ಅಥವಾ

ಒಟ್ಟು 59 ಕಡೆಗಳಲ್ಲಿ , 12 ವಚನಕಾರರು , 59 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಹರ, ಶಿವಶಿವ, ಜಯಜಯ, ಕರುಣಾಕರ ಮತ್ಪ್ರಾಣನಾಥ ಮಹಾಶ್ರೀಗುರುವೆ ನಿಷ್ಕಲ ಪರಶಿವತತ್ವವಯ್ಯ. ಗುರುವೆ ಸಕಲಾಗಮಂಗಳ ಮೂರ್ತಿಯಯ್ಯ. ಗುರುವೆ ಅಜ್ಞಾನವೆಂಬ ಕಾವಳಕ್ಕೆ ಚಿತ್ಸೂರ್ಯನಯ್ಯ. ಗುರುವೆ ನಂಬಿದ ಭಕ್ತರ ವಿಷಯವೆಂಬ ವನಾಂತರಕ್ಕೆ ಚಿಚ್ಚಂದ್ರನಯ್ಯ. ಗುರುವೆ ಆಸೆಯೆಂಬ ಪಾಶವ ದಹಿಸುವುದಕ್ಕೆ ಚಿದಗ್ನಿಯಯ್ಯ. ಗುರುವೆ ಪರಾತ್ಪರಮೂರ್ತಿಯಯ್ಯ. ಗುರುವೆ ಸಕಲಾಧಾರಮೂರ್ತಿಯಯ್ಯ. ಗುರುವೆ ಸಚ್ಚಿದಾನಂದಮೂರ್ತಿಯಯ್ಯ. ಗುರುವೆ ಸರ್ವಲೋಕ ಸೂತ್ರಾಧಾರಮೂರ್ತಿಯಯ್ಯ. ಗುರುವೆ ಪರಬ್ರಹ್ಮವಸ್ತುವಯ್ಯ. ಗುರುವೆ ನಿತ್ಯನಿರುಪಮನಯ್ಯ. ಗುರುವೆ ನಿಷ್ಕಳಂಕ ನಿಷ್ಪ್ರಪಂಚನಯ್ಯ ಗುರುವೆ ನಿರುಪಾದ್ಥಿಕ ನಿಶ್ಚಿಂತನಯ್ಯ ಗುರುವೆ ಆದಿ ಅನಾದಿಯಿಂದತ್ತತ್ತಲಾದ ನಿರವಯಮೂರ್ತಿಯಯ್ಯ. ಗುರುವೆ ಶಾಂತ ಸರ್ವಜÕಸ್ವರೂಪನಯ್ಯ. ಗುರುವೆ ನಿರಾಳ ನಿಷ್ಕಾಮ ನೋಡ. ಶ್ರೀಗುರುವೆ ಸಗುಣಾನಂದಮೂರ್ತಿ ನೋಡ ! ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಲಿಂಗ ಬೇರೆ, ಶರಣ ಬೇರೆಂದು ಹಂಗಿಸಿ ನುಡಿಯಲಾಗದು. ಲಿಂಗ ಬೇರೆ, ಶರಣ ಬೇರೆಯೇ? ಶಿವಶಿವ ಒಂದೇ ಕಾಣಿರಣ್ಣ. ಸುವರ್ಣ ಆಭರಣವಾಯಿತ್ತೆಂದಡೆ, ಅದು ನಾಮ ರೂಪಭೇದವಲ್ಲದೆ ವಸ್ತುಭೇದವಲ್ಲ. ಭಕ್ತಿಯ ವೈಭವದಿಂದ ಶರಣ ಸಕಾಯನಾಗಿ ಅವತರಿಸಿದೆನೆಂದಡೆ ಬೇರಾಗಬಲ್ಲನೇ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೆಂಬ ಲಿಂಗವೆಂದಡೂ ಶರಣನೆಂದಡೂ ಒಂದೇ ಕಾಣಿರಣ್ಣಾ.
--------------
ಸ್ವತಂತ್ರ ಸಿದ್ಧಲಿಂಗ
ಹರಹರ ಶಿವಶಿವ ಜಯಜಯ ಹರಗಣಂಗಳಾಚರಿಸಿದ ಸತ್ಕಾಯಕದಿಂದ ಬಹುಜನ್ಮದ ದೋಷ ತೊಲಗುವುದಯ್ಯ. ಸತ್ಕಿøಯದಿಂದ ಕಾಲಕಾಮರ ಭಯ ಹರಿವುದಯ್ಯ. ಸಮ್ಯಜ್ಞಾನದಿಂದ ಮಾಯಾಪಾಶ ಹಿಂದಾಗುವುದಯ್ಯ. ಸದ್ಭಕ್ತಿಯಿಂದ ಪಾವನಸ್ವರೂಪರಾಗುವುರಯ್ಯ. ಲಿಂಗಾಚಾರದಿಂದ ತನು ಶುದ್ಧವಾಗುವುದಯ್ಯ. ಸದಾಚಾರದಿಂದ ಮನ ಸಿದ್ಧವಾಗುವುದಯ್ಯ. ಶಿವಾಚಾರದಿಂದ ಧನ ಪ್ರಸಿದ್ಧವಾಗುವುದಯ್ಯ. ಗಣಾಚಾರದಿಂದ ನಡೆ ಪರುಷವಾಗುವುದಯ್ಯ. ಭೃತ್ಯಾಚಾರದಿಂದ ನುಡಿ ಪರುಷವಾಗುವುದಯ್ಯ. ಕ್ರಿಯಾಚಾರದಿಂದ ಕರ್ಮೇಂದ್ರಿಯಂಗಳು ಪವಿತ್ರವಾಗುವವಯ್ಯ. ಜ್ಞಾನಾಚಾರದಿಂದ ಜ್ಞಾನೇಂದ್ರಿಯಂಗಳು ಪಾವನವಾಗುವವಯ್ಯ. ಭಾವಾಚಾರದಿಂದ ಕರಣಂಗಳು ನಿಜಸ್ವರೂಪವಾಗುವವಯ್ಯ. ಸತ್ಯಾಚಾರದಿಂದ ವಿಷಯಂಗಳು ಲಿಂಗಮುಖವಾಗುವವಯ್ಯ. ನಿತ್ಯಾಚಾರದಿಂದ ವಾಯುಗಳು ಮಹಾಪ್ರಸಾದವಾಗುವವಯ್ಯ. ಧರ್ಮಾಚಾರದಿಂದ ಲಿಂಗಾಂಗ ಏಕವಾಗುವುದಯ್ಯ. ಸರ್ವಾಚಾರದಿಂದ ಸರ್ವಾಂಗ ಜ್ಞಾನಜ್ಯೋತಿಯಪ್ಪುದು ತಪ್ಪದು ನೋಡ. ಸತ್ಕಾಯಕ ಮೊದಲಾದ ಷೋಡಶ ಕಲೆನೆಲೆಗಳೆ ಸದ್ಗುರುಮುಖದಿಂ ಚಿದಂಗವ ಮಾಡಿಕೊಂಡು, ಷೋಡಶವರ್ಣವೆ ಸದ್ಗುರುಮುಖದಿಂ ಚಿದ್ಘನಲಿಂಗವ ಮಾಡಿಕೊಂಡು ಸದ್ಗುರುಮುಖದಿಂ ಎರಡಳಿದು ಏಕಸ್ವರೂಪದಿಂದ ಜ್ಯೋತಿಜ್ಯೋತಿ ಬೆರದಂತೆ ಬಸವ ಮೊದಲಾದ ಪ್ರಮಥಗಣಂಗಳೆಲ್ಲ ಬಯಲೊಳಗೆ ಮಹಾಬಯಲಾದರು ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯಾ, ಮತ್ತೊಂದು ವೇಳೆ ಸಪ್ತಧಾತು ಸಪ್ತವ್ಯಸನವಕೂಡಿ ವರ್ತಿಸಿತಯ್ಯ. ಅದೆಂತೆಂದಡೆ, ರಸ ರುಧಿರ ಮಾಂಸ ಮೇದಸ್ಸು ಅಸ್ಥಿ ಮಜ್ಜೆ ಶುಕ್ಲವೆಂಬ ಧಾತುಗಳ ಅನ್ನ ನೀರಿನಿಂದ ಪೋಷಿಸಿಕೊಂಡು, ತನುವ್ಯಸನ, ಮನವ್ಯಸನ, ಧನವ್ಯಸನ, ರಾಜವ್ಯಸನ, ಉತ್ಸಾಹವ್ಯಸನ, ವಿಶ್ವವ್ಯಸನ, ಸೇವಕವ್ಯಸನವೆಂಬ ಸಪ್ತವ್ಯಸನಿಯಾಗಿ ಷಡೂರ್ಮೆ-ಷಡ್ಭಾವವಿಕಾರದಿಂದ ಎನ್ನ ತೊಳಲಿಬಳಲಿಸಿ ಅಳಲಿಸಿತಯ್ಯ ಕುಲಗೇಡಿ ಜೀವಮನವು. ಈ ಜೀವಮನದ ಸಂಗವ ತೊಲಗಿಸಿ ರಕ್ಷಿಸಯ್ಯ. ದುರಿತಹರ ಪಾಪಹರ ಶ್ರೀಗುರುಲಿಂಗಜಂಗಮವೆ ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಮಹಾಶ್ರೀಗುರುಸಿದ್ಧಲಿಂಗೇಶ್ವರ !
