ಅಥವಾ

ಒಟ್ಟು 108 ಕಡೆಗಳಲ್ಲಿ , 32 ವಚನಕಾರರು , 91 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಜ್ಜನವೆಂಬ ಮಾರ್ಗದಲ್ಲಿ ಒಬ್ಬ ಬಾಲೆಯು ನಿಂದು ನಿಜವ ತೋರುತಿರ್ಪಳು ನೋಡಾ. ಆ ನಿಜವ ಈ ಜನಂಗಳೇನು ಬಲ್ಲರಯ್ಯ ? ಅಜ ಹರಿ ಸುರ ನಾರದ ಮೊದಲಾದವರಿಗೆ ಅಗೋಚರವೆನಿಸಿತ್ತು ನೋಡಾ. ಸ್ವಜ್ಞಾನಿಯಾದ ಶರಣನು ಆ ನಿಜವ ನೋಡಬಲ್ಲನಯ್ಯಾ. ಆ ಬಾಲೆಯ ಅಂಗವ ಕೂಡಬಲ್ಲನಯ್ಯ. ಆ ಸಜ್ಜನವೆಂಬ ಮಾರ್ಗವ ಹತ್ತಬಲ್ಲನಯ್ಯ. ಇಂತಪ್ಪ ಶರಣಂಗೆ ನಮೋ ನಮೋ ಎನುತಿರ್ದೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಮಿಂಚುಬುಳು ಒಮ್ಮೆ ಪ್ರಚಂಡ ತೇಜೋಮಯ ಸೂರ್ಯಂಗೆ ಸರಿಯಾದಂದು, ಹರಿ ಹರಂಗೆ ಸರಿಯಹನು. ಕಹಿಬೇವಿನ ಕೊರಡು ಬಾವನ್ನ ಶ್ರೀಗಂಧಕ್ಕೆ ಸರಿಯಾದಂದು, ವಿರಿಂಚಿ ಗಿರೀಶಂಗೆ ಸರಿಯಹನು. ಅಜ್ಞಾನ ಸುಜ್ಞಾನಕ್ಕೆ ಸರಿಯಾದಂದು, ವಜ್ರಪಾಣಿ ಮೊದಲಾದ ದೇವ ದಾನವ ಮಾನವರು ಶೂಲಪಾಣಿಗೆ ಸರಿಯಹರು. ಏನ ಹೇಳುವೆ, ಅಜ್ಞಾನಿ ಜನರ ಅಜ್ಞಾನಪ್ರಬಲ ಚೇಷ್ಟೆಯನು ? ಅದೆಂತೆಂದಡೆ: ಖದ್ಯೋತೋಯದಿ ಚಂಡಭಾನು ಸದೃಶಸ್ತುತ್ಯೋ ಹರಿಃ ಶಂಭುನಾ ಕಿಂ ಕಾಷ್ಠಂ ಹರಿಚಂದನೇನ ಸದೃಶಂ ತುಲ್ಯೋಹಮೀಶೇನ ಚ | ಅಜ್ಞಾನಂ ಯದಿ ವೇದನೇನ ಸದೃಶಂ ದೇವೇನ ತುಲ್ಯೋ ಜನಾ ಕಿಂ ವಕ್ಷ್ಯೇ ಸುರಪುಂಗವಾ ಅಹಮಹೋಮೋಹಸ್ಯದುಶ್ಚೇಷ್ಟಿತಂ ನಿಮಗೆ ಸರಿಯೆಂಬವರಿಗೆ ನರಕವೆ ಗತಿಯಯ್ಯಾ, ಬಸವಪ್ರಿಯ ಕೂಡಲಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಕಡಿ[ಯೆ] ಕುಳ್ಳಿರಿಸಿದಲ್ಲಿ, ಕತ್ತಿಯನೆತ್ತಿ ಹೊಡೆ[ಯೆ] ಹೊಡೆ[ಯೆ] ಬದುಕಿದವರುಂಟು, ತಲೆಯ ಕಡಲ ನಡುವೆ ಹಡಗೊ[ಡೆ]ದು ಹಲಗೆಯ ಹಿಡಿದು ತಡಿಗೆ ಸೇರಿ ಬದುಕಿದವರುಂಟು, ತಲೆಯ ಎನ್ನೊಡೆಯ ಕೂಡಲಸಂಗಮದೇವ ಬರೆದ ಬರಹವ ತೊಡೆಯಬಲ್ಲರೆ ಹರಿ ಸುರ ಬ್ರಹ್ಮಾದಿಗಳು.
