ಅಥವಾ

ಒಟ್ಟು 47 ಕಡೆಗಳಲ್ಲಿ , 14 ವಚನಕಾರರು , 22 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಶಿವಲೋಕಕ್ಕೆ ಸರಿ ಬೇರೆ ಲೋಕವಿಲ್ಲ, ಶಿವಮಂತ್ರಕ್ಕೆ ಸರಿ ಬೇರೆ ಮಂತ್ರವಿಲ್ಲ. ಜಗಕ್ಕೆ ಇಕ್ಕಿದೆ ಮುಂಡಿಗೆಯನೆತ್ತಿಕೊಳ್ಳಿ; ಕೂಡಲಸಂಗಯ್ಯನೊಬ್ಬನೆ ದೈವವೆಂದು.
--------------
ಬಸವಣ್ಣ
ಸೋಮವಾರ ಮಂಗಳವಾರ ಹುಣ್ಣಿಮೆ ಸಂಕ್ರಾಂತಿ ಶಿವರಾತ್ರಿ_ ಮೊದಲಾದ ತಿಥಿವಾರಂಗಳಲ್ಲಿ ಏಕಭುಕ್ತೋಪವಾಸಿಯಾಗಿ ಆ ಕ್ಷುದ್ರ ತಿಥಿಗಳಲ್ಲಿ, ಮಾಡಿದ ನೀಚೋಚ್ಛಿಷ್ಟವಂ ತಂದು ತನ್ನ ಕರಸ್ಥಲದ ಇಷ್ಟಲಿಂಗಕ್ಕೆ ಕೊಟ್ಟು ಕೊಂಡು ಭಕ್ತನೆನಿಸಿಕೊಂಡೆನೆಂಬ ಅನಾಚಾರಿಯ ಮುಖವ ನೋಡಲಾಗದು ನೋಡಲಾಗದು. ಅದೇನು ಕಾರಣವೆಂದಡೆ: ದಿನ ಶ್ರೇಷ್ಠವೊ ? ಲಿಂಗ ಶ್ರೇಷ್ಠವೊ ? ದಿನ ಶ್ರೇಷ್ಠವೆಂದು ಮಾಡುವ ದುರಾಚಾರಿಯ ಮುಖವ ನೋಡಲಾಗದು, ನೋಡಲಾಗದು, ಅದೆಂತೆಂದಡೆ: ಆವ ದಿನ ಶ್ರೇಷ್ಠವೆಂದು ದಿನವೆ ದೈವವೆಂದು ಮಾಡುವನಾಗಿ, ಅವನು ದಿನದ ಭಕ್ತನು. ಅವನಂತಲ್ಲ ಕೇಳಿರಣ್ಣ ಸದ್ಭಕ್ತನು_ಲಿಂಗವೆ ಘನವೆಂದು ಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ದೈವವೆಂದು ಮಾಡುವನಾಗಿ ಆತ ಲಿಂಗಭಕ್ತನು. ಈ ಲಿಂಗಭಕ್ತಂಗೆ ದಿನದ ಭಕ್ತನ ತಂದು ಸರಿಯೆಂದು ಹೋಲಿಸಿ ನುಡಿವಂಗೆ, ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಅವ ಭಕ್ತನಲ್ಲ, ಅವಂಗೆ ಅಘೋರನರಕ. ಭವಿದಿನ_ತಿಥಿ_ವಾರಂಗಳಲ್ಲಿ ಕೂರ್ತುಮಾಡುವಾತ ಭಕ್ತನಲ್ಲ. ಅಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವಾತ ಜಂಗಮವಲ್ಲ. ಈ ಉಭಯರನು ಕೂಡಲಚೆನ್ನಸಂಗಯ್ಯ ಕುಂಭೀಪಾತಕ ನಾಯಕನರಕದಲ್ಲಿಕ್ಕುವನು
--------------
ಚನ್ನಬಸವಣ್ಣ
ಸುಖಕ್ಕೆ ದೈವವೆಂದು, ಸುಖಕ್ಕೆ ವಿದ್ಥಿಲಿಪಿಯೆಂದು, ಸುಖಕ್ಕೆ ಪುಣ್ಯವೆಂದು, ಸುಖಕ್ಕೆ ಪ್ರಾರಬ್ಧವೆಂದು, ನುಡಿವರಯ್ಯಾ ಸಿದ್ಧಾಂತಿಗಳು. ಸುಖವೆ ದೈವವೆನಲಾಗಿ ಮಾಡುವ ಕ್ರಿಯೆಯಲ್ಲರಿಯಬಂದಿತ್ತು. ಸುಖವು ದೈವವಲ್ಲ; ದೈವವದು ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಕೂಡುವ ಕೂಟವು.
--------------
ಸಿದ್ಧರಾಮೇಶ್ವರ
ಆಗಮಪುರುಷರಿರಾ, ನಿಮ್ಮ ಆಗಮ ವಾಯವಾಗಿ ಹೋಯಿತ್ತಲ್ಲಾ. ವಿದ್ಯಾಪುರುಷರಿರಾ ನಿಮ್ಮ ವಿದ್ಯೆ ಅವಿದ್ಯೆಯಾಗಿ ಹೋದಲ್ಲಿ, ಬರುಮುಖರಾಗಿ ಇದ್ದಿರಲ್ಲಾ. ವೇದಪುರುಷರಿರಾ ನಿಮ್ಮ ವೇದ ಹೊಲಬುದಪ್ಪಿ ಹೋದಲ್ಲಿ, ವೇದವೇ ದೈವವೆಂದು ಕೆಟ್ಟಿರಲ್ಲಾ. ಪುರಾಣಪುರುಷರಿರಾ ನಿಮ್ಮ ಪುರಾಣ ವಿಚಾರಭ್ರಷ್ಟವಾಗಿ ಹೋದಲ್ಲಿ, ನೀವು ಒಡನೆ ಭ್ರಷ್ಟರಾಗಿ ಹೋದಿರಲ್ಲಾ. ಶಾಸ್ತ್ರಪುರುಷರಿರಾ, ನಿಮ್ಮ ಶಾಸ್ತ್ರದ ಮಹಾಪಥ ಹೊನಲಲ್ಲಿ ಹೋದಲ್ಲಿ ಭಕ್ತದೇಹಿಕದೇವನೆಂದರಿಯದೆ ಕೆಟ್ಟಿರಲ್ಲಾ. `ಯತ್ರ ಶಿವಸ್ತತ್ರ ಮಾಹೇಶ್ವರ'ನೆಂದು ಹೇಳಿತ್ತು ಮುನ್ನ, ಅಂತು ಭಕ್ತ, ನಿತ್ಯ ಸತ್ಯ ಸನ್ನಹಿತ ಗುಹೇಶ್ವರಾ_ನಿಮ್ಮ ಶರಣ.
--------------
ಅಲ್ಲಮಪ್ರಭುದೇವರು
ಮಡಕೆ ದೈವ, ಮೊರ ದೈವ, ಬೀದಿಯ ಕಲ್ಲು ದೈವ, ಹಣಿಗೆ ದೈವ, ಬಿಲ್ಲನಾರಿ ದೈವ, ಕಾಣಿರೊ ! ಕೊಳಗ ದೈವ, ಗಿಣ್ಣಿಲು ದೈವ, ಕಾಣಿರೊ ! ದೈವ ದೈವವೆಂದು ಕಾಲಿಡಲಿಂಬಿಲ್ಲ, ದೈವನೊಬ್ಬನೆ ಕೂಡಲಸಂಗಮದೇವ.
--------------
ಬಸವಣ್ಣ
ತಂದೆಯ ವಿಕಾರದಿಂದ ತಾಯಿಯ ಬಸುರಲ್ಲಿ ಬಂದು, ತಂದೆಯದು ಒಂದು ದಿನದ ಶುಕ್ಲ, ತಾಯಿಯದು ಒಂಬತ್ತು ತಿಂಗಳದ ಶೋಣಿತವು ಕೂಡಿ, ಗಟ್ಟಿಗೊಂಡು ಪಿಂಡವಾದ ಈ ಶರೀರದ ಕಷ್ಟ ಎಷ್ಟಂತ್ಹೇಳಲಿ, ಆ ತಾಯಿಯ ಉದರದಲ್ಲಿರ್ದ ಆ ಪರಿಯೆಂತೆಂದರೆ : ಕದ್ದ ಕಳ್ಳನ ಹೆಡಗುಡಿಯಕಟ್ಟಿ ಹೊಗಸಿದ ಸೆರೆಮನೆಗಿಂತ ಸಹಸ್ರ ಇಮ್ಮಡಿ ಉಪದ್ರವಾಯಿತು. ಎಡಬಲ ಮೂತ್ರದ ಹಡಕಿಯ ಬಾಧೆ, ನಡುವೆ ಕಡಿವ ಜಂತುಗಳ ಬಾಧೆ, ಕುದಿವ ಜಠರಾಗ್ನಿಯ ಬಾಧೆ, ಏರಿಳಿವ ಶ್ವಾಸಮಾರುತನ ಬಾಧೆ, ಹೆತ್ತವ್ವ ನುಂಗಿದ ತುತ್ತು ಅಳನೆತ್ತಿಗೆ ತಗಲಲು ಹತ್ತುಸಾವಿರ ಸಿಡಿಲು ಹೊಡೆದಂತಾಯಿತು. ಮೇಲೆ ಕುಡಿವ ನೀರಿನಿಂದಾದ ಸಂಕಟ ಹೇಳಲಳವಲ್ಲ. ಆ ತಾಯಿ ನಡಿವ ನುಡಿವ ಆಡುವ ಹಾಡುವ ಓಡುವ ಕೂಡ್ರುವ ಆಕಳಿಸುವ ಮಲಗುವ ಏಳುವ ಬೀಳುವ ಮೈಮುರಿಯುವ ಇಂತು ಅನಂತ ಬಾಧೆಯೊಳಗೆ ಸಾಯದ ಕಾರಣವೇನು ? ಕರ್ಮನಿವೃತ್ತಿ ಇಲ್ಲದಾಗಿ. ಇಂತು ದುಃಖದಲ್ಲಿ ಒಂಬತ್ತುತಿಂಗಳು ತುಂಬಿ ಸರ್ವ ಅವಯವಂಗಳ ಬಲಿದು ಎಚ್ಚರಹುಟ್ಟಿ ಜಾತಿಸ್ಮರತ್ವವ ತಿಳಿದು, ಕೆಟ್ಟೆ ಕೆಟ್ಟೆನೆಂದು ತನ್ನ ಮುನ್ನಿನ ಕರ್ಮಕ್ಕೆ ನಡುನಡುಗಿ ಕಡೆಗಾಣುವ ಪರಿಯೆಂತೆಂದು ಚಿಂತಿಸಿ, ಸರ್ವರಿಗೆ ಶಿವನೇ ದೈವವೆಂದು ಸರ್ವರ ಪಾಪಪೊರೆವಾತನೆಂದು ತಿಳಿದು, ಈ ಭವಬಾಧೆ ಬಿಡಿಸಿಕೊಳ್ಳುವುದಕ್ಕೆ ಶಿವಧೋ ಶಿವಧೋ ಶಿವಧೋ ಎಂದು ಮೊರೆಯಿಡುವ ಸಮಯಕ್ಕೆ ವಿಷ್ಣು ಪ್ರಸೂತಿಯ ಗಾಳಿಬೀಸಲು ತಲೆಮೇಲಾಗಿದ್ದ ಶಿಶುವು, ಅಗಸ ಅರವಿಯ ಹಿಂಡಿದಂತೆ, ಹೆಡಕ್ಹಿಡಿದು ಮುರಿದೊತ್ತಿ ತಲೆಕೆಳಗೆ ಮಾಡಿ ಯೋನಿದ್ವಾರದಾ ಹೊರಯಕ್ಕೆ ನೂಕಲು, ಅಕ್ಕಸಾಲಿಗನು ಕಂಬೆಚ್ಚಿನಲ್ಲಿಕ್ಕಿ ತೆಗೆದ ಚಿನ್ನದ ಸಲಾಕೆಯಂತಾಯಿತಲ್ಲಾ. ಮುಂದೆ ಭೂಸ್ಪರ್ಶನದಿಂದೆ ಹಿಂದಿನ ಜಾತಿಸ್ಮರತ್ವವ ಮರೆತು, ತನ್ನ ಮಲಮೂತ್ರದಲ್ಲಿ ತಾನೆ ಹೊರಳ್ಯಾಡಿ, ಅನಂತದುಃಖವಂ ಬಡೆದು, ಬಾಲತ್ವನೀಗಿ ಯವ್ವನಬರಲು, ತಾನು ಹ್ಯಾಂಗಾದೆನೆಂದು ತಿಳಿಯದೆ ತಾ ಹಿಂದೆ ಬಂದ ಮೂತ್ರದ ಕುಣಿಗೆ ಮನವಿಟ್ಟು ಬಾಯಿದೆರೆದು ಕುದಿಕುದಿದು ಕಿಸುಕುಳದ ಕೀವು ರಕ್ತವೊಸರುವ ಹಸಿ ಘಾಯಿ ಹಳದೊಗಲಿಗೆ ಸೋತು ಮುಪ್ಪಾಗಿ ಕೆಮ್ಮು ಕ್ಯಾಕರಿಕೆ ವಾತ ಪಿತ್ಥ ಶ್ಲೇಷ್ಮಾದಿ ಅನಂತ ರೋಗಾದಿಗಳಿಂದ ಸತ್ತು ಸತ್ತು ಹೋಯಿತು ಅನಂತಕಾಲ ಅನಂತಜನ್ಮ, ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಬ್ರಾಹ್ಮಣದೈವವೆಂದು ಆರಾಧಿಸಿದ [ಕಾರಣ] ಗೌತಮಗೆ ಗೋವಧೆಯಾಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ಕರ್ಣನ ಕವಚ ಹೋಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ನಾಗಾರ್ಜುನನ ತಲೆ ಹೋಯಿತ್ತು. ಬ್ರಾಹ್ಮಣದೈವವೆಂದು ಆರಾಧಿಸಿದ ಕಾರಣ ದಕ್ಷಂಗೆ ಕುರಿದಲೆಯಾಯಿತ್ತು. ವಿಷ್ಣುದೈವವೆಂದು ಆರಾಧಿಸಲು ಬಲಿಗೆ ಬಂಧನವಾಯಿತ್ತು. ವಿಷ್ಣುದೈವವೆಂದು ಆರಾಧಿಸಿದ ಕಾರಣ ಪಾಂಡವರಿಗೆ ದೇಶಾಂತರ ಯೋಗವಾಯಿತ್ತು. ವಿಷ್ಣುದೈವವೆಂದು ಆರಾಧಿಸಲು ಪರಶುರಾಮ ಸಮುದ್ರಕ್ಕೆ ಗುರಿಯಾದ. ವಿಷ್ಣುದೈವವೆಂದು ಆರಾಧಿಸಲು ವ್ಯಾಸನ ತೋಳು ಆಕಾಶಕ್ಕೆ ಹೋಯಿತ್ತು. ಈ ದೃಷ್ಟವಿದ್ದು, ಮಾಯಿರಾಣಿಯ ದೈವವೆಂದು ಆರಾಧಿಸಿದ ಕಾರಣ ತಲೆಯಲ್ಲಿ ಕೆರವ ಕಟ್ಟಿ, ಕೊರಳಲ್ಲಿ ಕವಡೆಯ ಕಟ್ಟಿ, ಬೇವನುಟ್ಟು, ಜಾವಡಿ ಅರಿಯ ಲಜ್ಜೆ ಹೋಯಿತ್ತು. ಮುಂದೆ ಭೈರವ ದೇವರೆಂದು ಆರಾಧಿಸಿದ ಕಾರಣ ಕರುಳ ಬೆರಳ ಖಂಡಿಸಿ ತುತ್ತು ತುತ್ತಿಗೆ ಅಂತರಂಗ ಬಹಿರಂಗವಾಯಿತ್ತು. ಮುಂದೆ ಜಿನನ ದೈವವೆಂದು ಆರಾಧಿಸಿದ ಕಾರಣ ಜೈನ ಮಾಡಿದ ಕರ್ಮ ನಿಷ್ಕರ್ಮವಾದುದಾಗಿ ನರರ ಹಾಡಿದಡೆ ಗತಿಯಿಲ್ಲ, ಕೇಳಿದರೆ ಗತಿಯಿಲ್ಲ ಹರ ನಿಮ್ಮ ಶರಣರ ಶ್ರೀಪಾದವೆ ಗತಿಯಾಗಿದ್ದೆ ನೋಡಾ. ಹರ ನಿಮ್ಮ ಶರಣರ ಒಲವಿಂದ ತುತ್ತು ಬುತ್ತಿಗೆ ಬೆನ್ನುಹತ್ತುವ ಮಾರಿ ಮಸಣಿ ಮೈಲಾರ ಹೊನ್ನ ಲಕ್ಷ್ಮಿಗಳು ಅರ್ಥ ಅಯುಷ್ಯವ ಕೊಡಬಲ್ಲವೆ ? ಒಡೆಯನಿಲ್ಲದ ಮನೆಯ ತುಡುಗುಣಿನಾಯಿ ಹೊಗುವಂತೆ, ಜಡದೇಹಿಗಳ ತನುವ ಕಾಡುತಿಹವೆಂದಾ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ವ್ಯಾಸಾದಿಗಳಂತೆ ಶ್ವಾನಜ್ಞಾನಿಗಳಪ್ಪರೆ ಸತ್ಯಶುದ್ಧಶರಣರು ? `ನ ದೇವಃ ಕೇಶವಾತ್ಪರಂ' ಎಂದ ವ್ಯಾಸ, ತನ್ನ ತೋಳುಗಳನೆರಡನು ಹೋಗಲಾಡನೆ ? ಹಿಡಿಯರೆ ಅಂದು ಆಕಾಶಗಣಂಗಳು ? ಮರಳಿ ಈಶ್ವರನಲ್ಲದೆ ದೈವವಿಲ್ಲೆಂದು ಶ್ರುತ್ಯರ್ಥವನರಿದು ದೇವಾರ್ಚನೆಯಂ ಮಾಡಲಾಗಿ ಆ ವ್ಯಾಸನ ಎರಡು ಕರಂಗಳು ಬಂದು, ಅಶೇಷವಹಂತಹ ಚರ್ಮ ಈಶ್ವರನ ಆಲಯದ ಮುಂದೆ ಧ್ವಜಪತಾಕೆಗಳಾಗದೆ ? ಈರೇಳು ಲೋಕವು ಅರಿಯೆ. ಅನಂತಪುರಾಣಾಗಮಗಳಲ್ಲಿ ಕೇಳಿರೆ: ಈಶ್ವರಾರ್ಚನೆಯ ಮಾಡಿ ಮರಳಿ ವಿತಥವಾಗಿ ಪರದಾರಕಿಚ್ಚೈಸಿದಡೆ ಇವಂಗಿದೆ ಪ್ರಿಯವೆಂದು ಆ ಇಂದ್ರನ ಮೈಯೆಲ್ಲಾ ಅನಂಗನಹಂತಹ ಅಂಗವಾಗದೆ ? ಈರೇಳು ಭುವನವರಿಯೆ. ಮರಳಿ ಈಶ್ವರಾರ್ಚನೆಯ ಮಾಡಲು ಆ ಅಂಗದ ಯೋನಿ[ಕೂ]ಪೆಲ್ಲಾ ನಯನಂಗಳಾಗವೆ ಇಂದ್ರಂಗೆ ? ಇದನರಿದು ಶಿವಾರ್ಚನೆಯಂ ಮಾಡಿ ಶಿವನವರಿಗೆ ಧನಸಹಿತ ತ್ರಿವಿಧವ ನಿವೇದಿಸುವುದು ಶಿವಾಚಾರ ಕೇಳಿರಣ್ಣಾ. ಅರಿದರಿದು ಬರಿದೊರೆ ಹೋಗಬೇಡ. ಋಷಿಗಳ ಶಿವಾರ್ಚನೆಯ ವಿಶೇಷವಹಂತಹ ಫಲವ ಕೇಳಿರಣ್ಣಾ: ಕೀಳುಗುಲದ ಋಷಿಗಳ ಕುಲನಾಮಂಗಳ ತೊಡೆದು ಮೇಲುಗುಲನಾಮವ ಕೇಳಿರಣ್ಣಾ. ಅದು ಹೇಗೆಂದಡೆ: ಮುಖದಿಂದುತ್ಪತ್ಯವಾದ ಬ್ರಾಹ್ಮಣನು ಆ ಋಷಿಗಳ ಶಾಖೆಯಾದನು, ಅವರ ಗೋತ್ರವಾದನು. ಶಿವಾಚಾರ ವಿಶೇಷವೊ ? ಕುಲ ವಿಶೇಷವೊ ? ಹೇಳಿರಣ್ಣಾ. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬ ಕ್ರೂರಹೃದಯರ ಮಾತ ಕೇಳಲಾಗದು. ಹೋಹೋ ಶಿವನ ಮುಖದಿಂದ ಹುಟ್ಟಿ ಉತ್ತಮವಹಂತಹ ಬ್ರಾಹ್ಮಣಧರ್ಮದಲ್ಲಿ ಜನಿಸಿದಂತಹ ವರ್ಣಿಗಳು ಕ್ಷತ್ರಿಯನ ಭಜಿಸ ಹೇಳಿತ್ತೆ ಈ ವೇದ ? `ಶಿವ ಏಕೋ ಧ್ಯೇಯಃ ಶಿವಂಕರಃ ಸರ್ವಮನ್ಯತ್ಪರಿತ್ಯಜೇತ್' ಎಂದುದಾಗಿ_ ಶಿವನನೆ ಧ್ಯಾನಿಸಿ, ಇತರ ದೇವತೆಗಳ ಬಿಡಹೇಳಿತ್ತಲ್ಲವೆ ? ಅದಂತಿರಲಿ, ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಸತ್ತ ಕಪಿಲೆಯ ಕಡಿದು ಹಂಚಿ ತಿನ್ನ ಹೇಳಿತ್ತೆ ವೇದ ? ಆಗದು ಅವದಿರ ಸಂಗ. ಅಧಮರ ವರ್ಣಾಶ್ರಮಹೀನರ ಕರ್ಮವ ಕಳೆದೆಹೆವೆಂದು ದತ್ತಪುತ್ರರಾಗಿ ಹೊರಸಿ[ನಡಿ]ಯಲಿ ನುಸುಳ ಹೇಳಿತ್ತೇ ಆ ವೇದ ? ಭುಂಜಿಸಿ ಮುಕ್ತಿಯನಿತ್ತಿಹೆವೆಂದಡೆ ಅದಂತಿರಲಿ, ಹಲ ಕೆಲ ಕಾಲ ವಂದಿಸಿದ ಗೌತಮಂಗೆ ಬಾರದೆ ಅಂದು ಗೋವಧೆ ? ಅದಂತಿರಲಿ, ಬ್ರಾಹ್ಮಣರೆ ದೈವವೆಂದು ದಾನಾದಿಗಳ ಮಾಡಿದ ಕರ್ಣನ ಶಿರಕವಚ ಹೋಗದೆ ಜಗವರಿಯೆ ? ವಿಷ್ಣುದೈವವೆಂದರ್ಚಿಸಿದ ಬಲಿ ಬಂಧನಕ್ಕೆ ಬಾರನೆ ಮೂಜಗವರಿಯೆ ? ಶಿಬಿಯ ಮಾಂಸವ ಕೊಂಡು ಇತ್ತ ಮುಕ್ತಿಯ ಕೇಳಿರಣ್ಣಾ. ಅವಂಗೆ ಬಂದ ವಿಧಿಯ ಹೇಳಲಾಗದು. ಅದಂತಿರಲಿ, ಶಿವನ ಭಕ್ತರಿಗೆ ಪರಮಾಣುವಿನಷ್ಟು ಕಾಂಚನವನೀಯೆ ಅಣಿಮಾದ್ಯಷ್ಟಮಹದೈಶ್ವರ್ಯವನೀವರು, ಮೇಲೆ ಮುಕ್ತಿಯಹುದು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವ ಸಾಯುಜ್ಯಮಾಪ್ನುಯಾತ್ ಎಂದುದಾಗಿ, ಅದಲ್ಲದೆ ಮತ್ತೆ ದಾನಪರಿಗ್ರಹಂಗಳಂ ಕೊಂಡ ಕೆಲಬರ ಮುಕ್ತರ ಮಾಡಿ ಶಿವಲೋಕಕ್ಕೆ ಕೊಂಡೊಯ್ದುದುಂಟಾದಡೆ ಹೇಳಿರಣ್ಣಾ ? ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ನ ಸಂಶಯಃ ಇದು ಕಾರಣ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನ ಶರಣಮಹಾತ್ಮೆಯನ್ನು ಯಜುರ್ವೇದ ಸಾಕ್ಷಿಯಾಗಿ ಪೇಳುವೆ ಕಾಶಿಯ ಕಾಂಡದಲ್ಲಿ.
--------------
ಉರಿಲಿಂಗಪೆದ್ದಿ
ವೇದ ದೈವವೆಂದು ನುಡಿವರು, ಶಾಸ್ತ್ರ ದೈವವೆಂದು ನುಡಿವರು, ಪುರಾಣ ದೈವವೆಂದು ನುಡಿವರು, ಕಲ್ಲು ದೈವವೆಂದು ನುಡಿವರು, ಕಾಷ* ದೈವವೆಂದು ನುಡಿವರು, ಪಂಚಲೋಹ ದೈವವೆಂದು ನುಡಿವರು, ಇವರೆಲ್ಲ ಸಕಲದಲಾದ ಸಂದೇಹವನೆ ಪೂಜಿಸಿ ಸತ್ತು ಹೋದರಲ್ಲಾ ! ಸಮಸ್ತ ಪ್ರಾಣಿಗಳೂ_ತಾಯನರಿಯದ ತರ್ಕಿಗಳು, ತಂದೆಯನರಿಯದ ಸಂದೇಹಿಗಳು. ತನು ಪೃಥ್ವಿಯಿಂದಲಾಯಿತ್ತು ಮನ ವಾಯುವಿನಿಂದಲಾಯಿತ್ತು. ಕಲ್ಲು ಕಾಷ* ಸಕಲ_ನಿಷ್ಕಲದಿಂದಲಾಯಿತ್ತು. ವಾಯುವಾಧಾರದ ಪವನಸಂಯೋಗದ ಅನಾಹತ ಚಕ್ರದಿಂದ ಮೇಲಣ ಆಜ್ಞಾಚಕ್ರದಲ್ಲಿ ನಿಂದು; ಅನಂತಕೋಟಿಬ್ರಹ್ಮಾಂಡಗಳ ಮೆಟ್ಟಿ_ ಕಾಯದ ಕಣ್ಣ ಮುಚ್ಚಿ, ಜ್ಞಾನದ ಕಣ್ಣ ತೆರೆದು ನೋಡಲ್ಕೆ, ಅಲ್ಲಿ ಒಂದು ನಿರಾಕಾರ ಉಂಟು. ಆ ನಿರಾಕಾರದಲ್ಲಿ ನಿಂದು ನಿರ್ಣಯಿಸಿ ನೋಡಲ್ಕೆ, ಅಲ್ಲಿ ಒಂದು ನಿಶ್ಶೂನ್ಯವುಂಟು. ಆ ನಿಶ್ಶೂನ್ಯದಲ್ಲಿ ನಿಂದು ನಿಶ್ಚಯಿಸಿ ನೋಡಲ್ಕೆ, ಕತ್ತಲೆಯಲ್ಲ ಬೆಳಗಲ್ಲ ಬಚ್ಚಬರಿಯ ಬಯಲು ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ಬ್ರಾಹ್ಮಣನೆ ದೈವನೆಂದು ನಂಬಿದ ಕಾರಣ ಗೌತಮಮುನಿಗೆ ಗೋವೇಧೆಯಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಬಲಿಗೆ ಬಂಧನವಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಕರ್ಣನ ಕವಚ ಹೋಯಿತ್ತು ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ದಕ್ಷಂಗೆ ಕುರಿದಲೆಯಾಯಿತ್ತು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ಪರಶುರಾಮ ಸಮುದ್ರಕ್ಕೆ ಗುರಿಯಾದನು. ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ ನಾಗಾರ್ಜುನನ ತಲೆ ಹೋಯಿತ್ತು. ದೇವಾ, ಭಕ್ತನೆಂದು ನಂಬಿದ ಕಾರಣ ನಮ್ಮ ಕೂಡಲಸಂಗನ ಶರಣರು ಕೈಲಾಸವಾಸಿಗಳಾದರು.
