ಅಥವಾ

ಒಟ್ಟು 161 ಕಡೆಗಳಲ್ಲಿ , 61 ವಚನಕಾರರು , 154 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯವೆಂಬ ಕಲ್ಪಿತವ ಕಳೆದು, ಪ್ರಾಣವೆಂಬ ಸೂತಕವ ಹರಿದು, ನಿಜಭಕ್ತಿ ಸಾಧ್ಯವಾದಲ್ಲದೆ ಲಿಂಗಪರಿಣಾಮವನೆಯ್ದಿಸಬಾರದು (ವೇಧಿಸಬಾರದು ?) ಅನು ಮಾಡಿದೆ, ನೀವು ಕೈಕೊಳ್ಳಿ ಎಂದಡೆ ಅದೇ ಅಜಾÕನ. ನಮ್ಮ ಗುಹೇಶ್ವರಲಿಂಗಕ್ಕೆ ಕುರುಹಳಿದು ನಿಜ ಉಳಿದವಂಗಲ್ಲದೆ ಪದಾರ್ಥವ ನೀಡಬಾರದು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ವಿಶ್ವನ ಕಾರ್ಯವ ಕೆಡಿಸಿ ಕಂಡಲ್ಲಿ ತೈಜಸನ ಕಾರ್ಯಕಳವಳ ಕಡೆಗಾಯಿತ್ತು. ಪ್ರಾಜÕನ ಪರಿಣಾಮ ನಿಜ ಪರಿಣಾಮದ ನಿಲವು ನಿಜವಾದಲ್ಲಿ ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ಶರಣ.
--------------
ದೇಶಿಕೇಂದ್ರ ಸಂಗನಬಸವಯ್ಯ
ತಾಮಸ ಸಂಬಂಧ ಕನಿಷ್ಠಂಗೆ ಹುಸಿ ಜಾಗ್ರದಿಟದಂತೆ ತೋರುಗು. ರಾಜನ ಸಂಬಂಧ ಮಧ್ಯಮಂಗೆ ಹುಸಿ ತೂರ್ಯ ದಿಟದಂತೆ ತೋರುಗು. ಸಾತ್ವಿಕ ಸಂಬಂಧ ಉತ್ತಮಂಗೆ ದಿಟ ತಾನೆ ತಾನಾಗಿ ನಿಜ ನಿತ್ಯವಾಗಿರ್ದುದು, ಸಂದೇಹವಿಲ್ಲ. ಇದು ಸಚ್ಚಿದಾನಂದ ನಿತ್ಯ ಪರಿಪೂರ್ಣ ತೂರ್ಯಾತೀತವಪ್ಪ ತತ್ತ್ವ ಇಂತುಂಟೆಂದು ತಿಳಿದ ತಿಳಿವು ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಜಾÕನನೇತ್ರ ಮುಸುಕ ತೆಗೆದು ಮುಂದಕ್ಕೆ ಅದೇನ ಕಾಬುದು? ಕಾಬುದು ಕಾಣಿಸಿಕೊಂಬುದು ನಿಜ ತಾನಾದಲ್ಲಿ ಗೋಪತಿನಾಥ ವಿಶ್ವೇಶ್ವರಲಿಂಗವು ಉಭಯನಾಮವಿಲ್ಲ.
