ಅಥವಾ

ಒಟ್ಟು 51 ಕಡೆಗಳಲ್ಲಿ , 18 ವಚನಕಾರರು , 31 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ಪೃಥ್ವಿಯನರಿಯಲುಬಾರದು ನಕಾರ, ಅಪ್ಪುವನರಿಯಲುಬಾರದು ಮಕಾರ, ಅಗ್ನಿಯನರಿಯಲುಬಾರದು ಶಿಕಾರ, ವಾತವನರಿಯಲುಬಾರದು ವಕಾರ, ಅಂಬರವನರಿಯಲುಬಾರದು ಯಕಾರ, ಭಾವವನರಿಯಲುಬಾರದು ಓಂಕಾರ. ಇದು ಕಾರಣ ಷಡ್ಬ್ರಹ್ಮರೂಪ ಚನ್ನಬಸವಲಿಂಗ ಅರಿದು ಅರಿಯದಿರಲುಬೇಕು ಭಕ್ತ.
--------------
ದೇಶಿಕೇಂದ್ರ ಸಂಗನಬಸವಯ್ಯ
ನಕಾರ ನರಜನ್ಮದ ಹೊಲೆಯ ಕಳೆದು, ಮಕಾರ ಮಾಂಸಪಿಂಡದ ಹೊಲೆಯ ಕಳೆದು ಮಂತ್ರಪಿಂಡವ ಮಾಡಿತಯ್ಯಾ. ಶಿಕಾರ ಶಿವದೇಹಿಯ ಮಾಡಿತಯ್ಯ, ವಕಾರ ಒಳಹೊರಗೆ ತೊಳಗಿ ಬೆಳಗಿ ಶುದ್ಧನಮಾಡಿತಯ್ಯ, ಯಕಾರ ಎನ್ನ ಭವವ ಹಿಂಗಿಸಿತಯ್ಯ. ಓಂಕಾರ ಪ್ರಾಣ ಜೀವಾತ್ಮ ದೇಹದ ಮಧ್ಯದೊಳು ಸರ್ವಪೂರ್ಣಮಯವಾಗಿದ್ದಿತಯ್ಯಾ. ಇಂತೀ ಷಡಕ್ಷರಿಯ ಮಂತ್ರವ ಜಪಿಸಿ, ಅಂತಕನ ಪಾಶವ ಸುಟ್ಟು ನಿಟ್ಟೊರಸಿದೆನು ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ನಕಾರ ಮಕಾರವನೆಯ್ದಿ, ಮಕಾರ ಶಿಕಾರವನೆಯ್ದಿ, ಶಿಕಾರ ವಕಾರವನೆಯ್ದಿ, ವಕಾರ ಯಕಾರವನೆಯ್ದಿ, ಯಕಾರ ಓಂಕಾರವನೆಯ್ದಿ, ಓಂಕಾರ ನಿರಂಜನವನೆಯ್ದಿ, ನಿರಾಮಯವಾಗಿ ನಿಸ್ಥಲ ನಿಜವಾದುದ ಗುರುನಿರಂಜನ ಚನ್ನಬಸವಲಿಂಗ ತಾನೆ ಬಲ್ಲ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಂಚಾಕ್ಷರವೆ ಶಿವನ ಪಂಚಮುಖದಿಂದಲುದಯವಾಗಿ ಪಂಚತತ್ವಸ್ವರೂಪವಾಯಿತ್ತು ನೋಡಾ. ಆ ಪಂಚಸ್ವರೂಪಿಂದಲೆ ಬ್ರಹ್ಮಾಂಡ ನಿರ್ಮಿತವಾಯಿತ್ತು. ಆ ಬ್ರಹ್ಮಾಂಡದಿಂದ ಪಿಂಡಾಂಡ ನಿರ್ಮಿತವಾಯಿತ್ತು. ಅದು ಎಂತೆಂದರೆ ಹೇಳುವೆ ಕೇಳಿರಣ್ಣಾ : ಸದ್ಯೋಜಾತಮುಖದಲ್ಲಿ ನಕಾರ ಪುಟ್ಟಿತ್ತು , ಆ ನಕಾರದಿಂದ ಪೃಥ್ವಿ ಪುಟ್ಟಿತ್ತು , ವಾಮದೇವಮುಖದಲ್ಲಿ ಮಕಾರ ಪುಟ್ಟಿತ್ತು. ಆ ಮಕಾರದಿಂದ ಅಪ್ಪು ಪುಟ್ಟಿತ್ತು , ಅಘೋರಮುಖದಲ್ಲಿ ಶಿಕಾರ ಜನನ. ಆ ಶಿಕಾರದಿಂದ ಅಗ್ನಿ ಪುಟ್ಟಿತ್ತು , ತತ್ಪುರುಷಮುಖದಲ್ಲಿ ವಕಾರ ಪುಟ್ಟಿತ್ತು , ಆ ವಕಾರದಿಂದ ವಾಯು ಪುಟ್ಟಿತ್ತು , ಈಶಾನಮುಖದಲ್ಲಿ ಯಕಾರ ಜನನ, ಆ ಯಕಾರದಿಂದ ಆಕಾಶ ಹುಟ್ಟಿತ್ತು , ಈ ಪಂಚತತ್ವಸ್ವರೂಪಿಂದ ಬ್ರಹ್ಮಾಂಡ ನಿರ್ಮಿತವಾಯಿತ್ತು. ಆ ಬ್ರಹ್ಮಾಂಡದಿಂದ ಪಿಂಡಾಂಡ ನಿರ್ಮಿತವಾಯಿತ್ತು. ಹೇಗೆ ನಿರ್ಮಿತವಾಯಿತ್ತೆಂದರೆ, ಪೃಥ್ವಿ ಅಪ್ ತೇಜ ವಾಯು ಆಕಾಶವೆಂಬ ಪಂಚಭೂತಂಗಳಿಂದವೆ ಪಂಚವಿಂಶತಿತತ್ವಂಗಳುತ್ಪತ್ಯವಾದವು. ಆ ಪಂಚವಿಂಶತಿ ತತ್ವಂಗಳಿಂದವೆ ಶರೀರವಾಯಿತ್ತು. ನಕಾರದಿಂದ ಕರ್ಮೇಂದ್ರಿಯಂಗಳ ಜನನ. ಮಕಾರದಿಂದ ಪಂಚವಿಷಯಂಗಳುತ್ಪತ್ಯ. ಶಿಕಾರದಿಂದ ಬುದ್ಧೀಂದ್ರಿಯಗಳು ಜನನ. ವಕಾರದಿಂದ ಐದು ಪ್ರಾಣವಾಯುಗಳ ಜನನ. ಯಕಾರದಿಂದ ಅಂತಃಕರಣಚತುಷ್ಟಯಂಗಳು `ನಮಃ ಶಿವಾಯ' `ನಮಃ ಶಿವಾಯ'ವೆಂಬ ಪಂಚಾಕ್ಷರದಿಂದವೆ ಉತ್ಪತ್ಯವೆಂದು ಹೇಳಲ್ಪಟ್ಟಿತ್ತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ನಿಜವೀರಶೈವ ಸಂಪನ್ನರು ತಮ್ಮ ಸ್ವಯಾಂಗಲಿಂಗವನರ್ಚಿಸುವಲ್ಲಿ ಭವಿಶೈವ ಭಿನ್ನ ಕರ್ಮಿಗಳಂತೆ ಅಂಗನ್ಯಾಸ ಪಂಚಮಶುದ್ಧಿ ಮೊದಲಾದ ಅಶುದ್ಧಭಾವವಪ್ಪ ಕ್ಷುದ್ರ ಕರ್ಮಂಗಳ ಹೊದ್ದಲಾಗದು. ಅದೆಂತೆಂದೊಡೆ:``ನಕಾರಮಾತ್ಮಶುದ್ಧಿಶ್ಚ ಮಕಾರಂ ಸ್ನಾನಶೋಧನಂ ಶಿಕಾರಂ ಲಿಂಗಶುದ್ಧಿಶ್ಚ ವಾಕಾರಂ ದ್ರವ್ಯಶೋಧನಂ ಯಕಾರಂ ಮಂತ್ರಶುದ್ಧಿಶ್ಚ ಪಂಚಶುದ್ಧಿಃ ಪ್ರಕೀರ್ತಿತಾಃ ಕಾಯಶುದ್ಧಿಶ್ಚಾತ್ಮಶುದ್ಧಿಶ್ಚಾಂಗನ್ಯಾಸಕರಸ್ಯ ಚ ಸರ್ವಶುದ್ಧಿರ್ಭವೇ ನಿತ್ಯಂ ಲಿಂಗಧಾರಣಮೇವ ಚ'_ ಇಂತೆಂದುದಾಗಿ. ಅವಲ್ಲದೆ ಅಘ್ರ್ಯ ಪಾದ್ಯ ಆಚಮನಂಗಳು ಮೊದಲಾದ ಉಪಪಾತ್ರಗ?ಲ್ಲಿ ಅಗಣಿತಂಗೆ ಅಳತೆಯ ನೀರನೆರೆದು ಸುಖಮುಖಾರ್ಪಿತಕ್ಕೆ ಸಲುವ ಸುರಸದ್ರವ್ಯಂಗಳಪ್ಪ ಪಂಚಾಮೃತಂಗಳ ನಿರ್ಮಲನಪ್ಪ ನಿಜಲಿಂಗದ ಮಸ್ತಕಕ್ಕೆರೆದು ಜಿಡ್ಡು ಮಾಡಿ ತೊಳೆವ ಅಜ್ಞಾನಿ ನರಕಜೀವಿಗಳ ಮುಖವ ನೋಡಲಾಗದು. ಅದೇನುಕಾರಣವೆಂದಡೆ: ``ಅಘ್ರ್ಯಂ ಪಾದ್ಯಂ ತಥಾಚಮ್ಯಂ ಸ್ನಾನಂ ಪಂಚಾಮೃತಂ ಯದಿ ಲಿಂಗದೇಹೀ ಸ್ವಲಿಂಗೇಷು ಕೃತ್ವಾಚ್ರ್ಯಂತೇ ಬಹಿರ್ನರಾಃ ತೇ ಪಾಷಂಡಾಃ ಕೃತಾಸ್ತೇನ ಕೃತಂಕರ್ಮನರಂ ನಾರಕಂ ಇಂತೆಂದುದಾಗಿ. ಇದು ಕಾರಣ ಸ್ವಯಾಂಗಲಿಂಗದೇಹಿಗಳು ತಮ್ಮ ಲಿಂಗಮಂತ್ರವಿಡಿದು ಬಂದು ಲಿಂಗೋದಕ ಪಾದೋದಕಂಗಳಲ್ಲಿ ತಮ್ಮ ಕರ ಮುಖ ಪದ ಪ್ರಕ್ಷಾಲನವ ಮಾಡಿಕೊಂಬುದೆ ? ಅಂಗಲಿಂಗಿಗಳಿಗೆ ಸ್ವರ್ಯಾಘ್ರ್ಯ ಪಾದ್ಯಾಚಮನವೆಂಬುದನರಿಯದೆ ಕೃತಕರ್ಮ ಭವಿಜೀವಿ ಶೈವಪಾಷಂಡರಂತೆ ಭಿನ್ನವಿಟ್ಟು ಮಾಡಿ ಫಲಪದಂಗಳನೈದಿಹೆನೆಂಬ ನರಕಜೀವಿಗಳನು ಕೂಡಲಚೆನ್ನಸಂಗಯ್ಯ ರವಿ ಸೋಮರುಳ್ಳನ್ನಕ್ಕ ನಾಯಕ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಆಧಾರಚಕ್ರದಲ್ಲಿ ನಕಾರ ಸ್ವಾಯತ. ಸ್ವಾಧಿಷಾ*ನಚಕ್ರದಲ್ಲಿ ಮಃಕಾರ ಸ್ವಾಯತ. ಮಣಿಪೂರಕಚಕ್ರದಲ್ಲಿ ಶಿಕಾರ ಸ್ವಾಯತ. ಅನಾಹತಚಕ್ರದಲ್ಲಿ ವಾಕಾರ ಸ್ವಾಯತ. ವಿಶುದ್ಧಿಚಕ್ರದಲ್ಲಿ ಯಕಾರ ಸ್ವಾಯತ. ಆಜ್ಞಾಚಕ್ರದಲ್ಲಿ ಓಂಕಾರ ಸ್ವಾಯತ. ಇದು ಕಾರಣ, ಶರಣನ ಕಾಯವೇ ಷಡಕ್ಷರಮಂತ್ರಶರೀರವಾಗಿ, ಸರ್ವಾಂಗವೆಲ್ಲವು ಜ್ಞಾನ ಕಾಯ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನಕಾರ ಮಕಾರಗಳಿಲ್ಲದಂದು, ಶಿಕಾರ ವಕಾರಗಳಿಲ್ಲದಂದು, ಯಕಾರ ಓಂಕಾರಗಳಿಲ್ಲದಂದು, ಪ್ರಣವ ನಿಃಪ್ರಣವಂಗಳಿಲ್ಲದಂದು, ಇವೇನೇನೂ ಇಲ್ಲದಂದು, ನಿಷ್ಕಲಲಿಂಗ ತಾನೇ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕಂದ : ಬಣ್ಣಿಪರಳವೆ ಶ್ರೀ ಪಂಚಾಕ್ಷರಿ ಉನ್ನತ ಮಹಿಮೆಯ ತ್ರಿಜಗದೊಳಗಂ ಎನ್ನಯ ಬಡಮತಿಯುಳ್ಳಷ್ಟಂ ಇನ್ನಂ ಪೊಗಳ್ವೆ ಸಿದ್ಧಮಲ್ಲನ ಕೃಪೆಯಿಂ. ರಗಳೆ :ಗುರು ಮಹಿಮೆಯನೋಪ ಪಂಚಾಕ್ಷರಿಯು ನಾಗಭೂಷಣನರ್ತಿನಾಮ ಪಂಚಾಕ್ಷರಿಯು | 1 | ನಡೆವುತಂ ನುಡಿವುತಂ ಶಿವನೆ ಪಂಚಾಕ್ಷರಿಯು ಕುಡುತಲಿ ಕೊಂಬುತಲಿ ಹರನೆ ಪಂಚಾಕ್ಷರಿಯು ಉಡುತಲಿ ಉಂಬುತಲಿ ಸದ್ಗುರುವೇ ಪಂಚಾಕ್ಷರಿಯು ಬಿಡದೆ ಜಪಿಸಲು ಸದ್ಯೋನ್ಮುಕ್ತಿ ಪಂಚಾಕ್ಷರಿಯು. | 2 | ಸಟೆ ಠಕ್ಕು ಠೌಳಿಯಲ್ಲಿ ಬಿಡದೆ ಪಂಚಾಕ್ಷರಿಯು ದಿಟಪುಟದಲ್ಲಿ ಆವಾ ಪಂಚಾಕ್ಷರಿಯು ಕುಟಿಲ ವಿಷಯಂಗಳೊಲಿದು ಪಂಚಾಕ್ಷರಿಯು ನಟಿಸಿ ಜಪಿಸಲು ಮುಕ್ತಿ ಈವ ಪಂಚಾಕ್ಷರಿಯು. | 3 | ಮಂತ್ರಯೇಳ್ಕೋಟಿಗೆ ತಾಯಿ ಪಂಚಾಕ್ಷರಿಯು ಅಂತ್ಯಜಾಗ್ರಜ ವಿಪ್ರರೆಲ್ಲ ಪಂಚಾಕ್ಷರಿಯು ಸಂತತಂ ಬಿಡದೆ ಜಪಿಸುವದು ಪಂಚಾಕ್ಷರಿಯು ಎಂತು ಬಣ್ಣಿಪರಳವಲ್ಲ ಪಂಚಾಕ್ಷರಿಯು. | 4 | ಆದಿ ಪಂಚಾಕ್ಷರಿಯು ಅನಾದಿ ಪಂಚಾಕ್ಷರಿಯು ಭೇದ್ಯ ಪಂಚಾಕ್ಷರಿಯು [ಅಭೇದ್ಯ ಪಂಚಾಕ್ಷರಿಯು] ಸಾಧಿಸುವಗೆ ಸತ್ಯ ನಿತ್ಯ ಪಂಚಾಕ್ಷರಿಯು ಬೋಧೆ ಶೃತಿತತಿಗಳಿಗೆ ಮಿಗಿಲು ಪಂಚಾಕ್ಷರಿಯು. | 5 | ಪಂಚಾನನದುತ್ಪತ್ಯದಭವ ಪಂಚಾಕ್ಷರಿಯು ಪಂಚಮಯ ಬ್ರಹ್ಮಮಯಂ ಜಗತ್ ಪಂಚಾಕ್ಷರಿಯು ಪಂಚವಿಂಶತಿತತ್ವಕಾದಿ ಪಂಚಾಕ್ಷರಿಯು ಪಂಚಶತಕೋಟಿ ಭುವನೇಶ ಪಂಚಾಕ್ಷರಿಯು. | 6 | ಹರಿಯಜರ ಗರ್ವವ ಮುರಿವ ಪಂಚಾಕ್ಷರಿಯು ಉರಿಲಿಂಗವಾಗಿ ರಾಜಿಸುವ ಪಂಚಾಕ್ಷರಿಯು ಸ್ಮರಣೆಗೆ ಸರಿಯಿಲ್ಲ ಪ್ರಣಮಪಂಚಾಕ್ಷರಿಯು ಸ್ಮರಿಸುವಾತನೆ ನಿತ್ಯಮುಕ್ತ ಪಂಚಾಕ್ಷರಿಯು. | 7 | ಪರಮ ಮುನಿಗಳ ಕರ್ಣಾಭರಣ ಪಂಚಾಕ್ಷರಿಯು ಹರನ ಸಾಲೋಕ್ಯದ ಪದವನೀವ ಪಂಚಾಕ್ಷರಿಯು ಉರಗತೊಡೆಶಿವನನೊಲಿಸುವರೆ ಪಂಚಾಕ್ಷರಿಯು ಕರ್ಮಗಿರಿಗೊಜ್ರ ಸುಧರ್ಮ ಪಂಚಾಕ್ಷರಿಯು. | 8 | ನಾನಾ ಜನ್ಮದಲ್ಲಿ ಹೊಲೆಯ ಕಳೆವ ಪಂಚಾಕ್ಷರಿಯು ಮನಸ್ಮರಣೆಗೆ ಸರಿಯಿಲ್ಲ ಪಂಚಾಕ್ಷರಿಯು ಜ್ಞಾನವೇದಿಕೆ ಮುಖ್ಯ ಪಂಚಾಕ್ಷರಿಯು ಧ್ಯಾನಿಸುವ ನೆರೆವ ತಾನೆ ಪಂಚಾಕ್ಷರಿಯು. | 9 | ಏನ ಬೇಡಿದಡೀವ ದಾನಿ ಪಂಚಾಕ್ಷರಿಯು ಸ್ವಾನುಜ್ಞಾನದಲ್ಲು[ದಿ]ಸಿದಂಥ ಪಂಚಾಕ್ಷರಿಯು ಭಾನು ಅಘತಿಮಿರಕ್ಕೆ ತಾನೆ ಪಂಚಾಕ್ಷರಿಯು ಕ್ಷಿತಿಭುವನಗಳ ಬೇಡಲೀವ ಪಂಚಾಕ್ಷರಿಯು. | 10 | ಕಾನನ ಭವತರು ವಹ್ನಿ ಪಂಚಾಕ್ಷರಿಯು ಯತಿಗೆ ಯತಿತನವೀವ ಗತಿಯು ಪಂಚಾಕ್ಷರಿಯು ಉನ್ನತ ಸಿದ್ಧತ್ವವನೀವ ಸಿದ್ಧಿ ಪಂಚಾಕ್ಷರಿಯು ಭಾನು ಅಘತಿಮಿರಕ್ಕೆ ತಾನೆ ಪಂಚಾಕ್ಷರಿಯು ಗತಿ ಮೋಕ್ಷಗಳ ಬೇಡೆ ಕುಡುವ ಪಂಚಾಕ್ಷರಿಯು. | 11 | ಅವಲಂಬಿಗೆ ಅವಲಂಬ ಪಂಚಾಕ್ಷರಿಯು ನಿರಾವಲಂಬಿಗೆ ನಿರಾವಲಂಬ ಪಂಚಾಕ್ಷರಿಯು ಕಾವ ಸಂಹರ ಭಜಿಪರಿಗೆ ಪಂಚಾಕ್ಷರಿಯು ಮಾವದ್ಯುಮಣಿಧರನನೊಲಿಪ ಪಂಚಾಕ್ಷರಿಯು. | 12 | ಅರಿವರ್ಗಗಳ ಮುರಿವ ಶತೃ ಪಂಚಾಕ್ಷರಿಯು ಕರಿಗಳೆಂಟನು ಹೊಡೆವ ಸಿಂಹ ಪಂಚಾಕ್ಷರಿಯು ಹರಿವ ದಶವಾಯುಗಳನಳಿವ ಪಂಚಾಕ್ಷರಿಯು ನೆರೆ ಸಪ್ತವ್ಯಸನಗಳಿಗೊಹ್ನಿ ಪಂಚಾಕ್ಷರಿಯು. | 13 | ತ್ರಿಗುಣಗಳ ಕೆಡಿಪ ನಿರ್ಗುಣವು ಪಂಚಾಕ್ಷರಿಯು ಅಘವೈದೇಂದ್ರಿಯಕೆ ಲಿಂಗೇಂದ್ರಿಯ ಪಂಚಾಕ್ಷರಿಯು ಮಿಗೆ ಕರ್ಮೇಂದ್ರಿಗಳ ತೆರೆತೆಗೆವ ಪಂಚಾಕ್ಷರಿಯು ಝಗಝಗಿಸಿ ಸರ್ವಾಂಗಪೂರ್ಣ ಪಂಚಾಕ್ಷರಿಯು. | 14 | ಷಡೂರ್ಮಿಗಳ ಗಡವನಳಿವ ಪಂಚಾಕ್ಷರಿಯು ಷಡುಕರ್ಮಗಳ ಮೆಟ್ಟಿನಿಲುವ ಪಂಚಾಕ್ಷರಿಯು ಷಡುವೇಕದಂತಿಗೆ ನಾಥ ಪಂಚಾಕ್ಷರಿಯು ಬಿಡದೆ ಜಪಿಸಿದಡವ ಮುಕ್ತ ಪಂಚಾಕ್ಷರಿಯು. | 15 | ಸಂಸಾರಸಾಗರಕೆ ಹಡಗ ಪಂಚಾಕ್ಷರಿಯು ವಂಶಗಳನಳಿವ ನಿರ್ವಂಶ ಪಂಚಾಕ್ಷರಿಯು ಸಂಶಯವಿಲ್ಲದಲಿ ನಿಸ್ಸಂಶಯ ಪಂಚಾಕ್ಷರಿಯು ವಿಂಶಾರ್ಥ ಬಿಡದೆ ಜಪಿಸುವದು ಪಂಚಾಕ್ಷರಿಯು. | 16 | ಗುರುಕೃಪಕಧಿಕದಿ ಭವದಗ್ಧ ಪಂಚಾಕ್ಷರಿಯು ಕರದ ಲಿಂಗಬೆಳಗು ಪ್ರಣಮಪಂಚಾಕ್ಷರಿಯು ನೆರೆಶ್ರೋತ್ರಬೋಧೆ ನಿರ್ಬೋಧೆ ಪಂಚಾಕ್ಷರಿಯು ನಿರುತ ಜಪಿಸುವನೆ ನಿರಾಪೇಕ್ಷ ಪಂಚಾಕ್ಷರಿಯು. | 17 | ದೀಕ್ಷಾ ಪಂಚಾಕ್ಷರಿಯು ದೀಕ್ಷ ಪಂಚಾಕ್ಷರಿಯು ಮೋಕ್ಷಾ ಪಂಚಾಕ್ಷರಿಯು ಮೋಕ್ಷ ಪಂಚಾಕ್ಷರಿಯು ಶಿಕ್ಷಾ ಪಂಚಾಕ್ಷರಿಯು ಶಿಕ್ಷ ಪಂಚಾಕ್ಷರಿಯು ಭಿಕ್ಷಾ ಪಂಚಾಕ್ಷರಿಯು ಭಿಕ್ಷ ಪಂಚಾಕ್ಷರಿಯು | 18 | ಚಿದ್ಭಸ್ಮದೊಳುವಾಭರಣ ಪಂಚಾಕ್ಷರಿಯು ಚಿದ್ಮಣಿಗಳ ಸ್ಥಾನ ಸ್ಥಾನ ಪಂಚಾಕ್ಷರಿಯು ಚಿದಂಗ ಸರ್ವದೊಳು ಪೂರ್ಣ ಪಂಚಾಕ್ಷರಿಯು ಚಿದಂಗ ಲಿಂಗಸಂಗಸಂಯೋಗ ಪಂಚಾಕ್ಷರಿಯು. | 19 | ಪಾದಸಲಿಲಂ ಪ್ರಸಾದಾದಿ ಪಂಚಾಕ್ಷರಿಯು ಆದಿಕ್ಷೇತ್ರಕ್ಕೆ ವೀರಶೈವ ಪಂಚಾಕ್ಷರಿಯು ಸಾಧಿಸುವ ಸದ್ಭಕ್ತಿಯನೀವ ಪಂಚಾಕ್ಷರಿಯು ಓದುವಾತನ ವೇದವಿತ್ತು ಪಂಚಾಕ್ಷರಿಯು. | 20 | ಅಷ್ಟಾವರಣಕೆ ಮಹಾಶ್ರೇಷ* ಪಂಚಾಕ್ಷರಿಯು ದುಷ್ಟನಿಗ್ರಹ ಶಿಷ್ಟಪಾಲ ಪಂಚಾಕ್ಷರಿಯು ಮುಟ್ಟಿ ನೆನದರೆ ಮುಕ್ತಿಸಾರ ಪಂಚಾಕ್ಷರಿಯು ಇಷ್ಟಪ್ರಾಣಭಾವದೀಶ ಪಂಚಾಕ್ಷರಿಯು. | 21 | ಭಕ್ತಿಯುಕ್ತಿಯು ಮಹಾಬೆಳಗು ಪಂಚಾಕ್ಷರಿಯು ನಿತ್ಯನೆನೆವರಿಗೆ ತವರ್ಮನೆಯು ಪಂಚಾಕ್ಷರಿಯು ಸತ್ಯಸದ್ಗುಣಮಣಿಹಾರ ಪಂಚಾಕ್ಷರಿಯು ವಿತ್ತ ಸ್ತ್ರೀ ನಿರಾಸೆ ಮಹೇಶ ಪಂಚಾಕ್ಷರಿಯು. | 22 | ಪರಧನ ಪರಸ್ತ್ರೀಗೆಳಸ ಪಂಚಾಕ್ಷರಿಯು ನಿರುತ ಮಹೇಶ್ವರಾಚಾರ ಪಂಚಾಕ್ಷರಿಯು ಪರಮ ಪ್ರಸಾದಿಸ್ಥಲ ತಾನೆ ಪಂಚಾಕ್ಷರಿಯು | 23 | ಈ ಪರಿಯ ತೋರೆ ಮಹಾಮೂರುತಿ ಪಂಚಾಕ್ಷರಿಯು ತಾ ಪರಬ್ರಹ್ಮ ನಿನಾದ ಪಂಚಾಕ್ಷರಿಯು | 24 | ತಟ್ಟಿ ಮುಟ್ಟುವ ರುಚಿ ಶಿವಾರ್ಪಣ ಪಂಚಾಕ್ಷರಿಯು ಕೊಟ್ಟುಕೊಂಬುವ ಪ್ರಸಾದಾಂಗ ಪಂಚಾಕ್ಷರಿಯು ನಷ್ಟ ಶರೀರಕೆ ನೈಷೆ*ವೀವ ಪಂಚಾಕ್ಷರಿಯು ಭ್ರಷ್ಟ ಅದ್ವೈತಿಗತೀತ ಪಂಚಾಕ್ಷರಿಯು. | 25 | ಸ್ಥೂಲತನುವಿಗೆ ಇಷ್ಟಲಿಂಗ ಪಂಚಾಕ್ಷರಿಯು ಮೇಲೆ ಸೂಕ್ಷ್ಮಕೆ ಪ್ರಾಣಲಿಂಗ ಪಂಚಾಕ್ಷರಿಯು ಲೀಲೆ ಕಾರಣ ಭಾವಲಿಂಗ ಪಂಚಾಕ್ಷರಿಯು ಬಾಳ್ವ ತ್ರಿತನುವಿಗೆ ತ್ರಿಲಿಂಗ ಪಂಚಾಕ್ಷರಿಯು. | 26 | ಪ್ರಾಣಲಿಂಗದ ಹೊಲಬು ತಾನೆ ಪಂಚಾಕ್ಷರಿಯು ಕಾಣಿಸುವ ಇಷ್ಟರೊಳು ಭಾವ ಪಂಚಾಕ್ಷರಿಯು ಮಾಣದೊಳಹೊರಗೆ ಬೆಳಗು ಪಂಚಾಕ್ಷರಿಯು ಕ್ಷೋಣಿಯೊಳು ಮಿಗಿಲೆನಿಪ ಬಿರಿದು ಪಂಚಾಕ್ಷರಿಯು. | 27 | ಆರು ಚಕ್ರಕೆ ಆಧಾರ ಪಂಚಾಕ್ಷರಿಯು ಆರು ಅಧಿದೈವಗಳ ಮೀರ್ದ ಪಂಚಾಕ್ಷರಿಯು ಆರು ವರ್ಣಗಳ ಬಗೆದೋರ್ವ ಪಂಚಾಕ್ಷರಿಯು ಆರು ಚಾಳ್ವೀಸೈದಕ್ಷರಂಗ ಪಂಚಾಕ್ಷರಿಯು. | 28 | ಆರು ಶಕ್ತಿಗಳ ಆರಂಗ ಪಂಚಾಕ್ಷರಿಯು ಆರು ಭಕ್ತಿಗಳ ಚಿದ್ರೂಪ ಪಂಚಾಕ್ಷರಿಯು ಆರು ಲಿಂಗದ ಮೂಲ ಬೇರು ಪಂಚಾಕ್ಷರಿಯು ಆರು ತತ್ವವಿಚಾರ ಪಂಚಾಕ್ಷರಿಯು. | 29 | ಯೋಗಷ್ಟ ಶಿವಮುಖವ ಮಾಡ್ವ ಪಂಚಾಕ್ಷರಿಯು ನಾಗಕುಂಡಲ ಊಧ್ರ್ವವಕ್ತ್ರ ಪಂಚಾಕ್ಷರಿಯು ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ಪಂಚಾಕ್ಷರಿಯು ಸಾಗಿಸಿ ಸುಜ್ಞಾನವೀವ ಪಂಚಾಕ್ಷರಿಯು. | 30 | ಇಷ್ಟ ಪ್ರಾಣಲಿಂಗ ಹೊಲಿಗೆ ಪಂಚಾಕ್ಷರಿಯು ಅಷ್ಟದಳಕಮಲದ ಪೀಠ ಪಂಚಾಕ್ಷರಿಯು ದೃಷ್ಟಿ ಅನುಮಿಷಭಾವ ಪಂಚಾಕ್ಷರಿಯು ಕೊಟ್ಟು ಸಲಹುವದಷ್ಟ ಪಂಚಾಕ್ಷರಿಯು. | 31 | ತನು ಸೆಜ್ಜೆ ಪ್ರಾಣವೆ ಲಿಂಗ ಪಂಚಾಕ್ಷರಿಯು