ಅಥವಾ

ಒಟ್ಟು 197 ಕಡೆಗಳಲ್ಲಿ , 36 ವಚನಕಾರರು , 144 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಲಿಂಗ ಉದಯವಾದ ಉದಯವ ನೋಡಿರಯ್ಯಾ. ಹಿಂದೆ ಕತ್ತಲೆ ಮುಂದೆ ಬೆಳಗಾಯಿತ್ತು ! ಬೆಳಗು ಬೆಳದಿಂಗಳಾಯಿತ್ತು. ಕೂಡಲಚೆನ್ನಸಂಗಯ್ಯನಲ್ಲಿ ಒಲವಿನ ಉದಯದ ದರ್ಪಣದಿಂದ.
--------------
ಚನ್ನಬಸವಣ್ಣ
ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಇಂದ್ರಲೋಕದವರೆಲ್ಲರೂ ಸೂತಕಲಾಸಂಹಾರಿ ಬಸವ ಎಂದೆಂಬರು. ಚಂದ್ರಲೋಕದವರೆಲ್ಲರೂ ಷೋಡಶಕಲಾ ಪರಿಪೂರ್ಣ ಬಸವಾ ಎಂದೆಂಬರು. ಯುಗಕೋಟಿಬ್ರಹ್ಮರೆಲ್ಲರೂ ಪರಶಿವ ಬಸವಾ ಎಂದೆಂಬರು. ಹರಿವಿರಿಂಚಿಗಳೆಲ್ಲರೂ ಗುರುಲಿಂಗ ಬಸವಾ ಎಂದೆಂಬರು. ಅಷ್ಟದಿಕ್ಪಾಲಕರೆಲ್ಲರೂ ಪರಶಿವ ಬಸವಾ ಎಂದೆಂಬರು. ಸುರಪಡೆಯಲ್ಲಾ ಅಮೃತಸಾಗರ ಬಸವಾ ಎಂದೆಂಬರು. ನವನಾಥಸಿದ್ಧರೆಲ್ಲರೂ ಪರಮಘುಟಿಕೆ ಬಸವಾ ಎಂದೆಂಬರು. ಲಂಬೋದರ ಕುಂಭೋದರ ದಾರುಕ ರೇಣುಕ ಗೌರೀಸುತ ತಾಂಡವರೆಲ್ಲರೂ ಸಕಲಜೀವಚೈತನ್ಯ ಮಾತ್ರ ಬಸವಾ ಎಂದೆಂಬರು. ಓತವರೆಲ್ಲರೂ ಮಾತಾಪಿತ ಬಸವಾ ಎಂದೆಂಬರು. ಒಲಿದವರೆಲ್ಲರೂ ಪ್ರಾಣ ಪರಿಣಾಮಿ ಬಸವಾ ಎಂದೆಂಬರು. ಆನೇನೆಂಬೆನು, ಉಪಮಿಸಬಾರದ ಮಹಾಘನ ಮಹಿಮನ.
--------------
ಮಡಿವಾಳ ಮಾಚಿದೇವ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಮುಂತಾಗಿರ್ದ ದೃಷ್ಟ ಅರ್ಪಿತಂಗಳ ಅರ್ಪಿಸುವಲ್ಲಿ ಗಂಧದಿಂದ ಸುಳಿವ ನಾನಾ ಸುಗಂಧವ ರಸದಿಂದ ಬಂದ ನಾನಾ ರಸಂಗಳ ರೂಪಿನಲ್ಲಿ ಕಾಣಿಸಿಕೊಂಬ ನಾನಾ ಚಿತ್ರ ವಿಚಿತ್ರ ಖಂಡಿತ ಅಖಂಡಿತಮಪ್ಪ ದೃಷ್ಟಾಂತಂಗಳಲ್ಲಿ ಸ್ಪರ್ಶನದಲ್ಲಿ ಮೃದುಕಠಿಣದೊಳಗಾದ ಮುಟ್ಟುತಟ್ಟಿನ ಭೇದವ ಲಕ್ಷಿಸುವಲ್ಲಿ ಶಬ್ದದಿಂದ ಸಪ್ತಸ್ವರದೊಳಗಾದ ನಾನಾ ಘೋಷ ವಾಸನಂಗಳ ಅಳಿದುಳಿದು ತೋರುವ ಸುನಾದ ಸಂಚುಗಳಲ್ಲಿ -ಇಂತೀ ಪಂಚೇಂದ್ರಿಯಂಗಳಲ್ಲಿ ಪ್ರಸಾದ ಮುಂತಾಗಿ ಅರ್ಪಿಸಿಕೊಂಡೆಹೆವೆಂಬಲ್ಲಿ ಗುರುಪ್ರಸಾದಿಗೆ ಲಿಂಗಪ್ರಸಾದವಿಲ್ಲ. ಲಿಂಗಪ್ರಸಾದಿಗೆ ಜಂಗಮಪ್ರಸಾದವಿಲ್ಲ. ಜಂಗಮಪ್ರಸಾದಿಗೆ ಮಹಾಪ್ರಸಾದವಿಲ್ಲ. ಮಹಾಪ್ರಸಾದಿಗೆ ಪರಿಪೂರ್ಣ ಪ್ರಸಾದವಿಲ್ಲ. ಪರಿಪೂರ್ಣಪ್ರಸಾದಿಗೆ ಪಂಚೇಂದ್ರಿಯದೊಳಗಾದ ಮುಟ್ಟಿನ ಪ್ರಸಾದ, ಕಟ್ಟಿನ ಸೂತಕವಿಲ್ಲ. ಅದೆಂತೆಂದಡೆ: ಕರ್ಪೂರದ ಚಿತ್ರಸಾಲೆಯ ಕಿಚ್ಚು ಮುಟ್ಟಿದ ಮತ್ತೆ ಚಿತ್ರವಲ್ಲಿಯೆ ನಿರ್ಲಕ್ಷ್ಯವಾದಂತೆ ಪತ್ರಂಗಳಲ್ಲಿ ನಾನಾ ಅಕ್ಷರಂಗಳ ಲಕ್ಷಿಸಿ ಬರೆದು ಅವು ಕಿಚ್ಚು ಮುಟ್ಟಿ ಸುಟ್ಟಲ್ಲಿ ಎತ್ತಿ ಪ್ರತಿಯ ಲಕ್ಷಿಸಬಹುದೆ ? ಇಂತೀ ಅರಿದರುಹಿನಲ್ಲಿ ಎಡೆದೆರಪಿಲ್ಲದ ಪ್ರಸಾದಿಗೆ ಆ ಗುಣ ಪ್ರಸನ್ನಪ್ರಸಾದಿಯ ಇರವು ದಹನ ಚಂಡಿಕೇಶ್ವರಲಿಂಗದಿರವು.
--------------
ಪ್ರಸಾದಿ ಲೆಂಕಬಂಕಣ್ಣ
ಶಿವ ಶಿವ ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ [ಪ್ರಾ]ಣಲಿಂಗವಾದನಾಗಿ [ಪ್ರಾ]ಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.
--------------
ಉರಿಲಿಂಗಪೆದ್ದಿ
ಆಚಾರಲಿಂಗ ನಾಸ್ತಿಯಾದಲ್ಲದೆ ಭಕ್ತನಲ್ಲ. ಗುರುಲಿಂಗ ನಾಸ್ತಿಯಾದಲ್ಲದೆ ಮಾಹೇಶ್ವರನಲ್ಲ. ಶಿವಲಿಂಗ ನಾಸ್ತಿಯಾದಲ್ಲದೆ ಪ್ರಸಾದಿಯಲ್ಲ. ಜಂಗಮಲಿಂಗ ನಾಸ್ತಿಯಾದಲ್ಲದೆ ಪ್ರಾಣಲಿಂಗಿಯಲ್ಲ. ಪ್ರಸಾದಲಿಂಗ ನಾಸ್ತಿಯಾದಲ್ಲದೆ ಶರಣನಲ್ಲ, ಇಂತೀ ಷಡಂಗಗಳು ಕೆಟ್ಟಲ್ಲದೆ ಸೌರಾಷ್ಟ್ರ ಸೋಮೇಶ್ವರನಲ್ಲಿ ಲಿಂಗೈಕ್ಯನಲ್ಲ.