--------------
ತುರುಗಾಹಿ ರಾಮಣ್ಣ
ಹರತೇರು ಬಿತ್ತಿದ ಗಿಡವಿನ ಹೂವ್ವ ಕೊಯ್ದು ಊರೆಲ್ಲ ಕಟ್ಟಿದ ಕೆರೆ ನೀರ ತಂದು ನಾಡೆಲ್ಲ ನೋಡಿರಿಯೆಂದು ಪೂಜಿಸುವ ಪುಣ್ಯ ನೀರಿಗೊ ಹುವ್ವಿಗೊ ನಾಡೆಲ್ಲಕ್ಕೊ ಪೂಜಿಸಿದಾತಗೊ ಇದ ನಾನರಿಯೆ ನೀ ಹೇಳೆಂದಾತ ನಮ್ಮ ದಿಟ್ಟ ವೀರಾದ್ಥಿವೀರ ನಿಜ ಭಕ್ತ ಅಂಬಿಗರ ಚವುಡಯ್ಯನು
--------------
ಅಂಬಿಗರ ಚೌಡಯ್ಯ
ಸರ್ವಮಯ ಲಿಂಗಾಂಕಿತಸೀಮೆಯಾಗಬೇಕೆಂಬಲ್ಲಿ ಆ ಘನವ ತಿಳಿದು ತನ್ನ ತಾನೆ ವಿಚಾರಿಸಿಕೊಂಬಲ್ಲಿ ಸ್ಥೂಲತನುವಿನಲ್ಲಿ ಕಾಬ ಕಾಣಿಕೆ ದೃಷ್ಟವಾಗಿ ಲಿಂಗಾಂಕಿತ. ಸೂಕ್ಷ್ಮತನುವಿನಲ್ಲಿ ಕಾಬ ಕಾಣಿಕೆ ಎಚ್ಚತ್ತಲ್ಲಿ ಬಯಲಾಯಿತ್ತು ಲಿಂಗಾಂಕಿತ. ಕಾರಣದಲ್ಲಿ ಪ್ರಮಾಣಿಸುವುದಕ್ಕೆ ಲಿಂಗಾಂಕಿತಕ್ಕೆ ಒಡಲಾವುದು ? ಇದ ನಾನರಿಯೆ, ನೀವೆ ಬಲ್ಲಿರಿ. ಜಾಗ್ರ, ಸ್ವಪ್ನ, ಸುಷುಪ್ತಿಗಳಲ್ಲಿ ಕಾಬ ಲಿಂಗಾಂಕಿತದ ಭೇದ ನೇಮವಾವುದು ? ಜಾಗ್ರದಲ್ಲಿ ತೋರುವ ನಿಜ ಸ್ವಪ್ನಕ್ಕೊಡಲಾಗಿ, ಸ್ವಪ್ನದಲ್ಲಿ ತೋರುವ ನಿಜ ಸುಷುಪ್ತಿಗೊಡಲಾಗಿ, ಉಭಯದಲ್ಲಿ ಕೂಡಿದ ಕೂಟ ತನ್ಮಯಲಿಂಗಾಂಕಿತವಾಯಿತ್ತು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಲೇಪವಾಗಿ.
--------------
ಅಕ್ಕಮ್ಮ
