ಅಥವಾ

ಒಟ್ಟು 40 ಕಡೆಗಳಲ್ಲಿ , 20 ವಚನಕಾರರು , 38 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಗುರು ಲಿಂಗ ಜಂಗಮ ಪ್ರಸಾದ ಒಂದೇ ಪರಶಿವಮೂರ್ತಿ ಮಹಾವಸ್ತುಗಳು ಕೇಳಿರಣ್ಣಾ. ಅರಿದು ಧ್ಯಾನಿಸಿ ಪೂಜಿಸಿ ಸೇವಿಸಿ ಅರ್ಚಿಸಿ ಅರ್ಪಿಸಿ ಧರಿಸಿ, ಧರ್ಮ ಅರ್ಥ ಕಾಮ ಮೋಕ್ಷ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ ಈ ಚತುರ್ವಿಧ ಪದವಿಯನೂ ಕೂಡುವರೆ, ಗುರು ಲಿಂಗ ಜಂಗಮ ಪ್ರಸಾದವ ನಂಬುವುದು. ಇದು ಸತ್ಯ, ಶಿವನಾಣೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇಷ್ಟಲಿಂಗದ ಪೂಜೆಯಾವುದು, ಪ್ರಾಣಲಿಂಗದ ಪೂಜೆಯಾವುದು, ಭಾವಲಿಂಗದ ಪೂಡೆಯಾವುದುಯೆಂದರೆ ಹೇಳಿಹೆ ಕೇಳಿರಯ್ಯ. ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯ ಮಾಡುವುದು, ಅದು ಇಷ್ಟಲಿಂಗದ ಪೂಜೆ. ಆ ಲಿಂಗವನು ಮನಸ್ಸಿನಲ್ಲಿ ಧ್ಯಾನಿಸಿ ಮನೋಮಧ್ಯದಲಿಪ್ಪ ನಿಃಕಲ ಬ್ರಹ್ಮವನು ಧ್ಯಾನವೆಂಬ ಹಸ್ತದಲ್ಲಿ ಹಿಡಿದು ಕರಸ್ಥಲದಲ್ಲಿಪ್ಪ ಲಿಂಗದ ಗೊತ್ತಿನಲ್ಲಿ ಕಟ್ಟಿ ನೆರೆವುದೀಗ ಪ್ರಾಣಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಮನಸು ಲಿಂಗದಲ್ಲಿ ತಲ್ಲೀಯವಾಗಿ ನಚ್ಚಿ ಮಚ್ಚಿ ಅಚ್ಚೊತ್ತಿ ಅಪ್ಪಿ ಅಗಲದಿಪ್ಪುದೇ ಭಾವಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಇವು ಮೂರು ಲಿಂಗದ ಅರ್ಚನೆ. ಮೂರು ಲಿಂಗದ ಉಪಚಾರ. ಶಿವಾರ್ಥಿಗಳಾದ ವೀರಶೈವರುಗಳು ಮಾಡುವ ಲಿಂಗಾರ್ಚನೆಯ ಕ್ರಮವೆಂದು ಹೇಳಲ್ಪಟ್ಟಿತ್ತಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಎಲೆ ಎಲೆ, ಭಕ್ತ ಭವಿ ಎಂಬೋ ನೀತಿಯಂ ಕೇಳು : ಭಕ್ತ ದಾರು ? ಭವಿ ದಾರು ? ಎಂದಡೆ, ಎಲಾ, ಯಾವ ಕುಲ[ದವ]ನಾದಡೆ ಸರಿಯೋ ? ಯಾವ ದೇವರು ಆದರೆ ಸರಿಯೋ ? ಎಲ್ಲಾ ದೇವರಿಗೂ ಆತ್ಮಲಿಂಗವಾಗಿಪ್ಪನೇ ಮಹಾದೇವನೆಂದು ಹೇಳುವುದು ಶ್ರುತಿವಾಕ್ಯ. ಇದರೊಳಗೆ ಏಕದೈವವನು ಪಿಡಿದು ಪೂಜಿಸಿ, ಧ್ಯಾನಿಸಿ, ನಮಸ್ಕರಿಸಿ, ಕ್ರಿಯಾಚಾರದಿಂ ನಡೆದು, ನೀತಿಗಳನೋದಿ, ನಿರ್ಮಳಚಿತ್ತನಾದಡೆ ಭಕ್ತ. ಇದಂ ಮರೆದು, ಹಲವು ಕಾಲ ಲಿಂಗಧ್ಯಾನ, ಹಲವು ಕಾಲ ಹರಿಧ್ಯಾನ, ಹಲವು ಕಾಲ ಬ್ರಹ್ಮಧ್ಯಾನ, ಹಲವು ಕಾಲ ಎಲ್ಲಮ್ಮ, ಎಕನಾತಿ, ಶಾಕಿನಿ, ಡಾಕಿನಿ ಕಲ್ಲು ಮರದೊಳಗಿಪ್ಪ ದೇವರ ಪೂಜಿಸಿದಡೆ, ಎಲ್ಲಾರ ಎಂಜಲ ತಿಂಬೋರ ಎಂಜಲ [ತಿಂದು], ಭಕ್ತನೆಂದರಿಯದೆ, ಪ್ರಸಾದದ ಮಹಾತ್ಮೆಯ ತಿಳಿವ ತಿಳಿಯದೆ, ಧನದ ಪಿಶಾಚಿ ಎಂದು ಧರ್ಮ ಪರಹಿತಾರ್ಥವನು ಮರೆದು, ನಿತ್ಯ ನಿತ್ಯ ಅನ್ನಕ್ಲೇಶದಲ್ಲಿ ಹೊರಳುವ[ವ] ಲಿಂಗದೇಹಿಕನಾದಡೆಯು ಬ್ರಾಹ್ಮಣನಾದೆಡೆಯು, ಇವನೇ ಭವಿ. ಇಂತಾ ಭಕ್ತ ಭವಿಗಳ ನೆಲೆಯ ತಿಳಿದು ನಮ್ಮ ಶರಣರು ನಿರ್ಲೇಪ ದೇಹಮಂ ಅಂಗೀಕರಿಸಿ ಪೋದರು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಶುದ್ಧಕರ್ಮವಿಲ್ಲದ ಭಕ್ತಿ, ವರ್ಮವಿಲ್ಲದ ವಿರಕ್ತಿ, ಸದಾಸನ್ನದ್ಧವಿಲ್ಲದ ಪೂಜೆ, ವೃಥಾಹೋಹುದಕ್ಕೆ ಇದೆ ಪಥ. ಅನ್ನ ಉದಕ ಹೆಣ್ಣು ಹೊನ್ನು ಮಣ್ಣನಿತ್ತು ವರ್ಮವ ಮುಟ್ಟದೆ ಸತ್ಕರ್ಮವನರಿಯದೆ ಕುನ್ನಿ ಧ್ಯಾನಿಸಿ ಹೇಯವೆಂದರಿದು ತಲೆಗೊಡಹಿದಲ್ಲಿ ಮರೆದಂತಾಗದೆ, ನಿಜನಿಶ್ಚಯವನರಿದು ಕುರುಹಿಡಬೇಕು, ಸದ್ಯೋಜಾತಲಿಂಗವ.
