ಅಥವಾ

ಒಟ್ಟು 188 ಕಡೆಗಳಲ್ಲಿ , 64 ವಚನಕಾರರು , 149 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪ ೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 81 ||
--------------
ದಾಸೋಹದ ಸಂಗಣ್ಣ
ಹುಸಿಯ ನುಡಿಯನು ಭಕ್ತ, ವ್ಯಸನಕ್ಕೆಳಸನು ಭಕ್ತ, ವಿಷಯಂಗಳಾತಂಗೆ ತೃಣವು ನೋಡಾ, ಬಯಸುವವನಲ್ಲ ಭಕ್ತ. ದಯೆಯೆಂಬುದು ತನ್ನ ಕೈಯಲ್ಲಿ, ಸ್ಮರಣೆಯೆಂಬುದು ತನಗೆ ತೊತ್ತಾಗಿಪ್ಪುದು. ಕೋಪವೆಂಥದೆಂದರಿಯ, ತಾಪತ್ರಯಂಗಳು ಮುಟ್ಟಲಮ್ಮವು, ವ್ಯಾಪ್ತಿಗಳಡಗಿದವು. ಲಿಂಗವನೊಳಕೊಂಡ ಪರಿಣಾಮಿ. ಆತನ ಪಥ ಲೋಕಕ್ಕೆ ಹೊಸತು, ಲೋಕದ ಪಥವಾತನಿಗೆ ಹೊಸತು. ತನಗೊಮ್ಮೆಯು ಲಿಂಗಧ್ಯಾನ, ಲಿಂಗಕೊಮ್ಮೆಯು ತನ್ನ ಧ್ಯಾನ. ಘನಘನಮಹಿಮೆಯ ಹೊಗಳಲೆನ್ನಳವಲ್ಲ. ಪನ್ನಗಧರ ಕೇಳಯ್ಯಾ, ಚೆನ್ನ ಹಂಪೆಯ ವಿರುಪಯ್ಯಾ, ನಿಮ್ಮ ನಂಬಿದ ಸತ್ಯಶರಣ ಪರಿಣಾಮಿ.
--------------
ಅಗ್ಘವಣಿ ಹಂಪಯ್ಯ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಮಹಾಬೆಳಗಿನ ಲಿಂಗವ ಕೈಯಲ್ಲಿ ಕೊಟ್ಟಡೆ, ಕೊರಳಲ್ಲಿ ಕಟ್ಟಿಕೊಳ್ಳಲೇಕೆ ? ನೋಡುವ ಕಣ್ಣು ಮುಚ್ಚಿದ ಮತ್ತೆ, ತನಗೆ ಎಡೆಯಾಟವುಂಟೆ ? ಲಿಂಗವ ಹಿಂಗದೆ ಅಂಗೈಯಲ್ಲಿ ಕೊಟ್ಟ ಮತ್ತೆ, ಚಿತ್ತದಲ್ಲಿ ಹಿಂಗದಿರಬೇಕು. ಉರಿಲಿಂಗತಂದೆಯ ಸಿರಿಯ ಭಾಷೆ.
--------------
ಉರಿಲಿಂಗದೇವ
ಕ್ಲುಪ್ತವ ಮಾಡಿ ತನಗೆ ಬೇಕೆನ್ನ ಪ್ರಸಾದಿ ಬಸವಣ್ಣ. ಬಂದುದನತಿಗಳೆದು `ಅಲ್ಲ ಒಲ್ಲೆ' ಎನ್ನ ಪ್ರಸಾದಿ ಬಸವಣ್ಣ. ತಾನೆಂಬ ರೂಪ ಅಯ್ಯನೆಂಬ ರೂಪಿನಲ್ಲಿ ಲೋಪಮಾಡಿದ ಪ್ರಸನ್ನ ಪ್ರಸಾದಿ ಕಾಣಾ, ಬಸವಣ್ಣ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ರವಿ ಶಶಿಗಳಿಲ್ಲದಂದು, ಕತ್ತಲೆ ಕಾಳಾಂಧಗಳಿಲ್ಲದಂದು, ಜ್ಞಾನ ಮಹಾಜ್ಞಾನಂಗಳು ಇಲ್ಲದಂದು, ಅತ್ತತ್ತಲೆ ತಾನೆ ತಂದೆಯಾಗಿದ್ದೆಯಯ್ಯ. ತನಗೆ ಮಕ್ಕಳು ಬೇಕಾಗಿ ನೆನಹಂಗೈಯಲು. ಓಂಕಾರವೆಂಬ ಪ್ರಣವ ಪುಟ್ಟಿತ್ತು ನೋಡಾ. ಆ ಓಂಕಾರವೆಂಬ ಪ್ರಣವದಲ್ಲಿ ಅಕಾರ ಉಕಾರ ಮಕಾರಂಗಳಾದವು ನೋಡಾ. ಅಕಾರ ಉಕಾರ ಮಕಾರಂಗಳೊಡನೆ ಷಡಕ್ಷರಂಗಳು ಆದವು ನೋಡಾ. ಆ ಷಡಕ್ಷರಂಗಳೊಡನೆ ಷಟ್ಚಕ್ರಂಗಳಾದವು ನೋಡಾ. ಆ ಷಟ್ಚಕ್ರಂಗಳೊಡನೆ ಷಡ್ವಿಧಮೂರ್ತಿಗಳಾದವು ನೋಡಾ. ಆ ಷಡ್ವಿಧಮೂರ್ತಿಗಳೊಡನೆ ಷಡ್ವಿಧಲಿಂಗವಾದವು ನೋಡಾ. ಆ ಷಡ್ವಿಧಲಿಂಗದೊಡನೆ ಷಡ್ವಿಧಶಕ್ತಿಯರಾದರು ನೋಡಾ. ಆ ಷಡ್ವಿಧಶಕ್ತಿಯರೊಡನೆ ಷಡ್ವಿಧಭಕ್ತಿಯಾಯಿತು ನೋಡಾ. ಆ ಷಡ್ವಿಧಭಕ್ತಿಯನರಿತು ನಾದಬಿಂದುಕಲೆಗಳ ಮೀರಿ ಪರಕೆ ಪರವಾದ ಲಿಂಗವನಾಚರಿಸುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಶೀಲವಂತರು, ಶೀಲವಂತರು ಎಂದೇನೊ ? ಶೀಲವಂತಿಕೆಯನಾರು ಬಲ್ಲರು? ಶೀಲವಾದರೆ ಶಿವನೊಳು ಬೆರೆವುದೇ ಶೀಲ. ಶೀಲವಾದರೆ ಗುರುಲಿಂಗಜಂಗಮವ ತನ್ನೊಳಗರಿವುದೇ ಶೀಲ. ಅದಕ್ಕೆ ಮೀರಿದ ಶೀಲವಾದರೆ, ಹಸಿವು ತೃಷೆ ನಿದ್ರೆ ವಿಷಯವ ಕೆಡಿಸುವುದೇ ಶೀಲ. ಅದಕ್ಕೆ ತುರಿಯಾತೀತ ಶೀಲವಾದರೆ, ಬಾಲನಾಗಿ ತನ್ನ ಲೀಲಾವಿನೋದವ ಭೂಮಿಯ ಮೇಲೆ ನಟಿಸುವುದೇ ಶೀಲ. ಇದನರಿಯದೆ ಶೀಲಶೀಲವೆಂದು ಮನೆಮನೆಗೆ ಶೀಲವಲ್ಲದೆ, ತನ್ನ ತನಗೆ ಕಾಯಕೃತ್ಯವಲ್ಲದೆ, ಇದನರಿದು ಮೋಹ ಘನವನೆ ಮರೆದು, ಮನವನೆ ಬಳಲಿಸಿ, ಘನವ ಮಾಡಿ, ತನುವ ಹೊರೆದೆನೆಂಬ ಬಿನುಗರ ನುಡಿಯ ಮೆಚ್ಚುವನೆ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ ?
