ಅಥವಾ

ಒಟ್ಟು 80 ಕಡೆಗಳಲ್ಲಿ , 35 ವಚನಕಾರರು , 77 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗತ್ಪ್ರಪಂಚ ಮಾಡಿ, ಆ ಜಗದಲ್ಲಿ ಜೀವರೂಪಿಂದ ಬಳಿಸಂದನೆಂದು ಹೇಳುವ ಶ್ರುತಿಯಂತಿರಲಿ, ಜೀವನೆ ಶಿವನಾದಡೆ ಶೋಕ ಮೋಹ ಋಣ ರೋಗ ಪುಣ್ಯ ಪಾಪ ಕಾಲ ಕಲ್ಪಿತ ಪ್ರಳಯ ಪ್ರಕೃತಿ ಸಂಸಾರಪಾಶಬದ್ಧವುಂಟೆ? ಇವೆಲ್ಲವೂ ಜೀವಂಗಲ್ಲದೆ ಶಿವಂಗಿಲ್ಲವಾಗಿ ತ್ರಿಗುಣರಹಿತ ಸೌರಾಷ್ಟ್ರ ಸೋಮೇಶ್ವರನು.
--------------
ಆದಯ್ಯ
ಇತ(ದಿ?)ರ ಭ್ರಮಿತನು ಭಕ್ತನಲ್ಲ, ಲೋಕೋಪಚಾರಿ ಜಂಗಮವಲ್ಲ. ಹೇಳಿಹೆನು ಕೇಳಿರಣ್ಣಾ: ಜಂಗಮ ಪ್ರೇಮಿಯಾದರೆ ಭಸಿತ ರುದ್ರಾಕ್ಷೆ ಸಹ ಶಿವಸ್ವರೂಪ ಕಾಣುತ್ತ, ನಮಸ್ಕರಿಸಿ ಬಿಜಯಂ ಮಾಡಿಕೊಂಡು ಬಂದು ಮನಹರುಷದಲ್ಲಿ ಭೋಜನವ ಮಾಡಿಸೂದೀಗ ಭಕ್ತಂಗೆ ಲಕ್ಷಣ. ಕಾಡೊಳಗಿರಲಿ ಊರೊಳಗಿರಲಿ ಮಠದಲ್ಲಿರಲಿ ಮನೆಯಲ್ಲಿರಲಿ ಲಿಂಗವಂತರು ಕರೆಯಬಂದರೆ, ಹೋಗಬೇಕೆಂಬ ಅಭಿಲಾಷೆಯುಳ್ಳಡೆ, ತಾನಿದ್ದಲ್ಲಿ ತಾ ಮಾಡುವಂಥ ಅಷ್ಟವಿಧಾರ್ಚನೆ ಷೋಡಶೋಪಚಾರ ಲಿಂಗಕ್ರಿಯೆಗಳು ನಿತ್ಯನೇಮವು ಆದ ಬಳಿಕ ಮತ್ತೆ ತಾ ಹೋಗಿ ತನ್ನ ಗುಂಪ ತೋರದೆ, ಭಕ್ತರಾಶ್ರಯದಲ್ಲಿ ಭೋಜನವ ಮಾಡುವುದೀಗ ಜಂಗಮಕ್ಕೆ ಲಕ್ಷಣ. ಅಂತಲ್ಲದೆ ಗ್ರಹಸ್ಥಾಶ್ರಮದಲ್ಲಿ ಕ್ರಿಯೆ ಮಾಡಿದರೆ ಜಂಗಮಕ್ಕೆ ಹೇಳುವ ಅರಿವು ಕೊರಮಜೀವಿಯಂತಾಯಿತ್ತಾಗಿ_ ಇದು ಕಾರಣ ಲೋಕೋಪಚಾರಿಗಳಾಗಿ ಒಡಲ ಹೊರೆವವರ ನಮ್ಮ ಗುಹೇಶ್ವರಲಿಂಗವು ಬಲ್ಲನಾಗಿ ಅವರ ಒಲ್ಲನಯ್ಯಾ.