ಮನ ಪೂಜಾರಿಯು ಭಾವ ಪುಷ್ಪ ಪಂಚಾಕ್ಷರಿಯು ಇನಿತು ಕೂಡುವುದು ಶಿವಶರಣ ಪಂಚಾಕ್ಷರಿಯು ಬಿನುಗಿಗಳವಡದ ಈ ಸತ್ಯ ಪಂಚಾಕ್ಷರಿಯು. | 32 | ಶರಣಸ್ಥಲದಂಗ ವೈರಾಗ್ಯ ಪಂಚಾಕ್ಷರಿಯು ಶರಣಸತಿ ಲಿಂಗಪತಿ ತಾನೆ ಪಂಚಾಕ್ಷರಿಯು ಶರಣುವೊಕ್ಕರ ಕಾವ ಬಿರಿದು ಪಂಚಾಕ್ಷರಿಯು ಶರಣಗಣರಿಗೆ ಮಾತೆಪಿತನು ಪಂಚಾಕ್ಷರಿಯು. | 33 | ಶರಣಂಗೆ ಸುಜ್ಞಾನದಿರವು ಪಂಚಾಕ್ಷರಿಯು ಶರಣಂಗೆ ಮುಕ್ತಿಯಾಗರವು ಪಂಚಾಕ್ಷರಿಯು ಶರಣಂಗೆ ಭಕ್ತಿಯ ಸೋಪಾನ ಪಂಚಾಕ್ಷರಿಯು ಶರಣಂಗೆ ಪರಮಜಲಕೂಪ ಪಂಚಾಕ್ಷರಿಯು. | 34 | ಶರಣಂಗೆ ಶೈವದ ಗೃಹವು ಪಂಚಾಕ್ಷರಿಯು ಶರಣರಿಗೆ ಸುರಧೇನು ಅಮೃತ ಪಂಚಾಕ್ಷರಿಯು ಶರಣರಿಗೆ ಕಲ್ಪತರು ಫಲವು ಪಂಚಾಕ್ಷರಿಯು ಶರಣರಿಗೆ ಚಿಂತಾಮಣಿ ತಾನೆ ಪಂಚಾಕ್ಷರಿಯು. | 35 | ಶರಣಪದ ಬೇಡುವರಿಗೀವ ಪಂಚಾಕ್ಷರಿಯು ಶರಣ ನಡೆನುಡಿ ಪೂರ್ಣಮಯವು ಪಂಚಾಕ್ಷರಿಯು ಶರಣರಿಗೆ ಶಿವನಚ್ಚು ಮೆಚ್ಚು ಪಂಚಾಕ್ಷರಿಯು ಶರಣರ್ದೂಷಣರೆದೆಗಿಚ್ಚು ಪಂಚಾಕ್ಷರಿಯು. | 36 | ಶರಣು ಶಿವಾನಂದ ಜಲಗಡಲು ಪಂಚಾಕ್ಷರಿಯು ಶರಣರ ಶರೀರ ಮೇಲೆ ಹೊದಿಕೆಯು ಪಂಚಾಕ್ಷರಿಯು ಶರಣು ಕೃತ್ಯಕೆ ವೈದ್ಯ ಕಾಣಾ ಪಂಚಾಕ್ಷರಿಯು ಶರಣು ಸುಜ್ಞಾನದರ್ಪಣವು ಪಂಚಾಕ್ಷರಿಯು. | 37 | ಶರಣ ಚಿದ್ರೂಪದ ಬಯಕೆಯಳಿದ ಪಂಚಾಕ್ಷರಿಯು ಶರಣಷ್ಟೈಶ್ವರ್ಯದೊಳಗಿಡದ ಪಂಚಾಕ್ಷರಿಯು ಶರಣಪೂಜಿಸಿ ಫಲವ ಬೇಡು[ವ] ಪಂಚಾಕ್ಷರಿಯು ಶರಣೊಜ್ರಪಂಜರದ ಬಿರಿದು ಪಂಚಾಕ್ಷರಿಯು. | 38 | ಶರಣಾಸೆ ರೋಷವನಳಿವ ಪಂಚಾಕ್ಷರಿಯು ಶರಣಾಸೆಯ ಮೋಹಲತೆ ಚಿವುಟುವ ಪಂಚಾಕ್ಷರಿಯು ಶರಣಜ್ಞಾನದತರು ಕುಠಾರ ಪಂಚಾಕ್ಷರಿಯು ಶರಣರುದಯಾಸ್ತಮಾನ ತಾನೆ ಪಂಚಾಕ್ಷರಿಯು. | 39 | ಶರಣರ ನಡೆನುಡಿ ಒಂದು ಮಾಡಿ[ದ] ಪಂಚಾಕ್ಷರಿಯು ಶರಣ ಸಂಸಾರಕಿಕ್ಕಿಡದ ಪಂಚಾಕ್ಷರಿಯು ಶರಣಗುಣ ಚಿಹ್ನಕೊರೆ ಶಿಲೆಯು ಪಂಚಾಕ್ಷರಿಯು ಶರಣರೊಡಗೂಡಿದಾನಂದ ಪಂಚಾಕ್ಷರಿಯು. | 40 | ಶರಣರ ಕರ್ಣದಾಭರಣ ಪಂಚಾಕ್ಷರಿಯು ಶರಣ ನುಡಿವ ಮಹಾವಸ್ತು ಪಂಚಾಕ್ಷರಿಯು ಶರಣ ಕೇಳುವ ಕೀರ್ತಿವಾರ್ತೆ ಪಂಚಾಕ್ಷರಿಯು ಶರಣಾಸರ ಬೇಸರಗಳ ಕಳೆವ ಪಂಚಾಕ್ಷರಿಯು. | 41 | ಶರಣರ ಚರಿತ್ರೆಯ ಬರೆವ ಲಿಖಿತ ಪಂಚಾಕ್ಷರಿಯು ಶರಣೀಶ ಲಾಂಛನಕಿಡದ ಪಂಚಾಕ್ಷರಿಯು ಶರಣ ತನು ಬಾಳಳಿದ ಬೋಧೆ ಪಂಚಾಕ್ಷರಿಯು ಶರಣನ ಮನ ಬೋಳಮಾಡಿರುವ ಪಂಚಾಕ್ಷರಿಯು. | 42 | ಶರಣಂಗೆ ಪರತತ್ವಬೋಧವೆ ಪಂಚಾಕ್ಷರಿಯು ಶರಣ ಪರವು ಶಾಂತಿ ಭಸ್ಮಧೂಳ ಪಂಚಾಕ್ಷರಿಯು ಶರಣ ಪರಬ್ರಹ್ಮಮಣಿ ಪಂಚಾಕ್ಷರಿಯು ಶರಣ ಪರಾತ್ಪರವು ಪಂಚಾಕ್ಷರಿಯು, | 43 | ಶರಣಂಗೆ ದೃಢವೆಂಬ ದಂಡ ಪಂಚಾಕ್ಷರಿಯು ಶರಣ ಕರ್ಮವ ಸುಟ್ಟಗ್ನಿ ಪಂಚಾಕ್ಷರಿಯು ಶರಣ ತೃಪ್ತಿಗೆ ನಿತ್ಯಾಮೃತ ಪಂಚಾಕ್ಷರಿಯು ಶರಣ ಹಿಡಿದ ವ್ರತವೈಕ್ಯ ಪಂಚಾಕ್ಷರಿಯು. | 44 | ಶರಣ ಪೂಜಿಪ ಪೂಜೆ ಐಕ್ಯ ಪಂಚಾಕ್ಷರಿಯು ಶರಣಂಗೆ ಐಕ್ಯಪದವೀವ ಪಂಚಾಕ್ಷರಿಯು ಶರಣ ಮಾಡುವ ಕ್ರಿಯಾದ್ವೈತ ಪಂಚಾಕ್ಷರಿಯು ಶರಣಂಗೆ ಇವು ನಾಸ್ತಿ ಪಂಚಾಕ್ಷರಿಯು. | 45 | ನೇಮ ನಿತ್ಯಂಗಳು ಲಿಂಗೈಕ್ಯ ಪಂಚಾಕ್ಷರಿಯು ಕಾಮ ಧರ್ಮ ಮೋಕ್ಷತ್ರಯಕ್ಕೆ ಪಂಚಾಕ್ಷರಿಯು ಕಾಮಿಸುವ ಬಾಹ್ಯಕ್ಕಿಲ್ಲದೈಕ್ಯ ಪಂಚಾಕ್ಷರಿಯು ನಾಮರೂಪಿಲ್ಲದ ನಿರ್ನಾಮ ಪಂಚಾಕ್ಷರಿಯು. | 46 | ಮಾನಸ್ವಾಚಕ ತ್ರಿಕರಣೈಕ್ಯ ಪಂಚಾಕ್ಷರಿಯು ಜ್ಞಾನ ಜ್ಞಾತೃಜ್ಞೇಯದೈಕ್ಯ ಪಂಚಾಕ್ಷರಿಯು ಸ್ವಾನುಭಾವವು ಲಿಂಗದೊಳೈಕ್ಯ ಪಂಚಾಕ್ಷರಿಯು ಮೋನಮುಗ್ಧಂ ತಾನಾದೈಕ್ಯ ಪಂಚಾಕ್ಷರಿಯು. | 47 | ನಡೆವ ಕಾಲ್ಗೆಟ್ಟ ಲಿಂಗೈಕ್ಯ ಪಂಚಾಕ್ಷರಿಯು ಷಡುರೂಪುಗೆಟ್ಟ ನೇತ್ರೈಕ್ಯ ಪಂಚಾಕ್ಷರಿಯು ಜಡ ಘ್ರಾಣೇಂದ್ರಿಲ್ಲದ ಲಿಂಗೈಕ್ಯ ಪಂಚಾಕ್ಷರಿಯು ಷಡುಯಿಂದ್ರಿಯಕೆ ಷಡುಲಿಂಗೈಕ್ಯ ಪಂಚಾಕ್ಷರಿಯು ಷಡುಸ್ಥಲವ ಮೀರಿರ್ದ ಲಿಂಗೈಕ್ಯ ಪಂಚಾಕ್ಷರಿಯು. | 48 | ಭಕ್ತಿ ಸ್ಥಲದಾಸೆಳಿದೈಕ್ಯ ಪಂಚಾಕ್ಷರಿಯು ವ್ಯಕ್ತ ಮಹೇಶ್ವರ ಭಜನೈಕ್ಯ ಪಂಚಾಕ್ಷರಿಯು ಮುಕ್ತಪ್ರಸಾದಿ ಸ್ಥಲದೈಕ್ಯ ಪಂಚಾಕ್ಷರಿಯು ಸತ್ಯ ಪ್ರಾಣಲಿಂಗವೆನ್ನದೈಕ್ಯ ಪಂಚಾಕ್ಷರಿಯು. | 49 | ಶರಣಸ್ಥಲದಾಸೆಳಿದೈಕ್ಯ ಪಂಚಾಕ್ಷರಿಯು ನಿರವಯಲ ಬೆರದ ಮಹಾಐಕ್ಯ ಪಂಚಾಕ್ಷರಿಯು ಉರಿವುಂಡ ಕರ್ಪುರದ ತೆರನು ಪಂಚಾಕ್ಷರಿಯು ಸರ[ವು] ಸರವು ಬೆರದಂತೆ ಮಾಡ್ವ ಪಂಚಾಕ್ಷರಿಯು. | 50 | ಪರಿಮಳ ವಾಯು ಸಂಗದಂತೆ ಪಂಚಾಕ್ಷರಿಯು ನಿರವಯಲಪ್ಪಿದಂತೆ ಪಂಚಾಕ್ಷರಿಯು ನೆರೆ ಮಾಡಿತೋರುವ ನಿತ್ಯ ಪಂಚಾಕ್ಷರಿಯು ಪರಮ ಬೋಧೆಯನೇನ ಹೇಳ್ವೆ ಪಂಚಾಕ್ಷರಿಯು. | 51 | ನಕಾರ ಮಕಾರ ಭಕ್ತ ಮಹೇಶ ಪಂಚಾಕ್ಷರಿಯು ಶಿಕಾರವೆ ಪ್ರಸಾದಿಸ್ಥಲದಂಗ ಪಂಚಾಕ್ಷರಿಯು ವಕಾರವೆ ಪ್ರಾಣಲಿಂಗಿ ತಾನೆ ಪಂಚಾಕ್ಷರಿಯು ಯಕಾರಂ ಓಂಕಾರಂ ಶರಣೈಕ್ಯ ಪಂಚಾಕ್ಷರಿಯು. | 52 | ಷಡಕ್ಷರ ಷಡುಸ್ಥಲದ ಬೀಜ ಪಂಚಾಕ್ಷರಿಯು ಷಡುಭಕ್ತಿಗಳ ಮುಖವು ಪಂಚಾಕ್ಷರಿಯು ಬಿಡದೆ ಸರ್ವತೋಮುಖವಾದ ಪಂಚಾಕ್ಷರಿಯು ಷಡುದರುಶನಕೆ ಮುಖ್ಯವಾದ ಪಂಚಾಕ್ಷರಿಯು. | 53 | ಪರಮ ಪಂಚಾಕ್ಷರಿಯು ಪ್ರಣಮ ಪಂಚಾಕ್ಷರಿಯು ಅರಿವು ಪಂಚಾಕ್ಷರಿಯು ಚರವು ಪಂಚಾಕ್ಷರಿಯು ಸಿರಿಯು ಪಂಚಾಕ್ಷರಿಯು ಕರುಣ ಪಂಚಾಕ್ಷರಿಯು ಹರುಷ ಪಂಚಾಕ್ಷರಿಯು ನಿಧಿಯು ಪಂಚಾಕ್ಷರಿಯು. | 54 | ನಿತ್ಯ ಪಂಚಾಕ್ಷರಿಯು ಮುಕ್ತ ಪಂಚಾಕ್ಷರಿಯು ಸತ್ಯ ಪಂಚಾಕ್ಷರಿಯು ವ್ಯಕ್ತ ಪಂಚಾಕ್ಷರಿಯು ಭಕ್ತ ಪಂಚಾಕ್ಷರಿಯು ಯುಕ್ತ ಪಂಚಾಕ್ಷರಿಯು ಮೌಕ್ತಿಕ ಮಾಣಿಕಹಾರ ಪಂಚಾಕ್ಷರಿಯು. | 55 | ಹರನೆ ಪಂಚಾಕ್ಷರಿಯು ಗುರುವೆ ಪಂಚಾಕ್ಷರಿಯು ಇರವೆ ಪಂಚಾಕ್ಷರಿಯು ಪರವೆ ಪಂಚಾಕ್ಷರಿಯು ಸರ್ವ ಪಂಚಾಕ್ಷರಿಯು ಹೊರೆವ ಪಂಚಾಕ್ಷರಿಯು ಸ್ಥಿರವೇ ಪಂಚಾಕ್ಷರಿಯು ಅರಿವು ಪಂಚಾಕ್ಷರಿಯು. | 56 | ಸ್ಥೂಲ ಪಂಚಾಕ್ಷರಿಯು ಸೂಕ್ಷ್ಮ ಪಂಚಾಕ್ಷರಿಯು ಲೀಲೆ ಪಂಚಾಕ್ಷರಿಯು ಕಾರಣ ಪಂಚಾಕ್ಷರಿಯು ಶೂಲಿ ಪಂಚಾಕ್ಷರಿಯು ಪೀಠ ಪಂಚಾಕ್ಷರಿಯು ಲೋಲ ಪಂಚಾಕ್ಷರಿಯು ಚರ್ಯ ಪಂಚಾಕ್ಷರಿಯು. | 57 | ಯಂತ್ರ ಪಂಚಾಕ್ಷರಿಯು ಮಂತ್ರ ಪಂಚಾಕ್ಷರಿಯು ಸಂತು ಪಂಚಾಕ್ಷರಿಯು ನಿಸ್ಸಂತು ಪಂಚಾಕ್ಷರಿಯು ಚಿಂತ ಪಂಚಾಕ್ಷರಿಯು ನಿಶ್ಚಿಂತ ಪಂಚಾಕ್ಷರಿಯು ಇಂತು ಪಂಚಾಕ್ಷರಿಯು ಜಪಿಸಿ ಪಂಚಾಕ್ಷರಿಯು. | 58 | ಕಂದ :ನಮಃ ಶಿವಾಯಯೆಂಬೀ ಅಮಲ ತೆರದ ನಾಮವ ನೋಡಿ ಜಪಿಸಲಿರುತಂ ಉಮೆಯರಸನನ್ನೊಲಿಸುವ ಕ್ರಮವಿದೆಂದು ಪೊಗಳ್ವೆ ಸಿದ್ಧಮಲ್ಲನ ಕೃಪೆಯಿಂ. | 1 | ಷಡುಸ್ಥಲ ಪಂಚಾಕ್ಷರಿಯನು ಬಿಡದೆ ಜಪಿಸಲು ಮುಕ್ತಿಯೆಂದು ಪೊಗಳ್ದ ಹೇಮಗಲ್ಲಂ ತನ್ನ ದೃಢಮೂರ್ತಿ ಶಂಭು ಗುರುರಾಯ ಪಡುವಿಡಿ ಸಿದ್ಧಮಲ್ಲಿನಾಥ ಕೃಪೆಯಿಂ. | 2 | ಷಡುಸ್ಥಲ ಪಂಚಾಕ್ಷರಿಯ ರಗಳೆ ಸಂಪೂರ್ಣಂ
--------------
ಹೇಮಗಲ್ಲ ಹಂಪ
ಎನ್ನ ಸರ್ವಾಂಗವೆಲ್ಲವೂ ಲಿಂಗವಾದ ಪರಿಕ್ರಮವೆಂತೆಂದಡೆ; ಶ್ರೀಗುರು ಬಸವಣ್ಣನುಪದೇಶಿಸಿದ ಇಷ್ಟಲಿಂಗವೆನ್ನ ಸರ್ವಾಂಗದಲ್ಲಿ ಭಿನ್ನ ನಾಮಂಗಳಿಂದ ಪ್ರಕಾಶಿಸುತ್ತಿಹುದು. ಅದೆಂತೆಂದಡೆ ; ಸ್ಥೂಲಾಂಗದಲ್ಲಿ ಇಷ್ಟಲಿಂಗವೆಂದು, ಸೂಕ್ಷ್ಮಾಂಗದಲ್ಲಿ ಪ್ರಾಣಲಿಂಗವೆಂದು ಕಾರಣಾಂಗದಲ್ಲಿ ಭಾವಲಿಂಗವೆಂದು ತ್ರಿಭೇದವಾಗಿಹುದು. ಇಂತು ಅಂಗವ ಕುರಿತು ಮೂರು ತೆರನಾಯಿತ್ತು. ಇನ್ನು ಇಂದ್ರಿಯಂಗಳ ಕುರಿತು ಆರು ತೆರನಾಗಿರ್ಪುದು. ಅದು ಹೇಗೆಂದಡೆ; ಹೃದಯದಲ್ಲಿ ಮಹಾಲಿಂಗವೆಂದು, ಶ್ರೋತ್ರದಲ್ಲಿ ಪ್ರಸಾದಲಿಂಗವೆಂದು, ತ್ವಕ್ಕಿನಲ್ಲಿ ಜಂಗಮಲಿಂಗವೆಂದು, ನೇತ್ರದಲ್ಲಿ ಶಿವಲಿಂಗವೆಂದು, ಜಿಹ್ವೆಯಲ್ಲಿ ಗುರುಲಿಂಗವೆಂದು, ಘ್ರಾಣದಲ್ಲಿ ಆಚಾರಲಿಂಗವೆಂದು, ಇಂತು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ತೋರಿತ್ತು. ಇಂತೀ ಮರ್ಯಾದೆಯಲ್ಲಿ ಜ್ಞಾನ-ಕರ್ಮೇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗಂದಡೆ; ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಭೇದವಿಲ್ಲ. ಅದೆಂತೆಂದಡೆ, ಶ್ರೋತ್ರಕ್ಕೂ ವಾಕ್ಕಿಗೂ ಭೇದವಿಲ್ಲ, ಶಬ್ದಕ್ಕೂ ವಚನಕ್ಕೂ ಭೇದವಿಲ್ಲ; ತ್ವಕ್ಕಿಗೂ ಪಾಣಿಗೂ ಭೇದವಿಲ್ಲ, ಸ್ಪರ್ಶಕ್ಕೂ ಆದಾನಕ್ಕೂ ಭೇದವಿಲ್ಲ; ನೇತ್ರಕ್ಕೂ ಪಾದಕ್ಕೂ ಭೇದವಿಲ್ಲ, ರೂಪಿಗೂ ಗಮನಕ್ಕೂ ಭೇದವಿಲ್ಲ, ಜಿಹ್ವೆಗೂ ಗುಹ್ಯಕ್ಕೂ ಭೇದವಿಲ್ಲ, ರಸಕ್ಕೂ ಆನಂದಕ್ಕೂ ಭೇದವಿಲ್ಲ; ಘ್ರಾಣಕ್ಕೂ ಗುದಕ್ಕೂ ಭೇದವಿಲ್ಲ, ಗಂಧಕ್ಕೂ ವಿಸರ್ಜನಕ್ಕೂ ಭೇದವಿಲ್ಲ, ಇನ್ನು ಶ್ರೋತ್ರವೆಂಬ ಜ್ಞಾನೇಂದ್ರಿಯಕ್ಕೂ ವಾಕ್ಕೆಂಬ ಕರ್ಮೇಂದ್ರಿಯಕ್ಕೂ ಶಬ್ದ ವಿಷಯ, ಮೂಲಭೂತ ಆಕಾಶ, ಈಶಾನಮೂರ್ತಿ ಅಧಿದೇವತೆ. ತ್ವಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾಣಿಯೆಂಬ ಕರ್ಮೇಂದ್ರಿಯಕ್ಕೂ ಸ್ಪರ್ಶನ ವಿಷಯ, ಮೂಲಭೂತ ವಾಯು, ತತ್ಪುರುಷಮೂರ್ತಿ ಅಧಿದೇವತೆ. ದೃಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾದವೆಂಬ ಕರ್ಮೇಂದ್ರಿಯಕ್ಕೂ ರೂಪು ವಿಷಯ, ಮೂಲಭೂತ ಅಗ್ನಿ, ಅಘೋರಮೂರ್ತಿ ಅಧಿದೇವತೆ. ಜಿಹ್ವೆಯೆಂಬ ಜ್ಞಾನೇಂದ್ರಿಯಕ್ಕೂ ಗುಹ್ಯವೆಂಬ ಕರ್ಮೇಂದ್ರಿಯಕ್ಕೂ ರಸ ವಿಷಯ, ಮೂಲಭೂತ ಅಪ್ಪು, ವಾಮದೇವಮೂರ್ತಿ ಅಧಿದೇವತೆ, ಘ್ರಾಣವೆಂಬ ಜ್ಞಾನೇಂದ್ರಿಯಕ್ಕೂ ಪಾಯುವೆಂಬ ಕರ್ಮೇಂದ್ರಿಯಕ್ಕೂ ಗಂಧ ವಿಷಯ, ಮೂಲಭೂತ ಪೃಥ್ವಿ, ಸದ್ಯೋಜಾತಮೂರ್ತಿ ಅಧಿದೇವತೆ. ಇಂತೀ ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಹೃದಯವೆ ಆಶ್ರಯಸ್ಥಾನವಾದ ಕಾರಣ, ಹೃದಯ ಆಕಾಶವೆನಿಸಿತ್ತು. ಅಲ್ಲಿ ಸ್ಥೂಲ ಸೂಕ್ಷ್ಮ ಕಾರಣ ರೂಪಿಂದೆಲ್ಲಾ ಇಂದ್ರಿಯಂಗಳಿರುತ್ತಿಹವು. ಗುರೂಪದೇಶದಿಂದ ಎಲ್ಲಾ ಇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗೆಂದಡೆ; ಘ್ರಾಣದ ಘ್ರಾಣವೆ ಆಚಾರಲಿಂಗ; ಜಿಹ್ವೆಯ ಜಿಹ್ವೆಯೆ ಗುರುಲಿಂಗ; ನೇತ್ರದ ನೇತ್ರವೆ ಶಿವಲಿಂಗ; ತ್ವಕ್ಕಿನ ತ್ವಕ್ಕೆ ಜಂಗಮಲಿಂಗ; ಶ್ರೋತ್ರದ ಶ್ರೋತ್ರವೆ ಪ್ರಸಾದಲಿಂಗ; ಹೃದಯದ ಹೃದಯವೆ ಮಹಾಲಿಂಗ. ಈ ಆರು ಲಿಂಗಕ್ಕೆ ಅಂಗಸ್ಥಲ ಆರು; ಅವಾವುವೆಂದಡೆ; ಐಕ್ಯ ಶರಣ ಪ್ರಾಣಲಿಂಗಿ ಪ್ರಸಾದಿ ಮಹೇಶ್ವರ ಭಕ್ತ ಎಂದೀ ಆರು ಅಂಗಸ್ಥಲಗಳು. ಇವಕ್ಕೆ ವಿವರ; ಆತ್ಮಾಂಗದಲ್ಲಿ ಸದ್ಭಾವ ಹಸ್ತದಿಂದ ಎಲ್ಲಾ ಇಂದ್ರಿಯಂಗಳ ಪರಿಣಾಮವನು ಸಮರಸಭಕ್ತಿಯಿಂದ ಮಹಾಲಿಂಗಕ್ಕರ್ಪಿಸುವಾತನೆ ಐಕ್ಯ. ವ್ಯೋಮಾಂಗದಲ್ಲಿ ಸುಜ್ಞಾನಹಸ್ತದಿಂದ ಸುಶಬ್ದದ್ರವ್ಯವನು ಆನಂದಭಕ್ತಿಯಿಂದ ಪ್ರಸಾದಲಿಂಗಕ್ಕರ್ಪಿಸುವಾತನೆ ಶರಣ. ಅನಿಲಾಂಗದಲ್ಲಿ ಮನೋಹಸ್ತದಿಂದ ಸುಸ್ಪರ್ಶನದ್ರವ್ಯವನು ಅನುಭಾವಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಾಣಲಿಂಗಿ. ಅನಲಾಂಗದಲ್ಲಿ ನಿರಹಂಕಾರಹಸ್ತದಿಂದ ಸುರೂಪುದ್ರವ್ಯವನು ಅವಧಾನಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಸಾದಿ, ಜಲಾಂಗದಲ್ಲಿ ಸುಬುದ್ಧಿ ಹಸ್ತದಿಂದ ಸುರಸದ್ರವ್ಯವನು ನೈಷಿ*ಕಾಭಕ್ತಿಯಿಂದ ಗುರುಲಿಂಗಕ್ಕರ್ಪಿಸುವಾತನೆ ಮಾಹೇಶ್ವರ. ಭೂಮ್ಯಂಗದಲ್ಲಿ ಸುಚಿತ್ತಹಸ್ತದಿಂದ ಸುಗಂಧದ್ರವ್ಯವನು ಸದ್ಭಕ್ತಿಯಿಂದ ಆಚಾರಲಿಂಗಕ್ಕರ್ಪಿಸುವಾತನೆ ಭಕ್ತ. ಇನ್ನು ಷಡಾಧಾರಂಗಳಲ್ಲಿ ಷಡಕ್ಷರರೂಪದಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ, ನಕಾರವೆ ಆಚಾರಲಿಂಗ, ಮಕಾರವೆ ಗುರುಲಿಂಗ, ಶಿಕಾರವೆ ಶಿವಲಿಂಗ, ವಾಕಾರವೆ ಜಂಗಮಲಿಂಗ, ಯಾಕಾರವೆ ಪ್ರಸಾದಲಿಂಗ, ಓಂಕಾರವೆ ಮಹಾಲಿಂಗ, ಎಂದು ಆರು ತೆರನಾಗಿಹವು. ಅದೆಂತೆಂದಡೆ; ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಾಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಇಂತೀ ಮರ್ಯಾದೆಯಲ್ಲಿ ಷಡ್ಧಾತುವಿನಲ್ಲಿ ಷಡಕ್ಷರರೂಪಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ; ತ್ವಙ್ಮಯವಾಗಿಹುದು ಓಂಕಾರ, ರುಧಿರಮಯವಾಗಿಹುದು ನಕಾರ, ಮಾಂಸಮಯವಾಗಿಹುದು ಮಕಾರ, ಮೇಧೋಮಯವಾಗಿಹುದು ಶಿಕಾರ, ಅಸ್ಥಿಮಯವಾಗಿಹುದು ವಾಕಾರ, ಮಜ್ಜಾಮಯವಾಗಿಹುದು ಯಕಾರ. ಇಂತೀ ಷಡ್ಧಾತುವೆ ಷಡಕ್ಷರಮಯವಾಗಿ, ಅವೆ ಲಿಂಗಂಗಳಾಗಿ, ಒ?ಹೊರಗೆ ತೆರಹಿಲ್ಲದೆ ಸರ್ವಾಂಗವೆಲ್ಲವೂ ಲಿಂಗಮಯವಾದ ಇರವು. ಅದು ತಾನೆ ಶಿವನಿರವು, ಅದು ತಾನೆ ಶಿವನ ಭವನ. ಅದು ತಾನೆ ಶಿವನ ವಿಶ್ರಾಮಸ್ಥಾನ. ಇಂತೀ ಷಟ್ಸ್ಥಲಬ್ರಹ್ಮವನರಿದಾತನೆ ಶರಣ, ಆತನೆ ಲಿಂಗೈಕ್ಯ. ಇಂತೀ ಷಟ್ಸ್ಥಲಬ್ರಹ್ಮವೆಂಬುದು ಅಪ್ರಮಾಣ ಅಗೋಚರ ಅನಿರ್ವಾಚ್ಯವಾದ ಕಾರಣ, ವಚಿಸುತ್ತ ವಚಿಸುತ್ತ ವಚಿಸುತ್ತ ವಚನಗೆಟ್ಟಿತ್ತು. ಉಪ್ಪು ನೀರೊಳು ಕೂಡಿದಂತೆ, ವಾರಿಕಲ್ಲು ಅಂಬುಧಿಯೊಳು ಬಿದ್ದಂತೆ, ಶಿಖಿಕರ್ಪೂರ ಯೋಗದಂತೆ ಆದೆನಯ್ಯಾ ಕೂಡಲಚೆನ್ನಸಂಗಯ್ಯನಲ್ಲಿ, ಬಸವಣ್ಣನ ಭಾವಹಸ್ತ ಮುಟ್ಟಿದ ಕಾರಣ.
