ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅರಿತು ಜನ್ಮವಾದವರಿಲ್ಲ ಸತ್ತು ಮರಳಿ ತೋರುವರಿಲ್ಲ. ದುರಭಿಮಾನವ ಹೊತ್ತು ಅಘಟಿತ ಘಟಿತವ ನುಡಿವಿರಿ. ಈ ದೇಹವಿಡಿದು ನುಡಿವ ಪ್ರಪಂಚಿಗಳನೇನೆಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಂಗಸೋಂಕೆಂಬುದು ಅಧಮವು. ಉರಸೆಜ್ಜೆಯೆಂಬುದು ಎದೆಯ ಗೂಂಟ. ಕಕ್ಷೆಯೆಂಬುದು ಕವುಚಿನ ತವರುಮನೆ. ಅಮಳೋಕ್ಯವೆಂಬುದು ಬಾಯ ಬಗದಳ. ಮುಖಸೆಜ್ಜೆಯೆಂಬುದು ಪಾಂಡುರೋಗ. ಕರಸ್ಥಳವೆಂಬುದು ಮರವಡದ ಕುಳಿ. ಉತ್ತಮಾಂಗವೆಂಬುದು ಸಿಂಬಿಯ ಕಪ್ಪಡ. ಎಲ್ಲರಿಗೆಯೂ ಸೋಂಕಾಯಿತ್ತು ! ಈ ಹಸಿಯ ಗೂಂಟದಲ್ಲಿ ಕಟ್ಟಿ, ಒಣಗಿದ ಗೂಂಟದಲ್ಲಿ ಬಿಡುವ ಬಾಲಭಾಷೆಯ ಭಂಡರ ನುಡಿಯ ಕೇಳಲಾಗದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅನಲನಾರಣ್ಯದೊಳಗೆ ಎದ್ದಲ್ಲಿ; ದೂ(ಧು?)ರದೆಡೆಯಲಾರನೂ ಕಾಣೆವು, ಸಂಗ್ರಾಮಧೀರರೆಲ್ಲರೂ ನೆಲೆಗೆಟ್ಟರಾಗಿ ! ಮಾಯಾಮಂಜಿನ ಕೋಟೆಗೆ, ರಂಜನೆಯ ಕೊತ್ತಳ, ಅಂಜನೆಯ ಕಟ್ಟಳೆ. ಗುಹೇಶ್ವರನು ಶರಣ ಐಕ್ಯಸ್ಥಲವ ಮೆಟ್ಟಲೊಡನೆ, ಸರ್ವವೂ ಸಾಧ್ಯವಾಯಿತ್ತು.
--------------
ಅಲ್ಲಮಪ್ರಭುದೇವರು
ಅಟ್ಟುದನಡಲುಂಟೆ ? ಸುಟ್ಟುದ ಸುಡಲುಂಟೆ ? ಜ್ಞಾನಾಗ್ನಿಯಲ್ಲಿ ದಗ್ಧವಾದ ಪರಮಶಿವಯೋಗಿಗೆ ಹುಟ್ಟು ಹೊಂದೆಂಬ ಉಭಯ ಜಡತೆಯುಂಟೆ ? ಅದೆಂತೆಂದಡೆ: ``ದಗ್ಧಸ್ಯ ದಹನಂ ನಾಸ್ತಿ ಪಾಕಸ್ಯ ಪಚನಂ ನ ಹಿ ಜ್ಞಾನಾಗ್ನಿರ್ದಗ್ಧದೇಹಸ್ಯ ನ ಚ ದಾಹೋ ನ ಚ ಕ್ರಿಯಾ '' ಎಂದುದಾಗಿ_ ನಮ್ಮ ಗುಹೇಶ್ವರಲಿಂಗವನೊಡಗೂಡಿ, ಎರಡಳಿದು ನಿಂದ, ಮಹಾಮಹಿಮಂಗೆ ಪರಿಭವವಿಲ್ಲ ಕಾಣಿರೊ.
--------------
ಅಲ್ಲಮಪ್ರಭುದೇವರು
ಅಂತರಂಗದಲ್ಲಿ ಭವಿಯನೊಳಕೊಂಡು, ಬಹಿರಂಗದಲ್ಲಿ ಭಕ್ತಿಯನೊಳಕೊಂಡು, ಆತ್ಮಸಂಗದಲ್ಲಿ ಪ್ರಸಾದವನೊಳಕೊಂಡು, ಇಪ್ಪ ಭಕ್ತರ ಕಾಣೆನಯ್ಯಾ ನಾನು, ಇಂತಪ್ಪ ಲಿಂಗೈಕ್ಯರ ಕಾಣೆನಯ್ಯಾ. ಅಂತರಂಗದಲ್ಲಿ ಸುಳಿದಾಡುವ ತನುಗುಣಾದಿಗಳ, ಮನಗುಣಾದಿಗಳ, ಪ್ರಾಣಗುಣಾದಿಗಳ ಕಳೆದಲ್ಲಿ ಶರಣರಹರೆ ? ತನು ಮನ ಧನವ ಕೊಟ್ಟಲ್ಲಿ ಭಕ್ತರಹರೆ ? ಉಂಬವರ ಕಂಡು ಕೈನೀಡಿದಡೆ ಪ್ರಸಾದಿಗಳಹರೆ ? ಅಂತರಂಗ ಬಹಿರಂಗ ಆತ್ಮಸಂಗ_ಈ ತ್ರಿವಿಧದ ಭೇದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.
--------------
ಅಲ್ಲಮಪ್ರಭುದೇವರು