--------------
ಬಸವಣ್ಣ
ಗುರುಭಕ್ತರಾದವರು ತ್ರಿಕಾಲದಲ್ಲಿ ಹರಸ್ಮರಣೆಯಲ್ಲದೆ ಹರಿಯೆಂದು ನುಡಿಯಲಾಗದು. ಹರಿ ಶಬ್ದವ ಕೇಳಲಾಗದು, ಹರಿಯ ರೂಪವ ನೋಡಲಾಗದು. ಅದೇನು ಕಾರಣವೆಂದೊಡೆ : ಪೂರ್ಣಾಯುಷ್ಯವು, ವಿಮಲಮತಿಯು, ಸತ್ಕೀರ್ತಿಯು, ಮಹಾಬಲವು, ಕೆಟ್ಟು ಹೋಗುತ್ತಿಹುದು ನೋಡಾ ! ಅದೆಂತೆಂದೊಡೆ :ಬ್ರಹ್ಮಾಂಡಪುರಾಣೇ ``ನ ಪ್ರದೋಷೇ ಹರಿಂ ಪಶ್ಯೇತ್ ಯದಿ ಪಶ್ಯೇತ್ ಪ್ರಮಾದತಃ | ಚತ್ವಾರಿ ತಸ್ಯ ನಶ್ಯಂತಿ ಆಯುಃ ಪ್ರಜ್ಞಾ ಯಶೋ ಬಲಮ್ ||'' ಎಂದುದಾಗಿ, ಸತ್ತು ಹುಟ್ಟುವ ಹರಿಗೆ ಇನ್ನೆತ್ತಣ ದೇವತ್ವ ಹೇಳಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ನೀರ ನೆಳಲನೆ ಕಡಿದು, ಮೇರುವೆಂಬುದ ನುಂಗಿ, ಶಾರದೆಯೆಂಬವಳ ಬಾಯ ಕಟ್ಟಿ, ಕಾರ ಮೇಘದ ಬೆಳಸ ನೀರ ಹರಿ ನುಂಗಲು ದಾರಿ ಮೃತ್ಯುವ ನುಂಗಿ ನಗುತ್ತಿದ್ದಿತು. ನಾರಿಯ ಬೆನ್ನ ಮೇಲೆ ಗಂಡ ಬಂದು ಕುಳ್ಳಿರಲು, ನೀರ ಹೊಳೆಯವರೆಲ್ಲರ ಕೊಡನೊಡೆದವು. ಕಾರೆಯ ಮುಳ್ಳೆರ್ದು ಕಲಿಗಳನಟ್ಟಿ ಸದೆವಾಗ, ಸೋರುಮುಡಿಯಾಕೆ ಗೊರವನ ನೆರೆದಳು. ಬಳ್ಳು ಆನೆಯ ನುಂಗಿ, ಹೊಳೆ (ಒಳ್ಳೆ ?) ಸಮುದ್ರವ ಕುಡಿದು, ಕುಳ್ಳಿರ್ದ ಶಿಶು ಹಲಬರನೆಯ್ದೆ ನುಂಗಿ, ಅತ್ತೆ ಅಳಿಯನ ಕೂಡಿ ಕೋಡಗವ ಹಡೆದಲ್ಲಿ, ಹತ್ತಿರಿರ್ದ ಹಾವಾಡಿಗನನು ಅದು ನುಂಗಿತ್ತು! ಕಪ್ಪೆ ಸರ್ಪನ ಹಿಡಿದು ಒತ್ತಿ ನುಂಗುವಾಗ, ಕಪ್ಪೆಯ ಕೊರಳಲ್ಲಿ ಬಿಳಿದು ಕೆಂಪಡರಲು, ನಿಶ್ಚಿಂತವಾಯಿತ್ತು ಗುಹೇಶ್ವರನ ಶರಣಂಗೆ, ಕಟ್ಟಿದಿರ ಕರ್ಪುರದ ಜ್ಯೋತಿಯಂತೆ!
--------------
ಅಲ್ಲಮಪ್ರಭುದೇವರು
ಇಷ್ಟಲಿಂಗದ ಕೂಟ, ಪ್ರಾಣಲಿಂಗದ ಸಂಗ, ಭಾವಲಿಂಗದ ಸಮರಸವ ಬಲ್ಲವರಾರೊ ಅವರನೆನ್ನ ಸದ್ಗುರು ಅನುಮಿಷೇಶ್ವರನೆಂಬೆ. ಆ ನಿಜಶಿವಯೋಗವ ಮರೆಯದವರಿಗೆ ಅಣಿಮಾದಿ ಅಷ್ಟೈಶ್ವರ್ಯದೊಡನೆ ಕೂಡಿದ ಸಕಲ ಲಕ್ಷಣ ಸಂಪನ್ನರು ಸರಿಯಲ್ಲ. 66 ಸಿದ್ಧಿಗಳೊಡನೆ ಕೂಡಿದ ಸಿದ್ಧ ಪುರುಷರೂ ಸರಿಯಲ್ಲ. ಲಾವಣ್ಯದೊಡನೆ ಕೂಡಿದ ಜಯಂತ ಮನ್ಮಥ ವಸಂತರೂ ಸರಿಯಲ್ಲ. ಕಲ್ಪವೃಕ್ಷ ಕಾಮಧೇನು ಚಿಂತಾಮಣಿ ಭದ್ರಪೀಠ ಮೊದಲಾದ ಮಹದೈಶ್ವರ್ಯವುಳ್ಳ ದೇವೇಂದ್ರನೂ ಸರಿಯಲ್ಲ. ದೇವೇಂದ್ರನ ಮೇಲೆ ಕೋಟ್ಯನುಕೋಟಿ ಮೊದಲಾದ ಹರಿ ವಿರಿಂಚ್ಯಾದಿಗಳ ಸಂಪದವೂ ಸರಿಯಲ್ಲ. ಶ್ರುತಿ ವಿದ್ಯದೊಡನೆ ಕೂಡಿದ ವ್ಯಾಸ ದಕ್ಷಾದಿಗಳೂ ಸರಿಯಲ್ಲ. ಸಪ್ತಕೋಟಿ ಮಹಾಮಂತ್ರಂಗಳ ಬಲ್ಲಂತಹ ಮಹಾಮುನಿಗಳೂ ಸರಿಯಲ್ಲ. ಮಹಾರಾಜಯೋಗದೊಡನೆ ಕೂಡಿದ ಮನುಮಾಂಧಾತರೂ ಸರಿಯಲ್ಲ. ಮಹಾಲಿಂಗದೊಡನೆ ಕೂಡಿದ ಶಾಂಭವಯೋಗಕ್ಕೆ ಆವಾವ ಪದವೂ ಸರಿಯಲ್ಲ. ಈ ಶಾಂಭವಯೋಗವಾರಲ್ಲಿ ಸ್ಥಾವರವಾಗಿದ್ದಿತ್ತು, ಅವರಲ್ಲಿ ಸರ್ವಲಕ್ಷಣಂಗಳು, ಸರ್ವ ವಿಚಿತ್ರಂಗಳು, ಸರ್ವ ಸುಖಂಗಳು ಸರ್ವ ಭಕ್ಷ್ಯಂಗಳು, ಸರ್ವೈಶ್ವರ್ಯಂಗಳು ಸರ್ವ ಪದಂಗಳು ಸರ್ವ ಸಿದ್ಧಿಗಳು ಸರ್ವ ಕ್ರಮಂಗಳು ಸರ್ವ ಕರ್ತೃತ್ವಮುಂಟು. ಪ್ರಕೃತಿಯೋಗವಂ ಮಾಡುವ ನರಸುರಾಸುರರು ಮೂಲಪ್ರಕೃತಿಯೋಗವ ಮಾಡುವ ಮನು ಮಾಂಧಾತರು ತೃಣ ಮಾತ್ರವು. ನಿತ್ಯನಿಜಶಿವಸ್ವರೂಪವಾದ ಶಾಂಭವ ಯೋಗಿಗಳಿಗೆ ಸರ್ವಯೋಗಂಗಳು ತೃಣಮಾತ್ರವು_ಗುಹೇಶ್ವರಲಿಂಗವನರಿದರಾಗಿ.
