ಅಥವಾ

ಒಟ್ಟು 62 ಕಡೆಗಳಲ್ಲಿ , 26 ವಚನಕಾರರು , 46 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂದೆ ನೀ ಬಂದೆ ನಾನಾ ಭವಂಗಳಲ್ಲಿ, ನಾನಾ ವ್ಯಾಪಾರಕ್ಕೆ ನೀನೊಡೆಯನಾಗಿ. ಮತ್ರ್ಯದ ಸುಖದುಃಖ ನಿನಗೆ ನಿಶ್ಚಿಂತವಾಗಿಪ್ಪುದು. ಹಿಂದೆ ನಿನ್ನಂತೆ ನಾ ಬಂದು ನೊಂದುದಿಲ್ಲ. ಬಂದೆ ನಾ ಬಸವಣ್ಣನ ಕಥನದಿಂದ, ನಾ ತಂದ ಪದಾರ್ಥವೆಲ್ಲವ ನಿಮಗಿತ್ತೆ. ನಾನಿನ್ನಂಜುವೆ ಗುರುಲಿಂಗಜಂಗಮದಲ್ಲಿ ಪ್ರತ್ಯುತ್ತರಕ್ಕೆ. ಎನಗೆ ಮತ್ರ್ಯದ ಮಣಿಹ, ಕೃತ್ಯವಿನ್ನೆಷ್ಟು ದಿನ ಹೇಳಾ. ಅಂದು ನೀವು ಕೊಟ್ಟ ಒಪ್ಪದ ಚೀಟನೊಪ್ಪಿಸಿದೆ. ಮತ್ತೆ ಇನ್ನು ಸಂದೇಹವೆ, ಹೇಳಾ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಎನ್ನಾತ್ಮನದೊಂದು ಅರಸುತನದ ಅನ್ಯಾಯವ ಕೇಳಯ್ಯ ಗುರುವೆ. ಪಂಚಭಕ್ಷ ್ಯ ಪರಮಾಮೃತವ ಸದಾ ದಣಿಯಲುಂಡು ಒಂದು ದಿನ ಸವಿಯೂಟ ತಪ್ಪಿದರೆ ಹಲವ ಹಂಬಲಿಸಿ ಹಲುಗಿರಿದು, ಎನ್ನ ಕೊಂದು ಕೂಗುತ್ತಿದೆ ನೋಡಾ. ಶ್ವಪಚನನುತ್ತಮನ ಕೂಡೆ ಸಂಕಲೆಯನಿಕ್ಕುವರೆ ಅಯ್ಯ?. ಕಲಸಿ ಕಲಸಿ ಕೈಬೆರಲು ಮೊಂಡಾದವು. ಅಗಿದಗಿದು ಹಲ್ಲುಚಪ್ಪಟನಾದವು. ಉಂಡುಂಡು ಬಾಯಿ ಜಡ್ಡಾಯಿತು. ಹೇತು ಹೇತು ಮುಕುಳಿ ಮುರುಟುಗಟ್ಟಿತ್ತು. ಸ್ತ್ರೀಯರ ಕೂಡಿಕೂಡಿ ಶಿಶ್ನ ಸವೆದು ಹೋಯಿತ್ತು. ತನುಹಳದಾಗಿ ಅಲ್ಲಲ್ಲಿಗೆ ಕಣ್ಣು ಪಟ್ಟಿತ್ತು. ಮನ ಹೊಸದಾಗಿ ಹನ್ನೆರಡುವರ್ಷದ ರಾಜಕುಮಾರನಾದೆನು. ಇನ್ನೇವೆನಿನ್ನೇವೆನಯ್ಯ ಎನ್ನ ಕೇಡಿಂಗೆ ಕಡೆಯಿಲ್ಲ. ಕಾಯವಿಕಾರವೆಂಬ ಕತ್ತಲೆ ಕವಿಯಿತು. ಮನೋವಿಕಾರವೆಂಬ ಮಾಯೆ ಸೆರೆವಿಡಿದಳು. ಇಂದ್ರಿಯವಿಕಾರವೆಂಬ ಹುಚ್ಚುನಾಯಿಗಳು ಕಚ್ಚಿ ಕಚ್ಚಿ ಒದರುತ್ತಿವೆ. ಕಾಮ ವಿಕಾರವೆಂಬ ಕಾಳರಕ್ಕಸಿ ಅಗಿದಗಿದು ನುಂಗುತಿಹಳು. ಕಾಯಾಲಾಗದೆ ದೇವ?. ಸಾವನ್ನಬರ ಸರಸವುಂಟೆ ಲಿಂಗಯ್ಯ?. ಅನ್ಯಸಮಯದ ಗುಮ್ಮಟನ ಕೈವಿಡಿದೆತ್ತಿಕೊಂಡೆ. ನಿನ್ನ ಸಮಯದ ಶಿಶು ಬಾವಿಯಲ್ಲಿ ಬೀಳ್ವುದ ನೋಡುತ್ತಿಪ್ಪರೆ ಕರುಣಿ?. ಮುಕ್ತಿಗಿದೇ ಪಯಣವೋ ತಂದೆ?. ನೀನಿಕ್ಕಿದ ಮಾಯಾಸೂತ್ರಮಂ ಹರಿದು, ದಶೇಂದ್ರಿಯಂಗಳ ಗುಣವ ನಿವೃತ್ತಿಯಂ ಮಾಡಿ, ಅಂಗಭೋಗ-ಆತ್ಮಭೋಗಂಗಳನಡಗಿಸಿ, ಲಿಂಗದೊಳು ಮನವ ನೆಲೆಗೊಳಿಸಿ, ಎನ್ನ ಪಟದೊಳಗಣ ಚಿತ್ರದಂತೆ ಮಾಡಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಕಾಳಕೂಟದ ತತ್ತಿಯಲ್ಲಿ ಒಂದು ಕೋಳಿ ಹುಟ್ಟಿತ್ತು. ಹಾರುವುದಕ್ಕೆ ಗರಿಯಿಲ್ಲ, ಓಡುವುದಕ್ಕೆ ಕಾಲಿಲ್ಲ. ನೋಡುವುದಕ್ಕೆ ಕಣ್ಣಿಲ್ಲ, ಕೂಗುವ ಬಾಯಿ ಒಂದೆ ಅದೆ. ಅದು ಕೂಗುವಾಗ ಜಾವವಳಿದು, ದಿನ ಸತ್ತು, ಮಾಸ ತುಂಬುವದನರಿತಲ್ಲದೆ ದಿನ ನಾಶವೆಂದು ಕೂಗುತ್ತದೆ. ಕೂಗಿನ ದನಿಯ ಕೇಳಿ ಬೆಳಗಾಯಿತ್ತು, ಜಗದ ಸುಂಕದೊಡೆಯ ಬಂಕೇಶ್ವರಲಿಂಗಾ.
--------------
ಸುಂಕದ ಬಂಕಣ್ಣ
ಗುರು ಮುನಿದಡೆ ಒಂದು ದಿನ ತಾಳುವೆ, ಲಿಂಗ ಮುನಿದಡೆ ದಿನವರೆ ತಾಳುವೆ. ಜಂಗಮ ಮುನಿದಡೆ ಕ್ಷಣಮಾತ್ರ ತಾಳಿದೆನಾದಡೆ, ಎನ್ನ ಪ್ರಾಣದ ಹೋಕು ಕೂಡಲಸಂಗಮದೇವಾ.
--------------
ಬಸವಣ್ಣ
ದಿವಾರಾತ್ರಿಯೆಂಬ ಉಭಯ ಕೂಡೆ, ದಿನಲೆಕ್ಕ ಹಾಯಿದು ಕಲ್ಪಿತವನಳಿದಂತೆ, ಲೆಕ್ಕ ಮುಂಚು, ದಿನ ಹಿಂಚಾಗಿ ತನ್ನ ತಪ್ಪನರಿವುದಕ್ಕೆ ಮೊದಲೆ ತಪ್ಪಿರಬೇಕು. ಇದು ನಿಶ್ಚಯ ಬುದ್ಧಿ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಉದಯ, ಮಧ್ಯಾಹ್ನ, ಅಸ್ತಮಯ, ಕತ್ತಲೆ ಬೆಳಗು, ದಿನ ವಾರ ಲಗ್ನತಿಥಿ ಮಾಸ ಸಂವತ್ಸರ ಹೋಗುತ್ತ ಬರುತ್ತಲಿವೆ. ಇವ ನೋಡಿದವರೆಲ್ಲ ಇದರೊಳಗೆ ಹೋಗುತ್ತ ಬರುತ್ತ ಇದ್ದಾರೆ. ಜಗಕ್ಕೆ ಇವೀಗ ಇಷ್ಟವಾಗಿಪ್ಪವು. ಎನ್ನ ದೇವಂಗೆ ಇವೊಂದೂ ಅಲ್ಲ. ದಿನಕಾಲ ಯುಗಜುಗ ಪ್ರಳಯಕ್ಕೆ ಹೊರಗಾದ ಆ ದೇವನ, ಅಂಗವಿಸಿ ಮುಟ್ಟಿ ಹಿಡಿದ ಕಾರಣ, ಎಮ್ಮ ಶರಣರು ಪ್ರಳಯಕ್ಕೆ ಹೊರಗಾದರು. ಇದನರಿದು, ಅಂತಪ್ಪ ಶರಣರ ಪಾದವ ನಂಬಿ, ಕೆಟ್ಟು ಬಟ್ಟಬಯಲಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಬತ್ತೀಸಾಯುಧವನು ಅನಂತ ದಿನ ಸಾಧಿಸಿ ಪಿಡಿದರೂ ಕಾದುವುದು ಒಂದೇ ಕೈದು ಒಂದೇ ದಿನ. ಆ ಹಾಂಗೆ_ಫಲ ಹಲವಾದಡೂ ಅರಿವುದೊಂದೇ ಮನ, ಒಂದೇ ಲಿಂಗ ! ಆ ಮನವು ಆಲಿಂಗದ ನೆಲೆಯಲ್ಲಿ ನಿಂದು ಸ್ಥಲಲೇಪವಾದ ಮತ್ತೆ ಸ್ಥಲವಿಲ್ಲ ನಿಃಸ್ಥಲವಿಲ್ಲ, ನಿಜ ನೀನೇ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂಗವಿಲ್ಲದ ಪುರುಷನ ಸಂಗವಿಲ್ಲದ ಸ್ತ್ರೀ ಗರ್ಭವಿಲ್ಲದೆ ಬಸುರಾದುದ ಕಂಡೆ. ದಿನ ವಾರ ಮಾಸವಿಲ್ಲದೆ ಬೇನೆತೋರದೆ ಒಂದು ಶಿಶು ಹಡೆದುದ ಕಂಡೆ. ಆ ಶಿಶು ಮಂಡಲಾದ್ಥಿಪತಿಯ ಕೊಂದು ಮಂಡಲವೆಲ್ಲ ಸುಡುವುದ ಕಂಡೆ. ಕಂಡವರ ನುಂಗಿ ಸೂಲಗಿತ್ತಿಯ ಕೊಲ್ಲುವದ ಕಂಡೆ. ತಾಯಿಸಂಗವ ಮಾಡಿ ತಂದೆಯಲ್ಲಿ ಸತ್ತು ಕೂಡಲಚನ್ನಸಂಗಯ್ಯನ ಪಾದದಲ್ಲಿ ಅಡಗಿ ಬಯಲಾದುದ ಕಂಡೆ. ಅದು ಅಡಗಿದಲ್ಲಿ ತಾನಡಗಬಲ್ಲರೆ ಪ್ರಳಯವಿರಹಿತ ಪರಶಿವಮೂರ್ತಿ ತಾನೆಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತಿಳಿ ನೀರೆಂಬೆ ತಿಳಿನೀರೆಂಬೆ, ತಿಳಿ ನೀ ಎಂದು ಒಂದು ದಿನ ಅಂದಿಲ್ಲೆಲೆ ಮಾನವಾ. ಕ್ಷಣಕ್ಕೆ ಕ್ಷಣಕ್ಕೆ ತಿಳಿ ನೀ ಎಂದಡೆ, ತಳುಹುದೆ ತನ್ನ ನಿಜವ ಕೊಡನೆ ಕಪಿಲಸಿದ್ಧ ಮಲ್ಲೇಂದ್ರ ?
