ಅಥವಾ

ಒಟ್ಟು 132 ಕಡೆಗಳಲ್ಲಿ , 37 ವಚನಕಾರರು , 113 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಸಚ್ಚಿದಾನಂದ ಬ್ರಹ್ಮೋಪದೇಶ ಭಕ್ತಮಹೇಶ್ವರರು ಪರಮಪಾತಕಸೂತಕಂಗಳ ಬಾಹ್ಯಾಂತರಂಗದಲ್ಲಿ ಹೊದ್ದದೆ, ಸತ್ಯಶರಣರು ಮಾಡುಂಡುದೊಂದು ಕಾಯಕ, ಬೇಡುಂಡುದೊಂದು ಕಾಯಕದಿಂದ ಗಳಿಸಿದಂಥ ಪದಾರ್ಥಗಳ, ಗುರುಚರಪರಸ್ಥಿರಕ್ಕೆ ಷಟ್‍ಸ್ಥಲಸಂಬಂಧಗಳಿಂದ, ಷಡ್ವಿಧಮಂತ್ರಗಳ ಸೊಮ್ಮಿನಿಂ ಸಂತೃಪ್ತರಾಗಿರ್ಪುದು. ಆ ನಿಲುಕಡೆಯೆಂತೆಂದಡೆ : ಶ್ರುತಿಗುರುಸ್ವಾನುಭವ ಸಾಕ್ಷಿಯಾಗಿ, ಶ್ರೀಗುರುಲಿಂಗಜಂಗಮವೆ ಪರಾತ್ಪರವೆಂದು ಕಂಡು, ಷಡುಸ್ಥಲಮಾರ್ಗವಿಡಿದು, ತನ್ನ ನಿಜವ ತಾನರಿಯದೆ, ಭವಿಶೈವ ಬ್ಥಿನ್ನ ಕರ್ಮಿಗಳಂತೆ ಭಾವಭ್ರಮೆಗೆಟ್ಟು, ಹೊಲಬುದಪ್ಪಿ, ಭೋಗಾಪೇಕ್ಷಿತರಾಗಿ, ಹಲವು ಶಾಸ್ತ್ರೋಪದೇಶವಿಡಿದು, ಕಾಶಿ ರಾಮೇಶ್ವರ ಕಂಚಿ ಕಾಳಹಸ್ತಿ ಪಂಪಾಕ್ಷೇತ್ರ ಗೋಕರ್ಣ ಶ್ರೀಶೈಲಾದಿಯಾದ ತೀರ್ಥಯಾತ್ರೆ, ವೀರಣ್ಣ ಬಸವಣ್ಣ ಮಲ್ಲಣ್ಣ ಹಾವಿಗೆ ದಂಡಾಗ್ರ ಗಿಳಿಲು ಶಂಖ ಭಸ್ಮಗುಂಟಿಕೆ ತೀರ್ಥದಗುಂಬ ಹಾದಿಬೆನವ ಹಳ್ಳದ ಬೆನವ ವಾಸರದಯ್ಯ ವಿನಾಯಕ ಶಕ್ತಿ ಗಣೇಶ ಚಂಡಿ ಚಾಮುಂಡಿಯಲ್ಲಿ ಏಕನಾತಿ ಹಿರಿಹೊಳೆ ಜಟ್ಟಿಂಗ ತೆಪ್ಪದಾರತಿ ಪಂಚಪಾಂಡವರು ಬನ್ನಿಮಹಾಂಕಾಳಿ ತುಳಸಿ ಬಿಲ್ವವೃಕ್ಷ ಸಮಾದ್ಥಿ ಗದ್ದುಗೆ ಪುರಾಣ ವಚನಾರ್ಥಪುಸ್ತಕ ಲೆಕ್ಕದ ಓಹಿ ಕತ್ತಿ ಕಂಡೇಪೂಜೆ, ಊರಬೀರ ಪೀರ ಗೋರಿ ಸತ್ತವರ ತಿಥಿ ಚಿತ್ತಹೊಲೆ ಕರ್ಮದ ಗಂಗೆ ಗುಗ್ಗುಳ ಗೌರೀನೋಂಪಿ ದೀಪಹರಕೆ ಪೂಜೆ ಕರಿಯಸೀರೆ ಊರ ಮಾರಿದೇವತೆ ಅಂಬಲಿ ಮಜ್ಜಿಗೆ ಕುಂಭ ಹೊಸ್ತಲ ಮದುವೆಯಕಂಭ ಕುಂಭ ಸರಕಿನಗಂಟು ಮಹತ್ವ ಮೆರೆದವರ ಪಾದಮುದ್ರೆ ಕಡೆಯಾದವಕ್ಕೆ, ತನ್ನ ಕಾಯ ವಾಚ ಮನದಲ್ಲಿ ಹೊಳೆದು, ಪಿತ-ಮಾತೆ ಸತಿ-ಸುತ ಒಡಹುಟ್ಟಿದವರು ಸೇವಕ ಕಡೆಯಾದವರಿಂದೆ ತನ್ನ ಮನೆಯಲ್ಲಿ ಮಾಡಿದ ಎಡೆ ವಾರಮೃತ್ಯೋದಕ, ಪಾದೋದಕಸಂಬಂಧವಾದ, ವಿಭೂತಿ-ಗಂಧಾಕ್ಷತೆ-ಪುಷ್ಪ-ಪತ್ರಿ ಧೂಪ-ದೀಪ ಹಣ್ಣು-ಕಾಯಿ ವಸ್ತ್ರಾಭರಣ-ಪಂಚಕಳಸ ಕಾಣಿಕೆ ಮೊದಲಾದ ಬ್ಥಿನ್ನವ ಕರ್ಮಕ್ರಿಯಾಚಾರಲಿಂಗಬಾಹ್ಯರಾದ ಬ್ರಹ್ಮ ಕ್ಷತ್ರಿಯ ವೈಶ್ಯ ಶೂದ್ರ ಪಾಶುಪತ ಕಾಳಾಮುಖಿ ಯೋಗಿ-ಜೋಗಿ ಶ್ರವಣ-ಸನ್ಯಾಸಿ ಯತಿ-ವ್ರತಿ ಮನು-ಮುನಿ ಗರುಡ-ಗಂಧರ್ವ ಯಕ್ಷ-ರಾಕ್ಷಸ ಸಿದ್ಧ-ಸಾಧ್ಯರುಪದೇಶವಿಡಿದು ಚರಲಿಂಗೋದಯಘನಪಾದತೀರ್ಥವರ್ಪಿಸಿ, ನೈವೇದ್ಯ ಮಾಡಿಸುವಂಥಾದ್ದೆ ಅನಾಚಾರ. ಇದೇ ಭವಿಮಾಟಕೂಟ ಅಸತ್ಯದ ನಡೆನುಡಿಯ ವಿಚಾರದ ಪ್ರಥಮಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಶಿವಾಚಾರಸುಸಂಪನ್ನಃ ಕೃತ್ವ್ದಾನ್ಯದೈವಸ್ಯ ಪೂಜನಂ | ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಅನಾಚಾರಿಕೃತಂ ಪಾಕಂ ಲಿಂಗನೈವೇದ್ಯಕಿಲ್ಬಿಷಂ | ಲಿಂಗಾಚಾರಿಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ || ತದ್ದಿನಂ ದಿನದೋಷೇಣ ಶೋಣಿತಂ ಸುರಾಮಾಂಸಯೋಃ | ಏಕಭುಕ್ತೋಪವಾಸೇನ ನರಕೇ ಕಾಲಮಕ್ಷಯಂ || ಸೌಮೇ ಭೌಮೇ ವ್ಯತಿಪಾತೇ ಸಂಕ್ರಾಂತಿಶಿವರಾತ್ರಿಯೋ | ಶೈವಕರ್ಮೋಪವಾಸಿನಾಂ ನರಕೇ ಕಾಲಮಕ್ಷಯಂ || ಕಾರ್ತೀಕಮಾಘಶ್ರಾವಣ ಶೈವಪೂಜಾವಿಶೇಷತಃ | ವೀರಶೈವಸ್ತಥಾ ಕೃತ್ವಾ ಸನ್ತಶ್ಟ ಪ್ರಾಕೃತೈಃ ಸಮಾಃ || ಸ್ಥಾವರಾರ್ಪಿತನೈವೇದ್ಯಾತ್ ನ ತೃಪ್ತಿರ್ಮಮ ಪಾರ್ವತಿ | ಜಂಗಮಾರ್ಪಿತನೈವೇದ್ಯಾತ್ ಮಮ ತೃಪ್ತಿಶ್ಚ ಸರ್ವದಾ || ಸತ್ಪಾತ್ರದತ್ತವಿತ್ತಸ್ಯ ತದ್ಧನಂ ಸ್ವಧನಂ ಸುಖಂ | ಅಪಾತ್ರದತ್ತ ವಿತ್ತಸ್ಯ ತದ್ಧನಂ ಸ್ವಸುಖಂ ಭವೇತ್ || ಚರಸ್ಯ ಗಮನೋ ನಾಸ್ತಿ ಭಕ್ತಸ್ಯ ಗೃಹಮಾಚರೇತ್ | ಅನ್ಯಗೃಹಂ ಗಮಿಷ್ಯಂತಿ ಸದ್ಯೋ ಗೋಮಾಂಸಭಕ್ಷಣಮ್ || ಇಷ್ಟಲಿಂಗಮವಿಶ್ವಸ್ಯ ಅನ್ಯದೈವಮುಪಾಸತೇ | ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಬಹುಲಿಂಗಪೂಜಕಸ್ಯ ಬಹುಭಾವಗುರುಸ್ತಥಾ | ಬಹುಪ್ರಸಾದಂ ಭುಂಜಂತಿ ವೇಶ್ಯಾಪುತ್ರಸ್ತಥೈವ ಚ || ಅಭಕ್ತಜನಸಂಗಶ್ಚ ಮಂತ್ರಸ್ಯ ಚ ಆಗಮಃ | ಅನ್ಯದೈವಪರಿತ್ಯಾಗಃ ಲಿಂಗಭಕ್ತಸ್ಯ ಲಕ್ಷಣಂ || ಲಿಂಗಧಾರಕಭಕ್ತಾನಾಂ ಲಿಂಗಬಾಹ್ಯಸತೀಸುತಾಃ | ಆಲಿಂಗಿತಾ ಚುಂಬಿತಾಶ್ಚ ರೌರವಂ ನರಕಂ ವ್ರಜೇತ್ ||'' ಇಂತೆಂಬ ಹರಗುರುವಾಕ್ಯಪ್ರಮಾಣವದಾಗಿ, ಸದ್ಭಕ್ತಶರಣಗಣಾರಾಧ್ಯರು ಭೂಪ್ರತಿಷ್ಠಾದಿಗಳ ಹೊದ್ದಿದಡೆ, ಭವಬಂಧನವಪ್ಪದು ತಪ್ಪದು. ಅದು ಕಾರಣವಾಗಿ ಗುರುಮಾರ್ಗಿಕರು ಹೊದ್ದದೆ, ಭವಸಾಗರವ ದಾಂಟಿ, ನಿರ್ಧರದಿಂದಿಪ್ಪುದೊಂದು ನರಗುರಿಗಳ ಪ್ರಥಮಪಾತಕನಿರಸನ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಎನಗೆ ನೀನಿಂಬಕೊಡುವಲ್ಲಿ ಸಕಲವ ಪ್ರಮಾಣಿಸುವದ ಬಿಟ್ಟು, ನಿಃಕಲವಸ್ತುವಾಗು. ಶಕ್ತಿಸಮೇತವ ಬಿಟ್ಟು ನೀ ಶಕ್ತಿ ನಿರ್ಲೇಹವಾಗು. ಚಿತ್ತವ ನೋಡಿಹೆನೆಂಬ ಹೆಚ್ಚು ಕುಂದಬಿಟ್ಟು ನಿಶ್ಚಿಂತನಾಗು. ಅಂದು ಮಿಕ್ಕಾದ ಭಕ್ತರ ಗುಣವ ನೋಡೆಹೆನೆಂದು ಕೊಟ್ಟ ಠಕ್ಕುಠವಾಳವ ಬಿಡು. ಸರ್ವರಾಗ ವಿರಾಗನಾಗಿ, ಸರ್ವಗುಣಸಂಪನ್ನನಾಗಿ, ಜ್ಞಾನಸಿಂಧು ಸಂಪೂರ್ಣನಾಗಿ, ನಿನ್ನ ಅರಿವಿನ ಗುಡಿಯ ಬಾಗಿಲ ತೆರೆದೊಮ್ಮೆ ತೋರಾ. ಎನ್ನಡಿಗೆ ನಿನ್ನ ಗುಡಿಯ ಸಂಬಂಧವ ನೊಡಿಹೆ, ಇದಕ್ಕೆ ಗನ್ನಬೇಡ ಚೆನ್ನ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ತ್ರೈಮೂರ್ತಿಗಳು ನಿನ್ನ ಸಾಕಾರದ ಶಾಖೆ. ತ್ರೈಮೂರ್ತಿಗಳು ನಿನ್ನ ಅಪ್ಪುವಿನ ಅಂಕುರ ಶಕ್ತಿ. ಇಂತೀ ಸರ್ವಗುಣ ಸಂಪನ್ನನಾಗಿ ಬ್ರಹ್ಮಂಗೆ ಅಂಡವ ಕೊಟ್ಟು ವಿಷ್ಣುವಿಗೆ ಪಿಂಡವ ಕೊಟ್ಟು ರುದ್ರಂಗೆ ಕಂಡೆಹವ ಕೊಟ್ಟು ಹಿಂಗಿದೆ. ನೀನಿದರಂದವನೊಲ್ಲದೆ ಅಂಗಕ್ಕೆ ಮಯ ನೀನೇ, ನಿರಂಗಕ್ಕೆ ಸಂಗ ನೀನೇ. ಹಿಂಗೂದಕ್ಕೆ ನಿನ್ನಂಗ ಅನ್ಯ ಬ್ಥಿನ್ನವಲ್ಲ. ಮುಕುರದ ಮರೆಯಲ್ಲಿ ತೋರುವ ಪ್ರತಿರೂಪಿನಂತೆ ಸಕಲದೇವರ ಚೈತನ್ಯಭಾವ ನಿನ್ನ ಉಷ್ಣ ಬಿಂದು, ಸಕಲದೇವರ ಶಾಂತಿ ನಿನ್ನ ಸಮಾನ ಬಿಂದು, ಇಂತಿವ ಹೇಳುವಡೆ ವಾಙ್ಮನಕ್ಕತೀತ ಅತ್ಯತಿಷ್ಠದ್ದಶಾಂಗುಲ ನಾರಾಯಣ ನಯನಪೂಜಿತ ಪ್ರಿಯ ರಾಮೇಶ್ವರಲಿಂಗ ನಾ ನೀನಾದೈಕ್ಯ.
--------------
ಗುಪ್ತ ಮಂಚಣ್ಣ
ಶಿವತತ್ವದ ವಾಯುವಿನ ಮೇಲೆ ನಿರಾಳ ಅನಾಹತಚಕ್ರ. ಅಲ್ಲಿಯ ಪದ್ಮ ಇನ್ನೂರಾ ಎಪ್ಪತ್ತು ದಳದ ಪದ್ಮ. ಆ ಪದ್ಮ ವರ್ಣವಿಲ್ಲದೆ ಅಪ್ರಮಾಣ ಅಗೋಚರವಾಗಿಹುದು. ಅಲ್ಲಿಯ ಅಕ್ಷರ ಇನ್ನೂರಾ ಎಪ್ಪತ್ತಕ್ಷರ ; ಆ ಅಕ್ಷರ ನಿರೂಪಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಳ ಉಪಮಾಶಕ್ತಿ. ಅಮಲಾನಂದಬ್ರಹ್ಮವೇ ಅದ್ಥಿದೇವತೆ. ಅಲ್ಲಿಯ ನಾದ ಸುನಾದ. ಅಲ್ಲಿಯ ಬೀಜಾಕ್ಷರ ಆದಿಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಉಭಯ ಕಾಮ, ಉಭಯ ಶಕ್ತಿ, ಉಭಯ ಆಶ್ರಮವು_ ಅನಾಶ್ರಮವು, ಉಭಯ ತಾನೆ ಪ್ರಸಾದಿ ಉಭಯನಾಮದ ಮೇಲೆ ನಾಮವಾದುದನು ಲಿಂಗದೇಹಿಯೆಂಬಾತಂಗರಿಯಬಾರದು. ಇದು ಕಾರಣ, ಕೂಡಲಚೆನ್ನಸಂಗಾ ನಿಮ್ಮ ಪ್ರಸಾದಿಗಲ್ಲದೆ ಅರಿಯಬಾರದು.
