ಅಥವಾ

ಒಟ್ಟು 151 ಕಡೆಗಳಲ್ಲಿ , 39 ವಚನಕಾರರು , 133 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೆಯುಂ ಸಮಸ್ತ ಕಾರ್ಯ ವಿಸ್ತಾರಮಯ ತ್ರಿಪುಟಿರೂಪ ವಿಶ್ವವೆಲ್ಲಂ ಮಂತ್ರಾಧಾರದೊಳಿರ್ದ ಕಾರಣಮಿದೆಲ್ಲಂ ಮಂತ್ರಾತ್ಮಕಮಾಗಿಯೆ ತಿಳಿವುದಾ ಮಂತ್ರ ಸ್ವರೂಪಮಾದೊಡೆ ಪರಾರ್ಧಕೋಟಿ ಸಂಖ್ಯೆಯಿಂದ ಕೂಡಿ ನಾದಬ್ರಹ್ಮಸ್ವರೂಪ ಪರಮಶಿವ ವದನಾರವಿಂದದತ್ತಣಿಂ ನಿರ್ಗತಮಾದುದರಿಂವಿನಾಯಾವ ಕ್ರಿಯೆಯುಮಿಲ್ಲಂ. ಸರ್ವವುಂ ವಂತ್ರಮಯವೆಂದೆ ನಿರವಿಸಿದೆಯಯ್ಯಾ, ಶರಣಾಂತರಂಗ ಶಯ್ಯ ಪರಮ ಶಿವಲಿಂಗಯ್ಯಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಕಾಯಶೂನ್ಯ, ಜೀವಶೂನ್ಯ, ಪ್ರಾಣಶೂನ್ಯವೆಂದೆಂಬರು, ಅದೆಂತಯ್ಯ ? ಮನ ಮನನ ಮನನೀಯಂಗಳಲ್ಲಿ ಮಂತ್ರಲೀಯವಾದುದೆ ಕಾಯಶೂನ್ಯ. ಆ ಮಂತ್ರ ಪಿಂಡಾಂಡದಲ್ಲಿ, ಪರಿಪೂರ್ಣಭೇದ ತೋರಿದಾಗಲೆ ಜೀವಶೂನ್ಯ. ಆ ಪ್ರಭೆಯ ಪರಿಣಾಮದಲ್ಲಿ ಜೀವನ ಉಪಾದ್ಥಿ ನಷ್ಟವಾಗಿ, ಜೀವ ಪರಮ ಸಂಯೋಗವೆಂಬ ಸಂದೇಹವಳಿದಾಗಲೇ ಪ್ರಾಣಶೂನ್ಯ, ಇದು ತ್ರಿವಿಧಶೂನ್ಯ, ಐಘಟದೂರ ರಾಮೇಶ್ವರಲಿಂಗದಲ್ಲಿ ನಿಲುಕಡೆ.
--------------
ಮೆರೆಮಿಂಡಯ್ಯ
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಗುರುಲಿಂಗಜಂಗಮದ ಭಕ್ತನಾದೆನೆಂದು, ಪಂಚವಿಧ ಪತಾಕಿಯ ಮುಂದೆ ನಿಲಿಸಿ ಮಾತನಾಡುವರಯ್ಯಾ. ಪಂಚಾಂಗವ ಕೇಳಿ ನಡೆದಲ್ಲಿ ಗುರುದ್ರೋಹಿಯೆಂಬೆ. ಅನ್ಯ ಸ್ಥಾವರ ಘನವೆಂದು ನಡೆದಲ್ಲಿ ಲಿಂಗದ್ರೋಹಿಯೆಂಬೆ. ಅಪಾತ್ರ ದ್ರವ್ಯನಿತ್ತಲ್ಲಿ ಜಂಗಮದ್ರೋಹಿಯೆಂಬೆ. ತದ್ದಾದಿ ಕುಷ್ಟರೋಗಕ್ಕೆ ಕಸಮಲೌಷಧ ಹಚ್ಚಿದಲ್ಲಿ ಭಸ್ಮದ್ರೋಹಿ. ಚಿನ್ನ ಬೆಳ್ಳಿ ಮೊದಲಾದ ಸಕಲಾಭರಣವ ಧರಿಸಿದಲ್ಲಿ ರುದ್ರಾಕ್ಷಿದ್ರೋಹಿ. ತೀರ್ಥಯಾತ್ರೆ ಘನವೆಂದುಕೊಂಡಲ್ಲಿ ಪಾದೋದಕದ್ರೋಹಿ. ಸಕಲರಿಂದೆ ಔಷಧವ ಭಕ್ಷಿಸಿದಲ್ಲಿ ಪ್ರಸಾದದ್ರೋಹಿ. ಯಂತ್ರ ಮಂತ್ರ ತಂತ್ರಗಳಿಂದೆ ಚರಿಸಿದಲ್ಲಿ ಪಂಚಾಕ್ಷರಿದ್ರೋಹಿ. ಇಂತು ಅಷ್ಟಾವರಣವ ಹೊತ್ತು ಅಷ್ಟದ್ರೋಹಿಯಾದ ಭ್ರಷ್ಟಭವಿಗಳಿಗೆತ್ತಣ ಮುಕ್ತಿಯಯ್ಯಾ ಗುರುನಿರಂಜನ ಚನ್ನಬಸವಲಿಂಗಾ ?