ದೃಕ್ಕು ಸಕಲವನವಗವಿಸುವನ್ನಕ್ಕ, ಶ್ರೋತ್ರ ಶಬ್ದವ ವೇದ್ಥಿಸುವನ್ನಕ್ಕ, ಕ್ರೀ ಶೂನ್ಯವೆನಲೇತಕ್ಕೆ? ಭಾವಿಸಿಹೆನೆಂಬನ್ನಕ್ಕ ಕ್ರೀ ಅರಿದೆಹೆನೆಂಬನ್ನಕ್ಕ ಸೂತಕ. ಕುಕ್ಕಳಗುದಿವುದ ಹುಟ್ಟಿನಲ್ಲಿ ತೆಗೆದಿಕ್ಕುವಂತೆ, ಅದು ದೃಷ್ಟಕ್ಕ ದೃಷ್ಟ, ನಿಶ್ಚಯಕ್ಕೆ ನಿಜ. ಈ ಗುಣ ಉಭಯಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 49 ||
--------------
ದಾಸೋಹದ ಸಂಗಣ್ಣ
ವೇದಶ್ರುತಿಯಿಂದ ವಸ್ತುವನರಿತೆಹೆನೆಂದಡೆ ಆ ವೇದವೆ ಹಾದಿಯೆ ವಸ್ತುವ ಕಾಬುದಕ್ಕೆ ? ಆ ವೇದ ಸರ್ವವು ಬ್ರಹ್ಮವೆಂದಲ್ಲಿ ವಸ್ತು ಎಲ್ಲಿ ಉಳಿಯಿತ್ತು ? ಆ ತೆರನ ತಿಳಿದು ವೇದವಾರನರಸಿತ್ತು ? ಶ್ರುತಿ ಯಾರ ಭೇದಿಸಿತ್ತು ? ಆ ಗುಣ ನಾದಬಿಂದುಕಳೆಯೊಳಗಾದಲ್ಲಿ ವಸ್ತುತತ್ವರೂಪಾಯಿತ್ತು. ಆ ಸ್ವರೂಪದ ಭೇದದಿಂದ ಪಂಚಭೌತಿಕದ ಗುಣದಿಂದ ಪಂಚವಿಂಶತಿತತ್ವಂಗಳೆಲ್ಲವೂ ಗೊತ್ತಾದವು. ನಾಲ್ಕು ವೇದ, ಹದಿನಾರು ಶಾಸ್ತ್ರ, ಇಪ್ಪತ್ತೆಂಟು ದಿವ್ಯಪುರಾಣಂಗಳಲ್ಲಿ ವೇದ್ಥಿಸಿ ಭೇದಿಸಿ ಕಂಡೆನೆಂಬಲ್ಲಿ ನಿಂದಿತ್ತು ನಿಜ ಸಂದೇಹಕ್ಕೆ ಒಳಗಾದುದಾಗಿ. ತರ್ಕಂಗಳಿಂದ ತರ್ಕಿಸಿ ನೋಡಿ ಮಿಕ್ಕಾದ ತತ್ವಂಗಳಲ್ಲಿ ಲಕ್ಷಿಸಿ ಪ್ರಮಾಣಿಸಿದಲ್ಲಿ ವಸ್ತು ಹಲವು ಕುಲವೆಂದು ಕಲ್ಪಿಸಿ ನುಡಿವಲ್ಲಿ ವಿಭೇದ ಪಕ್ಷವಲ್ಲದೆ ವಸ್ತು ಏಕರೂಪು. ಜಲ ಬಹುನೆಲಂಗಳಲ್ಲಿ ನಿಂದು ಒಲವರವಿಲ್ಲದೆ ಸಸಿ ವೃಕ್ಷಂಗಳ ಸಲಹುವಂತೆ ಸರ್ವಗುಣಸಂಪನ್ನನಾದೆಯಲ್ಲಾ ಪರಮಪ್ರಕಾಶ ಪರಂಜ್ಯೋತಿ ಪಂಚಬ್ರಹ್ಮಸ್ವರೂಪನಾದೆಯಲ್ಲಾ ಎನಗೆ ನೀನಾದೆಹೆನೆಂದು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಾ.