--------------
ಚನ್ನಬಸವಣ್ಣ
ಓ ಎಂದಲ್ಲಿ ವಸ್ತು, ಕಾ ಎಂದಲ್ಲಿ ಶಕ್ತಿ ಕೂಡಿ ಪ್ರಣವವಾಯಿತ್ತು. ಮಾತಿನ ಸೂತಕದಿಂದ ವೇದವಾಯಿತ್ತು, ನೀತಿಯ ಹೇಳುವಲ್ಲಿ ಶಾಸ್ತ್ರವಾಯಿತ್ತು. ಸರ್ವರ ಕೂಟದ ಕೂಗಿನಿಂದ ಪುರಾಣವಾಯಿತ್ತು. ಇಂತಿವರ ಗೋಷ್ಠಿಯ ಹುದುಗಿಗಾರದೆ, ಅಲೇಖನಾದ ಶೂನ್ಯ ಕಲ್ಲಿನೊಳಗಾದ.
--------------
ವಚನಭಂಡಾರಿ ಶಾಂತರಸ
ಷಡಕ್ಷರ ಶಕ್ತಿ ಯುಕ್ತವಾಗಿ ಷಡುಸಾದಾಖ್ಯಮೂರ್ತಿ ಸಂಪೂರ್ಣವಾಗಿ ಶರಣನ ಷಡಂಗದಲ್ಲಿ ಸದಾ ಸನ್ನಹಿತನಾಗಿ ಸರ್ವ ಸರ್ವಜ್ಞ ಸರ್ವೇಶ ಸರ್ವಾನಂದಮಯ ಷಟ್‍ಸ್ಥಲಬ್ರಹ್ಮಮೂರ್ತಿ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪರತತ್ತ್ವದ ವಾಯುವಿನ ಮೇಲೆ ನಿರಂಜನ ಅನಾಹತಚಕ್ರ. ಅಲ್ಲಿಯ ಪದ್ಮ ಇನ್ನೂರ ಎಪ್ಪತ್ತುದಳದಪದ್ಮ. ಆ ಪದ್ಮದ ವರ್ಣ ತೊಂಬತ್ತುಸಾವಿರದಾರುನೂರುಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ಇನ್ನೂರ ಎಪ್ಪತ್ತಕ್ಷರ : ಆ ಅಕ್ಷರ ತತ್ತಾ ್ವತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಮಯಾನಂದವೆಂಬ ಮಹಾಶಕ್ತಿ. ವಿಮಲಾನಂದಬ್ರಹ್ಮವೆ ಅದ್ಥಿದೇವತೆ. ಅಲ್ಲಿಯ ನಾದ ನಿರಾಳನಾದ. ಅಲ್ಲಿಯ ಬೀಜಾಕ್ಷರ ಕಲಾಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅನಾದಿ ಪರಶಿವನಿಂದಾಕಾರವಾದ ಆದಿಬಿಂದು ಅನಾದಿಬಿಂದು ಚಿದ್ಬಿಂದು ಪರಬಿಂದುವೆ ಜಗದ ಮಧ್ಯದಲ್ಲಿ ಸ್ವಯ, ಚರ, ಪರ, ಭಕ್ತ, ಮಹೇಶ್ವರ, ಪ್ರಸಾದಿ ಪೂಜ್ಯ ಪೂಜಕತ್ವದಿಂದ ಚರಿಸುತ್ತಿರಲು, ಆ ಸಮಯದಲ್ಲಿ ಪ್ರಮಾದವಶದಿಂದ ಲಿಂಗಾಂಗಕ್ಕೆ ಸುಯಿಧಾನ ತಪ್ಪಿ ವಿಘ್ನಾದಿಗಳು ಬಂದು ತಟ್ಟಿ ಶಂಕೆ ಬಂದಲ್ಲಿ ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿದಲ್ಲಿ ಸ್ಥೂಲವಾದಡೆ ಸದಾಚಾರಕ್ಕೆ ಹೊರಗು ಸೂಕ್ಷ್ಮವಾದಡೆ ಶರಣಗಣಂಗಳ ಸಮೂಹಮಧ್ಯದಲ್ಲಿ ಭೃತ್ಯಭಾವದಿಂದ ಹತ್ತು ಹನ್ನೊಂದ ಕೊಳತಕ್ಕುದಲ್ಲ ನೋಡಾ (ಕೊಳತಕ್ಕುದಲ್ಲದೆ?) ಕರ್ತೃತ್ವದಿಂದ ಹತ್ತು ಹನ್ನೊಂದ ಕೊಡತಕ್ಕುದಲ್ಲ ನೋಡಾ ! ಸ್ಥೂಲ ಸೂಕ್ಷ್ಮದ ವಿಚಾರವೆಂತೆಂದಡೆ: ಪರಶಿವಸ್ವರೂಪವಾದ ಇಷ್ಟಲಿಂಗದ ಷಟ್‍ಸ್ಥಾನದೊಳಗೆ ಆವ ಮುಖದಿಂದಾದಡೆಯು ಸುಯಿಧಾನ ತಪ್ಪಿ ಪೆಟ್ಟುಹತ್ತಿ ಭಿನ್ನವಾದಡೆ, ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಹರಗುರುವಚನ ವಿಚಾರಿಸಿರಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಪ್ರತಿಜ್ಞೆಯ ಮಾಡುವುದು, ಶಕ್ತಿ ಸ್ವರೂಪವಾದ ಅಂಗದ ಅವಯವಂಗಳಿಗೆ ಶಿವಾನುಕೂಲದಿಂದ ವ್ಯಾಘ್ರ ಭಲ್ಲೂಕ ದಂಷ್ಟ್ರ ಕರ್ಕಟ ವಾಜಿ ಮಹಿಷ ಸಾಗರದುಪ್ಪಿ ಗಜ ಶುನಿ ಶೂಕರ ಮಾರ್ಜಾಲ ಹೆಗ್ಗಣ ಉರಗ ಮೊದಲಾದ ಮಲಮಾಂಸಭಕ್ಷಕ ಪ್ರಾಣಿಗಳು ಮೋಸದಿಂದ ಪಾದ ಪಾಣಿ ಗುದ ಗುಹ್ಯ ದೇಹವ ಕಚ್ಚಿದಡೆ ಸ್ಥೂಲವೆನಿಸುವುದಯ್ಯಾ ! ಅದರಿಂದ ಮೇಲೆ ಜಿಹ್ವೆ ನಾಸಿಕ ನೇತ್ರ ಲಲಾಟ ಶ್ರೋತ್ರಂಗಳ ಕಚ್ಚಿದಡೆ ಸೂಕ್ಷ್ಮವೆನಿಸುವುದಯ್ಯಾ ! ಈ ಪ್ರಕಾರದಲ್ಲಿ ಲಿಂಗಾಂಗಕ್ಕೆ ಅಪಮೃತ್ಯು ಬಂದು ತಟ್ಟಿದಲ್ಲಿ ಆಚಾರಕ್ಕೆ ಹೊರಗಾದವರು ಗಣಮಧ್ಯದಲ್ಲಿ ಪ್ರಾಣವ ಬಿಡುವುದಯ್ಯಾ, ಇಂತಪ್ಪ ಆಚಾರಕ್ರಿಯಾನಿಷ್ಠನ ಭಕ್ತ ಮಹೇಶ್ವರ ಶರಣಗಣಂಗಳು ಜಂಗಮದ ಪಾದದಲ್ಲಿ ಸಮಾಧಿಯ ಮಾಡುವುದಯ್ಯಾ ಪ್ರಾಣತ್ಯಾಗವ ಮಾಡಲಾರದಿರ್ದಡೆ, ಭಕ್ತ ಮಹೇಶ್ವರ ಶರಣಗಣಂಗಳ ಮಹಾನೈಷ್ಠೆಯಿಂದ ಸಾಕ್ಷಾತ್ಪ್ರಭುವೆಂದು ನಂಬಿ ಅವರು ತೋರಿದ ಸೇವೆಯ ಮಾಡಿ, ಅವರು ಕೊಟ್ಟ ಧಾನ್ಯಾದಿಗಳ ಸ್ವಪಾಕವ ಮಾಡಿ ಮಹಾಪ್ರಸಾದವೆಂದು ಭಾವಿಸಿ ಪಾತಕಸೂತಕಂಗಳ ಹೊದ್ದದೆ ಆಚರಿಸಿದಾತಂಗೆ ಅವಸಾನಕಾಲದಲ್ಲಿ ಮಹಾಗಣಂಗಳು ಲಿಂಗಮುದ್ರಾಭೂಮಿಯಲ್ಲಿ ಪಾದದಳತೆಯಿಲ್ಲದೆ ನೋಟಮಾತ್ರ ಪ್ರಮಾಣಿಸಿ ಸಹಜಸಮಾಧಿಯ ಮಾಡಿ ಲಿಂಗಾಕೃತಿಪ್ರಣವಸಂಬಂಧವಾದ ತಗಡ ಸಂಬಂಧ ಮಾಡದೆ ಪುಷ್ಪಾಂಜಲಿಯ ಮಾಡದೆ, ಆ ನಿಕ್ಷೇಪ ಸ್ಥಾನದಲ್ಲಿ ಜಂಗಮದ ಪಾದವಿಟ್ಟು ಆ ಮರಣಸನ್ನದ್ಧನ ನಿಕ್ಷೇಪನ ಮಾಡುವುದಯ್ಯಾ. ಈ ರೀತಿಯಿಂದಾಚರಿಸಿದಡೆ ಮರಳಿ ಗುರುಕರಜಾತನಾಗಿ ಸದ್ಭಕ್ತಿ ಜ್ಞಾನಾಚಾರ ಕ್ರೀಯಲ್ಲಿ ನಡೆನುಡಿಸಂಪನ್ನನಾಗಿ ಷಟ್‍ಸ್ಥಲದ ಬ್ರಹ್ಮವ ಕೂಡಿ ಘನಸಾರದಂತೆ ಸರ್ವಾಂಗವೆಲ್ಲ ಜ್ಯೋತಿರ್ಮಯಲಿಂಗದಲ್ಲಿ ನಿರವಯವಪ್ಪುದು ನೋಡಾ ! ಇಂತು ಗುರುಮಾರ್ಗಾಚಾರವ ಮೀರಿ, ಅವಧೂತಮಾರ್ಗದಲ್ಲಿ ನಡೆದಡೆ, ಇರುವೆ ಮೊದಲಾನೆ ಕಡೆಯಾದ ಸಮಸ್ತ ಯೋನಿಯಲ್ಲಿ ಜನಿಸಿ, ಸುಖ-ದುಃಖ, ಪುಣ್ಯ-ಪಾಪ, ಸ್ವರ್ಗ-ನರಕವನನುಭವಿಸಿ ಕಾಲಕಾಮಾದಿಗೊಳಗಾಗಿ ಗುರುಮಾರ್ಗಾಚಾರಕ್ಕೆ ಹೊರಗಾಗಿ ಹೋಹರು ನೋಡಾ, ಕೂಡಲಚೆನ್ನಸಂಗಮದೇವಾ !
--------------
ಚನ್ನಬಸವಣ್ಣ
ಇಚ್ಛಾ ಜ್ಞಾನ ಕ್ರಿಯಾ ಶಕ್ತಿ ನಿಮ್ಮಿಚ್ಛೆ ಎಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂದು ನಿಮ್ಮಡಿಗಳು ಬೆಸಸಿದ ಸರ್ವಶ್ರುತಿಗಳಂ ಕೇಳಿ ಬಲ್ಲೆನು. ಈ ಹೀಂಗೆಂದರಿದು ಮನ ಮರಳಿ ಬಿದ್ದು ಗುರುಲಿಂಗಜಂಗಮಕ್ಕೆ ನಾನೂ ಮಾಡಿದೆನೆಂಬ ಅವಿಚಾರದ ಮನದ ಮರವೆಯ ನೋಡಾ. ಇದಿರ ಬೇಡಿದಡೆ ಕೊಡರೆಂಬ ಮನದ ಘಸಣಿಯ ನೋಡಾ. ಶಿವ ಶಿವ ಮಹಾದೇವ, ಮನೋನಾಥ ಮನೋಮಯ, ಎನ್ನ ಮನವ ಸಂತವ ಮಾಡಿ ನಿಮ್ಮಲ್ಲಿ ಬೆರಸು, ಬೆರಸದಿದ್ದಡೆ ನಿಮಗೆ ಮಹಾಗಣಂಗಳಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಶಕ್ತಿ ಸಾಧನೆಯ ಸಾದ್ಥಿಸಿ, ಆನೆ ಸೇನೆ ತಳತಂತ್ರ ಮಾರ್ಬಲ ಅಲಗು ಈಟೆಯ ಮೊನೆ ಹಿಡಿದು ಕಾದುವರುಂಟೆ ? ಮಂತ್ರಿ ಮನ್ನೆಯ ಬಂಟರೆಲ್ಲರು ರಣದೊಳಗೆ ಕಾದಿ ಗೆಲ್ವರಲ್ಲದೆ. ಮಾಯಾಪಾಶವೆಂಬ ರಾಕ್ಷಿ, ಕರಣಗುಣವೆಂಬ ಭೂತಗಳ ಕೂಡಿಕೊಂಡು, ಭೂಮಂಡಲ ಹತಮಾಡುತ, ತಿಂದು ತೇಗುತ ಬರುತಿದೆ. ಮಾಯಾರಣ್ಯವ ಕಾದಿ ಗೆಲುವರನಾರನೂ ಕಾಣೆ ಎನ್ನಾಳ್ದ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಯ್ಯಾ, ಚಿದಂಗ ಚಿದ್ಘನಲಿಂಗ ಶಕ್ತಿ ಭಕ್ತಿ ಹಸ್ತ ಮುಖ ಪದಾರ್ಥ ಪ್ರಸಾದ ಎಂಬಿವಾದಿಯಾದ ಸಮಸ್ತ ಸಕೀಲಂಗಳ ನೆಲೆ ಕಲೆಯರಿಯದೆ, ಜಿಹ್ವಾಲಂಪಟಕ್ಕೆ ಆಹ್ವಾನಿಸಿ, ಗುಹ್ಯಾಲಂಪಟಕ್ಕೆ ವಿಸರ್ಜಿಸಿ, ಸಕಲೇಂದ್ರಿಯಮುಖದಲ್ಲಿ ಮೋಹಿಯಾಗಿ, ಸದ್ಗುರುಕರುಣಾಮೃತರಸ ತಾನೆಂದರಿಯದೆ ಬರಿದೆ ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಗುರುಚರಪರವೆಂದು ಬೊಗಳುವ ಕುನ್ನಿಗಳ ನೋಡಿ ಎನ್ನ ಮನ ಬೆರಗು ನಿಬ್ಬೆರಗು ಆಯಿತ್ತಯ್ಯಾ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಮತ್ತಮೆರಡನೆಯ ಮೂಲಪ್ರಸಾದಮೆಂತೆನೆ- ಯಗ್ನಿಮಂಡಲ ಸ್ಥಿತಿಮಾರ್ಗದೊಳಗಣ ಮೊದಲ ಸಾತ್ವಿಕವರ್ಗದಲ್ಲಿ ಪ್ರದಕ್ಷಿಣೆಯಂ ಪೂರ್ವಾದಿ ದಳನ್ಯಸ್ತ ಲಿಪಿಗಳಾರನೆಯಕ್ಕರಮಂ ಚಂದ್ರಮಂಡಲದ ಸ್ಥಿತಿಮಾರ್ಗದೆರಡನೆಯ ರಾಜಸರ್ವನ್ಯಸ್ತ ಸ್ವರಾಕ್ಷರಂಗಳ ಪದಿಮೂರನೆಯದರ ಕಡೆಯಕ್ಕರಮುಮಂ ಪಂಚಮಮಾದ ಸಾಂತದಲ್ಲಿ ಬೆರಸಿ ಹ್ರೌವೆನಿಸಿತ್ತಾ ಹ್ರೌಗೆ ಆಧಾರ ಶಕ್ತಿ ಕಾರ್ಯ ಪರ ಬಿಂದುಗಳೆಂದೈವೆಸರಾದುದು. ಸಕಾರಮಾ ಬಿಂದುವೆ ಶೂನ್ಯಮದೆ ಸೊನ್ನೆಯು. ಆ ಸೊನ್ನೆಯನೊಂದಿ ಹ್ರೌಮೆನಲೊಡಂ ಮತ್ತೊಂದು ತೆರದಿನಾಧಾರಾಧೇಯ ಶಿವಶಕ್ತಿ ಕಾರ್ಯಕಾರಣ ಪರಾಪರ ನಾದಬಿಂದುಗಳೆಂದು ಜೋಡು ಜೋಡುವೆಸರಪ್ಪುದರಿಂದೆಯುಂ ಶಕ್ತಿಯೆನೆ ಬಿಂದು, ಬಿಂದುವೆನೆ ಸೊನ್ನೆಯು. ಸೊನ್ನೆವೆರೆದು ಹ್ರೌವೆಂಬಕ್ಕರವೆ ಹ್ರೌಮೆಂದು ಶಿವಮಂತ್ರವಾಯಿತ್ತದೆ ಮೂಲಪ್ರಸಾದವೆಂದು ನಿರವಿಸಿದೆಯಯ್ಯಾ, ಪರಾತ್ಪರ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನಷ್ಟು ... -->