--------------
ಬಸವಣ್ಣ
ಕೆರೆ ತೊರೆ ಬಟ್ಟೆ ಬಾಗಿಲಲ್ಲಿ ಪೂಜಿಸಿಕೊಂಬುವ ದೈವವೆಂದು ಪ್ರಮಾಣಿಸುವಲ್ಲಿ ತಮ್ಮ ಮನಕ್ಕೆ ಸಂದೇಹವಂ ಬಿಡಿಸಿದೆವೆಂದು ತಮ ತಮಗೆ ಹಿಂಗದ ದೈವವೆಂದು ನಿಂದು ಹೋರಲಾಗಿ ಕೊಂದನೆ ಶಿವನು? ಅವರಂಗದ ಪ್ರಮಾಣು ಇದಕ್ಕೆ ಕೊಂದಾಡಲೇತಕ್ಕೆ? ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಭುವನಸ್ಯ ಪಿತರಂಗರ್ಭೇ ರಾಭೇ ರುದ್ರಂ ಧೀವಾರ್ದಯಾ ರುದ್ರವುವುಕಾರ ಬ್ರಹ್ಮಂ ತದೃಷ್ಟಮಜರಂ ಸುಷುಮ್ನ ದ್ರುಗ್ಯವೇಮಕಮಪಿವಾಸಃ|| ಎಂಬ ಶ್ರುತಿಯ ವಿಚಾರಿಸಲರಿಯದೆ, ಒಲಿದಂತೆ ನುಡಿವುತಿಪ್ಪರು ನೋಡಯ್ಯಾ. `ಮಾತೃದೇವೋ ಭವ, ಪಿತೃದೇವೋ ಭವ' ಎಂಬ ಶ್ರುತಿ, ದೇವಿ ದೇವನು ತಾಯಿತಂದೆಯೆಂದು ಹೇಳಿತ್ತು. `ಆಚಾರ್ಯದೇವೋ ಭವ' ಎಂಬ ಶ್ರುತಿ, ತನಗೆ ಶುದ್ಧಶೈವವನನುಗ್ರಹವ ಮಾಡಿದ ಗುರುವೇ ದೈವವೆಂದು ಹೇಳಿತ್ತು. `ಅತಿಥಿದೇವೋ ಭವ' ಎಂಬ ಶ್ರುತಿ, ತನ್ನ ಮನೆಗೆ ಬಂದ ಭಕ್ತನೇ ದೈವವೆಂದು ಹೇಳಿತ್ತು. ಇದಲ್ಲದೆ ಸಾವುತ್ತ, ಹುಟ್ಟುತ್ತಿಪ್ಪ ತಂದೆ ತಾಯಿ ದೈವವೆಂದ ಲಜ್ಜೆ ನಾಚಿಕೆ ಬೇಡ. ಚಂಡೇಶ್ವರಪಿಳ್ಳೆ ಶಿವನು ತಂದೆಯೆಂದರಿದು, ವಾಯದ ತಂದೆಯ ಕೊಂದುದನರಿಯಾ ? ಎಂದೆಂದಿಗೆ ಕೇಡಿಲ್ಲದ ತಾಯಿತಂದೆ ಬಸವಪ್ರಿಯ ಕೂಡಲಚೆನ್ನಸಂಗಮದೇವನೆಂದು ವೇದಂಗಳು ಸಾರುತ್ತವೆ.