--------------
ಹಡಪದ ಅಪ್ಪಣ್ಣ
ಸರ್ವಶೂನ್ಯ ಆದಿ ಅನಾದಿ ಭಕ್ತಸ್ಥಲ. ನಾದ ಬಿಂದು ಮಹೇಶ್ವರಸ್ಥಲ. ಕಳೆ ಬೆಳಗು ಪ್ರಸಾದಿಸ್ಥಲ. ಅರಿವು ನಿರವಯವು ಪ್ರಾಣಲಿಂಗಿಸ್ಥಲ. ಜ್ಞಾನ ಸುಜ್ಞಾನ ಶರಣಸ್ಥಲ. ಭಾವವಿಲ್ಲದ ಬಯಲು ಬಯಲಿಲ್ಲದ ಭಾವ ಆಗಮ್ಯದ ಐಕ್ಯಸ್ಥಲ_ ಇಂತೀ ಷಡುಸ್ಥಲದ ಕೊರಡ ಮೆಟ್ಟಿ ನಿಂದಂಗೆ ಹೆಸರಿಲ್ಲ ಕುರುಹಿಲ್ಲ ತನಗೆ ತಾನಿಲ್ಲ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅರಿದು ನೆನೆಯಲಿಲ್ಲ, ಮರೆದು ಪೂಜಿಸಲಿಲ್ಲ. ತೆರಹಿಲ್ಲದ ಘನಕ್ಕೆ ಕುರುಹು ಮುನ್ನಿಲ್ಲ. ತನಗೆ ಗುರುವಿಲ್ಲ, ಗುರುವಿಗೆ ತಾನಿಲ್ಲ ಗುರುವಿಗೆ ಶಿಷ್ಯನು ಹೊಡವಡುವ ಕಾರಣ ಮುನ್ನಿಲ್ಲ. ಬಯಲ ಬಿತ್ತಲಿಲ್ಲ, ಬೆಳೆಯಲಿಲ್ಲ, ಒಕ್ಕಲಿಲ್ಲ, ತೂರಲಿಲ್ಲ, ಗುಹೇಶ್ವರನೆಂಬ ಲಿಂಗಕ್ಕೆ ಕುರುಹು ಮುನ್ನಿಲ್ಲ.
--------------
ಅಲ್ಲಮಪ್ರಭುದೇವರು
ವ್ರತಾಚಾರವೆಂಬುದು ತನಗೊ, ತನ್ನ ಸತಿಗೊ, ಇದಿರ ಭೂತಹಿತಕೊ ? ತಾನರಿಯದೆ ತನಗೆ ವ್ರತ ಉಂಟೆ ? ವ್ರತಾಚಾರಿಗಳ ಗರ್ಭದಿಂದ ಬಂದ ಶಿಶುವ ಅನ್ಯರಿಗೆ ಕೊಡಬಹುದೆ ? ವ್ರತಾಚಾರವಿಲ್ಲದವರಲ್ಲಿ ತಂದು ವ್ರತವ ಮಾಡಬಹುದೆ ? ಇಂತೀ ತಮ್ಮ ಕ್ರೀವಂತರಲ್ಲಿಯೆ ತಂದು ಕ್ರೀವಂತರಲ್ಲಿಯೆ ಕೊಟ್ಟು ಉಭಯ ಬ್ಥಿನ್ನವಿಲ್ಲದೆ ಇಪ್ಪುದೆ ಸಜ್ಜನವ್ರತ, ಸದಾತ್ಮ ಯುಕ್ತಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಮುಕ್ತಿ.
--------------
ಅಕ್ಕಮ್ಮ
ಎಲೆ ತಂಗಿ, ಶರಣಸತಿ ಲಿಂಗಪತಿಯಾದ ಪತಿವ್ರತಾಭಾವದ ಚಿಹ್ನೆ, ನಿನ್ನ ನಡೆ ನುಡಿಯಲ್ಲಿ, ಹೊಗರುದೋರುತ್ತಿದೆ, ನಿನ್ನ ಪೂರ್ವಾಪರವಾವುದಮ್ಮ?. ಸುತ್ತೂರು ಸಿಂಹಾಸನದ ಪರ್ವತದೇವರ ಶಿಷ್ಯರು, ಭಂಡಾರಿ ಬಸವಪ್ಪೊಡೆಯದೇವರು. ಆ ಭಂಡಾರಿ ಬಸವಪ್ಪೊಡೆಯದೇವರ ಶಿಷ್ಯರು. ಕೂಗಲೂರು ನಂಜಯ್ಯದೇವರು. ಆ ನಂಜಯ್ಯದೇವರ ಕರಕಮಲದಲ್ಲಿ, ಉದಯವಾದ ಶರಣವೆಣ್ಣಯ್ಯಾ ನಾನು. ಎನ್ನ ಗುರುವಿನ ಗುರು ಪರಮಗುರು, ಪರಮಾರಾಧ್ಯ ತೋಂಟದಾರ್ಯನಿಗೆ ಗುರುಭಕ್ತಿಯಿಂದೆನ್ನ ಶರಣುಮಾಡಿದರು. ಆ ತೋಂಟದಾರ್ಯನು, ತನ್ನ ಕೃಪೆಯೆಂಬ ತೊಟ್ಟಿಲೊಳಗೆನ್ನಂ ಮಲಗಿಸಿ, ಪ್ರಮಥಗಣಂಗಳ ವಚನಸ್ವರೂಪತತ್ವಾರ್ಥವೆಂಬ, ಹಾಲು ತುಪ್ಪಮಂ ಸದಾ ದಣಿಯಲೆರೆದು, ಅಕ್ಕರಿಂದ ರಕ್ಷಣೆಯಂ ಮಾಡಿ, ``ಘನಲಿಂಗಿ' ಎಂಬ ನಾಮಕರಣಮಂ ಕೊಟ್ಟು, ಪ್ರಾಯಸಮರ್ಥೆಯಂ ಮಾಡಿ, ಸತ್ಯಸದಾಚಾರ, ಜ್ಞಾನಕ್ರಿಯೆಗಳೆಂಬ, ದಿವ್ಯಾಭರಣಂಗಳಂ ತೊಡಿಸಿ, ಅರುಹೆಂಬ ಬಣ್ಣವ ನಿರಿವಿಡಿದುಡಿಸಿ, ಅರ್ತಿಯ ಮಾಡುತ್ತಿಪ್ಪ ಸಮಯದಲ್ಲಿ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನ, ತನಗೆ ನಾನಾಗಬೇಕೆಂದು ಬೇಡಿಕಳುಹಲು, ಎಮ್ಮವರು ಅವಂಗೆ ಮಾತನಿಕ್ಕಿದರಮ್ಮಾ.
--------------
ಘನಲಿಂಗಿದೇವ
ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ, ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ || ಯತ್ಪ್ರಸಾದಾಭಿದಂ ಸ್ಥಾನಂ ತದ್ಬೋಧೋ ನಿರಂಕುಶಃ ೀ ಯತ್ಪ್ರಣಲಿಂಗಕಂ ನಾಮ ತತ್ಸ್ವಾತಂತ್ರೈಮುದಾಹೃತಂ || ಯದಸ್ತಿ ಶರಣಂ ನಾಮ ಹ್ಯಲುಪ್ತಾ ಶಕ್ತಿರುಚ್ಯತೇ ೀ ಯದೈಕ್ಯಸ್ಥಾನಮೂರ್ಧಸ್ಥಾ ಹ್ಯನಂತಾಶಕ್ತಿರುಚ್ಯತೇ ||ú ಎಂದುದಾಗಿ, ಇಂತಪ್ಪ ಷಟ್‍ಸ್ಥಲಗಳಲ್ಲಿ ಷಡ್ವಿಧ ಶಕ್ತಿಗಳ ಸ್ಥಳಕುಳಂಗಳ ತಿಳಿದು, ಷಡ್ವಿಧ ಲಿಂಗಗಳಲ್ಲಿ ಧ್ಯಾನ ಪೂಜಾದಿಗಳಿಂದ ಅಂಗಗೊಂಡು ಭವದ ಬಟ್ಟೆಯ ಮೆಟ್ಟಿ ನಿಂದಲ್ಲದೆ ಷಟ್‍ಸ್ಥಲಬ್ರಹ್ಮಿಗಳಾಗರು. ಇಂತಲ್ಲದೆ ಅಪವಾದ ನಿಂದೆಗಳ ಪರರ ಮೇಲೆ ಕಣ್ಗಾಣದೆ ಹೊರಿಸುತ್ತ ಪರದಾರ ದಾಶಿ ವೇಶಿ ಸೂಳೆಯರ ಕೂಡಿ ಭುಂಜಿಸಿ ತೊಂಬಲತಿಂಬ ಹೇಸಿ ಮೂಳರು ಪೋತರಾಜ, ಜೋಗಿ, ಕ್ಷಪಣರಂತೆ ಜಟಾ, ತುರುಬು, ಬೋಳುಮುಂಡೆಗೊಂಡು ಕೂಳಿಗಾಗಿ ತಿರುಗುವ ಮೂಳ ಚುಕ್ಕೆಯರ ವಿರಕ್ತ ಷಟ್‍ಸ್ಥಲಬ್ರಹ್ಮಿಗಳೆನಬಹುದೇನಯ್ಯ ? ಅಂತಪ್ಪ ಅನಾದಿ ಷಟ್‍ಸ್ಥಲಬ್ರಹ್ಮದ ಷಡ್ವಿಧಶಕ್ತಿಯನರಿದು ವಿರಕ್ತ ಜಂಗಮ ಷಟ್‍ಸ್ಥಲ ಬಾಲಬ್ರಹ್ಮಿ ನಿರಾಭಾರಿಯಾದ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಲೋಕದ ನುಡಿ ತನಗೆ ಡೊಂಕು, ತನ್ನ ನುಡಿ ಲೋಕಕ್ಕೆ ಡೊಂಕು. ಊರ ಹೊದ್ದ, ಕಾಡ ಹೊದ್ದ, ಆಪ್ಯಾಯನ ಮುಕ್ತಿ ವಿರಹಿತ ಶರಣ. ಕಪಾಲದೊಳಗೆ ಉಲುಹಡಗಿದ, ಕೂಡಲಚೆನ್ನ[ಸಂಗ]ಯ್ಯನಲ್ಲಿ ಒಂದಾದ, ಲಿಂಗೈಕ್ಯವು.
--------------
ಚನ್ನಬಸವಣ್ಣ
ಪರಮಾತ್ಮನು ಸ್ವಲೀಲಾನಿಮಿತ್ತ ಸಾಕಾರಸ್ವರೂಪನಾಗಿ, ಪಂಚವಕ್ತ್ರ ದಶಭುಜಂಗಳನು ಧರಿಸಿ, ತನ್ನ ನಿಜಧರ್ಮವನೆ ತನಗಾಧಾರಮಪ್ಪ ವಾಹನಮಂ ಮಾಡಿಕೊಂಡು, ಪಂಚಮುಖಂಗಳಲ್ಲಿ ಪಂಚಭೂತಂಗಳಂ ಸೃಷ್ಟಿಸಿ, ಅವನೇ ಬಂದು ಬ್ರಹ್ಮಾಂಡವಂ ಮಾಡಿಕೊಂಡು, ತನ್ನ ಲೀಲಾಶಕ್ತಿಯ ಸಂಗದಿಂದ ಅನಂತಕೋಟಿ ಜೀವಂಗಳಂ ಸೃಷ್ಟಿಸಿ, ತನ್ನ ಗೂಢಮಪ್ಪ ಮನೋಭಂಡಾರವಂ ತೆಗೆದು, ಆ ಜೀವಂಗಳಿಗದನೇ ಜೀವನವಂ ಮಾಡಿ, ಈ ಬ್ರಹ್ಮಾಂಡವೆಂಬ ತನ್ನ ಪಟ್ಟಣಕ್ಕೂ ಈ ಜೀವಜಾಲಕ್ಕೂ ನಿಜಮನೋಭಂಡಾರವನೆ ಆಧಾರಮಂ ಮಾಡಿ, ತಾನೇ ಸೇವ್ಯನಾಗಿ, ಜೀವಂಗಳೇ ಸೇವಕರಾಗಿ ಕ್ರೀಡಿಸುತ್ತಿರಲಾ ಪರಮಾತ್ಮನಿಂದ ಸಲಿಗೆವಡೆದ ಕೆಲವು ಜೀವಂಗಳು ಅಹಂಕರಿಸಿ, ಆ ಪರಶಿವನಲ್ಲಿರ್ಪ ಮನೋಭಂಡಾರದಲ್ಲಿ ತಮ್ಮ ಶಕ್ತಿಗೆ ತಕ್ಕಷ್ಟು ಸತ್ಕರಿಸಿಕೊಂಡು, ತದ್ವಂಚನಾಮನದಿಂ ಪಂಚಭೂತಂಗಳನ್ನು ಸಾದ್ಥಿಸಿ, ಅದರಿಂದ ಒಂದು ಪಿಂಡಾಂಡವೆಂಬ ಪಟ್ಟಣಮಂ ಮಾಡಿಕೊಂಡು, ಇಂದ್ರಿಯಂಗಳೆಂಬ ಕೊತ್ತಲಂಗಳಂ ನಿರ್ಮಿಸಿ, ನವದ್ವಾರಂಗಳೆಂಬ ಹುಲಿಮುಖಂಗಳಿಂದ ಅಜ್ಞಾನವೆಂಬತಿ ಘಾತಮಾದಗಳಂ ಕಲ್ಪಿಸಿ, ಆಶೆಯೆಂಬಾಳ್ವೇರಿಯಂ ಸೃಜಿಸಿ, ತನ್ಮಧ್ಯದಲ್ಲಿ ಅಂತರಂಗವೆಂಬುದೊಂದು ಅರಮನೆಯಂ ಕಟ್ಟಿ, ಅಲ್ಲಿದ್ದುಕೊಂಡು, ಜೀವನು ತನ್ನ ಮನೋವಂಚನಾಭಂಡಾರವಂ ವೆಚ್ಚಿಸುತ್ತಾ, ವಿಷಯಂಗಳೆಂಬ ಮನ್ನೆಯರಂ ಸಂಪಾದಿಸಿ, ನಿಜಪುರದ್ವಾರಂಗಳಲ್ಲಿ ಕಾಹನಿಟ್ಟು, ಅಂತಃಕರಣಚತುಷ್ಟಯವೆಂಬ ಶಿರಃಪ್ರಧಾನರಂ ಸಂಪಾದಿಸಿ, ತನ್ಮಂತ್ರಾಲೋಚನೆಯಿಂ ಸಾಮ, ಭೇದ, ದಾನ, ದಂಡವೆಂಬ ಕರಿ, ತುರಗ, ರಥ, ಪದಾತಿಗಳಂ ಕೂಡಲಿಟ್ಟು, ಕರ್ಮವೆಂಬ ಸೇನಾನಿಗೆ ಪಟ್ಟಮಂ ಕಟ್ಟಿ, ತನ್ನಲ್ಲಿರ್ಪ ನಾನಾ ದಳಂಗಳಂ ಸೇನಾಪತಿಯ ವಶಮಂ ಮಾಡಿ, ನಾದ ಬಿಂದು ಕಳೆಗಳೆಂಬ ಶಕ್ತಿಗಳಂ ಪರಿಣಯಮಾಗಿ, ಜಾಗ್ರತ್ಸ್ವಪ್ನಸುಷುಪ್ತಿಗಳೆಂಬರಮನೆಗಳೊಳಗೆ ಕಳೆಯ ನಾದದಲ್ಲಿ ಕೆಲವುತ್ತಂ, ಬಿಂದುವಿನಲ್ಲಿ ಫಲಿಸಿ ಫಲಸುಖಂಗಳನನುಭವಿಸುತಿರ್ಪ ಜೀವನೆಂಬರಸಿನನುಮತವಿಡಿದು, ಕರ್ಮಸೇನಾನಿಯು ಸಕಲದಳಂಗಳೊಳಗೆ ಕೂಡಿ, ವಿಷಯಂಗಳೆಂಬ ಮನ್ನೆಯರಂ ಮುಂದುಮಾಡಿಕೊಂಡು, ಪ್ರಪಂಚವೆಂಬ ರಾಜ್ಯವಂ ಸಾದ್ಥಿಸಿ, ತದ್ರಾಜ್ಯದಲ್ಲಿ ಬಂದ ಪುತ್ರ ಮಿತ್ರ ಕಳತ್ರ ಧನ ಧಾನ್ಯ ವಸ್ತುವಾಹನಾಲಂಕಾರಾದಿಗಳನ್ನು ಕಾಯಪುರಕ್ಕೆ ತಂದು, ಜೀವನೆಂಬರಸಿಗೆ ಒಪ್ಪಯಿಸುತ್ತಿರಲು, ಜೀವನು ಸಂತೋಷಿಸಿ, ತಾನು ಸಂಪಾದಿಸಿದ ಸಕಲದ್ರವ್ಯವನ್ನು ತನ್ನ ಮೂಲಮನೋಭಂಡಾರದಲ್ಲಿ ಬೆರಸಿ, ಬಚ್ಚಿಟ್ಟು, ಅಹಂಕರಿಸಿ, ಸಕಲಕ್ಕೂ ತಾನೇ ಕರ್ತೃವೆಂದು ಬೆರತು, ಪರಮಾತ್ಮನಂ ಮರೆತು, ಸೇವ್ಯಸೇವಕರೆಂಬ ವಿವೇಕವರತು, ಅಧರ್ಮ ವಾಹನಾರೂಢನಾಗಿ, ತನ್ನ ತಾನರಿಯದೆ, ಕಾಮವಶನಾಗಿ ಸಂಚರಿಸುತಿರ್ಪ ಈ ಜೀವನ ಅಹಂಕಾರಮಂ ಸಂಹರಿಸುವ ನಿಮಿತ್ತವಾಗಿ ಪರಮಾತ್ಮನು ಕಾಲನೆಂಬ ಸುಬೇದಾರನಂ ಸೃಷ್ಟಿಸಿ, ವ್ಯಾದ್ಥಿಪೀಡನಗಳೆಂಬ ಬಲಂಗಳಂ ಕೂಡಲಿಟ್ಟು, ದುಃಖವೆಂಬ ಸಾಮಗ್ರಿಯಂ ಒದಗಿಸಿಕೊಟ್ಟು, ಕ್ರೋಧವೆಂದು ಮನೆಯಾಳಿಂಗೆ ತಮೋಗುಣಂಗಳೆಂಬ ಬಲುಗಾರರಂ ಕೂಡಿಕೊಟ್ಟು, ಈ ಕಾಯಪುರಮಂ ಸಾದ್ಥಿಸೆಂದು ಕಳುಹಲು, ಆ ಸದಾಶಿವನಾಜ್ಞಾಶಕ್ತಿಯಿಂದ ಕಾಲಸುಭೇದಾರನು ಸಕಲ ಬಲಸಮೇತವಾಗಿ ಬಂದು, ಕಾಯಪುರಕ್ಕೆ ಸಲುವ ಪ್ರಪಂಚರಾಜ್ಯವಂ ನೆರೆಸೂರೆಮಾಡಲು, ಕರಣಂಗಳೆಂಬ ಪ್ರಜೆಗಳು ಕೆಟ್ಟೋಡಿಬಂದು, ಜೀವನೆಂಬ ಅರಸಿಗೆ ಮೊರೆಯಿಡಲು, ಅದಂ ಕೇಳಿ, ಆಗ್ರಹಪಟ್ಟು, ಕರ್ಮಸೇನಾನಿಗೆ ನಿರೂಪಿಸಲು, ತತ್ಸೇನಾನಿಯು ಕಾಯಪುರದಲ್ಲಿರ್ಪ ಸಕಲದಳ ಸಮೇತಮಾಗಿ ಬಂದು ಕಾಲಸುಬೇದಾರನೊಡನೆ ಯುದ್ಧವಂ ಮಾಡಿ, ಜಯಿಸಲಾರದೆ ವಿಮುಖನಾಗಿ ಉಪಭೋಗಾದಿ ಸಕಲ ಸುಖಂಗಳಂ ಕೋಳುಕೊಟ್ಟು ಬಂದು ಕೋಟೆಯಂ ಹೊಗಲು, ಜೀವನು ಪಶ್ಚಾತ್ತಾಪದಿಂ ಸಂಶಯಯುಕ್ತನಾಗಿ ಕಳವಳಿಸುತ್ತಿರಲು, ಆ ಕಾಲಸುಬೇದಾರನು ಕಾಯಪುರಮಂ ಒತ್ತರಿಸಿ ಮುತ್ತಿಗೆಯಂ ಹಾಕಿ, ವಿಷಯಮನ್ನೆಯರಂ ಹಸಗೆಡಿಸಿ ಕೊಂದು, ಕರ್ಮವಂ ನಿರ್ಮೂಲವಂ ಮಾಡಿ, ಅಂತರಂಗ ಮನೆಯಂ ಕೊಳ್ಳೆಯವಂ ಮಾಡಿ, ನಾದಬಿಂದುಕಳಾಶಕ್ತಿಯಂ ಸೆರೆವಿಡಿದು, ಕಾಯಪುರಮಂ ಕಟ್ಟಿಕೊಳ್ಳಲು, ಜೀವನು ಭಯಭ್ರಾಂತನಾಗಿ, ಆ ಮೂಲಮನೋಭಂಡಾರಮಾತ್ರಮಂ ಕೊಂಡು, ತತ್ಪುರಮಂ ಬಿಟ್ಟು, ಅನೇಕ ಯಾತನೆಪಟ್ಟು ಓಡಿ, ಮರಳಿಮರಳಿ ಜೀವನು ಪುರಂಗಳಂ ಸಂಪಾದಿಸಲು, ತತ್ಸಂಪಾದಿತಪುರಂಗಳಂ ಕಾಲನು ಸಾದ್ಥಿಸುತ್ತಿರಲು, ಜೀವನು ಅಹಂಕಾರವಳಿದು, ಆಸ್ಪದವಿಲ್ಲದೆ, ತನಗೆ ಕರ್ತೃವಾರೆಂಬುದಂ ಕಾಣದೆ, ವಿಚಾರಪಟ್ಟು ದುಃಖಿಸುತಿರ್ಪ ಜೀವನಿಗೆ ಕರುಣದಿಂ ಪರಮಾತ್ಮನು ಜ್ಞಾನದೃಷ್ಟಿಯಂ ಕೊಡಲು, ತದ್ಬಲದಿಂ ಶಿವನೇ ಕರ್ತೃ ತಾನೇ ಭೃತ್ಯನೆಂಬುದಂ ತಿಳಿದು, ಶಿವಧ್ಯಾನಪರಾಯಣನಾಗಿ, ಶಿವಧಾರಣ ಧರ್ಮಪದಮಂ ಪಿಡಿದು ಪಲುಗುತ್ತಿರಲು, ತದ್ಧರ್ಮಮೇ ಗುರುರೂಪಮಾಗಿ, ತನ್ನಲ್ಲಿರ್ಪ ಶಿವನಂ ಜೀವಂಗೆ ತೋರಿಸಲು, ಜೀವಂ ಹಿಗ್ಗಿ, ತಾನು ಸಂಪಾದಿಸಿದ ಪುರವನೆ ಶಿವಪುರಮಂ ಮಾಡಿ, ಧರ್ಮಾದಿ ಸಕಲವಿಷಯಬಲಂಗಳಂ ಶಿವನ ವಶಮಂ ಮಾಡಿ, ಆ ಪಟ್ಟಣದೊಳಯಿಂಕೆ ಬಿಜಯಂಗೈಸಿಕೊಂಡು ಹೋಗಿ, ಅಂತರಂಗದ ಅರಮನೆಯೊಳಗೆ ಜ್ಞಾನಸಿಂಹಾಸನದ ಮೇಲೆ ಕುಳ್ಳಿರಿಸಿ, ಪಟ್ಟಮಂ ಕಟ್ಟಿ, ತನ್ನ ಸರ್ವಸ್ವಮಂ ಶಿವನಿಗೆ ಸಮರ್ಪಿಸಿ, ತಾನು ಸತ್ಕರಿಸಿಕೊಂಡುಬಂದ ಮನೋಭಂಡಾರಮಂ ಶಿವನಡಿಯಂ ಸೇರಿಸಲು, ಸದಾಶಿವನು ಪ್ರಸನ್ನಮುಖನಾಗಿ, ದಯೆಯಿಂ ಪರಿಗ್ರಹಿಸಿ, ಜೀವನನು ಸಜ್ಜೀವನನಮಾಡಿ ಕೂಡಿಕೊಂಡುದೆ ಲಿಂಗೈಕ್ಯ ಕಾಣಾ | ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಅತಿಶಯವನತಿಗಳೆದು ನಿರತಿಶಯ ಸುಖದೊಳಗೆ ಪರಮಸುಖಿಯಾಗಿಪ್ಪವರಾರು ಹೇಳಾ ? ನಿಜದ ನಿರ್ಣಯವನರಿದು ಭಜನೆ ಭಾವನೆಯಳಿದು ತ್ರಿಜಗಪತಿಯಾಗಿಪ್ಪವರಾರು ಹೇಳಾ ? ಕೋಡಗದ ಮನದೊಳಗೆ ಮನವಿರಹಿತನಾಗಿ ಗಮನಗೆಡದಿಪ್ಪರಿನ್ನಾರು ಹೇಳಾ ? ಹಗೆಯಲ್ಲಿ ಹೊಕ್ಕು ಹಗೆಯಳಿದು ಸುಖಿಯಾಗಿ ತನಗೆ ತಾ ಕೆಳೆಯಾಗಿಪ್ಪರಾರು ಹೇಳಾ ? ಒಳಹೊರಗೆ ಸರ್ವಾಂಗ ಲಿಂಗವೆ ತಾನಾಗಿ ಇರಬಲ್ಲ ಪರಮಾರ್ಥರಾರು ಹೇಳಾ ? ಕಲಿದೇವಾ, ನಿಮ್ಮ ಶರಣ ಚೆನ್ನಬಸವಣ್ಣನ ನಿಲವನರಿದು, ಶರಣೆಂದು ನಾನು ಸುಖಿಯಾದೆನು.
--------------
ಮಡಿವಾಳ ಮಾಚಿದೇವ
ಇನ್ನಷ್ಟು ... -->