--------------
ಆದಯ್ಯ
ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ತಾನಾರೆಂದರಿವುದು ಭಕ್ತಿ. ಭಕ್ತಿಯೆಂಬುದು ಹಿಂದೋ ಮುಂದೋ? ಗುರುಲಿಂಗ ಜಂಗಮವೆಂದರಿಯದೆ ಮಾಡುವ ಭಕ್ತಿ ಅದೇ ಅನಾಚಾರ:ಅವರು ಪ್ರಸಾದಕ್ಕೆ ದೂರ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ, ನಿಮ್ಮ ಶರಣರಿಗಲ್ಲದಳವಡದು.
--------------
ಉರಿಲಿಂಗಪೆದ್ದಿ
ಪ್ರಸಾದ ಸೋಂಕಿದ ತನುವೆಲ್ಲ ಲಿಂಗಮಯ, ರೋಮರೋಮವೆಲ್ಲ ಲಿಂಗ. ಆ ಭಕ್ತಂಗೆ ಆಧಾರಸ್ಥಾನವೆ ನಿಜಸ್ಥಾನ. ಆಧಾರಚಕ್ರದಲ್ಲಿ ನಾಲ್ಕೆಸಳಿನ ತಾವರೆ ಕಮಲದ ಮಧ್ಯದಲ್ಲಿ ಬಾಲಾರ್ಕಕೋಟಿ ಸೂರ್ಯಪ್ರಕಾಶನುಳ್ಳುದು ಆಚಾರಲಿಂಗ. ಆ ಭಕ್ತನ ಗುಹ್ಯದಲ್ಲಿ ಗುರುಲಿಂಗ, ಆ ಭಕ್ತನ ಮಣಿಪೂರಕದಲ್ಲಿ ಶಿವಲಿಂಗ. ಆ ಭಕ್ತನ ಅನಾಹತದಲ್ಲಿ ಜಂಗಮಲಿಂಗವಿಹುದು. ಆ ಭಕ್ತನ ವಿಶುದ್ಧಿಚಕ್ರದಲ್ಲಿ ಪ್ರಸಾದಲಿಂಗವಿಹುದು. ಆ ಭಕ್ತನ ಭ್ರೂಮಧ್ಯದಲ್ಲಿ ಮಹಾಲಿಂಗವಿಹುದು. ಆ ಭಕ್ತನ ಆಧಾರದಲ್ಲಿ ನಕಾರ ಪ್ರಣಮದ ಜನನವು. ಆಣವಮಲ, ಮಾಯಾಮಲ, ಕಾರ್ಮಿಕಮಲ ಅನಂತಕೋಟಿಗಳಿಗೆ ನಕಾರವೇ ಮೂಲ. ಇನ್ನೂರು ಹದಿನಾರು ಭುವನಂಗಳು ಆ ಭಕ್ತನ ಗುದದಲ್ಲಿ ಬಿದ್ದಿದ್ದವಷ್ಟು ಹದಿನೆಂಟುಧಾನ್ಯಕ್ಕೆ ಶಾಕಪತ್ರ ಕಂದಮೂಲ ಫಲಾದಿಗಳಿಗೆ ಭೂಮಿ ಎಂದುದಾಗಿ. ಉಂಬುವದು ಅಗ್ನಿ, ಉಡುವದು ಪೃಥ್ವಿ ಎಂದುದಾಗಿ. ಈ ಜಗವೆಲ್ಲ ಮಲವನೆ ಭುಂಜಿಸಿ ಮಲವನೆ ವಿಸರ್ಜನೆಯಂ ಮಾಡುವರು. ಇದು ಕಾರಣ ಇದ ಕೊಂಬುವದು ಪ್ರಸಾದವಲ್ಲ. ಕೊಟ್ಟಾತ ಗುರುವಲ್ಲ, ಕೊಂಡಾತ ಸದ್ಭಕ್ತನಲ್ಲ. ಈ ಪ್ರಸಾದವ ಕೊಳ್ಳಬಲ್ಲರು ನಮ್ಮ ಶರಣರು. ಪ್ರಸಾದವೆಂತೆಂದಡೆ : ಅವರ್ಣ, ಆದಿ, ಅವ್ಯಕ್ತ. ಆ ನಾಮವು, ಭರ್ಗೋದೇವಾದಿ ಪಂಚಮೂರ್ತಿಗಳಿಗೆ ಆಶ್ರಯವಾಯಿತು. ಕರಣಚತುಷ್ಟಯಂಗಳಿಗೆ ನಿಲುಕದು. ಪ್ರಾಣಾದಿ ವಾಯುಗಳಿಗೆ, ಶ್ರೋತ್ರಾದಿ ಜ್ಞಾನೇಂದ್ರಿಯಂಗಳಿಗೆ ಅಗಮ್ಯ. ವಾಕ್ಕಾದಿ ಕರ್ಮೇಂದ್ರಿಯಗಳಿಗೆ ತೋರದು. ನಿಜಾನಂದ ನಿತ್ಯಪರಿಪೂರ್ಣ ಪ್ರಸಾದವು ಚೆನ್ನಯ್ಯಪ್ರಿಯ ನಿರ್ಮಾಯ ಪ್ರಭುವೆ, ನಿಮ್ಮ ಶರಣರಿಗಲ್ಲದೆ ಉಳಿದ ಜಡಜೀವಿಗಳಿಗೆ ಅಸಾಧ್ಯ.
--------------
ಚೆನ್ನಯ್ಯ
ಗುರುಜಂಗಮದ ಪಾದತೀರ್ಥವೆ ಪವಿತ್ರವೆಂದು ತಿಳಿದು ಲಿಂಗಾಭಿಷೇಕಂಗೆಯ್ವುದಯ್ಯಾ. ಆ ಗುರುಲಿಂಗ ಜಂಗಮದಲ್ಲಿ ಭೇದವ ಕಲ್ಪಿಸಿದಡೆ ಪಾಪವು ಸಂಘಟಿಸುವುದಯ್ಯಾ. ಮನುಷ್ಯನ ಕಾಲ್ದೊಳೆದ ನೀರು ಪರಮತೀರ್ಥವೆಂದು ಭಾವಿಸಿ ಲಿಂಗಕ್ಕೆರೆವುದು ಶಾಸ್ತ್ರಾಚಾರಕ್ಕೆ ವಿರೋಧ_ ಎಂಬ ಕುಹಕಿಗಳ ಕೀಳ್ನುಡಿಯ ಕೇಳಲಾಗದಯ್ಯಾ. ಗುರುರ್ಲಿಂಗಜಂಗಮಶ್ಚ ತ್ರಿತಯಂ ಚೈಕಮೇವ ಹಿ ಅತ ಏವ ಪದೋದಾಭಿಷೇಚನಂ ಶಿವಲಿಂಗಕೇ ಕುರ್ವಂತ್ಯಭೇದದೃಷ್ಟ್ಯಾ ಚ ಭೇದಕೃತ್ಪಾಪಮಶ್ನುತೇ ಎಂದುದಾಗಿ ಇಂತಿಪ್ಪುದನಾರಯ್ಯದೆ ಗಳಹುವ ಮಂದಮತಿಗಳ ಎನ್ನತ್ತ ತೋರದಿರಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಗುರುಕಾರುಣ್ಯವಂ ಪಡೆದು ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಭಕ್ತನಾಗಲಿ ಜಂಗಮನಾಗಲಿ ಭಕ್ತಿ ಭೃತ್ಯಾಚಾರ ಸಂಪನ್ನರಾಗಿ ಗುರುಲಿಂಗ ಜಂಗಮವನಾರಾಧಿಸಿ, ಪ್ರಸಾದವಕೊಂಡು ನಿಜಮುಕ್ತರಾಗಲರಿಯದೆ ಪರಮಪಾವನಪ್ಪ ಗುರುರೂಪ ಹೊತ್ತು ಮತ್ತೆ ತಾವು ಪರಸಮಯದಂತೆ ದೂಷಕ ನಿಂದಕ ಪರವಾದಿಗಳಾಗಿ ಭಕ್ತ ಜಂಗಮ ಪ್ರಸಾದವನೆಂಜಲೆಂದು ಅತಿಗಳೆದು ತೊತ್ತು ಸೂಳೆಯರೆಂಜಲ ತಿಂದು ಮತ್ತೆ ನಾ ಘನ ತಾ ಘನವೆಂದು ಸತ್ಯ ಸದ್ಭಕ್ತಯಕ್ತರಾದ ಭಕ್ತಜಂಗಮವ ಜರೆದು, ಅವರ ಕುಲವೆತ್ತಿ ಕೆಡೆನುಡಿದು ಹೊಲತಿ ಮಾದಿಗಿತ್ತಿಯರಿಗುರುಳಿ ಹಲವು ದೈವದೆಂಜಲತಿಂದು ಮತ್ತೆ ತಾವು ಕುಲಜರೆಂದು ಬಗುಳುವ ಹೊಲೆ ಜಂಗುಳಿಗಳೆಲ್ಲರು ಈ ಗುರು ಕೊಟ್ಟಲಿಂಗವಿರಲು ಅದನರಿಯದೆ ಶ್ರೀಶೈಲ, ಹಂಪಿ, ಕಾಶಿ, ಕೇತಾರ ಗಯಾ ಪ್ರಯಾಗ ರಾಮೇಶ್ವರ ಆದಿಯಾದ ಹೊಲೆಕ್ಷೇತ್ರಂಗಳಲ್ಲಿ ಆಸಕ್ತರಾಗಿ ಹೋಗಿ ಅಲ್ಲಲ್ಲಿಯ ಭವಿಶೈವದೈವಂಗಳ ದರ್ಶನ ಸ್ಪರುಶನ ಆರಾಧನೆಗಳ ಮಾಡಿ ಅವಕ್ಕೆ ಶರಣೆಂದು ಅವರೆಂಜಲ ತಿಂದು ಆ ಕ್ಷೇತ್ರಂಗಳಲ್ಲಿ ಆಶ್ರಮಸ್ಥರಾಗಿರ್ದು ಗತಿಪದ ಮುಕ್ತಿಯ ಪಡೆವೆನೆಂಬ ವೇಷಧಾರಿಗಳೆಲ್ಲರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರವೇಳೆ ಬಪ್ಪುದು ತಪ್ಪುದು. ಅದೆಂತೆಂದೊಡೆ ; ಇದಂ ತೀರ್ಥಮಿದಂ ತೀರ್ಥಂ ಭ್ರಮಂತಿ ತಾಮಸಾ ನರಾಃ ಶಿವಜ್ಞಾನೇನ ಜಾನಂತಿ ಸರ್ವತೀರ್ಥನಿರರ್ಥಕಂ ಪ್ರಾಣಲಿಂಗಮವಿಶ್ವಾಸ್ಯ ತೀರ್ಥಲಿಂಗಂತು ವಿಶೇಷತಃ ಶ್ವಾನಯೋನಿಶತಂ ಗತ್ವಾಶ್ಚಾಂಡಾಲಂ ಗೃಹಮಾಚರೇತ್ ಚರಶೇಷ ಪರಿತ್ಯಾಗಾದ್ಯೋಜನಾದ್ಭಕ್ತ ನಿಂದಕಾಃ ಅನ್ಯಪಣ್ಯಾಂಗನೋಚ್ಚಿಷ್ಟಂ ಭುಂಜಯಂತಿರೌರವಂ-ಇಂತೆಂದುದಾಗಿ, ಇದು ಕಾರಣ, ಇಂತಪ್ಪ ಅನಾಚಾರಿಗಳು ಭಕ್ತ ಜಂಗಮ ಸ್ಥಲಕ್ಕೆ ಸಲ್ಲರು. ಅವರಿರ್ವನು ಕೂಡಲಚೆನ್ನಸಂಗಯ್ಯ ಸೂರ್ಯ-ಚಂದ್ರರುಳ್ಳನ್ನಕ್ಕ ನಾಯಕನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ತನುವಿಂಗೆ ಗುರುಲಿಂಗ, ಮನಕ್ಕೆ ಆಚಾರಲಿಂಗ, ಆಚಾರಕ್ಕೆ ಅರಿವೆ ಲಿಂಗವಾಗಿ, ಅರಿವೇ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವೆಂಬುದಕ್ಕೆ ಕುರುಹಾಯಿತ್ತು .
--------------
ಶಿವಲೆಂಕ ಮಂಚಣ್ಣ
ಬ್ರಹ್ಮವೆನಲು ಪರಬ್ರಹ್ಮವೆನಲು ಪರಮನೆನಲು ಪರಮೇಶ್ವರನೆನಲು ಪರಮಾತ್ಮನೆನಲು ಪರತತ್ವವೆನಲು ಪರಂಜ್ಯೋತಿಯೆನಲು ಪರವಸ್ತುವೆನಲು ಪರಾಪರವೆನಲು ಇಂತಿವೆಲ್ಲಾ ನಾಮದಲ್ಲಿಯೂ ಪ್ರಕಾಶಿಸುತ್ತಿಪ್ಪಾತನು ಪರಶಿವನು. ಪರಶಿವನೆಂದರೆ ಪರಮಾತ್ಮ. ಪರಮಾತ್ಮನೆಂದರೆ ಮಹಾಲಿಂಗ. ಆ ಮಹಾಲಿಂಗ ತಾನೆ ಪ್ರಸಾದಲಿಂಗವಾಗಿ ಉದ್ಭವಿಸಿತ್ತು. ಪ್ರಸಾದಲಿಂಗದಲ್ಲಿ ಜಂಗಮಲಿಂಗ ಹುಟ್ಟಿತ್ತು. ಜಂಗಮಲಿಂಗದಲ್ಲಿ ಶಿವಲಿಂಗ ಹುಟ್ಟಿತ್ತು. ಶಿವಲಿಂಗದಲ್ಲಿ ಗುರುಲಿಂಗ ಜನಿಸಿತ್ತು. ಗುರುಲಿಂಗ ಆಚಾರಲಿಂಗ ಉತ್ಪತ್ಯವಾಯಿತ್ತು. ಇಂತೀ ಷಡ್ವಿಧಲಿಂಗವೂ ಒಂದರಿಂದೊಂದಾದವು. ಒಂದನೊಂದ ಕೂಡಿಹವು. ಇಂತೀ ಷಟ್‍ಸ್ಥಲವೂ ಏಕವೆಂದರಿವುದಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಗುರುಲಿಂಗ ಸಂಯೋಗವಾದಲ್ಲಿ ಶಿವಲಿಂಗದುದಯ. ಶಿವಲಿಂಗ ಸಂಯೋಗವಾದಲ್ಲಿ ಜಂಗಮಲಿಂಗದುದಯ. ಜಂಗಮಲಿಂಗ ಸಂಯೋಗವಾದಲ್ಲಿ ಪ್ರಸಾದದುದಯ. [ಪ್ರಸಾದ ಸಂಯೋಗವಾದಲ್ಲಿ ಪ್ರಾಣದುದಯ] ಪ್ರಾಣಸಂಯೋಗವಾದಲ್ಲಿ ಜ್ಞಾನದುದಯ. ಜ್ಞಾನಾನುಭಾವ ಸಂಯೋಗವಾದಲ್ಲಿ ಸುಜ್ಞಾನದುದಯ. ಇಂತೀ ಗುರುವಿನ ಘನವ, ಲಿಂಗದ ನಿಜವ, ಜಂಗಮದ ಮಹಿಮೆಯ, ಪ್ರಸಾದದ ರುಚಿಯ, ಪ್ರಾಣನ ನೆಲೆಯ, ಸುಜ್ಞಾನದ ನಿಲವ, ಮಹಾನುಭಾವದ ಸುಖವನರಿದು ಮರೆದಲ್ಲಿ, ಮಹಾಘನ ಸದ್ಗುರು ಸಿದ್ಧಸೋಮನಾಥನೆಂಬ ಲಿಂಗದಲ್ಲಿ ಜ್ಞಾನಭರಿತವಾದಂದು ಸುಜ್ಞಾನ.