--------------
ಪ್ರಸಾದಿ ಭೋಗಣ್ಣ
ಕುಲ ಚಲ ಮೊದಲಾದ ಅಷ್ಟಮದಂಗಳನರಿತು ದಾಸೋಹಕ್ಕೆಡೆಯಾಗಿರಬೇಕು. ಪೃಥುವ್ಯಾದಿ ಅಷ್ಟತನುಮದವೆಂಬ ಮಹಿಮೆಯೊಳಗಿರ್ದು ಲಿಂಗಾವಧಾನಿಯಾಗಿರಬೇಕು. ತೈಲಾಭ್ಯಂಜನ ವಸ್ತ್ರ ಆಭರಣ ಸುಗಂಧದ್ರವ್ಯ ಷಡುರಸಾನ್ನಾದಿ ಸತಿಸಂಗ ಸುಖ ದುಃಖಗಳ ಲಿಂಗಮುಖ ಮುಂತಾಗಿ ಪ್ರಸಾದಭೋಗಿಯಾಗಿರ್ಪುದು. ಯಮ ನಿಯಮಾದಿ ಅಷ್ಟಾಂಗ ಯೋಗದಲ್ಲಿ ನಿರತನಾದಡೇನು ? ದಾಸೋಹಕ್ಕೆ ಸ್ವಯವಾಗಿರಬೇಕು. ಗೃಹ ಅರಮನೆ ತೋಟ ಗೋಕುಲ ವಾಹನ ಪರಿಜನ ಕೀರ್ತಿಜನದೊಳಗಿರ್ದು ಶರಣರ ಮರೆದಿರಲಾಗದು. ಇಂದ್ರಾದಿ ದೇವತೆಗಳು ಅಷ್ಟದಿಕ್ಕಿನಲ್ಲಿ ಕರ್ತರಾಗಿ ನಿಮ್ಮ ನಿಜ ಭೃತ್ಯರಾಗಿರ್ದರು. ಇಂತೀ ಅಷ್ಟಸಂಪಾದನೆ ನಾಲ್ವತ್ತೆಂಟರಿಂದ ಕೂಡಲಚೆನ್ನಸಂಗಯ್ಯನ ಶರಣರು ಲೋಕಾಧಿಪತಿಗಳು
--------------
ಚನ್ನಬಸವಣ್ಣ
ದಶದಿಕ್ಕುಗಳಿಂದ ರೂಹಿಸಬಾರದಾಗಿ, ಕಾಲಂಗಳಿಂದ ಕಲ್ಪಿಸಬಾರದು. ಕಾಲಂಗಳಿಂದ ಕಲ್ಪಿಸಬಾರದಂಥ ಅಖಂಡ ಚಿನ್ಮಾತ್ರ ಸ್ವರೂಪನಾದ ಶಿವನ ಸ್ವಾನುಭಾವಜ್ಞಾನದಿಂ ಸಾದ್ಥಿಸಿ ಕಂಡ ಶಾಂತ ಸ್ವಯಂಜ್ಯೋತ ಸ್ವರೂಪನಾದ ಶರಣ. ಅಂಗಸಂಗವಿಲ್ಲದೆ ನಿಸ್ಸಂಗಿಯಾದ ಕಾರಣ ಉಪಮಿಸಬಾರದು. ಕಡೆ ಮೊದಲಿಲ್ಲದಾಕಾಶವು ಖೇಚರಾದಿಗಳಿಂದ ಲೇಪವಿಲ್ಲದಂತೆ ನಿತ್ಯ ನಿಜ ಜೈತನ್ಯಾಕಾರ ರೂಪನಾಗಿಹನು, ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನು.
--------------
ಸ್ವತಂತ್ರ ಸಿದ್ಧಲಿಂಗ
ಮಾತಿನಲ್ಲಿ ಬಲ್ಲೋತ್ತರವಂತರೆಲ್ಲರೂ ಆತನನರಿದುದಿಲ್ಲ ಆತ ಏತರೊಳಗೂ ಸಿಕ್ಕದ ಅಜಾತ ಶಂಭು. ಆತನ ನೀತಿಯನರಿವುದಕ್ಕೆ ಅಸುರ ಕರ್ಮವ ಬಿಟ್ಟು ವೇಷದಿಂದಾದ ಘಾತಕತನವನೊಲ್ಲದೆ ಭಕ್ತಿಯೆಂಬ ಆಶೆ ಕುರಿತು ಪೋಷಣವ ಹೊರೆಯದೆ ನಿಜ ತತ್ವದ ಆಶೆಯೇ ಸಾಕಾರವಾಗಿ ಅರಿದ ಆತ್ಮ ಕರಿಗೊಂಡಲ್ಲಿ ಹರಿಪ್ರಿಯ ಅಘೋರನಾಶನ ರಾಮನಾಥಾ.
