ಚತುರ್ವೇದಿಯಾದಡೇನು! ಲಿಂಗವಿಲ್ಲದವನೆ ಹೊಲೆಯ! ಶ್ವಪಚನಾದಡೇನು ಲಿಂಗವಿದ್ದವನೆ ವಾರಣಾಸಿ ! ಆತನ ನುಡಿಗಡಣ ಲೇಸು, ಆತ ಜಗಕ್ಕೆ ಪಾವನ, ಆತನ ಪ್ರಸಾದವೆನಗೆ ಅಮೃತಸೇವನೆ. ನ ಮೇ ಪ್ರಿಯಶ್ಚತುರ್ವೇದೀ ಮದ್ಭಕ್ತಃ ಶ್ವಪಚೋಪಿ ವಾ| ತಸ್ಮೈ ದೇಯಂ ತತೋ ಗ್ರಾಹ್ಯಂ ಸ ಚ ಪೂಜ್ಯೋ ಯಥಾಹ್ಯಹಂ|| ಎಂಬುದಾಗಿ ಕೂಡಲಸಂಗಮದೇವರನರಿದು ಪೂಜಿಸಿದಾತ ಷಡುದರುಶನಕ್ಕಧಿಕ, ಜಗಕ್ಕೆ ಪಾವನ ನೋಡಾ.
ಚಿಕ್ಕ ಒಂದು ಹೊತ್ತಗೆ, ಬೆನಕನ ಕರಡಗೆಯಯ್ಯಾ, ನೀ ಡುಂಡುಟಿ ಗೊರವನಯ್ಯಾ, ಪುಣ್ಯವೇನಾದಡಾಗಲಿ ಡಕ್ಕೆಯ ಮೇಲೆ ಅಕ್ಕಿಯ ತಳೆದೆನು. ನಮ್ಮ ಕೂಡಲಸಂಗಮದೇವನಲ್ಲದೆ ಅನ್ಯದೈವ ಉಂಟೆನ್ನದಿರು ಕಂಡಾ !
ಚೆನ್ನಯ್ಯನ ಮನೆಯ ದಾಸನ ಮಗನು, ಕಕ್ಕಯ್ಯನ ಮನೆಯ ದಾಸಿಯ ಮಗಳು, ಇವರಿಬ್ಬರು ಹೊಲದಲು ಬೆರಣಿಗೆ ಹೋಗಿ, ಸಂಗವ ಮಾಡಿದರು. ಇವರಿಬ್ಬರಿಗೆ ಹುಟ್ಟಿದ ಮಗ ನಾನು, ಕೂಡಲಸಂಗಮದೇವ ಸಾಕ್ಷಿಯಾಗಿ. 346