--------------
ಅಲ್ಲಮಪ್ರಭುದೇವರು
ಆದಿ ಮಧ್ಯ ಅವಸಾನವರಿಯಬೇಕೆಂಬರು, ಆದಿಯಲ್ಲಿ ನಿಂದು, ಮಧ್ಯದಲ್ಲಿ ಕಂಡು, ಅವಸಾನದಲ್ಲಿ ಅರಿದು ಇರಬೇಕೆಂಬರು. ಅರಿವುದು ಒಂದೊ ಮೂರೊ ಎಂದಲ್ಲಿ ನಿಂದಿತ್ತು. ನಿಂದುದ ಕಳೆದು ಸಂದ ಹರಿ, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಬಸವಣ್ಣನ ಶೃಂಗದಲ್ಲಿ ತುಂಬುರ ನಾರದರು, ಬಸವಣ್ಣನ ಲಲಾಟದಲ್ಲಿ ವೀರಗಣಂಗಳು, ಬಸವಣ್ಣನ ನಯನದಲ್ಲಿ ಸೂರ್ಯಚಂದ್ರರು, ಬಸವಣ್ಣನ ಕರ್ಣದಲ್ಲಿ ಗಂಗೆವಾಳುಕಸಮರುದ್ರರು, ಬಸವಣ್ಣನ ನಾಸಿಕದಲ್ಲಿ ವಾಯು, ಬಸವಣ್ಣನ ದಂತದಲ್ಲಿ ಭೃಂಗೀಶ್ವರದೇವರು, ಬಸವಣ್ಣನ ಕೊರಳಲ್ಲಿ ಈರೇಳು ಭುವನಂಗಳು, ಬಸವಣ್ಣನ ಅಂಡದಲ್ಲಿ ಅಷ್ಟಷಷ್ಟಿ ತೀರ್ಥಂಗಳು, ಬಸವಣ್ಣನ ಬಲದೊಡೆಯಲ್ಲಿ ಅಜ, ಹರಿ, ಸರಸ್ವತಿ, ಪಂಚನದಿ, ಮಹಾಗಂಗೆ, ಬಸವಣ್ಣನ ಮಣಿಪಾದದಲ್ಲಿ ದೇವಲೋಕದ ದೇವಗಣಂಗಳು, ಬಸವಣ್ಣನ ಕಿರುಗೊಳಗಿನಲ್ಲಿ ಸಮಸ್ತಸಮುದ್ರಂಗಳು. ಈ ಸಪ್ತಸಮುದ್ರಂಗಳೊಳಗಿಹ ಸಕಲಪ್ರಾಣಿಗಳಿಗೆ ಸಂಕೀರ್ಣತೆಯಾದೀತೆಂದು, ಬಾಲದಂಡದಲೆತ್ತಿ ತಡಿಗೆ ಸೇರಿಸಿದನು ನಮ್ಮ ಬಸವಣ್ಣನು-ಇದು ಕಾರಣ, ನಾಗಲೋಕದ ನಾಗಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ಮತ್ರ್ಯಲೋಕದ ಮಹಾಗಣಂಗಳು ಕೊಂಬುದು ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳ ಕೊಂಬುದು ಬಸವಣ್ಣನ ಪ್ರಸಾದ. ರುದ್ರಲೋಕದ ರುದ್ರಗಣಂಗಳು ಕೊಂಬುದು ಬಸವಣ್ಣನ ಪ್ರಸಾದ.- ಇಂತು ನಮ್ಮ ಬಸವಣ್ಣನ ಪ್ರಸಾದವನುಂಡುಟ್ಟು ಕೊಂಡು ಕೊಟ್ಟು ಅನ್ಯದೈವಂಗಳ ಹೊಗಳುವ ಕುನ್ನಿಗಳನೇನೆಂಬೆ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಹರಿ ನಾನೆಂದಲ್ಲಿ ಭವಮದಗಜಕ್ಕೆ ಹರಿಯಲ್ಲದೆ, ದಶಾವತಾರದ ಹರಿಯಲ್ಲ ನೋಡಾ. ಹರ ನಾನೆಂದಲ್ಲಿ ಸರ್ವಭಾವನಾವಿರಹಿತ ನಾನಲ್ಲದೆ, ಪಂಚಕೃತ್ಯಾದ್ಥಿಕಾರಿ ಹರನಲ್ಲ ನೋಡಾ. ನರ ನಾನೆಂದಲ್ಲಿ ಉತ್ಪತ್ತಿವಿರಹಿತ ನಾನಲ್ಲದೆ, ಉತ್ಪತ್ತ್ಯದ್ಥಿಕಾರಿ ನರ ನಾನಲ್ಲ ನೋಡಾ. ತೋರುವ ಸಚರಾಚರ ನಾನೆಂದಲ್ಲಿ ಜಡಾಜಡ ನಾನಲ್ಲದೆ, ಜನನ ಮರಣ ಪೊದ್ದಿ ಸಚರಾಚರ ನಾನಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ನೋಡಿರೇ ನೋಡಿರೇ ಪೂರ್ವದತ್ತವ; ವರುಣ ಹೆಳವ, ರವಿ ಕುಷ್ಟ, ಶುಕ್ರನಂಧಕ, ಶನಿಗೆ ಸಂಕಲೆ, ಬಲಿಗೆ ಬಂಧನ, ಸೀತೆಗೆ ಧ್ರೌಪದಿಗೆ ಸೆರೆ, ಹರಿ ಹಂದಿಯಾದ, ಅರುಹಂಗೆ ಲಜ್ಜೆ, ಬ್ರಹ್ಮನ ಶಿರಹೋಯಿತ್ತು, ಬಲ್ಲಿದನೆಂಬವನ ಕೊಡೆವಿಡಿಸದೆ ವಿದ್ಥಿ ಜತ್ತಕನೆಂಬವನ ಕತ್ತೆಯ ಮಾಡಿತ್ತು. ದಶಮುಖನ ನಾಯ ಡೋಣಿಯಲ್ಲಿ ಉಣಿಸಿತ್ತು. ದೇವೇಂದ್ರನ ಮೈಯ್ಯ ನಾಣುಗೆಡಿಸಿತ್ತು. ಶೂದ್ರಕನ ತಲೆ ಕಂಚಿಯಾಲದಲ್ಲಿ ನೇರಿತ್ತು. ಕೂಡಲಸಂಗಮದೇವಯ್ಯಾ, ನೀ ಮಾಡಿದ ಮಾಯೆಯನಂತರನಾಳಿಗೊಂಡಿತ್ತು.
--------------
ಬಸವಣ್ಣ
ಜಂಗಮಕ್ಕೆ ನೀಡಿದ ತೃಪ್ತಿ ಜಗಕೆಲ್ಲ ತೃಪ್ತಿಯಾಯಿತ್ತು ಕಾಣಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಹರಿ ಸುರ ಬ್ರಹ್ಮಾದಿಗಳಿಗೆಲ್ಲ ತೃಪ್ತಿಯಾಯಿತ್ತು ಕಾಣಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಸ್ವರ್ಗ ಮತ್ರ್ಯ ಪಾತಾಳ ಸಚರಾಚರಂಗಳಿಗೆಲ್ಲ ತೃಪ್ತಿಯಾಯಿತ್ತು ನೋಡಿರೋ ! ಜಂಗಮಕ್ಕೆ ನೀಡಿದ ತೃಪ್ತಿ ಸಾಕ್ಷಾತ್ಪರಬ್ರಹ್ಮ ಪರಶಿವಂಗೆ ತೃಪ್ತಿಯಾಯಿತ್ತು ನೋಡಿರೋ ! ಅದೆಂತೆಂದೊಡೆ : ``ಸುರತೃಪ್ತಂ ಬುಧಸ್ತೋಮಂ ಮಮ ತೃಪ್ತಂತು ವೈಷ್ಣವಮ್ | ಜಂಗಮಂತು ಜಗತ್ ತೃಪ್ತಂ ಶಿವತೃಪ್ತಂ ತು ಪದ್ಮಿನಿ ||'' ಎಂದುದಾಗಿ, ಇಂತಪ್ಪ ಜಂಗಮ ತೃಪ್ತಿಯಾದಡೆ ನಮ್ಮ ಅಖಂಡೇಶ್ವರಲಿಂಗ ತೃಪ್ತಿಯಾಯಿತ್ತು ನೋಡಿರೋ !