--------------
ಸಿದ್ಧರಾಮೇಶ್ವರ
ಸೋಮವಾರ ಮಂಗಳವಾರ ಹುಣ್ಣಿಮೆ ಸಂಕ್ರಾಂತಿ ಶಿವರಾತ್ರಿ_ ಮೊದಲಾದ ತಿಥಿವಾರಂಗಳಲ್ಲಿ ಏಕಭುಕ್ತೋಪವಾಸಿಯಾಗಿ ಆ ಕ್ಷುದ್ರ ತಿಥಿಗಳಲ್ಲಿ, ಮಾಡಿದ ನೀಚೋಚ್ಛಿಷ್ಟವಂ ತಂದು ತನ್ನ ಕರಸ್ಥಲದ ಇಷ್ಟಲಿಂಗಕ್ಕೆ ಕೊಟ್ಟು ಕೊಂಡು ಭಕ್ತನೆನಿಸಿಕೊಂಡೆನೆಂಬ ಅನಾಚಾರಿಯ ಮುಖವ ನೋಡಲಾಗದು ನೋಡಲಾಗದು. ಅದೇನು ಕಾರಣವೆಂದಡೆ: ದಿನ ಶ್ರೇಷ್ಠವೊ ? ಲಿಂಗ ಶ್ರೇಷ್ಠವೊ ? ದಿನ ಶ್ರೇಷ್ಠವೆಂದು ಮಾಡುವ ದುರಾಚಾರಿಯ ಮುಖವ ನೋಡಲಾಗದು, ನೋಡಲಾಗದು, ಅದೆಂತೆಂದಡೆ: ಆವ ದಿನ ಶ್ರೇಷ್ಠವೆಂದು ದಿನವೆ ದೈವವೆಂದು ಮಾಡುವನಾಗಿ, ಅವನು ದಿನದ ಭಕ್ತನು. ಅವನಂತಲ್ಲ ಕೇಳಿರಣ್ಣ ಸದ್ಭಕ್ತನು_ಲಿಂಗವೆ ಘನವೆಂದು ಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ದೈವವೆಂದು ಮಾಡುವನಾಗಿ ಆತ ಲಿಂಗಭಕ್ತನು. ಈ ಲಿಂಗಭಕ್ತಂಗೆ ದಿನದ ಭಕ್ತನ ತಂದು ಸರಿಯೆಂದು ಹೋಲಿಸಿ ನುಡಿವಂಗೆ, ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಅವ ಭಕ್ತನಲ್ಲ, ಅವಂಗೆ ಅಘೋರನರಕ. ಭವಿದಿನ_ತಿಥಿ_ವಾರಂಗಳಲ್ಲಿ ಕೂರ್ತುಮಾಡುವಾತ ಭಕ್ತನಲ್ಲ. ಅಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವಾತ ಜಂಗಮವಲ್ಲ. ಈ ಉಭಯರನು ಕೂಡಲಚೆನ್ನಸಂಗಯ್ಯ ಕುಂಭೀಪಾತಕ ನಾಯಕನರಕದಲ್ಲಿಕ್ಕುವನು
--------------
ಚನ್ನಬಸವಣ್ಣ
ತೊಟ್ಟುಬಿಡುವ ವೇಳೆಯನರಿದ ಮತ್ತೆ ದೋಟಿಯನಿಕ್ಕಲೇತಕ್ಕೆ? ತನ್ನ ಕೃತ್ಯದ ಭಕ್ತಿಯ ಮಾಡುತ್ತಿದ್ದ ಮತ್ತೆ ಒಂದು ದಿನ ತಪ್ಪಲಿಕ್ಕಾಗಿ ಕುಪ್ಪಳಿಸಿ ಬೇಯಲೇತಕ್ಕೆ? ಇದು ಗುರುಸ್ಥಲಕೆ ನಿಶ್ಚಯವಲ್ಲ; ಇದು ಶಿಲೆಯ ಮಾರಿಯ ಹದಹು; ವ್ಯಾಧನ ವೇಷ, ಮೂಷಕನ ವಾಸದ ತಪ್ಪಿನ ಪಥ ಆತ ಸದ್ಗುರುಜಾತನಲ್ಲ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ. ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ
ಆದಿ ಅನಾದಿ ಇಲ್ಲದಂದು, ಸ್ಥಿತಿಗತಿ ಉತ್ಪನ್ನವಾಗದಂದು ಭಕ್ತಿಯನುಭಾವಿಯ ಬಸುರೊಳಗೆ ಸತ್ಯಜ್ಞಾನವೆಂಬ ಶಾಸ್ತ್ರಂಗಳು ಹುಟ್ಟಿದವು. ಆ ಶಾಸ್ತ್ರದೊಳಡಗಿದವು ವೇದಪುರಾಣಾಗಮಂಗಳು. ಆ ಆಗಮಂಗಳೊಳಡಗಿದವು ಐವತ್ತೆರಡಕ್ಷರಂಗಳು ಆ ಅಕ್ಷರಂಗಳೊಳಡಗಿದವು ಇಪ್ಪತ್ತೇಳು ನಕ್ಷತ್ರಂಗಳು. ಆ ಇಪ್ಪತ್ತೇಳು ನಕ್ಷತ್ರಂಗಳೊಳಡಗಿದವು ಈರೇಳು ಲೋಕದ ಗಳಿಗೆ ಜಾವ ದಿನ ಮಾಸ ಸಂವತ್ಸರಂಗಳು. ಇಂತಿವೆಲ್ಲವನು ಒಳಗಿಟ್ಟುಕೊಂಡಿಹಾತ `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಹೊರಗಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಉಳಿದಿಪ್ಪಾತನು `ಓಂ ನಮಃ ಶಿವಾಯ ಎಂಬಾತ ಕಾಣಿರೆ ! ಮತ್ತಿದ್ದ ಯೋನಿಜರೆಲ್ಲರೂ ಶಾಪಹತರಾಗಿ ಹೋದರು. ಇದು ಕಾರಣ- `ಓಂ ನಮಃ ಶಿವಾಯ ಎಂಬಾತನೆ ಲಿಂಗವು ಪಂಚಾಕ್ಷರಿಯೆ ಪರಮೇಶ್ವರನು, ಪಂಚಾಕ್ಷರಿಯೆ ಪರಮತತ್ವ, ಪಂಚಾಕ್ಷರಿಯೆ ಪರಮಯೋಗ, ಪಂಚಾಕ್ಷರಿಯೆ ಪರಂಜ್ಯೋತಿ, ಪಂಚಾಕ್ಷರಿಯೆ ಪಾಪಾಂತಕ. `ನ ಎಂಬಕ್ಷರವೆ ದೇವರ ಚರಣ, `ಮ ಎಂಬಕ್ಷರವೆ ದೇವರ ಒಡಲು, `ಶಿ ಎಂಬಕ್ಷರವೆ ದೇವರ ಹಸ್ತ, `ವಾ ಎಂಬಕ್ಷರವೆ ದೇವರ ನಾಸಿಕ, `ಯ ಎಂಬಕ್ಷರವೆ ದೇವರ ನೇತ್ರ. ಮತ್ತೆ ; `ನ ಎಂಬಕ್ಷರವೆ ದೇವರ ದಯೆ, `ಮ ಎಂಬಕ್ಷರವೆ ದೇವರ ಶಾಂತಿ, `ಶಿ ಎಂಬಕ್ಷರವೆ ದೇವರ ಕ್ರೋಧ, `ವಾ ಎಂಬಕ್ಷರವೆ ದೇವರ ದಮನ, `ಯ ಎಂಬ ಅಕ್ಷರವೆ ದೇವರ ಶಬ್ದ, ಮತ್ತೆ ; `ನ ಎಂಬಕ್ಷರವೆ ಪೃಥ್ವಿ, `ಮ ಎಂಬಕ್ಷರವೆ ಅಪ್ಪು, `ಶಿ` ಎಂಬಕ್ಷರವೆ ಅಗ್ನಿ, `ವಾ ಎಂಬಕ್ಷರವೆ ವಾಯು, `ಯ ಎಂಬಕ್ಷರವೆ ಆಕಾಶ. ಮತ್ತೆ; `ನ ಎಂಬಕ್ಷರವೆ ಬ್ರಹ್ಮ, `ಮ ಎಂಬಕ್ಷರವೆ ವಿಷ್ಣು, `ಶಿ ಎಂಬಕ್ಷರವೆ ರುದ್ರ, `ವಾ ಎಂಬಕ್ಷರವೆ ಶಕ್ತಿ, `ಯ ಎಂಬಕ್ಷರವೆ ಲಿಂಗ, ಇಂತು ಪಂಚಾಕ್ಷರದೊಳಗಳಿವಕ್ಷರ ನಾಲ್ಕು, ಉಳಿವಕ್ಷರ ಒಂದು. ಈ ಪಂಚಾಕ್ಷರವನೇಕಾಕ್ಷರವ ಮಾಡಿದ ಬಳಿಕ ದೇವನೊಬ್ಬನೆ ಎಂದರಿದು, ಬ್ರಹ್ಮ ದೈವವೆಂಬ ಬ್ರಹ್ಮೇತಿಕಾರರನೇನೆಂಬೆನಯ್ಯ ! ವಿಷ್ಣು ದೈವವೆಂಬ ವಿಚಾರಹೀನರನೇನೆಂಬೆನಯ್ಯ ! ಅಶ್ವಿನಿ ಭರಣಿ ಕೃತ್ತಿಕೆ ಮೊದಲಾದ ಇಪ್ಪತ್ತೇಳು ನಕ್ಷತ್ರಂಗಳೊಳಗೆ, ಮೂಲಾನಕ್ಷತ್ರದಲ್ಲಿ (ವಿಷ್ಣು) ಹುಟ್ಟಿದನಾಗಿ ಮೂಲನೆಂಬ ಹೆಸರಾಯಿತ್ತು. ದೇವರ ಸೇವ್ಯಕಾರ್ಯಕ್ಕೆ ಪ್ರಾಪ್ತನೆಂದು ವೇದಂಗಳು ಬಿನ್ನೈಸಲು, ಜ್ಯೋತಿಷ್ಯಜ್ಞಾನ ಶಾಸ್ತ್ರಂಗಳು ಹುಸಿಯಾದೆವೆಂದು ನಿಮ್ಮ ಹರಿಯ ಅಡವಿಯಲ್ಲಿ ಬೀಸಾಡಲು, ಅಲ್ಲಿ ಆಳುತ್ತಿದ್ದ ಮಗನ ಭೂದೇವತೆ ಸಲಹಿ, ಭೂಕಾಂತನೆಂಬ ಹೆಸರುಕೊಟ್ಟು, ಭೂಚಕ್ರಿ ತನ್ನ ಪ್ರತಿರೂಪ ತೋಳಲ್ಲಿ ಸೂಡಿಸಿ ಶಿವಧರ್ಮಾಗಮ ಪೂಜೆ ಭಕ್ತಿಯಲ್ಲಿ ಯುಕ್ತನ ಮಾಡಿದ ಬಳಿಕ, ಮತ್ತೆ ನಮ್ಮ ದೇವರ ಶ್ರೀಚರಣದಲ್ಲಿರ್ದು ಒಳಗೆ ತೋರಲು ದೇವರು ಪುರಾಣಂಗ? ಕರೆದು ವಿಷ್ಣುವಿನ ಪಾಪಕ್ಷಯವ ನೋಡಿ ಎಂದರೆ ಆ ಪುರಾಣಂಗಳಿಂತೆಂದವು; ``ಪಾಪಂತು ಮೂಲನಕ್ಷತ್ರಂ ಜನನೀವರಣಂ ಪುನಃ ಪಾಪಂ ತು ಪರ್ವತಸ್ಥೂಲಂ ಶಿವೇ ವೈರಮತಃ ಪರಂ ಶಿವದಾಸೋಹಭಾವೇನ ಪಾಪಕ್ಷಯಮವಾಪ್ನುಯಾತ್ ಎಂದು ಪುರಾಣಂಗಳು ಹೇಳಲಾಗಿ; ವಿಷ್ಣು ಕೇಳಿ, ಪುರಾಣದ ಕೈಯಲು ದೀಕ್ಷಿತನಾಗೆ, ಪುರಾಣ ಪುರುಷೋತ್ತಮನೆಂಬ ಹೆಸರು ಬಳಿಕಾಯಿತ್ತು. ಮತ್ತೆ ನಮ್ಮ ದೇವರ ಪಾದರಕ್ಷೆಯ ತಲೆಯಲ್ಲಿ ಹೊತ್ತುಕೊಂಡು ಭೂತಂಗಳಿಗಂಜಿ ಶಂಖಮಂ ಪಿಡಿದುಕೊಂಡು, ದುರಿತಂಗಳಿಗಂಜಿ ನಾಮವನಿಟ್ಟು, ಪ್ರಳಯಂಗಳಿಗಂಜಿ ವೇಷವ ತೊಟ್ಟು. ರಾಕ್ಷಸರಿಗಂಜಿ ಚಕ್ರಮಂ ಪಿಡಿದು, ಶಿವನ ದಾಸೋಹದ ದಾಸಿಯೆಂದು ಕಸಕಿಲಂ ಪಿಡಿದು ಬಯಲನುಡುಗಿ, ಹೊತ್ತ ನೀರಲ್ಲಿ ಪುತ್ಥಳಿಯ ¸õ್ಞಖ್ಯಮಂ ಮಾಡಿ ಇಪ್ಪತ್ತೇಳು