--------------
ಅಲ್ಲಮಪ್ರಭುದೇವರು
ಮಾತ ಹೇಳುವ ಹಿರಿಯರೆಲ್ಲರೂ ನೀತಿಗೊಡಲಾದರು. ನಿರ್ಜಾತನ ಮರೆದು, ಭ್ರಾಂತಿಗೆ ಸಿಕ್ಕಿದ ಮತ್ತೆ ಇನ್ನೇತರ ಮಾತು ? ಸೂತ್ರದ ಬೊಂಬೆಯ ನೂಕುವ ಪಾಶದಂತೆ, ಇವರೇತರ ಹಿರಿಯರು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಬೋಧೆನೆಯ ಬೋದ್ಥಿಸಿ ಉಂಬವರೆಲ್ಲರೂ ಸಾಧಾರಣಕ್ಕೆ ಈಡಾದರು. ನಿರ್ಬೋಧೆಯ ಹೇಳುವ ಹಿರಿಯಲ್ಲರೂ ಬಾಗಿಲ ಕಾಯ್ವುದಕ್ಕೊಳಗಾದರು. ಈಜಲರಿಯದವನೊಂದಾಗಿ ಹೊಳೆಯ ಹಾಯ್ದು, ಪ್ರಾಣಕ್ಕೆ ಆಸೆ ಮಾಡುವನಂತೆ, ಇಷ್ಟವನರಿಯದವರ ಮಾತ ಕೇಳಿ, ತಾ ಮುಕ್ತನಾದೆಹೆನೆಂಬ ಧೂರ್ತರ ನೋಡಾ, ನಿಃಕಳಂಕ ಮಲ್ಲಿಕಾರ್ಜುನಾ. || 549 ||
--------------
ಮೋಳಿಗೆ ಮಾರಯ್ಯ
ಮಾಡುವ ಮಾಟದವರೆಲ್ಲರೂ ಆರೈಕೆಗೊಂಬವರಿಲ್ಲದಿರೆ, ಕೋಡಗ ಸತ್ತ ಜೋಗಿಯಂತಾದರು. ಆಗಮ ಹೇಳುವ ಅಣ್ಣಗಳೆಲ್ಲರೂ ಕೊಡುವರಿಲ್ಲದಿರೆ, ಹಾವ ಹಿಡಿದ ಕೋಡಗದಂತಾದರು. ನಾನಿನ್ನಾರ ಕೇಳುವೆ, ಇನ್ನಾರಿಗೆ ಹೇಳುವೆ. ನಾನಂಜುವೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ.
--------------
ಸಗರದ ಬೊಮ್ಮಣ್ಣ
ನಾನಾ ಜನ್ಮಂಗಳ ತಿರುಗಿ ಮಾನವ ಜನ್ಮಕ್ಕೆ ಬಂದು ಲಿಂಗೈಕ್ಯನಾಗಿರುವುದೇ ಚಂದ. ಶಾಸ್ತ್ರಂಗಳ ಓದಿ ಸಂಪಾದನೆಯ ಮಾಡಿ ಹೇಳಿ ಕೇಳುವ ಅಣ್ಣಗಳಿರಾ ಕೃತಯುಗದಲ್ಲಿ ಹನ್ನೆರಡು ಭಾರ ಜ್ಯೋತಿರ್ಲಿಂಗವನು ಬ್ರಹ್ಮರ್ಷಿಗಳು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿ ಆದಿಗಳು ಇರುವನಂತ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೊ. ತ್ರೇತಾಯುಗದಲ್ಲಿ ಲಕ್ಷ ಲಿಂಗವನು ನಮ್ಮ ರವಿಕುಲ ರಘುರಾಮರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿಯಾದಿಗಳು ಇರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡಿದ್ದವು