ಅಂತರಂಗದಲ್ಲಿ ಅರಿವಿಲ್ಲದವಂಗೆ
ಬಹಿರಂಗದಲ್ಲಿ ಕ್ರೀಯಿದ್ದು ಫಲವೇನು ?
ಅದು ಕಣ್ಣಿಲ್ಲದವನ ಬಾಳುವೆಯಂತೆ.
ಬಹಿರಂಗದಲ್ಲಿ ಕ್ರೀಯಿಲ್ಲದವಂಗೆ
ಅಂತರಂಗದಲ್ಲಿ ಅರಿವಿದ್ದು ಫಲವೇನು ?
ಅದು ಶೂನ್ಯಾಲಯದ ದೀಪದಂತೆ.
ಅಂತರಂಗದ ಅರಿವು, ಬಹಿರಂಗದ ಕ್ರಿಯೆ-
ಈ ಉಭಯಾಂಗವೊಂದಾಗಬೇಕು.
ಅದೆಂತೆಂದಡೆ :
ಅಂತಜ್ರ್ಞಾನ ಬಹಿಃಕ್ರಿಯಾ ಏಕೀಭಾವೋ ವಿಶೇಷತಃ
ಎಂದುದಾಗಿ,
ಅಂತರಂಗದಲ್ಲಿ ಅರಿವು, ಬಹಿರಂಗದಲ್ಲಿ ಕ್ರೀಯುಳ್ಳ ಮಹಾತ್ಮನೆ
ಭಕ್ತನಪ್ಪ, ಮಹೇಶ್ವರನಪ್ಪ, ಪ್ರಸಾದಿಯಪ್ಪ
ಪ್ರಾಣಲಿಂಗಿಯಪ್ಪ, ಶರಣನೈಕ್ಯನಪ್ಪ.
ನಮ್ಮ ಪರಮಗುರು ಶಾಂತಮಲ್ಲಿಕಾರ್ಜುನ ತಾನೆಯಪ್ಪ.