ಮೊಟ್ಟೆ ಮೊಟ್ಟೆ ಪತ್ರೆಯ ತಂದು ಒಟ್ಟಿ,
ಪೂಜಿಸಿದ[ಡೇ]ನು ಮನಶುದ್ಧವಿಲ್ಲದನ್ನಕ್ಕರ ?
ಮನಮಗ್ನವಾಗಿ ಶಿವಧ್ಯಾನದಲ್ಲಿ ಕೂಡಿ,
ಒಂದೇ ದಳವ ಧರಿಸಿದರೆ ಶಿವನು ಒಲಿಯನೆ?
ಇಂತು ಪೂಜೆಯ ಮಾಡುವುದಕ್ಕಿಂತಲು
ಅದೇ ತೊಪ್ಪಲನು ಕುದಿಸಿ ಪಾಕವ ಮಾಡಿದಲ್ಲಿ
ಆ ಲಿಂಗವು ತೃಪ್ತಿಯಾಯಿತ್ತು.
ಬರಿದೆ ಲಿಂಗವ ಪೂಜಿಸಿ ಜಂಗಮಕ್ಕೆ ಅನ್ನವ ಕೊಡದೆ,
ಲಿಂಗದ ಮುಖವು ಜಂಗಮವು ಎಂದು ತಿಳಿಯದೆ,
ತನು-ಮನ-ಧನವನು ಗುರು-ಲಿಂಗ-ಜಂಗಮಕ್ಕೆ ಸವೆಸದೆ,
ಬಾಗಿಲಿಗೆ ಕಾವಲಿಕ್ಕಿ, ಹೆಂಡಿರು ಮಕ್ಕಳು ಕೂಡಿಕೊಂಡು,
ತನ್ನ ತಾನೇ ತಿಂಬುವಂಥ ನೀಚ ಹೊಲೆಯರ ಮೂಗ ಸವರಿ
ಮೆಣಸಿನ ಹಿಟ್ಟು ತುಪ್ಪವ ತುಂಬಿ,
ಪಡಿಹಾರಿ ಉತ್ತಣ್ಣಗಳ ಪಾದುಕೆಯಿಂದ ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ
ನಿಜಶರಣನು.