ಅಥವಾ

ಒಟ್ಟು 91 ಕಡೆಗಳಲ್ಲಿ , 40 ವಚನಕಾರರು , 87 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಮಾರ್ಜಾಲನ ಹೃದಯದಲ್ಲಿ ಮೂಷಕ ಮನೆಯ ಮಾಡಿ ಇದ್ದಿತ್ತು. ಅದಕ್ಕೆ ಮಣಿಮಾಡಂಗಳಿಂದ ಆಶ್ರಯವೊಂದು ಬಾಗಿಲು ಬೇರೆ. ಅದಕ್ಕೆ ಹೋಗಿ ಆಡುವ ನಾಟಕಸಾಲೆ. ಪವನನೆಂಬ ಸೂಳೆ ಅಘಟದಿಂದ ಆಡುತ್ತಿರಲಾಗಿ, ಕಾಲುಜಾರಿ ನೆಲಕ್ಕೆ ಬಿದ್ದಳು. ಬಿದ್ದ ಘಾತಕ್ಕೆ ಯೋನಿ ಒಡೆಯಿತ್ತು, ಮೊಲೆ ಹರಿದು, ಕಿವಿ ಕಿತ್ತು, ಕಣ್ಣು ಹಿಂಚುಮುಂಚಾಯಿತ್ತು. ನೋಡುವ ಅಣ್ಣಗಳ ಬಯಕೆ ಹರಿಯಿತ್ತು. ಯೋನಿ ಕಿತ್ತಲ್ಲಿ ಕೂಟಕ್ಕೆ ಸುಖವಿಲ್ಲ, ನೋಟಕ್ಕೆ ಬೆಂಬಳಿಯಿಲ್ಲ. ಪವನನ ಅಘಟ ಹೋಯಿತ್ತು, ಕಾಲನ ಕಮಟಕ್ಕೆ. ನೀ ಅಲೇಖನಾದ ಶೂನ್ಯ, ಇವರಾಟದ ಬೆಂಬಳಿಯ ಬಿಡಿಸು, ಕಲ್ಲಿನೊಳಗಿಂದ ಇತ್ತ ಬಾರಯ್ಯಾ.
--------------
ವಚನಭಂಡಾರಿ ಶಾಂತರಸ
ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ ಸಂದೇಹದಲ್ಲಿ ಮುಳುಗಿ. ಕಳವಳಿಸಿ ಕಾತರಿಸುವ ಅಣ್ಣಗಳಿರಾ, ನೀವು ಕೇಳಿರೆ, ಹೇಳಿಹೆನು. ಕಾಣಬಾರದ ಘನವ ಹೇಳಬಾರದಾಗಿ, ಹೇಳುವುದಕ್ಕೆ ನುಡಿಯಿಲ್ಲ, ನೋಡುವುದಕ್ಕೆ ರೂಪಿಲ್ಲ. ಇಂತಪ್ಪ ನಿರೂಪದ ಮಹಾಘನವು ಶರಣರ ಹೃದಯದಲ್ಲಿ ನೆಲೆಗೊಂಬುದಲ್ಲದೆ, ಈ ಜನನ ಮರಣಕ್ಕೊಳಗಾಗುವ ಮನುಜರೆತ್ತ ಬಲ್ಲರು ಆ ಮಹಾಘನದ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಾಮಿಗೆ ವ್ರತವುಂಟೆ, ನಿಃಕಾಮಿಗಲ್ಲದೆ? ಕ್ರೋದ್ಥಿಗೆ ವ್ರತವುಂಟೆ, ಸಮಾಧಾನಿಗಲ್ಲದೆ? ಲೋಬ್ಥಿಗೆ ವ್ರತವುಂಟೆ, ಉದಾರಿಗಲ್ಲದೆ? ಇಂತೀ ಕ್ಷಮೆ ದಮೆ ಶಾಂತಿ ಸಮಾಧಾನಸಂಪದ ಮುಂತಾಗಿ ಗುರುಲಿಂಗಜಂಗಮಕ್ಕೆ, ತನುಮನಧನದಲ್ಲಿ ನಿರತನಾಗಿ, ತನ್ನ ತ್ರಾಣಕ್ಕೆ ಇದ್ದಂತೆ ಚಿತ್ತಶುದ್ಧಾತ್ಮನಾಗಿ ಇಪ್ಪ ಮಹಾಭಕ್ತನೆ ಕೃತ್ಯವಿಲ್ಲದ ಶರಣ. ಆತನ ಪಾದ ಎನ್ನ ಹೃದಯದಲ್ಲಿ ಅಚ್ಚೊತ್ತಿದಂತಿಪ್ಪುದು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಅವರುವ ಎತ್ತುಕಟ್ಟುವ ಗೊತ್ತಾಗಿಪ್ಪನು.