ಕಾಣಿರೋ. ದ್ವಾಪರಯುಗದಲ್ಲಿ ಸೋಮವಂಶಿಕರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿವ ಲಿಂಗವು ಗ್ರಾಮಕ್ಕೆ ಒಂದು ಕಲ್ಕೇಶ್ವರನಾಗಿ ರವಿ ಶಶಿಗಳಿರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕೃತ, ತ್ರೇತಾ, ದ್ವಾಪರ ಇವು ಮೂರು ಯುಗದಲ್ಲಿ ಬ್ರಹ್ಮ ಕ್ಷತ್ರಿಯರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿ, ಇದ್ದ ಲಿಂಗವನು ಅತಿಗಳೆದು ಇಷ್ಟಲಿಂಗಯೆಂದು ಅದಕ್ಕೆ ಪಾದ್ಯ ತೀರ್ಥ ಪ್ರಸಾದವನು ಅರ್ಪಿಸಿ, ಹುಟ್ಟಿದ ಮನುಜರೆಲ್ಲ ತಲೆತಲೆಗೊಂದು ಲಿಂಗವನು ಕಟ್ಟಿಕೊಂಡಿದ್ದರೇನಯ್ಯ, ಆ ಲಿಂಗಕ್ಕೆ ನಿಷ್ಕ್ರಿಯವಾಗಲಿಲ್ಲ. ಕಾರ್ಯಕ್ಕೆ ಬಾರದೆ ಅಕಾರ್ಯವಾಗಿ ಹೋಗಿತ್ತು ಕಾಣಿರೋ. ಅದು ಎಂತೆಂದರೆ : ಕೃತಯುಗದಲ್ಲಿ ಹುಟ್ಟಿದ ಮನುಜರು ಸುವರ್ಣಲಿಂಗವನು ಪೂಜೆಯ ಮಾಡಿಪ್ಪರು. ಆ ಸುವರ್ಣವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ತ್ರೇತಾಯುಗದಲ್ಲಿ ಹುಟ್ಟಿದ ಮನುಜರು ಕಾರಪತ್ರದ ಲಿಂಗದ ಪೂಜೆಯ ಮಾಡಲು, ಆ ಕಾರಪತ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಗಿತ್ತು ಕಾಣಿರೋ. ದ್ವಾಪರಯುಗದಲ್ಲಿ ಹುಟ್ಟಿದ ಮನುಜರು ನಾಗತಾಮ್ರದ ಲಿಂಗವನು ಪೂಜೆಯ ಮಾಡಲು ಆ ನಾಗತಾಮ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕಲ್ಲುಲಿಂಗವನು ತಮ್ಮ ಕೈಲ್ಹಿಡಿದುಕೊಂಡು ಪಂಚಮುಖದ ಪರಮೇಶ್ವರದೇವರು ಎಮ್ಮ ಕರಸ್ಥಲಕ್ಕೆ ಬಂದನೆಂದು ಬಿಂಕವನು ಹೇಳುವ ಡೊಂಕುಮನುಜರು ಕಾಯ ಅಸುವಳಿದು ನೆಲಕ್ಕೆ ಬಿದ್ದು ಹೋಗುವಾಗ ಕೈಯಲ್ಲಿ ಕಲ್ಲುಲಿಂಗವು ಭೂಮಿ ಆಸ್ತಿಯನು ಭೂಮಿ ಕೂಡಿ ಹೋಗುವಾಗ ಒಂ ನಮಃಶಿವಾಯ ಎಂಬ ಮಂತ್ರವು ಮರೆತು ಹೋಯಿತು. ಅದ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಅದ್ವೈತವ ಹೇಳುವ ಹಿರಿಯರೆಲ್ಲರೂ ದ್ವೈತಕ್ಕೊಳಗಾದರು. ನಿಸ್ಸಂಸಾರವ ಹೇಳುವ ಹಿರಿಯರೆಲ್ಲರೂ ಸಂಸಾರದ ಸಾರವ ಚಪ್ಪಿರಿದು ಕೆಟ್ಟರು. ಭಕ್ತರಿಗೆ ನಿತ್ಯವಲ್ಲೆಂದು ಹೇಳಿ, ತಾವು ಅನಿತ್ಯವ ಹಿಡಿದು, ಪಾಶಕ್ಕೆ ಸಿಕ್ಕಿ ಸತ್ತುದನರಿಯದೆ, ನಾವು ಮುಕ್ತರಾದೆವೆಂಬ ಭ್ರಷ್ಟರ ನೋಡಾ. ನನಗಿನ್ನೆತ್ತಣ ಮುಕ್ತಿ ಎಂದಂಜಿದೆ, ನಿಃಕಳಂಕ ಮಲ್ಲಿಕಾರ್ಜುನಾ
--------------
ಮೋಳಿಗೆ ಮಾರಯ್ಯ
ಮಣ್ಣ ಮೆಚ್ಚಿ ಗುರುವಿಗೆ ಹೊರತಾದೆ, ಹೆಣ್ಣ ಮೆಚ್ಚಿ ಲಿಂಗಕ್ಕೆ ಹೊರತಾದೆ, ಹೊನ್ನ ಮೆಚ್ಚಿ ಜಂಗಮಕ್ಕೆ ಹೊರತಾದೆ. ಇಂತೀ ತ್ರಿವಿಧವ ಮೆಚ್ಚಿ ಅಕಟಕಟಾ ಕೆಟ್ಟೆನೆಂದು ಗುರೂಪಾವಸ್ತೆಯಂ ಮಾಡಿ, ಗುರುವಾಕ್ಯ ಪ್ರಮಾಣವಿಡಿದು, ಆಚರಿಸುವ ಜ್ಞಾನಕಲಾತ್ಮನಿಗೆ ಈ ಲೋಕದ ಜಡಜೀವರು ಕಡುಪಾತಕರು ಬಂದು ಈ ಸಂಸಾರದಲ್ಲಿ ಪಾರಮಾರ್ಥವುಂಟು, ಇದರೊಳಗೆ ಸಾದ್ಥಿಸಬೇಕೆಂದು ಇಹ ಬಿಟ್ಟು ವೈರಾಗ್ಯದಲ್ಲಿ ಮೋಕ್ಷವಿಲ್ಲೆಂದು ಹೇಳುವರು. ಇದಕ್ಕೆ ಉಪಮೆ- ಹಿಂದೆ ಕಲ್ಯಾಣಪಟ್ಟಣಕ್ಕೆ ತಮ್ಮ ತಮ್ಮ ದೇಶವ ಬಿಟ್ಟು ಬಂದ ಗಣಂಗಳಾರಾರೆಂದಡೆ: ಮೋಳಿಗೆ ಮಾರತಂದೆಗಳು ಕಾಶ್ಮೀರದೇಶದ ಅರಸು. ನಿಜಗುಣಸ್ವಾಮಿಗಳು ಕೈಕಾಡದೇಶದ ಅರಸು. ನುಲಿಯ ಚಂದಯ್ಯನವರು ಕೈಕಾಣ್ಯದೇಶದ ಅರಸುಗಳು. ಇಂತಿವರು ಮೊದಲಾದ ಬಸವಾದಿ ಪ್ರಭುದೇವರಾಂತ್ಯಮಾದ ಏಳನೂರೆಪ್ಪತ್ತು ಪ್ರಮಥಗಣಂಗಳು. ತಮ್ಮ ತಮ್ಮ ದೇಶವ ಬಿಟ್ಟು ಕಲ್ಯಾಣಕ್ಕೆ ಬಂದರು. ಅವರೆಲ್ಲರು ಹುಚ್ಚರು, ನೀವೇ ಬಲ್ಲವರು. ಬಸವೇಶ್ವರದೇವರು ಮೊದಲಾಗಿ ಏಳನೂರೆಪ್ಪತ್ತು ಪ್ರಮಥಗಣಂಗಳು ಕೂಡಿ ತಮ್ಮ ತಮ್ಮ ಹೃನ್ಮಂದಿರದಲ್ಲಿ ನೆಲಸಿರುವ ಪರಶಿವಲಿಂಗಲೀಲಾವಿನೋದದಿಂ ಎರಡೆಂಬತ್ತೆಂಟುಕೋಟಿ ವಚನಗಳನ್ನು ಹಾಡಿಕೊಂಡರು. ಇದರನುಭಾವವ ತಿಳಿಯಬಲ್ಲರೆ ಹೇಳಿರಿ; ಅರಿಯದಿದ್ದರೆ ಕೇಳಿರಿ. ತನು-ಮನ-ಧನ ನೀನಲ್ಲ, ಪಂಚವಿಂಶತಿತತ್ವ ನೀನಲ್ಲ, ಪಂಚಭೂತಪ್ರಕೃತಿ ನೀನಲ್ಲ, ಮನ ಮೊದಲಾದ ಅರವತ್ತಾರುಕೋಟಿ ಕರಣಾದಿ ಗುಣಂಗಳು ನೀನಲ್ಲ. ಇಂತೀ ಎಲ್ಲವನು ನೀನಲ್ಲ, ನೀನು ಸಾಕಾರಸ್ವರೂಪಲ್ಲವೆಂದು ಸ್ವಾನುಭಾವಜ್ಞಾನಗುರುಮುಖದಿಂದ ತಿಳಿದು ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ, ಸಕಲಸಂಶಯವಂ ಬಿಟ್ಟು, ನಿಶ್ಚಿಂತನಾಗಿ, ಏಕಾಗ್ರಚಿತ್ತದಲ್ಲಿ ಸ್ವಸ್ಥಿರನಾಗಿ ಮುಂದೆ ಶಿವಪಥವ ಸಾದ್ಥಿಸೆಂದು ಹಾಡಿದರಲ್ಲದೆ ಅವರೇನು ದಡ್ಡರೇ? ನೀವೇ ಬಲು ಬುದ್ಧಿವಂತರು, ಬಲುಜಾಣರು ! ಇಂಥ ಯುಕ್ತಿ ವಿಚಾರವ ಹೇಳುವ ಮತಿಭ್ರಷ್ಟ ಹೊಲೆಯರ ಕಾಲು ಮೇಲಕ್ಕೆ ಮಾಡಿ, ತಲೆ ಕೆಳಯಕ್ಕೆ ಮಾಡಿ ಅವರಂಗದ ಮೇಲಿನ ಚರ್ಮವ ಹೋತು ಕುರಿಗಳ ಚರ್ಮವ ಹರಿದ ಹಾಗೆ ಹರಿದು, ಅವರ ತಿದಿಯನೆ ಹಿರಿದು, ಅವರ ಕಂಡವ ಕಡಿದು, ಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿ ನರಿಗಳಿಗೆ ಹಾಕೆಂದ ಕಾಣಾ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತತ್ವವ ನುಡಿವ ಹಿರಿಯರೆಲ್ಲರು. ತುತ್ತನಿಕ್ಕುವರ ಬಾಗಿಲಲ್ಲಿ, ಅಚ್ಚುಗಪಡುತ್ತಿದ್ದರು ನೋಡಾ, ನಿತ್ಯಾನಿತ್ಯವ ಹೇಳುವ ಹಿರಿಯರು ತಮ್ಮ ಒಡಲ ಕಕ್ಕುಲತೆಗೆ ಹೋಗಿ, ಭಕ್ತಿಯ ಹೊಲಬನರಿಯದ, ಜಡಜೀವಿ ಮಾನವರ ಇಚ್ಛೆಯ ನುಡಿದು, ಹಲುಬುತ್ತಿಪ್ಪರು ನೋಡಾ ! ಕತ್ತೆಗೆ ಕರ್ಪೂರವ ಹೇರಿದಂತೆ, ಅವರಿಗೆ ಇನ್ನೆತ್ತಣ ಮುಕ್ತಿಯೋ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭಕ್ತಿಯ ನುಡಿವಲ್ಲಿ ಬಾಹ್ಯವಾಗಿರಬೇಕು, ಸತ್ಯವ ನುಡಿವಲ್ಲಿ ಮರೆಯಾಗಿರಬೇಕು. ವೇಶಿ ತಿರುಗಾಡುವಲ್ಲಿ ತನ್ನಯ ವೇಷವ ತೋರಬೇಕು, ಗರತಿಯಿಹಲ್ಲಿ ತನ್ನ ಪುರುಷನ ಅಡಕದಲ್ಲಿ ಅಡಗಬೇಕು. ದಿವ್ಯಜ್ಞಾನವ ದಿವಜರಲ್ಲಿ ಹೇಳುವ ತ್ರಿವಿಧ ಗುಡಿಹಿಗಳಿಗೆ ಅರುಹಿನ ಪಥವಿಲ್ಲ, ಸದಾಶಿವಮೂರ್ತಿಲಿಂಗಕ್ಕೆ ದೂರವಾಗಿಹರು.