ಲಕ್ಷವರುಷ ಶಿವನ ಸೇವೆಯಂ ಮಾಡಿ ಮತ್ತೆ ಗರುಡವಾಹನ ಸತಿಲಕ್ಷ್ಮಿ ವಾರ್ಧಿಜಯಮಂ ಪಡೆದು ದೇವರ ಎಡದ ಗದ್ದುಗೆಯನೋಲೈಸಿಪ್ಪವನ ದೇವರೆಂದರೆ ನೀವೆಂದಂತೆ ಎಂಬರೆ ? ಕೇಳಿರಣ್ಣಾ ! ವಚನಶುದ್ಧ ಭಾವದಲ್ಲಿ ಭಕ್ತಿಯುಳ್ಳವರು ನೀವು ಹೊತ್ತಿದ್ದ ವೇಷದಲ್ಲಿ ತಿಳಿದು ನೋಡಿ. ತಂದೆತಾಯಿ ಇಂದ್ರಿಯದಲ್ಲಿ ಬಂದವರು ದೇವರೆ ? ಸಂದೇಹ ಭ್ರಮೆಯೊಳಗೆ ಸಿಕ್ಕಿದವರು ದೇವರೆ ? ಶುಕ್ಲ ಶೋಣಿತದೊಳಗೆ ಬೆಳೆದವರು ದೇವರೆ ? ಆ ತಂದೆ ತಾಯ ಹುಟ್ಟಿಸಿದರಾರೆಂದು ಕೇಳಿರೆ; ಹಿಂದೆ ಸಂದ ಯುಗಂಗಳು ಶತಕೋಟಿ ಸಂಖ್ಯೆಯ ಮೇಲೆ ಏಳುನೂರೆಪ್ಪತ್ತುಸಾವಿರ ಯುಗಂಗಳು, ಇದಕ್ಕೆ ನವಕೋಟಿ ನಾರಾಯಣರಳಿದರು, ಶತಕೋಟಿ ಸಂಖ್ಯೆ ಬ್ರಹ್ಮರಳಿದರು ಉಳಿದವರ ಪ್ರಳಯವ ಹೊಗಳಲಿನ್ನಾರ ವಶ ? ಇಂತಿವೆಲ್ಲವನು ಬಿಟ್ಟು ಉಳಿದಿಪ್ಪಾತನೊಬ್ಬನೆ, ಆತಂಗೆ ನಮೋ ಎಂಬೆ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನಿಯಂಗೆ ತವಕವಿಲ್ಲ; ಎನಗೆ ಸೈರಣೆಯಿಲ್ಲ. ಮನದಿಚ್ಫೆಯನರಿವ ಸಖಿಯರಿಲ್ಲ, ಇನ್ನೇವೆನವ್ವಾ ? ಮನುಮಥನವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು, ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ ? ದಿನ ವೃಥ ಹೋಯಿತ್ತಾಗಿ ಯೌವ್ವನ ಬೀಸರವಾಗದ ಮುನ್ನ ಪಿನಾಕಿಯ ನೆರಹವ್ವಾ ಶಂಭುಜಕ್ಕೇಶ್ವರನ!
--------------
ಸತ್ಯಕ್ಕ
ಜಗದ ವರ್ತಕದ ಇರವು ಎಂತೆಂದಡೆ: ಶೈವ ನೇಮಸ್ಥ ಎರಡೆ ಭೇದ. ದಿವಾರಾತ್ರಿ ಉಭಯ ಕೂಡಿ ದಿನ ಲೆಕ್ಕಕ್ಕೆ ಬಂದಂತೆ, ಶಕ್ತಿ ಸಾಕಾರವಾಗಿ, ನಿಶ್ಶಕ್ತಿ ವಸ್ತುರೂಪಾಗಿ, ಉಭಯವು ಕೂಡಿ ಘಟ ನಡೆವಂತೆ ನಡೆವುದು ಜಗ ಸಂಬಂಧ, ಭಯಕ್ಕೆ ಹೊರಗಾದುದು, ಸದಾಶಿವಮೂರ್ತಿಲಿಂಗದ ಭಾವಸಂಬಂಧ.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->