--------------
ಗುಪ್ತ ಮಂಚಣ್ಣ
ಪಂಚತತ್ವಂಗಳುವಿಡಿದಾಡುವ ಚತುರ್ದಶೇಂದ್ರಿಯ ವಿಕಾರಂಗಳು ತಾನಲ್ಲ, ತನ್ನವಲ್ಲ. ತನುವುಂಟೆಂದಡೆ ಅಹಮ್ಮಾದಿಗೆ ಸಂದು, ಬಂಧಮೋಕ್ಷಂಗಳಿಗೊಳಗಾಯಿತ್ತು ನೋಡಾ. ಕುರುಹಿಲ್ಲದ ಲಿಂಗ ಅರಿವಿನೊಳು ಬಳಿಸಂದಡೆ ಅರಿವು ಕುರುಹು ತೆರಹಿಲ್ಲದೆ ನಿಂದ ನಿಲವು ಸೌರಾಷ್ಟ್ರ ಸೋಮೇಶ್ವರಾ ನಿಮ್ಮ ನಿಜ ತಾನಾದ ಶರಣ.
--------------
ಆದಯ್ಯ
ಸಿಂಗದ ನಡು ಮುರಿಯಲಾ ಸಿಂಗವೇನು ಬಾತೆ ಸುಂಡಿಲು ಮುರಿಯಲು ಗಜವೇನು ಬಾತೆ ಸಂಗ್ರಾಮದಲ್ಲಿ ವೀರನುಳಿಯಲದೇನು ಬಾತೆ ಶೃಂಗಾರದ ಮೂಗು ಹೋದಡೆ ಶೃಂಗಾರವೇನು ಬಾತೆ ನಿಜ ತುಂಬಿದ ಭಕ್ತಿ ತುಳುಕಾಡದವರ ಸಂಗವೇನು ಬಾತೆ ಕೂಡಲಸಂಗಮದೇವಾ.
--------------
ಬಸವಣ್ಣ
ನಿಜ ಬಲ್ಲವಂಗೆ ಜಲವೂ ಸರಿ, ನೆಲವೂ ಸರಿ. ಅರಿದು ನುಡಿವಂಗೆ ಜಗವೂ ಸರಿ, ಸಮಯವೂ ಸರಿ. ಎಮಗಾಮಿಥ್ಯವಿಲ್ಲ, ಸಂಗನಬಸವಣ್ಣಾ, ಗುಹೇಶ್ವರಲಿಂಗವು ಪರಿಪೂರ್ಣವಾದ ಕಾರಣ.
--------------
ಅಲ್ಲಮಪ್ರಭುದೇವರು
ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶ್ಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ : ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ-ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂದ್ಥಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಠಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗವೈಶ್ವರ್ಯನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂದ್ಥಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅನೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವಮಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಬ್ಥಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದ್ಯವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದ್ವೈತಾದ್ವೈತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತನಾಗಿ ಷಟ್‍ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ ಇಂತೀ ಭಾವನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡದು, ಸದ್ಭಕ್ತಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿರುವ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವೆಂತೆಂದಡೆ : ಶ್ರೀಮದನೇಕಲೋಕ-ವಿಸ್ತಾರಕ ಕಾರಣರೂಪ, ಸತ್ತಿಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿಸ್ವರೂಪ, ಪರತರ ಪರಬ್ರಹ್ಮಾನುಭಾವ ಸಾರ್ವಭೌಮ, ಷಟ್ಸ್ಥಲಸ್ಥಾಪನಾಚಾರ್ಯ, ಪಂಚಾಚಾರ ಪ್ರಮಥನಾಯಕ ಸರ್ವಾಚಾರ ನಿಷ್ಠಾಗರಿಷ್ಠ, ಲಿಂಗಲೋಲುಪ್ತ, ಲಿಂಗಭೋಗೋಪಭೋಗಿ, ಜಂಗಮಾನುಭಾವ, ಸದ್ಭಕ್ತ ಹೃನ್ಮಂದಿರವಾಸ, ನಿತ್ಯ ಕಲ್ಯಾಣೋತ್ಸಹಪೂರ್ಣಾವತರ್ಯ, ಲಿಂಗಲೀಲಾನಂದ, ಏಕವಿಂಶತಿಯುಗಸ್ಥಾಪನಾಚಾರ್ಯವರ್ಯ, ಮಂಜುಳಾಂತರಂಗ, ಮನುಮುನಿವಂದ್ಯ, ಪ್ರದಾಯಕ ತ್ರೈದಶಪರ್ವತಾದ್ಥೀಶ್ವರ, ಮದನಮರ್ದನ, ಮಾಯಾಕೋಲಾಹಲ, ಅಷ್ಟಾವರಣ ಸ್ವರೂಪ, ತ್ರಿವಿಧಾನುಗ್ರಹ ಪ್ರತಿಪಾದಕ, ತ್ರಿವಿಧ ಪಾದೋದಕ ಪ್ರಸಾದಲೋಲುಪ್ತ, ತ್ರಿವಿಧಾಚಾರಸನ್ಮೋಹಿ, ತ್ರಿಗುಣಾನಂದಭರಿತ, ತ್ರಿಮಲದೂರ, ನಿರ್ಮಲ-ನಿಃಕಳಂಕ-ನಿಃಶೂನ್ಯ-ನಿರಂಜನ, ಅನುಮಿಷಾರಾಧ್ಯ, ತ್ರಿವಿಧ ಲಿಂಗಾನುಭಾವ ಅಖಿಳಾಂಡ ಪ್ರತಿಷ್ಠಾಪ್ರದಾಯಕ, ಸದ್ಧರ್ಮಸ್ವರೂಪ, ಸತ್ಕ್ರಿಯಾ ಸಮ್ಯಜ್ಞಾನ ಸದಾಭರಿತ, ನಿತ್ಯ ತೃಪ್ತಾನಂದಮಂತ್ರಸ್ವರೂಪ, ಅನಂತಸೂರ್ಯಚಂದ್ರಾಗ್ನಿಪ್ರಕಾಶ, ಅಜ್ಞಾನ ತಿಮಿರಾಂಧಸ್ಯ, ಕಾರಣಾವತಾರ ಸರ್ವಜ್ಞ ಪ್ರದಾಯಕ, ಕಾಮಧೇನು-ಕಲ್ಪವೃಕ್ಷ, ಚಿಂತಾಮಣಿಗೆ ಮಾತೃಸ್ವರೂಪ, ವಾಚಾತೀತ-ವರ್ಣಾತೀತ-ಭಾವಾತೀತ-ಜ್ಞಾನಾತೀತ, ಚಿತ್ಕಲಾಸ್ವರೂಪ, ಅಯೋನಿಸಂಭವ, ಅಜಡಸ್ವರೂಪ, ಬತ್ತೀಶಕಳಾಮೂರ್ತಿ, ಜರೆಮರಣ ಸಂಸ್ಕøತಿದೂರ, ವರವೀರಶೈವಮತ ಸ್ಥಾಪನಾಚಾರ್ಯ, ನಿಜ ಶಿವಯೋಗಭರಿತಾನಂದಮೂರ್ತಿ, ಗುರುಮಾರ್ಗಾಚಾರ ಪ್ರತಿಷ್ಠಾಪ್ರದಾಯಕ, ಅನಾಚಾರ ಸಂಹಾರ, ಮಹಿಮಾಸ್ವರೂಪ, ಸದ್ಭಕ್ತಜಿಹ್ವಾಗ್ರ ಹೃನ್ಮಂದಿರಾವಾಸ. ಏಕವಿಂಶತಿ ದೀಕ್ಷಾಬೋಧಸ್ವರೂಪ, ಷಡ್ಗುಣೈಶ್ವರ್ಯ ಸಂಪತ್ಕರವನುಳ್ಳ ಮುಕ್ತಿಪ್ರದಾಯಕ, ಮೂಲಮಂತ್ರಮೂರ್ತಿ ಲೋಕಪಾವನಾರ್ಥ ಕೂಡಲಸಂಗಮೇಶ್ವರನ ಚಿದ್ಗರ್ಭೋದಯ ಬಸವದಂಡನಾಥ ಪ್ರಮಥಗಣಂಗಳ ಭಕ್ತಿಹಿತಾರ್ಥವಾಗಿ, ಅವತರಿಸಿದಂಥ ವಿರಾಣ್ಮೂರ್ತಿ! ಅನಾದಿಗಣೇಶ್ವರ, ಅನಾದಿಗಣೇಶ್ವರನ ಶಿಷ್ಯರು ಆದಿಗಣೇಶ್ವರ, ಆದಿಗಣೇಶ್ವರನ ಶಿಷ್ಯರು ನಿರ್ಮಾಯವೆಂಬ ಗಣೇಶ್ವರ, ನಿರ್ಮಾಯನೆಂಬ ಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ, ನಿರಂಜನನೆಂಬ ಗಣೇಶ್ವರನ ಶಿಷ್ಯರು ಜ್ಞಾನಾನಂದನೆಂಬ ಗಣೇಶ್ವರ, ಜ್ಞಾನಾನಂದನೆಂಬ ಗಣೇಶ್ವರನ ಶಿಷ್ಯರು ಆತ್ಮ ಗಣೇಶ್ವರ, ಆತ್ಮಗಣೇಶ್ವರನ ಶಿಷ್ಯರು ಆಧ್ಯಾತ್ಮ ಗಣೇಶ್ವರ, ಆಧ್ಯಾತ್ಮಗಣೇಶ್ವರನ ಶಿಷ್ಯರು ರುದ್ರನೆಂಬ ಗಣೇಶ್ವರ, ರುದ್ರನೆಂಬ ಗಣೇಶ್ವರನ ಶಿಷ್ಯರು ಬಸವಪ್ರಭುದೇವರು, ಬಸವಪ್ರಭುದೇವರ ಶಿಷ್ಯರು ಆದಿಲಿಂಗದೇವರು, ಆದಿಲಿಂಗದೇವರ ಶಿಷ್ಯರು ಚೆನ್ನವೀರೇಶ್ವರದೇವರು, ಚೆನ್ನವೀರೇಶ್ವರದೇವರ ಶಿಷ್ಯರು ಹರದನಹಳ್ಳಿ ಗೋಸಲದೇವರು, ಹರದನಹಳ್ಳಿ ಗೋಸಲದೇವರ ಶಿಷ್ಯರು ಶಂಕರದೇವರು, ಶಂಕರದೇವರ ಶಿಷ್ಯರು ದಿವ್ಯಲಿಂಗದೇವರು, ದಿವ್ಯಲಿಂಗದೇವರ ಶಿಷ್ಯರು ಚೆನ್ನಬಸವೇಶ್ವರದೇವರು, ಚೆನ್ನಬಸವೇಶ್ವರದೇವರ ಶಿಷ್ಯರು ತೋಂಟದ ಸಿದ್ಧೇಶ್ವರಸ್ವಾಮಿಗಳು, ತೋಂಟದ ಶಿದ್ಧೇಶ್ವರಸ್ವಾಮಿಗಳ ಸಿಷ್ಯರು ಮರುಳಸಿದ್ಧೇಶ್ವರಸ್ವಾಮಿಗಳು, ಮರುಳಸಿದ್ಧೇಶ್ವರಸ್ವಾಮಿಗಳ ಶಿಷ್ಯರು ರೇವಣಸಿದ್ಧೇಶ್ವರಸ್ವಾಮಿಗಳು, ರೇವಣಸಿದ್ಧೇಶ್ವರಸ್ವಾಮಿಗಳ ಶಿಷ್ಯರು ಶಿವಲಿಂಗೇಶ್ವರಸ್ವಾಮಿಗಳು, ಶಿವಲಿಂಗೇಶ್ವರಸ್ವಾಮಿಗಳ ಶಿಷ್ಯರು ನಿರಂಜನೇಶ್ವರಸ್ವಾಮಿಗಳು, ನಿರಂರನೇಶ್ವರಸ್ವಾಮಿಗಳ ಶಿಷ್ಯರು ಮರಿಬಸವಲಿಂಗೇಶ್ವರಸ್ವಾಮಿಗಳು, ಮರಿಬಸವಲಿಂಗೇಶ್ವರಸ್ವಾಮಿಗಳ ಶಿಷ್ಯರು ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳು, ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳ ಶಿಷ್ಯರು ಚೆನ್ನಮಲ್ಲೇಶ್ವರಸ್ವಾಮಿಗಳು ಚೆನ್ನಮಲ್ಲೇಶ್ವರಸ್ವಾಮಿಗಳ ಶಿಷ್ಯರು ಚೆನ್ನಂಜೇಶ್ವರಸ್ವಾಮಿಗಳು, ಚೆನ್ನಂಜೇಶ್ವರಸ್ವಾಮಿಗಳ ಶಿಷ್ಯರು ಗುರುಶಾಂತೇಶ್ವರಸ್ವಾಮಿಗಳು, ಗುರುಶಾಂತೇಶ್ವರಸ್ವಾಮಿಗಳ ಶಿಷ್ಯರು ಶಾಂತಮಲ್ಲಸ್ವಾಮಿಗಳು ಶಾಂತಮಲ್ಲಸ್ವಾಮಿಗಳ ಕರ-ಮನ-ಭಾವದಲ್ಲುದಯವಾದ ಗುರುಸಿದ್ಧಲಿಂಗ ನಾನಯ್ಯ. ಆ ಗುರುಸಿದ್ಧಲಿಂಗನ ಕರ-ಮನ-ಸುಭಾವದಲ್ಲಿ ಶರಣಗಣಂಗಳ ಶುದ್ಧಸಿದ್ಧಪ್ರಸಿದ್ಧ ಪ್ರಸಾದವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರ-ಮಂತ್ರ-ಧ್ಯಾನ- ಜಪ-ಸ್ತೋತ್ರ-ಮನೋರ್ಲಯ-ನಿರಂಜನ ಪೂಜೆಯ ಕೈಕೊಂಡು ಪ್ರಮಥಗಣಂಗಳ ಸ್ವಾನುಭಾವಸೂತ್ರವನೊಳಕೊಂಡು ಒಳಗು ಬೆಳಗನೆ ನುಂಗಿ ಬೆಳಗು ಒಳಗನೆ ನುಂಗಿ, ಛಳಿ ಮೋಹಕದ ಮಂಜು ನುಂಗಿದಂತೆ ಹಲವು ದೀಪವ ಬಯಲ ಗಾಳಿ ನುಂಗಿದ ತೆರದಿ ಕಳೆಯಳಿದ ಕೂಡಲಚೆನ್ನಸಂಗಯ್ಯನು. ಇಂತು ಚಿಕ್ಕದಂಡನಾಥ ಚೆನ್ನಬಸವೇಶ್ವರಸ್ವಾಮಿಗಳ ಪ್ರಸನ್ನಪ್ರಸಾದಕ್ಕೆ ಒಪ್ಪಿಗೆಯಾಗಿ ಈ ವಚನಾನುಭಾವಶಾಸ್ತ್ರವ ಕೈಕೊಂಡು ಸದ್ಭಕ್ತಶರಣಗಣಂಗಳಿಗೆ ಬೋದ್ಥಿಸಿ ಸಂಪೂರ್ಣವಮಾಡುವುದಕ್ಕೆ ಕರ್ತುಗಳಾಗಿ ಒಪ್ಪುತಿರ್ಪಿರಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಇನ್ನಷ್ಟು ... -->