--------------
ಅರಿವಿನ ಮಾರಿತಂದೆ
ಎದೆಯಲಿಂಗವನು ಬಿಟ್ಟು ಗುಡಿಯಲಿಂಗಕ್ಕೆ ಶರಣೆನ್ನಲಾಗದು ಎಂದು ಹೇಳುವ ಕುದಿಗಿಳಿಗಳು ನೀವು ಕೇಳಿರೋ. ನಿಮ್ಮ ಅಂತರಂಗದೊಳಗಿರ್ಪ ಲಿಂಗವನು ಬಿಟ್ಟು ಅನ್ಯದೈವಕ್ಕೆ ಶರಣೆಂದರು, ಅದು ಎಂತೆಂದರೆ, ಬೀದಿಯೊಳು ಹಿಟ್ಟು ಮಾಡುವ ಕಲ್ಲುಲಿಂಗವ ತಂದು ಅದಕ್ಕೆ ಪಾದ್ಯ ತೀರ್ಥ ಪ್ರಸಾದವನರ್ಪಿಸಿ, ಶಿವಲಿಂಗದೇವರೆಂದು ಶಿಖೆಯಲ್ಲಿ ಕಟ್ಟಿಕೊಂಡು ನಾವು ಶಿವಭಕ್ತರು ಅನ್ಯದೈವಕ್ಕೆ ಶರಣೆನ್ನಲಾಗದು ಎಂದು ಹೇಳುವ ಬರಿಯ ಮಾತಿನ ತರ್ಕಿಗಳ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಶಿವಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಭೂಮಿಯಲ್ಲಿ ಪೂಜಿಸಿಕೊಂಬ ಅರುಹಿರಿಯರೆಲ್ಲರೂ ವೇದ ಶಾಸ್ತ್ರ ಪುರಾಣ ಆಗಮ ಶ್ರುತಿ ಸ್ಮøತಿ ತತ್ವದಿಂದ ಇದಿರಿಗೆ ಬೋದ್ಥಿಸಿ ಹೇಳುವ ಹಿರಿಯರೆಲ್ಲರೂ ಹಿರಿಯರಪ್ಪರೆ ? ನುಡಿದಂತೆ ನಡೆದು, ನಡೆದಂತೆ ನುಡಿದು, ನಡೆನುಡಿಸಿದ್ಧಾಂತವಾಗಿಯಲ್ಲದೆ ಅರುಹಿರಿಯರಾಗಬಾರದು. ಗೆಲ್ಲಸೋಲಕ್ಕೆ ಹೋರಿ ಬಲ್ಲಿದರಾದೆವೆಂದು ತನ್ನಲ್ಲಿದ್ದ ಹುಸಿಯ ಹುಸಿವ ಕಲ್ಲೆದೆಯವನ ನೋಡಾ. ಇವರೆಲ್ಲರ ಬಲ್ಲತನವ ಕಂಡು ನಿಲ್ಲದೆ ಹೋದ, ನಿಃಕಳಂಕ ಮಲ್ಲಿಕಾರ್ಜುನ.
