಗಳನೊಳಕೊಂಡಿಹ ಮಹಾಭೂತಪ್ರಣವವೇ ಆ ಅಖಂಡ ಮಹಾಮೂಲಸ್ವಾಮಿಯ ಶೃಂಗಾರ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಕಟಾ, ರಾಟಾಳದ ಘಟದಂತೆ ಭವಾರಣ್ಯದೊಳು ತಿರುಗಿತಿರುಗಿ ಸತ್ತು ಸತ್ತು ಹುಟ್ಟುವಂತಿದ್ದೆನಯ್ಯಾ. ಅದು ಎಂತೆಂದರೆ : ಶ್ವೇದಜ ಉದ್ಬಿಜ ಜರಾಯುಜ ಅಂಡಜವೆಂಬ ನಾಲ್ಕು ತೆರದ ಮುಖ್ಯ ಆನೆ ಕಡೆ ಇರುವೆ ಮೊದಲು ಎಂಬತ್ತುನಾಲ್ಕು ಲಕ್ಷ ಜೀವರಾಶಿಯಲ್ಲಿ ಒಂದೊಂದು ಯೋನಿಯಲ್ಲಿ ಸಾವಿರಬಾರಿ ತಿರುಗಿ, ಆವಾವ ಜನ್ಮದಲ್ಲಿ ಆವಾವ ಆಹಾರವನುಂಡು, ಆವಾವ ಭೂಮಿಯಲ್ಲಿ ಪುಟ್ಟಿ, ಆವಾವ ಕರ್ಮವ ಕಂಡು, ಭಂಗ ಬಡುತ್ತಿದ್ದುದಯ್ಯಾ ಶರೀರ. ಸಾಕ್ಷಿ :``ನಾನಾಯೋನಿಸಹಸ್ರಾಣಿ ಕೃತಂ ಚೈವ ತು ಮಾಯಯಾ | ಅನೇಕಂ ವಿವಿಧಾಹಾರಂ ಪೀತಾಶ್ಚ ವಿವಿಧಾಃ ಸ್ತನಾಃ ||'' ಎಂದುದಾಗಿ, ಇಂತಪ್ಪ ಸಂಸಾರಭ್ರಾಂತಿನ ಬಲೆಯ ತೊಲಗಿಸಿ ನಿಃಸಂಸಾರಿಯಾಗಿಪ್ಪ ಶರಣರ ಪಾದಕ್ಕೆ ನಮೋ ನಮೋಯೆಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಬಸವಣ್ಣನ ಪ್ರಸಾದವ ಕೊಂಡ ಕಾರಣ ಎನಗೆ ಭಕ್ತಿ ಸಾಧ್ಯವಾಯಿತ್ತು. ಚೆನ್ನಬಸವಣ್ಣನ ಪ್ರಸಾದವ ಕೊಂಡ ಕಾರಣ ಎನಗೆ ಜ್ಞಾನ ಸಾಧ್ಯವಾಯಿತ್ತು. ಪ್ರಭುದೇವರ ಪ್ರಸಾದವ ಕೊಂಡ ಕಾರಣ ಎನಗೆ ವೈರಾಗ್ಯ ಸಾಧ್ಯವಾಯಿತ್ತು. ಇಂತೀ ಮೂವರು ಒಂದೊಂದು ಕೊಟ್ಟ ಕಾರಣ ಎನಗೆ ಸರ್ವವೂ ಸಾಧ್ಯವಾಯಿತ್ತು. ಏಣಾಂಕಧರ ಸೋಮೇಶ್ವರಾ, ನಿಮ್ಮ ಶರಣರೆನ್ನ ಮಾತಾಪಿತರು.
--------------
ಬಿಬ್ಬಿ ಬಾಚಯ್ಯ
ಗರ್ಭದಾ ಅಂತ್ಯದಲ್ಲಿ ಒಬ್ಬನೆಯಿದ್ದ ಅಯ್ಯಾ, ಸರ್ಬಗತ ನೀನೆ ಕಂಡಾ ಅಯ್ಯಾ. ಒಂದೊಂದು ಪರಿಯಲ್ಲಿ ಆಡುವಾನಂದ ಗುಣವ ನೋಡಯ್ಯಾ. ಶೂನ್ಯ ಶೂನ್ಯಕಾಯನಾ ಕರಸ್ಥಲಕೆ ದೇವನಾದೆ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->