--------------
ಅವಸರದ ರೇಕಣ್ಣ
ಕಾಯದ ಸುಳುಹುಳ್ಳನ್ನಕ್ಕ ಕರ್ಮಪೂಜೆ ಬೇಕೆಂಬರು. ಜೀವನ ಸಂಚಾರವುಳ್ಳನಕ್ಕ ಜ್ಞಾನವನರಿಯಬೇಕೆಂಬರು. ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ ? ಜೀವನ ಜ್ಞಾನದಿಂದ ಮುಕ್ತಿಯೋ? ಜ್ಞಾನ ಧ್ಯಾನದಿಂದ ಮುಕ್ತಿಯೋ ? ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ]ರಾಮ ರಾಮನಾ.
--------------
ವೀರ ಗೊಲ್ಲಾಳ/ಕಾಟಕೋಟ
ಶ್ರೀಗುರುಸೋಂಕಿದ ಶಿಷ್ಯ ತಾನಾ ಗುರುವಾಗದೆ ಮಾಣನು. ಅದೆಂತೆಂದಡೆ: ಜ್ಯೋತಿಯಿಂದಾದ ಜ್ಯೋತಿಯಂತೆ ಭ್ರಮರನಿಂದ ಕೀಟ ಭ್ರಮರನಾದಂತೆ ಶಿಷ್ಯನು ಗುರುವಿ[ಗೆ] ಭೇದವಾಗಿರನು. ಇಂತಪ್ಪ ಶಿಷ್ಯನು ಸದ್ಗುರುವಿನ ಮೂರ್ತಿಯ ಧ್ಯಾನಿಸಿ, ಗುರುಪದವ ಪೂಜಿಸಿ, ಗುರುವಾಕ್ಯವೇ ಮಂತ್ರವೆಂದು ನಂಬಿ, ಗುರುವಿನ ಕೃಪೆಯೇ ಮುಕ್ತಿಯೆಂದು ಅರಿದಿಪ್ಪನು. ಅದೆಂತೆಂದಡೆ: ಧ್ಯಾನಮೂಲಂ ಗುರೋರ್ಮೂರ್ತಿಃ ಪೂಜಾಮೂಲಂ ಗುರೋಃ ಪದಂ ಮಂತ್ರಮೂಲಂ ಗುರೋರ್ವಾಕ್ಯಂ ಮುಕ್ತಿಮೂಲಂ ಗುರೋಃ ಕೃಪಾ ಇಂತೆಂದುದಾಗಿ, ಗುರುವಿನ ಕರುಣದಿಂದ ಷಟ್‍ತ್ರಿಂಶತ್ತತ್ವಂಗಳ ಸ್ವರೂಪವನರಿತು ತತ್ವಾತೀತವಾದ ಪರವಸ್ತು ವಾಙ್ಮನಾತೀತವಾಗಿ ತನ್ನ ಭಾವಾಬ್ಥೀಷ್ಟಲಿಂಗದ ನೆನಹು ಸೋಂಕುಗಳಿಂದಭ ಸೌರಾಷ್ಟ್ರ ಸೋಮೇಶ್ವರಲಿಂಗವಪ್ಪುದು ತಪ್ಪದಯ್ಯಾ.
--------------
ಆದಯ್ಯ
ತಾರಕಾಕೃತಿಯ ನಕಾರಪ್ರಣವದ ಆಧಾರಚಕ್ರದೊಳು ಕೆಂಪುಬಣ್ಣವಿರ್ಪುದು. ದಂಡಕಾಕೃತಿಯ ಮಕಾರಪ್ರಣವದ ಸ್ವಾದಿಷ್ಠಾನಚಕ್ರದೊಳು ನೀಲವರ್ಣವಿರ್ಪುದು. ಕುಂಡಲಾಕೃತಿಯ ಶಿಕಾರಪ್ರಣವದ ಮಣಿಪೂರಚಕ್ರದೊಳು ಕುಂಕುಮವರ್ಣವಿರ್ಪುದು. ಅರ್ಧಚಂದ್ರಾಕೃತಿಯ ಯಕಾರಪ್ರಣವದ ಅನಾಹತಚಕ್ರದೊಳು ಪೀತವರ್ಣವಿರ್ಪುದು. ದರ್ಪಣಾಕೃತಿಯ ಯಕಾರಪ್ರಣವದ ವಿಶುದ್ಧಿಚಕ್ರದೊಳು ಶ್ವೇತವರ್ಣವಿರ್ಪುದು. ಜ್ಯೋತಿರಾಕೃತಿಯ ಒಂಕಾರಪ್ರಣವದ ಆಜ್ಞಾಚಕ್ರದೊಳು ಮಾಣಿಕ್ಯವರ್ಣವಿರ್ಪುದು. ಮತ್ತಂ, ಪೃಥ್ವಿತತ್ವಯುಕ್ತನಾದ ಸದ್ಭಕ್ತನೆಂಬ ಅಂಗನ ಸುಚಿತ್ತಹಸ್ತದೊಳು ಆಚಾರಲಿಂಗವಿರ್ಪುದು. ಅಪ್ಪು ತತ್ವಯುಕ್ತವಾದ ಮಹೇಶನೆಂಬ ಅಂಗನ ಸುಬುದ್ಧಿಹಸ್ತದೊಳು ಗುರುಲಿಂಗವಿರ್ಪುದು. ತೇಜತತ್ವಯುಕ್ತನಾದ ಪ್ರಸಾದಿಯೆಂಬ ಅಂಗನ ನಿರಹಂಕಾರಹಸ್ತದೊಳು ಶಿವಲಿಂಗವಿರ್ಪುದು. ವಾಯುತತ್ವಯುಕ್ತನಾದ ಪ್ರಾಣಲಿಂಗಿಯೆಂಬ ಅಂಗನ ಸೂರ್ಯಹಸ್ತದೊಳು ಜಂಗಮಲಿಂಗವಿರ್ಪುದು. ಆಕಾಶತತ್ವಯುಕ್ತನಾದ ಶರಣನೆಂಬ ಅಂಗನ ಸುಜ್ಞಾನಹಸ್ತದೊಳು ಪ್ರಸಾದಲಿಂಗವಿರ್ಪುದು. ಆತ್ಮತತ್ವಯುಕ್ತನಾದ ಐಕ್ಯನೆಂಬ ಅಂಗನ ಸದ್ಭಾವಹಸ್ತದೊಳು ಮಹಾಲಿಂಗವಿರ್ಪುದು. ಮತ್ತಂ, ಘ್ರಾಣವೆಂಬಮುಖದ ಕ್ರಿಯಾಶಕ್ತಿಯ ಶ್ರದ್ಧಾಭಕ್ತಿಯೊಳು ಸುಗಂಧಪದಾರ್ಥವಿರ್ಪುದು. ಜಿಹ್ವೆಯೆಂಬಮುಖದ ಜ್ಞಾನಶಕ್ತಿಯ ನೈಷ್ಠಿಕಾಭಕ್ತಿಯೊಳು