ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು. ಮಾಡಿದಡೆ ಮಾಡಲಿ, ಮಾಡಿದಡೆ ತಪ್ಪೇನು ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದಡೆ ಅದು ಪ್ರಸಾದವಲ್ಲ, ಕಿಲ್ಬಿಷ. ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದಡೆ, ಅದು ಲಿಂಗಕ್ಕೆ ಬೋನ. ಇದು ಕಾರಣ, ಕೂಡಲಸಂಗಮದೇವಾ, ಇಂತಪ್ಪ ಸದಾಚಾರಿಗಳನೆನಗೆ ತೋರಾ 400
ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯಾ. ಪಶುವೇನ ಬಲ್ಲುದು ಹಸುರೆಂದೆಠಸುವುದು. ವಿಷಯರಹಿತನ ಮಾಡಿ, ಭಕ್ತಿರಸವ ದಣಿಯೆ ಮೇಯಿಸಿ, ಸುಬುದ್ಧಿಯೆಂಬ ಉದಕವನೆರೆದು, ನೋಡಿ ಸಲಹಯ್ಯಾ, ಕೂಡಲಸಂಗಮದೇವಾ.
ಮಾಡುವಲ್ಲಿ ಎನ್ನ ನಾನರಿದು ಮಾಡಿದೆನಾದಡೆ, ನೀಡುವಲ್ಲಿ ಎನ್ನ ನಾನರಿದು ನೀಡಿದೆನಾದಡೆ, ನೀಡುವಲ್ಲಿ ರುಚಿಗೆ ಮನವೆಳೆಸಿ ಹಾರೈಸಿದೆನಾದಡೆ, ನಿಮಗಂದೆ ದ್ರೋಹವಯ್ಯಾ. ಮಾಡುವಲ್ಲಿ ನೀಡುವಲ್ಲಿ ಕೂಡೆ ಶುದ್ಧನಲ್ಲದಿರ್ದಡೆ, ನೀನಂದೆ ಮೂಗ ಕೊಯಿ ಕೂಡಲಸಂಗಮದೇವಾ.
ಕಾಣದಠಾವಿನಲಿ ಜರೆದರೆಂದಡೆ ಕೇಳಿ ಪರಿಣಾಮಿಸಬೇಕು. ಅದೇನು ಕಾರಣ ಕೊಳ್ಳದೆ ಕೊಡದೆ ಅವರಿಗೆ ಸಂತೋಷವಹುದಾಗಿ ! ಎನ್ನ ಮನದ ತದ್ದ್ವೇಷವಳಿದು ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು, ಕೂಡಲಸಂಗಮದೇವಾ. 250