ಅಥವಾ

ಒಟ್ಟು 426 ಕಡೆಗಳಲ್ಲಿ , 75 ವಚನಕಾರರು , 374 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

`ವಿಶಿಷ್ಟಂ ದೀಯತೇ ಜ್ಞಾನಂ ಕ್ಷೀಯತೇ ಪಾಪಸಂಚಯಃ| ಅನಯೋಃ ಶಾಸನೇ ಸಿದ್ಧಾ ದೀಕ್ಷಾ ಕ್ಷಪಣದಾನಯೋಃ'. ಆ ದೀಕ್ಷೆ ನಿರಾಧಾರದೀಕ್ಷೆಯೆಂದು ಸಾಧಾರ ದೀಕ್ಷೆಯೆಂದು ಎರಡು ಪ್ರಕಾರಮಪ್ಪುದು., ಅವರೊಳು ಶಿವನು ನಿರಧಿ ಕರಣನಾಗಿ ತೀವ್ರ ಶಕ್ತಿನಿಪಾತದಿಂದ ವಿಜ್ಞಾನಾಕಲರು ಪ್ರಳಯಾ ಕಲರುಗಳಿಗೆ ಮಾಡುವ ದೀಕ್ಷೆ ನಿರಾಧಾರದೀಕ್ಷೆ ಎನಿಸಿಕೊಂಬುದು. ಗುರುಮೂರ್ತಿಯನಾಶ್ರ ಯಿಸಿ ಮಂದಶಕ್ತಿನಿಪಾತ ದತ್ತಣಿಂ ಸಕಲರುಗಳಿಗೆ ಮಾಡೂದು ಸಾಧಾರದೀಕ್ಷೆ ಎನಿಸಿಕೊಂಬುದು. ಇಂತೆಂದು ಪಾರಮೇಶ್ವರ ತಂತ್ರಂ ಪೇಳೂದು, ಶಾಂತ ವೀರೇಶ್ವರಾ.
--------------
ಶಾಂತವೀರೇಶ್ವರ
ಬಯಲೆಂದಡೆ ಕೀಳು ಮೇಲಿನೊಳಗಾಯಿತ್ತು. ನಿರವಯವೆಂದಡೆ ಸಾವಯದಿಂದ ಕುರುಹುದೋರಿತ್ತು. ಸವಿದ ಸವಿಯನುಪಮಿಸಬಾರದೆಂದಡೆ ಜಿಹ್ವೆಯಿಂದ ಕುರುಹುಗೊಂಡಿತ್ತು. ಆ ಜಿಹ್ವೆ ಸಾಕಾರ, ಸವಿದ ಸವಿ ನಿರಾಕಾರವೆಂದಡೆ, ನಾನಾ ಭೇದಂಗಳಿಂದ ರುಚಿಮಯವಾಯಿತ್ತು. ಆ ಜಿಹ್ವೆಯ ಕೊನೆಯ ಮೊನೆಯಲ್ಲಿ ನಿಂದು, ಅಹುದಲ್ಲವೆಂಬುದ ತಾನೆ ಕುರುಹಿಟ್ಟುಕೊಂಡಂತೆ ಜಿಹ್ವೆ ಬಲ್ಲುದೆಂದಡೆ ತನ್ನಡಿಗೆ ಬಾರದುದನರಿಯಿತ್ತೆ ? ಸಾರ ಸ್ವಾದ ಲೇಸೆಂದಡೆ ಜಿಹ್ವೆ ಹೊರತೆಯಾಗಿ ಕುರುಹುಗೊಂಡಿತ್ತೆ ? ಇದು ಕ್ರೀ ಜ್ಞಾನ ಸಂಪುಟಸ್ಥಲ. ಈ ಉಭಯಸ್ಥಲ ಲೇಪವಾದ ಮತ್ತೆ ನಿರುತ ನಿರ್ಯಾಣವೆಂಬುದು ನನ್ನಲ್ಲಿಯೊ ? ನಿನ್ನಲ್ಲಿಯೊ ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ ಸದಾತ್ಮದಲ್ಲಿ ನಿನ್ನ ಕುರುಹೇಕೆ ಅಡಗದು ?
--------------
ಮೋಳಿಗೆ ಮಹಾದೇವಿ
ಜ್ಞಾನ ಸದ್ಭಕ್ತಿ ಸನ್ನಹಿತವಾಗಿ, ಲಿಂಗ ಮುಂತಾಗಿ ಮಾಡಿದ ಕ್ರೀ ಲಿಂಗಕ್ರೀ. ಧ್ಯಾನ ಪೂಜೆ ಭಕ್ತಿಯರ್ಪಿತ ಪ್ರಸಾದ ಮುಕ್ತಿ- ಇವೆಲ್ಲವು ತನ್ನೊಳಗೆ, ಅಜ್ಞಾನ ಅಭಕ್ತಿ ಮರವೆ ಮುಂತಾದ ಕ್ರೀ ಅಂಗಕ್ರೀ, ಅದು ಹೊರಗು. ಇದು ಕಾರಣ, ಜ್ಞಾನ ಸದ್ಭಕ್ತಿ ಸನ್ನಹಿತವಾದುದೆ ಮುಕ್ತಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಅರ್ಪಿತದಲ್ಲಿ ಅವಧಾನವರತು, ಅನರ್ಪಿತದಲ್ಲಿ (ಅರ್ಪಿತದಲ್ಲಿ?) ಸುಯಿಧಾನವರತು. ಬಂದುದು ಬಾರದುದೆಂದರಿಯದೆ, ನಿಂದ ನಿಲವಿನ ಪರಿಣಾಮತೆಯಾಯಿತ್ತು. ರುಚಿ ರೂಪಂ ನ ಚ ಜ್ಞಾನಂ ಅರ್ಪಿತಾನರ್ಪಿತಂ ತಥಾ ಆದೌ ಪ್ರವರ್ತತೇ ಯಸ್ಯ ಶಿವೇನ ಸಹಮೋದತೇ ಎಂಬುದಾಗಿ, ಕೂಡಲಚೆನ್ನಸಂಗಯ್ಯಾ. ನಿಮ್ಮವರು ಶಿವಸುಖಸಂಪನ್ನರಾದರಯ್ಯಾ.
--------------
ಚನ್ನಬಸವಣ್ಣ
ಮೂಗಿಲ್ಲದವಂಗೆ ಕನ್ನಡಿಯ ತೋರಲೇಕೆ ? ಕೈಯಿಲ್ಲದವಂಗೆ ಕುದುರೆಯನೇರಲೇಕೆ ? ಕಾಲಿಲ್ಲದವಂಗೆ ನಿಚ್ಚಣಿಗೆಯನೇರಲೇಕೆ ? ಭಕ್ತಿ ಜ್ಞಾನ ವೈರಾಗ್ಯವಿಲ್ಲದವಂಗೆ ಇಷ್ಟಲಿಂಗವೇಕೆ ಅಮುಗೇಶ್ವರಾ ?
--------------
ಅಮುಗೆ ರಾಯಮ್ಮ
ಅಯ್ಯ ಪಂಚತತ್ವಂಗಳ ಪಡೆವ ತತ್ವ ಪ್ರತ್ಯಕ್ಷವಾಗದ ಮುನ್ನ, ಪದ್ಮಜಾಂಡವ ಧರಿಸಿಪ್ಪ ಕಮಠ-ದಿಕ್ಕರಿಗಳಿಲ್ಲದ ಮುನ್ನ, ನಿರ್ಮಲಾಕಾಶವೇ ಸಾಕಾರವಾಗಿ ನಿರಂಜನವೆಂಬ ಪ್ರಣವವಾಯಿತ್ತಯ್ಯ ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ಹ್ರೂಂಕಾರ ಮಂಟಪದಲ್ಲಿ ಮೂರ್ತಿಗೊಂಡಿತಯ್ಯ. ಆ ನಿರಂಜನ ಪ್ರಣವವೆಂಬ ಮರುಜೇವಣಿಯ ಬೀಜ, ತನ್ನ ನಿರಂಜನ ಶಕ್ತಿಯ ನಸುನೆನಹಿಂದ ಹಂಕಾರ ಚಕ್ಷುವೆಂಬ ಕುಹರಿಯಲ್ಲಿ ಶುದ್ಧಪ್ರಸಾದವೆಂಬ ಮೊಳೆದೋರಿತ್ತಯ್ಯ. ಆ ಶುದ್ಧ ಪ್ರಸಾದವೆಂಬ ಮೊಳೆ ತನ್ನ ಶೂನ್ಯಶಕ್ತಿಯ ಸೆಜ್ಜೆಯಿಂದ ಕರ್ಣಿಕಾಪ್ರಕಾಶ ಪಂಚನಾದವನುಳ್ಳ ಷೋಡಶ ಕಲಾಪುಂಜರಂಜಿತವಪ್ಪ ಹನ್ನೊಂದನೂರುದಳದ ಪತ್ರದಲ್ಲಿ ಪ್ರಣವಚಿತ್ರವೊಪ್ಪಿತ್ತಿಪ್ಪ ಹ್ರೀಂಕಾರ ಸಿಂಹಾಸನದ ಮೇಲೆ ಸಿದ್ಧಪ್ರಸಾದವೆಂಬ ಎಳವೆರೆ ತಳಿರಾಯಿತ್ತಯ್ಯ. ಆ ಸಿದ್ಧಪ್ರಸಾದವೆಂಬ ಎಳವೆರೆ ತನ್ನ ಶಾಂತಶಕ್ತಿಯ ಚಲನೆಯಿಂದ ಮೂರುಬಟ್ಟೆಯ ಮೇಲಿಪ್ಪ ಎರಡುಮಂಟಪದ ಮಧ್ಯದಲ್ಲಿ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ಬೀಗಿ ಬೆಳೆಯಿತ್ತಯ್ಯ. ಆ ಪ್ರಸಿದ್ಧಪ್ರಸಾದವೆಂಬ ಮಹಾವೃಕ್ಷ ತನ್ನ ಚಿಚ್ಛಕ್ತಿಯ ಲೀಲಾವಿನೋದದಿಂದ ಪಂಚಶಕ್ತಿಗಳೆಂಬ ನಾಲ್ಕೊಂದು ಹೂವಾಯಿತು. ಆ ಹೂಗಳ ಮಹಾಕೂಟದಿಂದ ಪಂಚಲಿಂಗಗಳೆಂಬ ಪಂಚಪ್ರಕಾರದ ಮೂರೆರಡು ಹಣ್ಣಾಯಿತು. ಆ ಹಣ್ಣುಗಳ ಆದ್ಯಂತಮಂ ಪಿಡಿದು ಸದ್ಯೋನ್ಮುಕ್ತಿಯಾಗಬೇಕೆಂದು ಸದಾಕಾಲದಲ್ಲಿ ಬಯಸುತ್ತಿಪ್ಪ ಮಹಾಶಿವಶರಣನು ತಿಳಿದು ನೋಡಿ ಕಂಡು ಆರುನೆಲೆಯ ನಿಚ್ಚಣಿಗೆಯ ಆ ತರುಲತೆಗೆ ಸೇರಿಸಿ ಜ್ಞಾನ ಕ್ರೀಗಳೆಂಬ ದೃಢದಿಂದೇರಿ ನಾಲ್ಕೆಲೆಯ ಪೀತವರ್ಣದ ಹಣ್ಣ ಸುಚಿತ್ತವೆಂಬ ಹಸ್ತದಲ್ಲಿ ಪಿಡಿದು ಆರೆಲೆಯ ನೀಲವರ್ಣದ ಹಣ್ಣ ಸುಬುದ್ಧಿಯೆಂಬ ಹಸ್ತದಲ್ಲಿ ಪಿಡಿದು ಹತ್ತೆಲೆಯ ಸ್ಫಟಿಕವರ್ಣದ ಹಣ್ಣ ನಿರಹಂಕಾರವೆಂಬ ಹಸ್ತದಲ್ಲಿ ಪಿಡಿದು ಹನ್ನೆರೆಡೆಲೆಯ ಸುವರ್ಣವರ್ಣದ ಹಣ್ಣ ಸುಮನನೆಂಬ ಹಸ್ತದಲ್ಲಿ ಪಿಡಿದು ಹದಿನಾರೆಲೆಯ ಮಿಂಚುವರ್ಣದ ಹಣ್ಣ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಆಸನಸ್ಥಿರವಾಗಿ ಕಣ್ಮುಚ್ಚಿ ಜ್ಞಾನಚಕ್ಷುವಿನಿಂ ನಿಟ್ಟಿಸಿ ಕಟ್ಟಕ್ಕರಿಂ ನೋಡಿ ರೇಚಕ ಪೂರಕ ಕುಂಭಕಂಗೈದು ಪೆಣ್ದುಂಬಿಯ ನಾದ ವೀಣಾನಾದ ಘಂಟನಾದ ಭೇರೀನಾದ ಮೇಘನಾದ ಪ್ರಣವನಾದ ದಿವ್ಯನಾದ ಸಿಂಹನಾದಂಗಳಂ ಕೇಳಿ ಹರುಷಂಗೊಂಡು ಆ ಫಲಂಗಳಂ ಮನವೆಂಬ ಹಸ್ತದಿಂ ಮಡಿಲುದುಂಬಿ ಮಾಯಾಕೋಲಾಹಲನಾಗಿ ಪಂಚಭೂತಂಗಳ ಸಂಚವ ಕೆಡಿಸಿ ದಶವಾಯುಗಳ ಹೆಸಗೆಡಿಸಿ ಅಷ್ಟಮದಂಗಳ ಹಿಟ್ಟುಗುಟ್ಟಿ ಅಂತಃಕರಣಂಗಳ ಚಿಂತೆಗೊಳಗುಮಾಡಿ ಮೂಲಹಂಕಾರವ ಮುಂದುಗೆಡಿಸಿ ಸಪ್ತವ್ಯಸನಂಗಳ ತೊತ್ತಳದುಳಿದು ಜ್ಞಾನೇಂದ್ರಿಯಂಗಳ ನೆನಹುಗೆಡಿಸಿ ಕರ್ಮೇಂದ್ರಿಯಂಗಳ ಕಾಲಮುರಿದು ತನ್ಮಾತ್ರೆಯಂಗಳ ತೋಳಕೊಯ್ದು, ಅರಿಷಡ್ವರ್ಗಂಗಳ ಕೊರಳನರಿದು ಸ್ಫಟಿಕದ ಪುತ್ಥಳಿಯಂತೆ ನಿಜಸ್ವರೂಪಮಾಗಿ- ಎರಡೆಸಳ ಕಮಲಕರ್ಣಿಕಾಗ್ರದಲ್ಲಿಪ್ಪ ಪರಬ್ರಹ್ಮದ ಶ್ವೇತಮಾಣಿಕ್ಯವರ್ಣದ ದ್ವಿಪಾದಮಂ ಸುಜ್ಞಾನವೆಂಬ ಹಸ್ತದಲ್ಲಿ ಪಿಡಿದು ಓಂಕಾರವೆಂಬ ಮಂತ್ರದಿಂದ ಸಂತೈಸಿ ನೀರ ನೀರು ಕೂಡಿದಂತೆ ಪರಬ್ರಹ್ಮವನೊಡಗೂಡಿ ಆ ಪರಬ್ರಹ್ಮವೆ ತಾನೆಯಾಗಿ ಬ್ರಹ್ಮರಂಧ್ರವೆಂಬ ಶಾಂಭವಲೋಕದಲ್ಲಿಪ್ಪ ನಿಷ್ಕಲ ಪರಬ್ರಹ್ಮದ ನಿರಾಕಾರಪಾದಮಂ ನಿರ್ಭಾವವೆಂಬ ಹಸ್ತದಿಂ ಪಿಡಿದು ಪಂಚಪ್ರಸಾದವೆಂಬ ಮಂತ್ರದಿಂ ಸಂತೈಸಿ ಕ್ಷೀರಕ್ಷೀರವ ಕೂಡಿದಂತೆ ನಿಷ್ಕಲಬ್ರಹ್ಮವನೊಡಗೂಡಿ ಆ ನಿಷ್ಕಲಬ್ರಹ್ಮವೇ ತಾನೆಯಾಗಿ ಮೂರುಮಂಟಪದ ಮಧ್ಯದ ಕುಸುಮಪೀಠದಲ್ಲಿಪ್ಪ ಶೂನ್ಯಬ್ರಹ್ಮದ ಶೂನ್ಯಪಾದಮಂ ನಿಷ್ಕಲವೆಂಬ ಹಸ್ತದಿಂ ಪಿಡಿದು ಕ್ಷಕಾರವೆಂಬ ಮಂತ್ರದಿಂ ಸಂತೈಸಿ ಘೃತಘೃತವ ಕೂಡಿದಂತೆ ಶೂನ್ಯಬ್ರಹ್ಮವನೊಡಗೂಡಿ ಆ ಶೂನ್ಯಬ್ರಹ್ಮವೇ ತಾನೆಯಾಗಿ- `ನಿಶಬ್ದಂ ಬ್ರಹ್ಮ ಉಚ್ಯತೇ' ಎಂಬ ಒಂಬತ್ತು ನೆಲೆಯ ಮಂಟಪದೊಳಿಪ್ಪ ನಿರಂಜನಬ್ರಹ್ಮದ ನಿರಂಜನಪಾದಮಂ ಶೂನ್ಯವೆಂಬ ಹಸ್ತದಿಂ ಪಿಡಿದು ಹ್ರೂಂಕಾರವೆಂಬ ಮಂತ್ರದಿಂ ಸಂತೈಸಿ ಬಯಲ ಬಯಲು ಬೆರಸಿದಂತೆ ನಿರಂಜನಬ್ರಹ್ಮವೇ ತಾನೆಯಾಗಿ- ಮಹಾಗುರು ಸಿದ್ಧಲಿಂಗಪ್ರಭುವಿನ ಗರ್ಭಾಬ್ಧಿಯಲ್ಲಿ ಜನಿಸಿದ ಬಾಲಕಿಯಯ್ಯ ನಾನು. ಎನ್ನ ಹೃದಯಕಮಲೆಂಟು ಮಂಟಪದ ಚತುಷ್ಪಟ್ಟಿಕಾ ಮಧ್ಯದ ಪದ್ಮಪೀಠದಲ್ಲಿ ಎನ್ನ ತಂದೆ ಸುಸ್ಥಿರವಾಗಿ ಎನಗೆ ಷಟ್ಸ ್ಥಲಮಾರ್ಗ-ಪುರಾತರ ವಚನಾನುಭಾವ- ಭಕ್ತಿ ಜ್ಞಾನ ವೈರಾಗ್ಯವೆಂಬ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಿದನಯ್ಯ. ಆ ಜೇನುಸಕ್ಕರೆ ಪರಮಾಮೃತವ ತಣಿಯಲುಣಿಸಲೊಡನೆ ಎನ್ನ ಬಾಲತ್ವಂ ಕೆಟ್ಟು ಯೌವನಂ ಬಳೆದು ಬೆಡಗು ಕುಡಿವರಿದು ಮೀಟು ಜವ್ವನೆಯಾದೆನಯ್ಯ ನಾನು. ಎನಗೆ ನಿಜಮೋಕ್ಷವೆಂಬ ಮನ್ಮಥವಿಕಾರವು ಎನ್ನನಂಡಲೆದು ಆಳ್ದು ನಿಂದಲ್ಲಿ ನಿಲಲೀಸದಯ್ಯ. ಅನಂತಕೋಟಿ ಸೋಮಸೂರ್ಯ ಪ್ರಕಾಶವನುಳ್ಳ ಪರಂಜ್ಯೋತಿಲಿಂಗವೆ ಎನಗೆ ಶಿವಾನಂದ ಭಕ್ತಿಯೆಂಬ ತಾಲಿಬಂದಿಯ ಕಟ್ಟು ಸುಮಂತ್ರವಲ್ಲದೆ ಕುಮಂತ್ರವ ನುಡಿಯೆನೆಂಬ ಕಂಠಮಾಲೆಯಂ ಧರಿಸು. ಅರ್ಪಿತವಲ್ಲದೆ ಅನರ್ಪಿತವ ಪರಿಮಳಿಸೆನೆಂಬ ಮೌಕ್ತಿಕದ ಕಟ್ಟಾಣಿ ಮೂಗುತಿಯನಿಕ್ಕು. ಸುಶಬ್ಧವಲ್ಲದೆ ಅಪಶಬ್ದವ ಕೇಳೆನೆಂಬ ರತ್ನದ ಕರ್ಣಾಭರಣಂಗಳಂ ತೊಡಿಸು. ಶರಣತ್ವವನಲ್ಲದೆ ಜೀವತ್ವವನೊಲ್ಲೆನೆಂಬ ತ್ರಿಪುಂಡ್ರಮಂ ಧರಿಸು. ಕ್ರೀಯಲ್ಲದೆ ನಿಷ್ಕಿ ್ರೀಯ ಮಾಡೆನೆಂಬ ಮೌಕ್ತಿಕದ ಬಟ್ಟನಿಕ್ಕು. ನಿಮ್ಮವರಿಗಲ್ಲದೆ ಅನ್ಯರಿಗೆರಗೆನೆಂಬ ಕನಕಲತೆಯ ಬಾಸಿಂಗಮಂ ಕಟ್ಟು. ಸಮ್ಯಜ್ಞಾನವಲ್ಲದ ಅಜ್ಞಾನವ ಹೊದ್ದೆನೆಂಬ ನವ್ಯದುಕೂಲವನುಡಿಸು. ಲಿಂಗಾಣತಿಯಿಂದ ಬಂದುದನಲ್ಲದೆ ಅಂಗಗತಿಯಿಂದ ಬಂದುದಂ ಮುಟ್ಟೆನೆಂಬ ರತ್ನದ ಕಂಕಣವಂ ಕಟ್ಟು. ಶರಣಸಂಗವಲ್ಲದೆ ಪರಸಂಗಮಂ ಮಾಡೆನೆಂಬ ಪರಿಮಳವಂ ಲೇಪಿಸು. ಶಿವಪದವಲ್ಲದೆ ಚತುರ್ವಿಧಪದಂಗಳ ಬಯಸೆನೆಂಬ ಹಾಲು ತುಪ್ಪಮಂ ಕುಡಿಸು. ಪ್ರಸಾದವಲ್ಲದೆ ಬ್ಥಿನ್ನರುಚಿಯಂ ನೆನೆಯೆನೆಂಬ ತಾಂಬೂಲವನಿತ್ತು ಸಿಂಗರಂಗೆಯ್ಯ. ನಿನ್ನ ಕರುಣಪ್ರಸಾದವೆಂಬ ವಸವಂತ ಚಪ್ಪರದಲ್ಲಿ ಪ್ರಮಥಗಣಂಗಳ ಮಧ್ಯದಲ್ಲಿ ಎನ್ನ ಮದುವೆಯಾಗಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಅಂಗಕ್ಕಾಚಾರ ಮನಕ್ಕೆ ಜ್ಞಾನ ಸಮರಸಾದ್ವೈತವಾದ ಮತ್ತೆ ಪುನರಪಿ ಪುನರ್ದೀಕ್ಷೆಯುಂಟೆ ? ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು ? ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ ? ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ ಅಮುಗೇಶ್ವರಲಿಂಗದಲ್ಲಿ.
