ಅಥವಾ

ಒಟ್ಟು 160 ಕಡೆಗಳಲ್ಲಿ , 37 ವಚನಕಾರರು , 111 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಮಶೀಲ ನೇಮ ಒಂದಾದಲ್ಲಿ ಉಡುವ ತೊಡುವ ಕೊಡುವ ಕೊಂಬ ಅಡಿಯೆಡೆ ಮುಂತಾಗಿ ಸಕ್ಕರೆಯ ಬುಡಶಾಖೆಯಂತೆ ಮಧುರಕ್ಕೆ ಹೆಚ್ಚು ಕುಂದಿಲ್ಲದೆ ಇಪ್ಪ ನೇಮ ಕಟ್ಟಾಚಾರ ನಿಶ್ಚಯವಾದವಂಗೆ, ಅಂಗ ಹಲವಲ್ಲದೆ ಕುಂದಣ ಒಂದೆ ಭೇದ. ನೇಮ ಹಲವಲ್ಲದೆ ಜ್ಞಾನವೊಂದೆ ಭೇದ. ಭೂಮಿ ಹಲವಲ್ಲದೆ ಅಪ್ಪುವೊಂದೆ ಭೇದ, ಬಂದ ಯೋನಿ ಒಂದೆ. ತಾ ಮುಂದಿಕ್ಕುವ ಯೋನಿ ಒಂದಾದ ಕಾರಣ. ಹಿಟ್ಟು ಹಲವಾದಡೆ ಅಪ್ಪದಕಲ್ಲು ಒಂದೆಯಾದಂತೆ. ಇದು ತಪ್ಪದ ಆಚಾರ, ಇದಕ್ಕೆ ಮಿಥ್ಯತಥ್ಯವಿಲ್ಲ, ತಪ್ಪದು ನಿಮ್ಮಾಣೆ. ಆಚಾರಕ್ಕರ್ಹನಾದ ರಾಮೇಶ್ವರಲಿಂಗವೆ ನೀನೆ ಬಲ್ಲೆ.
--------------
ಅಕ್ಕಮ್ಮ
ಶಿವ ಶಿವ ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ [ಪ್ರಾ]ಣಲಿಂಗವಾದನಾಗಿ [ಪ್ರಾ]ಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.
--------------
ಉರಿಲಿಂಗಪೆದ್ದಿ
ಪದ್ಮಾಸನದಲ್ಲಿ ಕುಳ್ಳಿರ್ದು ಲಿಂಗಾರ್ಚನೆಯ ಮಾಡುವರ ತೋರಾ ಎನಗೆ. ಸ್ವರೂಪಿನಲ್ಲಿ ನಿಂದು, ಜಂಗಮಕ್ಕೆ ಜಂಗಮದಾಸೋಹವ ಮಾಡುವರ ತೋರಾ ಎನಗೆ. ಮನ ನಿಜರೂಪಿನಲ್ಲಿ ಗುರುಸಿಂಹಾಸನವನೇರಿ ಪರಿಣಾಮವಳವಟ್ಟು, ಪ್ರಸಾದವ ಗ್ರಹಿಸುವರ ತೋರಾ ಎನಗೆ. ಇಂತಪ್ಪವರ ಸಂಗದಲ್ಲಿರಿಸು ಕಲಿದೇವಯ್ಯಾ, ನಾ ನಿನ್ನ ಬಲ್ಲೆ. ನನಗೆಯೂ ನಿನಗೆಯೂ ಇಂತಪ್ಪವರಪೂರ್ವ.
--------------
ಮಡಿವಾಳ ಮಾಚಿದೇವ
ಐದುಮುಖದಂಗನೆಗೆ ತನು ಮೂರು, ತದಂಗವೆರಡು, ಜೀವವೊಂದು, ಗುಣ ಇಪ್ಪತ್ತೈದು. [ವಂಶದ]ವರು ಇಪ್ಪತ್ತೈದುಮಂದಿಯ ಕೈವಿಡಿದು ಅಷ್ಟದಿಕ್ಕು ನವಖಂಡ ಜಂಬೂದ್ವೀಪವ ಮೇಲುಹೊದಿಕೆಯ ಮಾಡಿ, ಹೊದ್ದುಕೊಂಡು, ದೃಷ್ಟಜಗಕ್ಕೆ ಬಂದು ಕಷ್ಟಬಡುತಿದ್ದ ಭೇದವ ನೀನೆ ಬಲ್ಲೆ, ಉಳಿದರಿಗಸಾಧ್ಯ, ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಸರ್ವಗತನಾಗಿ ನೀನೆನ್ನೊಳಗಿಹೆ, ಸರ್ವೇಶ್ವರನಾಗಿ ನೀನೆನಗೊಡೆಯ, ಸರ್ವಜ್ಞನಾಗಿ ನೀನೆನ್ನ ಬಲ್ಲೆ. ನೀನರಿಯದಿರ್ದಡೆ ನಾನೇನಪ್ಪೆನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ?
--------------
ಉರಿಲಿಂಗಪೆದ್ದಿ
ಲಲಾಟದೊಳಗಣ ಅಸ್ಥಿಯ ಬೆಳ್ಪು ವಿಭೂತಿ. ಚರ್ಮದೊಳಗಣ ಕೆಂಪು ಕಿಸುಕಾಶಾಂಬರ. ವ್ಯಾಕುಳವಿಲ್ಲದುದೆ ಲಾಕುಳ, ಮಹಾದೇವರ ನೆನೆವುದೆ ಆಧಾರ. ನಿರ್ಮೋಹತ್ವಂ ಚ ಕೌಪೀನಂ ನಿಸ್ಸಂಗತ್ವಂ ಚ ಮೇಖಳಂ | ಶಾಂತಿ ಯಜ್ಞೋಪವೀತಂ ಚ ಆಭರಣಂ ದಯಾಪರಂ | ಪಂಚೇಂದ್ರಿಯ ವೀಣಾದಂಡಂ ಪಂಚಮುದ್ರಾಃ ಪ್ರಕೀರ್ತಿತಂ | ಮಹಾಲಿಂಗ ಧ್ಯಾನಾಧಾರಂ ಶಿವಯೋಗಿ ಚ ಲಕ್ಷಣಂ | [ಎಂಬುದಾಗಿ], ತುರುಬಿನ ತಪಸಿಯ ಪೆರರೆತ್ತ ಬಲ್ಲರು ? ಸಕಳೇಶ್ವರದೇವಾ, ನೀನೆ ಬಲ್ಲೆ.
--------------
ಸಕಳೇಶ ಮಾದರಸ
ಶಿವ ಶಿವ! ಮಹಾದೇವ ಶಿವನೇ ನೀನು ಸರ್ವಜ್ಞನಾಗಿ ಎನ್ನನೂ ನೀನು ಬಲ್ಲೆ. ಈ ಪರಿಯನು ಹರಿಬ್ರಹ್ಮದೇವದಾನವಮಾನವರು ಅರಿಯದೆ ಭ್ರಮಿಸುತ್ತಮಿಪ್ಪರು. ಈ ವಿದ್ಥಿಯನು ತಾತ್ಪಯ್ರ್ಯವೆಂದರಿದೆನಾಗಿ ಸದ್ಯೋನ್ಮುಕ್ತನು, ನಿರಂತರ ಪರಿಣಾಮಿ, ಪರಮಸುಖಸ್ವರೂ[ಪಿ] ನಾನೇ ಅಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಸತ್ತವರು ಸಾಯದವರ ನುಂಗಿ, ಸಾಯದವರು ಸತ್ತವರ ನುಂಗಿ, ಈ ಉಭಯರು ಎತ್ತಹೋದರೆಂಬುದ ನೀ ಬಲ್ಲೆ, ನಾನರಿಯೆ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯಾ, ನಿಮ್ಮ ಬಿಂದುವಿನ ಕಳೆಯ ನೋಡಿಕೊಳ್ಳಿ, ನಿಮ್ಮ ನಾದದ ಕಳೆಯ ನೋಡಿಕೊಳ್ಳಿ, ನಿಮ್ಮ ಕಳೆಯ ಕಳೆಯ ನೋಡಿಕೊಳ್ಳಿ, ನಾನು ಕದ್ದುಕೊಂಡು ಸೊಲ್ಲನೆಬ್ಬಿಸಿ ಅಲ್ಲದಾಟವನಾಡುವನಲ್ಲ. ನಾ ಬಲ್ಲೆ ನೋಡಿಕೊಂಡು ಕೂಡು ಗುರುನಿರಂಜನ ಚನ್ನಬಸವಲಿಂಗದಲ್ಲಿ ಸಾವಧಾನಿ ಭಕ್ತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಯ್ಯಗಳು ರುದ್ರಾಕ್ಷಿಯ ಕೊಟ್ಟ್ಲಲ್ಲಿ ಫಲವಲ್ಲದೆ, ಸುಮ್ಮನೆ ಧರಿಸಿದಲ್ಲಿ ಫಲವಿಲ್ಲ ನೋಡಾ, ಭಕ್ತನು ಪದಾರ್ಥ ನೀಡಿದಲ್ಲಿ ಫಲವಲ್ಲದೆ, ಬೇಡಿ ರುಚಿಸಿದಲ್ಲಿ ಫಲವಿಲ್ಲ ನೋಡಾ. ನಿನ್ನರಿವ ನಾನರಿತಲ್ಲಿ ಫಲವಲ್ಲದೆ, ಅರುಹಿಸಿದಲ್ಲಿ ಫಲವಿಲ್ಲ. ಅಹುದೆಂಬುದು ನ್ಕೀ, ಬಲ್ಲೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಜಲದೊಳಗಣ ಬೊಬ್ಬುಳಿಕೆ ಜಲ ಘಟ್ಟಿಗೊಂಡಲ್ಲಿ ಅಡಗುವ ತೆರನ ಬಲ್ಲಡೆ ಬಲ್ಲೆ. ಮಹೇಂದ್ರ ಜಾಲವು ಮರೀಚಿಕಾ ಜಲವು. ಎಲ್ಲಿ ಹುಟ್ಟಿ ಎಲ್ಲಿ ಅಡಗುವ ತೆರನ ಬಲ್ಲಡೆ ಬಲ್ಲೆ. ಮಹಾನಾದ ಸುನಾದ, ಸುನಾದಕ್ಕೆ ಕೈಗೈದು ಆ ಸುನಾದವು ಮಹಾನಾದದೊಡನೆ ಮಥನಿಸಿ ಇವೆರಡರ ಪ್ರಾಣ ಚೈತನ್ಯ ಒಂದಾಗಿ ಹುಟ್ಟಿ ಅಡಗುವ ಭೇದವ ಬಲ್ಲೆನಾಗಿ, ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದುದಾಗಿ.
--------------
ಘಟ್ಟಿವಾಳಯ್ಯ
ಪೂರ್ವಕ್ಕೆ ತಾಳಾಗಿ ಉತ್ತರಕ್ಕೆ ತಲಹಾ ಬಿದ್ದ ಮರನ ತಂದು, ನಿಬದ್ಧಿಯ ಕಾರುಕನ ಕೈಯಲ್ಲಿ ಸುಬದ್ಧಿಸಿ, ಶುದ್ಧೈಸಿ ಅನಾದಿಯೆಂಬ ಹುಗಿಲುದೆಗೆದು, ಆದಿಯೆಂಬ ಈಯವನಿಕ್ಕಿ, ಇಷ್ಟವೆಂಬ ವಿಶ್ವಾಸದ ಮೇಳಿಯಂ ಬೆಟ್ಟಿ, ಭಾವವೆಂಬ ಜಿಗುಳಿಯನಿಕ್ಕಿ, ಸದ್ಭಾವವೆಂಬ ಗುಳುವ ತೊಡಿಸಿ, ಸತ್ಕ್ರಿಯೆಯೆಂಬ ಕಣ್ಣಿಯಲ್ಲಿ ನೇಗಿಲ ತೊಡಚಿ, ಜ್ಞಾನಚಕ್ಷುವೆಂಬ ನೊಗದ ಉಭಯದ ಕೊನೆಯಲ್ಲಿ ಎಡಗೋಲಿನಲ್ಲಿ ಕಾರಿಯ ಹೂಡಿ, ಬಲಗೋಲಿನಲ್ಲಿ ಬೆಳ್ಳಿಯ ಹೂಡಿ, ಅಡಿ ಕೆತ್ತುವಂತೆ ಧಾಯೆಂದು ಹೊಡೆಯಲಾಗಿ, ಭೂಮಿಯೊಡಗೂಡಿ ಸವೆಯಿತ್ತು. ಬಿತ್ತವಟ್ಟಕ್ಕೆ ದಿಕ್ಕಿಲ್ಲ, ಕಾಮಬ್ಥೀಮ ಜೀವಧನದೊಡೆಯ ನೀನೆ ಬಲ್ಲೆ.