--------------
ಷಣ್ಮುಖಸ್ವಾಮಿ
ಹರಿ ಹರನೊಂದೆ ಎಂದಡೆ, ಸುರಿಯುವೆ ಬಾಯಲಿ ಬಾಲಹುಳುಗಳು ಹರಿಗೆ ಹತ್ತು ಪ್ರಳಯ, ಬ್ರಹ್ಮಂಗನಂತ ಪ್ರಳಯ, ಹರಂಗೆ ಪ್ರಳಯ ಉಂಟೆಂಬುದ ಬಲ್ಲಡೆ ನೀವು ಹೇಳಿರೆ ಪ್ರಳಯ ಪ್ರಳಯ ಅಂದಂದಿಂಗೆ ಹಳೆಯ, ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಹರಿ ಹತ್ತು ಭವ ಬಂದ; ಸಿರಿಯಾಗಿ ತೊಳಲಿತೈ ಉರಗ ಖೇಚರರನ್ನು ಒರಸಿತಯ್ಯಾ! ಕರುಣಾಕರನು ಕಪಿಲಸಿದ್ಧಮಲ್ಲೇಶ್ವರನ ಶರಣರಿಗೆ ಅಂಜಿ ಓಡಿದುದು ಮಾಯೆ.
--------------
ಸಿದ್ಧರಾಮೇಶ್ವರ
ಪಿಂಡವಾಯಿತ್ತು ನಾದಬಿಂದು ಕಳೆಗಳ ಕೂಡಿ ಕೊಂಡು ಸ್ವರೂಪ ತತ್ವವಿಡಿದು ಚೆನ್ನಾಗಿ ಧರೆಯಿಂದಲೆದು ಕರ್ಮೇಂದ್ರಿಯಂಗಳ ಜನನ ಸರಸದಿಂದ ಪಂಚವಿಷಯಂಗಳುತ್ಪತ್ಯ ಮೇಣ್ ಉರಿಯಿಂದ ಬುದ್ಧೀಂದ್ರಿಯಂಗಳಾದವು ನೋಡಿರೆ. ಮರುತನಿಂದೈದು ಪ್ರಾಣವಾಯುಗಳ ಜನನ ಹಿರಿದಪ್ಪ ಗಗನದಲ್ಲಿ ಚತುರ ಕರಣವು ಆತ್ಮ ನೆರೆ ಕೂಡಿ ಪಂಚವಿಂಶತಿತತ್ವವಿಡಿದು. | 1 | ಆರೂರ್ಮೆ ಏಳುಧಾತೈದುವಿಂಶತಿ ಅಂಶ ಈ ಮೂರು ತನುಗುಣವು ಇಪ್ಪತ್ತೈದು ಎರಡಂಗ ಆರು ಚಕ್ರವು ಕಮಲದೈವತ್ತೊಂದರಕ್ಷರಗಳಿಂ ವಾರಿಜ ದಾಕ್ಷಾಯಣಿ ಹರಿ ರುದ್ರ ಈಶ್ವರ ಮೀರಿದ ಸದಾಶಿವನದ್ಥಿದೈವಂಗಳು, ನವದ್ವಾರ ಚೆನ್ನಾಗಿ ಸಕಲಾರಂಭತತ್ವವಿಡಿದು. | 2 | ಮೂರು ಕರ್ಮಗಳು ಏಳ್ನೂರು ಎಪ್ಪುತ್ತು ಲೊ ಓರಣದ ಕರಣದ ಕರಣ ಅರುವತ್ತಾರು ಕೋಟಿಯಂ ಮೂ [ರಾ]ರು ಗುಣ ಅಂತರಂಗದಷ್ಟವೇದವು ಸಹಿತದ ಮೂರು ಮಲ ದಶವಾಯು ಅಂಗದೊಳು ಚರಿಸುತಿಹ ಮಾರುತ ಮನ ಮಂತ್ರಿ ಪ್ರಾಣ ನಾಯಕನರಸು ಶ ರೀರ ಜಗದೊಳುತ್ಪತ್ಯವಾಗಿದೆ ದೇವ. | 3 | ನೆಲ ನೀರು ಶಿಲೆಯಿಂದ ಬಿತ್ತಿಗಟ್ಟಿಯೆ ಅದನು ಸಲೆ ಗೋಮಯದಿ ಶುದ್ಧಮಾಡಿ ಸಾರಿಸುವಂತೆ ಎಲು ಚರ್ಮ ನರ ತೊಗಲು ಮಾಂಸ ಮಜ್ಜೆಯ ಕೂಡಿಯೆ ಚೆಲುವಾಗಿ ಈ ಕಾಯ ಗಾಳಿ ತುಂಬಿ ವೃಕ್ಷ ಉಲಿವಂತೆ ಶಿವಬೀಜವ ಚೈತನ್ಯದಿಂದಲಿ ಇಳೆಗೆ ತೋರುತಿರೆ ನೋಡಿದ ತಿಳಿಯಿರಣ್ಣ. | 4 | ಆದಿ ಮಧ್ಯ ಅಂತ್ಯ ಭಾಂಡದೊಳು ಶಿವ ತಾನೆ ಆದಿಯಾಗಿಯೆ ನೆಲದ ಮರೆಯಲ್ಲಿಹ ಧನದಂತೆ ಭೇದಿಸದೆಯಿಪ್ಪ ಭೇದವನಾರು ಅರಿಯರಲ್ಲ ಅಭೇದ್ಯಗುರು ಪಡುವಿಡಿ ಸಿದ್ಧಮಲ್ಲಿನಾಥನ ಪಾದವಿಡಿದ ತನುವು ಸುಕೃತದೇಹಿಯಾಗಿ ಮೇದಿನಿಗೆ ತೋರುತಿದೆ ಶಿವಶರಣರಿದ ತಿಳಿಯರೆ. | 5 |
--------------
ಹೇಮಗಲ್ಲ ಹಂಪ
`ಏಕ ಏವ ರುದ್ರೋ ನ ದ್ವಿತೀಯಃ' ನೆಂದು ಶ್ರುತಿ ಸಾರುತ್ತಿರೆ, ಮರಳಿ ವಿಷ್ಣುವಲ್ಲದೆ ದೈವವಿಲ್ಲವೆಂಬಿರಿ. ಅಚ್ಯುತಂಗೆ ಭವವುಂಟೆಂಬುದಕ್ಕೆ ಮತ್ಸ್ಯಕೂರ್ಮವರಾಹನಾರಸಿಂಹಾವತಾರವೆ ಸಾಕ್ಷಿ. ಹರಿ ಹರನ ಭೃತ್ಯನೆಂಬುದಕ್ಕೆ ರಾಮೇಶ್ವರಾದಿಯಾದ ಪ್ರತಿಷ್ಠೆಯೇ ಸಾಕ್ಷಿ. ಇಂತಪ್ಪ ಹರಿಯನು ಹರಂಗೆ ಸರಿಯೆಂದು ನುಡಿವುತ್ತಿಹ ವಿಪ್ರರ ಬಾಯಲ್ಲಿ ಸುರಿಯವೆ ಬಾಲಹುಳುಗಳು. ಹರಿಗೆ ಹತ್ತು ಪ್ರಳಯ, ಬ್ರಹ್ಮಂಗೆ ಅನಂತಪ್ರಳಯ. ನಮ್ಮ ಹರಂಗೆ ಪ್ರಳಯ ಉಂಟಾದರೆ, ಬಲ್ಲರೆ ನೀವು ಹೇಳಿರೆ ! ನಿಮ್ಮ ವೇದದಲ್ಲಿ ಹೇಳಿಸಿರೆ ! ಅರಿಯದಿರ್ದಡೆ ಸತ್ತ ಹಾಂಗೆ ಸುಮ್ಮನಿರಿರೆ. ಇದು ಕಾರಣ ನಮ್ಮ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರದೇವನೊಬ್ಬನೆ, ಎರಡಿಲ್ಲ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->