--------------
ಅಕ್ಕಮ್ಮ
ಎನ್ನ ಘ್ರಾಣದಲ್ಲಿ ಆಚಾರಲಿಂಗವಾಗಿ ಮೂರ್ತಿಗೊಂಡನಯ್ಯಾ, ಬಸವಣ್ಣನು. ಎನ್ನ ಜಿಹ್ವೆಯಲ್ಲಿ ಗುರುಲಿಂಗವಾಗಿ ಮೂರ್ತಿಗೊಂಡನಯ್ಯಾ, ಚನ್ನಬಸವಣ್ಣನು ಎನ್ನ ನೇತ್ರದಲ್ಲಿ ಶಿವಲಿಂಗವಾಗಿ ಮೂರ್ತಿಗೊಂಡನಯ್ಯಾ, ಘಟ್ಟಿವಾಳ ಮುದ್ದಯ್ಯನು. ಎನ್ನ ತ್ವಕ್ಕಿನಲ್ಲಿ ಜಂಗಮಲಿಂಗವಾಗಿ ಮೂರ್ತಿಗೊಂಡನಯ್ಯಾ, ಸಿದ್ಧರಾಮಯ್ಯನು. ಎನ್ನ ಶ್ರೋತ್ರದಲ್ಲಿ ಪ್ರಸಾದಲಿಂಗವಾಗಿ ಮೂರ್ತಿಗೊಂಡನಯ್ಯಾ, ಮರುಳಶಂಕರದೇವರು, ಎನ್ನ ಹೃದಯದಲ್ಲಿ ಮಹಾಲಿಂಗವಾಗಿ ಮೂರ್ತಿಗೊಂಡನಯ್ಯಾ, ಪ್ರಭುದೇವರು. ಎನ್ನ ಸರ್ವಾಂಗದಲ್ಲಿ ಮೂರ್ತಿಗೊಂಡರು ಪ್ರಮಥರು. ಗವರೇಶ್ವರಲಿಂಗದಲ್ಲಿ ಸುಖಿಯಾಗಿ ಬದುಕಿದೆನು ಕಾಣಾ, ಮಡಿವಾಳ ಮಾಚಯ್ಯ.
--------------
ಮೇದರ ಕೇತಯ್ಯ
`ನಾನು ಭಕ್ತ, ನಾನು ಪ್ರಸಾದಿ ಎಂದು ವಿಪ್ರಕರ್ಮವ ಮಾಡುವೆ ಕರ್ಮೀ: ಲಿಂಗದೇವನ ಮುಟ್ಟಿ ಮಜ್ಜನಕ್ಕೆರೆವ ಕೈಯಲು ವಿಪ್ರನ ಕಾಲ ತೊಳೆವಡೆ ಲಿಂಗೋದಕ ಹೃದಯದಲ್ಲಿ, ವಿಪ್ರನ ಕಾಲ ತೊಳೆದ ನೀರು ಮಂಡೆಯ ಮೇಲೆ ! ಶ್ರುತ್ಯತ್ಕಟದುರಾಚಾರೀ ಯಜ್ಞಕೂಪಸಘಾತಕಃ ಉದ್ರೇಕೇಣ ಕೃತೇ ಶಾಂತೇ ವಿಪ್ರರೂಪೇಣ ರಾಕ್ಷಸಃ ಇದು ಕಾರಣ ಕೂಡಲಸಂಗಮದೇವಾ, ಇಂತಪ್ಪ ದುರಾಚಾರಿಗಳ ಮುಖವ ನೋಡಲಾಗದು.
