ಅಥವಾ

ಒಟ್ಟು 45 ಕಡೆಗಳಲ್ಲಿ , 23 ವಚನಕಾರರು , 43 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಯ್ಚಿಟ್ಟ ಬಯ್ಕೆಯ ಒಡೆಯ ಕೊಂಡುಹೋದಲ್ಲಿ ನೆಲ ಉಮ್ಮಳಿಸಿದರುಂಟೆ ಅಯ್ಯಾ? ತನ್ನ ವಿಶ್ವಾಸಕ್ಕೆ ಗುರುವೆಂದು ಕಂಡಡೆ, ನಿನ್ನಯ ಗುರುತನದ ಹರವರಿಯೆಂತಯ್ಯಾ? ಅಮೃತವ ಹೊಯಿದಿದ್ದ ಕುಡಿಕೆಯಂತಾಗಬೇಡ ಗುರುತನವಳಿದು ಸ್ವಯಗುರುವಾಗು, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ತಾವು ಗುರುವೆಂದು ಮುಂದಣವರಿಗನುಗ್ರಹವ ಮಾಡುವರಯ್ಯಾ, ತಾವು ಗುರುವೆಂತಾದರೊ ! ಎಲ್ಲರಿಗೆಯೂ ಒಂದೇ ದೇಹ. ``ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ ಆತ್ಮಾಕಾಯಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಯಂ' ಎಂದುದಾಗಿ, ಗುರುವೆಂಬುದು ತಾನು ಪರುಷವು ಆ ಪರುಷವು ಮುಟ್ಟಲೊಡನೆ ಉಳಿದ ಲೋಹಂಗಳು ಸುವರ್ಣವಾದುವಲ್ಲದೆ, ಆ ಪರುಷವೆ ಆಗಲರಿಯವು_ ಅದು ಗುರುಸ್ಥಲವಲ್ಲ ನಿಲ್ಲು ಮಾಣು. ಗುರುವೆಂಬುದು ತಾನು ಸ್ವಯಂ ಜ್ಯೋತಿಪ್ರಕಾಶವು, ಅಂತಪ್ಪ ಸ್ವಯಂಜ್ಯೋತಿ ಪ್ರಕಾಶವ ತಂದು ಪರಂಜ್ಯೋತಿಯ ಹೊತ್ತಿಸಿದಡೆ, ಆ ಜ್ಯೋತಿ ತನ್ನಂತೆ ಮಾಡಿತ್ತು. ಅದಾವ ಜ್ಯೋತಿಯೆಂದಡೆ ಪಶ್ಚಿಮಜ್ಯೋತಿ. ಆ ಪಶ್ಚಿಮಜ್ಯೋತಿಯ ಬೆಳಗಿನಿಂದ ಪ್ರಾಣಲಿಂಗವ ಕಂಡು ಸುಖಿಯಾದೆನು. ನಾಲ್ಕು ವೇದಾರ್ಥ:ಅಜಪಗಾಯತ್ರಿ. ಅಜಪಗಾಯತ್ರಿಯರ್ಥ:ಪ್ರಾಣಾಯಾಮ. ಪ್ರಾಣಾಯಾಮದಿಂದ ಪ್ರಾಣಲಿಂಗ ಸಂಬಂಧವ ಮಾಡೂದು. ಇಷ್ಟರಲ್ಲಿ ತಾನು ಸ್ವತಂತ್ರನಾದಡೆ, ಇಷ್ಟಲಿಂಗವನಾರಿಗಾದರೂ ಕೊಡುವುದು. ಇಲ್ಲದಿದ್ದರೆ ಅಂಧಕನ ಕೈಯ ಹೆಳವ ಹಿಡಿದಂತೆ ಕಾಣಾ ಕೂಡಲಚೆನ್ನಸಂಗಮದೇವಯ್ಯಾ
--------------
ಚನ್ನಬಸವಣ್ಣ
ಗುರುವೆಂದು ಇದಿರಿಟ್ಟಲ್ಲಿ ಗುರುದ್ರೋಹ. ಲಿಂಗವೆಂದು ಸಂದೇಹಿಸಿದಲ್ಲಿ ಲಿಂಗದ್ರೋಹ. ಜಂಗಮವೆಂದು ಉಭಯದಲ್ಲಿಕಂಡಡೆ ಜಂಗಮದ್ರೋಹ. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವೆಂದು ಇದಿರೆಡೆಯಾಡಿದಡೆ ಮಹಾದ್ರೋಹ.