--------------
ದೇಶಿಕೇಂದ್ರ ಸಂಗನಬಸವಯ್ಯ
ಧರೆ ಸಲಿಲ ಅನಲ ಅನಿಲ ಆಕಾಶ ಮುಂತಾದ ಭೇದಂಗಳ ಕಲ್ಪಿಸುವಲ್ಲಿ, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವಮೂರ್ತಿಗಳು ಕುರುಹುಗೊಂಬಲ್ಲಿ, ನಾದಬಿಂದುಕಳೆ ಲಕ್ಷಿಸುವಲ್ಲಿ, ಆ ಪರಶಿವತತ್ವದ ಅಂಗ ಗುರುರೂಪಾಗಿ, ಆ ಪರತತ್ವದ ಅಂಗ ಲಿಂಗವಾಗಿ, ಆ ಪರತತ್ವದ ಅಂಗ ಜಂಗಮವಾಗಿ, ಆ ಜಂಗಮ ಲಿಂಗದಲ್ಲಿ ಲೀಯವಾಗಿ, ಆ ಲಿಂಗ ಗುರುವಿನಲ್ಲಿಲೀಯವಾಗಿ, ಆ ಗುರು ಉಭಯಸ್ಥಲವ ಗಬ್ರ್ಥೀಕರಿಸಿ, ಗುರುವೆಂಬ ಭಾವ ತನಗಿಲ್ಲದೆ ತರು ಫಲವ ಹೊತ್ತಂತೆ, ಫಲ ರಸವ ಇಂಬಿಟ್ಟುಕೊಂಡಂತೆ, ಅಂಗಕ್ಕೆ ಆತ್ಮತೇಜವರತು, ಭಾವಕ್ಕೆ ಬ್ಥೀಷ್ಮ ನಿಂದು, ಮನ ಮಹವನೊಡಗೂಡಿದಲ್ಲಿ, ಆತ ಸದ್ಗುರುಮೂರ್ತಿಯ ಕರದಲ್ಲಿ ಬಂದ ಲಿಂಗ, ಕರ್ಣದಲ್ಲಿ ಹೇಳಿದ ಮಂತ್ರ, ಕಪಾಲವ ಮುಟ್ಟಿದ ತಂತ್ರ. ಆದು ಸದ್ಗುರು ಕಾರುಣ್ಯ, ಆ ಶಿಷ್ಯಂಗೆ ಜೀವನ್ನುಕ್ತಿ. ಇದು ಆಚಾರ್ಯಮತ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಘುಟಿಕಾಸಿದ್ಧರ ಘುಟಿಕೆಯುರುಳಿತ್ತು ಯಂತ್ರಿಗಳ ಯಂತ್ರ ಎದ್ದು ಹೋಯಿತ್ತು ಮಂತ್ರಿಗಳ ಮಂತ್ರ ಮರೆತುಹೋಯಿತ್ತು ಔಷಧಿಗರ ಔಷಧವನಾರಡಿಗೊಂಡಿತ್ತು ಸರ್ವವಿದ್ಯಾಮುಖದ ಜ್ಯೋತಿ ನಂದಿತ್ತು ಈ ವಿಷಯದ ಲಹರಿಯಲ್ಲಿ ಮೂರುಲೋಕದವರೆಲ್ಲರು ಮೂರ್ಛಿತರಾದರು ಕಾಣಾ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಸತ್ಯನಲ್ಲ, ಅಸತ್ಯನಲ್ಲ. ಕರ್ಮಿಯಲ್ಲ, ಧರ್ಮಿಯಲ್ಲ, ನಿಃಕರ್ಮಿಯಯ್ಯ ಭಕ್ತನು. ಆಚಾರನಲ್ಲ ಅನಾಚಾರನಲ್ಲ; ಪುಣ್ಯ ಪಾಪ ವಿರಹಿತನಾಗಿ ನಿಷ್ಪಾಪಿಯಯ್ಯ ಭಕ್ತನು. ವ್ರತ ನೇಮ ಮಂತ್ರ ತಂತ್ರ ಭವಿ ಭಕ್ತನೆಂಬುವುದಿಲ್ಲ ನೋಡಾ, ಲಿಂಗೈಕ್ಯಂಗೆ. ಸವಿಕಲ್ಪನಲ್ಲ. ನಿರ್ವಿಕಲ್ಪನಲ್ಲ. ಸೀಮನಲ್ಲ. ನಿಸ್ಸೀಮನಲ್ಲ. ಪರಮ ನಿರಂಜನನು ತಾನೆ ನೋಡಾ ಭಕ್ತನು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಜಯ ಜಯ ನಿರುಪಮ ನಿರವಯ ನಿಷ್ಕಲ ಜಯ ಜಯ ನಿಶ್ಚಲ ನಿರ್ಮಲ ನಿರ್ಗುಣ ಜಯ ಜಯ ಪರಮ ನಿರಂಜನ ಸದ್ಗುರು ಮಹಾಂತ ಶರಣಾರ್ಥಿ. | ಪಲ್ಲ | ಸುಳ್ಳೆ ನಿರ್ಬೈಲೆನಿಸಿ ಮೆರೆದಿ ಸುಳ್ಳೆ ಮಹಾಬೈಲಾಗಿ ತೋರಿದಿ ಸುಳ್ಳೆ ಚಿದ್ಬೈಲವಾಗಿ ಸಾರಿದಿ ಸುಳ್ಳೆ ಪರಬ್ರಹ್ಮಾ ಸುಳ್ಳೆ ಪರಶಿವ ಚಿತ್ತಬ್ಥಿತ್ತಿಯು ಸುಳ್ಳೆ ಇಚ್ಛೆಯ ನೆನವಕೊನರಿಸಿ ಸುಳ್ಳೆ ಮನಘನವೃಕ್ಷ ಮಾಡಿದಿ ಮಹಾಂತ ಶರಣಾರ್ಥಿ. | 1 | ಸುಳ್ಳೆ ನೆಲ ಜಲ ಅಗ್ನಿ ವಾಯು ಸುಳ್ಳೆ ಗಗನಾತ್ಮಾರ್ಕ ಚಂದ್ರಮ ಸುಳ್ಳೆ ತಾರಕ ಕಠೋರ ಮಹಾಮಹತ್ವಣುವಿಗಣು ಮಾಯೆ ಸುಳ್ಳೆ ಬೀಜದ ಸಸಿಯ ಫಲರಸ ಸುಳ್ಳೆ ಶೋಣಿತ ಶುಕ್ಲ ಶರೀರ ಸುಳ್ಳೆ ಹಮ್ಮು ಮತ್ತಾಶೆ ಮಾಡಿದೆ ಮಹಾಂತ ಶರಣಾರ್ಥಿ. | 2 | ಸುಳ್ಳೆ ತ್ರಿಜಗ ಸಚರಾಚರಗಳು ಸುಳ್ಳೆ ತನ್ನನು ತಾನೆ ಎಂಬುದು ಸುಳ್ಳೆ ಕುಲ ಛಲ ಸುಳ್ಳೆ ಮತಿ ತತಿ ಸುಳ್ಳೆ ವ್ರತಶೀಲಾ ಸುಳ್ಳೆ ತಾ ಸತ್ಕರ್ಮ ಸದ್ಗುಣ ಸುಳ್ಳೆ ತಾ ದುಷ್ಕರ್ಮ ದುರ್ಗುಣ ಸುಳ್ಳೆ ಸರ್ವವ್ಯಾಪಾರ ಮಾಡಿದೆ ಮಹಾಂತ ಶರಣಾರ್ಥಿ. | 3 | ಸುಳ್ಳೆ ಕಾಮ ಶೀಮ ನೇಮವು ಸುಳ್ಳೆ ಭೋಗ ತ್ಯಾಗ ಯೋಗವು ಸುಳ್ಳೆ ಜಪ ತಪ ಧ್ಯಾನ ಮೌನವು ಸುಳ್ಳೆ ಪದಫಲವು