ಸಾರಸಪದಾರ್ಥವಿರ್ಪುದು. ನೇತ್ರವೆಂಬಮುಖದ ಇಚ್ಛಾಶಕ್ತಿಯ ಸಾವಧಾನಭಕ್ತಿಯೊಳು ಸಾರೂಪಪದಾರ್ಥವಿರ್ಪುದು. ತ್ವಗೇಂದ್ರಿಯೆಂಬಮುಖದ ಆದಿಶಕ್ತಿಯ ಅನುಭಾವಭಕ್ತಿಯೊಳು ಸುಸ್ವರೂಪಪದಾರ್ಥವಿರ್ಪುದು. ಶ್ರೋತ್ರೇಂದ್ರಿಯಮುಖದ ಪರಶಕ್ತಿಯ ಆನಂದವೆಂಬಭಕ್ತಿಯೊಳು ಸುಶಬ್ದಪದಾರ್ಥವಿರ್ಪುದು. ಹೃದಯೇಂದ್ರಿಯಮುಖದ ಚಿತ್‍ಶಕ್ತಿಯ ಸಮರಸಭಕ್ತಿಯೊಳು ಸುತೃಪ್ತಿಯಿರ್ಪುದು. ಇಂತೀ ಎಪ್ಪತ್ತೆರಡುಮುಖದಿ ನಿನ್ನ ಪೂಜಿಸಿ, ನಿನ್ನ ಹಾಡ್ಯಾಡಿ, ನಿನ್ನ ಧ್ಯಾನಿಸಿ, ನಿನ್ನ ಚಿಂತಿಸಿ, ನಿನ್ನೊಳು ಕೂಡುತ, ನೀನಾರೆಂದು ಹವಣಿಸಿ ಅಂತರಂಗದಿ ಪೊಕ್ಕು ನೋಡೆ ನೀನಲ್ಲದೆ ನಾನೇ ಆದ ಪರಿ ಇದೇನು ಚೋದ್ಯವೊ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ ?
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಒಂದು ಎರಡಹುದೆ ? ಎರಡು ಒಂದಹುದೆ ? ಒಂದು ಒಂದೇ, ಎರಡು ಎರಡೇ. ಅದು ಕಾರಣ, ಶಿವನು ತನ್ನ ಲೀಲಾಕಾರಣವಾಗಿ ಮಾಯಾ ನಿರ್ಮಿತವಂ ಮಾಡಿ, ಆ ಮಾಯಾರಚನೆಯಿಂದಾದ ಬ್ರಹ್ಮಾಂಡ ಸಂದೋಹ, ಹರಿ ವಿರಿಂಚಿ ಸುರಪತಿ ಸುರಾಸುರರು ನರನಿಕರ, ಖಗಮೃಗ ಜೀವರಾಶಿಗಳೆಲ್ಲವೂ ಶಿವನಿಂದಲಾಗಿ, ಶಿವನಿಂದ ಹೊರೆಯಿಸಿಕೊಂಡು, ಶಿವನಿಂದವೆ ಹೋದವೆಂದಡೆ, ಅವರ ಆಗು ಹೋಗು ಇರವು ಹೋಗಿನೊಳಗೆ ಲಯ ಗಮನ ಸ್ಥಿತಿ ಶಿವಂಗುಂಟೆ, ಎಲೆ ಮರುಳಗಳಿರಾ ? ಗಗನದಲ್ಲಿ ತೋರಿದ ಮೇಘವು ಗಗನದಲ್ಲಿ ಅಡಗಿದವೆಂದಡೆ, ಆ ಗಗನ ತಾ ಮೇಘವೆ ? ತನ್ನಾದ್ಥೀನಶಕ್ತಿದಂಡದಿಂ ಕುಂಬಾರ ಚಕ್ರವ ತಿರುಗಿಸಲು, ಆ ಚಕ್ರಭ್ರಮಣ ಚೈತನ್ಯವು ಆ ಕುಂಬಾರನೆ, ಮರುಳುಗಳಿರಾ ? ಆ ಚೈತನ್ಯ ಅಡಗುವುದೆ ? ನಿಲ್ಲು ಮಾಣು. ಬಿಲ್ಲ ನಾರಿಗೆ ಅಂಬಂ ಸಂಧಾನಿಸಿ ಎಸೆಯಲಾ, ಅಂಬು ಹರಿದ ಚೈತನ್ಯ ಬಿಲ್ಲು ಕಾರಣವೆ ? ಅಲ್ಲ , ನಿಲ್ಲು , ಮಾಣು. ಇವೆಲ್ಲವು ಚೈತನ್ಯಂಗಳು. ಅಂತು ಸರ್ವವೆಲ್ಲವು ತೋರಿಯಡಗುವುದು. ಸರ್ವೇಶ್ವರನು, ಸರ್ವಕರ್ತೃ, ಸರ್ವಚೈತನ್ಯ, ಸೂತ್ರಯಂತ್ರವಾಹಕ ಶಿವನು. ಸರ್ವಲಯ ಗಮನ ಸ್ಥಿತಿ ತನಗುಂಟೆ ? ನಿಲ್ಲು , ಮಾಣಿರೆ, ಎಲೆ ಜಡಜೀವಿಗಳಿರಾ. ಗಗನದ ರವಿ ಕಿರಣದಿಂದ ಸಕಲರೂಪಿತ ದ್ರವ್ಯಪದಾರ್ಥಂಗಳಲ್ಲಿ ಪ್ರತಿಪ್ರಭೆ ತೋರಲು, ಆ ಪ್ರತಿಪ್ರಭೆಯ ಆಗುಹೋಗಿನ ಸ್ಥಿತಿಗತಿ ಆ ಗಗನದ ಸೂರ್ಯಂಗುಂಟೆ, ಎಲೆ ಜಡಜೀವಿಗಳಿರಾ ? ಈ ಪರಿಯಲೆ ವಿಶ್ವವೆಲ್ಲವಕ್ಕೂ ತಾನಲ್ಲದ ತಾನಿಲ್ಲದ ಪ್ರೇರಣ ಚೈತನ್ಯವೇ ವಿಶ್ವದ ನಯನ, ವಿಶ್ವದ ಮುಖ, ವಿಶ್ವದ ಬಾಹು, ವಿಶ್ವದ[ಚ]ರಣ, ಸ್ವರ್ಗಮತ್ರ್ಯ ಭುವನಾದ್ಯಂಗಳ ಮೂಲಚೈತನ್ಯಸೂತ್ರ ತಾನಲ್ಲದೆ, ತಾನಿಲ್ಲದೆ ಆಡಿಸುವ ಸೂತ್ರಾತ್ಮಕನಲ್ಲದೆ ಅವರಾಗು ತನಗುಂಟೆ, ಎಲೆ ಭ್ರಮಿತರಿರಾ ? `ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋ ಬಾಹುರುತ ವಿಶ್ವತಸ್ಪಾ ಪಾತ್ | ಸಂ ಬಾಹುಭ್ಯಾಂಧಮತಿ ಸಂಪತತ್ರೈದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಎನಲು, `ಈಶಾನಃ ಶಿವ ಏಕೋದೇವಃ ಶಿವಂ ಕರಃ ತತ್ಸರ್ವಮನ್ಯತ್ ಪರಿತ್ಯಜೇತ್' ಎನಲು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥು' ಎನಲು, ಶಿವನೊಬ್ಬನೇ, ಇಬ್ಬರಿಲ್ಲ . `ನ ಯಥಾಸ್ತಿ ಕೂರ್ಮರೋಮಾಣಿ, ಶೃಂಗಂ ನ ನರಮಸ್ತಕೇ ನ ಯಥಾಸ್ತಿ ವಿಯತ್ಪುಷ್ಪಂ ನ ತಥಾಸ್ತಿ ಪರಾತ್ಪರಃ |' ನಾಲ್ಕು ವೇದಂಗಳು ಬಿನ್ನವಿಸಿದವು ಕೇಳಿರೇ ಎಲೆ ವಿಪ್ರರಿರಾ. ಇದನರಿದು, ಬಸವಪ್ರಿಯ ಕೂಡಲಚೆನ್ನಸಂಗಯ್ಯನನೆ ಧ್ಯಾನಿಸಿ, ನಿರೀಕ್ಷಿಸಿ, ಸ್ತುತಿಸಿ, ಯಜಿಸಿ ಕೃತಾರ್ಥರಾಗಿರೆ ಎಲೆ ಮರುಳು ವಿಪ್ರರಿರಾ.
--------------
ಸಂಗಮೇಶ್ವರದ ಅಪ್ಪಣ್ಣ
ನ ಎಂಬಕ್ಷರದ ಭೇದ ಜನನ ನಾಸ್ತಿಯಾದ ವಿವರ. ಮ ಎಂಬಕ್ಷರದ ಭೇದ ಮರಣ ನಾಸ್ತಿಯಾದ ವಿವರ. ಶಿ ಎಂಬಕ್ಷರದ ಭೇದ ಸ್ವೀಕರಣೆ ನಾಸ್ತಿಯಾದ ವಿವರ. ವ ಎಂಬಕ್ಷರದ ಭೇದ ವಕಾರ ನಾಸ್ತಿಯಾಗಿ ಸಾಕಾರವಳಿದ ಭೇದ. ಯ ಎಂಬಕ್ಷರದ ಭೇದ ತತ್ವಮಸಿಯೆಂಬ ಬ್ಥಿತ್ತಿಯ ಮೆಟ್ಟದೆ ಉತ್ಪತ್ಯ ಸ್ಥಿತಿ ಲಯವೆಂಬ ತ್ರಿವಿಧವ ಮುಟ್ಟದೆ ಅದು ನಿಶ್ಚಯವಾದಲ್ಲಿ ಪಂಚಾಕ್ಷರಿಯ ಭೇದ. ಇಂತೀ ಭೇದಂಗಳಲ್ಲಿ ಜಪಧ್ಯಾನವ ಧ್ಯಾನಿಸಿ ಇಷ್ಟ ಕಾಮ್ಯ ಮೋಕ್ಷಂಗಳೆಂಬ ಮೂರಂಗುಲವನರಿವುದು. ಸದೃಷ್ಟ ತನ್ನಷ್ಟವೆಂಬ ಉಭಯದ ಅಂಗುಲವ ಕಂಡು ಚತುರ್ವಿಧಫಲಪದಂಗಳಲ್ಲಿ ಭಾವಿಸಿ ಕಲ್ಪಿಸದಿಪ್ಪುದು ಜಪಧ್ಯಾನ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಗುರುತ್ವವುಳ್ಳ ಮಹದ್ಗುರುವನರಿಯದೆ ನಾನು ಗುರು ತಾನು ಗುರುವೆಂದು ನುಡಿವಿರಿ. ಧನದಲ್ಲಿ ಗುರುವೆ? ಮನದಲ್ಲಿ ಗುರುವೆ? ತನುವಿನಲ್ಲಿ ಗುರುವೆ? ನಿತ್ಯದಲ್ಲಿ ಗುರುವೆ? ವಿದ್ಯೆಯಲ್ಲಿ ಗುರುವೆ? ಭಕ್ತಿಯಲ್ಲಿ ಗುರುವೆ? ಜ್ಞಾನದಲ್ಲಿ ಗುರುವೆ? ವೈರಾಗ್ಯದಲ್ಲಿ ಗುರುವೆ? ದೀಕ್ಷೆಯಲ್ಲಿ ಗುರುವೆರಿ ಶಿಕ್ಷೆಯಲ್ಲಿ ಗುರುವೆರಿ ಸ್ವಾನುಭಾವದಲ್ಲಿ ಗುರುವೆರಿ ಮಾತಾಪಿತರಲ್ಲಿ ಗುರುವೆರಿ ದೇವದಾನವ ಮಾನವರೆಲ್ಲರು ನೀವೆಲ್ಲರು ಆವ ಪರಿಯಲ್ಲಿ ಗುರು ಹೇಳಿರಣ್ಣಾ? ಗುರುವಾರು ಲಘುವಾರೆಂದರಿಯರಿ, ಮನ ಬಂದಂತೆ ನುಡಿದು ಕೆಡುವಿರಾಗಿ. ಹರಿಬ್ರಹ್ಮರು ಗುರುತ್ವಕ್ಕೆ ಸಂವಾದಿಸಿ ಮಹದ್ಗುರುವಪ್ಪ ಪರಂಜ್ಯೋತಿರ್ಲಿಂಗದ ಆದಿಮಧ್ಯಾವಸಾನದ ಕಾಲವನರಿಯದೆ ಲಘುವಾಗಿ ಹೋದರು. ಮತ್ತಂ ಅದೊಮ್ಮೆ ವಿಷ್ಣ್ವಾದಿ ದೇವಜಾತಿಗಳೆಲ್ಲರೂ ನೆರೆದು ನಾ ಘನ, ತಾ ಘನ, ನಾನು ಗುರು, ತಾನು ಗುರುವೆಂದು ಮಹಾಸಂವಾದದಿಂದ ಅತಿತರ್ಕವ ಮಾಡಿ ಗುರುತ್ವವುಳ್ಳ ಪುರುಷನ ನಿಶ್ಚೈಸಲರಿಯದೆ, ಆ ಸಭಾಮಧ್ಯದಿ ಪರಮಾಕಾಶದಿ `ಅತ್ಯತಿಷ*ದ್ದಶಾಂಗುಲನೆನಿಪ' ಮದ್ಗುರುವಪ್ಪ ಮಹಾಲಿಂಗವು ಇವರುಗಳ ಅಜ್ಞಾನವ ಕಂಡು ಮಹಾವಿಪರೀತಕ್ರೀಯಲ್ಲಿ ನಗುತಿರಲು ನಮ್ಮೆಲ್ಲರನೂ ನೋಡಿ ನಗುವ ಪುರುಷನಾರು? ಈ ಪುರುಷನ ನೋಡುವ, ಈ ಪುರುಷನಿಂದ ನಮ್ಮಲ್ಲಿ ಆರು ಘನ ಆರು ಗುರುವೆಂದು ಕೇಳುವೆವೆಂದು ಆ ಮಹಾಪುರುಷನ ಸಮೀಪಕ್ಕೆ ಅಗ್ನಿ ವಾಯು ಮೊದಲಾಗಿಹ ದೇವಜಾತಿಗಳೆಲ್ಲರೂ ಪ್ರತ್ಯೇಕರಾಗಿ ಹೋಗಲು ಅತ್ಯತಿಷ*ದ್ದಶಾಂಗುಲಮಾಗಿರ್ದು ಇವರುಗಳ ಗುರುತ್ವವೆಲ್ಲವನೂ ಒಂದೇ ತೃಣದಲ್ಲಿ ಮುರಿದು ತೃಣದಿಂದವೂ ಕಷ್ಟ ಲಘುತ್ವವ ಮಾಡಿದನು. ಇದು ಕಾರಣ, ಪರಶಿವನೆ ಮದ್ಗುರು ಕಾಣಿರೆ. ಧನದಲ್ಲಿ ಗುರುವೆರಿ ನೀವೆಲ್ಲರು ಧನದಲ್ಲಿ ಗುರುವೆಂಬಡೆ ನೀವು ಕೇಳಿರೆ, ಕಾಣಿವುಳ್ಳವಂಗೆ ಶತಸಂಖ್ಯೆ ಉಳ್ಳವನೆ ಗುರು, ಶತಸಂಖ್ಯೆ ಉಳ್ಳವಂಗೆ ಸಹಸ್ರಸಂಖ್ಯೆ ಉಳ್ಳವನೆ ಗುರು, ಸಹಸ್ರಸಂಖ್ಯೆ ಉಳ್ಳವಂಗೆ ಮಹದೈಶ್ವರ್ಯ ಉಳ್ಳವನೆ ಗುರು, ಮಹದೈಶ್ವರ್ಯ ಉಳ್ಳವಂಗೆ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಮೊದಲಾದ ಮಹದೈಶ್ವರ್ಯವುಳ್ಳ ಇಂದ್ರನೆ ಗುರು. ಇಂದ್ರಂಗೆ ಅನೂನೈಶ್ವರ್ಯವನುಳ್ಳ ಬ್ರಹ್ಮನೆ ಗುರು, ಆ ಬ್ರಹ್ಮಂಗೆ ಐಶ್ವರ್ಯಕ್ಕೆ ಅಧಿದೇವತೆಯಪ್ಪ ಮಹಾಲಕ್ಷ್ಮಿಯನುಳ್ಳ ವಿಷ್ಣುವೆ ಗುರು, ಆ ವಿಷ್ಣುವಿಂಗೆ ಅಷ್ಟಮಹದೈಶ್ವರ್ಯವನುಳ್ಳ ರುದ್ರನೆ ಗುರು, ಆ ರುದ್ರಂಗೆ ಈಶ್ವರನೆ ಗುರು, ಈಶ್ವರಂಗೆ ಸದಾಶಿವನೆ ಗುರು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಯೇ ತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಅಂತಹ ಸದಾಶಿವಂಗೆ ಎಮ್ಮ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ಮನದಲ್ಲಿ ಗುರುವೇ ನೀವೆಲ್ಲರು ದುರ್ಮನಸ್ಸಿಗಳು ಪರಧನ ಪರಸ್ತ್ರೀ ಅನ್ಯದೈವಕ್ಕೆ ಆಸೆ ಮಾಡುವಿರಿ. ಇಂತಹ ದುರ್ಮನಸ್ಸಿನವರನೂ ಸುಮನವ ಮಾಡಿ ಸುಜ್ಞಾನಪದವ ತೋರುವ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ತನುವಿನಲ್ಲಿ ಗುರುವೆ? ಜನನ ಮರಣ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಜನಿಸುವ ಅನಿತ್ಯತನು ನಿಮಗೆ. ಇಂತಪ್ಪ ತನುವನುಳ್ಳವರ ಪೂರ್ವಜಾತನ ಕಳೆದು, ಶುದ್ಧತನುವ ಮಾಡಿ ಪಂರ್ಚಭೂತತನುವ ಕಳೆದು, ಶುದ್ಧತನುವ ಮಾಡಿ ಭಕ್ತಕಾಯ ಮಮಕಾಯವೆಂದು ಶಿವನುಡಿದಂತಹ ಪ್ರಸಾದಕಾಯವ ಮಾಡಿ ನಿತ್ಯಸುಖದೊಳಿರಿಸಿದ ಪರಶಿವಮೂರ್ತಿ ಶ್ರೀಗುರುವೇ ಗುರು ಕಾಣಿರೆ. ವಿದ್ಯೆಯಲ್ಲಿ ಗುರುವೆ? ನೀವೆಲ್ಲರು ವೇದದ ಬಲ್ಲಡೆ, ಶಾಸ್ತ್ರವನರಿಯರಿ, ವೇದಶಾಸ್ತ್ರವ ಬಲ್ಲಡೆ, ಪುರಾಣವನರಿಯರಿ, ವೇದಶಾಸ್ತ್ರಪುರಾಣವ ಬಲ್ಲಡೆ, ಆಗಮವನರಿಯರಿ, ವೇದಶಾಸ್ತ್ರಪುರಾಣ ಆಗಮನ ಬಲ್ಲಡೆ ಅವರ ತಾತ್ಪರ್ಯವನರಿಯರಿ, ಅಷ್ಟಾದಶವಿದ್ಯೆಗಳ ಮರ್ಮವನರಿಯರಿ. ವೇದಂಗಳು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದವು. ಅದನ್ನರಿಯರಿ ನೀವು, ಅನ್ಯವುಂಟೆಂಬಿರಿ, `ಶಿವ ಏಕೋ ದ್ಯೇಯಃ ಶಿವಶಂಕರಃ ಸರ್ವಮನ್ಯತ್ಪರಿತ್ಯಾಜ್ಯಂ' ಅಂದವು, ನೀವು ಅನ್ಯವ ಧ್ಯಾನಿಸುವಿರಿ, ಅನ್ಯವ ಪೂಜಿಸುವಿರಿ, ವಿದ್ಯೆ ನಿಮಗಿಲ್ಲ, ನಿಮಗೆ ಹೇಳಿಕೊಡುವ ವ್ಯಾಸಾದಿಗಳಿಗಿಲ್ಲ, ಅವರಿಗೆ ಅಧಿಕನಾಗಿಹ ವಿಷ್ಣುಬ್ರಹ್ಮಾದಿಗಳಿಗಿಲ್ಲ, ವೇದಾದಿ ಅಷ್ಟಾದಶವಿದ್ಯೆಗಳ ಶಿವನೆ ಬಲ್ಲನು. ಸರ್ವವಿದ್ಯೆಗಳನೂ ಶಿವನೇ ಮಾಡಿದನು, ಶಿವನೇ ಕರ್ತನು `ಆದಿಕರ್ತಾ ಕವಿಸ್ಸಾಕ್ಷಾತ್ ಶೂಲಪಾಣಿರಿತಿಶ್ರುತಿಃ ಎಂದುದಾಗಿ. `ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಕತಯೇ ನಮಃ ಎಂದುದಾಗಿ, `ಈಶಾನಸ್ಸರ್ವವಿದ್ಯಾನಾಂ ಎಂದುದಾಗಿ, ವಿದ್ಯಾರೂಪನಪ್ಪ ಎಮ್ಮ ಪರಶಿವಮೂರ್ತಿ ಶ್ರೀಗುರುವೇ ವಿದ್ಯೆಯಲ್ಲಿ ಗುರು ಕಾಣಿರೆ, ದೀಕ್ಷೆಯಲ್ಲಿ ಗುರುವೇರಿ ನೀವು `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬಿರಿ, ಆ ವಿಷ್ಣುವ ಭಜಿಸಿ ವಿಷ್ಣುವೇ ಗುರುವೆಂಬಿರಿ. ಅಂತಹ ವಿಷ್ಣುವಿಂಗೆಯೂ ಉಪಮನ್ಯು ಗುರು ಕಾಣಿರೆ. ಅಂತಹ ಉಪಮನ್ಯು ಮೊದಲಾದ ದೇವಋಷಿ ಬ್ರಹ್ಮಋಷಿ ರಾಜಋಷಿ ದೇವಜಾತಿ ಮಾನವಜಾತಿಗಳಿಗೆ ಪರಶಿವನಾಚಾರ್ಯನಾಗಿ ಉಪದೇಶವ ಮಾಡಿದನು. ವೇದಶಾಸ್ತ್ರ ಆಗಮ ಪುರಾಣಂಗಳಲ್ಲಿ, ವಿಚಾರಿಸಿ ನೋಡಿರೆ. ಅದು ಕಾರಣ ಮಹಾಚಾರ್ಯನು ಮಹಾದೀಕ್ಷಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಶಿಕ್ಷೆಯಲ್ಲಿ ಗುರುವೇರಿ ನಿಮಗೆ ಶಿಕ್ಷಾಸತ್ವವಿಲ್ಲ. ವೀರಭದ್ರ ದೂರ್ವಾಸ ಗೌತಮಾದಿಗಳಿಂ ನೀವೆಲ್ಲಾ ಶಿಕ್ಷೆಗೊಳಗಾದಿರಿ. ಶಿಕ್ಷಾಮೂರ್ತಿ ಚರಲಿಂಗವಾಗಿ ಶಿಕ್ಷಿಸಿ ರಕ್ಷಿಸಿದನು ಪರಶಿವನು. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ ಅತಿಭಕ್ತ್ಯಾ ಲಿಂಗಸಂತುಷ್ಟಿರಪಹಾಸ್ಯಂ ಯಮದಂಡನಂ ಎಂದುದಾಗಿ, ಶಿಕ್ಷೆಯಲ್ಲಿ ಗುರು ಎಮ್ಮ ಪರಶಿವಮೂರ್ತಿ ಮದ್ಗುರುವೇ ಗುರು ಕಾಣಿರೆ. ಸ್ವಾನುಭಾವದಲ್ಲಿ ಗುರುವೆ? ನೀವು ದೇವದಾನವಮಾನವರೆಲ್ಲರು ದೇಹಗುಣವಿಡಿದು ಮದಾಂಧರಾಗಿ ಸ್ವಾನುಭಾವ[ರಹಿತರಾದಿರಿ]. ಸ್ಕಂದ ನಂದಿ ವೀರಭದ್ರ ಭೃಂಗಿನಾಥ ಬಸವರಾಜ ಮೊದಲಾದ ಎಮ್ಮ ಮಾಹೇಶ್ವರರೇ ಸ್ವಾನುಭಾವಸಂಪನ್ನರು. ಇಂತಹ ಮಹಾಮಹೇಶ್ವರರಿಗೆ ಸ್ವಾನುಭಾವವ ಕರುಣಿಸಬಲ್ಲ ಎಮ್ಮ ಪರಶಿವಮೂರ್ತಿ ಮಹದ್ಗುರು[ವೇ] ಸ್ವಾನುಭಾವದಲ್ಲಿ ಗುರು ಕಾಣಿರೆ. ಮಾತಾಪಿತರ ಗುರುವೆಂಬಿರಿ, ಲಘುವಿನಲ್ಲಿ ತಾವೆಲ್ಲರು ಜನಿಸಿದಿರಿ. ತಮ್ಮ ಸ್ಥಿತಿಯೂ ಲಘು, ಲಘುವಾಗಿ ಲಯವಪ್ಪುದು ಗುರುವೆ? ಅಲ್ಲ. ಸೋಮಃ ಪವತೇ ಜನಿತಾ ಮತೀನಾಂ ಜದಿತಾ ದಿವೋ ಜನಿತಾ ಪೃಥ್ವಿವ್ಯಾ ಜನಿತಾಗ್ನೇರ್ಜನಿತಾ ಸೂರ್ಯಸ್ಯ `ಜನಿತೋಥವಿಷ್ಣೋಃ ಎಂದುದಾಗಿ, `ಶಿವೋ ಮಮೈವ ಪಿತಾ ಎಂದುದಾಗಿ, ಸರ್ವರಿಗೂ ಮಾತಾಪಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೊ. ಭಕ್ತಿಯಲ್ಲಿ ಗುರುವೆ? ನಿಮಗೆ ಲವಲೇಶ ಭಕ್ತಿಯಿಲ್ಲ, ನೀವೆಲ್ಲರು ಉಪಾಧಿಕರು. ನಿರುಪಾಧಿಕರು ಎಮ್ಮ ಮಹಾಸದ್ಭಕ್ತರು ತನು ಮನ ಧನವನರ್ಪಿಸಿ ಉಂಡು ಉಣಿಸಿ ಆಡಿ ಹಾಡಿ ಸುಖಿಯಾದರು ಶರಣರು. ಇಂತಹ ಶರಣಭರಿತ ಸದಾಶಿವಮೂರ್ತಿ ಮಹಾಸದ್ಗುರುವೇ ಭಕ್ತಿಯಲ್ಲಿ ಗುರು ಕಾಣಿರೆ. ಜ್ಞಾನದಲ್ಲಿ ಗುರುವೇ? ನೀವೆಲ್ಲರು ದೇವದಾನವ ಮಾನವರು ಅಜ್ಞಾನಿಗಳು. ಜ್ಞಾತೃ ಜ್ಞಾನ ಜ್ಞೇಯವಪ್ಪ ಪರಶಿವಲಿಂಗವನರಿಯದೆ ಅಹಂಕಾರದಿಂ ಲಘುವಾದಿರಿ. ಪರಧನ ಪರಸ್ತ್ರೀ ಪರಕ್ಷೇತ್ರಕ್ಕೆ ಆಸೆಮಾಡಿ ಲಘುವಾದಿರಿ ನಿರಾಶಸಂಪೂರ್ಣರು ಶಿವಜ್ಞಾನಸಂಪನ್ನರು ಎಮ್ಮ ಮಾಹೇಶ್ವರರು ಇಂತಹ ಮಾಹೇಶ್ವರರಿಂಗೆ ಶಿವಜ್ಞಾನವ ಕರುಣಿಸುವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ವೈರಾಗ್ಯದಲ್ಲಿ ಗುರುವೆ? ನೀವು ಆಶಾಬದ್ಧರು, ನಿರಾಶಾಸಂಪೂರ್ಣರು ಎಮ್ಮ ಸದ್ಭಕ್ತರು. ಇಂತಹ ಭಕ್ತದೇಹಿಕನಪ್ಪ ದೇವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ವೈರಾಗ್ಯದಲ್ಲಿ ಗುರು ಕಾಣಿರೆ. ಇದು ಕಾರಣ, ನಿತ್ಯದಲ್ಲಿ, ಸತ್ಯದಲ್ಲಿ, ಅಷ್ಟಮಹದೈಶ್ವರ್ಯದಲ್ಲಿ ದೀಕ್ಷೆಯಲ್ಲಿ, ಸ್ವಾನುಭಾವದಲ್ಲಿ, ಜ್ಞಾನದಲ್ಲಿ ವಿದ್ಯೆಯಲ್ಲಿ, ಬುದ್ಧಿಯಲ್ಲಿ, ವೈರಾಗ್ಯದಲ್ಲಿ, ಮಾತಾಪಿತರಲ್ಲಿ ಉಪಮಾತೀತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ, ಮಹಾಘನತರವಪ್ಪ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಲಲಾಟಲೋಚನಂ ಚಾಂದ್ರೀಂ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಿ ಎಂದುದಾಗಿ ಪರಶಿವನೇ ಗುರು, ಶ್ರೀಗುರುವೇ ಪರಶಿವನು. ಇಂತಹ ಮಹಾಸದ್ಗುರುವಪ್ಪ ಪರಶಿವಮೂರ್ತಿ ಕಾರುಣ್ಯವ ಮಾಡಿ, ಸದ್ಭಕ್ತಿಪದವ ತೋರಿದ ಎಮ್ಮ ಗಣನಾಥದೇವರೇ ಗುರು ಕಾಣಿರೆ. ಇದು ಕಾರಣ, ಶರಣಮೂರ್ತಿ ಶ್ರೀಗುರು. ಶ್ರೀಗುರು ಲಿಂಗ ಜಂಗಮ ಒಂದೆಯಾಗಿ ಶ್ರೀಗುರುವೇ ಗುರು, ಉಳಿದದ್ದೆಲ್ಲಾ ಲಘು. ಪರಶಿವಲಿಂಗವೇ ಗುರು, ಉಳಿದವೆಲ್ಲವೂ ಲಘು. ಜಂಗಮವೇ ಗುರು, ಉಳಿದವೆಲ್ಲವೂ ಲಘು. ಇದನರಿದು ಶ್ರೀಗುರುವನೇ ನಂಬುವುದು. ತನು ಮನ ಧನವನರ್ಪಿಸುವುದು, ನಿರ್ವಂಚಕನಾಗಿ ನಿರುಪಾಧಿಕನಾಗಿ ನಿರಾಶಾಸಂಪೂರ್ಣನಾಗಿ, ಧ್ಯಾನಿಸಿ ಪೂಜಿಸಿ ಸದ್ಭಕ್ತಿಯಿಂ ವರ್ತಿಸಿ ಪ್ರಸಾದವ ಪಡೆದು ಮುಕ್ತನಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಗುರು ಲಿಂಗ ಜಂಗಮ ಪ್ರಸಾದ- ಒಂದೆ ಪರಶಿವಮೂರ್ತಿ[ಯ] ಮಹಾವಸ್ತುಗಳು ಕೇಳಿರಣ್ಣಾ. ಅರಿದು ಧ್ಯಾನಿಸಿ ಪೂಜಿಸಿ ಸೇವಿಸಿ ಅರ್ಚಿಸಿ ಅರ್ಪಿಸಿ ಧರಿ[ಸೆ] ಧರ್ಮ ಅರ್ಥ ಕಾಮ ಮೋಕ್ಷ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ- ಈ ಚತುರ್ವಿಧಫಲಪದವಿಯ ಕೊಡುವ[ವು] ಗುರು ಲಿಂಗ ಜಂಗಮ ಪ್ರಸಾದವೆಂದು ನಂಬುವುದು, ಇದು ಸತ್ಯ, ಶಿವ ಬಲ್ಲ, ಶಿವನಾಣೆ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಮತ್ತೆಯುಮಾ, ಮಂತ್ರಮೂರ್ತಿಯಂ ಧ್ಯಾನಿಸಿ ಪೂಜನಂಗೆಯ್ವುದಂ ಪೇಳ್ವೆನೆಂತೆನೆ- ಪೂರ್ವೋಕ್ತ ಪಂಚಾಕ್ಷರ ಷಡಕ್ಷರಷ್ಪಾಕ್ಷರ ನವಾಕ್ಷರ ದಶಾಕ್ಷರಂಗಳಿಂ ತರದಿಂದಾ ಮಂತ್ರಮೂರ್ತಿಯಂ ಕರೆವುದು, ಮೂರ್ತಿಗೊಳಿಪುದು, ಪ್ರತ್ಯಕ್ಷೀಕರಿಪುದು, ಮಾನಸಾದ್ಯಂತಃಕರಣಮಂ ನಿವೇದಿಪುದು ಪೂಜಿಪುದಿಂತು ಹೃತ್ಕಮಲ ಕರ್ಣಿಕಾಮಧ್ಯದಲ್ಲಿರ್ದ ಮಂತ್ರಮೂರ್ತಿಗೆ ಬ್ರಹ್ಮಮಂತ್ರಂಗಳಿನಂಗಮಂತ್ರಗಳಿಂದೆಯುಂ ಪಾದ್ಯ ಗಂಧಾದಿಗಳನೀವುದು- ಮಾದಿಶಕ್ತಿಗಳು ಸ್ಥಾಪಿಸುವ ಕಾಲದಲ್ಲಿಯಾಯಾಯ ಶಕ್ತಿ ಬೀಜಂಗಳ- ನಂತಾಯಾಯ ಶಕ್ತಿಗಳ ಹೃದಯಂಗಳಲ್ಲಿ ನ್ಯಾಸಂಗೆಯ್ವುದೆಲ್ಲ ಕ್ರಿಯಾಶರೀರವೆಂದುಪದೇಶಿಸಿದೆಯಯ್ಯಾ, ಪರಾತ್ಪರ ಪರಶಿವಲಿಂಗೇಶ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಆಧಾರ ಸ್ವಾಧಿಷಾ*ನ ಮಣಿಪೂರಕ ಅನಾಹತ ವಿಶುದ್ಧಿ ಆಜ್ಞಾ ಎಂಬ ಷಡಾಧಾರಚಕ್ರಂಗಳ ಭೇದಿಸಿಕೊಂಡು, ಬ್ರಹ್ಮ ವಿಷ್ಣು ರುದ್ರ ಈಶ್ವರ ಮಹೇಶ್ವರ ಸದಾಶಿವನ ಧ್ಯಾನಿಸಿ ಕಂಡಡೆ, ಮಹಿಮಾದಿಗಳಳಿವವೆಂದು ನುಡಿವರು. ಮುಟ್ಟಿ ಮುಟ್ಟಿ ನೋಡುವುದು ಮಾಯೆ, ಕರುಣದಿಂದ ಕಂಡುದು ಮಾಯೆ, ಮನದಿಚ್ಫೆ ಅರಿವುದು ಮಾಯೆಯಲ್ಲವೆ ? ತನುಮನ ಹಿಡಿದು ನೋಡಿದುದೆಲ್ಲ ಮಾಯೆಯಲ್ಲವೆ ? ದೇಹವಿಡಿದು ವಿದೇಹಿಯಾದ ಮಹಾತ್ಮಂಗೆ ದೇಹವಿಲ್ಲ ಮಾಯೆಯಿಲ್ಲ ಕರುಣವಿಲ್ಲ ಮರಣವಿಲ್ಲ ಜನನವಿಲ್ಲ. ಪ್ರತಿಯಿಲ್ಲದ ಘನಮಹತೋತ್ತಮನಾದ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
ಶೈವಸಿದ್ಧಾಂತಿಗಳೆಂಬ ಅಬದ್ಧ ಭವಿಗಳ ಮುಖವ ನೋಡಲಾಗದು. ಅದೇನು ಕಾರಣವೆಂದೊಡೆ : ಸಾಂಗೋಪಾಂಗ ಶುದ್ಧಶರೀರಿಯಾಗಿ ಉನ್ನತಾಸನ ಗದ್ದುಗೆಯಲ್ಲಿ ಕುಳಿತು ಕಣ್ಣುಮುಚ್ಚಿ ಅಂತರಂಗದಲ್ಲಿ ಪರಮಾತ್ಮನ ಕಳೆಯ ಧ್ಯಾನಿಸಿ ಮನಸ್ಸಿನಲ್ಲಿ ಕಟ್ಟಿ ದೃಷ್ಟಿಗೆ ತಂದು, ಆ ದೃಷ್ಟಿಯಿಂದ ಪುಷ್ಪದಲ್ಲಿ ತುಂಬಿ ಮೃತ್ತಿಕೆ ಪಾಷಾಣಾದಿ ನಾನಾ ತರಹದ ಲಿಂಗಾಕಾರದ ಮೂರ್ತಿಯ ಸ್ಥಾಪಿಸಿ, ದೇವರೆಂದು ಭಾವಿಸಿ, ಜಲ ಗಂಧ ಅಕ್ಷತೆ ಪುಷ್ಪ ಧೂಪ ದೀಪ ನೈವೇದ್ಯ ತಾಂಬೂಲಾದಿ ಅಷ್ಟವಿಧಾರ್ಚನೆ ಷೋಡಶೋಪಚಾರಂಗಳನೆ ಮಾಡಿ, ಆ ಪೂಜಾಂತ್ಯದಲ್ಲಿ ಎನ್ನ ಮಲಿನ ದೇಹದಲ್ಲಿ ನೀನು ನಿರ್ಮಲವಾದ ವಸ್ತುವು ಇರಬೇಡ ಹೋಗೆಂದು ತನ್ನ ದೇವರ ಬಾವಿ ಕೆರೆ ಹಳ್ಳ ಕೊಳ್ಳಾದಿ ಸ್ಥಾನಂಗಳಲ್ಲಿ ಹಾಕಿ ಬಿಡುವ ಶಿವದ್ರೋಹಿಗಳಿಗೆ ಕುಂಭೀಪಾತಕ ನಾಯಕ ನರಕ ತಪ್ಪದಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->