--------------
ಒಕ್ಕಲಿಗ ಮುದ್ದಣ್ಣ
ಇಚ್ಛಾ ಜ್ಞಾನ ಕ್ರಿಯಾ ಶಕ್ತಿ ನಿಮ್ಮಿಚ್ಛೆ ಎಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂದು ನಿಮ್ಮಡಿಗಳು ಬೆಸಸಿದ ಸರ್ವಶ್ರುತಿಗಳಂ ಕೇಳಿ ಬಲ್ಲೆನು. ಈ ಹೀಂಗೆಂದರಿದು ಮನ ಮರಳಿ ಬಿದ್ದು ಗುರುಲಿಂಗಜಂಗಮಕ್ಕೆ ನಾನೂ ಮಾಡಿದೆನೆಂಬ ಅವಿಚಾರದ ಮನದ ಮರವೆಯ ನೋಡಾ. ಇದಿರ ಬೇಡಿದಡೆ ಕೊಡರೆಂಬ ಮನದ ಘಸಣಿಯ ನೋಡಾ. ಶಿವ ಶಿವ ಮಹಾದೇವ, ಮನೋನಾಥ ಮನೋಮಯ, ಎನ್ನ ಮನವ ಸಂತವ ಮಾಡಿ ನಿಮ್ಮಲ್ಲಿ ಬೆರಸು, ಬೆರಸದಿದ್ದಡೆ ನಿಮಗೆ ಮಹಾಗಣಂಗಳಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಬ್ರಹ್ಮನ ಪೂಜಿಸಿ ಸೃಷ್ಟಿಗೊಳಗಾಗುವುದ ಬಲ್ಲೆ. ರುದ್ರನ ಪೂಜಿಸಿ ಲಯಕ್ಕೊಳಗಾಗುವುದ ಬಲ್ಲೆ. ನಮ್ಮಿಷ್ಟಲಿಂಗಮೂರ್ತಿಯ ಪೂಜಿಸಿ ಲಿಂಗವಾಗಿ ಸರ್ವವಳಿವುದ ಬಲ್ಲೆ ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಮನವೇ, ನಿನ್ನ ನೆನಹು ಸಿದ್ಧಿಯಾದುದಲ್ಲಾ, ಪರಶಿವನೇ ಶ್ರೀಗುರುರೂಪಾಗಿ ನಿನ್ನ ಮನಕ್ಕೆ ಬಂದನು. ಬುದ್ಧಿಯೇ ನಿನ್ನ ಬುದ್ಧಿ ಸುಬುದ್ಧಿಯಾದುದಲ್ಲಾ, ಶ್ರೀಗುರುವೇ ಶಿವ[ಲಿಂಗ]ರೂಪಾಗಿ ನಿನ್ನ ಬುದ್ಧಿಗೆ ಬಂದನು. ಚಿತ್ತವೇ ನೀ ನಿನ್ನ ಚಿತ್ತ ನಿಶ್ಚಿಂತವಾದುದಲ್ಲಾ, ಶಿವಲಿಂಗವೇ ಜಂಗಮರೂಪಾಗಿ ನಿನ್ನ ಚಿತ್ತಕ್ಕೆ ಬಂದನು. ಅಹಂಕಾರವೇ, ನಿನ್ನಹಂಕಾರ ನಿಜವಾದುದಲ್ಲಾ, ಶ್ರೀ ಗುರು ಲಿಂಗ ಜಂಗಮ ತ್ರಿವಿಧವು ಏಕೀಭವಿಸಿ ನಿನಗೆ ಪ್ರಸನ್ನಪ್ರಸಾದವ ಕರುಣಿಸಿದನು. ಆ ಪ್ರಸಾದಲಿಂಗಸ್ವಾಯತವಾಗಿ ನಿಮಗೆ ನಾಲ್ವರಿಗೂ ಪರಿಣಾಮವಾಯಿತ್ತು ಕಾಣಾ. ಪ್ರಾಣವು ನಿನಗೆ ಲಿಂಗಪ್ರಾಣವಾದುದಲ್ಲಾ, ನಮ್ಮೆಲ್ಲರನೂ ಗಬ್ರ್ಥೀಕರಿಸಿಕೊಂಡಿಪ್ಪ ಅಂಗವೇ ಲಿಂಗವಾದುದಲ್ಲಾ. ಪ್ರಾಣವೇ ನಿನ್ನ ಸಂಗದಿಂದ ನಿನ್ನನಾಶ್ರಯಿಸಿಕೊಂಡಿಪ್ಪ ಸರ್ವತತ್ತ್ವಂಗಳೂ ಸರ್ವಪಂಚಾದ್ಥಿಕಾರಿಗಳೂ ಸರ್ವಯೋಗಿಗಳೆಲ್ಲ ಶಿವಪದಂಗಳ ಪಡೆದರಲ್ಲಾ. ಅಹಂಗೆ ಅಹುದು ಕಾಣಾ, ಪ್ರಾಣವೇ ಇದು ದಿಟ, ನೀನೇ ಮಗುಳೆ ಮಹಾಬಂಧುವಾಗಿ ನಿನಗೊಂದು ಏಕಾಂತವ ಹೇಳುವೆನು ಕೇಳು. ನಾನು ನೀನು ಅನೇಕ ಕಲ್ಪಂಗಳಲ್ಲಿಯೂ ಅನೇಕ ಯೋನಿಗಳಲ್ಲಿಯೂ ಜನಿಸಿ ಸ್ಥಿತಿ ಲಯಂಗಳನೂ ಅನುಭವಿಸಿ, ಪಾಪಪುಣ್ಯಂಗಳನುಂಡುದ ಬಲ್ಲೆ. ಅವೆಲ್ಲವನೂ ಕಳೆದುಳಿದು, ಶ್ರೀಗುರುವಿನ ಕರುಣ ಮೇರೆವರಿದು ಮಹಾಪದವಾಯಿತ್ತು. ಶ್ರೀಗುರುವಿನ ಹಸ್ತದಲ್ಲಿ ಜನನವಾಯಿತ್ತು. ಶ್ರೀಗುರುವಿನ ಕರುಣವಾಯಿತ್ತು. ಶಿವಲಿಂಗ ಸ್ವಾಯತವಾಯಿತ್ತು. ಜಂಗಮವೆಂದರಿದು ಜ್ಞಾನವಾಯಿತ್ತು. ಶ್ರೀಗುರು ಲಿಂಗ ಜಂಗಮದಿಂದ ಪ್ರಸಾದವ ಪಡೆದು ಪ್ರಸಾದವನು ಗ್ರಹಿಸಿ ಶಿವಮಹಾಮುಕ್ತಿಪದವಾಯಿತ್ತು. ಇನ್ನೊಂದ ನಾ ನಿಮ್ಮ ಬೇಡಿಕೊಂಬೆನು : ಮಾಯಾಂಗನೆ ಆಸೆ ಮಾಡಿಕೊಂಡು ಬಂದಹಳು, ಅವರಿಬ್ಬರೂ ಹೋಗಲೀಸದಿರಿ, ನಿಮಗೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನಾಣೆ ಎನಗೆಯೂ ಅದೇ ಆಣೆ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->