ಸುಳ್ಳೆ ಇಹಪರ ಪಾಪ ಪುಣ್ಯವು ಸುಳ್ಳೆ ಸ್ವರ್ಗ ನರಕ ಸುಖ ದುಃಖ ಸುಳ್ಳೆ ನೋವು ಸಾವು ಮಾಡಿದೆ ಮಹಾಂತ ಶರಣಾರ್ಥಿ. | 4 | ಸುಳ್ಳೆ ಭಾವದ ಭ್ರಮಿಗೆ ಭವಭವ ಸುಳ್ಳೆ ತಾ ತಿರುತಿರುಗಿ ಬಳಲುತೆ ಸುಳ್ಳೆ ಉತ್ಪತ್ತಿ ಸ್ಥಿತಿ ಲಯಂಗಳಾಗಿ ಮಣ್ಣಾಯಿತು ಸುಳ್ಳೆ ತಾ ಮಹಾಮೇರು ಮಹತ್ವವು ಸುಳ್ಳೆ ಈ ಮಾಯಾ ಗಮನವು ಸುಳ್ಳೆ ಶರಣರ ಐಕ್ಯ ಮಾಡಿದಿ ಮಹಾಂತ ಶರಣಾರ್ಥಿ | 5 | ಸುಳ್ಳೆ ಅಷ್ಟಾವರಣದರ್ಚನೆ ಸುಳ್ಳೆ ತಾ ಅಷ್ಟಾಂಗಯೋಗವು ಸುಳ್ಳೆ ಬೆಳಗಿನ ಬೆಳಗು ಅದ್ವೆ ೈತಾದಿ ನಿಜಮುಕ್ತಿ ಸುಳ್ಳೆ ಖರೇ ಮಾಡಿ ಸಲೆ ಕಾಡಿದಿ ಸುಳ್ಳೆ ಸುಳ್ಳೆನಿಸುತ್ತೆ ಹಬ್ಬಿದಿ ಸುಳ್ಳೆ ಆಟವನಾಡಿ ಮೆರೆಯುವ ಮಹಾಂತ ಶರಣಾರ್ಥಿ. | 6 | ಸುಳ್ಳೆ ತಾ ಶಿವ ಸುಳ್ಳೆ ನೀ ಗುರು ಸುಳ್ಳೆ ನಾ ಶಿಷ್ಯಾಗಿ ಈ ಭವಕರ ಸುಳ್ಳೆ ಲಿಂಗವ ಕಂಡು ಜಂಗಮತೀರ್ಥಪ್ರಸಾದ ಸುಳ್ಳೆ ಭಸ್ಮ ಶಿವೇಕ್ಷಮಣಿ ಮಂತ್ರ ಸುಳ್ಳೆ ಅನುಗೊಳಿಸ್ಯಾತ್ಮ ತತ್ವವ ಸುಳ್ಳೆ ಧ್ಯಾನವ ಹುಡುಕಿ ಮಾಡಿದಿ ಮಹಾಂತ ಶರಣಾರ್ಥಿ | 7 | ಸುಳ್ಳೆ ಹುಡುಕಿ ನಾ ನನ್ನ ಮರೆದೆ ಸುಳ್ಳೆ ಹುಡುಕಿ ನಾ ನಿನ್ನ ಅರಿದೆ ಸುಳ್ಳೆ ಹುಡುಕಿ ಮುಕ್ತಿ ಮೆರೆದೆನು ಸುಳ್ಳೆ ತಾನಾಯಿತು ಸುಳ್ಳೆ ಬಂದಿತು ಸುಳ್ಳೆ ನಿಂದಿತು ಸುಳ್ಳೆ ಹೊಂದಿತು ಸುಳ್ಳೆ ಹೋಯಿತು ಸುಳ್ಳೆ ಖರೆ ಮಾಡಿಸದೆ ಕಾಡಿದಿ ಮಹಾಂತ ಶರಣಾರ್ಥಿ | 8 | ಸುಳ್ಳೆ ಇಪ್ಪತ್ತೈದು ನಿಜಪದ ಸುಳ್ಳೆ ಹತ್ತೊಂಬತ್ತು ವಚನಗಳು ಸುಳ್ಳೆ ಈ ಪರಿವದ್ರ್ಥಿನೊಂಬತ್ತೆಂದೆನು ಹಾಡು ಸುಳ್ಳೆ ಹಾಡುವದಾಯ್ತು ಹಾಡು ಸುಳ್ಳೆ ಹದಿನೇಳ್ನೂರೈವತ್ತು ಸರ್ವಕೆ ಸುಳ್ಳೆ ತಿಳಿದರೆಡುಳ್ಳೆ ಮಾಡಿದಿ ಮಹಾಂತ ಶರಣಾರ್ಥಿ | 9 |
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ವಶ್ಯವ ಬಲ್ಲೆವೆಂದೆಂಬಿರಯ್ಯಾ, ಬುದ್ಧಿಯನರಿಯದ ಮನುಜರು ಕೇಳಿರಯ್ಯಾ. ವಶ್ಯವಾವುದೆಂದರಿಯದೆ ಮರುಳುಗೊಂಬಿರಿ, ಎಲೆ ಗಾವಿಲ ಮನುಜರಿರಾ. ಓಂ ನಮಃ ಶಿವಾಯ ಎಂಬ ಮಂತ್ರ ಸರ್ವಜನವಶ್ಯ ಕೂಡಲಸಂಗಮದೇವಾ. 78
--------------
ಬಸವಣ್ಣ
ಮಂತ್ರ ಭಿನ್ನವಾಯಿತ್ತೆಂದು ಕಂಥೆಯ ಬಿಡುವರೆ ಅರಿವುಳ್ಳವರು ? ಅದು ದ್ವೇಷವಲ್ಲದೆ ಅರಿವಿಂಗೆ ಸಂಬಂಧವಲ್ಲ. ಮಂತ್ರಮಧ್ಯೇ ಭವೇಲ್ಲಿಂಗಂ ಲಿಂಗಮಧ್ಯೇ ಭವೇನ್ಮಂತ್ರಂ ಮಂತ್ರಲಿಂಗದ್ವಯೋರೈಕ್ಯಂ ಇಷ್ಟಲಿಂಗಂತು ಶಾಂಕರಿ || ' ಎಂದುದಾಗಿ, ಆ ಮಂತ್ರ ಸರ್ವರ ಆಧಾರ, ಸರ್ವರ ಆತ್ಮಬೀಜವೆಂದರಿಯದೆ ಕೇಸರಿಯ ಕನಸ ಕಂಡ ವಾರಣದಂತೆ, ಈ ಭಾಷೆಹೀನರಿಗೇಕೆ ಶಂಭುಜಕ್ಕೇಶ್ವರನು ?
--------------
ಸತ್ಯಕ್ಕ
ಬಳಿಕ ಕ್ರಿ....ತನ್ನ ಶಿಷ್ಯನ ಕರೆದೆಲೆ ಮಗನೆ ನಿನ್ನ ಪ್ರಾ[ಣ]ಲಿಂಗವಿದು ತಾನೆ, ತತ್ವಾತೀತಮಾದ ಪರವಸ್ತುವಿದು ತಾನೆ, ಹರಿಬ್ರಹ್ಮರರಸಿ ಕಾಣದ ನಿಜತತ್ವವಿದ ನಿನ್ನು ನಿಮಿ...ರ್ಧಮಾದರೂ ನಿನ್ನ ಶರೀರದಿಂ ವಿಯೋಗಮಾಗದಂತೆ ಸಾವಧಾನದಿಂ ಧರಿಸು, ತ್ರಿಕಾಲಂ ತಪ್ಪದರ್ಚಿಸುತ್ತಿರು, ಲಿಂಗಾರ್ಪಿತವಲ್ಲ ದೇನೊಂದನು ಸ್ವೀಕರಿಸದಿರು, ಸಕಲಭೋಗಮೋಕ್ಷಂಗಳೆಲ್ಲಾ...ಸಾರಿದವೆಂದು ನಂಬು, ಸರ್ವ ಕ್ಲೇಶಮಂ ಬಿಡು, ನಿತ್ಯಸುಖಿಯಾಗು, ಸತ್ಯಮಿದೆಂಬಿವು ಮೊದ ಲಾದ ಶಿವಕ್ರಿಯೆಗಳ ನುಪದೇಶಂಗೆಯುಂತು ಪೇಳ ವೀರಶೈವದೀಕ್ಷೆಯಾದೊಡೆ ಆಜ್ಞಾದೀಕ್ಷೆ ಉಪ[ಮಾ]ದೀಕ್ಷೆ, ಸ್ವಸ್ಥಿಕಾರೋಹಣ, ಕಳಶಾಬ್ಥಿಷೇಕ, ವಿಭೂತಿಯ ಪಟ್ಟ, ಲಿಂಗಾಯತ, ಲಿಂಗಸ್ವಾಯತಮೆಂದು ಸಪ್ತವಿಧಮಾಗಿಹುದವರಲ್ಲಿ ಶ್ರೀಗುರು ತನ್ನಾಜ್ಞೆಯನೆ ಶಿಷ್ಯನಲ್ಲಿ ಪ್ರತಿಪಾದಿಸೊದೆ ಆಜ್ಞಾದೀಕ್ಷೆ ಎನಿಸೂದು. ಪುರಾತನ ಸಮಯಾಚಾರಕ್ಕೆ ಸದೃಶಮಾಗಿ ಮಾಡೂದೆ ಉಪಮಾದೀಕ್ಷೆ ಎನಿಸೂದು. ಸ್ವಸ್ತಿಕಮೆಂಬ ಮಂಡಲದ ಮೇಲೆ ಶಿಷ್ಯನಂ ಕುಳ್ಳಿರಿಸಿ ಮಂತ್ರ ನ್ಯಾಸಾದಿಗಳಂ ಮಾಡಿ ಮಂತ್ರಶರೀರಿ ಎನಿಸೂದೆ ಸ್ವಸ್ತಿಕಾರೋಣವೆನಿಸೂದು. ಪಂಚಕಳಶೋದಕಂಗಳಿಂ ಶಿಷ್ಯಂಗೆ ಸ್ನಪನಂಗೆಯ್ವುದೆ ಕಳಶಾಬ್ಥಿಷೇಕವೆನಿ ಸೂದು. ಆಗಮೋಕ್ತಸ್ಥಾನಂಗಳಲ್ಲಿ ತತ್ತನ್ಮಂತ್ರಂಗಳಿಂ ಶ್ರೀವಿಭೂತಿ ಧಾರಣಂ ಗೆಯ್ವುದೆ ವಿಭೂತಿಯ ಪಟ್ಟವೆನಿಸೂದು. ಆಚಾರ್ಯಂ ತಾನೂ ಶಿಷ್ಯಂಗೆ ಕೊಡಲುತಕ್ಕ ಲಿಂಗವನರ್ಚಿಸಿ ಶಿಷ್ಯನಂ ನೋಡಿಸೊದೆ ಲಿಂಗಾಯತವೆನಿಸೂದು. ಆ ಶ್ರೀಗುರುವಿತ್ತ ಲಿಂಗವನೆ ಶಿಷ್ಯನು ಸಾವಧಾನದಿಂದುತ್ತಮಾಂಗಾದಿ ಸ್ಥಾನಂಗಳಲ್ಲಿ ಧರಿಸೂದೆ ಲಿಂಗಸ್ವಾಯತವೆನಿಸೂದು. ಇಂತು ಶಾಸ್ತ್ರೋಕ್ತ ಕ್ರಮದಿಂ ಸಾಂಗಿಕಮಾದ ಶಿವದೀಕ್ಷೆಯಿಂ ಲಿಂಗಾಂಗಸಂಬಂದ್ಥಿಯಾದ ವೀರಶೈವನು ಮಾಳ್ಪ ಶಿವಲಿಂಗ ಪೂಜಾಕ್ರಮವೆಂತೆಂದೊಡೆ :ಶ್ರೇಷ್ಠರುಗಳಾ ವಾವುದನಾಚರಿಸುವರದನೆ ಲೋಕದವರನುವರ್ತಿಪುದರಿಂ, ಜಗಕ್ಕುಪದೇಶ ಮಪ್ಪಂತೆ ತಾನು ನಿತ್ಯನಿರ್ಮಲನಾದರೂ ಮಂತ್ರನ್ಯಾಸಾ... [ಸಾಂಸ್ಥಿಕಮಾಗಿ] ಶಿವಲಿಂಗಾರ್ಚನೆಯಂ ಮಾಡುವಲ್ಲಿ ಮೊದಲು...ಳತನುಲಿಂಗುಪದೇಶಮಂ ಮಾಳ್ಪುದು. ಪದಿನೆಂಟುಕುಲ ಪ್ರವರ್ತನೆಯನಳಿದು, ಶರಣರ ಕುಲ ವನೊ.... ಶಿವಪೂಜೋಪಚಾರವೆ ತನಗೆ ಸಂಸಾರವೆನಲದುವೆ ನಿಸ್ಸಂಸಾರ ದೀಕ್ಷೆ ತ್ರಿಮಲ ಭವದೊಳು...ಲಿಂಗಾಂಗಸಮರಸವ ಮಾಳ್ಪುದೆ ತತ್ವದೀಕ್ಷೆ. ಲಿಂಗಾಂಗಸ್ವಯ ಲಿಂಗ ನೀನೆಂದು ತಿಳುಪುವದೆ ಅ...ಹವು ಹಿಂಗದಾ ಸಚ್ಚಿದಾನಂದಬ್ರಹ್ಮಾತ್ಮಕ ತಾನೆನಲ ದುಸತ್ಯಶುದ್ಧೀದಕ್ಷೆ. ಯೀ ಸಪ್ತಕವ....ಯದೆಹುದೆ ಏಕಾಗ್ರಚಿತ್ತದೀಕ್ಷೆ. ವ್ರತನಿಯಮಂ[ಗಳಲ್ಲಿ]....ಯ ಕರಣಭಾವಾರ್ಪಿತಗಳಂ ಸರ್ವಕಾಲದೊಳು ಇಷ್ಟ ಪ್ರಾಣವಾಸ ಲಿಂಗಂ.....ದಿರ್ಪುದೆ ....ದೀಕ್ಷೆಯೆನಿಪುದು. ಆದಿಮಧ್ಯಾವ ಸಾನರಹಿತ ಶಿವ ತಾನೆ ನಲ....ಚ್ಚಿ ಬೇರ್ಪಡಿಸದಿರವೆ ಸದ್ಯೋನ್ಮುಕ್ತಿದೀಕ್ಷೆ. ಈ ಏಳನು ಭಾವಕುಪದೇಶ ಮಂ....(ಅಪೂರ್ಣ)
--------------
ಶಾಂತವೀರೇಶ್ವರ
ಹಾಹಾ ! ವೇದವೆ ತತ್ವವಾದಡೆ, ಮಾದಾರನ ಮನೆಯಲುಂಡನೊಬ್ಬ. ನಿಧಾನವುಳ್ಳ ಉಪಾಧ್ಯಾಯರಾರೂ ಇಲ್ಲದಾದಡೆ, ಶಾಸ್ತ್ರವೆ ತತ್ವವಾದಡೆ ಶಿವರಾತ್ರಿಯನೊಬ್ಬ ಬೇಡಂಗಿತ್ತುದನೊಬ್ಬ ಶ್ರೋತ್ರಿಯಂಗೀಯಲಾಗದೆ ? ಆಗಮವಿದ್ಥಿಯಲ್ಲಿ ಮಂತ್ರ ಮೂರುತಿಯೆಂಬ ಮಾತಂತಿರಲಿ. ಆದ ಕೇಳಲಾಗದು ಭ್ರಾಂತು ಬೇಡ. ಭಾವಮೂರುತಿ ಬಲ್ಲ ಪ್ರಮಾಣವಿದೆ. ಆ ಕುಲವೆಂದಡೆ ಹೊಕ್ಕ ಕಕ್ಕಯ್ಯಗಳ ಮನೆಯ. ಅಕ್ಕಟಾ, ನಿಮ್ಮ ತರ್ಕ ಮುಕ್ಕಾಯಿತ್ತು, ಲೋಕವರಿಯದೆ ? ಕಲ್ಲಲಿಟ್ಟು ಕಾಲಲೊದೆದಡೆ, ಅಲ್ಲಿ ಮೂರುತಿ ನುಡಿಯಿತ್ತಲ್ಲಯ್ಯಾ. ಬಲ್ವದನು ದ್ವಿಜರು ನೀವೆಲ್ಲರೂ ಹೇಳಿರೆ, ಸಲ್ಲದು, ನಿಮ್ಮ ವಾದ ನಿಲ್ಲಲಿ, ಬಲ್ಲಿದ ನಡೆದುದೇ ಬಟ್ಟೆ. ಮಹಾಲಿಂಗ ಕಲ್ಲೇಶ್ವರಾ, ಲಿಂಗಾಚಾರಿಗಳು ನಿಸ್ಸೀಮರಯ್ಯಾ.