--------------
ಬಸವಣ್ಣ
ಮಹಾಜ್ಞಾನಿ ಜಂಗಮಲಿಂಗ ತಾನು ಲೋಕಪಾವನವಾಗಿ ನಡೆನುಡಿಗಳರಿದಾಚರಿಸುವಲ್ಲಿ, ಜಿಹ್ವೆಯಲ್ಲಿ ಹುಸಿನುಡಿಯಿಲ್ಲದೆ ತನ್ನ ತಾ ನುಡಿಯುತಿರ್ದ ಕಾಣಾ. ಕಂಗಳಲ್ಲಿ ಬ್ಥಿನ್ನದೃಷ್ಟಿಯಿಲ್ಲದೆ ತನ್ನ ತಾ ನೋಡುತಿರ್ದ ಕಾಣಾ. ಶ್ರೋತ್ರದಲ್ಲಿ ಬ್ಥಿನ್ನಶಬ್ದವಿಲ್ಲದೆ ತನ್ನ ತಾ ಕೇಳುತಿರ್ದ ಕಾಣಾ. ತ್ವಕ್ಕಿನಲ್ಲಿ ಬ್ಥಿನ್ನ ಸೋಂಕಿಲ್ಲದೆ ತನ್ನ ತಾ ಸೋಂಕುತಿರ್ದ ಕಾಣಾ. ಘ್ರಾಣದಲ್ಲಿ ಬ್ಥಿನ್ನವಾಸನೆಯಿಲ್ಲದೆ ತನ್ನ ತಾನ್ವಾಸಿಸುತಿರ್ದ ಕಾಣಾ. ಹೃದಯದಲ್ಲಿ ಮಾಯಾಸುಖವಿಲ್ಲದೆ ತನ್ನ ತಾ ಸುಖದಲ್ಲಿರ್ದ ಕಾಣಾ. ಗುರುನಿರಂಜನ ಚನ್ನಬಸವಲಿಂಗಾ ಮತ್ತೆ ಮರಣವಿಲ್ಲದೆ ನಿಮ್ಮಲ್ಲಿ ತನ್ನೊಳೈಕ್ಯ ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ವಿಶ್ವಾಸನೋಟ ಜಾರಿದಡೆ ಜಾರುವನಯ್ಯಾ ಶ್ರೀಗುರುವು. ವಿಶ್ವಾಸನೋಟ ಜಾರಿದಡೆ ಜಾರುವನಯ್ಯಾ ಶಿವಲಿಂಗವು. ವಿಶ್ವಾಸನೋಟ ಜಾರಿದಡೆ ಜಾರುವನಯ್ಯಾ ಪರಮಜಂಗಮವು. ವಿಶ್ವಾಸನೋಟ ಜಾರಿದಡೆ ಜಾರುವವಯ್ಯಾ ಪಾದೋದಕ ಪ್ರಸಾದಂಗಳು. ಇಂತೀ ಪಂಚವಿಧವು ಪರಬ್ರಹ್ಮವೆಂದು ನಂಬಿದ ಭಕ್ತರ ಹೃದಯದಲ್ಲಿ ಹೆರೆಹಿಂಗದೆ ನಿರಂತರ ನೆಲೆಸಿರ್ಪನು ನಮ್ಮ ಅಖಂಡೇಶ್ವರನು.
--------------
ಷಣ್ಮುಖಸ್ವಾಮಿ
ಸ್ಥೂಲತನು ಸೂಕ್ಷ್ಮತನು ಕಾರಣತನು: ಸ್ಥೂಲತನುವಿನಲ್ಲಿ ಇಷ್ಟಲಿಂಗಪ್ರತಿಷ್ಠೆ, ಸೂಕ್ಷ್ಮತನುವಿನಲ್ಲಿ ಪ್ರಾಣಲಿಂಗಪ್ರತಿಷ್ಠೆ, ಕಾರಣತನುವಿನಲ್ಲಿ ತೃಪ್ತಿಲಿಂಗಪ್ರತಿಷ್ಠೆ. ಇಂತೀ ಸ್ಥೂಲ ಸೂಕ್ಷ್ಮ ಕಾರಣವು ಮಹವು ! ಮಹದುದಯ ಹೃದಯದಲ್ಲಿ ಕೊನೆದೋರುತ್ತಿಪ್ಪ ಪರಂಜ್ಯೋತಿ, ನಿಮ್ಮ ಶರಣನ ಸರ್ವಾಂಗದಲುಂಟು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಹಲವು ತೃಣ ಕಾಷ್ಠಗಳಲ್ಲಿ ಅಗ್ನಿ ಬೆರದಿರ್ದಂತೆ, ಹಲವು ಘಟಜಲದಲ್ಲಿ ಸೂರ್ಯ ಬಿಂಬಿಸುತ್ತಿರ್ದಂತೆ, ಇಪ್ಪನಯ್ಯ ಶಿವನು ಸಕಲ ಜೀವರ ಹೃದಯದಲ್ಲಿ. ಬೆರಸಿಯೂ ಬೆರಸದಂತಿಪ್ಪನಯ್ಯಾ, ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು.
--------------
ಸ್ವತಂತ್ರ ಸಿದ್ಧಲಿಂಗ
ನಿಜವನರಿಯದ ಶರಣರು, ಲಿಂಗೈಕ್ಯರು, ಗಿರಿ ಗಗನ ಗಹ್ವರದೊಳಗಿದ್ದಲ್ಲಿ ಫಲವೇನೊ? ಮನವು ಲೇಸಾಗಿದ್ದಡೆ ಸಾಲದೆ? ಪರಮಸುಖಿಯಾಗಿರ್ಪ ಶರಣನ ಹೃದಯದಲ್ಲಿ ಸದಾಸನ್ನಹಿತನು ಸಕಳೇಶ್ವರದೇವ.
--------------
ಸಕಳೇಶ ಮಾದರಸ
ಎಲ್ಲಾ ಪುರಾತರ ಚರಣಕೆ ಇಲ್ಲಿರ್ದೆ ಶರಣೆಂದಡೆ ಸಾಲದೆ ? ಬಸವಾ, ಬಸವಪ್ಪ, ಬಸವಯ್ಯ ಶರಣೆಂದಡೆ ಸಾಲದೆ ? ಎಲ್ಲರ ಹೃದಯದಲ್ಲಿ ಜ್ಯೋತಿಯಂತೆ ಬೆಳಗುತಿಪ್ಪ ಮಹಾಮಹಿಮ ನೀನಾಗಿ, ಎನಗಿದೇ ದಿವ್ಯಮಂತ್ರ. ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿ ಬಸವಾ, ಬಸವಾ, ಬಸವಾ ಶರಣೆಂದ[ಡೆ]ಸಾಲದೆ ?
--------------
ಸಂಗಮೇಶ್ವರದ ಅಪ್ಪಣ್ಣ
ಉತ್ತಮತೇಜಿಯಮರಿಗೆ ಸುಪ್ಪತ್ತಿಗೆಯಲ್ಲದೆ ಕತ್ತೆಯ ಮರಿಗೆ ಸುಪ್ಪತ್ತಿಗೆಯ ಹಾಸುವರೆ ? ಅಜ್ಞಾನಿಗಳ ಹೃದಯದಲ್ಲಿ ಪರಮಾಮೃತವ ಸುರಿದಡೆ ಪರರ ಕಾಡಿ ಬೇಡದೆ ಮಾಣ್ಬರೆ ? ಕುಂಜರನ ವೇಷವ ತೊಟ್ಟು ಹಂದಿಯಂತೆ ತಿರುಗುವ ಅಜ್ಞಾನಿಗಳನೇನೆಂಬೆ ಅಮುಗೇಶ್ವರಾ ?
