ಅಥವಾ

ಒಟ್ಟು 54 ಕಡೆಗಳಲ್ಲಿ , 18 ವಚನಕಾರರು , 38 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶುದ್ಧ ಮಿಶ್ರ ಸಂಕೀರ್ಣ ಪೂರ್ವ ಮಾರ್ಗಶೈವಂಗಳಲ್ಲಿ ಕರ್ಮಭಕ್ತಿಯಲ್ಲದೆ ನಿರ್ಮಳಸದ್ಭಕ್ತಿಯೆಲ್ಲಿಯದೊ ? ಒಮ್ಮೆ ಧರಿಸಿ ಒಮ್ಮೆ ಇರಿಸಿ, ಶುಚಿಯಾದೆನೆಂದು ಅಶುಚಿಯಾದೆನೆಂದು ಭವಿಯಾಗುತ್ತೊಮ್ಮೆ, ಭಕ್ತನಾಗುತ್ತೊಮ್ಮೆ ಒಪ್ಪಚ್ಚಿ ಹೊಲೆ, ಒಪ್ಪಚ್ಚಿ ಕುಲವೆಂದು ತೆರನರಿಯದಿಪ್ಪ ಬರಿಯ ಶುದ್ಧಶೈವವಂ ಬಿಟ್ಟು, ಬ್ರಹ್ಮ ವಿಷ್ಣು ರುದ್ರ ಮಾಹೇಶ್ವರರು ಒಂದೆಂದು ನುಡಿವ ದುಃಕರ್ಮ ಮಿಶ್ರವಂ ಬಿಟ್ಟು, ಹರನೆ ಹಿರಿಯನೆಂದು ಕಿರಿಯರೆಲ್ಲಾ ದೇವರೆಂದು ನುಡಿದು ಕಂಡ ಕಂಡವರ್ಗೆ ಹೊಡೆಗೆಡವ ವೇಶಿಯ ಸುತನಂತೆ ಸಂಕೀರ್ಣಕ್ಕೊಳಗಾದ ಸಂಕೀರ್ಣಶೈವಮಂ ನೋಡದೆ, ದೂರದಿಂ ನಮಿಸಿ ಅರ್ಪಿಸಿ ಶೇಷವರುಣಕರ್ತನಲ್ಲವೆಂದು ದೂರಸ್ತನಹ ಪೂರ್ವಶೈವಮಂ ತೊಲಗಿ, ಅಂಗದಲನವರತ ಲಿಂಗಮಂ ಧರಿಸಿರ್ದು ದೇಹೇಂದ್ರಿಯ ಮನಃ ಪ್ರಾಣ ಜ್ಞಾನ ಭಾವ ಒಮ್ಮುಖಮಂ ಮಾಡಿ, ಸದ್ಗುರುಕಾರುಣ್ಯಮಂ ಪಡೆದು, ಲಿಂಗವೇ ಪತಿ, ಗುರುವೆ ತಂದೆ, ಜಂಗಮವೇ ಲಿಂಗವೆಂದರಿದು, ದ್ರವ್ಯವೆಂಬುದು ಭೂತರೂಪು, ಪ್ರಸಾದವೆಂಬುದು ಲಿಂಗರೂಪವೆಂದು ತಿಳಿದು, ಲಿಂಗದ ಪಾದೋದಕವೇ ಲಿಂಗಕ್ಕೆ ಮಜ್ಜನವಾಗಿ ಲಿಂಗದ ಪ್ರಸಾದವೇ ಲಿಂಗಕ್ಕೆ ಆರೋಗಣೆಯಾಗಿ ಲಿಂಗದಿಂದ ನೋಡುತ್ತ ಕೇಳುತ್ತ ರುಚಿಸುತ್ತ ಮುಟ್ಟುತ್ತ ವಾಸಿಸುತ್ತ ಕೊಡುತ್ತ ಆನಂದಿಸುತ್ತ ಅಹಂ ಮಮತೆಗೆಟ್ಟು ಸಂದು ಸಂಶಯವರಿತು ಹಿಂದು ಮುಂದ ಹಾರದಿಪ್ಪುದೆ ವೀರಶೈವ. ಅದೆಂತೆಂದಡೆ: ಪಿತಾ ಗುರುಃ ಪತಿರ್ಲಿಂಗಂ, ಸ್ವಲಿಂಗಂ ಜಂಗಮಪ್ರಭುಃ ತಸ್ಮಾತ್ಸರ್ವಪ್ರಯತ್ನೇನ ತಸ್ಯೈವಾರಾಧನಂ ಕ ರು ಸ ಏವ ಸ್ಯಾತ್ಪ್ರಸಾದಸ್ತೇ ಭಕ್ತಿವಿತ್ತಸಮರ್ಪಿತಃ ತತ್ಪ್ರಸಾದಸ್ತು ಭೋಕ್ತವ್ಯಃ ಭಕ್ತೋವಿಗತಕಲ್ಮಷಃ ಎಂದುದಾಗಿ, ಇಂತಲ್ಲದಿರ್ದುದೆ ಇತರ ಶೈವ ಕಾಣಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಅಂಗದಂತೆ ಲಿಂಗ, ಲಿಂಗದಂತೆ ಅಂಗವಾದ ಬಳಿಕ ಅಂಗದಂತೆ ಲಿಂಗೈಕ್ಯ ಲಿಂಗದಂತೆ ಅಂಗೈಕ್ಯ. ಮನವೆ ಲಿಂಗ, ಲಿಂಗವೆ ಮನವಾದ ಬಳಿಕ, ಮಾತು ಮಾತುಗಳೆಲ್ಲ ಹೊಳ್ಳಾದ ಕಾರಣ ಮಾತೇ ಲಿಂಗೈಕ್ಯ :ಲಿಂಗೈಕ್ಯವೆ ಸ್ವರ! ಶಬ್ದಸಂದಣಿಗಿನ್ನು ತೆರಹುಂಟೆ? ಕಪಿಲಸಿದ್ಧಮಲ್ಲಿನಾಥಯ್ಯಾ, ಇನ್ನು ನಿಮ್ಮ ದೇವರೆಂದು ಅರಸಲುಂಟೋ ಇಲ್ಲವೋ ಎಂಬುದನು ತಿಳಿಹಿಕೊಡಾ ಅಯ್ಯಾ2
--------------
ಸಿದ್ಧರಾಮೇಶ್ವರ
ದೇವರೆಂದು ಅರ್ಚಿಸಿ ಪೂಜಿಸಿ ಭಾವಿಸಿ, ಮತ್ತೆ ತ್ರಿವಿಧವ ಮುಟ್ಟಿದರೆಂದು ಕಷ್ಟಗುಣವ ನುಡಿವ ಭಕ್ತಿಹೀನರ ಕಂಡಡೆ ಅವರನೊಚ್ಚತ ತೊಲಗಬೇಕು ಶಂಭುಜಕ್ಕೇಶ್ವರಾ.
--------------
ಸತ್ಯಕ್ಕ
ದೇವರು ದೇವರು ಎಂಬಿರಿ ದೇವರಿಗೆ ಪ್ರಳಯವುಂಟೆ ? ದೇವರು ಪ್ರಳಯವಾದಡೆ ಜಗವು ಉಳಿಯಬಲ್ಲುದೆ ? ಎಲಾ ಮರುಳಗಳಿರಾ, ಕಲ್ಲು ದೇವರೆಂಬಿರಿ, ಕಲ್ಲು ದೇವರಾದಡೆ ವಜ್ರಾಯುಧದಿಂದ ಪ್ರಳಯವಾಗದೆ ? ಕಟ್ಟಿಗೆ ದೇವರೆಂಬಿರಿ, ಕಟ್ಟಿಗೆ ದೇವರೆಂದರೆ ಅಗ್ನಿಯಿಂದ ಪ್ರಳಯವಾಗದೆ ? ಮಣ್ಣು ದೇವರೆಂಬಿರಿ, ಮಣ್ಣು ದೇವರಾದಡೆ ಜಲದಿಂದ ಪ್ರಳಯವಾಗದೆ ? ನೀರು ದೇವರೆಂಬಿರಿ, ನೀರು ದೇವರಾದಡೆ ಅಗ್ನಿಯಿಂದ ಅರತುಹೋಗದೆ ? ಅಗ್ನಿ ದೇವರೆಂಬಿರಿ, ಅಗ್ನಿ ದೇವರಾದಡೆ ಜಲದಿಂದ ಪ್ರಳಯವಾಗದೆ ? ಇಂತೀ ದೇವರೆಂದು ನಂಬಿ ಪೂಜಿಸಿದ ಜೀವಾತ್ಮರು ಇರುವೆ ಮೊದಲು ಆನೆ ಕಡೆ ಎಂಬತ್ನಾಲ್ಕುಲಕ್ಷ ಯೋನಿದ್ವಾರದಲ್ಲಿ ರಾಟಾಳ ತಿರುಗಿದಂತೆ ಜನನಮರಣಗಳಿಂದ ಎಡೆಯಾಡುತಿಪ್ಪರು ನೋಡಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯ, ಆಚಾರವಿಲ್ಲದ ಜಂಗಮದಲ್ಲಿ ಪಾದೋದಕಪ್ರಸಾದವ ಕೊಳಲಾಗದು. ಆಚಾರವಿಲ್ಲದ ಜಂಗಮ[ವ] ದೇವರೆಂದು ಭಾವಿಸಲಾಗದು. `ಆಚಾರಶೂನ್ಯಂ ಚ ಭೂತಪ್ರಾಣೀ' ಎಂದುದಾಗಿ ಆಚಾರವಿಲ್ಲದ ಅನಾಮಿಕರ ಕೈಯಲ್ಲಿ ಪಾದೋದಕ ಪ್ರಸಾದ ಉಪದೇಶವ ಕೊಂಡವಂಗೆ ಅಘನಾಸ್ತಿಯಾಗದು, ಮುಂದೆ ಅಘೋರನರಕ ತಪ್ಪದು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನಾ ಬಲ್ಲೆ ತಾಬಲ್ಲೆನೆಂಬುವರೆಲ್ಲ ಅಲ್ಲ ಅಹುದೆಂಬ ಗೆಲ್ಲ ಸೋಲದ ಮಾತ ಕಲಿತು ಆಡುವರಲ್ಲದೆ ಅದನಾರು ಮೆಚ್ಚುವರು? ಕಾಲೂರಿ ಒಂದೆರಡು ಯೋಜನ ನಡೆಯಬಹುದಲ್ಲದೆ ತಲೆಯೂರಿ ನಡೆಯಬಹುದೆ? ನೆಲೆಯರಿಯದ ಮಾತ ಹಲವ ನುಡಿದಡೇನು ಫಲ? ನೆಲಯರಿದ ಮಾತೊಂದೆ ಸಾಲದೆ? ಹಲವು ದೇವರೆಂದು ಹೊಲಬುಗೆಟ್ಟು ನುಡಿವರು. ಕುಲಸ್ವಾಮಿ ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೊಬ್ಬನೆ, ದೇವರೆಂದರಿದೆಡೆ ಸಾಲದೆ?
