ಅಥವಾ

ಒಟ್ಟು 176 ಕಡೆಗಳಲ್ಲಿ , 23 ವಚನಕಾರರು , 171 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಂಬೆಗೆ ರಂಭೆತನವುಂಟೆ ? ಸಂಭ್ರಮವಳಿದುದಕ್ಕೆ ನವರಸದಂಗದ ಕಳೆಯುಂಟೆ ? ಡಿಂಗರಿಗಂಗೆ ಸಮವೆಂಬ ಸಂಭ್ರಮವುಂಟೆ ? ಪರುಷದ ದೆಸೆಯಿಂದ ಪಾಷಾಣದ ಕುಲ ಹರಿವಂತೆ, ನೀ ಬಂದೆಯಲ್ಲಾ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ, ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ಪ್ರಭುದೇವರ ಕಾರುಣ್ಯದಿಂದ ಬದುಕಿದೆ.
--------------
ಮರುಳಶಂಕರದೇವ
ಎನ್ನ ಹೊತ್ತಿಪ್ಪವಳ ನೆತ್ತಿಯ ಕಣ್ಣಿನಲ್ಲಿಪ್ಪ ಂಗವ ನಾನೆಚ್ಚತ್ತು ನೋಡುವ ತೆರನೆಂತಯ್ಯಾ. ನೋಡ ಹೋದಡೆ ನೆತ್ತಿ ಒಡೆದು ಕಣ್ಣಾಯಿತ್ತು. ನೋಡರ್ದಡೆ ಎನಗವಳು ತೋರಳು. ಎನಗೆ ಕಾಬ ತೆರನ ತೋರಾ, ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ.
--------------
ಸಿದ್ಧರಾಮೇಶ್ವರ
ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲೆನೆ ನಿಮ್ಮ ನಿಲವ ನೋಡಿಹೆನೆಂದಡೆ ನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ, ಅಂತಿಂತೆಂದುಪಮಿಸಲಮ್ಮದೆ ಇದ್ದೆ ನೋಡಯ್ಯಾ, ನಿತ್ಯತೃಪ್ತಮಹಿಮಾ, ನಿಮಗೆಂದಳವಡಿಸಿದ ಪದಾರ್ಥವ ಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ, ಕೂಡಲಸಂಗಮದೇವಾ.
--------------
ಬಸವಣ್ಣ
ಆಯತದಲ್ಲಿ ಅಂಗಭೋಗಿಯಾಗಿರಬೇಕು. ಸ್ವಾಯತದಲ್ಲಿ ಸನ್ನಹಿತನಾಗಿರಬೇಕು. ಸನ್ನಹಿತದಲ್ಲಿ ಸದಾಚಾರಿಯಾಗಿರಬೇಕು. ಇಂತೀ ತ್ರಿವಿಧದಲ್ಲಿ ಏಕವಾಗಿರಬಲ್ಲಡೆ, ಅದು ವರ್ಮ, ಅದು ಸಂಬಂಧ, ಅದು ನಿಯತಾಚಾರವೆಂದೆಂಬೆನು. ಅದಲ್ಲದೆ ಲಿಂಗವ ಮರೆದು, ಅಂಗ[ವ]ಭೋಗಿಸಿ, ಅಂಗಸಂಗದಲ್ಲಿರ್ದು, ಅಂಗವೆ ಪ್ರಾಣವಾಗಿಹರಿಗೆಲ್ಲರಿಗೆಯೂ ಲಿಂಗದ ಶುದ್ಧಿ ನಿಮಗೇಕೆ ಕೇಳಿರಣ್ಣಾ. ಲಿಂಗವಂತನು ಅಂಗಸೂತಕಿಯಲ್ಲ. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನದ ಮೇಲೆ ಲಿಂಗದ ಪ್ರಾಣವ ತನ್ನಲ್ಲಿ ಕೂಡಿಕೊಂಡು, ತನ್ನ ಪ್ರಾಣವ ಲಿಂಗದಲ್ಲಿ ಕೂಡಿಕೊಂಡು, ಏಕಪ್ರಾಣವ ಮಾಡಿಕೊಂಡಿಪ್ಪ ಶರಣನ ಜ್ಯೋತಿರ್ಮಯನೆಂಬೆನು, ಜಗದ ಕರ್ತನೆಂಬೆನು, ಜಗದಾರಾಧ್ಯನೆಂದೆಂಬೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ನಿಮ್ಮ ಸಂಗಿಯ ನಿಲವಿನ ಪರಿಯ ನೀವೇ ಬಲ್ಲಿರಲ್ಲದೆ, ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ತನುವಿನ ಕ್ರಿಯಾಕಾರದಲ್ಲಿ ಒಡಲುಗೊಂಡಿಹವರು ಉಣ್ಣೆನೆಂದಡೆ ಅವರ ವಶವೆ? ತನುಗುಣ ನಾಸ್ತಿಯಾದವರು ಉಣ್ಣೆನೆಂದಡೆ ಸಲುವುದಲ್ಲದೆ ಕಾಮವಿಕಾರಕ್ಕೆ ಸಂದು, ತಾಮಸಕ್ಕೆ ಮೈಗೊಟ್ಟು ಇಪ್ಪವರೆಲ್ಲರೂ ಉಣ್ಣೆನೆಂದಡೆ ಹರಿವುದೆ? ನಿಜಗುರು ನಿಜಲಿಂಗ ನಿಜಜಂಗಮ ನಿತ್ಯಪ್ರಸಾದವ ಶ್ರೀಗುರು ಕರುಣದಿಂದ ಪಡೆದು ಅರಿದಾಚರಿಸಿದವರಿಗಲ್ಲದೆ ಭವವ ತಪ್ಪಿಸಬಾರದು ಕಾಣಾ ಪ್ರಭುವೆ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಭಕ್ತಿಯ ಕುಳವನು ಬಸವಣ್ಣನೇ ಬಲ್ಲನು. ಪ್ರಸಾದದ ನೆಲೆಯನು ಬಸವಣ್ಣನೇ ಬಲ್ಲನು. ಬಸವಣ್ಣ ನಡೆದುದೇ ಮಾರ್ಗ, ಅಖಿಳಗಣಂಗಳಿಗೆ, ಬಸವಣ್ಣ ನುಡಿದುದೇ ವೇದ, ಮಹಾಪುರುಷರಿಗೆ, ಬಸವಣ್ಣನನಾದಿ, ಲಿಂಗವಾದಿ ಎಂದರಿದೆನಾಗಿ, ಬಸವಣ್ಣನ ನೆನೆವುತಿರ್ದೆನಯ್ಯಾ. ಬಸವಣ್ಣನ ಪಾದವಿಡಿದೆನಾಗಿ, ಲಿಂಗವೇದಿಯಾದೆನು. ಬಸವಣ್ಣನ ಬಾಗಿಲ ಕಾಯ್ದೆನಾಗಿ, ಪ್ರಸಾದ ಸಾಧ್ಯವಾಯಿತ್ತು. ಬಸವಣ್ಣನ ಕರುಣದಿಂದ ಪ್ರಭುದೇವರ ನಿಲವ ಕಂಡೆನು. ಬಸವಣ್ಣನ ಬೋಧೆಯಿಂದ ಜಂಗಮವೇ ಲಿಂಗವೆಂದರಿದೆನು. ಆ ಜಂಗಮ ಮುಖದಿಂದಲ್ಲದೆ ಲಿಂಗತೃಪ್ತಿಯಾಗದು. ಪ್ರಸಾದಸಿದ್ಧಿಯಾದಲ್ಲದೆ ಭವಂ ನಾಸ್ತಿಯಾಗದು. ಇದು