ಹರಿ ಬ್ರಹ್ಮ ಕಾಲ ಕಾಮ ದಕ್ಷಾದಿಗಳ ದೇವರೆಂದು
ಗಟ್ಟಿಯತನದೊಳು ಬೊಗಳುವ ಮಿಟ್ಟೆಯಭಂಡರು ನೀವು ಕೇಳಿರೊ.
ಅವರ ಹುಟ್ಟನರಿಯಿರಿ, ಹೊಂದನರಿಯಿರಿ. ಅವರ ಹುಟ್ಟು ಕೇಳಿರಣ್ಣಾ !
ಏನೇನೂ ಇಲ್ಲದಂದು, ಶೂನ್ಯ ನಿಃಶೂನ್ಯಕ್ಕೆ ನಿಲುಕದ ಘನವು
ಕೋಟಿಚಂದ್ರಸೂರ್ಯರ ಬೆಳಗಾಗಿ ಬೆಳಗುತ್ತಿಪ್ಪಲ್ಲಿ ,
ಒಂಕಾರವೆಂಬ ನಿರಕ್ಷರ ಹುಟ್ಟಿತ್ತು .
ಒಂಕಾರದಿಂದ ನಕಾರ, ಮಕಾರ, ಶಿಕಾರ, ವಕಾರ,
ಯಕಾರವೆಂಬ ಪಂಚಾಕ್ಷರ ಹುಟ್ಟಿದವು.
ಆ ಪಂಚಾಕ್ಷರಿಗೆ ಪರಾಶಕ್ತಿ ರೂಪಾದಳು.
ಆ ಪಂಚಾಕ್ಷರಕ್ಕೂ ಪರಾಶಕ್ತಿಗೂ ಇಬ್ಬರಿಗೂ ಸದಾಶಿವನಾದ.
ಆ ಸದಾಶಿವಂಗೆ ಜ್ಞಾನಶಕ್ತಿಯಾದಳು.
ಆ ಸದಾಶಿವಂಗೆ ಜ್ಞಾನಶಕ್ತಿಯರಿಬ್ಬರಿಗೂ ಶಿವನಾದ.
ಆ ಶಿವಂಗೆ ಇಚ್ಛಾಶಕ್ತಿಯಾದಳು.
ಆ ಶಿವಂಗೂ ಇಚ್ಛಾಶಕ್ತಿಗೂ ಇಬ್ಬರಿಗೂ ರುದ್ರನಾದ.
ಆ ರುದ್ರಂಗೆ ಕ್ರಿಯಾಶಕ್ತಿಯಾದಳು.
ಆ ರುದ್ರಂಗೂ ಕ್ರಿಯಾಶಕ್ತಿಗೂ ಇಬ್ಬರಿಗೂ ವಿಷ್ಣುವಾದ.
ಆ ವಿಷ್ಣು ಪಡೆದ ಸತಿ ಲಕ್ಷಿ ್ಮೀಯು.
ಆ ವಿಷ್ಣುವಿಂಗೂ ಮಹಾಲಕ್ಷಿ ್ಮೀಗೂ ಇವರಿಬ್ಬರಿಗೂ ಬ್ರಹ್ಮನಾದ.
ಆ ಬ್ರಹ್ಮಂಗೆ ಸರಸ್ವತಿಯ ಕೊಟ್ಟು, ಬರೆವ ಸೇವೆಯ ಕೊಟ್ಟ.
ಬ್ರಹ್ಮಂಗೂ ಸರಸ್ವತಿಗೂ ಇಬ್ಬರಿಗೂ ಮನುಮುನಿದೇವರ್ಕಳಾದರು.
ಆ ಮನುಮುನಿದೇವರ್ಕಳಿಗೆ ಸಕಲ ಸಚರಾಚರವಾಯಿತ್ತು .
ಇಹಲೋಕಕ್ಕೆ ನರರು ಆಗಬೇಕೆಂದು ಬ್ರಹ್ಮನು ಹೋಗಿ,
ಹರನಿಗೆ ಬಿನ್ನಹಂ ಮಾಡಲು, ಹರನು ಪರಮಜ್ಞಾನದಿಂದ ನೋಡಿ,
ತನ್ನ ಶರೀರದಿಂದಲೆ ನಾಲ್ಕು ಜಾತಿಯ ಪುಟ್ಟಿಸಿ ಇಹಲೋಕಕ್ಕೆ ಕಳುಹಿಸಿದನು.
ಆ ಶಿವನ ಶರೀರದಲ್ಲಿ ಪುಟ್ಟಿದವರು ಶಿವನನ್ನೇ ಅರ್ಚಿಸಿ,
ಶಿವನನ್ನೇ ಪೂಜಿಸಿ, ಶಿವನನ್ನೇ ಭಾವಿಸಿ, ಶಿವನೊಳಗಾದರು.
ಅದರಿಂದಾದ ಭವಬಾಧೆಗಳು ತಾವು ತಮ್ಮ ಹುಟ್ಟನರಿಯದೆ,
ಹುಟ್ಟಿಸುವಾತ ಬ್ರಹ್ಮ , ರಕ್ಷಿಸುವಾತ ವಿಷ್ಣು , ಶಿಕ್ಷಿಸುವಾತ
ರುದ್ರನೆಂದು ಹೇಳಿದರು.
ಈ ಭ್ರಷ್ಟರ ಮಾತ ಕೇಳಿ ಕೆಟ್ಟಿತ್ತು ಜಗವೆಲ್ಲ .
ಆಗ ಶಿವನು ಕೊಟ್ಟು ಕಳುಹಿದ ಮಾಯೆಗೆ ಮರವೆಂಬ ಪಾಶ.
ಅವಳು ಕಟ್ಟಿ ಕೆಡಹಿದಳು ಮೂರುಜಗವೆಲ್ಲವನು.
ಇವಳ ಕಟ್ಟಿಗೊಳಗಾದ ಭ್ರಷ್ಟರೆತ್ತಬಲ್ಲರೋ ನಿಮ್ಮ ಶರಣರ ಸುದ್ದಿಯ,
ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?