--------------
ಸ್ವತಂತ್ರ ಸಿದ್ಧಲಿಂಗ
ಶೈವಸಿದ್ಧಾಂತಿಗಳೆಂಬ ಅಬದ್ಧ ಭವಿಗಳ ಮುಖವ ನೋಡಲಾಗದು. ಅದೇನು ಕಾರಣವೆಂದೊಡೆ : ಸಾಂಗೋಪಾಂಗ ಶುದ್ಧಶರೀರಿಯಾಗಿ ಉನ್ನತಾಸನ ಗದ್ದುಗೆಯಲ್ಲಿ ಕುಳಿತು ಕಣ್ಣುಮುಚ್ಚಿ ಅಂತರಂಗದಲ್ಲಿ ಪರಮಾತ್ಮನ ಕಳೆಯ ಧ್ಯಾನಿಸಿ ಮನಸ್ಸಿನಲ್ಲಿ ಕಟ್ಟಿ ದೃಷ್ಟಿಗೆ ತಂದು, ಆ ದೃಷ್ಟಿಯಿಂದ ಪುಷ್ಪದಲ್ಲಿ ತುಂಬಿ ಮೃತ್ತಿಕೆ ಪಾಷಾಣಾದಿ ನಾನಾ ತರಹದ ಲಿಂಗಾಕಾರದ ಮೂರ್ತಿಯ ಸ್ಥಾಪಿಸಿ, ದೇವರೆಂದು ಭಾವಿಸಿ, ಜಲ ಗಂಧ ಅಕ್ಷತೆ ಪುಷ್ಪ ಧೂಪ ದೀಪ ನೈವೇದ್ಯ ತಾಂಬೂಲಾದಿ ಅಷ್ಟವಿಧಾರ್ಚನೆ ಷೋಡಶೋಪಚಾರಂಗಳನೆ ಮಾಡಿ, ಆ ಪೂಜಾಂತ್ಯದಲ್ಲಿ ಎನ್ನ ಮಲಿನ ದೇಹದಲ್ಲಿ ನೀನು ನಿರ್ಮಲವಾದ ವಸ್ತುವು ಇರಬೇಡ ಹೋಗೆಂದು ತನ್ನ ದೇವರ ಬಾವಿ ಕೆರೆ ಹಳ್ಳ ಕೊಳ್ಳಾದಿ ಸ್ಥಾನಂಗಳಲ್ಲಿ ಹಾಕಿ ಬಿಡುವ ಶಿವದ್ರೋಹಿಗಳಿಗೆ ಕುಂಭೀಪಾತಕ ನಾಯಕ ನರಕ ತಪ್ಪದಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ರುದ್ರನ ದೇವೆರೆಂದು ಆರಾಧಿಸಿ, ಶಿಲೆಯೊಳಗೆ ಹೋರಟೆಗೊಂಡು, ಕೆಟ್ಟರಲ್ಲಾ ಭಕ್ತಜನಂಗಳು. ವಿಷ್ಣುವ ದೇವರೆಂದು ಆರಾಧಿಸಿ, ಮರನ ಸುತ್ತಿ ಕಾಲುಗೆಟ್ಟರಲ್ಲಾ ಭೂಸುರಾದಿಗಳು. ಬ್ರಹ್ಮನ ದೇವರೆಂದು ಆರಾಧಿಸಿ, ಬೆಂಕಿಯಲ್ಲಿ ಬೆಂದಿರಲ್ಲಾ ಮತ್ರ್ಯಲೋಕದ ಮಹಾಜನಂಗಳು. ಇಂತೀ ಮೂವರು ಗಂಪಧಾರಿಗಳೆಂಬೆ ಧರೆಯೊಳಗೆ. ಹೇರಿನ ಅಕ್ಕಿ, ಲಳಿಗೆಯ ಎಣ್ಣೆ, ಹೂವು ಕಾಯಿ ಹಣ್ಣು ಮೊದಲಾದವನು, ತಪ್ಪ ಸಾಧಿಸಿ ತರಿಸಿಕೊಂಡುಂಬ ಚಿಕ್ಕಮಕ್ಕಳಿಗೆಲ್ಲಿಯದೊ ನೆಟ್ಟನೆಯ ದೇವತ್ವ? ಎನ್ನ ದೇವಂಗೆ ಇಂತಿವರಂಗ ಒಂದೂ ಇಲ್ಲ. ಕಾಲದೊಳಗಾದ ಪ್ರಳಯವಿರಹಿತ, ಕರ್ಮದೊಳಗಾದ ಚತುರ್ವಿಧರಹಿತ, ಗಂಗೆವಾಳುಕಸಮಾರುದ್ರರೊಳಗಾದ ಬಂಧನವಿರಹಿತ. ಲೀಲೆಗೆ ಹೊರಗಾದ ಸ್ವಯಂಭುವಯ್ಯಾ ಎನ್ನ ದೇವ. ಇಂತಿವರೆಲ್ಲರೂ ಪ್ರತಿಷೆ*ಯನಾರಾಧಿಸಿ ಪ್ರಸನ್ನರಾದರಯ್ಯಾ. ಇಂತೀ ಪುಣ್ಯದ ಫಲ ಎನಗೊಂದೂ ಬೇಡ. ಇದ್ದವರೆಲ್ಲ ಒಳಗಿರಲಿ, ನಾ ಹೊರಗಯ್ಯಾ. ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಅಲಸಿದೆನಲಸಿದೆ, ನಿಮ್ಮ ಕಾಷ*ದ ಸೇವೆಯನಯ್ಯಾ. ಕಾಷ*ದವನ ಕಾಷ*ವ ಮಾಡದೆ, ಎನ್ನ ಹೊರಗಿರಿಸಿ ನಿನ್ನೊಳಗಾದ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕಲ್ಲುದೇವರ ನಂಬಿದವರೆಲ್ಲ ಕಲಿಯುಗದ ಕತ್ತಲೆಯೊಳಗಾಗಿ ಕತ್ತೆಗಳಾಗಿ ಹೋದರು. ಅದೇನು ಕಾರಣವೆಂದರೆ: ತಮ್ಮ ದೇವರು ಇಕ್ಕಿದ ಓಗರವನುಣ್ಣಲೊಲ್ಲದೆ, ಒಡನೆ ಮಾತಾಡದು. ಗುಡಿಯ ಕಲ್ಲು ಮೇಲೆ ಬಿದ್ದರೆ ಒಡೆದು ಹಾಳಾಗಿ ಹೋಗುತ್ತದೆ. ಇಂತಪ್ಪ ಕಲ್ಲ ಪೂಜಿಸಿ, ಸಲ್ಲದೆ ಹೋದರು. ಅದಂತಿರಲಿ, ಮಣ್ಣ ದೇವರು ಎಂದು ಪೂಜಿಸಿ, ಮಜ್ಜನಕ್ಕೆ ನೀಡಲಮ್ಮದೆ, ಲಜ್ಜೆಗೆಟ್ಟು ನಾಯಾಗಿ ಬೊಗುಳಿ ಹೋದರು. ಆದಂತಿರಲಿ, ಮರನ ದೇವರೆಂದು ಪೂಜಿಸಿ ಧೂಪ ದೀಪವ ಮುಂದಿಡಲಮ್ಮರು. ಅದೊಂದು ವ್ಯಾಪಾರಕ್ಕೊಳಗಾಗಿ, ತಾಪತ್ರಯಕ್ಕೆ ಸಿಲ್ಕಿ ಪಾಪಿಗಳಾಗಿ ಸತ್ತುಹೋದರು. ಸಲ್ಲದು ಶಿವನಲ್ಲಿ. ಎಮ್ಮ ಭಕ್ತರಿಗೆ ಈ ಪರಿಯಲ್ಲ ಕೇಳಿರಣ್ಣಾ. ಇದೆಲ್ಲ ಪಾಪಿಗಳ ಹಾಗೆ, ಎನ್ನ ದೇವ ನಡೆವ, ನುಡಿವ, ಇಕ್ಕಿದರುಂಬ, ಕೊಟ್ಟರೆ ತಕ್ಕೊಂಬ, ಪೂಜಿಸಿದರೆ ಪೂಜೆಗೊಂಬ, ಅನೇಕ ಪೂಜೆಯಲ್ಲಿ. ತನ್ನ ನಂಬಿದ ಭಕ್ತರಿಗೆ-ಬುದ್ಧಿಯ ಹೇಳುವ, ಶುದ್ಧಾತ್ಮನ ತೋರುವ. ತಾ ಮುದಿನಲ್ಲಿ ಸಜ್ಜನ ಸದ್ಭಕ್ತರಲ್ಲಿ ಇದ್ದೂ ಇಲ್ಲದಂತಿಪ್ಪ. ಪ್ರಸಿದ್ಧ ಜಂಗಮಲಿಂಗವ ಪೂಜಿಸಿ, ಸ್ವಯಲಿಂಗಿಗಳಾದರು ಎಮ್ಮ ಶರಣರು. ಅವರು ಹೋದ ಹಾದಿಯ ನೋಡಿದರೆ, ಎನಗೊಂದು ಹಾದಿ ಸಿಕ್ಕಿತ್ತು. ಆ ಹಾದಿಗೊಂಡು ಹೋಗಿ ಅವರ ಪಾದವಕಂಡು, ಕೆಟ್ಟು ಬಟ್ಟಬಯಲಾದೆ ನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಸತ್ತರೆ ಸಂಗಾತ ಹೂಳಿಸಿಕೊಂಬ ಇಷ್ಟಲಿಂಗವ ಸಟೆಮಾಡಿ, ಮತ್ತೆ ಅನ್ಯದೈವಕ್ಕೆರಗುವ ಕತ್ತೆ ಹೊಲೆಯರು ನೀವು ಕೇಳಿರೊ, ತನ್ನ ಪುರುಷನಿರಲು ಅನ್ಯಪುರುಷನ ಕೂಡಿಹ ಸ್ತ್ರೀಗೆ ನರಕವಲ್ಲವೆ ? ಮೋಕ್ಷಾ[ರ್ಥ] ಎಂದು ಗುರುವು ಕೊಟ್ಟ ಇಷ್ಟಲಿಂಗವು ಅಂಗಕ್ಕೆ ಸಂಬಂಧಿಸಿದ ಬಳಿಕ ಹಲವು ದೇವರೆಂದು ಭಾವಿಸಿ ಪೂಜೆಯ ಮಾಡುವ ಭ್ರಷ್ಟರು ನೀವು ಕೇಳಿರೊ. ನೀವು ಮಾಡಿದ ಪೂಜೆಯು ಹಾದರಿಯ ಸ್ತ್ರೀಯಳಂತೆ ಕಾಣಿರೊ. ಕಡೆಗೆ ಅದೇ ಲಿಂಗವೆ ಮುಂದೆ ಮಾರಿಯಾಗಿ ಮೋಕ್ಷಕ್ಕೆ ದೂರಮಾಡುವದೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಏಕೋದೇವ ಶಿವನದ್ವಿತೀಯ. ಶಿವನಲ್ಲದೆ ಬೇರೆ ದೈವವಿಲ್ಲವೆಂದು ಸಾರಿ ನುಡಿವುತ್ತಿ(ವೆ), ಶ್ರುತಿ ಶಾಸ್ತ್ರ ಪುರಾಣ ಆಗಮಂಗಳೆಲ್ಲವು. ಶಿವನಲ್ಲದೆ ಬೇರೆ ದೈವವಿಲ್ಲವೆಂದು ಸಾರಲು, ಮರಳಿ ವಿಷ್ಣು ದೇವರೆಂದು ನುಡಿವುತ್ತಿಪ್ಪರು. ದೈವಕ್ಕೆ ಉತ್ಪತ್ತಿ ಸ್ಥಿತಿ ಲಯಂಗಳೆಂಬುದುಂಟೆ. ದೃಷ್ಟಾಂತರ ಜಾಯತೆ ಅಷ್ಟಮಿ ಸಾಕ್ಷಿ. ಆ ವಿಷ್ಣುವಿಂಗೆ ಲಯವುಂಟೆಂಬುದಕ್ಕೆ ಕಾಡಬೇಡನೆಚ್ಚಂಬು ಅಂಗಾಲಲ್ಲಿ ನೆಟ್ಟು ಪ್ರಾಣವ ಬಿಟ್ಟುದೇ ಸಾಕ್ಷಿ. ಅಚ್ಯುತಂಗೆ ಅನೇಕ ಭವವುಂಟೆಂಬುದಕ್ಕೆ ಮತ್ಸ್ಯ ಕೂರ್ಮ ವರಾಹವತಾರವಾದುದೇ ಸಾಕ್ಷಿ. ಆ ಹರಿ, ಹರನ ಭೃತ್ಯನೆಂಬುದಕ್ಕೆ ರಾಮೇಶ್ವರ ಆದಿಯಾದ ಪ್ರತಿಷೆ*ಗಳೇ ಸಾಕ್ಷಿ. ಇಂತಪ್ಪ ಹರಿಯನು ಹರಂಗೆ ಸರಿಯೆಂದು ನುಡಿವರು ಅಜ್ಞಾನಿಗಳು. ಆತಂಗಿಲ್ಲದ ಮಹತ್ವದ ತಾವು