ಕಾರಣ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಶರಣ ಬಸವಣ್ಣನ ನಂಬಿ, ನಾನು ಕೆಟ್ಟು, ಬಟ್ಟಬಯಲಾಗಿ ಹೋದೆನೆಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಪ್ರಸಾದ ಸೋಂಕಿದ ತನುವೆಲ್ಲ ಲಿಂಗಮಯ, ರೋಮರೋಮವೆಲ್ಲ ಲಿಂಗ. ಆ ಭಕ್ತಂಗೆ ಆಧಾರಸ್ಥಾನವೆ ನಿಜಸ್ಥಾನ. ಆಧಾರಚಕ್ರದಲ್ಲಿ ನಾಲ್ಕೆಸಳಿನ ತಾವರೆ ಕಮಲದ ಮಧ್ಯದಲ್ಲಿ ಬಾಲಾರ್ಕಕೋಟಿ ಸೂರ್ಯಪ್ರಕಾಶನುಳ್ಳುದು ಆಚಾರಲಿಂಗ. ಆ ಭಕ್ತನ ಗುಹ್ಯದಲ್ಲಿ ಗುರುಲಿಂಗ, ಆ ಭಕ್ತನ ಮಣಿಪೂರಕದಲ್ಲಿ ಶಿವಲಿಂಗ. ಆ ಭಕ್ತನ ಅನಾಹತದಲ್ಲಿ ಜಂಗಮಲಿಂಗವಿಹುದು. ಆ ಭಕ್ತನ ವಿಶುದ್ಧಿಚಕ್ರದಲ್ಲಿ ಪ್ರಸಾದಲಿಂಗವಿಹುದು. ಆ ಭಕ್ತನ ಭ್ರೂಮಧ್ಯದಲ್ಲಿ ಮಹಾಲಿಂಗವಿಹುದು. ಆ ಭಕ್ತನ ಆಧಾರದಲ್ಲಿ ನಕಾರ ಪ್ರಣಮದ ಜನನವು. ಆಣವಮಲ, ಮಾಯಾಮಲ, ಕಾರ್ಮಿಕಮಲ ಅನಂತಕೋಟಿಗಳಿಗೆ ನಕಾರವೇ ಮೂಲ. ಇನ್ನೂರು ಹದಿನಾರು ಭುವನಂಗಳು ಆ ಭಕ್ತನ ಗುದದಲ್ಲಿ ಬಿದ್ದಿದ್ದವಷ್ಟು ಹದಿನೆಂಟುಧಾನ್ಯಕ್ಕೆ ಶಾಕಪತ್ರ ಕಂದಮೂಲ ಫಲಾದಿಗಳಿಗೆ ಭೂಮಿ ಎಂದುದಾಗಿ. ಉಂಬುವದು ಅಗ್ನಿ, ಉಡುವದು ಪೃಥ್ವಿ ಎಂದುದಾಗಿ. ಈ ಜಗವೆಲ್ಲ ಮಲವನೆ ಭುಂಜಿಸಿ ಮಲವನೆ ವಿಸರ್ಜನೆಯಂ ಮಾಡುವರು. ಇದು ಕಾರಣ ಇದ ಕೊಂಬುವದು ಪ್ರಸಾದವಲ್ಲ. ಕೊಟ್ಟಾತ ಗುರುವಲ್ಲ, ಕೊಂಡಾತ ಸದ್ಭಕ್ತನಲ್ಲ. ಈ ಪ್ರಸಾದವ ಕೊಳ್ಳಬಲ್ಲರು ನಮ್ಮ ಶರಣರು. ಪ್ರಸಾದವೆಂತೆಂದಡೆ : ಅವರ್ಣ, ಆದಿ, ಅವ್ಯಕ್ತ. ಆ ನಾಮವು, ಭರ್ಗೋದೇವಾದಿ ಪಂಚಮೂರ್ತಿಗಳಿಗೆ ಆಶ್ರಯವಾಯಿತು. ಕರಣಚತುಷ್ಟಯಂಗಳಿಗೆ ನಿಲುಕದು. ಪ್ರಾಣಾದಿ ವಾಯುಗಳಿಗೆ, ಶ್ರೋತ್ರಾದಿ ಜ್ಞಾನೇಂದ್ರಿಯಂಗಳಿಗೆ ಅಗಮ್ಯ. ವಾಕ್ಕಾದಿ ಕರ್ಮೇಂದ್ರಿಯಗಳಿಗೆ ತೋರದು. ನಿಜಾನಂದ ನಿತ್ಯಪರಿಪೂರ್ಣ ಪ್ರಸಾದವು ಚೆನ್ನಯ್ಯಪ್ರಿಯ ನಿರ್ಮಾಯ ಪ್ರಭುವೆ, ನಿಮ್ಮ ಶರಣರಿಗಲ್ಲದೆ ಉಳಿದ ಜಡಜೀವಿಗಳಿಗೆ ಅಸಾಧ್ಯ.
--------------
ಚೆನ್ನಯ್ಯ
ಸತಿಯ ಸಂಗವತಿಸುಖವೆಂದರಿದಡೇನು ? ಗಣಸಾಕ್ಷಿಯಾಗಿ ವಿವಾಹವಾಗದನ್ನಕ್ಕರ ? ಕಣ್ಣು ಕಾಂಬುದೆಂದಡೆ, ಕತ್ತಲೆಯಲ್ಲಿ ಕಾಂಬುದೆ ದೀಪವಿಲ್ಲದನ್ನಕ್ಕರ ? ಸೂರ್ಯನ ಪ್ರಕಾಶದಿಂದ ಕಂಡು ತಾನೆ, ಕಂಡೆನೆಂಬ ಜಗದ ನಾಣ್ಣುಡಿಯಂತಾಯಿತ್ತು. ಅಂಗವ ಬಿಟ್ಟು ಆತ್ಮನುಂಟೆ ? ಶಕ್ತಿಯ ಬಿಟ್ಟು ಶಿವನುಂಟೆ ? ಇದು ಕಾರಣ_ಸ್ಥೂಲ ಸೂಕ್ಷ್ಮಕಾರಣ ತನುತ್ರಯವಿರಲು, ಇಷ್ಟ ಪ್ರಾಣ ಭಾವವೆಂಬ ತ್ರಿವಿಧಲಿಂಗಸಂಬಂಧ ಬೇಡವೆಂದಡೆ ಅಸಂಖ್ಯಾತ ಪ್ರಮಥಗಣಂಗಳೊಪ್ಪುವರೆ ? ಕೂಡಲಚೆನ್ನಸಂಗಯ್ಯನಲ್ಲಿ ಇಷ್ಟಲಿಂಗಸಂಬಂಧವಿಲ್ಲದವರ ಮುಖವ ನೋಡಲಾಗದು ಪ್ರಭುವೆ.
--------------
ಚನ್ನಬಸವಣ್ಣ
ಬಸವಣ್ಣನ ಮನೆಯ ಸ್ವಾನಂದ ನೋಡಿದಡೆ, ಎನ್ನ ಮನ ಬೇಸರವಾಗದೆ ಶಿವದಾಸನೆಂದು ಜೀವನ್ಮುಕ್ತನೆಂದು ಹೊಗಳುವೆನಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ
--------------
ಸಿದ್ಧರಾಮೇಶ್ವರ
ಕಾಯಕಲ್ಪಿತದಿಂದ ಭೋಗಾದಿ ಭೋಗಂಗಳ ಭೋಗಿಸಬಲ್ಲಡೆ ದೇವಲೋಕವೆ ಸರ್ವತಃ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ ಇಂತೀ ಚತುರ್ವಿಧವನೆ ಮೀರಿ ಶಿವನ ಶ್ರೀಪಾದದಲ್ಲಿ ಇರಬಲ್ಲಡೆ ಕೈಲಾಸವೆ ಕಲ್ಯಾಣ ಲಿಂಗವೆ ತಾನು, ತಾನೆ ಲಿಂಗವಾಗಿರಬಲ್ಲ ಅಸಮಯೋಗಿ ಸಿದ್ಧರಾಮಯ್ಯದೇವರ ಶ್ರೀಪಾದದಲ್ಲಿ ಎಂದಿಪ್ಪೆ ಹೇಳಾ ಪ್ರಭುವೆ ? ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಕ್ರೀಯಲ್ಲಿ ಮಗ್ನವಾದ ಬಳಿಕ ಐಕ್ಯದ ವಿಚಾರ ಬೇಕಿಲ್ಲ ; ಗುರುವಿನ ಗದ್ದುಗೆ ಬೇಕಿಲ್ಲ ; ಗಣಸಮ್ಮೇಳನದ ಪೂಜೆ ಮೊದಲೆ ಬೇಕಿಲ್ಲ ; ಕಪಿಲಸಿದ್ಧಮಲ್ಲಿಕಾರ್ಜುನಂಗೆ ನಿನಗೆ ಭೇದವಿಲ್ಲೆಂಬುವುದು ಈಗಳೆ ಬೇಕಿಲ್ಲ, ಕೇಳಾ ಪ್ರಭುವೆ.