--------------
ಹಾವಿನಹಾಳ ಕಲ್ಲಯ್ಯ
ಪ್ರಣವವೇ ಪರಬ್ರಹ್ಮವು. ಪ್ರಣವವೇ ಪರಾಪರವಸ್ತು. ಪ್ರಣವವೇ ಪರತತ್ವವು ಪ್ರಣವವೇ ಪರಂಜ್ಯೋತಿ ಪ್ರಕಾಶವು. ಪ್ರಣವವೇ ಪರಶಿವ. ಪ್ರಣವವೇ ಶುದ್ಧಪ್ರಸಾದ. ಪ್ರಣವವೇ ಪರಮಪದ. ಪ್ರಣವವೇ. ವೇದಶಾಸ್ತ್ರ ಪುರಾಣಾಗಮಂಗಳುತ್ಪತ್ತಿಗೆ ಕಾರಣ ನೋಡಾ. ಪ್ರಣವವೇ ಸಪ್ತಕೋಟಿ ಮಹಾಮಂತ್ರ, ಅನೇಕಕೋಟಿ ಉಪಮಂತ್ರಂಗಳಿಗೆ ಮಾತೃಸ್ಥಾನ ನೋಡಾ. ಇಂತಪ್ಪ ಶಿವಸ್ವರೂಪವಪ್ಪ ಪ್ರಣವಮಂತ್ರವನೇ ಶುದ್ಧಮಾಯಾಸಂಬಂಧವೆಂಬ ಅಬದ್ಧರ ಎನಗೊಮ್ಮೆ ತೋರದಿರಯ್ಯ. ಮಂತ್ರ ಜಡವಾದಲ್ಲಿಯೆ ಗುರು ಜಡ. ಗುರು ಜಡವಾದಲ್ಲಿಯೆ ಲಿಂಗವು ಜಡ. ಲಿಂಗವು ಜಡವಾದಲ್ಲಿಯೆ ಜಂಗಮವು ಜಡ. ಜಂಗಮವು ಜಡವಾದಲ್ಲಿಯೇ ಪ್ರಸಾದವು ಜಡ. ಪ್ರಸಾದವು ಜಡಯೆಂಬುವರಿಗೆ ಮುಕ್ತಿಯೆಂಬುದು ಎಂದೂ ಇಲ್ಲ. ಮಂತ್ರ ಗುರು ಲಿಂಗ ಜಂಗಮ ಪ್ರಸಾದ ಮುಕ್ತಿ ಈ ಆರು ಸಾಕ್ಷಾತ್ ಶಿವ ತಾನೆಯಲ್ಲದೆ ಬೇರಿಲ್ಲ. ಶಿವ ಬೇರೆ ಇವು ಬೇರೆಯೆಂಬ ಅಜ್ಞಾನ ಕರ್ಮಕಾಂಡಿಗಳ ಪಶುಮತ(ದ)ವರಯೆನಗೊಮ್ಮೆ ತೋರದಿರು. ಇದು ಕಾರಣ, ಪ್ರಣವವೇ ಪರವಸ್ತು. ಪಂಚಾಕ್ಷರವೇ ಪಂಚಮುಖವನ್ನುಳ್ಳ ಪರಮೇಶ್ವರ ತಾನೇ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸಂಗವನರಿದು ಜರೆದು ಸಂಗಸಂಬಂಧವಾದ ಚಿನುಮಯ ಚನ್ನಮಹೇಶ್ವರನ ತನುಮನಭಾವಂಗಳು ಮತ್ತೊಂದಕ್ಕೆ ಆಸ್ಪದವಿರಹಿತವಾಗಿರ್ದವು. ಅದೆಂತೆಂದೊಡೆ, ಗುರುಭಕ್ತಿಸೇವಾನುಕೂಲಿ ಕಾಯದ ಗತಿಯುಳ್ಳನ್ನಕ್ಕರ ಕಂಡು ಮಾಡಿ ವಿನೋದಿಸಬೇಕೆಂಬುದೊಂದು ನಿರುತ, ಮಂತ್ರ ಧ್ಯಾನ ಜಪ ಸ್ತೋತ್ರಾದಿಗಳಿಂದೆ ಲಿಂಗಾರ್ಚನೆಯವಸರ ಮನವುಳ್ಳನ್ನಕ್ಕರ ಮಾಡಿ ನೋಡಿ ಆನಂದಿಸಬೇಕೆಂಬುದೊಂದು ನಿಷ್ಠೆ. ಅನ್ನ ವಸ್ತ್ರ ಆಭರಣಾದಿ ಹದಿನೆಂಟು ತೆರದ ಭಕ್ತಿಯಾರಾಧನೆ ಪ್ರಾಣಾದಿ ದ್ರವ್ಯವುಳ್ಳನ್ನಕ್ಕರ ಮಾಡಿ ನೀಡಿ ಸುಖಿಸಬೇಕೆಂಬುದೊಂದು ಭಾವದ ನಿರುತ. ಇಂತು ತ್ರಿವಿಧ ಪದದಲ್ಲಿ ತ್ರಿವಿಧ ವಿದ್ಯಾಸನ್ನಿಹಿತನಾಗಿ ಎಡೆದೆರಹಿಲ್ಲದಿರುತಿರ್ದನು ಗುರುನಿರಂಜನ ಚನ್ನಬಸವಲಿಂಗನಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನಷ್ಟು ... -->