--------------
ಮೋಳಿಗೆ ಮಾರಯ್ಯ
ಲೋಕದಲ್ಲಿಹ ನೂರಾರು ಗುರುಗಳ ನೋಡಿ ನೋಡಿ ನಾನು ಬೇಸರುಗೊಂಡೆನಯ್ಯಾ. ವಿತ್ತಾಪಹಾರಿ ಗುರುಗಳು ನೂರಾರು; ಶಾಸ್ತ್ರಾರ್ಥ ಹೇಳುವ ಗುರುಗಳು ನೂರಾರು; ಮಂತ್ರತಂತ್ರದಿಂದುಭಯ ಲೋಕದಲ್ಲಿ ಸುಖದುಃಖವೀವ ಗುರುಗಳು ನೂರಾರು; ಸತ್ಕರ್ಮೋಪದೇಶವನರುಹಿ ಸ್ವರ್ಗಮತ್ರ್ಯದಲ್ಲಿ ಸುಖವೀವ ಗುರುಗಳು ನೂರಾರು; ವಿಚಾರಮುಖದಿಂದ ಷಟ್ಸಾಧನೆಯನರುಹುವ ಗುರುಗಳು ನೂರಾರು. ವಿಷಯಂಗಳೆಲ್ಲ ಮಿಥ್ಯಂಗಳೆಂದರುಹಿ ಆತ್ಮಾನುರಾಗತ್ವವನೀವ ಗುರುಗಳು ನೂರಾರು; ಶಿವಜೀವರ ಏಕತ್ವವನರುಹಿ ನಿರ್ಮಲಜ್ಞಾನವೀವ ಗುರುಗಳು ಪ್ರಮಥರು. ಸಂಶಯಾಳಿಗಳನೆಲ್ಲ ಜ್ಞಾನಾಗ್ನಿಯಿಂದ ದಹಿಸಿ ಮುಕ್ತಿಯ ಹಂಗೆಂಬುದ ಅರುಹಿನ ಬಂಧದಲ್ಲಿರಿಸಿದ ಗುರು ಚೆನ್ನಬಸವಣ್ಣನಲ್ಲದೆ ಮತ್ತೋರ್ವನ ಕಾಣೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಭಕ್ತ ಮಾಹೇಶ್ವರ ಪ್ರಸಾದಿಯೆಂದು ಈ ಮೂರು ಕ್ರಿಯಾಂಗವಯ್ಯ. ಪ್ರಾಣಲಿಂಗಿ ಶರಣ ಐಕ್ಯವೆಂದು ಈ ಮೂರು ಜ್ಞಾನಾಂಗವಯ್ಯ. ಆಚಾರಲಿಂಗ ಗುರುಲಿಂಗ ಶಿವಲಿಂಗವೆಂದು ಈ ಮೂರು ಕ್ರಿಯಾಲಿಂಗವಯ್ಯ. ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದು ಈ ಮೂರು ಜ್ಞಾನಲಿಂಗವಯ್ಯ. ಇವಕ್ಕೆ ಅಂಗ ಲಿಂಗ ಸಂಗ ಸಂಯೋಗನಿರ್ದೇಶವ ಹೇಳಿಹೆನು. ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದು ಆ ಆರು ಕ್ರಿಯಾಂಗವು. ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದು ಲಿಂಗವಾರು ತೆರನಾಗಿಪ್ಪುದಯ್ಯ. ಇನ್ನು ಸಂಗವಾರು ತೆರನದೆಂತೆಂದಡೆ: ಘ್ರಾಣ, ಜಿಹ್ವೆ, ನೇತ್ರ, ತ್ವಕ್ಕು, ಶ್ರೋತ್ರ, ಭಾವವೆಂದು ಸಂಗವಾರು