ಅಥವಾ

ಒಟ್ಟು 127 ಕಡೆಗಳಲ್ಲಿ , 43 ವಚನಕಾರರು , 111 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾತಾಳದಗ್ವಣಿಯ ನೇಣಿಲ್ಲದೆ ತೆಗೆಯಬಹುದೆ, ಸೋಪಾನದ ಬಲದಿಂದಲ್ಲದೆ ? ಶಬ್ದಸೋಪಾನವ ಕಟ್ಟಿ ನಡೆಯಿಸಿದರು ಪುರಾತರು, ದೇವಲೋಕಕ್ಕೆ ಬಟ್ಟೆ ಕಾಣಿರೋ. ಮತ್ರ್ಯರ ಮನದ ಮೈಲಿಗೆಯ ಕಳೆಯಲೆಂದು ಗೀತಮಾತೆಂಬ ಜ್ಯೋತಿಯ ಬೆಳಗಿ ಕೊಟ್ಟರು, ಕೂಡಲಚೆನ್ನಸಂಗನ ಶರಣರು.
--------------
ಚನ್ನಬಸವಣ್ಣ
ಮರವೆಯ ತಮವ ಕಳೆಯಯ್ಯ. ಅರುಹಿನ ಜ್ಯೋತಿಯ ಬೆಳಗಯ್ಯ. ಅರುಹಿನ ಜ್ಯೋತಿಯ ಬೆಳಗಿ, ನಿಮ್ಮ ಕುರುಹ ಕಂಡು ಕೂಡುವ ತುರ್ಯಾವಸ್ಥೆಯ ಸುಖವನೆ ಕೊಡು ಕಂಡ ಮಹಾಲಿಂಗ ತಂದೆ. ಕೊಡದಿರ್ದಡೆ ನಿನಗೆ ಪ್ರಮಥರಾಣೆ, ಬಸವಣ್ಣನಾಣೆ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸೊಡರ ಹಿಡಿದು ಕುಣಿಯಲ್ಲಿ ಬೀಳುವವರ ಕಂಡು, ವಿದ್ಥಿಯ ಕೈಯಲ್ಲು ನಿಸ್ತರಿಸಲಾರೆನಯ್ಯಾ ನಾನು. ಅಹಂಗಾದೆನಲ್ಲಾ ಎಂಬ ಚಿಂತೆಯ ನಿಸ್ತರಿಸಲಾರೆನಯ್ಯಾ. ವೇದವೆಂಬ ಮಹಾಜ್ಯೋತಿಯ ಹಿಡಿದು ಶಿವಪಥದಲ್ಲಿ ನಡೆಯಲರಿಯದೆ ಪಾಪದ ಕುಣಿಯಲ್ಲಿ ಬೀಳುವವರ ಕಂಡು ನಗೆಯಾದುದಯ್ಯಾ. ಗುರೂಪದೇಶವೆಂಬ ಜ್ಯೋತಿಯ ಹಿಡಿದು, ಶಿವಪಥದಲ್ಲಿ ನಡೆದು ಪ್ರಸಾದವೆಂಬ ನಿಧಾನವ ಕಂಡುಕೊಂಡು ಉಂಡು ಪರಿಣಾಮಿಸಿ ಬದುಕಿದೆನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಮನದ ಕತ್ತಲೆಯೊಳಗಣ ಜ್ಯೋತಿಯ ಕೊನೆಯ[ಮೊನೆಯ]ಮೇಲೆ ಘನವನರಿದೆವೆಂಬರ ಅನುಮಾನಕ್ಕೆ ದೂರ. ತಮತಮಗೆ ಅರಿದೆವೆಂಬರು,_ಕನಸಿನಲಿಂಗ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತಮದ ಗುರಿಯ ಜ್ಯೋತಿಯ ಕುಡಿವೆಳಗಿನ ಸರದಲ್ಲಿಎಸಲಿಕ್ಕಾಗಿ, ಗುರಿಯಲ್ಲಿಯೆ ಸರ ಪರಿಹರಿಸಿ, ಆ ಸರದಲ್ಲಿಯೇ ತಮ ಪರಿಹರಿಸಿತ್ತು. ಲಕ್ಷ ್ಯದಲ್ಲಿಯೆ ಚಿತ್ತ, ಚಿತ್ತದಲ್ಲಿಯೆ ಲಕ್ಷ ್ಯ ಅಲಕ್ಷ ್ಯವಾಯಿತ್ತು. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ
ಕ್ಷುತ್ಪಿಪಾಸೆ ಶೋಕ ಮೋಹ ಜನನ ಮರಣ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಂ ಬಿಟ್ಟು ಅಷ್ಟವಿಧಾರ್ಚನೆ, ಷೋಡಶೋಪಚಾರವಿಲ್ಲದಿರುವ ಕ್ಷೀರದೊಳಗಣ ಘೃತದಂತೆ, ತಿಲದೊಳಗಣ ತೈಲದಂತೆ, ಪುಷ್ಪದೊಳಗಣ ಪರಿಮಳದಂತೆ, ಉಪ್ಪು ಉದಕವ ಕೂಡಿದಂತೆ, ವಾರಿಕಲ್ಲು ವಾರಿಯ ಕೂಡಿದಂತೆ, ಕರ್ಪುರವು ಜ್ಯೋತಿಯ ಕೂಡಿದಂತೆ, ಮನ ಲಿಂಗದಲ್ಲಿ ಲೀಯವಾಗಿಹುದೀಗ ಐಕ್ಯಸ್ಥಲ ನೋಡಾ, ಇದಕ್ಕೆ ಈಶ್ವರ್ದೋವಾಚ : ``ಷಡೂರ್ಮಯಶ್ಚ ಷಡ್ವರ್ಗೋ ನಾಸ್ತಿ ಅಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಯೋಗವತ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮಣ್ಣ ಕೊಟ್ಟು ಪುಣ್ಯವ ಪಡೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. ಮಣ್ಣಿನ ಪುಣ್ಯ ಮುಕ್ಕಣ್ಣನ ಮುಖಕ್ಕೆ ಬಂತ್ತು. ನೀರನೆರೆದು ಪುಣ್ಯವ ಪಡೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. ನೀರಿನ ಪುಣ್ಯ ನಿರಂಜನನ ಮುಖಕ್ಕೆ ನಿಮಿರಿತ್ತು. ಜ್ಯೋತಿಯ ಬೆಳಗಿ ಪಾಪವ ಕಳೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. [ಜೋತಿಯ ಪುಣ್ಯ.... ದೀಪದ.... ಮುಖಕ್ಕೆ ಹೊಯಿತ್ತು.] [ಚಾಮರವ ಬೀಸಿ ಪಾಪವ ಕಳೆವೆನೆಂಬವನ ಭಾಷೆ ಹೊಲ್ಲ ಹೊಲ್ಲ.] ಚಾಮರದ ಪುಣ್ಯ ಚಾಮರಾದ್ಥೀಶನ ಮುಖಕ್ಕೆ ಅಮರಗೊಂಡಿತ್ತು. ದೇವಾಲಯವ ಕಟ್ಟಿ ದೇವತ್ವವ ಪಡೆವೆನೆಂಬವನ ಭಾಷೆ ಹೊಲ್ಲ ಹೊಲ್ಲ. ದೇವಾಲಯದ ಪುಣ್ಯ ಅಧೋಮುಖಂಗೆ ಸೇರಿತ್ತು. ಕೊಟ್ಟ ಭಕ್ತನಾರನೂ ಕಾಣೆ, ಕೈಕೊಂಡ ಜಂಗಮನಾದರೂ ಕಾಣೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಗ್ನಿಯ ಸಂಗದಿಂದೆ ಕಾನನ ಕೆಟ್ಟಂತೆ, ಜ್ಯೋತಿಯ ಸಂಗದಿಂದ ಕತ್ತಲೆ ಕೆಟ್ಟಂತೆ, ಪರುಷದ ಸಂಗದಿಂದ ಕಬ್ಬಿಣ ಕೆಟ್ಟಂತೆ, ಲಿಂಗಾನುಭಾವಿಗಳ ಸಂಗದಿಂದೆ ಎನ್ನ ಹುಟ್ಟು ಹೊಂದುಗಳು ನಷ್ಟವಾಗಿ ಕೆಟ್ಟುಹೋದುವು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕತ್ತಲೆ ಮನೆಯೊಳಗೆ ಜ್ಯೋತಿಯ ಮುಟ್ಟಿಸಿದರೆ ಕತ್ತಲೆ ಹರಿದು ಬೆಳಗಾಯಿತ್ತು ನೋಡಾ. ಸುಜ್ಞಾನದಿಂದ ಅಜ್ಞಾನವಳಿದು ಅತ್ತತ್ತಲೆ ನಿರಂಜನಲಿಂಗದೊಳು ನಿರ್ವಿಕಾರನಾಗಿರ್ದನಯ್ಯ ನಿಮ್ಮ ಶರಣನು ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪಶ್ಚಿಮಪದ್ಮಾಸನದಲ್ಲಿ ಕುಳ್ಳಿರ್ದು, ನಿಟ್ಟೆಲುವ ನೆಟ್ಟನೆ ಮಾಡಿ, ಅಧೋಮುಖ ಕಮಲವ ಬಲಿದು, ಊಧ್ರ್ವಮುಖವ ಮಾಡಿ, ಇಂದ್ರಿಯಂಗಳನು ಏಕಮುಖವ ಮಾಡಿ, ಚಂದ್ರ ಸೂರ್ಯರನೊಂದಠಾವಿನಲ್ಲಿರಿಸಿ ಅತ್ತಿತ್ತ ಮಿಸುಕದೆ ನಡುಗೀರ ಜ್ಯೋತಿಯ ದೃಢವಾಗಿ ಹಿಡಿದು, ಪರಮಾನಂದದ ವಠದೊಳಗೆ, ಪ್ರಾಣಲಿಂಗಾರ್ಚನೆಯ ಮಾಡುವ ಮಹಾಮಹಿಮರ ತೋರಿ ಬದುಕಿಸಾ, ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಜ್ಯೋತಿಯ ತಮವೆಡೆಗೊಡಂತೆ ಚಂದ್ರಮನ ರಾಹುಎಡೆಗೊಂಡಂತೆ ನಿಧಾನವ ಸರ್ಪನೆಡೆಗೊಂಡಂತೆ ಅಂಬುದ್ಥಿಯ ಅನಲನೆಡೆಗೊಂಡಂತೆ ಮನವ ಮಾಯವಡೆಗೊಂಡು ನಿಮ್ಮ ನೆನಹ ನೆಲೆಗೊಳಲೀಯದೆ ಮರಣಕ್ಕೊಳಗುಮಾಡುತ್ತಿಪ್ಪುದಯ್ಯ. ಈ ತಮವ ಪರಿಹರಿಸಿ ಎನ್ನನುಳುಹಿಕೊಳ್ಳಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ ? ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ ? ನಾನರಿದೆನೆಂಬಾತ ಇದಿರ ಕೇಳಲುಂಟೆ ? ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು ಮಾತಿನ ಮಾತಿನೊಳಗೆ ಅರಿವೆಂಬುದುಂಟೆ ? ಸೂತಕ ಹಿಂಗದೆ ಸಂದೇಹವಳಿಯದೆ, ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ? ಜ್ಯೋತಿಯ ಬಸಿರೊಳಗೆ ಜನಿಸಿದ ಕಾಂತಿಯೂಥ(ಯುತ?) ಬೆಳಗು ಗುಹೇಶ್ವರಾ ನಿಮ್ಮ ಶರಣ !
--------------
ಅಲ್ಲಮಪ್ರಭುದೇವರು
ಅಯ್ಯಾ, ನಿಮ್ಮಾದ್ಯರ ವಚನವ ಕೇಳಿ, ಎನ್ನ ಅಂಗಭಂಗ ಹಿಂಗಿದವಯ್ಯಾ. ಅಯ್ಯಾ, ನಿಮ್ಮಾದ್ಯರ ವಚನ ಕೇಳಿ, ಪ್ರಸಾದದ ಪರುಷವ ಕಂಡೆನಯ್ಯಾ. ಆ ಪರುಷದ ಮೇಲೆ ಮೂರುಜ್ಯೋತಿಯ ಕಂಡೆನಯ್ಯಾ. ಒಂದು ಜ್ಯೋತಿ ಕೆಂಪು ವರ್ಣ, ಒಂದು ಜ್ಯೋತಿ ಹಳದಿ ವರ್ಣ, ಒಂದು ಜ್ಯೋತಿ ಬಿಳಿಯ ವರ್ಣ. ಈ ಮೂರು ಜ್ಯೋತಿಯ ಬೆಳಗಿನಲ್ಲಿ, ಒಂಬತ್ತು ರತ್ನವ ಕಂಡೆನಯ್ಯಾ. ಆ ಒಂಬತ್ತು ರತ್ನದ ಮೇಲೊಂದು ವಜ್ರವ ಕಂಡೆನಯ್ಯಾ. ಆ ವಜ್ರದ ಮೇಲೊಂದು ಅಮೃತದ ಕೊಡನ ಕಂಡೆನಯ್ಯಾ. ಆ ಕೊಡನ ಕಂಡವನೆ ಉಂಡ, ಉಂಡವನೆ ಉರಿದ, ಉರಿದವನೆ ಕರಿದ, ಕರಿದವನೆ ನೆರೆದ, ನೆರೆದವನೆ ಕುರುಹನರಿದಾತ, ನಿಮ್ಮನರಿದಾತ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ದೃಷ್ಟದ ಜ್ಯೋತಿಯ ನಂದಿಸಬೇಕಲ್ಲದೆ ಪರಂಜ್ಯೋತಿಯ ಬಂದ್ಥಿಸಿ ನಂದಿಸಿ ಕೆಡಿಸಿಹೆನೆಂದಡೆ ಕೆಟ್ಟುದುಂಟೆ ಆ ಬೆಳಗು? ಈ ಗುಣ ಇಷ್ಟಲಿಂಗವನರಿವುದಕ್ಕೆ ದೃಷ್ಟ ಮನ ಇಷ್ಟದಲ್ಲಿ ವಿಶ್ರಮಿಸಿದ ಲಕ್ಷ ್ಯ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 50 ||
--------------
ದಾಸೋಹದ ಸಂಗಣ್ಣ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಇನ್ನಷ್ಟು ... -->