--------------
ಅಮುಗೆ ರಾಯಮ್ಮ
ಉಪಮೆ ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು. ಅರಿವು, ಅರಿವಿನ ಮರೆಯಲ್ಲಿರ್ದುದನರಿಯಲರಿಯದೆ, ಪರಾಪರವೆಂದು ನುಡಿಯುತ್ತಿದ್ದಿತ್ತು. ಧ್ಯಾನ ಧ್ಯಾನಿಸಲರಿಯದೆ, ಧ್ಯಾನರೂಪಾತೀತನೆಂದು, ತದ್ಧ್ಯಾನಗೊಂಡಿತ್ತು. ಜ್ಞಾತೃ ಜ್ಞಾನ ಜ್ಞೇಯಕ್ಕೆ ಇನ್ನಾವ ಜ್ಞಾನವೊ? ವೇದವಿಜ್ಞಾನವೆಂದುದಾಗಿ, `ತತ್ತ್ವಮಸಿ' ವಾಕ್ಯಂಗಳೆಲ್ಲವೂ ಹುಸಿಯಾಗಿ ಹೋದವು. ಸಚ್ಚಿದಾನಂದವೆಂದುದಾಗಿ ದ್ವೈತಾದ್ವೈತಿಗಳೆಲ್ಲ ಸಂಹಾರವಾಗಿ ಹೋದರು. ಬಂದೂ ಬಾರದ, ನಿಂದ ನಿರಾಳ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಶಿವತಂತ್ರದಿಂದ ಸುಖದುಃಖಗಳು ಬರುತಿಹವೆಂದರಿಯದೆ ನರಗುರಿಗಳಿಗೆ, ರೋಗ ದಾರಿದ್ರ್ಯ ಅಪಜಯಂಗಳು ಬರುತ್ತಿರಲು ವಿಪ್ರಗೆ ಕೈಮುಗಿದು ಕಾಣಿಕೆಯನಿಕ್ಕಿ ತನ್ನ ಹೆಸರ ಹೇಳಿ ಸೂರ್ಯಬಲ ಚಂದ್ರಬಲ ಬೃಹಸ್ಪತಿಬಲ ನವಗ್ರಹಬಲವ ಕೇಳುವವರಿಗೆ ಎಲ್ಲಿಯದೋ ಶಿವಭಕ್ತಿ ? ಸೂರ್ಯನು ಜ್ಞಾನವುಳ್ಳ್ಳವನಾದಡೆ ಗೌತಮಮುನೀಶ್ವರನ ಹೆಂಡತಿ ಅಹಲ್ಯಾದೇವಿಗೆ ಮೋಹಿಸಿ ಮುನಿಯ ಶಾಪದಿಂದ ಕುಷ್ಟದೊಳಗಿಹನೆ ? ಳ ಅಲ್ಲದೆ ದಕ್ಷನ ಯಾಗದಲ್ಲಿ ಹಲ್ಲ ಹೋಗಲಾಡಿಸಿಕೊಂಬನೆ ? ಚಂದ್ರನು ಜ್ಞಾನವುಳ್ಳವನಾದಡೆ ಗುರುವಿನ ಹೆಂಡತಿಗೆ ಅಳುಪಿ ಕೊಂಡೊಯ್ದು ಜಾತಜ್ವರದಲ್ಲಿ ಅಳಲುತಿಹನೆ ? ಬೃಹಸ್ಪತಿ ಜ್ಞಾನವುಳ್ಳವನಾದಡೆ ಸಕಲ ಜ್ಯೋತಿಷ್ಯಗಳ ನೋಡಿ ವಿವಾಹವಾದ ಹೆಂಡತಿ ರೋಹಿಣೀದೇವಿಯ ಚಂದ್ರನೆತ್ತಿಕೊಂಡು ಹೋಹಾಗ ಸುಮ್ಮನಿದ್ದುದು ಏನು ಜ್ಞಾನ ? ಶನಿ ಜ್ಞಾನವಳ್ಳವನಾದಡೆ ಕುಂಟನಾಗಿ ಸಂಕೋಲೆ ಬೀಳ್ವನೆ ? ಅದು ಕಾರಣ_ ತಮಗೆ ಮುಂಬಹ ಸುಖದುಃಖಂಗಳನರಿಯದವರು ಮತ್ತೊಬ್ಬರ ಸುಖದುಃಖಂಗಳ ಮೊದಲೆ ಅರಿಯರು. ಬೃಹಸ್ಪತಿಯ ಮತದಿಂದೆ ದಕ್ಷ, ಯಾಗವನಿಕ್ಕೆ ಕುರಿದಲೆಯಾಯಿತ್ತು. ಬೃಹಸ್ಪತಿಯ ಮತದಿಂದೆ ದ್ವಾರಾವತ ನೀರಲ್ಲಿ ನೆರೆದು ಕೃಷ್ಣನ ಹದಿನಾರುಸಾವಿರ ಸ್ತ್ರೀಯರ ಹೊಲೆಬೇಡರು ಸೆರೆಯನೊಯ್ದರು, ಶ್ರೀರಾಮನ ಹೆಂಡತಿ ಸೀತಾಂಗನೆ ಸೆರೆಯಾದಳು. ಇಂತೀ ತಮತಮಗೆ ಮುಂದೆ ಬಹ ಅಪಜಯಂಗಳನರಿಯದ ಕಾರಣ, ಆ ಬೃಹಸ್ಪತಿ ಜ್ಞಾನಿಯ ಮತದಿಂದೆ, ಅಭಾಷ ಜೋಯಿಸರ ಮಾತ ಕೇಳಿ ಹುಣ್ಣಿಮೆ ಅಮವಾಸೆಯಲ್ಲಿ ಉಪವಾಸವಿದ್ದು, ಗ್ರಹಬಲವುಳ್ಳ ಶುಭಮುಹೂರ್ತದಲ್ಲಿ, ಅರಳಿಯ ಮರಕ್ಕೆ ನೀರ ಹೊಯ್ದು ನೂಲ ಸುತ್ತಿ ವಿಪ್ರಜೋಯಿಸರ್ಗೆ ಹೊನ್ನು ಹಣವ ಕೊಟ್ಟಡೆ, ಹೋದೀತೆಂಬ ಅನಾಚಾರಿಯ ಮಾತ ಕೇಳಲಾಗದು. `ವಸಿಷ್ಠೇನ ಕೃತೇ ಲಗ್ನೇ ವನೇ ರಾಮೇಣ ವಾಸಿತೇ ಕರ್ಮಮೂಲೇ ಪ್ರಧಾನೇ ತು ಕಿಂ ಕರೋತಿ ಶುಭಗ್ರಹಃ ' ಇಂತೆಂದುದಾಗಿ ಬಹ ಕಂಟಕವ ಹೊನ್ನು ಹೆಣ್ಣು ಶುಭ ಲಗ್ನದಿಂದೆ ಪರಿಹರಿಸೇನೆಂದಡೆ ಹೋಗಲರಿಯದು. ಹಸಿವಿಲ್ಲದ ಮದ್ದು ಕೊಟ್ಟೇನು, ಅಶನವ ನೀಡೆಂಬಂತೆ, ಖೇಚರದ ಮದ್ದು ಕೊಟ್ಟೇನು ತೊರೆಯ ದಾಂಟಿಸೆಂಬಂತೆ, ಕುರುಡನ ಕೈಯ ಕುರುಡ ಹಿಡಿದು ಹಾದಿಯ ತೋರುವಂತೆ, ಲಜ್ಜೆ ನಾಚಿಕೆ ಇಲ್ಲದೆ ವಿಪ್ರರ ಕೈಯೆ ಲಗ್ನವ ಕೇಳಲಾಗದು. ಸದ್ಭಕ್ತರಾದವರಿಗೆ ನಿಮ್ಮ ಬಲವೇ ಬಲವಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಘನದ ವೇದಿಸಿದ ಮನ, ಮನವ ವೇದಿಸಿದ ಇಂದ್ರಿಯಂಗಳು, ಇಂದ್ರಿಯಂಗಳ ವೇದಿಸಿದ ತನು, ತನುವ ವೇದಿಸಿದ ಪ್ರಸಾದ, ಪ್ರಸಾದವ ವೇದಿಸಿದ ಪರಿಣಾಮ, ಪರಿಣಾಮವ ವೇದಿಸಿದ ತೃಪ್ತಿ, ತೃಪ್ತಿಯ ವೇದಿಸಿದ ಇಷ್ಟಲಿಂಗ, ಇಷ್ಟಲಿಂಗವ ವೇದಿಸಿದ ಜ್ಞಾನ, ಜ್ಞಾನವ ವೇದಿಸಿದ ನಿರ್ಮಲ ಶಿವಕ್ರಿಯೆ, ನಿರ್ಮಲ ಶಿವಕ್ರಿಯೆ[ಯ] ವೇದಿಸಿದ ಶರಣಂಗೆ ಇನ್ನು ವೇದ್ಯರುಂಟೆ, ಮಹಾಲಿಂಗ ಕಲ್ಲೇಶ್ವರಾ ?
--------------
ಹಾವಿನಹಾಳ ಕಲ್ಲಯ್ಯ
ತನು ತನ್ನದಾದಡೆ, ದಾಸೋಹಕ್ಕೆ ಕೊರತೆಯಿಲ್ಲ, ದಾಸೋಹ ಸಂಪೂರ್ಣ, ದಾಸೋಹವೇ ಮುಕ್ತಿ. ಮನ ತನ್ನದಾದಡೆ, ಜ್ಞಾನಕ್ಕೆ ಕೊರತೆಯಿಲ್ಲ ಜ್ಞಾನ ಸಂಪೂರ್ಣ, ಆ ಜ್ಞಾನವೇ ಮುಕ್ತಿ. ಧನ ತನ್ನದಾದಡೆ, ಭಕ್ತಿಗೆ ಕೊರತೆಯಿಲ್ಲ. ಭಕ್ತಿ ಸಂಪೂರ್ಣ, ಭಕ್ತಿಯಲ್ಲಿ ಮುಕ್ತಿ. ತನುಮನಧನವೊಂದಾಗಿ ತನ್ನದಾದಡೆ ಗುರುಲಿಂಗಜಂಗಮವೊಂದೆಯಾಗಿ ತಾನಿಪ್ಪನು ಬೇರೆ ಮುಕ್ತಿ ಎಂತಪ್ಪುದಯ್ಯಾ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಭಕ್ತ ಭೂಮಿಯಾಗಿ, ಜಂಗಮ ಬೀಜವಾಗಿ, ಆ ಜಂಗಮದರಿವು ಅಪ್ಪುವಾಗಿ, ಆ ಸುಭೂಮಿಯ ಬೀಜದ ಮೇಲೆ ಸುರಿಯೆ, ಆ ಭೂಮಿ ಶೈತ್ಯವಾಗಿ, ಆ ಬೀಜದ ಒಳಗು ಒಡೆದು ಅಂಕುರ ತಲೆದೋರಿ, ಭಕ್ತಿ ಜ್ಞಾನ ವೈರಾಗ್ಯವೆಂಬ ಮರ ಶಾಖೆ ಫಲ ಬಲಿದು ತುರೀಯ ನಿಂದು ಹಣ್ಣಾಯಿತ್ತು. ಆ ಹಣ್ಣ ಮೇಲಣ ಜಡವ ಕಳೆದು ಒಳಗಳ ಬಿತ್ತ ಮುಂದಕ್ಕೆ ಹುಟ್ಟದಂತೆ ಹಾಕಿ ಉಭಯದ ಮಧ್ಯದಲ್ಲಿ ನಿಂದ ಸವಿಸಾರವ ಸದಾಶಿವಮೂರ್ತಿಲಿಂಗಕ್ಕೆ ಅರ್ಪಿತವ ಮಾಡು.