--------------
ಸಿದ್ಧರಾಮೇಶ್ವರ
ಬಸವಣ್ಣನ ಪಾದವ ಕಂಡೆನಾಗಿ ಎನ್ನಂಗ ನಾಸ್ತಿಯಾಯಿತ್ತು. ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣಬಯಲಾಯಿತ್ತು. ಪ್ರಭುವೆ, ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನ್ನ ಅರಿವು ಸ್ವಯವಾಯಿತ್ತು. ಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಶರಣರ ಕರುಣವ ಪಡೆದೆನಾಗಿ ನಿನಗೆ ಮತ್ತಾವುದಿಲ್ಲವಯ್ಯ ಪ್ರಭುವೆ.
--------------
ಅಕ್ಕಮಹಾದೇವಿ
ಪಟವಾಕಾಶವನಡರಿತ್ತೆಂದಡೆ, ಪಟಸೂತ್ರದ ಸಂಚು ಕೆಳಗಿಪ್ಪುದು ನೋಡಾ ! ವ್ಯೋಮದಲ್ಲಿ ಚರಿಸುವ ಸೋಮಸೂರ್ಯರೆಂದಡೆ ಹೇಮಗಿರಿಯ ಸಂಚ ತಪ್ಪದು ನೋಡಾ ! ಭೂಮಿಯನೊಲ್ಲದೆ ಗಗನಕ್ಕೆ ಹಾರಿದವಂಗೆ, ಆ ವ್ಯೋಮದಲ್ಲಿ ನಿಲುವುದಕ್ಕೆ ಒಂದೆಡೆಯುಂಟೆ ? ನಮ್ಮ ಕೂಡಲಚೆನ್ನಸಂಗನ ಶರಣರೊಳಗಿರ್ದು ಸೀಮೆಯ ಮೀರಿದ ನಿಸ್ಸೀಮನು ಸಿದ್ಧರಾಮಯ್ಯನೆಂಬ ಮಾತು ಅಂತಿರಲಯ್ಯಾ ಪ್ರಭುವೆ.