--------------
ಬಸವಲಿಂಗದೇವ
ಹರಹರ, ಶಿವಶಿವ, ಜಯಜಯ ಶ್ರೀಗುರುಲಿಂಗಜಂಗಮ ಶರಣಗಣಂಗಳಲ್ಲಿ ಕಿಂಕರ ಭೃತ್ಯಭಾವಸದ್ಭಕ್ತಿಯೆ ನಿಜಶಿವಯೋಗವಯ್ಯ. ಸದ್ಭಕ್ತಿಯೆ ನಿಜಕೈವಲ್ಯಪದವಯ್ಯ. ಸದ್ಭಕ್ತಿಯೆ ಪರಮಕೈ¯oಸವಯ್ಯ. ಸದ್ಭಕ್ತಿಯೆ ನಿಜಮೋಕ್ಷಮಂದಿರವಯ್ಯ. ಸದ್ಭಕ್ತಿಯೆ ರುದ್ರಲೋಕವಯ್ಯ. ಸದ್ಭಕ್ತಿಯೆ ಶಿವಲೋಕ ಶಾಂಭವಲೋಕವಯ್ಯ. ಸದ್ಭಕ್ತಿಯೆ ನಾಗಲೋಕ ದೇವಲೋಕವಯ್ಯ. ಸದ್ಭಕ್ತಿಯೆ ಕಾಮಧೇನು - ಕಲ್ಪವೃಕ್ಷ - ಚಿಂತಾಮಣಿಯಯ್ಯ. ಸದ್ಭಕ್ತಿಯೆ ಸಂಜೀವನ ಪರಮಾಮೃತವಯ್ಯ. ಸದ್ಭಕ್ತಿಯೆ ನಿತ್ಯತ್ವ ಪರಮಪದವಯ್ಯ. ಸದ್ಭಕ್ತಿಯೆ ಚಿದೈಶ್ವರ್ಯ ಚಿದಾಭರಣವಯ್ಯ. ಸದ್ಭಕ್ತಿಯೆ ಮಹಾತೀರ್ಥವಯ್ಯ. ಸದ್ಭಕ್ತಿಯೆ ಮಹಾಶಿವಕ್ಷೇತ್ರವಯ್ಯ. ಸದ್ಭಕ್ತಿಯಿಂದ ಮಹಾಪಾಪಂಗಳು ಕುಸಿದು ಹೋಹವಯ್ಯ. ಸದ್ಭಕ್ತಿಯಿಂದ ಸಕಲಲೋಕಪಾವನವಯ್ಯ. ಸದ್ಭಕ್ತಿಯಿಂದ ಸದ್ಯೋನ್ಮುಕ್ತಿಯಯ್ಯ. ಸದ್ಭಕ್ತಿಯಿಂದ ಅನಂತರು ಮುಕ್ತರಾದರಯ್ಯ. ಸದ್ಭಕ್ತಿಯೆ ಮಹಾಜ್ಞಾನದರ್ಪಣ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಗಜೇಶ ಅಜಹರಿಸುರರೊಂದ್ಯ, ಜಗದಗಲಾತ್ಮ ಅಮೃತಕರ ಅಘಗಿರಿಗೊಜ್ರ ಅನಲಾಕ್ಷ ಅನಾಮಯ ಅಚಲ ಅಗಣಿತ ಅತಿಸತ್ಯ ಅಭವ ಅಭಂಗ ಅತಿಪರಾಕ್ರಮ ಆನಂದ ಅಪರಂಪಾರ ಆದಿಸ್ವಯಂಭೂ ಆಧ್ಯಾತ್ಮಪರಂಜ್ಯೋತಿ ಅಕಳಂಕ ಅಮಲ ಅದೃಶ್ಯ ಅಕಲ್ಪ ಅಭವ ಅರುಣೋದಯ ಅನುಪಮ ಅಘಟಿತ ಅಚರಿತ್ರ ಐಶ್ವರ್ಯ ಅದ್ಭುತ ಆದ್ಯ ಆರಾಧ್ಯ ಅಂಗಸಂಗ ಅಮರಗಣವಂದ್ಯ ರಕ್ಷಿಪುದೆಮ್ಮ ಜಯಜಯ ಹರಹರ ಶಿವಶಿವ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಹರಹರ ಶಿವಶಿವ ಜಯಜ ಕರುಣಾಕರ ಮತ್ಪ್ರಾಣಕಳಾಚೈತನ್ಯಸ್ವರೂಪ ಮಹಾಪ್ರಭು ಶ್ರೀಗುರುಲಿಂಗಜಂಗಮದ ಮಹಾಪ್ರಸಾದವೆ ಪರಬ್ರಹ್ಮ ಪರಮಕಳಾಚೈತನ್ಯ ಚಿತ್ಸ್ವರೂಪ ಅನಾದಿ ನಿಷ್ಕಲ ಪರಶಿವಲಿಂಗಸ್ವರೂಪ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿಜಚೈತನ್ಯಸ್ವರೂಪು ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಶಿವಾನುಭಾವದ ಶುದ್ಧಿನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರುಪಮ ನಿರಾಲಂಬ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿತ್ಯ ಚಿದೈಶ್ವರ್ಯ ಚಿತ್ಕಾಂತಿ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿಜಮೋಕ್ಷದ ಕಣಿ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಭವರೋಗವೈದ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರ್ಗುಣ ನಿಷ್ಕಳಂಕ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಅಪ್ರಮಾಣ ಅಗೋಚರ ನಿಜಚಿನ್ಮಯರೂಪು ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಅಗಣಿತ ನಿರಾತಂಕ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರಾವಯ ನಿಶ್ಶೂನ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರ್ಮಾಯ ನಿಷ್ಕಾಮ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಚಿದ್ಬೆಳಗು ತಾನೆ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಚಿದ್ಘನಮಹಾಲಿಂಗ ತಾನೆ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಎನ್ನ ಪಂಚಾಕ್ಷರವ ಇಷ್ಟಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಸಪ್ತದಶಾಕ್ಷರವ ಪ್ರಾಣಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ತ್ರಿವಿಧಾಕ್ಷರವ ಭಾವಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಷಡಿಂದ್ರಿಯಂಗಳ ಷಡ್ವಿಧಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ನವಚಕ್ರಂಗಳ ನವವಿಧಲಿಂಗಕ್ಷೇತ್ರ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಅನ್ನಮಯವ ಪ್ರಸಾದ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಪ್ರಾಣಮಯವ ಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಮನೋಮಯವ ಶಿವಧ್ಯಾನ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ವಿಜ್ಞಾನಮಯವ ಜ್ಞಾನ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಆನಂದಮಯವ ಶಿವಾನಂದಮಯವಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಷಡ್‍ಧಾತುಗಳ ಷಡಕ್ಷರ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೇ ಎನ್ನ ಅಂಗ ಮನ ಪ್ರಾಣೇಂದ್ರಿಯಂಗಳಲ್ಲಿ ಪರಿಪೂರ್ಣನಾಗಿ ಬಸವಣ್ಣನೇ ಇಷ್ಟವಾಗಿ ತೊಳಗಿ ಬೆಳಗುತ್ತಿಪ್ಪ ಭೇದವನು ಬೋಳಬಸವೇಶ್ವರನೆನಗೆ ಅರುಹಿಕೊಟ್ಟು ಸಿದ್ಧೇಶ್ವರನೆಂಬ ಚಿದಬ್ಧಿಯೊಳಗೆ ಮುಳುಗಿಸಿದ ಕಾರಣ ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಉಭಯಭಾವವನರಿಯದೆ ಶಿವಶಿವ ಎನುತಿರ್ದೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಅಯ್ಯಾ, ಕಾಮ ಕಾಡಿತ್ತು ಕ್ರೋಧ ಕೊಂದಿತ್ತು ಆಮಿಷ ತಾಮಸಂಗಳೆಳವುತ್ತಿವೆ. ಕರುಣಮಾಡಾ ಹರಹರಾ ಮಹಾದೇವ ಕರುಣಮಾಡಾ ಶಿವಶಿವ ಮಹಾದೇವ ಕರುಣಮಾಡಾ ದೆಸೆಗೆಟ್ಟ ಪಶುವಿಂಗೊಮ್ಮೆ ಕರುಣಮಾಡಾ ವಶವಲ್ಲದ ಪಶುವಿಂಗೊಮ್ಮೆ ಕರುಣಮಾಡಾ ನೀವಲ್ಲದೆ ಬಲ್ಲವರಿಲ್ಲ ಕರುಣಮಾಡಾ ಅನ್ಯವ ನಾನರಿಯೆ ನಿಮ್ಮ ಪಾದವನುರೆ ಮಚ್ಚಿದೆ, ಎನ್ನ ಕಪಿಲಸಿದ್ಧಮಲ್ಲಿಕಾರ್ಜುನಯ್ಯ ತಂದೆ.
--------------
ಸಿದ್ಧರಾಮೇಶ್ವರ