--------------
ಸಂಗಮೇಶ್ವರದ ಅಪ್ಪಣ್ಣ
ಆದಿ ಅನಾದಿಯೆಂಬ (ಯೆಂಬುದ?) ಅಂತರಾತ್ಮನಲ್ಲಿ ತಿಳಿಯಲರಿಯದೆ ಆದಿ ದೈವವೆಂದು ಬರಿಯ ಬಹಿರಂಗದ ಬಳಕೆಯನೆ ಬಳಸಿ, ಅನ್ಯ ದೈವಂಗಳನಾರಾಧಿಸಿ ಕೆಡುತ್ತಿಪ್ಪರು ನೋಡಾ. ಅದಕೆ ತಪ್ಪೇನು, ಮಕ್ಕಳಿಗೆ ತಮ್ಮ ಮಾತೆಯೇ ದೈವ. ಮಾತೆಗೆ ತನ್ನ ಪುರುಷನೆ ದೈವ, ಪುರುಷಂಗೆ ತನ್ನ ಪ್ರಭುವೆ ದೈವ. ಪ್ರಭುವಿಗೆ ತನ್ನ ಪ್ರಧಾನನೆ ದೈವ, ಪ್ರಧಾನಂಗೆ ತನ್ನ ರಾಯನೆ ದೈವ. ರಾಯಂಗೆ ತನ್ನ ಲಕ್ಷ್ಮಿಯೆ ದೈವ, ಲಕ್ಷ್ಮಿಗೆ ತನ್ನ ವಿಷ್ಣುವೆ ದೈವ. ವಿಷ್ಣುವಿಗೆ ತನ್ನ ರುದ್ರನೆ ದೈವ, ಆ ರುದ್ರಂಗೆ ತನ್ನ ಈಶ್ವರನೆ ದೈವ. ಈಶ್ವರಂಗೆ ತನ್ನ ಸದಾಶಿವನೆ ದೈವ, ಸದಾಶಿವಂಗೆ ತನ್ನ ಸರ್ವಗತ ಶಿವನೆ ದೈವ. ಸರ್ವಗತ ಶಿವನಿಗೆ ಆಕಾಶಮಹಿಪತಿಯೆಂಬ ಮಹಾಲಿಂಗಕ್ಕೆ ಆದಿ ದೇವರುಳ್ಳಡೆ ಹೇಳಿರೆ, ಇಲ್ಲದಿರ್ದಡೆ ಸುಮ್ಮನೆ ಇರಿರೆ. ಇದು ಕಾರಣ ಷಡುದರುಶನದ ಚರಾಚರಾದಿಗಳೆಲ್ಲರೂ ತಮ ತಮಗಿಷ್ಟ ಕಾಮ್ಯವ ಕೊಡುವುದಕ್ಕೆ ವರವುಳ್ಳ ದೇವರೆಂದು ಬೆರವುತ್ತಿಹರು. ಅದಕ್ಕೆ ತಪ್ಪೇನು ಅವರಿಗಪ್ಪಂಥ, ವರವೀವುದಕ್ಕೆ ಸತ್ಯವುಳ್ಳವನಹುದು. ಆದಡೇನು, ಪ್ರಾಣಕ್ಕೆ ಪರಿಣಾಮವ ಕೊಡಲರಿಯವು. ಅವರ ಕೈಯಲ್ಲಿ ಆರಾಧಿಸಿಕೊಂಬ ದೈವಂಗಳೆಲ್ಲವು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಮನವೆಂಬಾರರ ಹಂಗಿನಲ್ಲಿ ಸಿಕ್ಕಿ, ವಿಭೂತಿಯನ್ನಿಟ್ಟು, ರುದ್ರಾಕ್ಷೆಯಂ ತೊಟ್ಟು ಜಪತಪ ಹೋಮ ನೇಮಂಗಳ ಮಾಡಿ ಮಾರಣ ಮೋಹನ ಸ್ತಂಭನ ಉಚ್ಚಾಟನ ಅಂಜನ ಸಿದ್ಧಿ, ಘುಟಿಕಾ ಸಿದ್ಧಿ, ಮಂತ್ರಸಿದ್ಧಿ, ದೂರದೃಷ್ಟಿ ದೂರ ಶ್ರವಣ, ಕಮಲದರ್ಶನ, ತ್ರಿಕಾಲಜ್ಞಾನ, ಪರಕಾಯಪ್ರವೇಶವೆಂಬ ಅಷ್ಟಮಹಾಸಿದ್ಧಿಗಳಂ ಲಿಂಗದಲ್ಲಿ ವರಂಬಡೆದು ತಮ್ಮ ಬೇಡಿದವರಿಗೆ ಕೊಟ್ಟು ತಮ್ಮಿಂದ ಹಿರಿಯರಿಗೆ ನಮಸ್ಕರಿಸಿ, ತಮ್ಮಿಂದ ಕಿರಿಯರಿಗೆ ದೇವರೆಂದು ಬೆರವುತ್ತಿಹರು. ಕಿರಿದುದಿನ ಅವರ ದೇವರೆನ್ನಬಹುದೆ ? ದೇಹಕೇಡಿಗಳ ಸತ್ಯರೆಂದೆನಬಹುದೆ ? ಅಸತ್ಯದಲ್ಲಿ ಅಳಿದವರ ಭಕ್ತರೆಂದೆನಬಹುದೆ ? ಬಹುರೂಪಿನ ಕಪಟಿಗಳ ನಿತ್ಯರೆನಬಹುದೆ ? ದಿನದಿನಕ್ಕೆ ಸತ್ತು ಸತ್ತು ಹುಟ್ಟುವವರ. ಅದೆಂತೆಂದಡೆ: ಬ್ರಹ್ಮನ ಜಾವವೊಂದಕ್ಕೆ ಒಬ್ಬ ಇಂದ್ರನಳಿವ ವಿಷ್ಣುವಿನ ಜಾವವೊಂದಕ್ಕೆ ಒಬ್ಬ ಬ್ರಹ್ಮನಳಿವ ರುದ್ರನ ಜಾವವೊಂದಕ್ಕೆ ಒಬ್ಬ ವಿಷ್ಣುವಳಿವ ಈಶ್ವರನ ಜಾವವೊಂದಕ್ಕೆ ಒಬ್ಬ ರುದ್ರನಳಿವ ಸದಾಶಿವನ ಜಾವವೊಂದಕ್ಕೆ ಒಬ್ಬ ಈಶ್ವರನಳಿವ ಸರ್ವಗತನ ಜಾವವೊಂದಕ್ಕೆ ಒಬ್ಬ ಸದಾಶಿವನಳಿವ ಲಿಂಗ ಶರಣರ ಒಂದು ನಿಮಿಷಕ್ಕೆ ಒಬ್ಬ ಸರ್ವಗತನಳಿವ ಲಿಂಗ ಶರಣರಿಗೆ ಅಳಿವುಳ್ಳಡೆ ಹೇಳಿರೆ ? ಇಲ್ಲದಿರ್ದಡೆ ಸುಮ್ಮನಿರಿರೆ. ಅಂತಪ್ಪ ಮಹಾಲಿಂಗವನು ಶರಣರನು ಅರಿಯದೆ ಷಡುದೇವತೆಗಳು ಮುಖ್ಯವಾದ ಮನು ಮುನಿ ದೇವ ದಾನವ ಮಾನವರೆಲ್ಲರೂ ಆರಿಸಿ ತೊಳಲಿ ಬಳಲುತ್ತಿಪ್ಪರು. ಅದು ಹೇಗೆಂದಡೆ: ಬ್ರಹ್ಮವೇದದಲ್ಲರಸುವನು. ವಿಷ್ಣು ಪೂಜೆಯಲ್ಲರಸುವನು. ರುದ್ರ ಜಪದಲ್ಲರಸುವನು. ಈಶ್ವರ ನಿತ್ಯನೇಮದಲ್ಲರಸುವನು. ಸದಾಶಿವನು ನಿತ್ಯ ಉಪಚಾರದಲ್ಲರಸುವನು. ಸರ್ವಗತ ಶೂನ್ಯದಲ್ಲರಸುವನು. ಗೌರಿ ತಪದಲ್ಲರಸುವಳು, ಗಂಗೆ ಉಗ್ರದಲ್ಲರಸುವಳು. ಚಂದ್ರ ಸೂರ್ಯರು ಹರಿದರಸುವರು. ಇಂದ್ರ ಮೊದಲಾದಷ್ಟದಿಕ್ಪಾಲಕರು ಆಗಮ್ಯದಲ್ಲರಸುವರು ಸಪ್ತ ಮಾತೃಕೆಯರು `ಓಂ ಪಟು ಸ್ವಾಹಾ' ಎಂಬ ಮಂತ್ರದಲ್ಲರಸುವರು. ಸತ್ಯಋಷಿ ದಧೀಚಿ ಗೌತಮ ವಶಿಷ* ವಾಲ್ಮೀಕಿ ಅಗಸ್ತ್ಯ ವಿಶ್ವಾಮಿತ್ರ ಇವರು ಮೊದಲಾದ ಸಪ್ತಋಷಿಯರುಗಳೆಲ್ಲಾ ತಪ, ಯೋಗ, ಆಗಮಂಗಳಲ್ಲಿ ಅರಸುವರು. ಇಂತಿವರೆಲ್ಲರಿಗೆಯೂ ಸಿಕ್ಕಿಯೂ ಸಿಕ್ಕದ ಘನವು ಶುಕ್ಲ ಶೋಣಿತವಿಲ್ಲದ ಕಾಮಿ, ಒಡಲಿಲ್ಲದ ರೂಪು, ತಲೆಯಿಲ್ಲದ ಗಜ, ಬಾಲವಿಲ್ಲದ ಸಿಂಹ, ನಿದ್ರೆಯಿಲ್ಲದ ನಿರಾಳ. ಇಂತೀ ಭೇದಮಂ ಭೇದಿಸಿ ನೋಡಬಲ್ಲಡೆ ಕಣ್ಣ ಮೇಲೆ ಕಣ್ಣುಂಟು. ಮತ್ತಾ ಕಣ್ಣ ತೆರೆದು ಅಮೃತಕಾಯದೃಷ್ಟಿಯಲ್ಲಿ ನೋಡಿದಡೊಂದೂಯಿಲ್ಲ. ನಮ್ಮ ಗುಹೇಶ್ವರ ಲಿಂಗವು ಬಚ್ಚಬರಿಯ ಬಯಲು ನಿಶ್ಚಿಂತ ನಿರಾಳನು
--------------
ಅಲ್ಲಮಪ್ರಭುದೇವರು
ಮುಗ್ಧ ಮೂಢ ಕುಬ್ಜ ಕುಷ್ಟ ಅಂಧಕ ಪಂಗುಳ ನಪುಂಸಕ ಇಂತೀ ಮುಕ್ತಿಹೀನರ ದೈವವೆಂದು ಇಕ್ಕಿ ಎರೆದು ಕೊಟ್ಟು ಕೊಂಡು ಮಾಡುವಾತ ಭಕ್ತನಲ್ಲ. ಅದು ಧಾತೃವರ್ಧನ ಸಂಬಂಧ. ಭಕ್ತಿಯಿಂದ ಮಾಡುವಲ್ಲಿ ತ್ರಿವಿಧ ಮಲವ ಹರಿದವನ, ತ್ರಿಗುಣ ಗುಣವರತವನ, ತ್ರಿಗುಣಾತ್ಮಕ ಭೇದಕನ; ಸರ್ವಸಂಗ ಪರಿತ್ಯಾಗವ ಮಾಡಿದ ಪರಮ ವಿರಕ್ತನ ತಥ್ಯ ಮಿಥ್ಯ ರಾಗದ್ವೇಷಂಗಳ ಸ್ವಪ್ನದೊಳಗೂ ಅರಿಯದವನ ಆತ ಗುರುವೆಂದು, ಆತ ಚರವೆಂದು ನಲಿದು ಮನ ಮುಕ್ತವಾಗಿ ಮಾಡುತ್ತಿರಬೇಕು. ಇದು ಸದ್ಭಕ್ತರ ಅರಿವಿನ ಕುರುಹಿನ ಮಾಟ. ಆತ ವ್ಯಾಪಾರದ ಕೂಗಿನ ದನಿಗೆ ಹೊರಗು ಮಹಾಮಹಿಮ ಮಾರೇಶ್ವರಾ.
--------------
ಕೂಗಿನ ಮಾರಯ್ಯ
ಇನ್ನಷ್ಟು ... -->