--------------
ಪ್ರಸಾದಿ ಭೋಗಣ್ಣ
ಶಿವ ಗುರುವೆಂದು ನಂಬಿಪ್ಪಾತನೆ ಶಿವಭಕ್ತ. ಶಿವ ಲಿಂಗವೆಂದು ನಂಬಿಪ್ಪಾತನೆ ಶಿವಭಕ್ತ. ಶಿವ ಜಂಗಮವೆಂದು ನಂಬಿಪ್ಪಾತನೆ ಶಿವಭಕ್ತ. ಶಿವ ಪಾದೋದಕ ಪ್ರಸಾದವೆಂದು ನಂಬಿಪ್ಪಾತನೆ ಶಿವಭಕ್ತ. ಗುರುಲಿಂಗಜಂಗಮದ ಪಾದೋದಕ ಪ್ರಸಾದದ ಬಂದ ಬಟ್ಟೆಯನರಿಯದೆ ಬರಿದೆ ಭಕ್ತರೆಂದು ಅನ್ಯವನಾಶ್ರಯಿಸಿ ಅನ್ಯದೈವಕೆರಗುವ ಕುನ್ನಿಮಾನವರನೆಂತು ಭಕ್ತರೆಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಒಡೆಯರು ಭಕ್ತರಿಗೆ ಸಲುವ ಸಹಪ:ಕ್ತಿಯಲ್ಲಿ ಗುರುವೆಂದು, ಅರಸೆಂದು, ತನ್ನ ಪರಿಸ್ಪಂದದವರೆಂದು, ರಸದ್ರವ್ಯವನೆಸಕದಿಂದ ನೀಡಿದೊಡೆ, ಅದ ನಾನರಿದು ಕೈಕೊಂಡಡೆ ಕಿಸುಕುಳದ ಪಾಕುಳಕಿಚ್ಚೈಸಿದಂತೆ ; ಅಲ್ಪ ಜಿಹ್ವಾಲಂಪಟಕ್ಕೆ ಸಿಕ್ಕಿದ ಮತ್ಸ್ಯ ಬಂಧನದಿ ಸತ್ತಂತೆ. ಇದನರಿದು ಭಕ್ತನಾಗಲಿ, ಗುರುವಾಗಲಿ, ಜಂಗಮವಾಗಲಿ, ಶಿವಗಣಪ:ಕ್ತಿಯ ನಡುವೆ ತಾ ಕುಳ್ಳಿರ್ದು ಮಿಗಿಲಾಗಿ ಷಡುರಸಾನ್ನವಾದಿಯಾದ ಸುಪದಾರ್ಥಂಗಳನಿಕ್ಕಿಸಿಕೊಂಡು ತಿಂದನಾದಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.
--------------
ಅಕ್ಕಮ್ಮ
ತಾನೆಂದೆನಲೊಲ್ಲದೆ ಗುರುವೆಂದು ಹಿಡಿದವನ, ಗುರುವೆಂದಲ್ಲಿಯೆ ನೀನೆಂದು ನಡೆದವನ, ನೀನೆಂದಲ್ಲಿಯೆ ಲಿಂಗಜಂಗಮದ ಸಕೀಲಸಂಬಂಧವ ನೆಲೆಗೊಳಿಸಿದವನ, ಲಿಂಗಜಂಗಮದಲ್ಲಿ ತನ್ನ ಮರೆದು ಕರಿಗೊಂಡ ಲಿಂಗೈಕ್ಯನ, ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.
--------------
ಅಲ್ಲಮಪ್ರಭುದೇವರು
ಶಿವ, ಗುರುವೆಂದು ಬಲ್ಲಾತನೆ ಗುರು. ಶಿವ, ಲಿಂಗವೆಂದು ಬಲ್ಲಾತನೆ ಗುರು. ಶಿವ, ಜಂಗಮವೆಂದು ಬಲ್ಲಾತನೆ ಗುರು. ಶಿವ, ಪ್ರಸಾದವೆಂದು ಬಲ್ಲಾತನೆ ಗುರು. ಶಿವ, ಆಚಾರವೆಂದು ಬಲ್ಲಾತನೆ ಗುರು._ ಇಂತೀ ಪಂಚವಿಧವೆ ಪಂಚಬ್ರಹ್ಮವೆಂದರಿದ ಮಹಾ ಮಹಿಮ ಸಂಗನಬಸವಣ್ಣನು, ಎನಗೆಯೂ ಗುರು, ನಿನಗೆಯೂ ಗುರು, ಜಗವೆಲ್ಲಕ್ಕೆಯೂ ಗುರು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಂಗದ ಮೇಲೆ ಇಷ್ಟಲಿಂಗವ ಧರಿಸಿ ಪೂಜೋಪಚಾರವ ಮಾಡುವವರು ಲಿಂಗಪ್ರಾಣಿಗಳಲ್ಲ. ಎನ್ನ ಗುರುವೆಂದು