ಅಯ್ಯಾ, ಹಲವು ದೇಶಕೋಶಗಳು, ಹಲವು ತೀರ್ಥಕ್ಷೇತ್ರಂಗಳು, ಹಲವು ಸ್ತ್ರೀಯರ ಅಂದಚಂದಗಳು, ಹಲವು ತೇರು ಜಾತ್ರೆಗಳು, ಹಲವು ಆಟಪಾಟಗಳು, ಹಲವು ಅರಿವೆ ಆಭರಣಗಳು, ಹಲವು ಆನೆ ಕುದುರೆ ಅಂದಳಗಳು, ಹಲವು ಚಿತ್ರವಿಚಿತ್ರ ಛತ್ರ ಚಾಮರಗಳು, ಹಲವು ಹಣ್ಣು ಫಲಾದಿಗಳು, ಹಲವು ಪತ್ರೆ ಪುಷ್ಪಂಗಳು, ಹಲವು ಮೆಟ್ಟುವ ಚರವಾಹನ ಮೊದಲಾಗಿ ನೋಡಿದಾಕ್ಷಣವೇ ದೀಪಕ್ಕೆ ಪತಂಗ ಎರಗುವಂತೆ, ಹಲವು ಪ್ರಾಣಿಗಳಿಗೆ ತಿಗಳ ಎರಗುವಂತೆ, ಮೀನಿಗೆ ಗುಂಡುಮುಳುಗನಪಕ್ಷಿ ಎರಗುವಂತೆ, ಹಲವ ಹಂಬಲಿಸಿ, ಕಂಡುದ ಬಿಡದ ಮುಂಡೆ ಪಿಶಾಚಿಯಂತೆ, ಜನ್ಮಾಂತರವೆತ್ತಿ ತೊಳಲಿತಯ್ಯ ಎನ್ನ ನೇತ್ರೇಂದ್ರಿಯವು. ಇಂಥ ಕರ್ಮಜಡ ಜೀವರ ಸಂಗದಿಂದ ಕೆಟ್ಟೆ ಕೆಟ್ಟೆ. ಶಿವಧೊ ಶಿವಧೊ ಎಂದು ಮೊರೆಯಿಟ್ಟೆನಯ್ಯ. ದೇವ ನಿಮ್ಮ ಕೃಪಾದೃಷ್ಟಿಯಿಂದ ನೋಡಿ ನಿಮ್ಮ ಸದ್ಭಕ್ತೆ ಶಿವಶರಣೆ ಅಕ್ಕನೀಲಾಂಬಿಕೆ ತಾಯಿಗಳ ತೊತ್ತಿನ ತೊತ್ತು ಸೇವೆಯ ಮಾಡುವ ಗೌಡಿಯ ಚರಣವ ಏಕಚಿತ್ತದಿಂದ ನೋಡಿ ಸುಖಿಸುವಂತೆ ಮಾಡಯ್ಯ. ಎನ್ನಾಳ್ದ ಶ್ರೀಗುರುಲಿಂಗಜಂಗಮವೆ. ಹರಹರ ಶಿವಶಿವ ಜಯಜಯ ಕರುಣಾಕರ, ಮತ್ಪ್ರಾಣನಾಥ ಮಹಾ ಶ್ರೀಗುರುಸಿದ್ಧಲಿಂಗೇಶ್ವರ.
--------------
ಬಸವಲಿಂಗದೇವ
ಅಯ್ಯಾ, ಗುರುದ್ರವ್ಯ, ಗಣದ್ರವ್ಯ, ಭಕ್ತದ್ರವ್ಯ, ಚರದ್ರವ್ಯ, ಪರದ್ರವ್ಯ, ರಾಜದ್ರವ್ಯ, ತಂದೆ-ತಾಯಿ ಬಂಧು-ಬಳಗ ಭಾವ-ಮೈದುನ ನಂಟುತನದ ದ್ರವ್ಯ, ಕುಂತ ನಿಂತ ಸಹಾಸದ್ರವ್ಯ, ನೋಡಕೊಟ್ಟದ್ರವ್ಯ, ನೂರೊಂದುಕುಲ ಹದಿನೆಂಟು ಜಾತಿಯ ದ್ರವ್ಯ, ಬೀದಿ ಬಾಜಾರದಲ್ಲಿ ಬಿದ್ದ ದ್ರವ್ಯ, ಹಾದಿಪಥದಲ್ಲಿ ಬಿದ್ದ ದ್ರವ್ಯ, ಹಕ್ಕಿಪಕ್ಕಿ ತಂದಿಟ್ಟ ದ್ರವ್ಯ, ಮದುವೆ ಶುಭಶೋಭನದಾಸೋಹದ ದ್ರವ್ಯ ಮೊದಲಾಗಿ ಕಳ್ಳಕಾಕರ ಸಂಗದಿಂದ ಚೋರತನದಿಂದಪಹರಿಸಿ, ಜನ್ಮ ಜನ್ಮಾಂತರದಲ್ಲಿ ಭವಪಾತಕಕ್ಕೆ ಗುರಿಯಾಯಿತಯ್ಯ ಎನ್ನ ಪಾಣೇಂದ್ರಿಯವು. ಇಂಥ ಅಜ್ಞಾನದಿಂದ ತೊಳಲುವ ಜನ್ಮ ಜಡತ್ವವನಳಿದುಳಿದು ನಿಮ್ಮ ಸದ್ಭಕ್ತ ನಿಜಶರಣ ದೇವರದಾಸಿಮಯ್ಯನ ದಾಸಿಯ ಪಾದವನೊರಸಿ ಬಾಳುವಂತೆ ಮಾಡಯ್ಯ ಕರುಣಾಳಿ ಎನ್ನಾಧಾರಮೂರ್ತಿ ಶ್ರೀಗುರುಲಿಂಗಜಂಗಮವೆ ಹರಹರ ಶಿವಶಿವ ಜಯಜಯ ಕರುಣಾಕರ, ಮತ್ಪ್ರಾಣನಾಥ ಮಹಾ ಶ್ರೀಗುರುಸಿದ್ಧಲಿಂಗೇಶ್ವರ.
