ಅಂತರಂಗದಲ್ಲಿ ಆಸೆ, ಬಹಿರಂಗದಲ್ಲಿ ಕ್ರೋಧ,
ಭಾವಕ್ಕೆ ವೇಷ. ಪ್ರಾಣಕ್ಕೆ ರೋಷ, ಕಾಮಕ್ಕೆ ಮದ.
ಇಂತಿವನಿಂಬಿಟ್ಟುಕೊಂಡು ನಾವು ಜಂಗಮವೆಂದು ಸುಳಿದರೆ,
ಹೇಯವಿಲ್ಲದ ಭಕ್ತರು ವೇಷವ ಕಂಡು ಪೂಜೆಯ ಮಾಡಿದರೆ,
ಅಶನಕ್ಕೆ ಅನ್ನವನಿಕ್ಕಿದರೆ, ಶೀತಕ್ಕೆ ರಗಟೆಯ ಕೊಟ್ಟರೆ, ಅವರಿಗದು ಸಹಜ.
ನಿಮ್ಮ ನೀವು ನೋಡಲಿಲ್ಲವೆ ?
ನಾವು ದೇವರಾದೆವೆಂದು ವಿಚಾರಿಸಿ ನೋಡಿ, ಉಭಯವ ಮೆಟ್ಟಿನಿಂದು,
ಅಭವನೆಂಬ ಹೆಸರಿಗೆ ಸಂದವರಿಗೆ ಸುಲಭದಿಂದ ಜಗವೆಲ್ಲವು
ನಮೋ ನಮೋ ಎಂಬುದು.
ಬಸವಪ್ರಿಯ ಕೂಡಲಚೆನ್ನಬಸವಣ್ಣಾ,
ಈ ಉಭಯದ ಭೇದವ ನೀವೆ ಬಲ್ಲಿರಿ.