ನುಡಿವುತ್ತಿಹರು. ಬಲಿಯ ಮೂರಡಿ ಭೂಮಿಯ ಸ್ಥಾನವ ಬೇಡಿದಲ್ಲಿ ಪಂಚಾಶತಕೋಟಿ ಭೂಮಿ ಸಾಲದೆ ಹೋಯಿತೆಂದು ನುಡಿವುತ್ತಿಹರು. ಮಗಧನೆಂಬ ರಾಕ್ಷಸನನಟ್ಟುವಲ್ಲಿ ಅದೆಲ್ಲಿ ಬಂದಿತೊ, ಓಡುವುದಕ್ಕೆ ಭೂಮಿ. ವಿಷ್ಣುವಿನ ಹೃದಯದಲ್ಲಿ ವಿಶ್ವವೆಲ್ಲಾ ಇದ್ದೀತೆಂದು ನುಡಿವುತ್ತಿಹರು. ಆ ವಿಷ್ಣುವಿನ ಹೃದಯದಲ್ಲಿ ವಿಶ್ವವೆಲ್ಲವು ಇದ್ದರೆ, ಸೀತೆ ಹೋದಳೆಂದು ಅರಸಿ ಸೇತುವೆ ಕಟ್ಟಿ ದಣಿಯಲೇಕೊ. ವಿಷ್ಣುವಿನ ಬಾಣದ ಮೊನೆಯಲ್ಲಿ ಸಪ್ತಸಮುದ್ರಂಗಳೆಲ್ಲವೂ ಬಂದವೆಂದು ನುಡಿವುತ್ತಿಹರು. ಆ ವಿಷ್ಣುವಿನ ಬಾಣದ ಮೊನೆಯಲ್ಲಿ ಸಪ್ತಸಮುದ್ರಂಗಳೆಲ್ಲವು ಬಂದರೆ, ಕಪಿಗಳ ಕೂಡಿ ಸೇತುವೆ ಕಟ್ಟುವುದಕ್ಕೇನು ಕಾರಣ. ಇಂತಪ್ಪ ಹರಿಯನು ಹರಗೆ ಸರಿಯೆಂದು ನುಡಿವ ದ್ವಿಜರ ನುಡಿಯನು ಪ್ರಮಾಣಿಸಿದರೆ, ಅಘೋರ ನರಕದಲ್ಲಿ ಇಕ್ಕದೆ ಮಾಣ ನಿಜಗುರು ಶಾಂತಮಲ್ಲಿಕಾರ್ಜುನ.
--------------
ನಿಜಗುರು ಶಾಂತಮಲ್ಲಿಕಾರ್ಜುನ
ಬ್ರಾಹ್ಮಣದೈವವೆಂದು ಆರಾಧಿಸಿದ [ಕಾರಣ] ಗೌತಮಗೆ ಗೋವಧೆಯಾಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ಕರ್ಣನ ಕವಚ ಹೋಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ನಾಗಾರ್ಜುನನ ತಲೆ ಹೋಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ದಕ್ಷಂಗೆ ಕುರಿದಲೆಯಾಯಿತ್ತು. ವಿಷ್ಣುದೈವವೆಂದು ಆರಾಧಿಸಲು ಬಲಿಗೆ ಬಂಧನವಾಯಿತ್ತು. ವಿಷ್ಣುದೈವವೆಂದು ಆರಾಧಿಸಿದ ಕಾರಣ ಪಾಂಡವರಿಗೆ ದೇಶಾಂತರ ಯೋಗವಾಯಿತ್ತು. ವಿಷ್ಣುದೈವವೆಂದು ಆರಾಧಿಸಲು ಪರಶುರಾಮ ಸಮುದ್ರಕ್ಕೆ ಗುರಿಯಾದ. ವಿಷ್ಣುದೈವವೆಂದು ಆರಾಧಿಸಲು ವ್ಯಾಸನ ತೋಳು ಆಕಾಶಕ್ಕೆ ಹೋಯಿತ್ತು. ಈ ದೃಷ್ಟವಿದ್ದು, ಮಾಯಿರಾಣಿಯ ದೈವವೆಂದು ಆರಾಧಿಸಿದ ಕಾರಣ ತಲೆಯಲ್ಲಿ ಕೆರವ ಕಟ್ಟಿ, ಕೊರಳಲ್ಲಿ ಕವಡೆಯ ಕಟ್ಟಿ, ಬೇವನುಟ್ಟು, ಜಾವಡಿ ಅರಿಯ ಲಜ್ಜೆ ಹೋಯಿತ್ತು. ಮುಂದೆ ಭೈರವ ದೇವರೆಂದು ಆರಾಧಿಸಿದ ಕಾರಣ ಕರುಳ ಬೆರಳ ಖಂಡಿಸಿ ತುತ್ತು ತುತ್ತಿಗೆ ಅಂತರಂಗ ಬಹಿರಂಗವಾಯಿತ್ತು. ಮುಂದೆ ಜಿನನ ದೈವವೆಂದು ಆರಾಧಿಸಿದ ಕಾರಣ ಜೈನ ಮಾಡಿದ ಕರ್ಮ ನಿಷ್ಕರ್ಮವಾದುದಾಗಿ ನರರ ಹಾಡಿದಡೆ ಗತಿಯಿಲ್ಲ, ಕೇಳಿದರೆ ಗತಿಯಿಲ್ಲ ಹರ ನಿಮ್ಮ ಶರಣರ ಶ್ರೀಪಾದವೆ ಗತಿಯಾಗಿದ್ದೆ ನೋಡಾ. ಹರ ನಿಮ್ಮ ಶರಣರ ಒಲವಿಂದ ತುತ್ತು ಬುತ್ತಿಗೆ ಬೆನ್ನುಹತ್ತುವ ಮಾರಿ ಮಸಣಿ ಮೈಲಾರ ಹೊನ್ನ ಲಕ್ಷ್ಮಿಗಳು ಅರ್ಥ ಅಯುಷ್ಯವ ಕೊಡಬಲ್ಲವೆ ? ಒಡೆಯನಿಲ್ಲದ ಮನೆಯ ತುಡುಗುಣಿನಾಯಿ ಹೊಗುವಂತೆ, ಜಡದೇಹಿಗಳ ತನುವ ಕಾಡುತಿಹವೆಂದಾ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಕಲ್ಲು ದೇವರೆಂದು ಪೂಜಿಸುವರೆಲ್ಲ ಕಲ್ಲಾಗಿ ಪುಟ್ಟುವರು. ಕಟ್ಟಿಗೆ ದೇವರೆಂದು ಪೂಜಿಸುವರೆಲ್ಲ ಕಟ್ಟಿಗೆಯಾಗಿ ಪುಟ್ಟುವರು. ಮಣ್ಣುದೇವರೆಂದು ಪೂಜಿಸುವರೆಲ್ಲ ಮಣ್ಣಾಗಿ ಪುಟ್ಟುವರು. ನೀರು ದೇವರೆಂದು ಪೂಜಿಸುವರೆಲ್ಲ ನೀರಾಗಿ ಪುಟ್ಟುವರು. ಅಗ್ನಿದೇವರೆಂದು ಪೂಜಿಸುವರೆಲ್ಲರು ಅಗ್ನಿಯಾಗಿ ಪುಟ್ಟುವರು. ಇದಕ್ಕೆ ದೃಷ್ಟಾಂತ: 'ಯದ್ದøಷ್ಟಂ ತನ್ನಷ್ಟಂ ಯಥಾಭಾವಸ್ತಥಾ ಸಿದ್ಧಿಃ' ಎಂದುದಾಗಿ, ಇಂತಿವರೆಲ್ಲರು ದೇವರೆಂದು ಪೂಜಿಸುವರು ಹುಟ್ಟುಕುರುಡನು ಬೆಣ್ಣೆಯೆಂದು ನರಕವ ಭುಂಜಿಸಿದಂತಾಯಿತ್ತಯ್ಯಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ, ಒಬ್ಬನೆ ಕಾಣಿರೊ, ಇಬ್ಬರೆಂಬುದು ಹುಸಿ ನೋಡಾ ! ಕೂಡಲಸಂಗಮದೇವನಲ್ಲದಿಲ್ಲೆಂದಿತ್ತು ವೇದ.
--------------
ಬಸವಣ್ಣ
ಹರಿ ಬ್ರಹ್ಮ ಕಾಲ ಕಾಮ ದಕ್ಷಾದಿಗಳ ದೇವರೆಂದು ಗಟ್ಟಿಯತನದೊಳು ಬೊಗಳುವ ಮಿಟ್ಟೆಯಭಂಡರು ನೀವು ಕೇಳಿರೊ. ಅವರ ಹುಟ್ಟನರಿಯಿರಿ, ಹೊಂದನರಿಯಿರಿ. ಅವರ ಹುಟ್ಟು ಕೇಳಿರಣ್ಣಾ ! ಏನೇನೂ ಇಲ್ಲದಂದು, ಶೂನ್ಯ ನಿಃಶೂನ್ಯಕ್ಕೆ ನಿಲುಕದ ಘನವು ಕೋಟಿಚಂದ್ರಸೂರ್ಯರ ಬೆಳಗಾಗಿ ಬೆಳಗುತ್ತಿಪ್ಪಲ್ಲಿ , ಒಂಕಾರವೆಂಬ ನಿರಕ್ಷರ ಹುಟ್ಟಿತ್ತು . ಒಂಕಾರದಿಂದ ನಕಾರ, ಮಕಾರ, ಶಿಕಾರ, ವಕಾರ, ಯಕಾರವೆಂಬ ಪಂಚಾಕ್ಷರ ಹುಟ್ಟಿದವು. ಆ ಪಂಚಾಕ್ಷರಿಗೆ ಪರಾಶಕ್ತಿ ರೂಪಾದಳು. ಆ ಪಂಚಾಕ್ಷರಕ್ಕೂ ಪರಾಶಕ್ತಿಗೂ ಇಬ್ಬರಿಗೂ ಸದಾಶಿವನಾದ. ಆ ಸದಾಶಿವಂಗೆ ಜ್ಞಾನಶಕ್ತಿಯಾದಳು. ಆ ಸದಾಶಿವಂಗೆ ಜ್ಞಾನಶಕ್ತಿಯರಿಬ್ಬರಿಗೂ ಶಿವನಾದ. ಆ ಶಿವಂಗೆ ಇಚ್ಛಾಶಕ್ತಿಯಾದಳು. ಆ ಶಿವಂಗೂ ಇಚ್ಛಾಶಕ್ತಿಗೂ ಇಬ್ಬರಿಗೂ ರುದ್ರನಾದ. ಆ ರುದ್ರಂಗೆ ಕ್ರಿಯಾಶಕ್ತಿಯಾದಳು. ಆ ರುದ್ರಂಗೂ ಕ್ರಿಯಾಶಕ್ತಿಗೂ ಇಬ್ಬರಿಗೂ ವಿಷ್ಣುವಾದ. ಆ ವಿಷ್ಣು ಪಡೆದ ಸತಿ ಲಕ್ಷಿ ್ಮೀಯು. ಆ ವಿಷ್ಣುವಿಂಗೂ ಮಹಾಲಕ್ಷಿ ್ಮೀಗೂ ಇವರಿಬ್ಬರಿಗೂ ಬ್ರಹ್ಮನಾದ. ಆ ಬ್ರಹ್ಮಂಗೆ ಸರಸ್ವತಿಯ ಕೊಟ್ಟು, ಬರೆವ ಸೇವೆಯ ಕೊಟ್ಟ. ಬ್ರಹ್ಮಂಗೂ ಸರಸ್ವತಿಗೂ ಇಬ್ಬರಿಗೂ ಮನುಮುನಿದೇವರ್ಕಳಾದರು. ಆ ಮನುಮುನಿದೇವರ್ಕಳಿಗೆ ಸಕಲ ಸಚರಾಚರವಾಯಿತ್ತು . ಇಹಲೋಕಕ್ಕೆ ನರರು ಆಗಬೇಕೆಂದು ಬ್ರಹ್ಮನು ಹೋಗಿ, ಹರನಿಗೆ ಬಿನ್ನಹಂ ಮಾಡಲು, ಹರನು ಪರಮಜ್ಞಾನದಿಂದ ನೋಡಿ, ತನ್ನ ಶರೀರದಿಂದಲೆ ನಾಲ್ಕು ಜಾತಿಯ ಪುಟ್ಟಿಸಿ ಇಹಲೋಕಕ್ಕೆ ಕಳುಹಿಸಿದನು. ಆ ಶಿವನ ಶರೀರದಲ್ಲಿ ಪುಟ್ಟಿದವರು ಶಿವನನ್ನೇ ಅರ್ಚಿಸಿ, ಶಿವನನ್ನೇ ಪೂಜಿಸಿ, ಶಿವನನ್ನೇ ಭಾವಿಸಿ, ಶಿವನೊಳಗಾದರು. ಅದರಿಂದಾದ ಭವಬಾಧೆಗಳು ತಾವು ತಮ್ಮ ಹುಟ್ಟನರಿಯದೆ, ಹುಟ್ಟಿಸುವಾತ ಬ್ರಹ್ಮ , ರಕ್ಷಿಸುವಾತ ವಿಷ್ಣು , ಶಿಕ್ಷಿಸುವಾತ ರುದ್ರನೆಂದು ಹೇಳಿದರು. ಈ ಭ್ರಷ್ಟರ ಮಾತ ಕೇಳಿ ಕೆಟ್ಟಿತ್ತು ಜಗವೆಲ್ಲ . ಆಗ ಶಿವನು ಕೊಟ್ಟು ಕಳುಹಿದ ಮಾಯೆಗೆ ಮರವೆಂಬ ಪಾಶ. ಅವಳು ಕಟ್ಟಿ ಕೆಡಹಿದಳು ಮೂರುಜಗವೆಲ್ಲವನು. ಇವಳ ಕಟ್ಟಿಗೊಳಗಾದ ಭ್ರಷ್ಟರೆತ್ತಬಲ್ಲರೋ ನಿಮ್ಮ ಶರಣರ ಸುದ್ದಿಯ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?
--------------
ಹಡಪದ ಅಪ್ಪಣ್ಣ
ಇನ್ನಷ್ಟು ... -->