--------------
ಚನ್ನಬಸವಣ್ಣ
ಲಿಂಗವಂತ ಲಿಂಗಭಕ್ತ ಲಿಂಗಾಚಾರಿಯೆನಿಸಿಕೊಂಡ ಬಳಿಕ, ಲಿಂಗದ ನಚ್ಚು, ಲಿಂಗದ ಮಚ್ಚು, ಲಿಂಗವೇ ಪ್ರಾಣವಾಗಿರಬೇಕಲ್ಲದೆ, ಮತ್ತೆ ತಪ್ಪಿ ನಡೆದು, ತಪ್ಪಿ ನುಡಿದು, ಪರಧನ ಪರಸ್ತ್ರೀಯರ ಸಂಗವ ಮಾಡಿ, ದುರ್ಗುಣ ದುರಾಚಾರದಲ್ಲಿ ನಡೆದು, ಮತ್ತೆ ತಾವು ಲಿಂಗವಂತರೆನಿಸಿಕೊಂಬ ಪರಿಯ ನೋಡಾ. ಇದು ಲಿಂಗದ ನಡೆಯಲ್ಲ, ಲಿಂಗದ ನುಡಿಯಲ್ಲ. ಇದ ನಮ್ಮ ಶಿವಶರಣರು ಮೆಚ್ಚರು. ಲಿಂಗವಂತನ ಪರಿ ಬೇರೆ ಕಾಣಿರೆ. ಲಿಂಗಕ್ಕೆ ಲಿಂಗವೆ ಪ್ರಾಣವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಭೋಗವಾಗಿರಲು ಬಲ್ಲ. ಲಿಂಗಕ್ಕೆ ಲಿಂಗವೆ ಸಂಗವಾಗಿ[ರಲು]ಬಲ್ಲ, ಇಂತಪ್ಪ ಲಿಂಗವಂತನ ಸದಾಚಾರಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಾಂಗಲಿಂಗಿಯೆಂಬೆನು. ಇಂತಪ್ಪ ಲಿಂಗವಂತನ ಸರ್ವಕರಣ ನಿರ್ಮುಕ್ತನ ಸರ್ವನಿರ್ವಾಣಿಕಾಯೆಂಬೆನು. ಇಂತಪ್ಪ ಮಹಾಮಹಿಮನ ನಿಲವು ಎಲಗಳೆದ ವೃಕ್ಷದಂತೆ, ಉಲುಹಡಗಿಪ್ಪ ಶರಣನ ಪರಿಯ ನೀವೇ ಬಲ್ಲಿರಲ್ಲದೆ, ಮತ್ತೆ ಉಳಿದಾದ ಅಜ್ಞಾನ ಸಂದೇಹಿಮಾನವರೆತ್ತ ಬಲ್ಲರಯ್ಯಾ. ಶುದ್ಧ ಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ ನಿಮ್ಮ ಲಿಂಗಾವಧಾನಿಯ ಪರಿಯ ನೀವೇ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಹೆಣ್ಣಿನೊಳಗೆ ಕಣ್ಣುಗೊಂಡು ಹುಟ್ಟಿ, ಮಣ್ಣು ಹೊಯ್ದುಕೊಂಬ ಅಣ್ಣಗಳು ನೀವು ಕೇಳಿರೆ. ಈ ಬಣ್ಣದ ಪರಿಯಾಯಕ್ಕೆ ಕಣ್ಣುಗೆಟ್ಟು ಬಿದ್ದಿರಲ್ಲಾ. ಈ ಹೆಣ್ಣಿನ ಸಂಗ ನಿಮಗೇತಕಣ್ಣಾ. ತನ್ನಲ್ಲಿ ಹೆಣ್ಣುಂಟು, ತನ್ನಲ್ಲಿ ಹೊನ್ನುಂಟು, ತನ್ನಲ್ಲಿ ಮಣ್ಣುಂಟು. ಇಂತಿವ ನಿಮ್ಮಲ್ಲಿ ನೀವು ತಿಳಿದು ನೋಡಲಿಕ್ಕೆ, ತನ್ನಲ್ಲಿ ತಾನೆ ಕಾಣಬಹುದು. ತನ್ನ ತಾನರಿಲ್ಲದೆ ಇದಿರನರಿಯಬಾರದು. ಇದಿರನರಿದಲ್ಲದೆ ಪರವನರಿಯಬಾರದು. ಪರವನರಿದಲ್ಲದೆ ಸ್ವಯವನರಿಯಬಾರದು. ಸ್ವಯವನರಿದಲ್ಲದೆ ಅರಿವು ತಲೆದೋರದು ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಮಾಯ ಹಿಂಗಿದಲ್ಲದೆ ಮದವಳಿಯದು. ಮದವಳಿದಲ್ಲದೆ ಮತ್ಸರ ಹೆರೆಸಾರದು. ಮತ್ಸರ ಹೆರೆಸಾರಿದಲ್ಲದೆ ಮಹಾಘನವಳವಡದು. ಮಹಾಘನವಳವಟ್ಟಲ್ಲದೆ ಮಹಾಲಿಂಗವ ಕಾಣಬಾರದು. ಮಹಾಲಿಂಗವ ಕಂಡಲ್ಲದೆ ಮಹಾಪ್ರಕಾಶವ ಕಾಣಬಾರದು. ಮಹಾಪ್ರಕಾಶವ ಕಂಡಲ್ಲದೆ ನಿತ್ಯವ ಕಾಣಬಾರದು. ನಿತ್ಯವ ಕಂಡಲ್ಲದೆ ನಿಜವ ಕಾಣಬಾರದು. ನಿಜವ ಕಂಡಲ್ಲದೆ ನಿರ್ಣಯವನರಿಯಬಾರದು. ನಿರ್ಣಯವನರಿದಲ್ಲದೆ ಗುರುಲಿಂಗಜಂಗಮವನರಿಯಬಾರದು. ಗುರುಲಿಂಗಜಂಗಮವನರಿದಲ್ಲದೆ ಪಾದತೀರ್ಥಪ್ರಸಾದವನರಿಯಬಾರದು. ಪಾದತೀರ್ಥಪ್ರಸಾದವನರಿದಲ್ಲದೆ ಸಹಜ ಶರಣರ ಸಂಗವನರಿಯಬಾರದು. ಇಂತಪ್ಪ ಶರಣರ ಸಂಗವನರಿದಲ್ಲದೆ ಸರ್ವನಿರ್ಣಯವನರಿಯಬಾರದು. ಸರ್ವನಿರ್ಣಯವನರಿದಲ್ಲದೆ ಸಹಜಸದ್ಭಕ್ತರು ಮೆಚ್ಚರು. ಸಹಜಸದ್ಭಕ್ತರು ಕೂಡಿ ನಡೆಯಬಲ್ಲಡೆ ಇದೇ ಸುಖವು. ಸಂಗದೊಳಗೆ ಶರಣರ ಸಂಗವೆ ಸಂಗವು ಕೇಳಿರಯ್ಯಾ. ಇಂತು ಸಾಯದೆ ನೋಯದೆ ಸ್ವಯವನರಿದು, ಸದ್ಭಕ್ತರ ಸಂಗವ ಮಾಡಬಲ್ಲಾತನೆ ಲಿಂಗೈಕ್ಯನು. ಅವ ತಾನೆ ಘನಲಿಂಗವು. ಹೀಂಗಲ್ಲದೆ ಹಿಂದೆ ಮೆಟ್ಟಿಹೋಹ ಸಂದೇಹಿ ಮಾನವರೆಲ್ಲರೂ ಜಗದ ಜಂಗುಳಿಗಳ ದಂದುಗದೊಳಗಾಗಿಪ್ಪರು. ಆ ಗುಣವ ಬಿಟ್ಟು, ಶರಣರ ಸಂಗ ಸಹಜವೆಂದರಿದು, ನಿಜವಾಗಿ ಬಂದಬಳಿಕ ಪೂರ್ವಭಾಗೆಗೆ ಬಾರೆನೆಂಬ ನಿಶ್ಚಯದಿಂ ಪರಮ ಪ್ರಸಾದವನರಿದು, ಜಗದ ಹಂಗ ಹರಿದ ಶರಣನು ಎನ್ನ ತಂದೆಯಾಗಿಪ್ಪನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ಈ ಬಂದ ಪರಿಯಾಯವರಿದು, ತಾಮಸವ ಹಿಂಗಿ, ಸಹಜ ನಿಜನಿತ್ಯವನರಿದು ಹೋದ ಶರಣರ ನಿಲವಿನ ಪರಿಯ, ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ
--------------
ಮರುಳಶಂಕರದೇವ
ಇನ್ನಷ್ಟು ... -->