ತೆರನಾಗಿಪ್ಪುದಯ್ಯ. ಘ್ರಾಣದಲ್ಲಿ ಆಚಾರಲಿಂಗ, ಜಿಹ್ವೆಯಲ್ಲಿ ಗುರುಲಿಂಗ; ನೇತ್ರದಲ್ಲಿ ಶಿವಲಿಂಗ; ತ್ವಕ್ಕಿನಲ್ಲಿ ಜಂಗಮಲಿಂಗ; ಶ್ರೋತ್ರದಲ್ಲಿ ಪ್ರಸಾದಲಿಂಗ; ಭಾವದಲ್ಲಿ ಮಹಾಲಿಂಗ ಸಂಬಂಧ. ಇಂತೀ ಷಂಡಗವು ಷಡ್ವಿಧಲಿಂಗದಲ್ಲಿ ಸಮರಸ ಸಂಯೋಗವಾದಲ್ಲಿ ಅಂಗ ಲಿಂಗ ಸಂಬಂಧವೆನಿಸಿಕೊಂಡಿತಯ್ಯ. ಇನ್ನು ಪ್ರಾಣಾಂಗವಾರು ತೆರನದೆಂತೆಂದಡೆ: ಸುಚಿತ್ತ, ಸುಬುದ್ಧಿ, ನಿರಹಂಕಾರ, ಸುಮನ, ಸುಜ್ಞಾನ, ಶುದ್ಧಾತ್ಮ ಆ ಆರು ಪ್ರಾಣಾಂಗಗಳು. ಇಂತೀ ಪ್ರಾಣಾಂಗಂಗಳಲ್ಲಿಯೂ ಹಿಂದೆ ಹೇಳಿದ ಷಡ್ವಿಧಲಿಂಗವು ಮಾರ್ಗ ಕ್ರೀಯನೆಯ್ದಿ ಮೀರಿದ ಕ್ರಿಯಾಸ್ಥಲದಲ್ಲಿ ಬಂದು ನಿಂದು ಜ್ಞಾನಗಮ್ಯವಾಗಿ ಸಂಗದನುವನರಿದು ಪ್ರಾಣಾಂಗವಾರೂ ಲಿಂಗಸಂಬಂಧವಾದವಯ್ಯ. ಹಿಂದೆ ಹೇಳಿದ ಕ್ರಿಯಾಂಗವಾರು ಮುಂದೆ ಹೇಳುವ ಸುಚಿತ್ತಾದಿ ಭಾವಾಂತ್ಯವಹ ಜ್ಞಾನಾಂಗವಾರು. ಈ ಉಭಯಾಂಗವು ಲಿಂಗಸಂಗದಿಂದ ಲಿಂಗಕ್ಕೆ ಅಂಗಕ್ಕೆ ಆಶ್ರಯಸ್ಥಾನನಾಗಿ ನಿಂದ ನಿರುಪಮ ಮಹಿಮ ಶರಣ ತಾನೆ ಅಂಗಲಿಂಗ ಪ್ರಾಣಲಿಂಗ ಸಂಬಂಧಿಯೆನಿಸಿಕೊಂಬನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಎಲ್ಲವ ಮೀರಿ ಶೀಲವಂತನಾದಲ್ಲಿ ರೋಗವೆಲ್ಲಿಂದ ಬಂದಿತು ? ಆ ಗುಣ ತನುವಿನಲ್ಲಿಯ ತೊಡಕು ; ರುಜೆ ಪ್ರಾಣವ ಕೊಳ್ಳಲರಿಯದು. ಅಂಗದ ಡಾವರಕ್ಕೆ ಸೈರಿಸಲಾರದೆ, ಮದ್ದ ತಾ ಲಿಂಗಕ್ಕೆ ತೋರಿ, ಜಂಗಮಕ್ಕೆ ಕೊಟ್ಟು, ಜಂಗಮಪ್ರಸಾದವೆಂದು ಲಿಂಗ ಜಂಗಮವ ಹಿಂಗದೆ ಕೊಳ್ಳೆಂದು ಹೇಳುವ ಅನಂಗಿಗಳಿಗೆ ಗುರು ಲಿಂಗ ಜಂಗಮ ಮೂರರಲ್ಲಿ ಒಂದೂ ಇಲ್ಲ ಎಂದೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ತಪ್ಪನೊಪ್ಪಗೊಳ್ಳೆ.
--------------
ಅಕ್ಕಮ್ಮ
ಇನ್ನಷ್ಟು ... -->