ಭಾವಿಸಿ ಶರಣೆಂದು ನಮಸ್ಕಾರ ಮಾಡುವವರು ಲಿಂಗಪ್ರಾಣಿಗಳಲ್ಲ. ಜಂಗಮವೆಂದು ನಂಬಿ, ವಿಶ್ವಾಸ ಬಲಿದು, ಪಾದಪೂಜೆಯ ಮಾಡಿ ಪಾದೋದಕ ಪ್ರಸಾದವ ಕೊಂಬುವವರು ಲಿಂಗಪ್ರಾಣಿಗಳಲ್ಲ. ಇಂತೀ ತ್ರಿಮೂರ್ತಿಗಳ ಪೂಜೆಯನ್ನು ಬಿಟ್ಟು ಬಿಡದೆ ಪಿಡಿದು ಪೂಜಿಸುವವರು ಪ್ರಾಣಲಿಂಗಿಗಳೆಂಬೆನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶ್ರೀಗುರು ಶಿಷ್ಯನ ಭವಿಪೂರ್ವಾಶ್ರಯವ ಕಳೆದು ಭಕ್ತನ ಮಾಡಿದ ಬಳಿಕ ಆ ಭಕ್ತ ಹೋಗಿ ಜಂಗಮವಾಗಿ, ಗುರುವಿನ ಮಠಕ್ಕೆ ಬಂದಡೆ ಆ ಜಂಗಮವೆನ್ನ ಶಿಷ್ಯನೆಂದು ಗುರುವಿನ ಮನದಲ್ಲಿ ಹೊಳೆದಡೆ ಪಂಚಮಹಾಪಾತಕ. ಆ ಜಂಗಮಕ್ಕೆ ಎನ್ನ ಗುರುವೆಂದು ಮನದಲ್ಲಿ ಭಯಭೀತಿ ಹೊಳೆದಡೆ ರೌರವನರಕ. ಇಂತೀ ಭೇದವ ಕೂಡಲಚೆನ್ನಸಂಗಯ್ಯನಲ್ಲಿ ಶರಣರೆ ಬಲ್ಲರು
--------------
ಚನ್ನಬಸವಣ್ಣ
ಸಹಪಂತಿಯಲ್ಲಿ ತನ್ನ ಗುರುವೆಂದು ವಿಶೇಷವ ಮಾಡಲಾಗದು. ಅದೆಂತೆಂದಡೆ: ಆ ಗುರುವಿಂಗೂ ಆ ಶಿಷ್ಯಂಗೂ ಎರಡಿಟ್ಟು ಮಾಡೂದಕ್ಕೆ ದೃಷ್ಟವ ತೋರಿದ ಮತ್ತೆ, ದ್ರವ್ಯಂಗಳಲ್ಲಿ ವಿಶೇಷವಾಗಿ ಕೈದುಡುಕಿದಡೆ ಮನ ಕೂರ್ತಡೆ ಅದೆ ಕಿಲ್ವಿಷ, ಸದಾಶಿವಮೂರ್ತಿಲಿಂಗಕ್ಕೆ ಹೊರಗು.
--------------
ಅರಿವಿನ ಮಾರಿತಂದೆ
ಗುರುತ್ವವುಳ್ಳ ಮಹದ್ಗುರುವನರಿಯದೆ ನಾನು ಗುರು ತಾನು ಗುರುವೆಂದು ನುಡಿವಿರಿ. ಧನದಲ್ಲಿ ಗುರುವೆ? ಮನದಲ್ಲಿ ಗುರುವೆ? ತನುವಿನಲ್ಲಿ ಗುರುವೆ? ನಿತ್ಯದಲ್ಲಿ ಗುರುವೆ? ವಿದ್ಯೆಯಲ್ಲಿ ಗುರುವೆ? ಭಕ್ತಿಯಲ್ಲಿ ಗುರುವೆ? ಜ್ಞಾನದಲ್ಲಿ ಗುರುವೆ? ವೈರಾಗ್ಯದಲ್ಲಿ ಗುರುವೆ? ದೀಕ್ಷೆಯಲ್ಲಿ ಗುರುವೆರಿ ಶಿಕ್ಷೆಯಲ್ಲಿ ಗುರುವೆರಿ ಸ್ವಾನುಭಾವದಲ್ಲಿ ಗುರುವೆರಿ ಮಾತಾಪಿತರಲ್ಲಿ ಗುರುವೆರಿ ದೇವದಾನವ ಮಾನವರೆಲ್ಲರು ನೀವೆಲ್ಲರು ಆವ ಪರಿಯಲ್ಲಿ ಗುರು ಹೇಳಿರಣ್ಣಾ? ಗುರುವಾರು ಲಘುವಾರೆಂದರಿಯರಿ, ಮನ ಬಂದಂತೆ ನುಡಿದು ಕೆಡುವಿರಾಗಿ. ಹರಿಬ್ರಹ್ಮರು ಗುರುತ್ವಕ್ಕೆ ಸಂವಾದಿಸಿ ಮಹದ್ಗುರುವಪ್ಪ ಪರಂಜ್ಯೋತಿರ್ಲಿಂಗದ ಆದಿಮಧ್ಯಾವಸಾನದ ಕಾಲವನರಿಯದೆ ಲಘುವಾಗಿ ಹೋದರು. ಮತ್ತಂ ಅದೊಮ್ಮೆ ವಿಷ್ಣ್ವಾದಿ ದೇವಜಾತಿಗಳೆಲ್ಲರೂ ನೆರೆದು ನಾ ಘನ, ತಾ ಘನ, ನಾನು ಗುರು, ತಾನು ಗುರುವೆಂದು ಮಹಾಸಂವಾದದಿಂದ ಅತಿತರ್ಕವ ಮಾಡಿ ಗುರುತ್ವವುಳ್ಳ ಪುರುಷನ ನಿಶ್ಚೈಸಲರಿಯದೆ, ಆ ಸಭಾಮಧ್ಯದಿ ಪರಮಾಕಾಶದಿ `ಅತ್ಯತಿಷ*ದ್ದಶಾಂಗುಲನೆನಿಪ' ಮದ್ಗುರುವಪ್ಪ ಮಹಾಲಿಂಗವು ಇವರುಗಳ ಅಜ್ಞಾನವ ಕಂಡು ಮಹಾವಿಪರೀತಕ್ರೀಯಲ್ಲಿ ನಗುತಿರಲು ನಮ್ಮೆಲ್ಲರನೂ ನೋಡಿ ನಗುವ ಪುರುಷನಾರು? ಈ ಪುರುಷನ ನೋಡುವ, ಈ ಪುರುಷನಿಂದ ನಮ್ಮಲ್ಲಿ ಆರು ಘನ ಆರು ಗುರುವೆಂದು ಕೇಳುವೆವೆಂದು ಆ ಮಹಾಪುರುಷನ ಸಮೀಪಕ್ಕೆ ಅಗ್ನಿ ವಾಯು ಮೊದಲಾಗಿಹ ದೇವಜಾತಿಗಳೆಲ್ಲರೂ ಪ್ರತ್ಯೇಕರಾಗಿ ಹೋಗಲು ಅತ್ಯತಿಷ*ದ್ದಶಾಂಗುಲಮಾಗಿರ್ದು ಇವರುಗಳ ಗುರುತ್ವವೆಲ್ಲವನೂ ಒಂದೇ ತೃಣದಲ್ಲಿ ಮುರಿದು ತೃಣದಿಂದವೂ ಕಷ್ಟ ಲಘುತ್ವವ ಮಾಡಿದನು. ಇದು ಕಾರಣ, ಪರಶಿವನೆ ಮದ್ಗುರು ಕಾಣಿರೆ. ಧನದಲ್ಲಿ ಗುರುವೆರಿ ನೀವೆಲ್ಲರು ಧನದಲ್ಲಿ ಗುರುವೆಂಬಡೆ ನೀವು ಕೇಳಿರೆ, ಕಾಣಿವುಳ್ಳವಂಗೆ ಶತಸಂಖ್ಯೆ ಉಳ್ಳವನೆ ಗುರು, ಶತಸಂಖ್ಯೆ ಉಳ್ಳವಂಗೆ ಸಹಸ್ರಸಂಖ್ಯೆ ಉಳ್ಳವನೆ ಗುರು, ಸಹಸ್ರಸಂಖ್ಯೆ ಉಳ್ಳವಂಗೆ ಮಹದೈಶ್ವರ್ಯ ಉಳ್ಳವನೆ ಗುರು, ಮಹದೈಶ್ವರ್ಯ ಉಳ್ಳವಂಗೆ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಮೊದಲಾದ ಮಹದೈಶ್ವರ್ಯವುಳ್ಳ ಇಂದ್ರನೆ ಗುರು. ಇಂದ್ರಂಗೆ ಅನೂನೈಶ್ವರ್ಯವನುಳ್ಳ ಬ್ರಹ್ಮನೆ ಗುರು, ಆ ಬ್ರಹ್ಮಂಗೆ ಐಶ್ವರ್ಯಕ್ಕೆ ಅಧಿದೇವತೆಯಪ್ಪ ಮಹಾಲಕ್ಷ್ಮಿಯನುಳ್ಳ ವಿಷ್ಣುವೆ ಗುರು, ಆ ವಿಷ್ಣುವಿಂಗೆ ಅಷ್ಟಮಹದೈಶ್ವರ್ಯವನುಳ್ಳ ರುದ್ರನೆ ಗುರು, ಆ ರುದ್ರಂಗೆ ಈಶ್ವರನೆ ಗುರು, ಈಶ್ವರಂಗೆ ಸದಾಶಿವನೆ ಗುರು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಯೇ ತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಅಂತಹ ಸದಾಶಿವಂಗೆ ಎಮ್ಮ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ಮನದಲ್ಲಿ ಗುರುವೇ ನೀವೆಲ್ಲರು ದುರ್ಮನಸ್ಸಿಗಳು ಪರಧನ ಪರಸ್ತ್ರೀ ಅನ್ಯದೈವಕ್ಕೆ ಆಸೆ ಮಾಡುವಿರಿ. ಇಂತಹ ದುರ್ಮನಸ್ಸಿನವರನೂ ಸುಮನವ ಮಾಡಿ ಸುಜ್ಞಾನಪದವ ತೋರುವ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ತನುವಿನಲ್ಲಿ ಗುರುವೆ? ಜನನ ಮರಣ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಜನಿಸುವ ಅನಿತ್ಯತನು ನಿಮಗೆ. ಇಂತಪ್ಪ ತನುವನುಳ್ಳವರ ಪೂರ್ವಜಾತನ ಕಳೆದು, ಶುದ್ಧತನುವ ಮಾಡಿ ಪಂರ್ಚಭೂತತನುವ ಕಳೆದು, ಶುದ್ಧತನುವ ಮಾಡಿ ಭಕ್ತಕಾಯ ಮಮಕಾಯವೆಂದು ಶಿವನುಡಿದಂತಹ ಪ್ರಸಾದಕಾಯವ ಮಾಡಿ ನಿತ್ಯಸುಖದೊಳಿರಿಸಿದ ಪರಶಿವಮೂರ್ತಿ ಶ್ರೀಗುರುವೇ ಗುರು ಕಾಣಿರೆ. ವಿದ್ಯೆಯಲ್ಲಿ ಗುರುವೆ? ನೀವೆಲ್ಲರು ವೇದದ ಬಲ್ಲಡೆ, ಶಾಸ್ತ್ರವನರಿಯರಿ, ವೇದಶಾಸ್ತ್ರವ ಬಲ್ಲಡೆ, ಪುರಾಣವನರಿಯರಿ, ವೇದಶಾಸ್ತ್ರಪುರಾಣವ ಬಲ್ಲಡೆ, ಆಗಮವನರಿಯರಿ, ವೇದಶಾಸ್ತ್ರಪುರಾಣ ಆಗಮನ ಬಲ್ಲಡೆ ಅವರ ತಾತ್ಪರ್ಯವನರಿಯರಿ, ಅಷ್ಟಾದಶವಿದ್ಯೆಗಳ ಮರ್ಮವನರಿಯರಿ. ವೇದಂಗಳು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದವು. ಅದನ್ನರಿಯರಿ ನೀವು, ಅನ್ಯವುಂಟೆಂಬಿರಿ, `ಶಿವ ಏಕೋ ದ್ಯೇಯಃ ಶಿವಶಂಕರಃ ಸರ್ವಮನ್ಯತ್ಪರಿತ್ಯಾಜ್ಯಂ' ಅಂದವು, ನೀವು ಅನ್ಯವ ಧ್ಯಾನಿಸುವಿರಿ, ಅನ್ಯವ ಪೂಜಿಸುವಿರಿ, ವಿದ್ಯೆ ನಿಮಗಿಲ್ಲ, ನಿಮಗೆ ಹೇಳಿಕೊಡುವ ವ್ಯಾಸಾದಿಗಳಿಗಿಲ್ಲ, ಅವರಿಗೆ ಅಧಿಕನಾಗಿಹ ವಿಷ್ಣುಬ್ರಹ್ಮಾದಿಗಳಿಗಿಲ್ಲ, ವೇದಾದಿ ಅಷ್ಟಾದಶವಿದ್ಯೆಗಳ ಶಿವನೆ ಬಲ್ಲನು. ಸರ್ವವಿದ್ಯೆಗಳನೂ ಶಿವನೇ ಮಾಡಿದನು, ಶಿವನೇ ಕರ್ತನು `ಆದಿಕರ್ತಾ ಕವಿಸ್ಸಾಕ್ಷಾತ್ ಶೂಲಪಾಣಿರಿತಿಶ್ರುತಿಃ ಎಂದುದಾಗಿ. `ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಕತಯೇ ನಮಃ ಎಂದುದಾಗಿ, `ಈಶಾನಸ್ಸರ್ವವಿದ್ಯಾನಾಂ ಎಂದುದಾಗಿ, ವಿದ್ಯಾರೂಪನಪ್ಪ ಎಮ್ಮ ಪರಶಿವಮೂರ್ತಿ ಶ್ರೀಗುರುವೇ ವಿದ್ಯೆಯಲ್ಲಿ ಗುರು ಕಾಣಿರೆ, ದೀಕ್ಷೆಯಲ್ಲಿ ಗುರುವೇರಿ ನೀವು `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬಿರಿ, ಆ ವಿಷ್ಣುವ ಭಜಿಸಿ ವಿಷ್ಣುವೇ ಗುರುವೆಂಬಿರಿ. ಅಂತಹ ವಿಷ್ಣುವಿಂಗೆಯೂ ಉಪಮನ್ಯು ಗುರು ಕಾಣಿರೆ. ಅಂತಹ ಉಪಮನ್ಯು ಮೊದಲಾದ ದೇವಋಷಿ ಬ್ರಹ್ಮಋಷಿ ರಾಜಋಷಿ ದೇವಜಾತಿ ಮಾನವಜಾತಿಗಳಿಗೆ ಪರಶಿವನಾಚಾರ್ಯನಾಗಿ ಉಪದೇಶವ ಮಾಡಿದನು. ವೇದಶಾಸ್ತ್ರ ಆಗಮ ಪುರಾಣಂಗಳಲ್ಲಿ, ವಿಚಾರಿಸಿ ನೋಡಿರೆ. ಅದು ಕಾರಣ ಮಹಾಚಾರ್ಯನು ಮಹಾದೀಕ್ಷಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಶಿಕ್ಷೆಯಲ್ಲಿ ಗುರುವೇರಿ ನಿಮಗೆ ಶಿಕ್ಷಾಸತ್ವವಿಲ್ಲ. ವೀರಭದ್ರ ದೂರ್ವಾಸ ಗೌತಮಾದಿಗಳಿಂ ನೀವೆಲ್ಲಾ ಶಿಕ್ಷೆಗೊಳಗಾದಿರಿ. ಶಿಕ್ಷಾಮೂರ್ತಿ ಚರಲಿಂಗವಾಗಿ ಶಿಕ್ಷಿಸಿ ರಕ್ಷಿಸಿದನು ಪರಶಿವನು. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ ಅತಿಭಕ್ತ್ಯಾ ಲಿಂಗಸಂತುಷ್ಟಿರಪಹಾಸ್ಯಂ ಯಮದಂಡನಂ ಎಂದುದಾಗಿ, ಶಿಕ್ಷೆಯಲ್ಲಿ ಗುರು ಎಮ್ಮ ಪರಶಿವಮೂರ್ತಿ ಮದ್ಗುರುವೇ ಗುರು ಕಾಣಿರೆ. ಸ್ವಾನುಭಾವದಲ್ಲಿ ಗುರುವೆ? ನೀವು ದೇವದಾನವಮಾನವರೆಲ್ಲರು ದೇಹಗುಣವಿಡಿದು ಮದಾಂಧರಾಗಿ ಸ್ವಾನುಭಾವ[ರಹಿತರಾದಿರಿ]. ಸ್ಕಂದ ನಂದಿ ವೀರಭದ್ರ ಭೃಂಗಿನಾಥ ಬಸವರಾಜ ಮೊದಲಾದ ಎಮ್ಮ ಮಾಹೇಶ್ವರರೇ ಸ್ವಾನುಭಾವಸಂಪನ್ನರು. ಇಂತಹ ಮಹಾಮಹೇಶ್ವರರಿಗೆ ಸ್ವಾನುಭಾವವ ಕರುಣಿಸಬಲ್ಲ ಎಮ್ಮ ಪರಶಿವಮೂರ್ತಿ ಮಹದ್ಗುರು[ವೇ] ಸ್ವಾನುಭಾವದಲ್ಲಿ ಗುರು ಕಾಣಿರೆ. ಮಾತಾಪಿತರ ಗುರುವೆಂಬಿರಿ, ಲಘುವಿನಲ್ಲಿ ತಾವೆಲ್ಲರು ಜನಿಸಿದಿರಿ. ತಮ್ಮ ಸ್ಥಿತಿಯೂ ಲಘು, ಲಘುವಾಗಿ ಲಯವಪ್ಪುದು ಗುರುವೆ? ಅಲ್ಲ. ಸೋಮಃ ಪವತೇ ಜನಿತಾ ಮತೀನಾಂ ಜದಿತಾ ದಿವೋ ಜನಿತಾ ಪೃಥ್ವಿವ್ಯಾ ಜನಿತಾಗ್ನೇರ್ಜನಿತಾ ಸೂರ್ಯಸ್ಯ `ಜನಿತೋಥವಿಷ್ಣೋಃ ಎಂದುದಾಗಿ, `ಶಿವೋ ಮಮೈವ ಪಿತಾ ಎಂದುದಾಗಿ, ಸರ್ವರಿಗೂ ಮಾತಾಪಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೊ. ಭಕ್ತಿಯಲ್ಲಿ ಗುರುವೆ? ನಿಮಗೆ ಲವಲೇಶ ಭಕ್ತಿಯಿಲ್ಲ, ನೀವೆಲ್ಲರು ಉಪಾಧಿಕರು. ನಿರುಪಾಧಿಕರು ಎಮ್ಮ ಮಹಾಸದ್ಭಕ್ತರು ತನು ಮನ ಧನವನರ್ಪಿಸಿ ಉಂಡು ಉಣಿಸಿ ಆಡಿ ಹಾಡಿ ಸುಖಿಯಾದರು ಶರಣರು. ಇಂತಹ ಶರಣಭರಿತ ಸದಾಶಿವಮೂರ್ತಿ ಮಹಾಸದ್ಗುರುವೇ ಭಕ್ತಿಯಲ್ಲಿ ಗುರು ಕಾಣಿರೆ. ಜ್ಞಾನದಲ್ಲಿ ಗುರುವೇ? ನೀವೆಲ್ಲರು ದೇವದಾನವ ಮಾನವರು ಅಜ್ಞಾನಿಗಳು. ಜ್ಞಾತೃ ಜ್ಞಾನ ಜ್ಞೇಯವಪ್ಪ ಪರಶಿವಲಿಂಗವನರಿಯದೆ ಅಹಂಕಾರದಿಂ ಲಘುವಾದಿರಿ. ಪರಧನ ಪರಸ್ತ್ರೀ ಪರಕ್ಷೇತ್ರಕ್ಕೆ ಆಸೆಮಾಡಿ ಲಘುವಾದಿರಿ ನಿರಾಶಸಂಪೂರ್ಣರು ಶಿವಜ್ಞಾನಸಂಪನ್ನರು ಎಮ್ಮ ಮಾಹೇಶ್ವರರು ಇಂತಹ ಮಾಹೇಶ್ವರರಿಂಗೆ ಶಿವಜ್ಞಾನವ ಕರುಣಿಸುವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ವೈರಾಗ್ಯದಲ್ಲಿ ಗುರುವೆ? ನೀವು ಆಶಾಬದ್ಧರು, ನಿರಾಶಾಸಂಪೂರ್ಣರು ಎಮ್ಮ ಸದ್ಭಕ್ತರು. ಇಂತಹ ಭಕ್ತದೇಹಿಕನಪ್ಪ ದೇವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ವೈರಾಗ್ಯದಲ್ಲಿ ಗುರು ಕಾಣಿರೆ. ಇದು ಕಾರಣ, ನಿತ್ಯದಲ್ಲಿ, ಸತ್ಯದಲ್ಲಿ, ಅಷ್ಟಮಹದೈಶ್ವರ್ಯದಲ್ಲಿ ದೀಕ್ಷೆಯಲ್ಲಿ, ಸ್ವಾನುಭಾವದಲ್ಲಿ, ಜ್ಞಾನದಲ್ಲಿ ವಿದ್ಯೆಯಲ್ಲಿ, ಬುದ್ಧಿಯಲ್ಲಿ, ವೈರಾಗ್ಯದಲ್ಲಿ, ಮಾತಾಪಿತರಲ್ಲಿ ಉಪಮಾತೀತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ, ಮಹಾಘನತರವಪ್ಪ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಲಲಾಟಲೋಚನಂ ಚಾಂದ್ರೀಂ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಿ ಎಂದುದಾಗಿ ಪರಶಿವನೇ ಗುರು, ಶ್ರೀಗುರುವೇ ಪರಶಿವನು. ಇಂತಹ ಮಹಾಸದ್ಗುರುವಪ್ಪ ಪರಶಿವಮೂರ್ತಿ ಕಾರುಣ್ಯವ ಮಾಡಿ, ಸದ್ಭಕ್ತಿಪದವ ತೋರಿದ ಎಮ್ಮ ಗಣನಾಥದೇವರೇ ಗುರು ಕಾಣಿರೆ. ಇದು ಕಾರಣ, ಶರಣಮೂರ್ತಿ ಶ್ರೀಗುರು. ಶ್ರೀಗುರು ಲಿಂಗ ಜಂಗಮ ಒಂದೆಯಾಗಿ ಶ್ರೀಗುರುವೇ ಗುರು, ಉಳಿದದ್ದೆಲ್ಲಾ ಲಘು. ಪರಶಿವಲಿಂಗವೇ ಗುರು, ಉಳಿದವೆಲ್ಲವೂ ಲಘು. ಜಂಗಮವೇ ಗುರು, ಉಳಿದವೆಲ್ಲವೂ ಲಘು. ಇದನರಿದು ಶ್ರೀಗುರುವನೇ ನಂಬುವುದು. ತನು ಮನ ಧನವನರ್ಪಿಸುವುದು, ನಿರ್ವಂಚಕನಾಗಿ ನಿರುಪಾಧಿಕನಾಗಿ ನಿರಾಶಾಸಂಪೂರ್ಣನಾಗಿ, ಧ್ಯಾನಿಸಿ ಪೂಜಿಸಿ ಸದ್ಭಕ್ತಿಯಿಂ ವರ್ತಿಸಿ ಪ್ರಸಾದವ ಪಡೆದು ಮುಕ್ತನಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ತಾಮಸಗೊಂಡು ತಾಪತ್ರಯದಲ್ಲಿ ಬೆಂದು ಹುಸಿರೂಹಿನಲ್ಲಿ ಹೊಡೆದಾಡುತಿರ್ದ ಪ್ರಾಣಿಗಳು ಮೃಡನಂಗಗೊಂಡಮಹಿಮರ ಘನತೆಯ ನೋಡಿ ಕೇಳಿ ತಾವಾದೆವೆಂಬ ತರಳನುಡಿ ಮನಗೊಂಡು ಗುರುವೆಂದು ಲಿಂಗವೆಂದು ಜಂಗಮವೆಂದು ಪಾದೋದಕಪ್ರಸಾದವೆಂದು ಪಂಚಾಚಾರ ಪ್ರಮಾಣವಿಡಿದು ವಂಚನೆವೈದಿ ಸಂಚಿತಪ್ರಾಪ್ತಿಯನರಿದು ಆಗಾಮಿಯಿಂದೆ ಅಂತಕನಾಳಿನ ಕೈವಶ ಕಡೆಗಾಣದಿಪ್ಪರಿಗೆ ಜಾಣಪದವೆಲ್ಲಿಹದೊ ಗುರುನಿರಂಜನ ಚನ್ನಬಸವಲಿಂಗಾ !
--------------
ದೇಶಿಕೇಂದ್ರ ಸಂಗನಬಸವಯ್ಯ
ಪಟ ಬಾಲಸರವು ಕೂಡಿರ್ದಡೇನು ? ಸೂತ್ರ ಕಿಂಚಿತ್ತು ತಪ್ಪಿದಡೆ ಖೇಚರತ್ವದಲ್ಲಿ ಆಡಲರಿಯದಂತೆ, ಹೊರಗಣ ಮಾತಿನಿಂ ಗುರುವೆಂದು ಶರಣೆಂದಡೇನಾಯಿತ್ತು ? ಕೈಯಲ್ಲಿ ಲಿಂಗವ ಹಿಡಿದುಕೊಂಡು, ಕಣ್ಣಿನಲ್ಲಿ ನೋಡಿ, ಮನಮುಟ್ಟದಿರ್ದಡೇನಾಯಿತ್ತು ? ಖ್ಯಾತಿ ಲಾಭಕ್ಕೆ ಜಂಗಮಕ್ಕೆ ಧನವ ಕೊಟ್ಟಡೇನಾಯಿತ್ತು? ಇದು, ಉಸಿರ ಹಿಡಿದಡೆ, ದ್ವಾರಂಗಳೆಲ್ಲವೂ ಮುಚ್ಚುವ ತೆರನಂತೆ, ಮಹಾಘನವನರಿದಲ್ಲಿಯೆ ತ್ರಿವಿಧವೂ ಸಮರ್ಪಣ. ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಸ್ಥಲನಿರ್ದೇಶ.
--------------
ಮೋಳಿಗೆ ಮಾರಯ್ಯ
ತನ್ನ ಪ್ರಾಣಲಿಂಗವನನ್ಯರಿಗೆ ಕೊಟ್ಟು ಮನ್ನಿಸಲೇಕೆ ? ಗುರುವೆಂದು ಬೆಬ್ಬನೆ ಬೆರೆವವರ ನೋಡಾ ಅಯ್ಯಾ. ಬಿನ್ನಾಣದಿಂದ ಪಂಚಪರ್ವವ ಮಾಡಿ, ನಂಬಿಸಿ ಹಣವ ಕೊಂಬ ಲಿಂಗದೆರೆಯರ ನೋಡಾ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಪ್ರಸಾದ ಪ್ರಸಾದವೆನುತಿಪ್ಪಿರಿ. ಪ್ರಸಾದವೆಂತಿಪ್ಪುದು ? ಪ್ರಸಾದಿಯೆಂತಿಪ್ಪ ? ಪ್ರಸಾದಗ್ರಾಹಕ ಎಂತಿರಬೇಕು ? ಎಂದರಿಯದೆ ಪ್ರಸಾದವೆಂದು ಇಕ್ಕಿಹೆವೆಂಬರು, ಕೊಂಡೆಹೆವೆಂಬರು. ಕೊಂಡು ನಗೆಗೆಡೆಯಾಗುತಿಪ್ಪರಯ್ಯಾ. ಪ್ರಸಾದ ಪರಾಪರವಾದುದು, ಶಾಂತನಾಗಿ, ಸತ್ಯನಾಗಿ, ಪ್ರಸನ್ನವಾಗಿಹುದು ಪ್ರಸಾದಿ. ಕರ್ಮಣಾ ಮನಸಾ ವಾಚಾ ಗುರುಭಕ್ತಿವಿಚಕ್ಷಣಃ ಶರೀರಂ ಪ್ರಾಣಮರ್ಥಂ ಚ ಸದ್ಗುರುಭ್ಯೋ ನಿವೇದಯೇತ್ ಎಂದು ದೀಕ್ಷಾಮೂರ್ತಿ ಪರಶಿವಗುರುಲಿಂಗಕ್ಕೆ ತನುಮನಧನವನರ್ಪಿಸುವುದು. ಪೂಜಾಕಾರಮೂರ್ತಿ ಪರಮಗುರುಮಹಾಲಿಂಗಕ್ಕೆ ತನುಮನಧನವರ್ಪಿಸಿ, ಶಿಕ್ಷಾಮೂರ್ತಿ ಪರಮಗುರುಜಂಗಮಲಿಂಗಕ್ಕೆ ತನು ಮನ ಧನವನರ್ಪಿಸಿ, ಪ್ರಸನ್ನಪ್ರಸಾದವ ಪಡೆದು ಭೋಗಿಸಿ, ಆ ಪ್ರಸಾದವ ಶುದ್ಧವ ಮಾಡಿ ನಿಲಿಸಿ, ಶಾಂತನಾಗಿ, ನಿತ್ಯನಾಗಿ, ಪ್ರಸನ್ನಮೂರ್ತಿಯಾಗಿಪ್ಪ ಆ ಪ್ರಸಾದಿಯೇ ಪ್ರಸಾದಗ್ರಾಹಕ. ಆ ಪ್ರಸಾದಿಯೇ ಗುರುವೆಂದು, ಆ ಪ್ರಸಾದಿಯೇ ಲಿಂಗವೆಂದು ಆ ಪ್ರಸಾದಿಯೇ ಜಂಗಮವೆಂದು ತನುಮನಧನದಲ್ಲಿ ವಂಚನೆ ಇಲ್ಲದೆ ಕೇವಲ ವಿಶ್ವಾಸದಿಂದ ನಂಬಿ ಪ್ರಸಾದವ ಗ್ರಹಿಸುವುದು. ಇದು ಕಾರಣ, ಪ್ರಸಾದಗ್ರಾಹಕನ ಪರಿಯೆಂಬ ಭಾವ ಹಿಂಗದೆ ಇಕ್ಕುವ ಪರಿಯ ನೋಡಾ. ಇದು ಕಾರಣ. ಮಹಾನುಭಾವರ ಸಂಗದಿಂದ ಅರಿಯಬಹುದಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->