ಅಥವಾ

ಒಟ್ಟು 139 ಕಡೆಗಳಲ್ಲಿ , 35 ವಚನಕಾರರು , 126 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನು ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಮನ ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಕಿವಿಗಳು ಕೇಳಿದ ಪದಾರ್ಥ ಲಿಂಗಾರ್ಪಿತವಲ್ಲ, ಕಂUಳು ನೋಡಿದ ಪದಾರ್ಥ ಲಿಂಗಾರ್ಪಿತವಲ್ಲ, ಘ್ರಾಣ ಸೋಂಕಿದ ಪದಾರ್ಥ ಲಿಂಗಾರ್ಪಿತವಲ್ಲ, ಜಿಹ್ವೆ ತಾಗಿದ ಪದಾರ್ಥ ಲಿಂಗಾರ್ಪಿತವಲ್ಲ. ಅಹುದೆಂಬುದ ನಡೆಯ (ನುಡಿಯ?), ಅಲ್ಲೆಂಬುದ ನುಡಿಯ, ಬೇಕು ಬೇಡೆಂಬುದಿಲ್ಲ, ಸಾವಯವೆಂಬುದಿಲ್ಲ. ನಿರವಯದಲ್ಲಿ ಸಕಲಭೋಗಂಗಳ ಭೋಗಿಸುವನು,
--------------
ಚನ್ನಬಸವಣ್ಣ
ಬಯಲೆಂದಡೆ ಕೀಳು ಮೇಲಿನೊಳಗಾಯಿತ್ತು. ನಿರವಯವೆಂದಡೆ ಸಾವಯದಿಂದ ಕುರುಹುದೋರಿತ್ತು. ಸವಿದ ಸವಿಯನುಪಮಿಸಬಾರದೆಂದಡೆ ಜಿಹ್ವೆಯಿಂದ ಕುರುಹುಗೊಂಡಿತ್ತು. ಆ ಜಿಹ್ವೆ ಸಾಕಾರ, ಸವಿದ ಸವಿ ನಿರಾಕಾರವೆಂದಡೆ, ನಾನಾ ಭೇದಂಗಳಿಂದ ರುಚಿಮಯವಾಯಿತ್ತು. ಆ ಜಿಹ್ವೆಯ ಕೊನೆಯ ಮೊನೆಯಲ್ಲಿ ನಿಂದು, ಅಹುದಲ್ಲವೆಂಬುದ ತಾನೆ ಕುರುಹಿಟ್ಟುಕೊಂಡಂತೆ ಜಿಹ್ವೆ ಬಲ್ಲುದೆಂದಡೆ ತನ್ನಡಿಗೆ ಬಾರದುದನರಿಯಿತ್ತೆ ? ಸಾರ ಸ್ವಾದ ಲೇಸೆಂದಡೆ ಜಿಹ್ವೆ ಹೊರತೆಯಾಗಿ ಕುರುಹುಗೊಂಡಿತ್ತೆ ? ಇದು ಕ್ರೀ ಜ್ಞಾನ ಸಂಪುಟಸ್ಥಲ. ಈ ಉಭಯಸ್ಥಲ ಲೇಪವಾದ ಮತ್ತೆ ನಿರುತ ನಿರ್ಯಾಣವೆಂಬುದು ನನ್ನಲ್ಲಿಯೊ ? ನಿನ್ನಲ್ಲಿಯೊ ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ ಸದಾತ್ಮದಲ್ಲಿ ನಿನ್ನ ಕುರುಹೇಕೆ ಅಡಗದು ?
--------------
ಮೋಳಿಗೆ ಮಹಾದೇವಿ
ಎನ್ನ ಕರಸ್ಥಲದಲ್ಲಿಯ ಲಿಂಗಕ್ಕೆ ಬಂದ ಪದಾರ್ಥಂಗಳನರ್ಪಿಸುವೆನೆ ? ಅರ್ಪಿಸಲಮ್ಮೆ. ಅದೇನು ಕಾರಣವೆಂದಡೆ: ಎನ್ನ ಕಂಗಳು ಕಂಡವಾಗಿ, ಎನ್ನ ಶ್ರೋತ್ರಗಳು ಕೇಳಿದವಾಗಿ, ಎನ್ನ ಕೈಗಳು ಮುಟ್ಟಿದವಾಗಿ, ಎನ್ನ ನಾಸಿಕ ವಾಸಿಸಿತ್ತಾಗಿ, ಎನ್ನ ಜಿಹ್ವೆ ರುಚಿಸಿತ್ತಾಗಿ. ಇಂತಪ್ಪ ಎನ್ನ ಅಂಜಿಕೆಯ ನಿಮ್ಮ ಶರಣರು ಬಿಡಿಸಿದರಾಗಿ. ಅದೆಂತೆಂದಡೆ: ಎನ್ನ ಶ್ರೋತ್ರದಲ್ಲಿ ನಿಮ್ಮ ಸಾಹಿತ್ಯವ ಮಾಡಿದರಾಗಿ, ಎನ್ನ ನೇತ್ರದಲ್ಲಿ ನಿಮ್ಮ ಸಾಹಿತ್ಯವ ಮಾಡಿದರಾಗಿ, ಎನ್ನ ತ್ವಕ್ಕಿನಲ್ಲಿ ನಿಮ್ಮ ಸಾಹಿತ್ಯವ ಮಾಡಿದರಾಗಿ, ಎನ್ನ ಜಿಹ್ವೆಯಲ್ಲಿ ನಿಮ್ಮ ಸಾಹಿತ್ಯವ ಮಾಡಿದರಾಗಿ, ಎನ್ನ ನಾಸಿಕದಲ್ಲಿ ನಿಮ್ಮ ಸಾಹಿತ್ಯವ ಮಾಡಿದರಾಗಿ, ಅಲ್ಲಲ್ಲಿ ಅರ್ಪಿತಂಗಳಾಗುತ್ತಿರ್ದವಾಗಿ, ಇನ್ನಂಜೆ ಅಂಜೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಕಂಗಳೇಕೆ `ನೋಡಬೇಡಾ' ಎಂದರೆ ಮಾಣವು ? ಶ್ರೋತ್ರಂಗಳೇಕೆ `ಆಲಿಸಬೇಡಾ' ಎಂದರೆ ಮಾಣವು ? ಜಿಹ್ವೆ ಏಕೆ `ರುಚಿಸಬೇಡಾ' ಎಂದರೆ ಮಾಣವು (ದು ?) ನಾಸಿಕವೇಕೆ `ವಾಸಿಸಬೇಡಾ' ಎಂದರೆ ಮಾಣವು ? (ದು ?) ತ್ವಕ್ಕು ಏಕೆ `ಸೋಂಕಬೇಡಾ' ಎಂದರೆ ಮಾಣವು ? (ದು ?)_ ಈ ಭೇದವನರಿದು ನುಡಿಯಲು ಸಮಧಾತುವಾಯಿತ್ತು! ಗುಹೇಶ್ವರಲಿಂಗಕ್ಕೆ ಒಲಿದ ಕಾರಣ, ಅಭಿಮಾನ ಲಜ್ಜೆ ಬೇಸತ್ತು ಹೋಯಿತ್ತು.
--------------
ಅಲ್ಲಮಪ್ರಭುದೇವರು
ಭಕ್ತಂಗೆ ತ್ರಿವಿಧಮಲ ನಾಸ್ತಿಯಾಗಿರಬೇಕು. ಮಾಹೇಶ್ವರಂಗೆ ಬಂಧ ಜಪ ನೇಮ ಕರ್ಮಂಗಳು ಹಿಂಗಿರಬೇಕು. ಪ್ರಸಾದಿಗೆ ಆಯತ ಸ್ವಾಯತ ಸನ್ನಹಿತವೆಂಬುದ ಸಂದೇಹಕ್ಕಿಕ್ಕದೆ ಸ್ವಯಸನ್ನದ್ಧವಾಗಿರಬೇಕು. ಪ್ರಾಣಲಿಂಗಿಯಾದಡೆ ಬಂದು ಸೋಂಕುವ ಸುಗುಣ ನಿಂದು ಸೋಂಕುವ ದುರ್ಗುಣ ಉಭಯ ಸೋಂಕುವುದಕ್ಕೆ ಮುನ್ನವೆ ಹಿಡಿವುದ ಹಿಡಿದು, ಬಿಡುವುದ ಬಿಟ್ಟು ಅರ್ಪಿಸಬೇಕು. ಶರಣನಾದಲ್ಲಿ ಆಗುಚೇಗೆಯೆಂಬುದನರಿಯದೆ ಸ್ತುತಿನಿಂದ್ಯಾದಿಗಳಿಗೆ ಮೈಗೊಡದೆ ರಾಗವಿರಾಗವೆಂಬುದಕ್ಕೆ ಮನವಿಕ್ಕದೆ ಜಿಹ್ವೆ ಗುಹ್ಯೇಂದ್ರಿಯಕ್ಕೆ ನಿಲುಕದೆ ಮದಗಜದಂತೆ ಇದಿರನರಿಯದಿಪ್ಪುದು. ಐಕ್ಯನಾದಲ್ಲಿ ಸುಗಂಧದ ಸುಳುಹಿನಂತೆ ಪಳುಕಿನ ರಾಜತೆಯಂತೆ, ಶುಕ್ತಿಯ ಅಪ್ಪುವಿನಂತೆ ಅಣೋರಣಿಯಲ್ಲಿ ಆವರಿಸಿ ತಿರುಗುವ ನಿಶ್ಚಯತನದಂತೆ ಬಿಂಬದೊಳಗಣ ತರಂಗದ ವಿಸ್ತರದಂಗದಂತೆ ಇಂತೀ ಷಟ್‍ಸ್ಥಲಕ್ಕೆ ನಿರ್ವಾಹಕವಾಗಿ ವಿಶ್ವಾಸದಿಂದ ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವನರಿದವರಿಗಲ್ಲದೆ ಸಾಧ್ಯವಲ್ಲ.