--------------
ಅಮುಗೆ ರಾಯಮ್ಮ
ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞಾ, ಬ್ರಹ್ಮರಂಧ್ರ, ಶಿಖಾ, ಪಶ್ಚಿಮವೆಂಬ ನವಚಕ್ರಸ್ಥಾನವ ಗುದ ಗುಹ್ಯ ನಾಬ್ಥಿ ಹೃದಯ ಕಂಠ ಉತ್ತಮಾಂಗ ಅಳ್ಳನೆತ್ತಿ ನಡುನೆತ್ತಿ ಹಿಂಭಾಗದ ಕಳ್ಳಕುಣಿಕೆಯೆಂದು ಪೇಳುವಿರಿ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗ ಇರ್ಪುದೇ? ಇಲ್ಲ. ಮತ್ತಂ, ಬಲ್ಲಾದರೆ ಪೇಳಿರಿ, ಇಲ್ಲವಾದರೆ ನಮ್ಮ ಶಿವಗಣಂಗಳ ಕೇಳಿರಿ. ಅದೆಂತೆಂದಡೆ : ಆಧಾರಚಕ್ರವೆಂಬುದೇ ಘ್ರಾಣ. ಸ್ವಾದ್ಥಿಷ್ಠಾನಚಕ್ರವೆಂಬುದೇ ಜಿಹ್ವೆಸ್ಥಾನ. ಮಣಿಪೂರಕಚಕ್ರವೆಂಬುದೇ ನೇತ್ರಸ್ಥಾನ. ಅನಾಹತಚಕ್ರವೆಂಬುದೇ ತ್ವಕ್ಕಿನಸ್ಥಾನ. ವಿಶುದ್ಧಿಚಕ್ರವೆಂಬುದೇ ಕರ್ಣಸ್ಥಾನ. ಆಜ್ಞಾಚಕ್ರವೆಂಬುದೇ ಹೃದಯಸ್ಥಾನ. ಬ್ರಹ್ಮಸ್ಥಾನವೆಂಬುದೇ ಕರಸ್ಥಲ. ಶಿಖಾಸ್ಥಾನವೆಂಬುದೇ ಮನಸ್ಥಲ. ಪಶ್ಚಿಮಸ್ಥಾನವೆಂಬುದೇ ಪ್ರಾಣಸ್ಥಲ. ಇಂತಪ್ಪ ಸ್ಥಾನದಲ್ಲಿ ಪರಶಿವಲಿಂಗವು ಸಂಬಂಧವಾಗಿರುವುದಲ್ಲದೆ ಅಂತಪ್ಪ ಜಡದೇಹಿ ನವಸ್ಥಾನದ ಮಾಂಸರಕ್ತದಲ್ಲಿ ಪರಶಿವಲಿಂಗವು ಇರ್ಪುದೆ? ಇಲ್ಲ. ಅದೇನು ಕಾರಣವೆಂದಡೆ : ಘ್ರಾಣದಲ್ಲಿ ಆಚಾರಲಿಂಗಸ್ವಾಯತವಿಲ್ಲದೆ ಗಂಧ ದುರ್ಗಂಧ ಮೊದಲಾದ ಆವ ಗಂಧದ ವಾಸನೆಯು ತಿಳಿಯದು. ಜಿಹ್ವೆಯಲ್ಲಿ ಗುರುಲಿಂಗಸ್ವಾಯತವಿಲ್ಲದೆ ಸವಿ ಕಹಿ ಮೊದಲಾದ ಆವ ರುಚಿಸ್ವಾದವು ತಿಳಿಯದು. ನೇತ್ರದಲ್ಲಿ ಶಿವಲಿಂಗಸ್ವಾಯತವಿಲ್ಲದೆ ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ ಮೊದಲಾದ ಷಡ್ವರ್ಗದ ರೂಪು ಲಕ್ಷಣ ತಿಳಿಯದು. ತ್ವಕ್ಕಿನಲ್ಲಿ ಜಂಗಮಲಿಂಗಸ್ವಾಯತವಿಲ್ಲದೆ ಮೃದು ಕಠಿಣ ಮೊದಲಾದ ಆವ ಸುಖವು ತಿಳಿಯದು. ಶ್ರೋತ್ರದಲ್ಲಿ ಪ್ರಸಾದಲಿಂಗಸ್ವಾಯತವಿಲ್ಲದೆ ಸುಸ್ವರ ಅಪಸ್ವರ ಮೊದಲಾದ ಆವ ಸ್ವರಲಕ್ಷಣವು ತಿಳಿಯದು. ಹೃದಯದಲ್ಲಿ ಮಹಾಲಿಂಗಸ್ವಾಯತವಿಲ್ಲದೆ ಷಡಿಂದ್ರಿಸುಖತೃಪ್ತಿ ಮೊದಲಾದ ಸಕಲೇಂದ್ರಿಯ ಸುಖತೃಪ್ತಿ ಸಂತೋಷವು ತಿಳಿಯದು. ಕರಸ್ಥಲದಲ್ಲಿ ನಿರಾಕಾರವಾದ ನಿಷ್ಕಲಲಿಂಗವೆಂಬ ಇಷ್ಟಲಿಂಗ ಸ್ವಾಯತವಿಲ್ಲದೆ ಷಡ್ವಿಧಾಂಗದಲ್ಲಿ ಷಡ್ವಿಧಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಮನದಲ್ಲಿ ಶೂನ್ಯಲಿಂಗವೆಂಬ ಪ್ರಾಣಲಿಂಗಸ್ವಾಯತವಿಲ್ಲದೆ ಸರ್ವೇಂದ್ರಿಯಲ್ಲಿ ಲಿಂಗಸ್ವಾಯತವಾಗಿರುವ ಭೇದವು ತಿಳಿಯದು. ಪ್ರಾಣವೆಂಬಾತ್ಮನಲ್ಲಿ ಭಾವಲಿಂಗಸ್ವಾಯತವಿಲ್ಲದೆ ಸರ್ವಾಂಗಲಿಂಗಮಯ ಪರವಸ್ತುಸ್ವರೂಪ ತಾನೆಂದು ತಿಳಿಯದು. ಇಂತಪ್ಪ ವಿಚಾರವನು ತಿಳಿಯಬಲ್ಲಾತನೇ ಅನಾದಿಶರಣನು. ಅಂತಪ್ಪ ಪರಶಿವಲಿಂಗದ ಸ್ವಾಯತಸಂಬಂಧವಾದ ಭೇದವ ತಿಳಿಯದೆ ಅಂಗಭಾವ ಮುಂದುಗೊಂಡು ಇರ್ಪಾತನೇ ಭವಭಾರಿಕನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಮೆ ದಮೆ ವಿವೇಕ ವೈರಾಗ್ಯ ಪರಿಪೂರ್ಣಭಾವ ಶಾಂತಿ ಕಾರುಣ್ಯ ಶ್ರದ್ಧೆ ಸತ್ಯ ಸದ್ಭಕ್ತಿ ಶಿವಜ್ಞಾನ ಶಿವಾನಂದ ಉದಯವಾದ ಮಹಾಭಕ್ತನ ಹೃದಯದಲ್ಲಿ ಶಿವನಿಪ್ಪ. ಆತನ ದರ್ಶನ ಸ್ಪರ್ಶನ ಸಂಭಾಷಣೆಯಿಂದ ಕೇವಲ ಮುಕ್ತಿಯುಪ್ಪುದು ತಪ್ಪದಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಇನ್ನಷ್ಟು ... -->