ಅಥವಾ

ಒಟ್ಟು 50 ಕಡೆಗಳಲ್ಲಿ , 15 ವಚನಕಾರರು , 30 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೇ, ನೀನು ನನ್ನ ಲಿಂಗಕ್ಕೆ ಮಂಗಳಸೂತ್ರವಂ ಕಟ್ಟಿ ಕೊಟ್ಟಂದಿಂದ ಅನ್ಯವನರಿಯದೆ, ಆ ಲಿಂಗದಲ್ಲೇ ನಡೆವುತ್ತಿರ್ಪೆನು, ಆ ಲಿಂಗದಲ್ಲೇ ನುಡಿವುತ್ತಿರ್ಪೆನು, ಆ ಲಿಂಗದ ನಟನೆಯಂ ನೆನವುತ್ತಿರ್ಪೆನು, ಆ ಲಿಂಗದ ಮಹಿಮೆಯನೆ ಪಾಡುತ್ತಿರ್ಪೆನು, ಆ ಲಿಂಗವನೆ ಬೇಡುತ್ತಿರ್ಪೆನು, ಆ ಲಿಂಗವನೆ ಕಾಡುತ್ತಿರ್ಪೆನು, ಆ ಲಿಂಗವನೆ ಕೊಸರುತ್ತಿರ್ಪೆನು, ಆ ಲಿಂಗವನೆ ಅರಸುತ್ತಿರ್ಪೆನು, ಆ ಲಿಂಗವನೆ ಬೆರಸುತ್ತಿರ್ಪೆನು, ಆ ಲಿಂಗವಲ್ಲದೆ ಮತ್ತಾರನೂ ಕಾಣೆನು, ಮತ್ತಾರಮಾತನೂ ಕೇಳೆನು, ಮತ್ತಾರನೂ ಮುಟ್ಟೆನು, ಮತ್ತಾರನೂ ತಟ್ಟೆನು. ಲಿಂಗವು ನಾನು ಇಬ್ಬರೂ ಇಲ್ಲದ ಕಾರಣ ಎಲ್ಲವೂ ನನಗೆ ಏಕಾಂತಸ್ಥಾನವಾಯಿತ್ತು. ಎಲ್ಲೆಲ್ಲಿಯೂ ಯಾವಾಗಲೂ ಎಡೆವಿಡದೆ ಲಿಂಗದಲ್ಲೇ ರಮಿಸುತಿರ್ದೆನು. ಲಿಂಗದಲ್ಲೇ ಕಾಲವ ಕ್ರಮಿಸುತ್ತಿರ್ದೆನು ಲಿಂಗದಲ್ಲೇ ಎನ್ನಂಗಗುಣಂಗಳಂ ಕ್ಷಮಿಸುತ್ತಿರ್ದೆನು ಲಿಂಗದೊಳಗೆ ನನ್ನ, ನನ್ನೊಳು ಲಿಂಗದ ಚಲ್ಲಾಟವಲ್ಲದೆ, ಬೇರೊಂದು ವಸ್ತುವೆನಗೆ ತೋರಲಿಲ್ಲ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಭವಿಯ ತಂದು ಪೂವಾಶ್ರಯವ ಕಳೆದು ಭಕ್ತನ ಮಾಡಿದ ಬಳಿಕ, ಪೂರ್ವವನ್ನೆತ್ತಿ ನುಡಿವ ಶಿವದ್ರೋಹಿಯ ಮಾತ ಕೇಳಲಾಗದು. ಲಿಂಗವೆ ಗುರು, ಗುರುವೇ ಲಿಂಗವೆಂದು, ಹೆಸರಿಟ್ಟು ಕರೆವ ಗುರುದ್ರೋಹಿಯ ಮಾತ ಕೇಳಲಾಗದು. ಹೆಸರಿಲ್ಲದ ಅಪ್ರಮಾಣ ಮಹಿಮನನು ಹೆಸರಿಟ್ಟು ಕರೆವ ಲಿಂಗದ್ರೋಹಿಯ ಮಾತ ಕೇಳಲಾಗದು. ಪೂರ್ವವಿಲ್ಲದ ಶಿಷ್ಯ, ನೇಮವಿಲ್ಲದ ಗುರು, ಹೆಸರಿಲ್ಲದ ಲಿಂಗ ಈ ತ್ರಿವಿಧವನರಿಯದೆ ಕೆಟ್ಟು ಹೋದರು, ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಎನ್ನ ಕಾಯದ ಕಠಿಣವ ಕಳೆಯಯ್ಯ, ಎನ್ನ ಜೀವನುಪಾದ್ಥಿಯನಳಿಯಯ್ಯ, ಎನ್ನ ಪ್ರಾಣಪ್ರಪಂಚುವ ತೊಲಗಿಸಯ್ಯ, ಎನ್ನ ಭಾವದಭ್ರಮೆಯ ಕೆಡಿಸಯ್ಯ, ಎನ್ನ ಮನದ ವ್ಯಾಕುಲವ ಮಾಣಿಸಯ್ಯ, ಎನ್ನ ಕರಣೇಂದ್ರಿಯಗಳ ಕಷ್ಟಗುಣವ ನಾಶಮಾಡಯ್ಯ, ಎನ್ನೊಳಗೆ ನಿಮ್ಮ ಕರುಣಾಮೃತವ ತುಂಬಯ್ಯ ಗುರುವೇ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಗುರುವಿನಿಂದ ಉಪದೇಶವ ಪಡೆದು, ಗುರುಪುತ್ರನೆನಿಸಿಕೊಂಡ ಬಳಿಕ ಪೂರ್ವದ ತಾಯಿತಂದೆಯೆಂದು, ಬಂಧುಗಳೆಂದು, ಮಲಸಂಬಂಧವ ನೆನೆಯಲಾಗದು ಕಾಣಿರೊ. ಇನ್ನಿವ ನೆನೆದಿರಾದರೆ ಶಿವದ್ರೋಹ ತಪ್ಪದಯ್ಯ. ಇನ್ನು ನಿಮಗೆ ತಾಯಿ ತಂದೆಗಳ ಹೇಳಿಹೆ ಕೇಳಿರೆ. ಗುರುವೇ ತಾಯಿ, ಗುರುವೇ ತಂದೆ, ಗುರುವೇ ಬಂಧುಗಳು. ಗುರುವಿನಿಂದ ಪರವಿನ್ನಾರೂ ಇಲ್ಲವೆಂದು ನಂಬಬಲ್ಲರೆ ಶಿಷ್ಯನೆಂಬೆನಯ್ಯಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಗುರುವೇ, ನಿನ್ನ ಕರದಲ್ಲೆನ್ನಂ ಪುಟ್ಟಿಸಿ, ಮಂತ್ರವೆಂಬ ಜನನಿಯ ವಿವೇಕವೆಂಬ ಸ್ತನಗಳೊಳ್ ತುಂಬಿರ್ಪ ಅನುಭವಾಮೃತರಸವನೆರೆದು, ಆಚಾರಕ್ಷೇತ್ರದಲ್ಲಿ ಬೆಳೆಸುತ್ತಿರಲು, ಅನೇಕ ಕಳೆಗಳಿಂ ಕೂಡಿದ ದಿವ್ಯಜ್ಞಾನವೆಂಬ ಯೌವನಂ ಪ್ರಾದುರ್ಭವಿಸಿ, ಸತ್ಕರ್ಮವಾಸನೆಯಿಂ ಪೋಷಿತನಾಗಿರ್ಪೆನಗೆ ಮಹಾಲಿಂಗಮೊಲಿದು, ನಿನ್ನ ಭಾವದಲ್ಲಿ ಬಂದು, ಹೃದಯದಲ್ಲಿ ನಿಂದು ಕೇಳಲು, ನೀನು ಆ ಲಿಂಗಕ್ಕೆ ಮಂಗಳಸೂತ್ರಮಂ ಕಟ್ಟಿ, ಕಲಶಕನ್ನಡಿಗಳನ್ನಿಕ್ಕಿ ಪಾಣಿಗ್ರಹಣಮಂ ಮಾಡಿ ಕೊಟ್ಟಬಳಿಕ, ರತಿಯನನುಭವಿಸಿ, ಲಿಂಗಸುಖವಂ ತನಗೀವುತ್ತಿರ್ಪನಯ್ಯಾ. ಆ ಮೇಲೆ ತನ್ನ ಮನದ ಹೆದರಿಕೆಯಂ ಬಿಡಿಸಿ, ಅಂತರಂಗಕ್ಕೆ ಕರೆದುಕೊಂಡುಬಂದು, ನಿಜಪ್ರಸಾದ ರಸದಂಬುಲವಿತ್ತು, ತನ್ನೊಡನೆ ಕೂಡುವ ಚಾತುರ್ಯಮಾರ್ಗಂಗಳಂ ಕಲಿಸುತ್ತ, ಆ ಲಿಂಗಂ ತಾನೇ ತನಗೆ ಗುರುವಾದನಯ್ಯಾ. ಆ ಮೇಲೆ ಭಾವದಲ್ಲಿ ನನ್ನ ಕೂಡಣ ಚಲ್ಲಾಟದಿಂದ ಸಂಚರಿಸುತ್ತಾ, ತಾನೇ ಜಂಗಮವಾದನಯ್ಯಾ. ತನ್ನ ಭಾವದಲ್ಲಿರ್ಪ ಇಂದ್ರಿಯವಿಷಯಂಗಳೆಲ್ಲಾ ಪುಣ್ಯಕ್ಷೇತ್ರಂಗಳಾದವಯ್ಯಾ. ಶರೀರವೇ ವಿಶ್ವವಾಯಿತ್ತಯ್ಯಾ, ತಾನೇ ವಿಶ್ವನಾಥನಯ್ಯಾ. ಪಂಚಭೂತಂಗಳೇ ಪಂಚಕೋಶವಾಯಿತ್ತಯ್ಯಾ. ಆ ಲಿಂಗಾನಂದವೇ ಭಾಗೀರಥಿಯಾಯಿತ್ತಯ್ಯಾ. ಆ ಲಿಂಗದೊಳಗಣ ವಿನಯವೇ ಸರಸ್ವತಿಯಾಗಿ, ಆ ಲಿಂಗದ ಕರುಣವೇ ಯಮುನೆಯಾಗಿ, ತನ್ನ ಶರೀರವೆಂಬ ದಿವ್ಯ ಕಾಶೀಕ್ಷೇತ್ರದಲ್ಲಿ ಹೃದಯವೆಂಬ ತ್ರಿವೇಣೀ ಮಣಿಕರ್ಣಿಕಾಸ್ಥಾನದಲ್ಲಿ ನೆಲಸಿ, ಸಕಲ ಗುಣಂಗಳೆಂಬ ಪುರುಷ ಋಷಿಗಳಿಂದ ಅರ್ಚಿಸಿಕೊಳ್ಳುತ್ತಾ ನಮ್ಮೊಳಗೆ ನಲಿದಾಡುತ್ತಿರ್ದನಯ್ಯಾ. ತನ್ನ ನಿಜಮತದಿಂ ವಿಶ್ವಸ್ವರೂಪ ಕಾಶೀಕ್ಷೇತ್ರವನು ರಕ್ಷಿಸುತಿರ್ಪ ಅನ್ನಪೂರ್ಣಾಭವಾನಿಗೂ ತನಗೂ ಮತ್ಸರಮಂ ಬಿಡಿಸಿ, ತನಗೆ ಅನ್ನಪೂರ್ಣಭವಾನಿಯೇ ಆಸ್ಪದಮಾಗಿ, ಆ ಅನ್ನಪೂರ್ಣೆಗೆ ತಾನೇ ಆಸ್ಪದಮಾಗಿರ್ಪಂತನುಕೂಲವಿಟ್ಟು ನಡಿಸಿದನಯ್ಯಾ. ಇಂತಪ್ಪ ದಿವ್ಯಕ್ಷೇತ್ರದಲ್ಲಿ ನಿಶ್ಚಿಂತಮಾಗಿ ಆ ಪರಮನೊಳಗೆ ಅಂತರಂಗದರಮನೆಯಲ್ಲಿ ನಿರ್ವಾಣರತಿಸುಖವನನುಭವಿಸುತ್ತಾ ಆ ಲಿಂಗದಲ್ಲಿ ಲೀನಮಾಗಿ ಪುನರಾವೃತ್ತಿರಹಿತ ಶಾಶ್ವತ ಪರಮಾನಂದರತಿಸುಖದೊಳೋಲಾಡುತ್ತಿರ್ದೆನಯ್ಯಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಸುರತರು ವೃಕ್ಷದೊಳಗಲ್ಲ; ಸುರಧೇನು ಪಶುವಿನೊಳಗಲ್ಲ; ಪರುಷ ಪಾಷಾಣದೊಳಗಲ್ಲ; ಶಿಷ್ಯನ ಭಾವಕ್ಕೆ ಗುರು ನರನಲ್ಲ; ಗುರುವೇ ಪರಮೇಶ್ವರನೆಂದು ಭಾವಿಸಬಲ್ಲಡೆ ಶಿಷ್ಯನೆಂಬೆನಯ್ಯಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಯ್ಯಾ, ನೀನು ಅನಾಹತ ಲೋಕದಲ್ಲಿ ಪ್ರವೇಶಿಸುವಾಗ ಅಕ್ಷರವೆರಡರ ತದ್ರೂಪವಾಗಿರ್ದೆಯಯ್ಯಾ. ನೀನಾ ಬ್ರಹ್ಮಾಂಡವನರಿವಾಗ ಶಕ್ತಿತ್ರಯದ ಶಾಖೆಯಾಗಿರ್ದೆಯಯ್ಯಾ. ನೀನು ಸಕಲದಲ್ಲಿ ನಿಃಕಲದ್ಲ ಸ್ವಾನುಭಾವಸಂಬಂಧದಲ್ಲಿ ಅಕ್ಷರವೆರಡರಲ್ಲಿ ಆಂದೋಳನವಾಗಿ ಪ್ರವೇಶಿಸುವಾಗ ಶುದ್ಧ ನೀನಾಗಿ, ಸಿದ್ಧ ನೀನಾಗಿ, ಪ್ರಸಿದ್ಧ ನೀನಾಗಿ ಪಂಚ ಮಹಾವಾಕ್ಯಂಗಳೆ ನಿನ್ನ ಮನೆಯಾಗಿ ಓಂ ಎಂಬುದೆ ನಿನ್ನ ತನುವಾಗಿ, ಆನಂದವೆಂಬುದೆ ನಿನ್ನ ಮೂರ್ತಿಯಾಗಿ ಪರಾಪರ ರೂಪೆ ನಿನ್ನವಯವವಾಗಿ ನೀನಿಪ್ಪೆಯಯ್ಯಾ ನಿತ್ಯಮಂಗಳರೂಪನಾಗಿ, ಸ್ವತಂತ್ರವಾಗಿ ಪರಮಸೀಮೆಯ ಮೀರಿಪ್ಪ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಏಕಾರ್ಥವ ಮಾಡಿದ ಬಸವಣ್ಣ ಗುರುವೇ, ಶರಣು
--------------
ಸಿದ್ಧರಾಮೇಶ್ವರ
ಗುರೂಪದೇಶವ ಪಡೆದು ಗುರುಪುತ್ರನೆನಿಸಿಕೊಂಡ ಬಳಿಕ ಹಿಂದಣ ತಾಯಿ ತಂದೆ ಬಂಧು ಬಳಗವ ನೆನೆಯದಿರಿರೋ. ಕುಲಗೆಟ್ಟ ಹೊಲೆಯರಿರ ನೆನೆದರೆ ನಿಮಗೆ ಶಿವದ್ರೋಹ ತಪ್ಪದು. ನಿಮಗೆ ತಂದೆ ತಾಯಿ ಬಂಧು ಬಳಗವ ಹೇಳಿಹೆನು ಕೇಳಿರೊ. 'ಗುರುದೈವಾತ್ ಪರಂ ನಾಸ್ತಿ' ಎಂದುದಾಗಿ, ಗುರುವೇ ತಾಯಿ, ಗುರುವೇ ತಂದೆ, ಗುರುವೇ ಬಂಧುಬಳಗವೆಂದು ನಂಬಬಲ್ಲಡೆ ಆತನೆ ಶಿಷ್ಯನೆಂಬೆ, ಆತನೆ ಭಕ್ತನೆಂಬೆ. ಅಲ್ಲದಿರ್ದಡೆ ಭವಿಯೆಂಬೆ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಗುರುತ್ವವುಳ್ಳ ಮಹದ್ಗುರುವನರಿಯದೆ ನಾನು ಗುರು ತಾನು ಗುರುವೆಂದು ನುಡಿವಿರಿ. ಧನದಲ್ಲಿ ಗುರುವೆ? ಮನದಲ್ಲಿ ಗುರುವೆ? ತನುವಿನಲ್ಲಿ ಗುರುವೆ? ನಿತ್ಯದಲ್ಲಿ ಗುರುವೆ? ವಿದ್ಯೆಯಲ್ಲಿ ಗುರುವೆ? ಭಕ್ತಿಯಲ್ಲಿ ಗುರುವೆ? ಜ್ಞಾನದಲ್ಲಿ ಗುರುವೆ? ವೈರಾಗ್ಯದಲ್ಲಿ ಗುರುವೆ? ದೀಕ್ಷೆಯಲ್ಲಿ ಗುರುವೆರಿ ಶಿಕ್ಷೆಯಲ್ಲಿ ಗುರುವೆರಿ ಸ್ವಾನುಭಾವದಲ್ಲಿ ಗುರುವೆರಿ ಮಾತಾಪಿತರಲ್ಲಿ ಗುರುವೆರಿ ದೇವದಾನವ ಮಾನವರೆಲ್ಲರು ನೀವೆಲ್ಲರು ಆವ ಪರಿಯಲ್ಲಿ ಗುರು ಹೇಳಿರಣ್ಣಾ? ಗುರುವಾರು ಲಘುವಾರೆಂದರಿಯರಿ, ಮನ ಬಂದಂತೆ ನುಡಿದು ಕೆಡುವಿರಾಗಿ. ಹರಿಬ್ರಹ್ಮರು ಗುರುತ್ವಕ್ಕೆ ಸಂವಾದಿಸಿ ಮಹದ್ಗುರುವಪ್ಪ ಪರಂಜ್ಯೋತಿರ್ಲಿಂಗದ ಆದಿಮಧ್ಯಾವಸಾನದ ಕಾಲವನರಿಯದೆ ಲಘುವಾಗಿ ಹೋದರು. ಮತ್ತಂ ಅದೊಮ್ಮೆ ವಿಷ್ಣ್ವಾದಿ ದೇವಜಾತಿಗಳೆಲ್ಲರೂ ನೆರೆದು ನಾ ಘನ, ತಾ ಘನ, ನಾನು ಗುರು, ತಾನು ಗುರುವೆಂದು ಮಹಾಸಂವಾದದಿಂದ ಅತಿತರ್ಕವ ಮಾಡಿ ಗುರುತ್ವವುಳ್ಳ ಪುರುಷನ ನಿಶ್ಚೈಸಲರಿಯದೆ, ಆ ಸಭಾಮಧ್ಯದಿ ಪರಮಾಕಾಶದಿ `ಅತ್ಯತಿಷ*ದ್ದಶಾಂಗುಲನೆನಿಪ' ಮದ್ಗುರುವಪ್ಪ ಮಹಾಲಿಂಗವು ಇವರುಗಳ ಅಜ್ಞಾನವ ಕಂಡು ಮಹಾವಿಪರೀತಕ್ರೀಯಲ್ಲಿ ನಗುತಿರಲು ನಮ್ಮೆಲ್ಲರನೂ ನೋಡಿ ನಗುವ ಪುರುಷನಾರು? ಈ ಪುರುಷನ ನೋಡುವ, ಈ ಪುರುಷನಿಂದ ನಮ್ಮಲ್ಲಿ ಆರು ಘನ ಆರು ಗುರುವೆಂದು ಕೇಳುವೆವೆಂದು ಆ ಮಹಾಪುರುಷನ ಸಮೀಪಕ್ಕೆ ಅಗ್ನಿ ವಾಯು ಮೊದಲಾಗಿಹ ದೇವಜಾತಿಗಳೆಲ್ಲರೂ ಪ್ರತ್ಯೇಕರಾಗಿ ಹೋಗಲು ಅತ್ಯತಿಷ*ದ್ದಶಾಂಗುಲಮಾಗಿರ್ದು ಇವರುಗಳ ಗುರುತ್ವವೆಲ್ಲವನೂ ಒಂದೇ ತೃಣದಲ್ಲಿ ಮುರಿದು ತೃಣದಿಂದವೂ ಕಷ್ಟ ಲಘುತ್ವವ ಮಾಡಿದನು. ಇದು ಕಾರಣ, ಪರಶಿವನೆ ಮದ್ಗುರು ಕಾಣಿರೆ. ಧನದಲ್ಲಿ ಗುರುವೆರಿ ನೀವೆಲ್ಲರು ಧನದಲ್ಲಿ ಗುರುವೆಂಬಡೆ ನೀವು ಕೇಳಿರೆ, ಕಾಣಿವುಳ್ಳವಂಗೆ ಶತಸಂಖ್ಯೆ ಉಳ್ಳವನೆ ಗುರು, ಶತಸಂಖ್ಯೆ ಉಳ್ಳವಂಗೆ ಸಹಸ್ರಸಂಖ್ಯೆ ಉಳ್ಳವನೆ ಗುರು, ಸಹಸ್ರಸಂಖ್ಯೆ ಉಳ್ಳವಂಗೆ ಮಹದೈಶ್ವರ್ಯ ಉಳ್ಳವನೆ ಗುರು, ಮಹದೈಶ್ವರ್ಯ ಉಳ್ಳವಂಗೆ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಮೊದಲಾದ ಮಹದೈಶ್ವರ್ಯವುಳ್ಳ ಇಂದ್ರನೆ ಗುರು. ಇಂದ್ರಂಗೆ ಅನೂನೈಶ್ವರ್ಯವನುಳ್ಳ ಬ್ರಹ್ಮನೆ ಗುರು, ಆ ಬ್ರಹ್ಮಂಗೆ ಐಶ್ವರ್ಯಕ್ಕೆ ಅಧಿದೇವತೆಯಪ್ಪ ಮಹಾಲಕ್ಷ್ಮಿಯನುಳ್ಳ ವಿಷ್ಣುವೆ ಗುರು, ಆ ವಿಷ್ಣುವಿಂಗೆ ಅಷ್ಟಮಹದೈಶ್ವರ್ಯವನುಳ್ಳ ರುದ್ರನೆ ಗುರು, ಆ ರುದ್ರಂಗೆ ಈಶ್ವರನೆ ಗುರು, ಈಶ್ವರಂಗೆ ಸದಾಶಿವನೆ ಗುರು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಯೇ ತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಅಂತಹ ಸದಾಶಿವಂಗೆ ಎಮ್ಮ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ಮನದಲ್ಲಿ ಗುರುವೇ ನೀವೆಲ್ಲರು ದುರ್ಮನಸ್ಸಿಗಳು ಪರಧನ ಪರಸ್ತ್ರೀ ಅನ್ಯದೈವಕ್ಕೆ ಆಸೆ ಮಾಡುವಿರಿ. ಇಂತಹ ದುರ್ಮನಸ್ಸಿನವರನೂ ಸುಮನವ ಮಾಡಿ ಸುಜ್ಞಾನಪದವ ತೋರುವ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ತನುವಿನಲ್ಲಿ ಗುರುವೆ? ಜನನ ಮರಣ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಜನಿಸುವ ಅನಿತ್ಯತನು ನಿಮಗೆ. ಇಂತಪ್ಪ ತನುವನುಳ್ಳವರ ಪೂರ್ವಜಾತನ ಕಳೆದು, ಶುದ್ಧತನುವ ಮಾಡಿ ಪಂರ್ಚಭೂತತನುವ ಕಳೆದು, ಶುದ್ಧತನುವ ಮಾಡಿ ಭಕ್ತಕಾಯ ಮಮಕಾಯವೆಂದು ಶಿವನುಡಿದಂತಹ ಪ್ರಸಾದಕಾಯವ ಮಾಡಿ ನಿತ್ಯಸುಖದೊಳಿರಿಸಿದ ಪರಶಿವಮೂರ್ತಿ ಶ್ರೀಗುರುವೇ ಗುರು ಕಾಣಿರೆ. ವಿದ್ಯೆಯಲ್ಲಿ ಗುರುವೆ? ನೀವೆಲ್ಲರು ವೇದದ ಬಲ್ಲಡೆ, ಶಾಸ್ತ್ರವನರಿಯರಿ, ವೇದಶಾಸ್ತ್ರವ ಬಲ್ಲಡೆ, ಪುರಾಣವನರಿಯರಿ, ವೇದಶಾಸ್ತ್ರಪುರಾಣವ ಬಲ್ಲಡೆ, ಆಗಮವನರಿಯರಿ, ವೇದಶಾಸ್ತ್ರಪುರಾಣ ಆಗಮನ ಬಲ್ಲಡೆ ಅವರ ತಾತ್ಪರ್ಯವನರಿಯರಿ, ಅಷ್ಟಾದಶವಿದ್ಯೆಗಳ ಮರ್ಮವನರಿಯರಿ. ವೇದಂಗಳು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದವು. ಅದನ್ನರಿಯರಿ ನೀವು, ಅನ್ಯವುಂಟೆಂಬಿರಿ, `ಶಿವ ಏಕೋ ದ್ಯೇಯಃ ಶಿವಶಂಕರಃ ಸರ್ವಮನ್ಯತ್ಪರಿತ್ಯಾಜ್ಯಂ' ಅಂದವು, ನೀವು ಅನ್ಯವ ಧ್ಯಾನಿಸುವಿರಿ, ಅನ್ಯವ ಪೂಜಿಸುವಿರಿ, ವಿದ್ಯೆ ನಿಮಗಿಲ್ಲ, ನಿಮಗೆ ಹೇಳಿಕೊಡುವ ವ್ಯಾಸಾದಿಗಳಿಗಿಲ್ಲ, ಅವರಿಗೆ ಅಧಿಕನಾಗಿಹ ವಿಷ್ಣುಬ್ರಹ್ಮಾದಿಗಳಿಗಿಲ್ಲ, ವೇದಾದಿ ಅಷ್ಟಾದಶವಿದ್ಯೆಗಳ ಶಿವನೆ ಬಲ್ಲನು. ಸರ್ವವಿದ್ಯೆಗಳನೂ ಶಿವನೇ ಮಾಡಿದನು, ಶಿವನೇ ಕರ್ತನು `ಆದಿಕರ್ತಾ ಕವಿಸ್ಸಾಕ್ಷಾತ್ ಶೂಲಪಾಣಿರಿತಿಶ್ರುತಿಃ ಎಂದುದಾಗಿ. `ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಕತಯೇ ನಮಃ ಎಂದುದಾಗಿ, `ಈಶಾನಸ್ಸರ್ವವಿದ್ಯಾನಾಂ ಎಂದುದಾಗಿ, ವಿದ್ಯಾರೂಪನಪ್ಪ ಎಮ್ಮ ಪರಶಿವಮೂರ್ತಿ ಶ್ರೀಗುರುವೇ ವಿದ್ಯೆಯಲ್ಲಿ ಗುರು ಕಾಣಿರೆ, ದೀಕ್ಷೆಯಲ್ಲಿ ಗುರುವೇರಿ ನೀವು `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬಿರಿ, ಆ ವಿಷ್ಣುವ ಭಜಿಸಿ ವಿಷ್ಣುವೇ ಗುರುವೆಂಬಿರಿ. ಅಂತಹ ವಿಷ್ಣುವಿಂಗೆಯೂ ಉಪಮನ್ಯು ಗುರು ಕಾಣಿರೆ. ಅಂತಹ ಉಪಮನ್ಯು ಮೊದಲಾದ ದೇವಋಷಿ ಬ್ರಹ್ಮಋಷಿ ರಾಜಋಷಿ ದೇವಜಾತಿ ಮಾನವಜಾತಿಗಳಿಗೆ ಪರಶಿವನಾಚಾರ್ಯನಾಗಿ ಉಪದೇಶವ ಮಾಡಿದನು. ವೇದಶಾಸ್ತ್ರ ಆಗಮ ಪುರಾಣಂಗಳಲ್ಲಿ, ವಿಚಾರಿಸಿ ನೋಡಿರೆ. ಅದು ಕಾರಣ ಮಹಾಚಾರ್ಯನು ಮಹಾದೀಕ್ಷಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಶಿಕ್ಷೆಯಲ್ಲಿ ಗುರುವೇರಿ ನಿಮಗೆ ಶಿಕ್ಷಾಸತ್ವವಿಲ್ಲ. ವೀರಭದ್ರ ದೂರ್ವಾಸ ಗೌತಮಾದಿಗಳಿಂ ನೀವೆಲ್ಲಾ ಶಿಕ್ಷೆಗೊಳಗಾದಿರಿ. ಶಿಕ್ಷಾಮೂರ್ತಿ ಚರಲಿಂಗವಾಗಿ ಶಿಕ್ಷಿಸಿ ರಕ್ಷಿಸಿದನು ಪರಶಿವನು. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ ಅತಿಭಕ್ತ್ಯಾ ಲಿಂಗಸಂತುಷ್ಟಿರಪಹಾಸ್ಯಂ ಯಮದಂಡನಂ ಎಂದುದಾಗಿ, ಶಿಕ್ಷೆಯಲ್ಲಿ ಗುರು ಎಮ್ಮ ಪರಶಿವಮೂರ್ತಿ ಮದ್ಗುರುವೇ ಗುರು ಕಾಣಿರೆ. ಸ್ವಾನುಭಾವದಲ್ಲಿ ಗುರುವೆ? ನೀವು ದೇವದಾನವಮಾನವರೆಲ್ಲರು ದೇಹಗುಣವಿಡಿದು ಮದಾಂಧರಾಗಿ ಸ್ವಾನುಭಾವ[ರಹಿತರಾದಿರಿ]. ಸ್ಕಂದ ನಂದಿ ವೀರಭದ್ರ ಭೃಂಗಿನಾಥ ಬಸವರಾಜ ಮೊದಲಾದ ಎಮ್ಮ ಮಾಹೇಶ್ವರರೇ ಸ್ವಾನುಭಾವಸಂಪನ್ನರು. ಇಂತಹ ಮಹಾಮಹೇಶ್ವರರಿಗೆ ಸ್ವಾನುಭಾವವ ಕರುಣಿಸಬಲ್ಲ ಎಮ್ಮ ಪರಶಿವಮೂರ್ತಿ ಮಹದ್ಗುರು[ವೇ] ಸ್ವಾನುಭಾವದಲ್ಲಿ ಗುರು ಕಾಣಿರೆ. ಮಾತಾಪಿತರ ಗುರುವೆಂಬಿರಿ, ಲಘುವಿನಲ್ಲಿ ತಾವೆಲ್ಲರು ಜನಿಸಿದಿರಿ. ತಮ್ಮ ಸ್ಥಿತಿಯೂ ಲಘು, ಲಘುವಾಗಿ ಲಯವಪ್ಪುದು ಗುರುವೆ? ಅಲ್ಲ. ಸೋಮಃ ಪವತೇ ಜನಿತಾ ಮತೀನಾಂ ಜದಿತಾ ದಿವೋ ಜನಿತಾ ಪೃಥ್ವಿವ್ಯಾ ಜನಿತಾಗ್ನೇರ್ಜನಿತಾ ಸೂರ್ಯಸ್ಯ `ಜನಿತೋಥವಿಷ್ಣೋಃ ಎಂದುದಾಗಿ, `ಶಿವೋ ಮಮೈವ ಪಿತಾ ಎಂದುದಾಗಿ, ಸರ್ವರಿಗೂ ಮಾತಾಪಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೊ. ಭಕ್ತಿಯಲ್ಲಿ ಗುರುವೆ? ನಿಮಗೆ ಲವಲೇಶ ಭಕ್ತಿಯಿಲ್ಲ, ನೀವೆಲ್ಲರು ಉಪಾಧಿಕರು. ನಿರುಪಾಧಿಕರು ಎಮ್ಮ ಮಹಾಸದ್ಭಕ್ತರು ತನು ಮನ ಧನವನರ್ಪಿಸಿ ಉಂಡು ಉಣಿಸಿ ಆಡಿ ಹಾಡಿ ಸುಖಿಯಾದರು ಶರಣರು. ಇಂತಹ ಶರಣಭರಿತ ಸದಾಶಿವಮೂರ್ತಿ ಮಹಾಸದ್ಗುರುವೇ ಭಕ್ತಿಯಲ್ಲಿ ಗುರು ಕಾಣಿರೆ. ಜ್ಞಾನದಲ್ಲಿ ಗುರುವೇ? ನೀವೆಲ್ಲರು ದೇವದಾನವ ಮಾನವರು ಅಜ್ಞಾನಿಗಳು. ಜ್ಞಾತೃ ಜ್ಞಾನ ಜ್ಞೇಯವಪ್ಪ ಪರಶಿವಲಿಂಗವನರಿಯದೆ ಅಹಂಕಾರದಿಂ ಲಘುವಾದಿರಿ. ಪರಧನ ಪರಸ್ತ್ರೀ ಪರಕ್ಷೇತ್ರಕ್ಕೆ ಆಸೆಮಾಡಿ ಲಘುವಾದಿರಿ ನಿರಾಶಸಂಪೂರ್ಣರು ಶಿವಜ್ಞಾನಸಂಪನ್ನರು ಎಮ್ಮ ಮಾಹೇಶ್ವರರು ಇಂತಹ ಮಾಹೇಶ್ವರರಿಂಗೆ ಶಿವಜ್ಞಾನವ ಕರುಣಿಸುವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ವೈರಾಗ್ಯದಲ್ಲಿ ಗುರುವೆ? ನೀವು ಆಶಾಬದ್ಧರು, ನಿರಾಶಾಸಂಪೂರ್ಣರು ಎಮ್ಮ ಸದ್ಭಕ್ತರು. ಇಂತಹ ಭಕ್ತದೇಹಿಕನಪ್ಪ ದೇವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ವೈರಾಗ್ಯದಲ್ಲಿ ಗುರು ಕಾಣಿರೆ. ಇದು ಕಾರಣ, ನಿತ್ಯದಲ್ಲಿ, ಸತ್ಯದಲ್ಲಿ, ಅಷ್ಟಮಹದೈಶ್ವರ್ಯದಲ್ಲಿ ದೀಕ್ಷೆಯಲ್ಲಿ, ಸ್ವಾನುಭಾವದಲ್ಲಿ, ಜ್ಞಾನದಲ್ಲಿ ವಿದ್ಯೆಯಲ್ಲಿ, ಬುದ್ಧಿಯಲ್ಲಿ, ವೈರಾಗ್ಯದಲ್ಲಿ, ಮಾತಾಪಿತರಲ್ಲಿ ಉಪಮಾತೀತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ, ಮಹಾಘನತರವಪ್ಪ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಲಲಾಟಲೋಚನಂ ಚಾಂದ್ರೀಂ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಿ ಎಂದುದಾಗಿ ಪರಶಿವನೇ ಗುರು, ಶ್ರೀಗುರುವೇ ಪರಶಿವನು. ಇಂತಹ ಮಹಾಸದ್ಗುರುವಪ್ಪ ಪರಶಿವಮೂರ್ತಿ ಕಾರುಣ್ಯವ ಮಾಡಿ, ಸದ್ಭಕ್ತಿಪದವ ತೋರಿದ ಎಮ್ಮ ಗಣನಾಥದೇವರೇ ಗುರು ಕಾಣಿರೆ. ಇದು ಕಾರಣ, ಶರಣಮೂರ್ತಿ ಶ್ರೀಗುರು. ಶ್ರೀಗುರು ಲಿಂಗ ಜಂಗಮ ಒಂದೆಯಾಗಿ ಶ್ರೀಗುರುವೇ ಗುರು, ಉಳಿದದ್ದೆಲ್ಲಾ ಲಘು. ಪರಶಿವಲಿಂಗವೇ ಗುರು, ಉಳಿದವೆಲ್ಲವೂ ಲಘು. ಜಂಗಮವೇ ಗುರು, ಉಳಿದವೆಲ್ಲವೂ ಲಘು. ಇದನರಿದು ಶ್ರೀಗುರುವನೇ ನಂಬುವುದು. ತನು ಮನ ಧನವನರ್ಪಿಸುವುದು, ನಿರ್ವಂಚಕನಾಗಿ ನಿರುಪಾಧಿಕನಾಗಿ ನಿರಾಶಾಸಂಪೂರ್ಣನಾಗಿ, ಧ್ಯಾನಿಸಿ ಪೂಜಿಸಿ ಸದ್ಭಕ್ತಿಯಿಂ ವರ್ತಿಸಿ ಪ್ರಸಾದವ ಪಡೆದು ಮುಕ್ತನಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಗುರುವೇ ನಮೋ ನಮೋ. ಶರಣಾಗತರಕ್ಷಕ ಗುರುವೇ ನಮೋ ನಮೋ. ಕೀಡಿ ಕುಂಡಲಿಯ ಉಪದೇಶದಂತೆ, ಎನ್ನ ನಿಮ್ಮಂತೆ ಮಾಡಿದ ಗುರುವೇ ನಮೋ ನಮೋ. ನಿತ್ಯ ಪರಮೈಶ್ವರ್ಯದ ಮುಕ್ತಿರಾಜ್ಯವ ಕೊಟ್ಟ ಗುರುವೇ ನಮೋ ನಮೋ. ಸಕಲವನೆನ್ನೊಳಗಿರಿಸಿ, ಸಕಲದೊಳಹೊರಗೆ ಎನ್ನ ವ್ಯಾಪಕವ ಮಾಡಿ ತೋರಿದ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ಗುರುವೇ ನಮೋ ನಮೋ.
--------------
ಸ್ವತಂತ್ರ ಸಿದ್ಧಲಿಂಗ
ಭಕ್ತಂಗೆ ವ್ರತವಾರರಲ್ಲಿ ತದ್ಗತವಾಗಿಹುದೆ ಭಕ್ತಿ. ಅದೆಂತೆಂದಡೆ ಗುರುವೇ ಶಿವನೆಂದರಿದು, ಗುರುವಾಜ್ಞೆಯ ಪಾಲಿಸುವುದೇ ಗುರುವ್ರತ. ಗುರುಮುಖದಲ್ಲಿ ಬಂದ ಲಿಂಗದ ಪೂಜೆಯಲ್ಲಿ, ನಿಯತಾತ್ಮನಾಗಿ ಭಾವ ಸಮೇತವಾದುದು ಲಿಂಗವ್ರತ. ಜಂಗಮವೇ ಮಹಾಲಿಂಗವೆಂದರಿದು, ಪೂಜಾದಿ ಕ್ರಿಯೆಯಿಂದ ಧನವನರ್ಪಿಸುವುದೇ ಚರವ್ರತ. ಗುರು ಲಿಂಗ ಜಂಗಮದ ಪ್ರಸಾದ ಸೇವನಾನುಭವವೇ ಪ್ರಸಾದವ್ರತ. ಲೋಕಪಾವನವಾದ ಶ್ರೀಗುರುಪಾದಾಂಬ್ಲುಜ್ವವ, ಸ್ನಾನಪಾನಾದಿಗಳಿಂದಾಚರಿಸುವುದೇ ಪಾದೋದಕವ್ರತ. ಗುರು ಲಿಂಗ ಜಂಗಮ ಪಾದೋದಕ ಪ್ರಸಾದದಲ್ಲಿ ತಲ್ಲೀನವಾದ ಭಕ್ತಿಯೇ ಭಾಕ್ತಿಕವ್ರತ. ಇಂತೀ ಷಡ್ವಿಧವ್ರತವನರಿದಾಚರಿಸುತ್ತಿರ್ಪಾತನೇ ಸದ್ಭಕ್ತನಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಆ ಭಕ್ತಂಗೆ ಲಿಂಗವೇ ಪ್ರಾಣ; ಆ ಲಿಂಗಕ್ಕೆ ಗುರುವೇ ಪ್ರಾಣ; ಆ ಗುರುವಿಂಗೆ ಜಂಗಮವೇ ಪ್ರಾಣ ನೋಡಾ. ಅದೇನುಕಾರಣವೆಂದರೆ: ಆ ನಿತ್ಯ ನಿರಂಜನ ಪರವಸ್ತುವೆ ಘನ ಚೈತನ್ಯವೆಂಬ ಜಂಗಮವು ನೋಡಾ. ಆ ಪರಮ ಜಂಗಮದಿಂದ ನಿಃಕಲ ಗುರುಮೂರ್ತಿ ಉದಯವಾದನು ನೋಡಾ. ಆ ನಿಃಕಲ ಗುರುಮೂರ್ತಿಯಿಂದ ಆದಿಮಹಾಲಿಂಗವು ಉದಯವಾಯಿತ್ತು ನೋಡಾ. ಆ ಆದಿಮಹಾಲಿಂಗದಿಂದ ಮೂರ್ತಿಗೊಂಡನು ಭಕ್ತನು. ಆ ಗುರುವಿಂಗೆ ಆ ಲಿಂಗಕ್ಕೆ ಆ ಭಕ್ತಂಗೆ ಆ ಜಂಗಮ ಪ್ರಸಾದವೇ ಪ್ರಾಣ ನೋಡಾ. ಇದು ಕಾರಣ: ಭಕ್ತನಾದರೂ ಲಿಂಗವಾದರೂ ಗುರುವಾದರೂ ಜಂಗಮ ಪ್ರಸಾದವ ಕೊಳ್ಳಲೇಬೇಕು. ಜಂಗಮ ಪ್ರಸಾದವ ಕೊಳ್ಳದಿದ್ದರೆ ಆತ ಗುರುವಲ್ಲ, ಅದು ಲಿಂಗವಲ್ಲ; ಆತ ಭಕ್ತನಲ್ಲ ನೋಡಾ. ಆ ಶೈವ ಪಾಷಂಡಿಯ ಕೈಯ ಪಡೆದುದು ಉಪದೇಶವಲ್ಲ; ಆತನಿಂದ ಪಡೆದುದು ಲಿಂಗವಲ್ಲ. ಆ ಲಿಂಗವ ಧರಿಸಿಪ್ಪಾತ ಭಕ್ತನಲ್ಲ. ಅವ ಭೂತಪ್ರಾಣಿ ನೋಡಾ. ಇದುಕಾರಣ: ಜಂಗಮ ಪ್ರಸಾದವ ಲಿಂಗಕ್ಕೆ ಕೊಟ್ಟು ಕೊಂಬಾತನೆ ಶಿವಭಕ್ತನು. ಆ ಜಂಗಮ ಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳ್ಳದಿದ್ದರೆ ಅವ ಭವಿಗಿಂದಲು ಕರಕಷ್ಟ ನೋಡಾ. ಆ ಭವಭಾರಿಯ ಮುಖ ನೋಡಲಾಗದು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಒಮ್ಮೆ ಶ್ರೀಗುರುವಿನ ಚರಣವ ನೆನೆಯಲೊಡನೆ ಭವಬಂಧನ ಬಿಡುವುದು. ಗುರುವೇ ಶರಣು ಗುರುಲಿಂಗವೇ ಶರಣು ಹರಿಬ್ರಹ್ಮಾದಿಗಳಿಗಗೋಚರ ಕೂಡಲಚೆನ್ನಸಂಗನ ತೋರಿದ ಗುರುವೇ ಶರಣು.
--------------
ಚನ್ನಬಸವಣ್ಣ
ಅರುಹು ತಲೆದೋರಿತೆಂದು, ಗುರುಹಿರಿಯರ ಜರಿಯಲಾಗದಯ್ಯ. ಗುರುವನು ಜರಿಯೆ; ಹಿರಿಯರನು ಜರಿಯೆ; ಅದೇನು ಕಾರಣವೆಂದಡೆ; ಗುರುವೇ ಸದ್ರೂಪು, ಲಿಂಗವೇ ಚಿದ್ರೂಪು, ಜಂಗಮವೇ ಆನಂದಸ್ವರೂಪು. ಇವು ಮೂರು ಬರಿಯ ಅರುಹು ಸ್ವರೂಪು. ಅವ ಜರಿಯಲುಂಟೆ?. ನಡುವಣ ಪ್ರಕೃತಿಯ ಜರಿವುತ್ತಿಪ್ಪೆನಯ್ಯ. ಆ ಪ್ರಕೃತಿಯ ಜರಿದರೆ ಗುರುಹಿರಿಯರಿಗೆ ನಿಮಗೇಕೆ ದುಮ್ಮಾನವಯ್ಯ?. ಪ್ರಕೃತಿಯೇನು ನಿಮ್ಮ ಸೊಮ್ಮೆ ಹೇಳಿರಯ್ಯ. ಜೀವನೋಪಾಯಕ್ಕೆ ಪರಮಾರ್ಥವನಲ್ಲಾಯೆಂಬ ಪ್ರಪಂಚಿಗಳ ಮೆಚ್ಚನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಯ್ಯಾ, ನಿತ್ಯನು ನೀನೆ; ಆ ಸತ್ಯಶುದ್ಧ ದೇಹಿ ನೀನೆ ಕಾಣಾ, ಎಲೆ ಅಯ್ಯಾ. ಅಯ್ಯಾ, ನೀನು ಕಾರುಣ್ಯವುಳ್ಳ ಮಹದಾಶ್ರಯ ಕಾಣಾ, ಎಲೆ ಅಯ್ಯಾ, ನೀನು ಭಕ್ತದೇಹಿಕ ದೇವನಾದ ಕಾರಣ ಮಚ್ಚಿದೆನಯ್ಯಾ. ಒಲುಮೆಯ ಮಚ್ಚು ನಿಶ್ಚಯವೆಂದು ನಂಬಿದೆನಯ್ಯಾ. ಗುರುವೇ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->