--------------
ಅರಿವಿನ ಮಾರಿತಂದೆ
ಜ್ಞಾನ ಜ್ಞಾನವೆಂದು ಕೇಳಿದೆವಯ್ಯಾ ಗುರುಹಿರಿಯರಿಂದ. ಕೇಳಿದಲ್ಲಿ ಅಂಗವಾಲಿಲ್ಲ, ಕೇಳದೆ ಬಿಟ್ಟ್ಲಲ್ಲಿ ಅಂಗವಾಯಿತ್ತು. ಇದೇನು ಕೌತುಕ ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ
ಆದಿ ಅನಾದಿಯಿಂದತ್ತತ್ತ ಮೀರಿ ತೋರುವ ಪರಾತ್ಪರವಸ್ತುವೆ ತನ್ನ ಚಿದ್ವಿಲಾಸದಿಂದ ತಾನೆ ಜಗತ್ಪಾವನಮೂರ್ತಿಯಾಗಿ, ತನ್ನಂತರಂಗ ಬಹಿರಂಗದಲ್ಲಿ ಭಕ್ತಿ ಜ್ಞಾನ ವೈರಾಗ್ಯ ಪಟ್ಸ್ಥಲಮಾರ್ಗವಿಡಿದು ಭಕ್ತಿಪ್ರಿಯರಾಗಿ, ತಮ್ಮಂತರಂಗದೊಳಗೆ ಷಡ್ವಿಧಸಕೀಲ ಛತ್ತೀಸಸಕೀಲ ನಾಲ್ವತ್ತೆಂಟುಸಕೀಲ ಐವತ್ತಾರುಸಕೀಲ ಅರುವತ್ತಾರುಸಕೀಲ ತೊಂಬತ್ತಾರುಸಕೀಲ ನೂರೆಂಟುಸಕೀಲ ಇನ್ನೂರ ಹದಿನಾರುಸಕೀಲ ಮೊದಲಾದ ಸಮಸ್ತಸಕೀಲಂಗಳನೊಳಕೊಂಡು, ಬೆಳಗುವ ಗುರು ಲಿಂಗ ಜಂಗಮವ ಕಂಗಳು ತುಂಬಿ, ಮನ ತುಂಬಿ ಭಾವ ತುಂಬಿ ಕರಣಂಗಳು ತುಂಬಿ, ತನು ತುಂಬಿ ಪ್ರಾಣ ತುಂಬಿ ಸರ್ವಾಂಗ ತುಂಬಿ, ಅರ್ಚಿಸಲರಿಯದೆ, ಹಲವನರಸಿ, ತೊಳಲುವ ಮೂಳರ ಕಂಡು ಬೆರಗಾದೆ ನೋಡಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಎನ್ನ ಗರ್ವ ಅಹಂಕಾರವ ಕೆಡಿಸಯ್ಯ ಎನ್ನ ಮನ ಪ್ರಾಣಂಗಳ ಸುತ್ತಿದ ಆಶಾಪಾಶದ ತೊಡರ ಗಂಟ ಬಿಡಿಸಯ್ಯ. ಎನ್ನ ಸತ್ಯ ಸದಾಚಾರದಲ್ಲಿ ನಡೆಸಯ್ಯ. ಎನ್ನ ಪರಮಶಿವಾನುಭಾವವ ನುಡಿಸಯ್ಯ. ಎನಗೆ ಭಕ್ತಿ ಜ್ಞಾನ ವೈರಾಗ್ಯವೆಂಬ ಭೂಷಣವ ತೊಡಿಸಿ ನಿಮ್ಮ ಕರುಣದ ಕಂದನೆಂದು ಸಲುಹಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->