--------------
ಬಾಹೂರ ಬೊಮ್ಮಣ್ಣ
ಆದಿ ಅನಾದಿಯೆಂಬವು ಸಂಗಷ್ಟವಾಗಿರ್ದು, ವಿಭೇದವಾಗುವಲ್ಲಿ ಕುಂಡಲಿಯ ಶಕ್ತಿಯಲ್ಲಿ ಪ್ರಾಣವಾಯು ಪ್ರಣವಸ್ವರವನೊಡಗೂಡಿ ಬ್ರಹ್ಮಸ್ಥಾನದಲ್ಲಿ ಸ್ಥಾಪ್ಯ ಶಿವನಾಗಿ, ಭ್ರೂಮಧ್ಯಕಂಠಸ್ಥಾನದಲ್ಲಿ ನಿಃಕಲಸ್ವರೂಪನಾಗಿ, ಹೃದಯನಾಬ್ಥಿಯಲ್ಲಿ ಸಕಲನಿಃಕಲನಾಗಿ, ಸ್ವಾದ್ಥಿಷ್ಠಾನ ಆಧಾರದಲ್ಲಿ ಕೇವಲಸಖನಾಗಿ, ಆ ಸಕಲಕ್ಕೆ ಎರಡು ಪಾದವನಿತ್ತು, ಒಂದು ಪಾದಕ್ಕೆ ಕ್ರಿಯಾಶಕ್ತಿ, ಒಂದು ಪಾದಕ್ಕೆ ಜ್ಞಾನಶಕ್ತಿಯ ಮಾಡಿ ನಿಲ್ಲಿಸಿ, ಮೇಲಣ ಸಕಲ ನಿಃಕಲತತ್ತ್ವಕೈದಿ, ಅಲ್ಲಿಗೆ ಎರಡು ಹಸ್ತವನಿತ್ತು, ಒಂದು ಹಸ್ತಕ್ಕೆ ಆದಿಶಕ್ತಿ, ಒಂದು ಹಸ್ತಕ್ಕೆ ಇಚ್ಛಾಶಕ್ತಿಯನಾದಿ ಮಾಡಿ ನಿಲಿಸಿ, ಮೇಲಣ ನಿಃಕಲತತ್ತ್ವವನೈದಿ, ಅಲ್ಲಿಗೆ ನಾಲ್ಕು ಪಾದವನಿತ್ತು, ಅವು ಆವವು ಎಂದಡೆ, ಜಿಹ್ವೆ ಘ್ರಾಣ ನೇತ್ರ ಶ್ರೋತ್ರವೆಂಬ ನಾಲ್ಕು ಪಾದ ವನಾದಿಮಾಡಿ ನಿಲ್ಲಿಸಿ, ನಾಲ್ಕು ಪಾದವಂ ನಿಲ್ಲಿಸಿದುದರಿಂದ ನಂದಿಯೆಂಬ ನಾಮವಾಯಿತ್ತು. ಆ ನಂದೀಶ್ವರಂಗೆ ಚಿತ್‍ಶಕ್ತಿಯೆ ಅಂಗ, ಪರಶಕ್ತಿಯೆ ಮುಖ. ಇಂತಪ್ಪ ನಂದೀಶ್ವರ ನಲಿದಾಡಿ ಅನಾದಿ ಪರಶಿವ ಅಖಿಳ ಬ್ರಹ್ಮಾಂಡವ ಹೊತ್ತಿಪ್ಪನಲಾಯೆಂದರಿದು, ಆದಿವಾಹನವಾದನು, ಅದೀಗ ಆದಿವೃಷಭನೆಂಬ ನಾಮವಾಯಿತ್ತು. ಆದಿವೃಷಭನ ಆದಿಯಲ್ಲಿ ಪರಶಿವನಿಪ್ಪನು, ಆ ಪರಶಿವನಾದಿಯಲ್ಲಿ ನಿಃಕಲವಿಪ್ಪುದು, ಆ ನಿಃಕಲದಾದಿಯಲ್ಲಿ ಸಕಲ ನಿಃಕಲವಿಪ್ಪುದು. ಆ ಸಕಲ ನಿಃಕಲದಾದಿಯಲ್ಲಿ ಕೇವಲ ಸಕಲವಿಪ್ಪುದು. ಆ ಸಕಲವೆಂದರೆ ಅನಂತತತ್ತ್ವ. ಬ್ರಹ್ಮಾಂಡ ಕೋಟ್ಯಾನುಕೋಟಿ ಲೋಕಾಲೋಕಂಗಳು ದೇವದಾನವ ಮಾನವರು ಸಚರಾಚರ ಎಂಬತ್ತನಾಲ್ಕು ಲಕ್ಷ ಜೀವಜಂತುಗಳುದ್ಭವಿಸಿದವು. ಆ ಪಿಂಡ ಬ್ರಹ್ಮಾಂಡದ ಹೊರೆಯಲ್ಲಿ ಸಕಲಪದಾರ್ಥಗಳುದ್ಭವಿಸಿದವು. ಸಕಲಪದಾರ್ಥಂಗಳ ಪುಣ್ಯಪಾಪದ ಸಾರವ ಕೈಕೊಂಬುದಕ್ಕೆ ದೇವನಾವನುಂಟೆಂದು ಆಹ್ವಾನಿಸಿ ನೋಡಲು, ಆ ನಿಃಕಲ ಮಹಾಲಿಂಗವೆ ಕ್ರಿಯಾಶಕ್ತಿಯ ಮುಖದಲ್ಲಿ ಇಷ್ಟಲಿಂಗವಾಗಿ ಬಂದು, ಜ್ಞಾನಶಕ್ತಿಮುಖದಲ್ಲಿ ಸಕಲಪದಾರ್ಥಂಗಳ ಕೈಕೊಂಬಲ್ಲಿ, ಪುಣ್ಯಪಾಪಂಗಳ ಸಾರವಳಿದು, ಲಿಂಗ ಸಾರವಾದ ರೂಪ ಇಷ್ಟಲಿಂಗಕ್ಕೆ ಕೊಟ್ಟು, ಆ ರುಚಿಪ್ರಸಾದವ ಜ್ಞಾನಶಕ್ತಿ ಆದಿಶಕ್ತಿ ಕೈಯಲ್ಲಿಪ್ಪ ಪ್ರಾಣಲಿಂಗಕ್ಕೆ ಇಚ್ಛಾಶಕ್ತಿಯ ಮುಖದಲ್ಲಿ ಕೊಡಲು, ಆ ರುಚಿ ಪ್ರಸಾದವ ಪ್ರಾಣಲಿಂಗವಾರೋಗಿಸಿ, ಪರಮ ಪರಿಣಾಮವನೈದಲು, ಆ ಪರಿಣಾಮ ಪ್ರಸಾದವ ಜ್ಞಾನಶಕ್ತಿಯು ನಂದೀಶ್ವರಂಗೆ ಕೊಡಲು, ಆ ಪರಮ ತೃಪ್ತಿಯ ಶೇಷ ನಂದೀಶ್ವರ ಆರೋಗಿಸಿ ಪರವಶವನೈದಲು, ಆ ಪರವಶದ ಶೇಷವ ಜ್ಞಾನಶಕ್ತಿ ಆರೋಗಿಸಿ, ಅಡಿಮುಡಿಗೆ ತಾನೆ ಆದಿಯಾಗಲು, ಅದೀಗ ಅಡಿಮುಡಿಯ ಶೇಷ ಹೊತ್ತಿಪ್ಪನೆಂದು ವೇದಾಗಮಶಾಸ್ತ್ರಪುರಾಣಪುರುಷರು ನುಡಿಯುತಿಪ್ಪರು. ಇಂತಪ್ಪ ಬಸವನ ಆದಿಮೂಲವ ಬಲ್ಲ ಶರಣನಾಯಿತ್ತು ತೊತ್ತು ಮುಕ್ಕುಳಿಸಿ ಉಗುಳುವ ಪಡುಗ, ಮೆಟ್ಟುವ ಚರ್ಮ ಹಾವುಗೆಯಾಗಿ ಬದುಕಿದೆನು ಕಾಣಾ, ಬಸವಪ್ರಿಯ ಕೂಡಲ[ಚೆನ್ನ]ಸಂಗಮದೇವಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಸಂಗಮೇಶ್ವರದ ಅಪ್ಪಣ್ಣ
ಅನಾದಿ ಪರಶಿವನಿಂದಾಕಾರವಾದ ಆದಿಬಿಂದು ಅನಾದಿಬಿಂದು ಚಿದ್ಬಿಂದು ಪರಬಿಂದುವೆ ಜಗದ ಮಧ್ಯದಲ್ಲಿ ಸ್ವಯ, ಚರ, ಪರ, ಭಕ್ತ, ಮಹೇಶ್ವರ, ಪ್ರಸಾದಿ ಪೂಜ್ಯ ಪೂಜಕತ್ವದಿಂದ ಚರಿಸುತ್ತಿರಲು, ಆ ಸಮಯದಲ್ಲಿ ಪ್ರಮಾದವಶದಿಂದ ಲಿಂಗಾಂಗಕ್ಕೆ ಸುಯಿಧಾನ ತಪ್ಪಿ ವಿಘ್ನಾದಿಗಳು ಬಂದು ತಟ್ಟಿ ಶಂಕೆ ಬಂದಲ್ಲಿ ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿದಲ್ಲಿ ಸ್ಥೂಲವಾದಡೆ ಸದಾಚಾರಕ್ಕೆ ಹೊರಗು ಸೂಕ್ಷ್ಮವಾದಡೆ ಶರಣಗಣಂಗಳ ಸಮೂಹಮಧ್ಯದಲ್ಲಿ ಭೃತ್ಯಭಾವದಿಂದ ಹತ್ತು ಹನ್ನೊಂದ ಕೊಳತಕ್ಕುದಲ್ಲ ನೋಡಾ (ಕೊಳತಕ್ಕುದಲ್ಲದೆ?) ಕರ್ತೃತ್ವದಿಂದ ಹತ್ತು ಹನ್ನೊಂದ ಕೊಡತಕ್ಕುದಲ್ಲ ನೋಡಾ ! ಸ್ಥೂಲ ಸೂಕ್ಷ್ಮದ ವಿಚಾರವೆಂತೆಂದಡೆ: ಪರಶಿವಸ್ವರೂಪವಾದ ಇಷ್ಟಲಿಂಗದ ಷಟ್‍ಸ್ಥಾನದೊಳಗೆ ಆವ ಮುಖದಿಂದಾದಡೆಯು ಸುಯಿಧಾನ ತಪ್ಪಿ ಪೆಟ್ಟುಹತ್ತಿ ಭಿನ್ನವಾದಡೆ, ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಹರಗುರುವಚನ ವಿಚಾರಿಸಿರಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಪ್ರತಿಜ್ಞೆಯ ಮಾಡುವುದು, ಶಕ್ತಿ ಸ್ವರೂಪವಾದ ಅಂಗದ ಅವಯವಂಗಳಿಗೆ ಶಿವಾನುಕೂಲದಿಂದ ವ್ಯಾಘ್ರ ಭಲ್ಲೂಕ ದಂಷ್ಟ್ರ ಕರ್ಕಟ ವಾಜಿ ಮಹಿಷ ಸಾಗರದುಪ್ಪಿ ಗಜ ಶುನಿ ಶೂಕರ ಮಾರ್ಜಾಲ ಹೆಗ್ಗಣ ಉರಗ ಮೊದಲಾದ ಮಲಮಾಂಸಭಕ್ಷಕ ಪ್ರಾಣಿಗಳು ಮೋಸದಿಂದ ಪಾದ ಪಾಣಿ ಗುದ ಗುಹ್ಯ ದೇಹವ ಕಚ್ಚಿದಡೆ ಸ್ಥೂಲವೆನಿಸುವುದಯ್ಯಾ ! ಅದರಿಂದ ಮೇಲೆ ಜಿಹ್ವೆ ನಾಸಿಕ ನೇತ್ರ ಲಲಾಟ ಶ್ರೋತ್ರಂಗಳ ಕಚ್ಚಿದಡೆ ಸೂಕ್ಷ್ಮವೆನಿಸುವುದಯ್ಯಾ ! ಈ ಪ್ರಕಾರದಲ್ಲಿ ಲಿಂಗಾಂಗಕ್ಕೆ ಅಪಮೃತ್ಯು ಬಂದು ತಟ್ಟಿದಲ್ಲಿ ಆಚಾರಕ್ಕೆ ಹೊರಗಾದವರು ಗಣಮಧ್ಯದಲ್ಲಿ ಪ್ರಾಣವ ಬಿಡುವುದಯ್ಯಾ, ಇಂತಪ್ಪ ಆಚಾರಕ್ರಿಯಾನಿಷ್ಠನ ಭಕ್ತ ಮಹೇಶ್ವರ ಶರಣಗಣಂಗಳು ಜಂಗಮದ ಪಾದದಲ್ಲಿ ಸಮಾಧಿಯ ಮಾಡುವುದಯ್ಯಾ ಪ್ರಾಣತ್ಯಾಗವ ಮಾಡಲಾರದಿರ್ದಡೆ, ಭಕ್ತ ಮಹೇಶ್ವರ ಶರಣಗಣಂಗಳ ಮಹಾನೈಷ್ಠೆಯಿಂದ ಸಾಕ್ಷಾತ್ಪ್ರಭುವೆಂದು ನಂಬಿ ಅವರು ತೋರಿದ ಸೇವೆಯ ಮಾಡಿ, ಅವರು ಕೊಟ್ಟ ಧಾನ್ಯಾದಿಗಳ ಸ್ವಪಾಕವ ಮಾಡಿ ಮಹಾಪ್ರಸಾದವೆಂದು ಭಾವಿಸಿ ಪಾತಕಸೂತಕಂಗಳ ಹೊದ್ದದೆ ಆಚರಿಸಿದಾತಂಗೆ ಅವಸಾನಕಾಲದಲ್ಲಿ ಮಹಾಗಣಂಗಳು ಲಿಂಗಮುದ್ರಾಭೂಮಿಯಲ್ಲಿ ಪಾದದಳತೆಯಿಲ್ಲದೆ ನೋಟಮಾತ್ರ ಪ್ರಮಾಣಿಸಿ ಸಹಜಸಮಾಧಿಯ ಮಾಡಿ ಲಿಂಗಾಕೃತಿಪ್ರಣವಸಂಬಂಧವಾದ ತಗಡ ಸಂಬಂಧ ಮಾಡದೆ ಪುಷ್ಪಾಂಜಲಿಯ ಮಾಡದೆ, ಆ ನಿಕ್ಷೇಪ ಸ್ಥಾನದಲ್ಲಿ ಜಂಗಮದ ಪಾದವಿಟ್ಟು ಆ ಮರಣಸನ್ನದ್ಧನ ನಿಕ್ಷೇಪನ ಮಾಡುವುದಯ್ಯಾ. ಈ ರೀತಿಯಿಂದಾಚರಿಸಿದಡೆ ಮರಳಿ ಗುರುಕರಜಾತನಾಗಿ ಸದ್ಭಕ್ತಿ ಜ್ಞಾನಾಚಾರ ಕ್ರೀಯಲ್ಲಿ ನಡೆನುಡಿಸಂಪನ್ನನಾಗಿ ಷಟ್‍ಸ್ಥಲದ ಬ್ರಹ್ಮವ ಕೂಡಿ ಘನಸಾರದಂತೆ ಸರ್ವಾಂಗವೆಲ್ಲ ಜ್ಯೋತಿರ್ಮಯಲಿಂಗದಲ್ಲಿ ನಿರವಯವಪ್ಪುದು ನೋಡಾ ! ಇಂತು ಗುರುಮಾರ್ಗಾಚಾರವ ಮೀರಿ, ಅವಧೂತಮಾರ್ಗದಲ್ಲಿ ನಡೆದಡೆ, ಇರುವೆ ಮೊದಲಾನೆ ಕಡೆಯಾದ ಸಮಸ್ತ ಯೋನಿಯಲ್ಲಿ ಜನಿಸಿ, ಸುಖ-ದುಃಖ, ಪುಣ್ಯ-ಪಾಪ, ಸ್ವರ್ಗ-ನರಕವನನುಭವಿಸಿ ಕಾಲಕಾಮಾದಿಗೊಳಗಾಗಿ ಗುರುಮಾರ್ಗಾಚಾರಕ್ಕೆ ಹೊರಗಾಗಿ ಹೋಹರು ನೋಡಾ, ಕೂಡಲಚೆನ್ನಸಂಗಮದೇವಾ !