--------------
ಚನ್ನಬಸವಣ್ಣ
ಮರಲ್ದುಮೆರಡನೆಯ ಚಂದ್ರಮಂಡಲದಳೋಪದಳ ಷೋಡಶಂಗಳಲ್ಲಿ ಪೂರ್ವಾದಿಶಾನಾಂತ ದಳನ್ಯಸ್ತ ಷೋಡಶ ಸ್ವರಂಗಳೊಳ್ಮೊದಲಕಾರ ನಾಮಂಗಳು ಪೇಳ್ವೆನೆಂತೆನೆ- ಆದಿಬೀಜವೆಂದು ವರ್ನಾದಿಯೆಂದು ವರ್ಗಾದಿಯೆಂದಕಲಾದಿಯೆಂದು ಸ್ವರಾದಿಯೆಂದು ಮಾತ್ರಾದಿಯೆಂದು ಪ್ರಕೃತಿಯೆಂದು ಜೀವಾದಿಯೆಂದು ಕಲೆಯೆಂದು ಮಾತ್ರೆಯೆಂದು ಆದಿಯೆಂದು ಸ್ವರವೆಂದೀ ಯಕಾರ ಪರ್ಯಾಯನಾಮಂಗಳು ಪೇಳ್ದಿನ್ನುಳಿದ ಸ್ವ ಪರ್ಯಾಯ ನಾಮಂಗಳ ಬಾಹುಲ್ಯ ಭಾರದಿಂ ಪೇಳ್ದುದಿಲ್ಲಮಂತೆಯೆ ಸೂರ್ಯಮಂಡಲ ದಳ ಲಿಪಿ ನಾಮ ಪರ್ಯಾಯಂಗಳುಮಂ ನಿರವಿಸಲಿಲ್ಲಮಿವೆಲ್ಲಮಂ ಮಂತ್ರಾಗಮಂಗಳಲ್ಲಿ ನೋಡಿಕೊಂಬುದಿಲ್ಲಿಯದು ಪ್ರಾಪಂಚಿಕವೆಂದುಳಿದತಿ ಸೂಕ್ಷ ್ಮವನೆ ಬೋಧಿಸಿದೆಯಯ್ಯಾ. ಪರಾತ್ಪರ ಪರಮ ಶಿವಲಿಂಗೇಶ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಸಮಾಧಿ ಸಮಾಧಿ ಎಂಬರಯ್ಯಾ, ಸಮಾಧಿಯ ಬಗೆಯ ಪೇಳ್ವೆ. ಅದೆಂತೆಂದಡೆ: ಪಂಚಭೂತಮಿಶ್ರವಾದ ದೇಹವೆಂಬುವುದೆ ಸಮಾಧಿ. ಅಂತಪ್ಪ ದೇಹದ ಪೃಥ್ವಿತತ್ವದಲ್ಲಿ ನಕಾರಪ್ರಣವ ಸ್ವಾಯತ. ಅಪ್ಪುತತ್ವದಲ್ಲಿ ಮಕಾರಪ್ರಣವ ಸ್ವಾಯತ. ತೇಜತತ್ವದಲ್ಲಿ ಶಿಕಾರಪ್ರಣವ ಸ್ವಾಯತ. ವಾಯುತತ್ವದಲ್ಲಿ ವಕಾರಪ್ರಣವ ಸ್ವಾಯತ. ಆಕಾಶತತ್ವದಲ್ಲಿ ಯಕಾರಪ್ರಣವ ಸ್ವಾಯತ. ಆತ್ಮದಲ್ಲಿ ಓಂಕಾರಪ್ರಣವ ಸ್ವಾಯತ. ಮತ್ತಂ, ಬಲಪಾದದಲ್ಲಿ ನಕಾರ, ಎಡಪಾದದಲ್ಲಿ ಮಕಾರ, ಮಧ್ಯನಾಭಿಸ್ಥಾನದಲ್ಲಿ ಶಿಕಾರ, ಬಲಹಸ್ತದಲ್ಲಿ ವಕಾರ, ಎಡಹಸ್ತದಲ್ಲಿ ಯಕಾರ, ಮಸ್ತಕದಲ್ಲಿ ಓಂಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೆ ಸಮಾಧಿ. ಮತ್ತಂ, ಸ್ಥೂಲತನುವಿನಲ್ಲಿ ಬಕಾರಪ್ರಣವ ಸ್ವಾಯತ. ಸೂಕ್ಷ್ಮತನುವಿನಲ್ಲಿ ನಕಾರಪ್ರಣವ ಸ್ವಾಯತ. ಕಾರಣತನುವಿನಲ್ಲಿ ವಕಾರಪ್ರಣವ ಸ್ವಾಯತ. ಮತ್ತಂ, ವಿಶ್ವನಲ್ಲಿ ಅಕಾರಪ್ರಣವಸಂಬಂಧ. ತೈಜಸನಲ್ಲಿ ಉಕಾರಪ್ರಣವಸಂಬಂಧ. ಪ್ರಾಜ್ಞದಲ್ಲಿ ಮಕಾರಪ್ರಣವಸಂಬಂಧ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಬ್ರಹ್ಮರಂಧ್ರದಲ್ಲಿ ಬಕಾರ, ಅಕಾರ, ವಕಾರ, ಶಿಖೆಯಲ್ಲಿ ಕ್ಷಕಾರ, ಉಕಾರ, ಸಕಾರ. ಪಶ್ಚಿಮದಲ್ಲಿ ಹಕಾರ, ಮಕಾರ, ವಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಬಲಭಾಗದಲ್ಲಿ ಓಂಕಾರ, ಎಡಭಾಗದಲ್ಲಿ ಮಕಾರ, ಮುಂಭಾಗದಲ್ಲಿ ಅಕಾರ, ಹಿಂಭಾಗದಲ್ಲಿ ಮಕಾರ, ಊಧ್ರ್ವಭಾಗದಲ್ಲಿ ಹಕಾರ. ಮತ್ತಂ, ಬಲಹಸ್ತದ ಮಧ್ಯದಲ್ಲಿ ಓಂಕಾರ, ಹೆಬ್ಬೆರಳಿನಲ್ಲಿ ಯಕಾರ, ಉಳಿದ ನಾಲ್ಕು ಬೆರಳಿನಲ್ಲಿ ನಾಲ್ಕು ಪ್ರಣವಗಳು. ಆ ಹಸ್ತದ ಮೇಲುಭಾಗದಲ್ಲಿ ಅಕಾರ, ಮುಂಗೈಯಲಿ ಬಕಾರ, ಮೊಳಕೈಯಲ್ಲಿ ಉಕಾರ, ರಟ್ಟೆಯಲ್ಲಿ ಸಕಾರ, ಭುಜದಲ್ಲಿ ಮಕಾರ, ಹೆಗಲಲ್ಲಿ ವಕಾರ, ಇಂತೀ ಪರಿಯಲ್ಲಿ ಉಭಯ ಹಸ್ತ ತೋಳಿನಲ್ಲಿ ಹಿಂದೆ ಹೇಳಿದ ಪಂಚಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಉಭಯ ತಳಪಾದದಲ್ಲಿ ಓಂಕಾರ, ಉಭಯ ಪಾದಾಂಗುಷ*ದಲ್ಲಿ ಯಕಾರ, ಉಭಯ ನಾಲ್ಕು ಬೆರಳಿನಲ್ಲಿ ನಾಲ್ಕು ಪ್ರಣವಂಗಳು. ಉಭಯ ಪಾದದ ಮೇಲುಭಾಗದಲ್ಲಿ ಅಕಾರ, ಉಭಯ ಪಾದದ ಬಾಹ್ಯ ಹರಡಿನಲ್ಲಿ ಉಕಾರ, ಉಭಯ ಪಾದದಂತರ ಹರಡಿನಲ್ಲಿ ಬಕಾರ. ಉಭಯ ಪಾದದ ಹಿಂಬಡದಲ್ಲಿ ಮಕಾರ, ಉಭಯ ಕಣಕಾಲಲ್ಲಿ ಸಕಾರ, ಮೊಳಕಾಲಲ್ಲಿ ಪಕಾರ, ಉಭಯ ಕಿರಿದೊಡೆಯಲ್ಲಿ ಅಕಾರ. ಹಿರಿದೊಡೆಯಲ್ಲಿ ಉಕಾರ, ಉಭಯಾಂಗದಲ್ಲಿ ಮಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೆ ಸಮಾಧಿ. ಮತ್ತಂ, ಉಭಯ ಬರಕಿಯಲ್ಲಿ ಓಂ ನಮಃಶಿವಾಯ ಎಂಬ ಮೂಲ ಷಡಕ್ಷರ. ಉಭಯ ಮೊಲೆಯಲ್ಲಿ ಓಂಕಾರ, ಉಭಯ ಬಗಲಲ್ಲಿ ಬಕಾರ, ಕಕ್ಷೆಯಲ್ಲಿ ಅಕಾರ, ಹೃದಯದಲ್ಲಿ ಉಕಾರ, ಕಂಠದಲ್ಲಿ ಮಕಾರ, ಹೆಡಕಿನಲ್ಲಿ ಸಕಾರ, ಹೆಡಕಿನ ಎಡಬಲದಲ್ಲಿ ವಕಾರ, ಉಭಯ ಕರ್ಣದ ಮಧ್ಯದಲ್ಲಿ ಓಂಕಾರ, ಹಾಲಿಯಲ್ಲಿ ಯಕಾರ, ಕಿರಿಹಾಲಿಯಲ್ಲಿ ವಕಾರ, ಕರ್ಣದ ಊಧ್ರ್ವಭಾಗದಲ್ಲಿ ಶಿಕಾರ, ಬಲ ಎಡಭಾಗದಲ್ಲಿ ಮಕಾರ, ಕರ್ಣದ ಹಿಂಭಾಗದಲ್ಲಿ ನಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣವಸಂಬಂಧವಾದುದೇ ಸಮಾಧಿ. ಮತ್ತಂ, ಬಲಭಾಗದ ನಯನದಲ್ಲಿ ಅಕಾರ, ಬಕಾರ. ಎಡಭಾಗದ ನಯನದಲ್ಲಿ ಉಕಾರ, ಸಕಾರ, ಉಭಯ ನಯನದ ಮಧ್ಯದಲ್ಲಿ ಮಕಾರ, ವಕಾರ, ಉಭಯ ಗಲ್ಲದಲ್ಲಿ ಓಂಕಾರ. ನಾಶಿಕದ ತುದಿಯಲ್ಲಿ ಮಕಾರ. ಬಲಭಾಗದ ಹೊಳ್ಳಿಯಲ್ಲಿ ಅಕಾರ, ಎಡಭಾಗದ ಹೊಳ್ಳಿಯಲ್ಲಿ ಉಕಾರ. ಮೇಲುಭಾಗದ ತುಟಿಯಲ್ಲಿ ಬಕಾರ. ಕೆಳಭಾಗದ ತುಟಿಯಲ್ಲಿ ಸಕಾರ. ಉಭಯಮಧ್ಯದಲ್ಲಿ ವಕಾರ. ನಾಲಿಗೆಯಲ್ಲಿ ಓಂ ನಮಃಶಿವಾಯವೆಂಬ ಮೂಲ ಷಡಕ್ಷರ. ದಂತಪಂಕ್ತಿಗಳೇ ಹಂ ಕ್ಷಂ ಎಂಬ ಶೂನ್ಯಪ್ರಣಮಂಗಳು. ಚರ್ಮವೆ ವಕಾರ, ಅಸ್ತಿಯೇ ಮಕಾರ, ಮಾಂಸವೇ ಶಿಕಾರ, ಮಜ್ಜವೇ ವಕಾರ, ರಕ್ತವೇ ಯಕಾರ, ಪ್ರಾಣವೇ ಓಂಕಾರ. ರೇಚಕ ಪೂರಕ ಕುಂಭಕವೆಂಬ ಸ್ವರದಲ್ಲಿ ಅಕಾರ, ಉಕಾರ, ಮಕಾರ. ಮತ್ತಂ, ಅಪಾದಮಸ್ತಕದ ಪರಿಯಂತರವು ರೋಮನಾಳಂಗಳಲ್ಲಿ ನಿರಂಜನ ಮೂಲಪ್ರಣಮವೆಂಬ ಓಂಕಾರ. ಇಂತೀ ಸ್ಥಾನಂಗಳಲ್ಲಿ ಪ್ರಣಮಸಂಬಂಧವಾದುದೇ ಸಮಾಧಿ. ಇಂತೀ ಕ್ರಮದಲ್ಲಿ ಕೀಯವಿಟ್ಟು ಬಾಹ್ಯದಲ್ಲಿ ದೇಹಕ್ಕೆ ಪ್ರಣಮಸಂಬಂಧಿಸಿದಡೆಯು ಆ ದೇಹವು ಭೂಮಿಯ ಮರೆಯಲ್ಲಿ ಒಂದು ಕ್ಷಣಕ್ಕೆ ನಿರ್ವಯಲಾಗುವುದು. ಇಂತೀ ಕ್ರಮದಲ್ಲಿ ಅಂತರಂಗದಲ್ಲಿ ಪ್ರಾಣಕ್ಕೆ ಪ್ರಣಮಸಂಬಂಧವ ಸುಜ್ಞಾನ ಕ್ರಿಯೆಗಳಿಂದ ಸಂಬಂಧಿಸಿದಡೆಯು ದೇಹದಲ್ಲಿರಲಿಕ್ಕೆಯು ಜೀವನ್ಮುಕ್ತನಾಗುವನು. ಅದೆಂತೆಂದಡೆ: ಚಿದಂಶಿಕನಾದ ಜ್ಞಾನಕಲಾತ್ಮಂಗೆ ಸುಜ್ಞಾನೋದಯವಾಗಿ ಸಕಲಪ್ರಪಂಚವ ನಿವೃತ್ತಿ ಮಾಡಿ, ಶ್ರೀಗುರುಕಾರುಣ್ಯವ ಹಡೆದು ಅಂಗದ ಮೇಲೆ ಇಷ್ಟಲಿಂಗವು ಧಾರಣವಾದಾಕ್ಷಣವೇ ಹಿಂದೆ ಹೇಳಿದ ನಿರ್ಣಯದಲ್ಲಿ ಸರ್ವಾಂಗದಲ್ಲಿ ಮೂಲಪ್ರಣಮಾದಿ ಕ್ಷಕಾರ ಪ್ರಣಮಾಂತ್ಯವಾದ ಸಕಲನಿಃಷ್ಕಲಪ್ರಣಮಂಗಳು ಬೆಲ್ಲದ ಕುಳ್ಳಿಗೆ ಇರುವೆ ಮುತ್ತಿದಂತೆ ತನ್ನಿಂದ ತಾನೆ ಸಂಬಂಧವಾಗಿ ಜೀವನ್ಮುಕ್ತನಾಗಿ ಲೀಲೆಯಲ್ಲಿರುವ ಪರಿಯಂತರದಲ್ಲಿ ಉದಕದೊಳಗೆ ಇರ್ಪ ತಾವರೆಯಂತೆ ನಿರ್ಲೇಪನಾಗಿ ಪ್ರಪಂಚವನಾಚರಿಸುವನು. ಈ ಭೇದವನು ಶಿವಜ್ಞಾನಿ ಶರಣರು ಬಲ್ಲರಲ್ಲದೆ ಈ ಲೋಕದ ಗಾದಿಮನುಜರೆತ್ತ ಬಲ್ಲರಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನಾಮರೂಪು ಕ್ರೀಗಳೇನುಯೇನೂ ಇಲ್ಲದ ನಿತ್ಯನಿರಂಜನ ಪರವಸ್ತು ತಾನೆ ನಿರಂಜನಪ್ರಣವ ನೋಡಾ. [ಆ] ನಿರಂಜನ ಪರವಸ್ತುವಿನಲ್ಲಿ ಪರಮ ಚಿತ್ಕಲೆ ಉದಯವಾಗಿ, ಆ ಚಿದ್ರೂಪ ಕಲೆಯ ಶುದ್ಧಪ್ರಣವವೆನಿಸಿತ್ತು ನೋಡಾ. ಆ ಶುದ್ಧ ಪ್ರಣವದಲ್ಲಿ ಚಿತ್ತು; ಆ ಚಿತ್ತೇ ಸಚ್ಚಿದಾನಂದಸ್ವರೂಪವನುಳ್ಳುದಾಗಿ, ಚಿತ್‍ಪ್ರಣವವೆನಿಸಿತ್ತು ನೋಡಾ. ಆ ಚಿತ್ ಪ್ರಣವಸ್ವರೂಪವಪ್ಪ ಪರತತ್ವದಲ್ಲಿ ಪರಶಕ್ತಿ ಉದಯವಾಯಿತ್ತು. ಆ ಪರಶಕ್ತಿಯಿಂದ ನಾದ ಬಿಂದು ಕಳೆಗಳಾದವಯ್ಯ. ಆಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ; ಇಂತೀ ಮೂರಕ್ಕೆ ಪರಶಕ್ತಿಯೇ ತಾಯಿ. ಇಂತೀ ನಾಲ್ಕು ಒಂದಾದಲ್ಲಿ ಪ್ರಣವವಾಯಿತ್ತಯ್ಯ. ಆ ಪ್ರಣವವೇ ಪಂಚಲಕ್ಷಣವಾಯಿತ್ತು; ಅದೆಂತೆಂದಡೆ: ತಾರಕಾಕೃತಿ, ದಂಡಕಾಕೃತಿ, ಕುಂಡಲಾಕೃತಿ, ಅರ್ಧಚಂದ್ರಾಕೃತಿ ಬಿಂದುಕೃತಿ. ಇಂತೀ ಪಂಚಾಕೃತಿಯಾಯಿತ್ತಯ್ಯ. ತಾರಕಾಕೃತಿಯಲ್ಲಿ ನಕಾರ ಜನನ; ದಂಡಕಾಕೃತಿಯಲ್ಲಿ ನಕಾರ ಜನನ. ಕುಂಡಲಾಕೃತಿಯಲ್ಲಿ ಶಿಕಾರ ಜನನ. ಅರ್ಧಚಂದ್ರಾಕೃತಿಯಲ್ಲಿ ವಕಾರ ಜನ. ಬಿಂದುಕೃತಿಯಲ್ಲಿ ಯಕಾರ ಜನನ. ಇಂತೀ ಪ್ರಣವದಿಂದ ಪಂಚಾಕ್ಷರ[ಂ]ಗಳುತ್ಪತ್ತಿಯಾದವಯ್ಯ. ಪ್ರಣವವೇ ಕೂಡಿ, ಷಡಕ್ಷರವೆಂದು ಹೇಳಲ್ಪಟ್ಟಿತಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಎನ್ನಾಧಾರಚಕ್ರದಲ್ಲಿ ನಕಾರ ಪಂಚಾಕ್ಷರಸ್ವರೂಪವಾದ ಆಚಾರಲಿಂಗವ ಕಂಡು ಉಚ್ಚರಿಸುತಿರ್ದೆನು. ಎನ್ನ ಸ್ವಾಧಿಷಾ*ನಚಕ್ರದಲ್ಲಿ ಮಕಾರ ಪಂಚಾಕ್ಷರಸ್ವರೂಪವಾದ ಗುರುಲಿಂಗವ ಕಂಡು ಉಚ್ಚರಿಸುತಿರ್ದೆನು. ಎನ್ನ ಮಣಿಪೂರಕಚಕ್ರದಲ್ಲಿ ಶಿಕಾರ ಪಂಚಾಕ್ಷರಸ್ವರೂಪವಾದ ಶಿವಲಿಂಗವ ಕಂಡು ಉಚ್ಚರಿಸುತಿರ್ದೆನು. ಎನ್ನ ಅನಾಹತಚಕ್ರದಲ್ಲಿ ವಾಕಾರ ಪಂಚಾಕ್ಷರಸ್ವರೂಪವಾದ ಜಂಗಮಲಿಂಗವ ಕಂಡು ಉಚ್ಚರಿಸುತಿರ್ದೆನು. ಎನ್ನ ವಿಶುದ್ಧಿಚಕ್ರದಲ್ಲಿ ಯಕಾರ ಪಂಚಾಕ್ಷರಸ್ವರೂಪವಾದ ಪ್ರಸಾದಲಿಂಗವ ಕಂಡು ಉಚ್ಚರಿಸುತಿರ್ದೆನು. ಎನ್ನ ಆಜ್ಞಾಚಕ್ರದಲ್ಲಿ ಓಂಕಾರ ಪಂಚಾಕ್ಷರಸ್ವರೂಪವಾದ ಮಹಾಲಿಂಗವ ಕಂಡು ಉಚ್ಚರಿಸುತಿರ್ದೆನು. ಎನ್ನ ಸರ್ವಾಂಗದಲ್ಲಿ ಷಡಕ್ಷರಸ್ವರೂಪವಾದ ಗುರುನಿರಂಜನ ಚನ್ನಬಸವಲಿಂಗವ ಕಂಡು ಉಚ್ಚರಿಸುತಿರ್ದೆನು ನಿತ್ಯವಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಓಂ ಎಂಬ ಓಂಕಾರ ಪೃಥ್ವೀತತ್ವದ ನಾಮಬೀಜ. ನ ಎಂಬ ನಕಾರ ಅಪ್ಪುತತ್ವದ ನಾಮಬೀಜ. ಮ ಎಂಬ ಮಕಾರ ತೇಜತತ್ವದ ನಾಮಬೀಜ. ಶಿ ಎಂಬ ಶಿಕಾರ ವಾಯುತತ್ವದ ನಾಮಬೀಜ. ವಾ ಎಂಬ ವಾಕಾರ ಆಕಾಶತತ್ವದ ನಾಮಬೀಜ. ಯ ಎಂಬ ಯಕಾರ ಆತ್ಮತತ್ವದ ನಾಮಬೀಜ. ಇಂತೀ ಷಡಕ್ಷರದ ನಾಮಭೇದ. ರೋಹ ಅವರೋಹವಾಗಿ, ಅವರೋಹ ರೋಹವಾಗಿ ಪೂರ್ವ ಉತ್ತರಕ್ಕೆ ಪುಂಜಕ್ಕೆ ವಿರಳವಾದಂತೆ ಉಭಯಚಕ್ಷು ಅಭಿಮುಖವಾಗಿ ಏಕಾಕ್ಷರದಲ್ಲಿ ಗುಣಿತನಾಮದಿಂದ ಹಲವಕ್ಷರ ಹೊಲಬುದೋರುವಂತೆ ಓಂಕಾರ ಬೀಜನಾಮದಲ್ಲಿ ದಶಾಕ್ಷರವಡಗಿ ದಶಾಕ್ಷರದ ಅಕಾರಾಂತದಲ್ಲಿ ಷೋಡಶಾಕ್ಷರ ಭೇದ. ಆ ಭೇದದಿಂದ ಐವತ್ತೆರಡು ಅಕ್ಷರನಾಮ ಬೀಜವಾಗಿ ಷಡಕ್ಷರ ಘಟವಾಗಿ ಪಂಚಾಕ್ಷರಿ ಪ್ರಾಣವಾಗಿ ಆ ಗುಣದಲ್ಲಿ ತೊಳಗಿ ಬೆಳಗುವ ಕಳೆ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವಾಗಿ.
--------------
ಪ್ರಸಾದಿ ಭೋಗಣ್ಣ
ಇನ್ನಷ್ಟು ... -->