--------------
ಬಸವಲಿಂಗದೇವ
ಅಯ್ಯಾ, ಮತ್ತೊಂದು ವೇಳೆ ಕಾಮವಿಕಾರದಿಂದ ತೊಳಲಿಸಿತಯ್ಯ, ಕ್ರೋಧದ ಸಂದಿನಲ್ಲಿ ಕೆಡಹಿತಯ್ಯ. ಲೋಭದ ಪಾಶದಲ್ಲಿ ನೂಂಕಿತಯ್ಯ. ಮೋಹಮದಮತ್ಸರದ ಬಲೆಯಲ್ಲಿ ಸಿಲ್ಕಿಸಿತಯ್ಯ. ಸತ್ವರಜತಮವೆಂಬ ತ್ರಿಗುಣಂಗಳಲ್ಲಿ ನುಗ್ಗುನುರಿ ಮಾಡಿತಯ್ಯ. ಗಂಧ ರಸ ರೂಪು ಸ್ಪರ್ಶನ ಶಬ್ದ ಮೊದಲಾದ ಸಮಸ್ತ ವಿಷಯದಲ್ಲಿ ಕಂದಿಕುಂದಿಸಿತಯ್ಯ. ಇಂಥ ದುರಾಚಾರಿ ದುರ್ಜೀವ ಮನವ ಎಂದಿಗೆ ಪರಿಹರಿಸಿಯೊ ? ಶ್ರೀಗುರುಲಿಂಗಜಂಗಮವೆ, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಮಹಾಶ್ರೀಗುರುಸಿದ್ಧಲಿಂಗೇಶ್ವರ.
--------------
ಬಸವಲಿಂಗದೇವ
ಕಾಮ ಕಾಡಿತು, ಕ್ರೋಧ ಕೊಂದಿತು, ಆಮಿಷವೆನ್ನನೆಳೆವುಕ್ಕಿದೆ. ಕರುಣ ಮಾಡಾ ಹರಹರ ಮಹಾದೇವಾ, ಕರುಣ ಮಾಡಾ ಶಿವಶಿವ ಮಹಾದೇವಾ. ಕರುಣ ಮಾಡಾ ದೆಸೆಗೆಟ್ಟ ಪಶುವಿನೊಮ್ಮೆ, ಕರುಣ ಮಾಡಾ ವಶವಲ್ಲದ ಶಿಶುವಿಂಗೊಮ್ಮೆ. ಕರುಣ ಮಾಡಾ ಅನ್ಯವನ್ನು ನಾನರಿಯೆ. ನಿಮ್ಮ ಪಾದವನುರೆ ಮಚ್ಚಿದೆನು, ಎನ್ನ ಕಪಿಲಸಿದ್ಧಮಲ್ಲಿನಾಥಯ್ಯ ತಂದೆ.
--------------
ಸಿದ್ಧರಾಮೇಶ್ವರ
ಅಂಬರದೇಶದ ಕುಂಭ ಕೋಣೆಯೊಳಗೆ ಜಂಬುಲಿಂಗಪೂಜೆಯ ಸಂಭ್ರಮವ ನೋಡಾ ! ಅಂಬುಜಮುಖಿಯರು ಆರತಿಯನೆತ್ತಿ ಶಂಭು ಶಿವಶಿವ ಹರಹರ ಎನುತಿರ್ಪರು ನೋಡಾ ! ತುಂಬಿದ ಹುಣ್ಣಿಮೆಯ ಬೆಳದಿಂಗಳು ಒಂಬತ್ತು ಬಾಗಿಲಲ್ಲಿ ತುಂಬಿ ಹೊರಸೂಸುತಿರ್ಪುದು ನೋಡಾ ! ಈ ಸಂಭ್ರಮವನೇನ ಹೇಳುವೆನಯ್ಯಾ ಅಖಂಡೇಶ್ವರಾ !
--------------
ಷಣ್ಮುಖಸ್ವಾಮಿ
ಇನ್ನಷ್ಟು ... -->