--------------
ಚನ್ನಬಸವಣ್ಣ
ಕಂಗಳು ನೋಡಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ಕಿವಿಗಳು ಕೇಳಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ನಾಸಿಕ ಮುಟ್ಟಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ಜಿಹ್ವೆ ಸೋಂಕಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ಕೈಗಳು ಮುಟ್ಟಿದ ಪದಾರ್ಥ ಲಿಂಗಕ್ಕರ್ಪಿತವಲ್ಲ, ರೂಪು ರಸ ಗಂಧ ರುಚಿ ಸ್ಪರ್ಶವನು ಕೂಡಲಚೆನ್ನಸಂಗಯ್ಯಾ ನೀನರಿಯಲು ಪ್ರಸಾದವೆನಗೆ.
--------------
ಚನ್ನಬಸವಣ್ಣ
ತನ್ನ ಹೃದಯಕ್ಕೆ ಲಿಂಗದ ಹೃದಯ, ತನ್ನ ಶ್ರೋತ್ರಕ್ಕೆ ಲಿಂಗದ ಶ್ರೋತ್ರ, ತನ್ನ ನೇತ್ರಕ್ಕೆ ಲಿಂಗದ ನೇತ್ರ, ತನ್ನ ತ್ವಕ್ಕಿಗೆ ಲಿಂಗದ ತ್ವಕ್ಕು, ತನ್ನ ನಾಸಿಕಕ್ಕೆ ಲಿಂಗದ ನಾಸಿಕ, ತನ್ನ ಜಿಹ್ವೆಗೆ ಲಿಂಗದ ಜಿಹ್ವೆ ಪ್ರತಿರೂಪಕವಾಗಿರ್ದ ಬಳಿಕ, ಅಂಗವಿದೆಂದು, ಲಿಂಗವಿದೆಂದು, ಬೇರಿಟ್ಟು ನುಡಿಯಲುಂಟೇ ಅಯ್ಯ?. ಶರಣನೇ ಲಿಂಗ; ಲಿಂಗವೇ ಶರಣ. ಇವೆರಡಕ್ಕೂ ಬ್ಥಿನ್ನವೆಲ್ಲಿಯದೋ ಒಂದೆಯಾದ ವಸ್ತುವಿಂಗೆ?, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪೃಥ್ವಿ ಅಂಗ, ಚಿತ್ತ ಹಸ್ತ, ನಾಸಿಕ ಮುಖ, ಗಂಧ ಪದಾರ್ಥ, ಆಚಾರಲಿಂಗಕರ್ಪಿತ ಭಕ್ತ. ಅಪ್ಪು ಅಂಗ, ಬುದ್ದಿ ಹಸ್ತ, ಜಿಹ್ವೆ ಮುಖ, ರುಚಿ ಪದಾರ್ಥ, ಗುರುಲಿಂಗಕರ್ಪಿತ ಮಹೇಶ್ವರ. ಅನಿಲ ಅಂಗ, ನಿರಹಂಕಾರ ಹಸ್ತ, ನೇತ್ರ ಮುಖ, ರೂಪು ಪದಾರ್ಥ, ಶಿವಲಿಂಗಕರ್ಪಿತ ಪ್ರಸಾದಿ. ಪವನ ಅಂಗ, ಮನ ಹಸ್ತ, ತ್ವಕ್ಕು ಮುಖ, ಸ್ಪರ್ಶ ಪದಾರ್ಥ, ಜಂಗಮಲಿಂಗಕರ್ಪಿತ ಪ್ರಾಣಲಿಂಗಿ. ವ್ಯೋಮ ಅಂಗ, ಜ್ಞಾನ ಹಸ್ತ, ಶ್ರೋತ್ರ ಮುಖ, ಶಬ್ದ ಪದಾರ್ಥ, ಪ್ರಸಾದಲಿಂಗಕರ್ಪಿತ ಶರಣ. ಹೃದಯ ಅಂಗ, ಭಾವ ಹಸ್ತ, ಅರ್ಥ ಮುಖ, ಪರಿಣಾಮ ಪದಾರ್ಥ, ಮಹಾಲಿಂಗಕರ್ಪಿತ ಐಕ್ಯ. ಇಂತೀ ಷಟ್‍ಸ್ಥಲವಳವಟ್ಟಾತನು ಪರಶಕ್ತಿಸ್ವರೂಪನು, ಆತನು ನಿಜಶಿವಯೋಗಸಂಪನ್ನನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಲ್ಲಿ ಪಂಚಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯದಲ್ಲಿ ಚತುರ್ಮುಖಲಿಂಗವ ಪ್ರತಿಷ್ಠೆಯ ಮಾಡಿದನಯ್ಯಾ. ಶ್ರೋತ್ರ ನೇತ್ರ ಘ್ರಾಣ ತ್ವಕ್ಕು ಜಿಹ್ವೆ ವಾಕ್ಕು ಪಾಣಿ ಪಾದ ಪಾಯು ಗುಹ್ಯಗಳೆಂಬ ದಶೇಂದ್ರಿಯಂಗಳಲ್ಲಿ ದಶಮುಖಲಿಂಗವ ಪ್ರತಿಷ್ಠೆಯ ಮಾಡಿ ಅಂತರಂಗ ಬಹಿರಂಗವ ಹತವ ಮಾಡಿದನಯ್ಯಾ ಕೂಡಲಚೆನ್ನಸಂಗಮದೇವಾ ಎನ್ನ ಶ್ರೀಗುರು ಬಸವಣ್ಣನು
--------------
ಚನ್ನಬಸವಣ್ಣ
ಎಲಾ, ಶೈವ ವೀರಶೈವ ಎಂಬುವವು ಉಭಯ ಮತಗಳುಂಟು. ಅವು ಎಂತೆಂದಡೆ, ಸ್ಥಾಪ್ಯಲಿಂಗವ ಪೂಜೆಮಾಡುವುದೇ ಶೈವ; ಗುರುವು ಕೊಟ್ಟ ಇಷ್ಟಲಿಂಗವ ಪೂಜೆಮಾಡುವುದೇ ವೀರಶೈವ. ಅದರೊಳಗೆ ಲಿಪ್ತವಾಗಿರ್ಪರೇ ಭಕ್ತರು, ನೀವು ಕೇಳಿರಯ್ಯಾ : ಸ್ಥಾಪ್ಯಲಿಂಗವ ಪೂಜಿಸಿದ ಕರ ಪೋಗಿ ಪರಸ್ತ್ರೀಯರ ಕುಚಂಗಳ ಪಿಡಿಯಬಹುದೆ ? ಈಗ ಯತಿಯ ನುಡಿದ ಜಿಹ್ವೆ ಪೋಗಿ ಪರಸ್ತ್ರೀಯರ ಅಧರಪಾನ ಮಾಡಬಹುದೆ ? ಮಹಾಮಂತ್ರವ ಕೇಳಿದ ಕರ್ಣ ಪೋಗಿ ಪರತಂತ್ರವ ಕೇಳಬಹುದೆ ? ಲಿಂಗಪೂಜಕರ ಅಂಗ ಪೋಗಿ ಪರರಂಗವನಪ್ಪಬಹುದೆ ? ಇವನು ಶೈವ ಭಕ್ತನಲ್ಲಾ ! ಶೈವನಾಗಲಿ ವೀರಶೈವನಾಗಲಿ ಏಕಲಿಂಗನಿಷ್ಠಾಪರನಾಗಿ, ಅಷ್ಟಮದಂಗಳೊಳ್ದಳಗೊಂಡು ಸಂಹರಿಸಿ, ಪಂಚಕ್ಲೇಶ ದುರಿತ ದುರ್ಗುಣಗಳ ಕಳೆದುಳಿದು, ಆರು ಚಕ್ರವ ಹತ್ತಿ ಮೀರಿದ ಸ್ಥಲದೊಳಗಿಪ್ಪ ಲಿಂಗಮಂ ಪೂಜಿಸಿ, ಮೋಕ್ಷಮಂ ಪಡೆದಡೆ, ವೀರಶೈವನೆಂದು ನಮೋ ಎಂಬುವೆನಯ್ಯಾ ಬರಿದೆ ವೀರಶೈವನೆಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ನೆನೆವ ಜಿಹ್ವೆ[ಗೆ] ಕಾಮನ ನೆನಸಿದೆ, ನೋಡುವ ಕಂಗಳಿಗೆ ಕಾಮನ ನೋಡಿಸಿದೆ, ಕೇಳುವ ಕರ್ಣಕ್ಕೆ ಕಾಮವನೆ ಕೇಳಿಸಿದೆ, ವಾಸಿಸುವ ನಾಸಿಕಕ್ಕೆ ಕಾಮವನೆ ವಾಸಿಸಿದೆ, ಮುಟ್ಟುವ ಹಸ್ತಕ್ಕೆ ಕಾಮವನೆ ಮುಟ್ಟಿಸಿದೆ. ಅದು ಎಂತೆಂದೊಡೆ : ನೆನೆವ ಜಿಹ್ವೆ ಪರಧನ ಪರಸ್ತ್ರೀಯರ ನೆನೆವುದು, ನೋಡುವ ಕಂಗಳು ಪರಧನ ಪರಸ್ತ್ರೀಯರನೆ ನೋಡುವವು, ಕೇಳುವ ಕರ್ಣ ಪರಧನ ಪರಸ್ತ್ರೀಯರ ಪರನಿಂದ್ಯವನೆ ಕೇಳುವವು, ವಾಸಿಸುವ ನಾಸಿಕ ಪರಧನ ಪರಸ್ತ್ರೀಯರ ವಾಸಿಸುವುದು, ಮುಟ್ಟುವ ಹಸ್ತ ಪರಧನ ಪರಸ್ತ್ರೀಯರನೆ ಮುಟ್ಟುವುದು. ಇಂತೀ ಪಂಚೇಂದ್ರಿಯಮುಖದಲ್ಲಿ ಕಾಮವೆ ಮುಖ್ಯವಾಗಿಪ್ಪುದಯ್ಯ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರದ ಸೀಮೆಗೆಳಸದ ನಿಸ್ಸೀಮ ಶರಣಂಗೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಸಾಲ ಮಾಡಲಿಲ್ಲ, ಕಡ ಕೊಡಲಿಲ್ಲ, ಊರನಾಶ್ರೈಸಲಿಲ್ಲ, ಕಾಂತಾರಕ್ಕೆ ಹೋಗಲಿಲ್ಲ. ನೆಲವಿಲ್ಲದ ಭೂಮಿಯಲ್ಲಿ ಬೀಜವಿಲ್ಲದೆ ಬಿತ್ತಲು, ಅದು ಅಂಕುರಿಸಿ ಎರಡಾಯಿತ್ತು, ಶಾಖೆ ಮೂರಾಯಿತ್ತು, ತಳಿರು ಆರಾಯಿತ್ತು, ಕುಸುಮ ಮೂವತ್ತಾರಾಯಿತ್ತು ಫಲ ಇನ್ನೂರಾ ಹದಿನಾರಾಯಿತ್ತು, ಹಣ್ಣು ವಿಶ್ವಪರಿಪೂರ್ಣವಾಯಿತ್ತು, ಆ ಹಣ್ಣನು ಕಣ್ಣಿಲ್ಲದೆ ನೋಡಿ, ಕಾಲಿಲ್ಲದೆ ನಡೆದು, ಕೈಯಿಲ್ಲದೆ ಪಿಡಿದು, ಬಾಯಿಲ್ಲದೆ ಪರಿಣಾಮಿಸಿ, ಜಿಹ್ವೆ ಇಲ್ಲದೆ ರುಚಿಸಿ ಸುಖಿಯಾಗಿರ್ದು ಸಂಸಾರವ ಮಾಡುತಿರ್ದ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಜಪಿಸಿರೊ ಜಪಿಸಿರೊ ಶ್ರೀ ಪಂಚಾಕ್ಷರಿಯ. ಜಪದಿಂದ ರುದ್ರನಪ್ಪುದು ತಪ್ಪದು ನೋಡಾ ! ಶ್ರೀ ಪಂಚಾಕ್ಷರಿಯನಿಂಬುಗೊಳದವನ ಅಂಗ ಹಾಳು. ಶ್ರೀ ಪಂಚಾಕ್ಷರಿಯ ನೆನೆಯದವ ಜಿಹ್ವೆ ಹೇಳು. ಶ್ರೀ ಪಂಚಾಕ್ಷರಿಯ ಕೇಳದವನ ಕರ್ಣ ಹಾಳು. ನಡೆವೆಡೆಯಲ್ಲಿ ನುಡಿವೆಡೆಯಲ್ಲಿ ಕೊಡುವೆಡೆಯಲ್ಲಿ ಕೊಂಬೆಡೆಯಲ್ಲಿ ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ಬಿಡದೆ ಪಂಚಾಕ್ಷರಿಯೆಂಬ ಮಂತ್ರವನೆ `ನಮಃ ಶಿವಾಯ' `ನಮಃ ಶಿವಾಯ' `ನಮಃ ಶಿವಾಯ'ಯೆಂದು ಜಪಿಸಿ, ಒಡಲ ದುಗುರ್ಣವ ಕೆಡಿಸಿ, ಮೃಡ ನಿಮ್ಮ ನೆನೆದು ನಾ ಬದುಕಿದೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನಷ್ಟು ... -->