ಆದಿಯಲ್ಲಿ ಪ್ರಣವಸ್ವರೂಪಮಾದ ಪರಮಾತ್ಮನು
ಅಕಾರ ಉಕಾರ ಮಕಾರವೆಂಬ ಅಕ್ಷರತ್ರಯಸ್ವರೂಪಮಾಗಿ,
ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ;
ಬಿಂದುವೇ ಶರೀರಮಾಗಿ, ನಾದವೇ ಪ್ರಾಣಮಾಗಿ, ಕಳೆಯೇ ಮನಮಾಗಿ ;
ಬಿಂದುಮಯವಾದ ಶರೀರದಲ್ಲಿ ರೂಪು
ನಾದಮಯಮಾದ ಪ್ರಾಣದಲ್ಲಿ ನಾಮ
ಕಳಾಮಯಮಾದ ಮನದಲ್ಲಿ ಕ್ರಿಯೆ
ಇಂತು ನಾಮ-ರೂಪ-ಕ್ರಿಯಾಯುಕ್ತಮಾದ ಪುರುಷನ
ಶರೀರದಲ್ಲಿ ಭಕ್ತಿ, ಪ್ರಾಣದಲ್ಲಿ ಜ್ಞಾನ, ಮನದಲ್ಲಿ ವೈರಾಗ್ಯ ನೆಲೆಗೊಂಡಲ್ಲಿ,
ಬಿಂದುವಿನಲ್ಲಿ ಆಚಾರಲಿಂಗಸಂಬಂಧಮಾಯಿತ್ತು,
ಕಳೆಯಲ್ಲಿ ಶಿವಲಿಂಗಸಂಬಂಧಮಾಯಿತ್ತು.
ಆಚಾರದಿಂದ ಪೂತಮಾದ ಶರೀರವೇ ಜಂಗಮಲಿಂಗಮಾಯಿತ್ತು .
ಗುರುಮಂತ್ರದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು.
ಶಿವಧ್ಯಾನದಿಂದ ಪೂತಮಾದ ಪ್ರಾಣವೇ ಪ್ರಸಾದಲಿಂಗಮಾಯಿತ್ತು .
ಬಿಂದುವಿನಲ್ಲಿ ಕ್ರಿಯಾಶಕ್ತಿ ನೆಲೆಗೊಂಡಲ್ಲಿ,
ಆ ಬಿಂದುವೇ ಆದಿಶಕ್ತಿಮಯಮಾಯಿತ್ತು.
ನಾದದಲ್ಲಿ ಮಂತ್ರಶಕ್ತಿ ನೆಲೆಗೊಂಡಲ್ಲಿ,
ಆ ನಾದವೇ ಪರಾಶಕ್ತಿಯಾಯಿತ್ತು.
ಕಳೆಯಲ್ಲಿ ಇಚ್ಛಾಶಕ್ತಿ ನೆಲೆಗೊಂಡಲ್ಲಿ,
ಆ ಕಳೆಯೇ ಜ್ಞಾನಶಕ್ತಿಯಾಯಿತ್ತು.
ಇಂತು ಶರೀರಮೇ ಜಂಗಮದಿಂದ ಪವಿತ್ರಮಾಗಿ,
ಪ್ರಾಣವು ಗುರುವಿನಿಂದ ಪವಿತ್ರಮಾಗಿ,
ಮನವು ಲಿಂಗದಿಂದ ಪರಿಶುದ್ಧಮಾಗಿರ್ದ ಶಿವಶರಣನು
ಇದ್ದುದೇ ಕೈಲಾಸ, ಅನುಭವಿಸಿದುದೆಲ್ಲಾ ಲಿಂಗಭೋಗ, ಐಕ್ಯವೇ ಲಿಂಗೈಕ್ಯ ಕಾಣಾ
ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.