ಅಯ್ಯಾ, ನಿಮ್ಮಾದ್ಯರ ವಚನವ ಕೇಳಿ
ಎನ್ನಂಗದ ಭಂಗ ಹಿಂಗಿತ್ತು ನೋಡಾ.
ಅಯ್ಯಾ, ನಿಮ್ಮ ಶರಣರ ಸಂಗದಿಂದ
ಮಹಾಲಿಂಗದ ಸಂಯೋಗವಾಯಿತ್ತು ನೋಡಾ.
ಅಯ್ಯಾ, ನಿಮ್ಮ ಶರಣರ ಸಂಗದಿಂದ
ಮಹಾಪ್ರಸಾದದ ಪರುಷವ ಕಂಡೆ,
ಆ ಪರುಷದ ಮೇಲೆ ಮೂರು ಜ್ಯೋತಿಯ ಕಂಡೆ,
ಆ ಜ್ಯೋತಿಯ ಬೆಳಗಿನಲ್ಲಿ ಒಂಬತ್ತು ರತ್ನವ ಕಂಡೆ,
ಆ ರತ್ನಂಗಳ ಮೇಲೆ ಒಂದು ಅಮೃತದ ಕೊಡನ ಕಂಡೆ.
ಕಂಡವನೆ ಉಂಡ, ಉಂಡವನೆ ಉರಿದ, ಉರಿದವನೆ ಕರದ,
ಕರದವನೆ ನೆರದ, ನೆರದವನೆ ಕುರುಹನರಿದ,
ಅರಿದವನೆ ನಿಮ್ಮನರಿದವ ಕಾಣಾ
ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.