--------------
ಅಮುಗಿದೇವಯ್ಯ
ನಿರಾಮಯವೆಂಬ ಭಕ್ತನ ಅಂಗದಲ್ಲಿ ಝೇಂಕಾರವೆಂಬ ಜಂಗಮವು ಜಂಗಿಟ್ಟು ನಡೆಯಲೊಡನೆ ನಿರಂಜನವಾಯಿತ್ತು. ಆ ನಿರಂಜನದೊಡನೆ ನಿರಾಕಾರವಾಯಿತ್ತು. ಆ ನಿರಕಾರದೊಡನೆ ಆಕಾರಲಿಂಗವಾಗಿ, ಮಂತ್ರಘೋಷವ ಘೋಷಿಸುತಿರ್ಪುದು ನೋಡಾ. ಆ ಲಿಂಗದ ಬೆಳಗಿನೊಳಗೆ ನಾದಪ್ರಭೆ, ಬಿಂದುಪ್ರಭೆ, ಕಳಾಪ್ರಭೆ ಇಂತೀ ತ್ರಿವಿಧಪ್ರಭೆಗಳು ಒಂದೊಂದು ಎರಡೆರಡಾಗಿ ಆರುತೆರನಾಯಿತ್ತು ನೋಡಾ. ನಾದಪ್ರಭೆಯು ಭಕ್ತ-ಮಹೇಶ್ವರ, ಬಿಂದು ಪ್ರಭೆಯು ಪ್ರಸಾದಿ-ಪ್ರಾಣಲಿಂಗಿ, ಕಳಾಪ್ರಭೆಯು ಶರಣ-ಐಕ್ಯ. ಇಂತೀ ಷಡ್ವಿಧಮೂರ್ತಿಗಳಿಗೆ ಷಡ್ವಿಧಲಿಂಗವು. ಅವು ಆವಾವುಯೆಂದೊಡೆ: ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಿಲಿಂಗ ಮಹಾಲಿಂಗ. ಈ ಷಡ್ವಿಧಲಿಂಗಕು ಷಡ್ವಿಧ ಶಕ್ತಿಯರು ಅವು ಆವಾವುಯೆಂದೊಡೆ: ಕ್ರಿಯಾಶಕ್ತಿ, ಜ್ಞಾನಶಕ್ತಿ, ಇಚ್ಫಾಶಕ್ತಿ, ಆದಿಶಕ್ತಿ, ಪರಾಶಕ್ತಿ, ಚಿತ್‍ಶಕ್ತಿ. ಇಂತೀ ಶಕ್ತಿಯರಿಗೂ ಷಡ್ವಿಧಭಕ್ತಿ. ಅವು ಆವಾವುಯೆಂದೊಡೆ: ಸದ್ಭಕ್ತಿ, ನೈಷ್ಠಿಭಕ್ತಿ, ಸಾವಧಾನಭಕ್ತಿ, ಅನುಭಾವಭಕ್ತಿ, ಸಮರತಿಭಕ್ತಿ, ಸಮರಸಭಕ್ತಿ. ಈ ಷಡ್ವಿಧ ಭಕ್ತಿಗೂ ಷಡ್ವಿಧಹಸ್ತ. ಅವು ಆವಾವುಯೆಂದೊಡೆ: ಸುಚಿತ್ತಹಸ್ತ, ಸುಬುದ್ಧಿಹಸ್ತ, ನಿರಹಂಕಾರಹಸ್ತ, ಸುಮನಹಸ್ತ, ಸುಜ್ಞಾನಹಸ್ತ, ನಿರ್ಭಾವಹಸ್ತ, ಈ ಷಡ್ವಿಧಹಸ್ತಗಳಿಗೂ ಷಡ್ವಿಧ ಕಲೆಗಳು. ಅವು ಆವಾವುಯೆಂದೊಡೆ: ನಿವೃತ್ತಿಕಲೆ, ಪ್ರತಿಷ್ಠಕಲೆ, ವಿದ್ಯಾಕಲೆ, ಶಾಂತಿಕಲೆ, ಶಾಂತ್ಯತೀತಕಲೆ, ಶಾಂತ್ಯತೀತೋತ್ತರ ಕಲೆ. ಈ ಷಡ್ವಿಧಕಲೆಗಳಿಗೂ ಷಡ್ವಿಧಪರಂಗಳು. ಅವು ಆವಾವುಯೆಂದೊಡೆ: ಶುದ್ಧಜ್ಞಾನವೇ ಪರ, ಬದ್ಧಜ್ಞಾನವೇ ಪರ, ನಿರ್ಮಲಜ್ಞಾನವೇ ಪರ, ಮನೋಜ್ಞಾನವೇ ಪರ, ಸುಜ್ಞಾನವೇ ಪರ, ಪರಮಜ್ಞಾನವೇ ಪರ. ಈ ಷಡ್ವಿಧಪರಗಳಿಂದತ್ತತ್ತ ಮಹಾಜ್ಞಾನದ ಬೆಳಗು, ಸ್ವಯಜ್ಞಾನದ ತಂಪು, ನಿರಂಜನದ ಸುಖ. ಆ ನಿರಂಜನದ ಸುಖದೊಳಗೆ ಸುಳಿದಾಡುವ ಝೇಂಕಾರವೆಂಬ ಜಂಗಮವ ನಿರಾಮಯವೆಂಬ ಭಕ್ತನೇ ಬಲ್ಲ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇನ್ನಷ್ಟು ... -->